ದಿನದ ಸುದ್ದಿ
ದಾವಣಗೆರೆ | ಇಎಸ್ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ : ಡಿಸಿ ಮಹಾಂತೇಶ್ ಬೀಳಗಿ ಪರಿಶೀಲನೆ
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್ ತೆರೆಯುವ ಬಗ್ಗೆ ಪರಿಶೀಲಿಸಿ ವೈದ್ಯರುಗಳೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚರ್ಚೆ ನಡೆಸಿದರು.
ಬುಧವಾರ ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಇಎಸ್ಐ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಮತ್ತು 40 ಐಸೊಲೇಶನ್ ಬೆಡ್ಗಳು ಸೇರಿದಂತೆ ಒಟ್ಟು 80 ಬೆಡ್ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಬೇಕಾದ ಅಗತ್ಯತೆಗಳ ಬಗ್ಗೆ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ಇಎಸ್ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಬಸವನಗೌಡ ಮಾತನಾಡಿ, ಆಸ್ಪತ್ರೆಯಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆಗೆ 19 ಪಾಯಿಂಟ್ಗಳು ಇದ್ದು, ಅದರಲ್ಲಿ 2 ಕಡೆ ಲೀಕೇಜ್ ಆಗುತ್ತಿದೆ. ಆಸ್ಪತ್ರೆಯಲ್ಲಿ ಒಬ್ಬ ಟೆಕ್ನೀಷಿಯನ್ ಇದ್ದು ಇನ್ನೊಬ್ಬರ ಅಗತ್ಯವಿದೆ. ಹಾಗೂ ಬೆಡ್, ಸಿಲಿಂಡರ್ ವ್ಯವಸ್ಥೆ, ಫ್ಯಾನ್ ಸೇರಿದಂತೆ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ ಕೊರತೆ ಇದ್ದು, ಸಾಧ್ಯವಾದಷ್ಟು ಜಿಲ್ಲಾಡಳಿತಕ್ಕೆ ಸಹಾಯ ಮಾಡಲು ತಾವು ಬದ್ಧರಿದ್ದೇವೆ ಎಂದರು.
ಅರಿವಳಿಕೆ ತಜ್ಞೆ ಡಾ.ನಂದಿನಿ ಮಾತನಾಡಿ, ಆಸ್ಪತ್ರೆಯಲ್ಲಿ ಐಸಿಯು ಇಲ್ಲವಾದ್ದರಿಂದ ಇಲ್ಲಿರುವ ಸಿಬ್ಬಂದಿಗಳಿಗೆÉ ಐಸಿಯು ನಿರ್ವಹಣೆ ಅನುಭವ ಇಲ್ಲ. ಅವರಿಗೆ ಒಂದು ವಾರದ ಮಟ್ಟಿಗೆ ತರಬೇತಿ ಕೊಟ್ಟಲ್ಲಿ ಅನುಕೂಲವಾಗುತ್ತದೆ. ಈಗಾಗಲೇ ಆಸ್ಪತ್ರೆಯಲ್ಲಿ 19 ಬೆಡ್ಗಳಿಗೆ ಆಕ್ಸಿಜನ್ ವ್ಯವಸ್ಥೆ ಇದೆ. 11 ಜಂಬೋ ಸಿಲಿಂಡರ್ಗಳು, 26 ಸಣ್ಣ ಸಿಲಿಂಡರ್ಗಳು ಹಾಗೂ 15 ಔಟ್ಲೆಟ್ಗಳು ಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ವಿಕಲಚೇತನರಿಗೆ ಸೂಚನೆ
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ವಹಿಸಲಾಗುವುದು. ಆಸ್ಪತ್ರೆಗೆ ಬೇಕಾದ 70 ಮಂಚಗಳನ್ನು ಹೊರಗಡೆಯಿಂದ ತರಿಸುತ್ತೇವೆ. ಹಾಗೂ ಕಾಟನ್ ಬೆಡ್, ಫ್ಯಾನ್, ಐವಿ ಡ್ರಿಪ್, ಆಕ್ಸಿಜನ್ ಸಿಲಿಂಡರ್, ಬಿಪಿ ಆಪರೇಟರ್ಸ್ಗಳನ್ನು ದಾನಿಗಳಿಂದ ಪೂರೈಸುತ್ತೇವೆ. ಅಲ್ಲದೇ ಆಸ್ಪತ್ರೆಗೆ ಬೇಕಾದ ಟ್ರಾಲಿಗಳು, ವ್ಹೀಲ್ಚೇರ್ಗಳು, ಐವಿ ಸ್ಟ್ಯಾಂಡ್ ಇತರೆ ಸವಲತ್ತುಗಳ ಕುರಿತು ಮಾಹಿತಿ ನೀಡಿದರೆ ಜಿಲ್ಲಾಡಳಿತದಿಂದ ಪೂರೈಸುತ್ತೇವೆ ಎಂದರು.
ಆಸ್ಪತ್ರೆಯಲ್ಲಿ ಈಗಾಗಲೇ ಹೊರರೋಗಿಗಳ ಚಿಕಿತ್ಸೆ ನಡೆಯುತ್ತಿದ್ದು ಈ ವ್ಯವಸ್ಥೆಗೆ ಧಕ್ಕೆ ಆಗದಂತೆ ಕೋವಿಡ್ ಸೆಂಟರ್ನ್ನು ತೆರೆಯಬೇಕು. ಸಾಮಾನ್ಯ ರೋಗಿಗಳು ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಪ್ರತ್ಯೇಕ ದ್ವಾರಗಳನ್ನು ಮಾಡಬೇಕು ಹಾಗೂ ಸಂಬಂಧಪಟ್ಟ ವೈದ್ಯರು, ಸಿಬ್ಬಂದಿಗಳು ಸಹ ಆಯಾ ದ್ವಾರಗಳ ಮೂಲಕವೇ ಹೋಗಿಬರಬೇಕು. ಹಾಗೂ ಸೋಂಕಿತರಿಗೆ ಬಿಸಿನೀರು ವ್ಯವಸ್ಥೆ ಮಾಡಲು ಮತ್ತು ಆಸ್ಪತ್ರೆಗೆ ಬಂದ ರೋಗಿಗಳು ಬಿಸಿ ನೀರು ಕುಡಿಯಲು 2 ಯೂನಿಟ್ಗೆ ಒಂದರಂತೆ ಸ್ಟೌವ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಿಜಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಂಜಯ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ವ್ಯವಸ್ಥೆ ಇಲ್ಲ. ಎಕ್ಸ್ರೇ ಯೂನಿಟ್ ಇದೆ ಆದರೆ ಫಿಲ್ಮ್ಗಳು ಇಲ್ಲ. ಆದ್ದರಿಂದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರನ್ನು ಮೊದಲ ಹಂತದ ಚಿಕಿತ್ಸೆ ಪೂರೈಸಿದ ಬಳಿಕ ಚೇತರಿಸಿಕೊಂಡ ರೋಗಿಗಳನ್ನು ಈ ಆಸ್ಪತ್ರೆಗೆ ವರ್ಗಾವಣೆ ಮಾಡಬಹುದು ಎಂದರು.
ನಂತರ ಜಿಲ್ಲಾಧಿಕಾರಿಗಳು ಮಾತನಾಡಿ, ಕೋವಿಡ್ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಡಿ ಗ್ರೂಪ್ ನೌಕರ ವರ್ಗದವರು ಸೇರಿ ಒಟ್ಟು 3 ತಂಡಗಳನ್ನು ರಚಿಸಿಕೊಳ್ಳಬೇಕು. ಪ್ರತಿ ತಂಡಕ್ಕೂ 3 ವೈದ್ಯರು, 3 ಸ್ಟಾಫ್ ನರ್ಸ್, 3 ಡಿ-ಗ್ರೂಪ್ ಸೇರಿದಂತೆ 9 ಜನರ ತಂಡ ರಚಿಸಬೇಕೆಂದು ಸೂಚನೆ ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಹಾಗೂ ವೆಂಟಿಲೇಟರ್ ಸಾಮಥ್ರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಪ್ರತಿ ಆಸ್ಪತ್ರೆಗೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದ್ದು, ಆಸ್ಪತ್ರೆಯ ಪ್ರತಿ ವಿಭಾಗದ ವರದಿಯನ್ನು ನೋಡಿಕೊಳ್ಳುವ ಮೂಲಕ ಪ್ರತಿನಿತ್ಯ ವರದಿ ನೀಡುತ್ತಿದ್ದಾರೆ. ಅನಗತ್ಯವಾಗಿ ಆಕ್ಸಿಜನ್ ಬಳಕೆ ಮಾಡಬಾರದು. ಅದನ್ನು ಔಷಧಿಯಂತೆ ಸಮರ್ಪಕವಾಗಿ ಬಳಸಬೇಕು ಎಂದು ತಿಳಿಸಿದರು.
ತಾಲ್ಲೂಕು ಆಸ್ಪತ್ರೆಗಳಲ್ಲಿರುವ ವೈದ್ಯರು ಅನಗತ್ಯವಾಗಿ ಅಲ್ಲಿರುವ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ. ಸ್ಥಳೀಯವಾಗಿ ಗುಣಮುಖರಾಗುವ ರೋಗಿಗಳನ್ನು ಆದಷ್ಟು ಅಲ್ಲಿಯೇ ಚಿಕಿತ್ಸೆ ನೀಡಬೇಕೇ ಹೊರತು ನಗರದ ಆಸ್ಪತ್ರೆಗಳಿಗೆ ಕಳುಹಿಸಬಾರದು ಎಂದು ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ನಾಯಕ್, ಆರ್.ಎಂ.ಒ ಡಾ.ಸಂಧ್ಯಾರಾಣಿ, ಹಿರಿಯ ತಜ್ಞ ಡಾ.ಅಣ್ಣಪ್ಪಸ್ವಾಮಿ, ಉಪ ವೈದ್ಯಕೀಯ ಅಧೀಕ್ಷಕ ಡಾ.ಚಿದಾನಂದ್, ಡಾ.ನಂದಿನಿ, ಡಾ.ಚಂದನ, ಡಾ.ಪ್ರಸನ್ನ, ಡಾ.ಅನಿತರಾಣಿ ಸೇರಿದಂತೆ ಹಿರಿಯ ತಜ್ಞರು ಉಪಸ್ಥಿತರಿದ್ದರು.
ಎಸ್.ಎಸ್.ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ :
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇಎಸ್ಐ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಅನಿರೀಕ್ಷಿತÀವಾಗಿ ಎಸ್.ಎಸ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಯ ಎಂಐಸಿಯು, ಐಸೋಲೇಷನ್ ಹಾಗೂ ಐಸಿಯು ವಾರ್ಡ್ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುರಿತು ವೈದ್ಯರ ಬಳಿ ಮಾಹಿತಿ ಪಡೆದುಕೊಂಡರು.
ಎಸ್.ಎಸ್.ಆಸ್ಪತ್ರೆಯು ಕೋವಿಡ್ ಸೋಂಕಿತ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು ಹೆಚ್ಚು ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಗುಣಮುಖರಾದ ರೋಗಿಗಳನ್ನು ಆದಷ್ಟು ಬೇಗ ಬಿಡುಗೊಡೆಗೊಳಿಸಿ ಅಗತ್ಯವಿರುವ ಅಥವಾ ತುರ್ತು ಇರುವ ರೋಗಿಗಳಿಗೆ ಐಸಿಯು ಬೆಡ್ಗಳನ್ನು ನೀಡಬೇಕು. ಇಂದು ಐಸಿಎಂಆರ್ ಪೋರ್ಟಲ್ನಲ್ಲಿ 700 ಕ್ಕೂ ಹೆಚ್ಚು ಸೋಂಕಿತರು ಬರುವ ನಿರೀಕ್ಷೆ ಇದೆ. ಹಾಗಾಗಿ ಬೆಡ್ ವಿಸ್ತರಣೆ ಅನಿವಾರ್ಯವಾಗಿದ್ದು, ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಎಲ್ಲಾ ಸವಲತ್ತುಗಳ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸಲಾಗುತ್ತಿದ್ದು, ಇದರಿಂದ ಅನಗತ್ಯವಾಗಿ ಬಳಕೆಯಾಗುವ ಆಕ್ಸಿಜನ್ ಉಳಿಸಿ ಅಗತ್ಯವಿರುವವರಿಗೆ ಆಕ್ಸಿಜನ್ ನೀಡಬಹುದು. ಇದರಿಂದ ಎಸ್.ಎಸ್.ಆಸ್ಪತ್ರೆಯವರು ಕೂಡ ಪ್ರತಿನಿತ್ಯ ಆಕ್ಸಿಜನ್ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.
ಆಸ್ಪತ್ರೆಯ ಕೊಠಡಿಗಳು ಹಾಗೂ ಹೊರ ಆವರಣ ಸ್ವಚ್ಛತೆಯಿಂದ ಕೂಡಿದ್ದು ಎಲ್ಲಾ ವಾರ್ಡ್ಗಳನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು. ಹಾಗೂ ಜಿಲ್ಲಾಸ್ಪತ್ರೆಯಿಂದ ರೆಫೆರ್ ಮಾಡಿದ ಕೋವಿಡ್ ಸೋಂಕಿತ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಎಸ್.ಎಸ್.ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ.ಕಾಳಪ್ಪನವರ್ ಸೇರಿದಂತೆ ಮತ್ತಿತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

