ದಿನದ ಸುದ್ದಿ
ಕಲ್ಪವೃಕ್ಷವೆಂದರೆ..!?
- ಕೆ.ಶ್ರೀಧರ್ (ಕೆ.ಸಿರಿ), ಯುವ ಸಾಹಿತಿಗಳು, ಚಾಮರಾಜನಗರ
ಕಲ್ಪವೃಕ್ಷವೆಂದರೆ ಬೇಡಿದ್ದನ್ನು ನೀಡುವ ಸ್ವರ್ಗ ಲೋಕದ ಮರ ಹೌದು ತೆಂಗಿನಮರವು ಕೂಡ ಮನುಷ್ಯನ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಉಪಯುಕ್ತವಾಗುವ ಮರ. ತೆಂಗಿನ ಮರದ ಜೀವ ಮತ್ತು ಜೀವನವೇ ಹಾಗೆ ಅದರ ಯಾವುದೇ ಒಂದೇ ಒಂದು ಭಾಗವು ಕೂಡ ಅನುಪಯುಕ್ತವಾದುದಲ್ಲ ಇಡೀ ಮರವೇ ಒಂದಲ್ಲ ಒಂದು ತರದಲ್ಲಿ ಮಾನವನ ಜೀವನಕ್ಕೆ ಬದುಕ ಸಾಗಿಸಲು ಸಹಾಯಕವಾಗುತ್ತದೆ.
ತೆಂಗಿನ ಮರ ಯಾವುದೇ ರೆಂಬೆ ಕೊಂಬೆಗಳನ್ನು ಹೊಂದಿರುವುದಿಲ್ಲ ಒಂದೇ ಕಾಂಡವು ಸುಮಾರು 20 ರಿಂದ 30 ಅಡಿಯವರೆಗೂ ಬೆಳೆದು ಗರಿ ಗರಿಯಾದ ಹಸಿರು ತೆಂಗಿನ ಗರಿಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ತೆಂಗಿನ ಮರದ ಸಿಂಗಾರದಲ್ಲಿ ಅಂದರೆ ಹೊಂಬಾಳೆಯಲ್ಲಿ ಗಂಡು ಹೂವು ಹಾಗೂ ಹೆಣ್ಣು ಹೂವುಗಳು ಇರುತ್ತವೆ ಹೆಣ್ಣು ಹೂವುಗಳು ಅರಳಿದ ನಂತರವೇ ಸಿಂಗಾರದಲ್ಲಿ ಫಲ ಇಡಲು ಆರಂಭವಾಗುತ್ತದೆ.
ಸುಮಾರು 70 ರಿಂದ 80 ವರ್ಷಗಳ ಕಾಲ ಜೀವಿಸುವ ತೆಂಗಿನ ಮರದಲ್ಲಿ ತಿಂಗಳಿಗೊಂದು ಹೊಸ ಗರಿಯನ್ನು ಬಿಡುತ್ತದೆ. ಈ ಗರಿಯ ಜೀವನ ಕಾಲ 30 ತಿಂಗಳು ಮಾತ್ರ ಆಮೇಲೆ ಮರದಿಂದ ಉದುರಿ ಬೀಳುತ್ತದೆ. ಒಂದು ಮರದಲ್ಲಿ 30 ತನಕ ಹೂವಿನ ಜೊಂಪೆ ಇರುತ್ತದೆ.ತಿಂಗಳಿಗೊಂದು ಹೂ ಗೊಂಚಲು ಬಿಡುತ್ತದೆ.ಒಂದು ಮರದಿಂದ ಒಂದು ಸಂವತ್ಸರ ಕಾಲದಲ್ಲಿ 30 ರಿಂದ 60 ಕಾಯಿಗಳು ಉತ್ಪತ್ತಿಯಾಗುತ್ತವೆ.
ಹೆಣ್ಣು ಹೂವು ಹುಟ್ಟಿದ ಮೇಲೆ ಕಾಯಿ ಆಗುವುದಕ್ಕೆ ಒಂದು ಸಂವತ್ಸರ ಕಾಲಬೇಕು. ಬಹುತೇಕವಾಗಿ ಕರ್ನಾಟಕ,ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಗೋವಾ ರಾಜ್ಯಗಳ ಕರಾವಳಿ ಪ್ರಾಂತ್ಯಗಳಲ್ಲಿ ಹೆಚ್ಚಾಗಿ ಸಾಗುವಳಿ ಮಾಡುತ್ತಾರೆ ತೆಂಗಿನ ಮರದ ಫಲಗಳಿಗಿಂತ ಆ ಮರದ ಗರಿಗಳು ಬಡತನದಲ್ಲಿರುವವರಿಗೆ ಸೂರು ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ದುಡಿದು ತಿನ್ನುವ ವರ್ಗದವರು ಇಟ್ಟಿಗೆ, ಸಿಮೆಂಟು,ಕಬ್ಬಿಣ ಮತ್ತು ಗಾರೆ ಕೆಲಸದವರಿಗೆ ದುಡ್ಡು ಕೊಟ್ಟು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಇಂತಹ ಸಂದರ್ಭದಲ್ಲಿ ಈ ವರ್ಗದವರು ತೆಂಗಿನ ಗರಿಗಳ ಕೊಂಡು ತೆಂಗಿನ ಗರಿಯ ಗುಡಿಸಲನ್ನು ಕಟ್ಟಿಕೊಂಡು ಜೀವನ ಸಾಗಿಸುವುದನ್ನು ನಾವು ಇಂದಿಗೂ ನೋಡುತ್ತೇವೆ ಈ ಸಂಗತಿ ನೋಡಿದೆ ನಿಜಕ್ಕೂ ತೆಂಗಿನ ಮರ ಕಲ್ಪತರುವೇ ಸರಿ ಇನ್ನು ಉಳ್ಳವರು ತೆಂಗಿನ ಮರವನ್ನು ಕಡಿಸಿ ತೆಂಗಿನ ತೀರು/ಅಡ್ಡತೊಲೆಯಾಗಿ ಬಳಸಿ ಸುಂದರ ಗೃಹ ನಿರ್ಮಾಣ ಮಾಡಿಕೊಳ್ಳುವಲ್ಲಿ ತೆಂಗಿನ ಮರದ ಪಾತ್ರ ನಿಜಕ್ಕೂ ಶ್ರೇಷ್ಠ.
ತ್ರಿನೇತ್ರಫಲ ಬರೀ ಗೃಹ ನಿರ್ಮಾಣ ಮಾಡಿಕೊಳ್ಳುವಲ್ಲಿ ಅಷ್ಟೇ ಉಪಯುಕ್ತ ಅಲ್ಲ ಸಾಂಸ್ಕೃತಿಕ ಒಡೆತನದ ರಾಯಭಾರಿಯೂ ಹೌದು ಬಾಲ್ಯದಲ್ಲಿ ಮಕ್ಕಳ ಆಟಿಕೆಗೆ ಉಪಯುಕ್ತವಾಗುವ ದುಡ್ಡೇ ನೀಡದೆ ಮನರಂಜನೆ ನೀಡುವ ಸಾಧನವೂ ಹೌದು. ತೆಂಗಿನ ಕಾಯಿ ಮನುಷ್ಯ ಜೀವನದ ಹುಟ್ಟಿನಿಂದ ಮರಣದವರೆಗೂ ಸಹ ಪ್ರಮುಖ ಪಾತ್ರ ವಹಿಸುತ್ತವೆ.
ಯಾವುದೇ ಒಂದು ಪೂಜೆ ಪುನಸ್ಕಾರಗಳು ಯಶಸ್ವಿಯಾಗಬೇಕಾದರೆ ತೆಂಗಿನ ಕಾಯಿ ಇರಲೇಬೇಕು ಮದುವೆಯ ಹಂದರಗಾಯಿಯಾಗಿಯೂ ಮರಣದ ಈಡು ಗಾಯಿಯೂ ಆಗಿಯೂ ತೆಂಗಿನ ಕಾಯಿ ಅತ್ಯವಶ್ಯಕ. ಇನ್ನೂ ಒಣಗಿದ ತೆಂಗಿನ ಕಾಯಿಂದ ಪರಿಶುದ್ಧ ಕೊಬ್ಬರಿ ಎಣ್ಣೆ ದೊರೆತರೆ ಹಸಿ ತೆಂಗಿನ ಕಾಯಿಯಿಂದ ದೋಸೆಗೆ ಚಟ್ನಿ ಹಾಗೂ ಕೊಬ್ಬರಿ ಹೋಳಿಗೆಯಲ್ಲಿಯೂ ಸಹ ತೆಂಗಿನ ಕಾಯಿ ಬಳಕೆಯಾಗುತ್ತದೆ.
ಒಣ ಕೊಬ್ಬರಿಯು ಪೌಷ್ಟಿಕ ಆಹಾರವಾಗಿ ಉಪಯುಕ್ತವಾಗುವುದರ ಜೊತೆಗೆ ಹೆಣ್ಣಿಗೆ ಉಡಿಹಕ್ಕಿ ಹಾಕುವ ಪದ್ದತಿಯಲ್ಲಿ ಒಣಕೊಬ್ಬರಿ ಪ್ರಮುಖ ಪಾತ್ರ ವಹಿಸುತ್ತದೆ. ಬರೀ ತೆಂಗಿನ ಕಾಯಿಯಷ್ಟೇ ಅಲ್ಲ ತೆಂಗಿನ ಚಿಪ್ಪುನ್ನು ಕೂಡ ಗೃಹ ಪೀಠೋಪಕರಣಗಳಾಗಿಯೂ ಬಳಸಬಹುದು ಅಲ್ಲದೆಯೂ ತೆಂಗಿನ ಕಾಯಿ ಚಿಪ್ಪಿನ್ನು ಚೆನ್ನಾಗಿ ಬೇಯಿಸಿ ಮದರಂಗಿಯಾಗಿಯೂ ಬಳಸಬಹುದು.
ತೆಂಗಿನ ನಾರು ಸುಲಿದು ದಿನ ನಿತ್ಯ ಬಳಕೆಯ ಹಗ್ಗವಾಗಿಯೂ ಮನೆಯಲ್ಲಿ ಕಾಲ್ವಸ್ತ್ರವಾಗಿಯೂ ಬಳಸಬಹುದು ಉಳಿದಂತೆ ತೆಂಗಿನ ಸಿಪ್ಪೆಯನ್ನು ಅಡುಗೆ ಬೇಯಿಸಲು ಕಟ್ಪಿಗೆಯಾಗಿಯೂ ಉಪಯೋಗವಾಗುತ್ತದೆ. ತೆಂಗಿನ ಗರಿಗಳಿಂದ ಚಿಕ್ಕ ವಯಸ್ಸಿನಲ್ಲಿ ಊದಲು ಪೀಪಿ ಹಾಗು ಕನ್ನಡಕ,ಜಡೆ ಹೆಣೆಯುವುದು ಹಾಗೂ ತೆಂಗಿನ ಗರಿಯ ಕಡ್ಡಿಗಳಿಂದ ಕಸ ಗುಡಿಸಲು ಪೊರಕೆ ಮಾಡಿಕೊಳ್ಳುವುದು ತೆಂಗಿನ ಗರಿಗಳನ್ನು ಒಂದು ತೊಟ್ಟಿಯಲ್ಲಿ ಹಾಕಿ ನೀರು ಬಿಟ್ಟರೆ ಕೊಳೆತು ಚೆನ್ನಾಗಿ ಕೊಬ್ಬರವಾಗುತ್ತದೆ.
ಇದನ್ನೂ ಓದಿ | ಕರ್ನಾಟಕ | ಶುಕ್ರವಾರ 592 ಮಂದಿ ಕೊರೋನಾದಿಂದ ಸಾವು, 50ಸಾವಿರ ಹೊಸ ಪ್ರಕರಣಗಳು ದಾಖಲು
ಹೊಂಬಾಳೆಯಿಂದಲೂ ಕೆಲವರು ಅಂಗಳದ ಕಸ ಗುಡಿಸುತ್ತಾರೆ. ಇನ್ನೂ ವಿಶೇಷವೆಂದರೆ ತೆಂಗಿನ ಮರಗಳಲ್ಲಿಯೇ ಹೆಜ್ಜೇನುಗಳು ಆಶ್ರಯ ತಾಣಗಳಾಗಿ ಬಳಸುವುದು ಹೆಚ್ಚು ಗಿಣಿಗಳಂತೂ ತೆಂಗಿನ ಮರದಲ್ಲೊಂದು ಪೊಟರೆ ಕೊರೆದು ತಮ್ಮ ಗೂಡಾಡಗಿಸಿಕೊಂಡು ಸಂತಾನೋತ್ಪತ್ತಿ ಕಾರ್ಯ ಮಾಡುತ್ತವೆ. ಕೋತಿಗಳಂತೂ ಮರದಿಂದ ಮರಕ್ಕೆ ಹಾರುತ್ತಾ ತೆಂಗಿನ ತೋಟದಲ್ಲಿಯೇ ದಿನವೆಲ್ಲಾ ಕಳೆಯುತ್ತವೆ.
ನಿಮಗೆ ಅನಿಸಬಹುದು ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಇವನ್ಯಾಕೆ ಹೇಳುತ್ತಿದ್ದಾನೆಂದು, ಮೊನ್ನೆ ಮೊನ್ನೆಯಷ್ಟೇ ಚಾಮರಾಜನಗರದ ಕೋರ್ಟ್ ರೋಡಿನಿಂದ ಹೋಗುತ್ತಿರಬೇಕಾದರೆ ಮದ್ಯಾಹ್ನದ ಉರಿಬಿಸಿಲು ಹೊಟ್ಟೆಯಲ್ಲಿ ಒಂಚೂರು ಸಂಕಟವಾದ ಹಾಗೆ ಎನಿಸಿತು. ಸುಮ್ಮನೆ ಬೈಕಿನಲ್ಲಿ ಹೋಗುವಾಗ ಡಿವೈಎಸ್ಪಿ ಆಫೀಸಿನ ಪಕ್ಕದಲ್ಲಿಯೇ ಒಬ್ಬ ಎಳನೀರು ವ್ಯಾಪರಿಯೂ ಎಳನೀರು ಮಾರುತ್ತಿರುವುದನ್ನು ಕಂಡು ಒಂದೆಳ್ನೀರು ಕುಡಿಯುವ ಮನಸ್ಸಾಯಿತು.
ಹಾಗೆಯೇ ಬೈಕ್ ತಿರುಗಿಸಿಕೊಂಡು ಎಳ್ನೀರು ಕುಡಿಯಲು ಹೊರಟೆ ಸ್ವಲ್ಪ ವಯಸ್ಸಾದ ಮುದುಕಪ್ಪ ಒಂದು ಕೈಯಲ್ಲಿ ಎಳ್ನೀರು ಇನ್ನೊಂದು ಕೈಯಲ್ಲಿ ಹರಿತವಾದ ಮಚ್ಚನ್ನು ಹಿಡಿದು ಕೊಚ್ಚುತ್ತಿದ್ದರು ಒಂದಿಬ್ಬರು ಸ್ನೇಹಿತರು ಐದು ಎಳನೀರನ್ನು ಪಾರ್ಸೆಲ್ ಕೊಡುವಂತೆ ಹೇಳಿ ಈ ರೀತಿಯಾಗಿ ಮಾತಿಗಿಳಿದರು.
“ತಾತಪ್ಪ್ಯೋ ಐದೆಳ್ನೀರು ಕೊಡಿ”
“ಇಲ್ಲೆ ಕುಡ್ದರೋ ಮನಗ ಪಾರ್ಸೆಲ್ ಹೊಯ್ದರೋ?”
“ಎಲ್ಲಾ ಮನ್ಗೆಯಾ ಪಾರ್ಸೆಲ್ ಕಟ್ಟಿ”
“ಹೂಂ ಆಯ್ತೇಳಿ ” ಎಂದು ಒಂದು ತೆಂಗಿನ ಕಾಯಿ ಕೊಚ್ಚಲು ಮುಂದಾದರು.
“ತಾತ ಕೈ ಜೋಪಾನ ನಮ್ಗ ನೀವು ಕೊಚ್ಚದ್ ನೋಡಿದ್ರೆನೇ ಭಯವಾಯ್ತ್ ಆಮೇಗ ಕೈ ಗಿಯ್ಗೆ ಹಾಕಂಡರೀ” “ಯಾನು ಇಲ್ಲಾ ಕಣಾ ಐದಾ ಸಾಕ ಹ್ವೇಳಿ”?.”ಹೂಂ ಸಾಕು ಕೆಂಚಕಿರೋ ಕಾಯಿ ಕೊಚ್ಚರೀ”. “ಇದ್ಯಾಕ ಬೇರೆ ಯಾನಾಗಿದ್ದಾವು ಕಣೀ”! “ಕೆಂಚಗಿರೋವು ವಸಿ ಸಿಹಿ ಇರ್ತಾವೆ ಕಣ್ ತಾತ”,”ಸಿಹ್ಯೋ ಕಹ್ಯೋ (ಸಿಹಿಯೋ- ಕಹಿಯೋ) ಯಾವನಾರ ಒಳ್ಗ ನುಗ್ಗಿ ನೋಡಿದರಾ ಕಣೀ”? “ವ್ಹಾ…. ಇದ್ಸರಿ ಮತ್ತೆ ಕೆಂಚಗಿರೋವೆ ಕೆಚ್ಚಿ ”
ಎಂದು ತಾವೆ ಇನ್ನೆರಡು ತೆಂಗಿನ ಕಾಯಿಗಳನ್ನು ಆಯ್ಕೆ ಮಾಡಿಕೊಂಡು ಪಾರ್ಸೆಲ್ ಕೊಂಡು ಹೊರಟರು ನಾನು ಕೂಡ ಎರಡು ಎಳನೀರು ಕುಡಿದು ಸ್ವಲ್ಪ ಹೊತ್ತು ಅಲ್ಲಿಯೇ ನಿಂತು ನೆಮ್ಮದಿಯ ಉಸಿರು ಬಿಟ್ಟು ಹೊರಟೆ ಮನಸ್ಸು ಸ್ವಲ್ಪ ತಂಪಾಯಿತು.
ಹಾಗೆಯೇ ಬೈಕಿನಲ್ಲಿ ಹೋಗುತ್ತಿರುವಾಗ ಆ ತಾತ ಹೇಳಿದ ಮಾತು ನೆನಪಾಯಿತು.”ಸಿಹ್ಯೋ ಕಹ್ಯೋ (ಸಿಹಿಯೋ- ಕಹಿಯೋ) ಯಾವನಾರ ಒಳ್ಗ ನುಗ್ಗಿ ನೋಡಿದರಾ ಕಣೀ”? ಹೌದು ಈ ಮಾತು ಎಷ್ಟು ಸತ್ಯ ಅಲ್ಲವೇ ಎಳ್ನೀರು ಕೃತಕವಾಗಿ ತಯಾರಾಗುವಂತದ್ದಲ್ಲ ಮರದ ಮೇಲೆ ನೈಸರ್ಗಿಕವಾಗಿ ತಯಾರಾಗುವಂತದ್ದು ಅದರೊಳಗೆ ಸಿಹಿ ಕಹಿ ಎನ್ನುವುದು ಇರುವುದಿಲ್ಲ ಎಲ್ಲದು ಒಳ್ಳೆಯ ನೀರೆ.
ಆದರೆ ನಾವೇ ಅವುಗಳನ್ನು ಸಿಹಿ ಕಹಿ ಎಂದು ವಿಂಗಡಿಸಿಕೊಳ್ಳುತ್ತೇವೆ. ಇನ್ನೊಂದು ವಿಶೇಷವೆಂದರೆ ಎಳ್ನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ನೂರಾರು ತಂಪು ಪಾನೀಯ ಕೊಕೊ ಕೋಲಾ,ಮಜಾ ,ಪೆಪ್ಸಿಗಳಿಗಿಂತ ಒಂದು ಎಳ್ನೀರು ಶ್ರೇಷ್ಠ. ಆಧುನಿಕತೆಯ ಫಲವಾಗಿ ನಾವು ನಿಸರ್ಗದತ್ತವಾಗಿ ತಯಾರಾದ ಎಳ್ನೀರಿನ ಬದಲಾಗಿ ಕೃತಕವಾಗಿ ರಾಸಾಯನಿಕ ವಸ್ತುಗಳಿಂದ ತಯಾರಾಗುವ ಪಾನೀಯಗಳಿಗೆ ಮೊರೆ ಹೋಗುವುದೇ ವಿಷಾದನೀಯ ಸಂಗತಿ.
ಇದನ್ನೂ ಓದಿ | ನಿಮ್ಮ ಮಗುವಿಗೆ ಅನುವಂಶಿಕ ದೋಷಗಳಿವೆಯೇ..,? ತಿಳಿಯುವುದು ಹೇಗೆ..?
ಹೀಗೆ ಈ ಎಳ್ನೀರು ನನ್ನ ಕಾಡಿತು ಆ ತಾತಪ್ಪನ ಅನುಭವದ ಮಾತು ಪ್ರಕೃತಿಯ ಮಹತ್ವ ಮತ್ತು ವಾಸ್ತವತೆಯನ್ನು ತಿಳಿಸಿತು. ಈ ತೆಂಗಿನ ಮರದ ಕುರಿತಾಗಿ ವರಕವಿ ದ.ರಾ ಬೇಂದ್ರೆಯವರು ತಮ್ಮ ಸಖಿಗೀತದಲ್ಲಿ ತೆಂಗಿನ ಮರದ ಕುರಿತಾಗಿ ಈ ರೀತಿಯಾಗಿ ಉಲ್ಲೇಖಿಸಿದ್ದಾರೆ ‘ಇಕೋ ನೆಲ – ಅಕೋ ಜಲ, ಅದರ ಮೇಲೆ ಮರದ ಫಲ’.
(ಕೆ.ಶ್ರೀಧರ್ (ಕೆ.ಸಿರಿ)
ಯುವ ಸಾಹಿತಿಗಳು
ಚಾಮರಾಜನಗರ
9741270125)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ದಿನದ ಸುದ್ದಿ
ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.
ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.
ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.
ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.
ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.
ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.
~ವರದಿ: ಪವನ್ ಕಲ್ಯಾಣ್ ಡಿ.ಜಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

