ದಿನದ ಸುದ್ದಿ
ದಾವಣಗೆರೆ | 17.50 ಕೋಟಿಯ ಸುಸಜ್ಜಿತ ರೈಲ್ವೆ ನಿಲ್ದಾಣ, ಡಿಸಿಎಂ ಬಡಾವಣೆಯಲ್ಲಿ ಆಧುನಿಕ ರೈಲ್ವೆ ಕೆಳ ಸೇತುವೆ ಹಾಗೂ ಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ : ಜಿ.ಎಂ.ಸಿದ್ದೇಶ್ವರ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರ್ಪಡೆ ಆದ ಮೇಲೆ ಸ್ಮಾರ್ಟ್ ಸಿಟಿಗೆ ಸರಿಹೊಂದುವ ರೈಲ್ವೆ ನಿಲ್ದಾಣ ಆಗಬೇಕು ಹಾಗೂ ತಿಂಗಳಲ್ಲಿ ಸರಾಸರಿ 1.5 ಕೋಟಿಯಷ್ಟು ವರಮಾನ ಬರುವ ದಾವಣಗೆರೆ ರೈಲ್ವೆ ನಿಲ್ದಾಣ ಅತ್ಯಾಧುನಿಕ ಕಟ್ಟಡ ಹೊಂದಬೇಕು ಎಂಬ ನನ್ನ ಆಶಯ ಇಂದು ಈಡೇರಿದೆ ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.
ಡಿಸಿಎಂ ಬಡಾವಣೆ ಬಳಿಯ ನವೀಕೃತ ರೈಲ್ವೆ ಕೆಳ ಸೇತುವೆ (ಯುಆರ್ಬಿ) ಹಾಗೂ ರೈಲ್ವೆ ನಿಲ್ದಾಣದ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನ್ನ ಲೋಕಸಭಾ ಅವಧಿಯಲ್ಲಿ ನನಗೆ ತೃಪ್ತಿ ನೀಡಿದ ಕೆಲಸಗಳಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವೂ ಕೂಡ ಒಂದು.
ಇದನ್ನೂ ಓದಿ | ಭಾರತದಲ್ಲಿ 89,129 ಹೊಸ ಕೋವಿಡ್ ಪ್ರಕರಣಗಳು ದಾಖಲು
ಕೋವಿಡ್ ಆರ್ಥಿಕ ಸಂಕಷ್ಟದ ನಡುವೆಯೂ ಕೂಡ ರೈಲ್ವೆ ಇಲಾಖೆಯ ಸಾಮಥ್ರ್ಯ ಸ್ವಲ್ಪವೂ ಕಡಿಮೆಯಾಗಿಲ್ಲ. ಕೋವಿಡ್ ನಿಂದ ಲಾಕ್ಡೌನ್ ಆದ ಸಮಯದಲ್ಲಿ ಹಗಲಿರುಳೆನ್ನದೇ ಕಾಯನಿರ್ವಹಿಸಿದ್ದ ರೈಲ್ವೆ ನೌಕರರಿಗೆ ಅಭಿನಂದಿಸಿದರು. ನಗರದಲ್ಲಿ ರೂ. 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನವೀಕೃತ ರೈಲ್ವೆ ನಿಲ್ದಾಣವನ್ನು ಮುಂದಿನ 2 ವರ್ಷಗಳಲ್ಲಿ ಜಿ ಪ್ಲಸ್ 2 ಮಾದರಿ ಕಟ್ಟಡವಾಗಿ ಪರಿವರ್ತಿಸುವ ಗುರಿ ಹೊಂದಿದ್ದೇವೆ ಎಂದರು.
ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿ ಇನ್ನೂ ಮುಗಿದಿಲ್ಲ. ಆದರೆ ರೈಲ್ವೆ ನಿಲ್ದಾಣ ಕೈಗೆತ್ತಿಕೊಂಡ ಒಂದು ವರ್ಷದಲ್ಲೇ ಪೂರ್ಣಗೊಳಿಸಲಾಗಿದೆ. ಇದಕ್ಕೆ ಕೇಂದ್ರದ ಮಾಜಿ ಸಚಿವ ಸುರೇಶ್ ಅಂಗಡಿ ಕಾರಣೀಭೂತರು ಎಂದು ಅವರನ್ನು ಸ್ಮರಿಸಿದರು.
ರೈಲ್ವೆ ನಿಲ್ದಾಣವನ್ನು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಫುಟ್ಓವರ್ ಬ್ರಿಡ್ಜ್, ವಿಶಾಲವಾದ ಫ್ಲಾಟ್ಫಾರ್ಮ್ ಶೆಲ್ಟರ್, ಸ್ಟೇಷನ್ ಕಟ್ಟಡ, ಪಾರ್ಕಿಂಗ್ ಹಾಗೂ ಗಾರ್ಡನ್ ವ್ಯವಸ್ಥೆ, ಲಿಫ್ಟ್, ಪಿ.ಆರ್ಎಸ್ ಸೌಲಭ್ಯ, ವಿಐಪಿ ಲಾಡ್ಜ್, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕಾಯುವ ಸಭಾಂಗಣ, ಅತ್ಯಾಧುನಿಕ ಮಿಸಲಾತಿ ವ್ಯವಸ್ಥೆ, ಬಸ್ಬೇ, ವಿಶ್ರಾಂತಿ ಕೊಠಡಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಹಾಗೂ ರೈಲ್ವೆ ಪ್ಲಾಟ್ಫಾರ್ಮ್ ಟಿಕೆಟ್ ಅನ್ನು ರೂ.10 ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಸೂಚಿಸಿದರು.
ರೈಲ್ವೆ ಕಟ್ಟಡದ ಹೊರಗಡೆ ವಿಶಾಲವಾದ ಆಗಮನ ಮತ್ತು ನಿರ್ಗಮನ ರಸ್ತೆಗಳು, ವಾಹನ ನಿಲುಗಡೆ ಪ್ರದೇಶ, ಸೆಲ್ಪಿ ಪಾಯಿಂಟ್ (ಐ ಲವ್ ಡಿವಿಜಿ), ಆಟೋ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರ ಎದುರಿಗೆ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹಾರುತ್ತಿರುವ ಬೃಹತ್ ರಾಷ್ಟ್ರಧ್ವಜ, ಸುಂದರವಾದ ಗೋಡೆ ನಿರ್ಮಾಣ, ಟಿಕೇಟ್ ಕೌಂಟರ್, ಅತ್ಯಧುನಿಕ ಶೌಚಾಲಯ ಸೇರಿದಂತೆ ವಿವಿಧ ಸವಲತ್ತುಗಳು ಪ್ರಯಾಣಿಕರಿಗೆ ಸಂತಸ ತರಲಿದೆ ಎಂದರು.
ರೈಲು ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣದಲ್ಲಿರುವ ಬೆಳಕು ವಿನ್ಯಾಸ ಮಾದರಿಯಲ್ಲಿ ಎಲ್ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದ್ದು, ಇದರಿಂದ ಬಹಳಷ್ಟು ವಿದ್ಯುತ್ ಉಳಿತಾಯವಾಗಲಿದೆ. ಹಾಗೂ ರೈಲು ನಿಲ್ದಾಣದ ನೂತನ ಕಟ್ಟಡದ ಮೇಲೆ ಇನ್ನೊಂದು ಮಹಡಿಯನ್ನು ನಿರ್ಮಿಸಿ, ಅಭಿವೃದ್ಧಿಗೊಳಿಸುವ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದೆ.
ಮುಂಬರುವ ದಿನಗಳಲ್ಲಿ ಅದಕ್ಕೂ ಮಂಜೂರಾತಿ ದೊರೆಯಲಿದೆ. ಕಟ್ಟಡ ನಿರ್ಮಾಣದ ನಂತರ ಮಹಡಿ ಮೇಲೆ ಸೌರ ಫಲಕಗಳನ್ನು ಅಳವಡಿಸಿ ನಿಲ್ದಾಣಕ್ಕೆ ಅಗತ್ಯ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು.ರೈಲು ನಿಲ್ದಾಣದ ಪಕ್ಕದ ಉಪವಿಭಾಗಾಧಿಕಾರಿ ಕಚೇರಿಯ ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಲಾಗಿದೆ.
ಈ ಜಾಗಕ್ಕೆ ಪರ್ಯಾಯವಾಗಿ ರೈಲ್ವೆ ಇಲಾಖೆಯು ದೊಡ್ಡಬಾತಿ ಬಳಿ ಜಾಗ ನೀಡಲಿದೆ. ಉಪವಿಭಾಗಾಧಿಕಾರಿ ಕಚೇರಿ ನಿರ್ಮಿಸಲು ರೂ. 5 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ನೂತನ ಕಚೇರಿಯನ್ನು ನಿರ್ಮಿಸಲಾಗುವುದು. ಈಗಿರುವ ಉಪವಿಭಾಗಾಧಿಕಾರಿ ಕಚೇರಿ ಜಾಗದಲ್ಲಿ ರೈಲು ನಿಲ್ದಾಣಕ್ಕೆ ಪ್ರವೇಶ ದ್ವಾರ ನಿರ್ಮಿಸಲಾಗುವುದು. ಜೊತೆಗೆ ಪಾರ್ಕಿಂಗ್ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲಾಗುವುದು.
ಬಾಣಾವರದಿಂದ ದಾವಣಗೆರೆ ಮಾರ್ಗವಾಗಿ ಹುಬ್ಬಳ್ಳಿವರೆಗೆ ರೈಲ್ವೆ ಲೈನ್ ಎಲೆಕ್ಟ್ರಿಫಿಕೇಷನ್ ಗಾಗಿ 160 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ದೇಶದಲ್ಲಿರುವ ಬಹುತೇಕ ಎಲ್ಲಾ ಮಾನವರಹಿತ ಲೆವೆಲ್ ಕ್ರಾಸಿಂಗ್ಗಳನ್ನು ತೆರವುಗೊಳಿಸಲಾಗಿದೆ. ಹಾಗೂ ಆತ್ಮನಿರ್ಭರ ಭಾರತ್ ಇದರ ಉದ್ದೇಶಗಳನ್ನು ಈಡೇರಿಸಲು ರೈಲ್ವೆ ಇಲಾಖೆ ಈಗಲೂ ಬದ್ಧವಾಗಿದೆ ಎಂದರು.
2012-13 ರಲ್ಲಿ ಪ್ರತಿದಿನ 4 ರಿಂದ 5 ಕಿ.ಮೀ ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗ್ತಾ ಇತ್ತು. ಆದರೆ ಈಗ ಪ್ರತಿನಿತ್ಯ ಸರಾಸರಿ 23 ಕಿ.ಮೀ. ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗುತ್ತಿದೆ. ಅಲ್ಲದೇ ಪ್ರಧಾನಮಂತ್ರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸುಮಾರು 503 ಯೋಜನೆಗಳನ್ನು ಪೂರ್ಣಗೊಳಿಸುವ ಹಂತಕ್ಕೆ ತರಲಾಗಿದೆ.
ಹರಿಹರ ನಗರದ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಹರಿಹರ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್ ಕಾರಣಕ್ಕೆ ಉಂಟಾದ ಆರ್ಥಿಕ ಸಂಕಷ್ಟದಿಂದ ಮಂಜೂರಾತಿ ಸಿಗಲು ವಿಳಂಬವಾಗಿದೆ. ಮುಂಬರುವ ದಿನಗಳಲ್ಲಿ ಮಂಜೂರಾತಿ ಸಿಗಲಿದೆ ಎಂದರು.
ಹಾಗೂ ಹರಿಹರದ ಅಮರಾವತಿ ಬಳಿ ರೈಲ್ವೆ ನಿಲ್ದಾಣಕ್ಕೆ 30 ಕೋಟಿ ವೆಚ್ಚದಲ್ಲಿ ಮೇಲು ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.
ಹನುಮನಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಯ ವ್ಯವಸ್ಥೆಯನ್ನು ಈ ಹಿಂದಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಜಿ.ಎಂ.ಐ.ಟಿ ಕಾಲೇಜಿನ ಸಮೀಪದ ಕರೂರಿನಲ್ಲಿನ 203ನೇ ರೈಲ್ವೆ ಗೇಟ್ ಬಳಿ ಜುಲೈನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.
ರೂ. 15 ಕೋಟಿ ವೆಚ್ಚದಲ್ಲಿ ರೈಲು ನಿಲ್ದಾಣದ ಆಧುನೀಕರಣ, ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ರೂ. 5 ಕೋಟಿ ವೆಚ್ಚದಲ್ಲಿ ಎಸ್ಕಲೇಟರ್ (ಚಲಿಸುವ ಮೆಟ್ಟಿಲು) ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಅದರಲ್ಲೂ ಎಸ್ಕಲೇಟರ್ ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಬೆಂಗಳೂರು, ಮೈಸೂರು ಬಿಟ್ಟರೆ ಇನ್ನಿತರ ಯಾವುದೇ ಜಿಲ್ಲೆಗಳಲ್ಲೂ ಇರಲಿಲ್ಲ. ಇದೀಗ ದಾವಣಗೆರೆಯಲ್ಲಿ ಆಗಿರುವುದು ಸಂತಸಕರ ಎಂದರು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಅಶೋಕ ರೈಲ್ವೆ ಗೇಟ್ ಬಳಿ ಅಂಡರ್ ಪಾಸ್ ನಿರ್ಮಿಸಲು ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ಜಮೀನಿನ ಮಾಲೀಕರೊಂದಿಗೆ ಜಿಲ್ಲಾಡಳಿತ ಮಾತುಕತೆ ನಡೆಸಿದ್ದು, ಶೀಘ್ರವೇ ಪರ್ಯಾಯ ಜಾಗವನ್ನು ಕೊಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹರಿಹರದಲ್ಲಿ 47 ಎಕರೆ ಜಮೀನಿನಲ್ಲಿ ಎಥನಾಲ್ ಘಟಕವು ಶೀಘ್ರದಲ್ಲೆ ಸ್ಥಾಪನೆಯಾಗಲಿದೆ.
ಮಾಯಕೊಂಡದಿಂದ ಹರಿಹರದವರೆಗೆ ಈಗಾಗಲೇ ರೂ.250 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಮೆಗಾ ಜವಳಿ ಪಾರ್ಕ್ ನಿರ್ಮಿಸಲು 1038 ಎಕರೆ ಜಮೀನಿನ ಅಗತ್ಯವಿದ್ದು, ಇಲ್ಲಿಯವರೆಗೂ ಜಮೀನು ಸ್ವಾಧೀನ ನಡೆದಿಲ್ಲ. ಯಾವುದೇ ಕಾಮಗಾರಿ, ಯೋಜನೆಗಳನ್ನು ಪರಿಪೂರ್ಣಮಾಡಬೇಕೆಂದರೆ ಜಾಗದ ಕೊರತೆ ಇದೆ ಎಂದ ಅವರು ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ತಕ್ಕಂತೆ ವಿಮಾನ ನಿಲ್ದಾಣ ಆರಂಭಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಪ್ರಪಂಚದಲ್ಲಿಯೇ ನಾಲ್ಕನೇ ಅತಿದೊಡ್ಡ ರೈಲ್ವೆ ನೆಟ್ವರ್ಕ್ ಎಂಬ ಖ್ಯಾತಿಯನ್ನು ನಮ್ಮ ಇಂಡಿಯನ್ ರೈಲ್ವೆ ಹೊಂದಿದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿಗೆ ತಕ್ಕ ಹಾಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ ಆಗಿರುವುದು ಸಂತೋಷವಾಗಿದೆ. ಪ್ರಸ್ತುತ ದೇಶದ ಶೇಕಡ 33 ರಷ್ಟು ಸರಕು ಸಾಗಾಟ ರೈಲ್ವೆ ಮೂಲಕ ನಡೆಯುತ್ತಿದೆ. ಇದನ್ನು 2030 ರ ವೇಳೆಗೆ ಶೇಕಡ 50 ಕ್ಕೆ ಮುಟ್ಟಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.
ಬೇಡಿಕೆಗೆ ಮುಂಚೆಯೇ ಮೂಲಸೌಕರ್ಯ ಸಾಮಥ್ರ್ಯವನ್ನು ಸೃಷ್ಟಿಸುವುದು ರಾಷ್ಟ್ರೀಯ ರೈಲ್ವೆ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 2030 ರೊಳಗೆ ದೇಶಾದ್ಯಂತ ಬ್ರಾಡ್ಗೇಜ್ನ್ನು ಸಂಪೂರ್ಣ ಎಲೆಕ್ಟ್ರಿಫಿಕೇಷನ್ ಮಾಡುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಈಗಾಗಲೇ ಶೇಕಡ 58 ರಷ್ಟು ಎಲೆಕ್ಟ್ರಿಫಿಕೇಶನ್ ಕಾರ್ಯ ಪೂರ್ಣಗೊಂಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಾಪೌರರಾದ ಎಸ್.ಟಿ.ವೀರೇಶ್, ದೂಡ ಅಧ್ಯಕ್ಷರಾದ ಶಿವಕುಮಾರ್, ವಿಭಾಗೀಯ ಮುಖ್ಯ ವ್ಯವಸ್ಥಾಪಕರಾದ ರಾಹುಲ್ ಅಗರ್ವಾಲ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮುಖಂಡರಾದ ಯಶವಂತರಾವ್ ಜಾದವ್, ವೀರೇಶ್ ಹನಗವಾಡಿ, ಲೋಕಿಕೆರೆ ನಾಗರಾಜ್, ಸುಧಾ ಜಯಪ್ರಕಾಶ್, ಲಿಂಗರಾಜ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ19 hours agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

