Connect with us

ದಿನದ ಸುದ್ದಿ

ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆ ಶೀಘ್ರ ರೋಗ ಪತ್ತೆಯಿಂದ ಮರಣ ಸಂಭವ ಕಡಿಮೆ ; ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯ ಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ತಜ್ಞ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಬಹುತೇಕ ತಜ್ಞ ವೈದ್ಯರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಣಗಳದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ತಜ್ಞ ವೈದ್ಯರು, ಜಿಲ್ಲೆಯಲ್ಲಿ ಕೋವಿಡ್‍ನಿಂದ ಸಂಭವಿಸುವ ಮರಣ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಬರುವ 15 ದಿನಗಳಲ್ಲಿ ಕೋವಿಡ್ ಪ್ರಕರಣಗಳು ಎಷ್ಟಾಗಬಹುದು. ಇದಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೋವಿಡ್ 2ನೇ ಅಲೆಯಲ್ಲಿ ರೋಗಲಕ್ಷಣಗಳೂ ಕೂಡ ಕೆಲವು ರೋಗಿಗಳನ್ನು ಭಿನ್ನವಾಗಿ ಕಂಡುಬಂದಿವೆ. ಸಾಮಾನ್ಯವಾಗಿ ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣಗಳು ಕೋವಿಡ್‍ನ ಆರಂಭಿಕ ಹಂತದಲ್ಲಿ ಕಂಡುಬಂದಿತ್ತು.

ಇದನ್ನೂ ಓದಿ | ಮಂಗಳವಾರದಿಂದ ಲಾಕ್ ಡೌನ್ : ಏನಿರತ್ತೆ..? ಏನಿರಲ್ಲ..?

ಆದರೆ ಇತ್ತೀಚಿನ ಪ್ರಕರಣಗಳನ್ನು ಗಮನಿಸಿದಾಗ, ಜ್ವರ ಇಲ್ಲದಂತಹ ಪ್ರಕರಣಗಳು, ವಾಂತಿಬೇಧಿ, ಕಣ್ಣು ಕೆಂಪಾಗುವುದು, ತಲೆನೋವು, ಮೈಕೈನೋವು ರೋಗ ಲಕ್ಷಣಗಳು ಇರುವುದು ಕಂಡುಬಂದಿದೆ. ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು, ಸೋಂಕು ದೃಢಪಟ್ಟಲ್ಲಿ ಆತಂಕಕ್ಕೆ ಒಳಗಾಗದೆ ತಜ್ಞ ವೈದ್ಯರ ಶಿಫಾರಸ್ಸಿನಂತೆ ಚಿಕಿತ್ಸೆ ಪಡೆದುಕೊಳ್ಳಬೇಕು.

ಬೇಗ ರೋಗ ಪತ್ತೆಯಾದಲ್ಲಿ, ಚಿಕಿತ್ಸೆ ಪಡೆದು ಬೇಗ ಗುಣಮುಖರಾಗಬಹುದು. ಆದರೆ ರೋಗ ಪತ್ತೆ ಮಾಡಿಸಿಕೊಳ್ಳದೆ, ಸೋಂಕು ಉಲ್ಬಣಗೊಂಡು, ಶ್ವಾಸಕೋಶದಲ್ಲಿ ಸೋಂಕು ತೀವ್ರಗೊಂಡು, ತಡವಾಗಿ ಆಸ್ಪತ್ರೆಗೆ ಬರುವುದು ರೋಗಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಾಮಾನ್ಯವಾಗಿ ಕೋವಿಡ್‍ನಿಂದ ಮರಣ ಪ್ರಕರಣಗಳನ್ನು ವಿಶ್ಲೇಷಿಸಿದಾಗ, ತಡವಾಗಿ ಆಸ್ಪತ್ರೆಗೆ ಬಂದವರಲ್ಲೇ ಹೆಚ್ಚಿನ ಮರಣ ಸಂಭವಿಸಿದೆ ಎಂದು ತಜ್ಞ ವೈದ್ಯರು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ಬಿಡಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ, ಸ್ವಯಂ ಚಿಕಿತ್ಸೆ ಪಡೆಯದೆ, ಸಿಕ್ಕ ಸಿಕ್ಕ ಗುಳಿಗೆಗಳನ್ನು ನುಂಗದೆ, ಓಣಿಗಳಲ್ಲಿನ ಸಣ್ಣಪುಟ್ಟ ವೈದ್ಯರಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಗಾಗುವ ದುಸ್ಸಾಹಸಕ್ಕೆ ಕೈಹಾಕದೆ, ಕೂಡಲೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು.

ಇತ್ತೀಚೆಗೆ ಆರ್‍ಟಿಪಿಸಿಆರ್ ಟೆಸ್ಟ್ ನೆಗೆಟೀವ್ ಇದ್ದರೂ ಕೂಡ, ಶ್ವಾಸಕೋಶದಲ್ಲಿ ಸೋಂಕು ಇರುವ ಸಾಧ್ಯತೆಗಳಿರುತ್ತದೆ. ಸಾಮಾನ್ಯ ಕಫ ಎಂದು ಯಾರೂ ನಿರ್ಲಕ್ಷ್ಯ ಮಾಡಬಾರದು ಎಂದು ಮನವಿ ಮಾಡಿಕೊಂಡರು.

ವಿದೇಶಿ ಪ್ರಯಾಣಿಕರಿಗೆ ಖಾಸಗಿಯಲ್ಲಿ ಟೆಸ್ಟ್

ವಿದೇಶಕ್ಕೆ ತೆರಳಬಯಸುವವರು ಅಥವಾ ಬೇರೆ ಬೇರೆ ರಾಜ್ಯಗಳಿಗೆ ಪ್ರಯಾಣ ಬೆಳೆಸುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಬಯಸಿದಲ್ಲಿ, ಅಂತಹವರಿಗೆ ಸರ್ಕಾರಿ ಆಸ್ಪತ್ರೆ, ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು. ಅಂತಹವರು ಅಗತ್ಯವೆನಿಸಿದಲ್ಲಿ ನಿಗದಿತ ಖಾಸಗಿ ಆಸ್ಪತ್ರೆ, ಪ್ರಯೋಗಾಲಯಗಳಲ್ಲಿ ಟೆಸ್ಟ್ ಮಾಡಿಸಿಕೊಳ್ಳಲಿ.

ಕೋವಿಡ್ ಟೆಸ್ಟ್ ಅನ್ನು ಅನಗತ್ಯವಾಗಿ ಎಲ್ಲರಿಗೂ ಮಾಡಬಾರದು. ರೋಗ ಲಕ್ಷಣಗಳು ಕಂಡುಬಂದವರಿಗೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಹಾಗೂ ತಜ್ಞ ವೈದ್ಯರು ಶಿಫಾರಸು ಮಾಡುವವರಿಗೆ ಮಾತ್ರ ಕೋವಿಡ್ ಟೆಸ್ಟ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ

ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಆಂಬುಲೆನ್ಸ್‍ಗಳನ್ನು ಬೇಕಾಬಿಟ್ಟಿಯಾಗಿ ಬಳಸಬಾರದು. ತಜ್ಞ ವೈದ್ಯರ ಸಲಹಾ ಸಮಿತಿಯ ಶಿಫಾರಸಿನಂತೆ, ಮುಂಬರುವ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಮರ್ಪಕ ನಿರ್ವಹಣೆಗಾಗಿ ಜಿಲ್ಲೆಗೆ 01 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಕೇರ್ ಸಿಸ್ಟಂ ಹೊಂದಿರುವ ಆಂಬುಲೆನ್ಸ್, 02- ಬೇಸಿಕ್ ಲೈಫ್ ಸಪೋರ್ಟ್ ಸಿಸ್ಟಂ ಇರುವ ಆಂಬುಲೆನ್ಸ್ ಹಾಗೂ ಪ್ರತಿ ತಾಲ್ಲೂಕಿಗೆ ಒಂದು ಲೈಫ್ ಸಪೋರ್ಟ್ ಸಿಸ್ಟಂ ಆಂಬುಲೆನ್ಸ್ ಖರೀದಿಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರೆಮ್‍ಡೆಸಿವರ್ ಔಷಧ ದುರ್ಬಳಕೆಗೆ ಕಡಿವಾಣ

ಜಿಲ್ಲೆಯಲ್ಲಿ ರೆಮ್‍ಡೆಸಿವರ್ ಚುಚ್ಚುಮದ್ದು ಅಕ್ರಮ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಈಗಾಗಲೆ ಅಕ್ರಮ ಎಸಗಿದ 02 ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ರೆಮ್‍ಡೆಸಿವರ್ ಸೇರಿದಂತೆ ತುರ್ತು ಸಂದರ್ಭಕ್ಕೆ ಬಳಸುವ ಔಷಧಿಯನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ದಾಸ್ತಾನಿಗೆ ಆಗಮಿಸಿದ ವಿವರ, ನೀಡಲಾದ ರೋಗಿ ಹಾಗೂ ಔಷಧದ ಎಸ್‍ಎಫ್‍ಆರ್-ಐಡಿಯನ್ನು ನಮೂದಿಸಬೇಕು.
ಈ ಐಡಿ ಇಲ್ಲದೆ ಯಾರಿಗೂ ಔಷಧಿಯನ್ನು ಕೊಡುವಂತಿಲ್ಲ.

ಜಿಲ್ಲೆಯಲ್ಲಿ ಇದಕ್ಕಾಗಿ ಫ್ಲೈಯಿಂಗ್ ಸ್ಕ್ವಾಡ್ ತಂಡವನ್ನು ರಚಿಸಲಾಗಿದ್ದು, ಈ ಅಧಿಕಾರಿಗಳು, ವಿವಿಧೆಡೆ ಪರಿಶೀಲಿಸಿ ವರದಿ ಸಲ್ಲಿಸಬೇಕು. ರೆಮ್‍ಡೆಸಿವರ್ ಚುಚ್ಚುಮದ್ದನ್ನು ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿ, ಅಗತ್ಯವಿರುವ ರೋಗಿಗೆ ಮಾತ್ರ ನೀಡಬೇಕು.

ಕೋವಿಡ್ ಸೋಂಕಿತ ಎಲ್ಲ ರೋಗಿಗಳಿಗೂ ನೀಡಬಾರದು. ರೆಮ್‍ಡೆಸಿವರ್ ಔಷಧಿಯನ್ನು ಬೇಕಾಬಿಟ್ಟಿಯಾಗಿ ಶಿಫಾರಸು ಮಾಡುವವರ ವಿರುದ್ಧ ಕೆಪಿಎಂಇ ಕಾಯ್ದೆ ಅನ್ವಯ ವೈದ್ಯಕೀಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಏ. 27 ರಿಂದ ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ

ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಇದುವರೆಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನಸಂದಣಿ ತಡೆಯುವ ಉದ್ದೇಶ ಹಾಗೂ ಸ್ಥಳ ಅಭಾವದ ಕಾರಣದಿಂದ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆಯ ಬದಲಿಗೆ ಬೇರೆಡೆ ಲಸಿಕೆಯನ್ನು ನೀಡುವಂತೆ ತಜ್ಞ ವೈದ್ಯರ ಸಲಹಾ ಸಮಿತಿ ನೀಡಿದ ಶಿಫಾರಸಿನಂತೆ, ಏ. 27 ರಿಂದ ಜಿಲ್ಲಾ ಆಸ್ಪತ್ರೆ ಸಮೀಪದ ಮೋತಿ ವೀರಪ್ಪ ಕಾಲೇಜಿನಲ್ಲಿ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹೊರ ಜಿಲ್ಲೆಯ ರೋಗಿಗಳ ಬಗ್ಗೆ ನಿಗಾ ವಹಿಸಿ

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯದ ಕಾರಣದಿಂದ ದಾವಣಗೆರೆ ಜಿಲ್ಲೆಯ ಸರ್ಕಾರಿ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಬೇರೆ ಬೇರೆ ಜಿಲ್ಲೆಯವರು ಬಂದು, ನಮ್ಮ ಜಿಲ್ಲೆಯವರಿಗೆ ತೊಂದರೆಯಾಗಬಾರದು.

ನಮ್ಮವರಿಗೆ ಸಮರ್ಪಕ ವೈದ್ಯಕೀಯ ನೆರವು ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದ್ದು, ಬರುವ ದಿನಗಳಲ್ಲಿ ಉದ್ಭವವಾಗುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಡಿಹೆಚ್‍ಒ ಹಾಗೂ ಜಿಲ್ಲಾ ಸರ್ಜನ್ ಅವರು ಸಮರ್ಪಕವಾಗಿ ಪರಿಶೀಲಿಸಿ, ನಮ್ಮ ಜಿಲ್ಲೆಯವರಿಗೆ ತೊಂದರೆ ಆಗದ ರೀತಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಶೇ. 75 ಹಾಸಿಗೆಗಳು ಕೋವಿಡ್‍ಗೆ ಮೀಸಲು

ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ರ್ಯದಲ್ಲಿ ಶೇ. 75 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಡಿಹೆಚ್‍ಒ ಅವರು, ಎಲ್ಲ ಆಸ್ಪತ್ರೆಗಳು ಸರ್ಕಾರದ ಸೂಚನೆ ಹಾಗೂ ಕೋವಿಡ್‍ನ ಎಲ್ಲ ಪ್ರೋಟೊಕಾಲ್‍ಅನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಡಿಸಿ ಸೂಚನೆ ನೀಡಿದರು.

ಆಕ್ಸಿಜನ್ ಬಳಕೆ ಸಮರ್ಪಕವಾಗಿರಲಿ

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬಳಕೆ ಮಾಡಲಾಗುವ ಆಕ್ಸಿಜನ್ ಅನ್ನು ನ್ಯಾಯಯುತವಾಗಿ ಬಳಕೆ ಮಾಡಬೇಕು. ಅವಶ್ಯಕತೆ ಇಲ್ಲದವರಿಗೆಲ್ಲಾ ಆಕ್ಸಿಜನ್ ನೀಡಬಾರದು. ಆಕ್ಸಿಜನ್ ಪಡೆದು ಚೇತರಿಕೆ ಕಂಡುಬರುವ ರೋಗಿಗಳನ್ನು ಸಾಮಾನ್ಯ ವಾರ್ಡ್‍ಗೆ ಸ್ಥಳಾಂತರಿಸಿ, ಅಗತ್ಯತೆ ಇರುವ ರೋಗಿಗಳಿಗೆ ಆಕ್ಸಿಜನ್ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಜಯಪ್ರಕಾಶ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಡಿಹೆಚ್‍ಒ ಡಾ. ನಾಗರಾಜ್, ತಜ್ಞ ವೈದ್ಯರ ಸಮಿತಿ ಸದಸ್ಯರುಗಳಾದ ಡಾ. ರವಿ, ಡಾ. ಬಿ.ಎಸ್. ಪ್ರಸಾದ್, ಡಾ. ಶಿವಕುಮಾರ್, ಡಾ. ಅರುಣ್‍ಕುಮಾರ್ ಸೇರಿದಂತೆ ವಿವಿಧ ತಜ್ಞ ವೈದ್ಯರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending