Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ; ಮೇ. 21 ರಿಂದ 24 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ : ಸಚಿವ ಭೈರತಿ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಬಂಧನೆಗಳನ್ನು ಒಳಪಡಿಸಿ, ಮೇ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಮೇ. 24 ರಂದು ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ.

ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಸಲುವಾಗಿ ಸಂಪೂರ್ಣ ಲಾಕ್‍ಡೌನ್‍ಗೆ ಸಾರ್ವಜನಿಕರು ಸಹಕರಿಸುವಂತೆ ಕೈಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದರು.

ಜಿಲ್ಲೆಯಲ್ಲಿ ಮೇ. 21 ರಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸುವ ಕುರಿತಂತೆ ವಿವರಗಳನ್ನು ನೀಡಲು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆಸಿದ ಪ್ರಗತಿ ಪರಿಶೀಲಾ ಸಭೆಯಲ್ಲಿ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ಪರಿಗಣಿಸಿ ಪುನರಾವಲೋಕನ ಮಾಡಲಾಗಿತ್ತು. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರ್ರಾಮಿಕ ರೋಗ ತಡೆಗಟ್ಟಲು ಹೆಚ್ಚುವರಿಯಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ಮೇ. 12 ರಿಂದ 24 ರವರೆಗೆ ಕಠಿಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿತ್ತು. ಆದರೆ ಪ್ರಕರಣಗಳ ಸಂಖ್ಯೆ ಏರುತ್ತಲೆ ಇದೆ. ಹೀಗಾಗಿ ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಇನ್ನಷ್ಟು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾದ ಕಾರಣ ಮೂರು ದಿನ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಮೇ. 24 ರ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಲು ಮೂರು ದಿನಗಳ ಕಾಲ ಜಾರಿಗೊಳಿಸಿರುವ ಸಂಪೂರ್ಣ ಲಾಕ್‍ಡೌನ್‍ಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದರು.

ಸಂಪೂರ್ಣ ಲಾಕ್‍ಡೌನ್ ನಿಬಂಧನೆಗಳು

ಜಿಲ್ಲೆಯಾದ್ಯಂತ ಮೇ. 21 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸುವುದನ್ನು ನಿರ್ಬಂಧಿಸಿ, ನಡೆದುಕೊಂಡು ಹೊಗಲು ಮಾತ್ರ ಅವಕಾಶ ನೀಡಲಾಗಿದೆ.

ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಮದುವೆ ಸಮಾರಂಭಕ್ಕೆ ಈಗಾಗಲೇ ನೀಡಲಾಗಿರುವ ಅನುಮತಿ ಪ್ರಕರಣಗಳಲ್ಲಿ ಕೇವಲ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ಮೇ. 24 ರ ಬೆಳಿಗ್ಗೆ 6.00 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೆ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂದಿಗಳಿಗೆ ತೋರಿಸಬೇಕು.

ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ಆದೇಶ ಸಂಖ್ಯೆ ಆರ್‍ಡಿ/158/ಟಿಎನ್‍ಆರ್/2020 ದಿ.07.05.2021ರಂತೆ ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಸರ್ಕಾರದ ಆದೇಶದ ಪ್ರಕಾರ ಸರ್ಕಾರೇತರ ಸಂಸ್ಥೆಗಳ ಕಛೇರಿಗಳು, ಇತರೆ ಎಲ್ಲಾ ಕಛೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಕಛೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.

ಹಾಲು, ಡೈರಿ ಹಾಗೂ ಹಾಲಿನ ಬೂತುಗಳು ಮತ್ತು ಮೊಟ್ಟೆ ಅಂಗಡಿಗಳು ಮಾತ್ರ ಪ್ರತಿದಿನ ಬೆಳಿಗ್ಗೆ 6.00 ಗಂಟೆಯಿಂದ ಬೆ.10.00 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ. ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಆಮ್ಲಜನಕ ಉತ್ಪಾದನಾ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅಧಿಕೃತ ಪ್ರಯಾಣ ದಸ್ತಾವೇಜುಗಳು/ಟಿಕೆಟ್‍ಗಳನ್ನು ತೋರಿಸಿದರೆ ಮಾತ್ರ ಸಂಚರಿಸಲು ಅನುಮತಿಸಿದೆ. ಪಡಿತರ ನ್ಯಾಯಬೆಲೆ ಅಂಗಡಿಗಳು ತೆರೆಯಲು ಕೊಪನ್ ವ್ಯವಸ್ಥೆಯಿಂದ ಜನ ಗುಂಪು ಸೇರದಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಷರತ್ತಿಗೊಳಪಟ್ಟು ಅನುಮತಿಸಲಾಗಿದೆ.

ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿಸಲಾಗಿದೆ. ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಅನುಮತಿಸಲಾಗಿದೆ. ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ, ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿ ಇದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಸರ್ಕಾರದ ಆದೇಶದಂತೆ ಅನುಮತಿ ಇದೆ. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಅನುಮತಿ ಕಲ್ಪಿಸಲಾಗಿದೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಹಾಗೂ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮತ್ತು ಬಾರ್‍ಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿರುತ್ತದೆ.

ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿದೆ. ಇ-ಕಾಮರ್ಸ್/ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ನಿಗದಿಪಡಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ವಿಭಾಗ 51 ರಿಂದ 60ರ ಅನ್ವಯ ಮತ್ತು ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ, 2005ರ ವಿಭಾಗ 4, 5 ಮತ್ತು 10ರಂತೆ ಕ್ರಮ ಜರುಗಿಸಲಾಗುವುದು ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕರುಗಳಾದ ಪ್ರೊ. ಲಿಂಗಣ್ಣ, ಎಸ್.ಎ. ರವೀಂದ್ರನಾಥ್, ಮಹಾನಗರಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending