ದಿನದ ಸುದ್ದಿ
ತೊಂಬತ್ತರ ದಶಕದ ದುರಂತಗಳು..!
- ಸುರೇಶ ಎನ್ ಶಿಕಾರಿಪುರ
ಇವತ್ತು ವಿಶ್ವ ಗುಬ್ಬಿಗಳ ದಿನಾಚರಣೆ… ಜಗತ್ತಿನಲ್ಲಿ ದಿನಕ್ಕೊಂದು ದಿನಾಚರಣೆ ಇದ್ದೇ ಇರುತ್ತದೆ… ಸಾವಿರಾರು ವರ್ಷ ಕಾಲದಿಂದ ಮನುಷ್ಯನ ಜೊತೆ ಜೊತೆಗೇ ಗುಬ್ಬಿಗಳು ಜೀವಿಸುತ್ತಾ ಬಂದಿವೆ.
ಅವನು ಮನೆ ಕಟ್ಟಿದಲ್ಲೇ ತಾವೂ ಮನೆ ಕಟ್ಟಿ ಅವನ ಸಂಸಾರದ ಜೊತೆಗೇ ತಾವೂ ಸಂಸಾರ ಹೂಡಿ ಪ್ರೇಮ ಪ್ರಣಯ ಸಂಸಾರ ಪಾಠ ಹೇಳುತ್ತ ಜಗತ್ತಿನ ಎಲ್ಲಾ ಜಾನಪದದ ಕತೆ ಕಾವ್ಯ ಮಹಾ ಕಾವ್ಯ ಗಾದೆ ಒಗಟುಗಳಲ್ಲಿ ರೂಪಕ ಉಪಮೆ ಪ್ರತಿಮೆಗಳಾಗಿ ಸ್ಥಾನಪಡೆದು ಮನುಷ್ಯ ಬದುಕಿನ ಅವಿಭಾಜ್ಯ ಅಂಗಗಳಾಗಿ.
ನಮ್ಮ ಮಕ್ಕಳು ಅತ್ತ ಗೋಲಿ ಬುಗುರಿ ಲಗೋರಿ ಆಡುತ್ತಿದ್ದರೆ ಇತ್ತ ಗುಂಪು ಗೂಡಿ ಕುಪ್ಪಳಿಸುತ್ತಾ ಚಿಂವ್ ಚೀಂವ್ ಚಿಟಾಂವ್ ಎಂದು ಗುಬ್ಬಲೆಬ್ಬಿಸಿ ಆಡುತ್ತಾ ಕಸಕಡ್ಡಿ ಕಾಳುಕಡಿ ಹೆಕ್ಕುತ್ತಾ ಬದುಕಿನ ಭಾಗವಾಗಿ ಜೀವಿಸುತ್ತಿದ್ದ ಗುಬ್ಬಿಗಳು ಜಾಗತೀಕರಣ ಪ್ರವೇಷವಾದ ತೊಂಬತ್ತರ ದಶಕದಲ್ಲಿ ಇದ್ದಕ್ಕಿದ್ದಂತೆ ಮಂಗಳ ಮಾಯವಾಗತೊಡಗಿದವು.
ಒಂದೋ ನಾವು ಪಾರಂಪರಿಕ ಮನೆ ಕಟ್ಟಡಗಳ ವಾಸ್ತು ಬದಲಾಯಿಸಿ ಪಾಶ್ಚಾತ್ಯ ಮಾದರಿಯ ತಾರಸಿ ಮನೆ ಬೃಹತ್ ಕಟ್ಟಡಗಳ ನಿರ್ಮಾಣದಲ್ಲಿ ತೊಡಗಿದ್ದು. ಮತ್ತೊಂದು ಮೊಬೈಲ್ ಮತ್ತಿತರೆ ಅಂತರ್ಜಾಲದ ಎಲೆಕ್ಟ್ರಾನಿಕ್ ಅಲೆಗಳು ವಾತಾವರಣದಲ್ಲಿ ಟ್ರಾಫಿಕ್ ಜಾಮ್ ಮಾಡಲು ಆರಂಭಿಸಿದ್ದು.
ಇದೆಲ್ಲದಕ್ಕಿಂತ ಮುಖ್ಯವಾದ ಮತ್ತೊಂದು ಸಂಗತಿ ಕೃಷಿ ಸಂಸ್ಕೃತಿ ಮಾರ್ಪಾಡಾಗಿ ಕಾಳು ಕಡಿ ಒಕ್ಕುವ ಪದ್ಧತಿಯಲ್ಲಿ ಬದಲಾವಣೆ ಕಣಜಗಳಿಲ್ಲದ ಮನೆಗಳು, ಕಮರ್ಷಿಯಲ್ ಬೆಳೆಗಳು ಇವೆಲ್ಲದರ ಜೊತೆಗೆ ಕಾಳು ಕಡಿ ಬಿದ್ದಿರುತ್ತಿದ್ದ ಮನೆಯ ಮುಂದಿನ ಕಸದ ಗುಡ್ಡೆಗೆ ಗುಳಿಗೆ ಟಾನಿಕ್ಕು ಸಿರಪ್ ಪೇಷ್ಟ್ ಗಾಜಿನ ಚೂರು ಬೀಳ ತೊಡಗಿದುದು.
ನಾವು ಬಳಸುವ ಮೈ ಸೋಪು ಶಾಂಪು ಬಟ್ಟೆ ಸೋಪು ಬ್ಲೀಚಿಂಗ್ ಪೌಡರ್, ಪೆನೋಯಿಲ್, ಮನೆಗಳಿಗೆ ಸಿಪಡಿಸುವ ಬಣ್ಣ, ಚರಂಡಿಗೆ ಹಾಕುತ್ತಿದ್ದ ಡಿಡಿಟಿ ಪೌಡರ್ ಎಲ್ಲವೂ ಬೆರೆತ ನೀರನ್ನೇ ಅವು ಕುಡಿಯಬೇಕಾದುದರಿಂದ ಅವುಗಳ ಜೀವದ ಮೇಲೆ ನೂರಾರು ಬಗೆಯ ಮಾರಣಾಂತಿಕ ಪರಿಣಾಮಗಳಾಗಿ ಅವುಗಳ ಸಂತತಿ ದಿಡೀರನೆ ಇಳಿಮುಖವಾಯಿತು.
ಬಹುಷಃ ಯಾವ ಪ್ರಾಣಿ ಅಥವಾ ಪಕ್ಷಿಯ ಜಗತ್ತಿನಿಂದ ಕಣ್ಮರೆಯಾದಾಗಲೂ ಜಗತ್ತು ಅಷ್ಟೊಂದು ಕಳವಳಗೊಂಡಿತ್ತೋ ಇಲ್ಲವೋ ಕಾಣೆ. ಗುಬ್ಬಿಗಳು ಕಣ್ಮರೆಯಾಗ ತೊಡಗಿದ ಕೂಡಲೇ ಎಲ್ಲೆಡೆಯಲ್ಲೂ ಜನ ಮನ ಮಿಡಿಯಿತು. ಗುಬ್ಬಿಗಳ ರಕ್ಷಣೆಗಾಗಿ ಪರಿಸರವಾದಿಗಳು ಪರಿಸರ ಪ್ರೇಮಿಗಳು ಪಕ್ಷಿ ಪ್ರೇಮಿಗಳು ಛಾಯಾಗ್ರಾಹಕರು ಎಲ್ಲರೂ ದನಿ ಎತ್ತಿದರು. ಹೋರಾಟ ಜರುಗಿದವು, ಲೇಖನಗಳು ಸಾಕ್ಷ್ಯಚಿತ್ರಗಳು ಚಿಂತನಮಂಥನಗಳು ರಾಷ್ಟ್ರೀಯ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಜರುಗಿದವು.
ಅನೇಕ ಸಂಸ್ಥೆಗಳು ಸಚಿವಾಲಯಗಳು ಗುಬ್ಬಿಗಳ ದಿಢೀರ್ ಕಣ್ಮರೆಯ ಕುರಿತು ಸಮೀಕ್ಷೆ ಸಂಶೋಧನೆ ಅಧ್ಯಯನಗಳ ಮೂಲಕ ವರದಿಗಳನ್ನು ಸಿದ್ದಪಡಿಸಿದರು. ಹೀಗೆ ಜಗತ್ತಿನ ದನಿ ಒಂದಾಗಿ ಗುಬ್ಬಿಗಳ ರಕ್ಷಣೆಗೆ ಮುಂದಾಯಿತು. ಅದರ ಪರಿಣಾಮವೇ ಪ್ರತಿವರ್ಷ ಗುಬ್ಬಿಗಳ ರಕ್ಷಣೆಗಾಗಿ ಜಗತ್ತಿಗೆ ಅರಿವು ಮೂಡಿಸಲು ಮಾರ್ಚ್ 20 ವಿಶ್ವ ಗುಬ್ಬಿಗಳ ದಿನಾಚರಣೆ ಆಚರಿಸಲಾಗುತ್ತಿದೆ.
ಗುಬ್ಬಿಗಳು ಮಾತ್ರವಲ್ಲ ತೊಂಬತ್ತರ ದಶಕ ಅನೇಕ ಜೀವಿಗಳನ್ನು ನುಂಗಿ ನೀರು ಕುಡಿದ ದಶಕ. ಅದು ನಿಲ್ಲದೇ ಕಾಡ್ಗಿಚ್ಚಿನಂತೆ ಮುಂದುವರೆದೇ ಇದೆ. ಪರಿಸರದ ಜಾಡಮಾಲಿಗಳು ಎಂದೇ ಕರೆಯಲಾಗುವ ರಣಹದ್ದು (Indian valture)ಗಳೂ ಡೈಕ್ಲೊಫೆನಾಕ್ ಸೋಡಿಯಂ ಎಂಬ ಲಸಿಕೆ ಚುಚ್ಚಿದ್ದ ಸತ್ತ ದನಗಳನ್ನು ತಿಂದು ಈಗ ಎಲ್ಲೆಲ್ಲೂ ಕಾಣಸಿಗದಂತೆ ನಾಶವಾದವು.
ರಾಮನಗರ ಜಿಲ್ಲೆಯಲ್ಲಿ ಒಂದು ರಣಹದ್ದು ಧಾಮವಿದೆ ಬಿಟ್ಟರೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಬೆರಳೆಣಿಕೆಯ ರಣಹದ್ದುಗಳು ಕಾಣಸಿಗುತ್ತವೆ. ಸತ್ತವರಿಗೆ ಮೂರು ದಿನದ ಕೂಳು ಹಾಕಿದರೆ ಬಂದು ಕೂಳು ತಿನ್ನಲು ಕಾಗೆಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಕಾಗೆಗಳ ಬದಲಿಗೆ ಉಣ್ಣೆಗೊರವಗಳು ಕೂಳು ಮುಟ್ಟಿದರೆ ತೃಪ್ತಿಪಟ್ಟುಕೊಳ್ಳಬೇಕಾದ ಸ್ಥಿತಿ ಬಂದಿದೆ. ಅಷ್ಟೇ ಅಲ್ಲ ರಣಹದ್ದುಗಳು ಕಣ್ಮರೆಯಾದದ್ದರಿಂದ ಪಾರ್ಸಿಗಳು ತಮ್ಮ ಶವಸಂಸ್ಕಾರ ಪದ್ಧತಿಯನ್ನೇ ಬದಲಾಯಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ.
ಇದನ್ನೂ ಓದಿ | ಮಾರ್ಚ್ 20 ಗುಬ್ಬಿ ದಿನ ವಿಶೇಷ |ಚೀಂವ್ ಚೀಂವ್ ಗುಬ್ಬಚ್ಚಿಯ ನೆನೆಯುವ ಸಮಯ
ಶವಸಂಸ್ಕಾರದ ಬಗ್ಗೆ ಅವರಲ್ಲಿ ಗಂಭೀರ ಚಿಂತನೆ ನಡೆದಿದೆ. ಹೀಗೆ ನಾವು ಬದುಕುತ್ತಿರುವ ಈ ಕಾಲಘಟ್ಟ ತುಂಬ ವಿನಾಶಕಾರಿಯಾದುದು. ನೀರು ಗಾಳಿ ಆಹಾರ ಮಣ್ಣು ಎಲ್ಲದರಲ್ಲೂ ರಾಸಾಯನಿಕ ತುಂಬಿದ್ದರಿಂದಲೋ ಏನೋ ನಮ್ಮ ಮೈಯ್ಯಿಗೂ ಆ ವಿಷ ಸೇರಿ ಮನಸ್ಸೂ ವಿಷವೇ ಆಗಿ ಎಲ್ಲರೂ ವಿಷಕಂಠರಲ್ಲ, ವಿಷಘಾತುಕರಾಗಿದ್ದೇವೆ.
ದೇವರು ಧರ್ಮದಾಚೆಗೆ ನಾವು ಬದುಕಲು ಬೇಕಾದ ನಮ್ಮ ಹೊರತೂ ಇರುವ ಅಗಾಧ ಜೀವಜಗತ್ತನ್ನು ಇನ್ನಿಲ್ಲದಂತೆ ಅಲಕ್ಷಿಸಿದ್ದೇವೆ. ಹಕ್ಕಿಗಳಿಗಾಗಿ ಮನೆಯ ಮಹಡಿಯ ಮೇಲೆ ಒಂದಿಷ್ಟು ನೀರು ಒಂದಷ್ಟು ಕಾಳುಕಡಿ ಇಡಲಾರದ ಮಟ್ಟಿಗೆ, ಮನೆಯ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡಿಕೊಳ್ಳಲಾರದ ಮಟ್ಟಿಗೆ ಬೇಜವಾಬ್ದಾರಿಗಳಾಗಿದ್ದೇವೆ.
ನಾವು ತಲೆ ಎತ್ತಿ ನೋಡಿದರೆ ಆಕಾಶದ ನೇಲಿಯಲ್ಲಿ ಅರಳೆ ತುಪ್ಪಳದಂತಹಾ ಬಿಳಿಮೋಡದ ತಳದಲ್ಲಿ ಗಿರಕಿಹೊಡೆಯುತ್ತಿದ್ದ ರಣಹದ್ದು ಒಂದಗುಳ ಕಂಡರೆ ತನ್ನ ಬಳಗವನೆಲ್ಲವ ಕರೆದು ಶೂನ್ಯಸಂಪಾದನೆಯ ಪಾಠ ಹೇಳಿ ಸಮಾನವಾಗಿ ಹಂಚಿಕೊಂಡು ತಿನ್ನಿರಿ ಎಂಬ ಸಮತಾವಾದದ ಪಾಠ ಒಗ್ಗಟ್ಟಿನ ಪಾಠ ತನ್ನವರು ನೊಂದರೆ ಸತ್ತರೆ ನಾವು ಹೇಗೆ ಮಿಡಿಯಬೇಕೆಂಬ ಸಂಬಂಧದ ಪಾಠ ಹೇಳಿಕೊಡುತ್ತಿದ್ದ ಕಾಗೆಗಳು ಮರೆಯಾಗುತ್ತಿವೆ.
ನಮ್ಮನ್ನು ನಂಬುತ್ತಾ ನಮ್ಮ ಮನೆಯ ಮಕ್ಕಳೇ ಆಗಿ ನಮ್ಮೊಡನೆ ಬಾಳುತ್ತಿದ್ದ ಗುಬಚ್ಚಿಗಳ ಬದುಕು ಅಪ್ಪಚ್ಚಿಯಾಗಿದೆ. ಇನ್ನೇನುಳಿಯಲಿದೆ ಈ ಜಗತ್ತಿನಲ್ಲಿ. ಮನುಷ್ಯತ್ವವೇ ಮರೆಯಾಗುತ್ತಿರುವಾಗ…
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


