Connect with us

ಅಂತರಂಗ

ಅನಾರೋಗ್ಯ ಮನಸುಗಳ ಪರಿವರ್ತನೆಗೆ ಶ್ರಮಿಸುತ್ತಿರುವ ಆರೋಗ್ಯಧಾಮ

Published

on

ತ್ತಡದ ಜೀವನದಿಂದಾಗಿ ಇಂದು ಅದೆಷ್ಟೊ ಮಂದಿ ಮನೋದೌರ್ಬಲ್ಯಕ್ಕೆ ತುತ್ತಾಗಿ ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹಣ ಹಾಗೂ ವ್ಯಕ್ತಿತ್ವ ಆರೋಗ್ಯ ಸೇರಿದಂತೆ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದಾರೆ. ಅಂಥವರನ್ನು ಸರಿಪಡಿಸಿ ಮತ್ತೇ ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಆರೋಗ್ಯವಂತ ವ್ಯಕ್ತಿಗಳನ್ನಾಗಿ ರೂಪಿಸಲು ಶ್ರಮಿಸುತ್ತಿದೆ ದಾವಣಗೆರೆ ದೇವರಾಜ ಅರಸು ಬಡಾವಣೆಯ ಹೊಸಕೋರ್ಟ್ ಹತ್ತಿರವಿರುವ ಆರೋಗ್ಯಧಾಮ ನಶಾಮುಕ್ತಿ ಕೇಂದ್ರ. ನಶಾಮುಕ್ತಿ ಕೇಂದ್ರದಲ್ಲಿ ಪ್ರತಿದಿನ ಬೆಳಗ್ಗೆ 7 ರಿಂದ 8ರವರೆಗೆ ಹಾಗೂ 6.30 ರಿಂದ 7.30ರವರೆಗೆ ರಾಜಯೋಗ ತರಬೇತಿ ನಡೆಯುತ್ತದೆ. ಮಾನಸಿಕ ಕಾಯಿಲೆ ಇದ್ದವರಿಗೆ ಹಾಗೂ ದುಶ್ಚಟಗಳಿಗೆ ಬಲಿಯಾದವರಿಗೆ ಹೋಮಿಯೋಪತಿಕ್ ಮೆಡಿಸನ್ ಸಹ ನೀಡಲಾಗುತ್ತಿದೆ. ಈ ಮೆಡಿಸನ್ ಬಾಂಬೆಯಲ್ಲಿರುವ ಈಶ್ವರೀ ವಿಶ್ವವಿದ್ಯಾಲಯದ ಶಾಖೆಯಿಂದ ಈ ಕೇಂದ್ರಕ್ಕೆ ರವಾನೆಯಾಗುತ್ತಿದೆ. ತಂಬಾಕು, ಗುಟಕಾ, ಆಲ್ಕೋಹಾಲ್, ಬೀಡಿ, ಸಿಗರೇಟ್, ಡ್ರಗ್ಸ್ ಇತ್ಯಾದಿ ದುಶ್ಚಟಗಳಿಗೆ ಒಳಗಾದವರಿಗೆ ತಿಳಿ ಹೇಳುವ ಜೊತೆ ಅದರಿಂದ ಉಂಟಾಗುವ ದುಷ್ಪರಿಣಾಮವನ್ನು ಆಡಿಯೋ ವೀಡಿಯೋ ಮುಖಾಂತರ ಮನವರಿಕೆ ಮಾಡಿಕೊಟ್ಟು ದುಶ್ಚಟಗಳಿಂದ ಅವರು ಮುಕ್ತಿ ಹೊಂದುವಂತೆ ಪ್ರಯತ್ನಿಸಲಾಗುತ್ತಿದೆ. ಆರೋಗ್ಯವಂತರಾಗಿ ಅವರು ತಮ್ಮ ಜೀವನ – ಹಣ ಇತ್ಯಾದಿಯನ್ನು ಒಳ್ಳೆಯ ಕಾರ್ಯಗಳಿಗೆ ಬಳಸಿಕೊಂಡು ಸತ್ಪಾತ್ರಕ್ಕೆ ಅಣಿಯಾಗುವಂತೆ ತರಬೇತಿ ನೀಡಲಾಗುತ್ತದೆ. ಕೌನ್ಸಲಿಂಗ್ ಮೂಲಕ ದುಶ್ಚಟಗಳಿಗೆ ಒಳಗಾಗಿರುವವರ ಮನ ಪರಿವರ್ತನೆಗಾಗಿ ಶ್ರಮಿಸಲಾಗುತ್ತಿದೆ.

ಜಗತ್ತಿನ ಅತಿ ಹೆಚ್ಚು ಮೃತ್ಯು ಪ್ರಮಾಣದಲ್ಲಿ ಸಾವಿಗೆ ತಂಬಾಕು 2ನೇ ಮುಖ್ಯ ಕಾರಣವಾಗಿದೆ. ಪ್ರತಿವರ್ಷ ಸುಮಾರು 50ಲಕ್ಷ ಜನ ವಿಶ್ವದಲ್ಲಿ ಹಾಗೂ ಭಾರತದಲ್ಲಿ ಹತ್ತು ಲಕ್ಷಜನ ತಂಬಾಕಿಗೆ ಬಲಿಯಾಗುತ್ತಿದ್ದಾರೆ. ಅಲ್ಲದೆ ತಂಬಾಕಿನಿಂದ 25ಕ್ಕೂ ಹೆಚ್ಚು ಕಾಯಿಲೆಗಳು ಹರಡುತ್ತಿವೆ. ಅದರಲ್ಲಿ ಕ್ಯಾನ್ಸರ್ ಜೀವ ಘಾತುಕ ರೋಗವಾಗಿದೆ. ತಂಬಾಕಿನಲ್ಲಿ 4 ಸಾವಿರಕ್ಕಿಂತಲೂ ಹೆಚ್ಚು ರಾಸಾಯನಿಕ ಪದಾರ್ಥಗಳಿರುತ್ತವೆ. ಪ್ರತಿವರ್ಷ 25 ಸಾವಿರ ಕೋಟಿ ರೂ ತಂಬಾಕಿಗಾಗಿ ಖರ್ಚಾಗುತ್ತಿದೆ. ಇದರ ರೋಗಕ್ಕೆ ತುತ್ತಾದವರನ್ನುಗುಣಪಡಿಸಲು ಸರ್ಕಾರ 27 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುತ್ತಿದೆ.

ತಂಬಾಕು, ಗಾಂಜಾ, ಅಂಫಿಟಾಮಿನ್ ಇತ್ಯಾದಿಗಳು ಉತ್ತೇಜಕ ಪದಾರ್ಥಗಳಾಗಿವೆ. ಸಾರಾಯಿ, ನಿದ್ರೆ ಮಾತ್ರೆಗಳು ಮನುಷ್ಯರನ್ನು ಶಿಥಿಲಗೊಳಿಸುತ್ತವೆ. ಮಾದಕ ವಸ್ತುಗಳು ಭ್ರಮೆಯನ್ನುಂಟು ಮಾಡುತ್ತವೆ. ಇದರಿಂದಾಗಿ ಮಾನವರು ತಮ್ಮ ವಿವೇಚನೆ, ಆಲೋಚನೆ, ತಾರ್ಕಿಕ ಶಕ್ತಿ, ವ್ಯಕ್ತಿತ್ವ, ಹಣ ಸೇರಿದಂತೆ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ಇದು ದುರಂತವಲ್ಲವೇ? ಇದನ್ನು ತಡೆಯುವ ಕಾರ್ಯವನ್ನು ಯಾರಾದರೂ ಮಾಡಲೇಬೇಕಲ್ಲವೇ ? ಹಾಗಾಗಿಯೇ, ಆರೋಗ್ಯಕರ ಸಮಾಜದ ನಿರ್ಮಾಣದ ಗುರಿಹೊತ್ತು ಹತ್ತಾರು ವರ್ಷಗಳಿಂದ ತನ್ನ ಅಳಿಲು ಸೇವಾಕಾರ್ಯದಲ್ಲಿ ತೊಡಗಿದೆ ಈ ಕೇಂದ್ರ.

ಪ್ರಸ್ತುತ ಒತ್ತಡದ ಜೀವನ ಹಾಗೂ ಪೈಪೋಟಿಗೆ ಸಿಲುಕಿರುವ ನಮ್ಮ ಮಾನವ ಸಮುದಾಯ ವೈಟನರ್‍ನ ನಶೆ, ಔಷಧಿಗಳ ನಶೆ, ಅಫೀಮು, ಚೆರಸ್, ಗಾಂಜಾ, ಹೆರಾಯಿನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವ ಚಟ, ಅತಿಯಾದ ಆಹಾರವನ್ನು ಬಳಸುವ ಚಟ ಇತ್ಯಾದಿ ಹೊಸ ಹೊಸ ನಶಾವಸ್ತುಗಳ ಸೇವನೆಗೆ ತುತ್ತಾಗುತ್ತಿದೆ. ಇದುವರೆಗೂ ಸುಮಾರು ಸಾವಿರಕ್ಕೂ ಅಧಿಕ ಮಂದಿ ಆರೋಗ್ಯಧಾಮದ ಈ ಸೇವೆಯ ಪ್ರಯೋಜನ ಪಡೆದಿದ್ದಾರೆ. ಅದರಲ್ಲಿ ಹಲವರು ಪೂರ್ಣ ಪ್ರಮಾಣದಲ್ಲಿ ದುಶ್ಚಟಗಳಿಂದ ಮುಕ್ತರಾಗಿದ್ದಾರೆ. ಇನ್ನೂ ಕೆಲವರು ತರಬೇತಿ ಹಂತದಲ್ಲಿದ್ದಾರೆ. ಇಲ್ಲಿ ಪ್ರಥಮ ಹಂತದಲ್ಲಿ 3 ತಿಂಗಳವರೆಗೆ ಮೆಡಿಸನ್ ನೀಡಲಾಗುತ್ತದೆ. ವಾರಕ್ಕೊಮ್ಮೆ ಬಂದು ಮೆಡಿಸನ್ ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ. ಜೊತೆಯಲ್ಲಿ ಯೋಗ, ಧ್ಯಾನ, ಕೌನ್ಸಲಿಂಗ್ ಮತ್ತು ಮುಕ್ತ ವಾತಾವರಣ ಒದಗಿಸಿದೆ.
ದುಶ್ಚಟಕ್ಕೆ ಒಳಗಾದವರು ತಾವಾಗಿಯೇ ವೈಯುಕ್ತಿಕವಾಗಿ ಬರುವವರ ಸಂಖ್ಯೆ ಕಡಿಮೆ. ವ್ಯಸನಿಗಳ ಪರವಾಗಿ ಅವರ ಕುಟುಂಬದವರು ಬಂದು ಔಷಧಿ ಅಥವಾ ಮಾರ್ಗದರ್ಶನವನ್ನು ಪಡೆದು ಹೋಗಿ ಅವರನ್ನು ಗುಣಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಶಾಲಾ – ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವಕಾರ್ಯಕ್ರಮ, ಬೀದಿ ನಾಟಕ ಸ್ಪರ್ಧೆ, ಆಡಿಯೋ ವೀಡಿಯೋ ಪ್ರದರ್ಶನದ ಮೂಲಕ ದುಶ್ಚಟಗಳ ದುಷ್ಪರಿಣಾಮ ಹಾಗೂ ನಶಾಮುಕ್ತಿಯ ಜೀವನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಈ ಕೇಂದ್ರಕ್ಕೆ ರಾಜ್ಯಾದ್ಯಂತ ಎಲ್ಲೆಡೆಯಿಂದಲೂ ನಶಾಮುಕ್ತಿಗಾಗಿ ಬರುತ್ತಿದ್ದಾರೆ. ಬೆಂಗಳೂರು ಮತ್ತು ದಾವಣಗೆರೆ ಸೇರಿದಂತೆ ಎರಡೂ ಕಡೆ ಮಾತ್ರ ಈಶ್ವರೀ ವಿಶ್ವವಿದ್ಯಾಲಯದ ನಶಾಮುಕ್ತಿ ಕೇಂದ್ರಗಳಿವೆ.
ಬೆಳೆಯುವ ಸಿರಿ ಮೊಳೆಕೆಯಲ್ಲಿ ಎಂಬಂತೆ ಚಿಕ್ಕ ಮಕ್ಕಳನ್ನು ಉತ್ತಮ ಸಂಸ್ಕಾರಕ್ಕೆ ತೊಡಗಿಸಿದಲ್ಲಿ ಮಾತ್ರ ಭವಿಷ್ಯದಲ್ಲಿ ಆರೋಗ್ಯವಂತ ಸುಸ್ಥಿರ, ಸದೃಢ, ಭಾರತದ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ, ಯುವಜನತೆ ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದೆಂಬ ಸದುದ್ದೇಶದಿಂದ ಬಾಲ್ಯದಿಂದಲೇ ಅವರಿಗೆ ಉತ್ತಮ ಸಂಸ್ಕಾರಗಳ ತರಬೇತಿ ನೀಡುವ ಸಲುವಾಗಿ ಆರೋಗ್ಯಧಾಮದಲ್ಲಿ ಪ್ರತೀ ವರ್ಷ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗುತ್ತಿದೆ.
ವರ್ತನಾಶಾಸ್ತ್ರ, ರಾಷ್ಟ್ರೀಯ ಭಾವೈಕ್ಯತೆ, ವಚನಗಳ ಸ್ಪರ್ಧೆ, ಧ್ಯಾನ, ಯೋಗ, ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುವ ಚಟುವಟಿಕೆಗಳು ಸೇರಿದಂತೆ ಇತರೆ ಪಠ್ಯೇತರ ಚಟುವಟಿಕೆಗಳ ಆಯೋಜನೆ ಸಹ ಮಾಡಲಾಗುತ್ತಿದೆ. ಬಡವರು, ಶ್ರಮಿಕ ವರ್ಗದವರು, ಮಧ್ಯಮ ವರ್ಗದವರು, ದುರ್ಬಲ ಮನಸ್ಸಿನವರು ಹೆಚ್ಚಾಗಿ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಭಾರತದ ಬಹು ಸಂಖ್ಯಾತರು ಇವರೇ. ಇವರಿಂದಲೇ ಭಾರತದ ಅಭ್ಯುದಯ. ಆದ್ದರಿಂದ ಇವರನ್ನು ನಾವು ಆರೋಗ್ಯವಂತ ಜೀವನ ನಡೆಸಲು ಹಚ್ಚಬೇಕು. ಅದಕ್ಕಾಗಿ ನಾವೆಲ್ಲರೂ ಜೊತೆಗೂಡಿ ಶ್ರಮಿಸಬೇಕು ಎಂಬುದು ಈ ಕೇಂದ್ರದ ಸದಾಶಯ.

ಸುದ್ದಿದಿನ.ಕಾಂ|ವಾಟ್ಸಾಪ್| 9986715401

ಗಂಗಾಧರ ಬಿ.ಎಲ್ ನಿಟ್ಟೂರ್ ಅವರು, ಮೂಲತಃ ದಾವಣಗೆರೆ ಜಿಲ್ಲೆಯ,ಹರಿಹರ ತಾಲ್ಲೂಕಿನ, ನಿಟ್ಟೂರು ಗ್ರಾಮದವರು. ಹಲವು ಶಾಲಾ-ಕಾಲೇಜುಗಳಲ್ಲಿ ಸುಮಾರು 20 ವರ್ಷದಿಂದ ಶಿಕ್ಷಕ ವೃತ್ತಿ ನಿರ್ವಹಿಸುತ್ತಿದ್ದಾರೆ. ದಾವಣಗೆರೆ ಕೇಬಲ್ ಫಸ್ಟ್ ನೆಟ್ ನ 'ಕಾವ್ಯಧಾರೆ' ಪ್ರೋಗ್ರಾಂ ಆರ್ಗನೈಸರ್ ಮತ್ತು ನಿರೂಪಕರಾಗಿ 5 ವರ್ಷ ಹಾಗೂ ಜನಮಿಡಿತ, ಜನತಾ ಬಳಗ, ಕನ್ನಡ ಭಾರತಿ ಪತ್ರಿಕೆಗಳಲ್ಲಿ ಸಹ ಸಂಪಾದಕರಾಗಿ ಸೇವೆ ಮತ್ತು ವಿವಿಧ ವಿಷಯಗಳ ಉಪನ್ಯಾಸಕರಾಗಿ, ನಿರೂಪಕರಾಗಿ, ನಾಟಕ-ನೃತ್ಯ ನಿರ್ದೇಶಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. E- Mail : blgnittur123@gmail.com Mobile : 8867702396

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ4 days ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 week ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ2 weeks ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ2 weeks ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ2 weeks ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ2 weeks ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ2 weeks ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ2 weeks ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ2 weeks ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

Trending