ದಿನದ ಸುದ್ದಿ
ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್ ದಾಖಲು ಕಡ್ಡಾಯ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ಗಳನ್ನಾಗಿ ಪರಿವರ್ತಿಸಬೇಕು.
ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು. ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ, ಊಟೋಪಹಾರ ಗುಣಮಟ್ಟದ್ದಾಗಿರಬೇಕು.
ಇದನ್ನೂ ಓದಿ | ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ.ಕೆ.ಸುಧಾಕರ್
ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿಗದಿತ ಬೆಡ್ಗಳನ್ನು ಕೊಡಲೇಬೇಕು
ರಾಜ್ಯದಲ್ಲಿ ಸದ್ಯ ಕೋವಿಡ್ ತುರ್ತು ಸ್ಥಿತಿ ಇದೆ. ಎಲ್ಲ ಖಾಸಗಿ ಮೆಡಿಕಲ್ ಕಾಲೇಜುಗಳು ಶೇ. 75 ಹಾಗೂ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಲಾದ ರೋಗಿಗಳಿಗಾಗಿ ಒದಗಿಸಲೇಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಪ್ರಾಣ ರಕ್ಷಿಸುವುದು ನನ್ನ ಕರ್ತವ್ಯ.
ಆದರೆ ದಾವಣಗೆರೆಯಲ್ಲಿ 850 ಬೆಡ್ ಸಾಮಥ್ರ್ಯ ಹೊಂದಿರುವ ಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಕೇವಲ 54 ಹಾಗೂ 850 ಬೆಡ್ ಸಾಮಥ್ರ್ಯದ ಬಾಪೂಜಿ ಜೆಜೆಎಂಸಿ ಕಾಲೇಜಿನಲ್ಲಿ ಕೇವಲ 37 ಬೆಡ್ಗಳನ್ನು ಮಾತ್ರ ನೀಡಿದ್ದು, ಸರ್ಕಾರದ ಸೂಚನೆ ಪಾಲಿಸುತ್ತಿಲ್ಲ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯ ಮಟ್ಟದಲ್ಲಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜುಗಳು ಪಾಲಿಸದಿರುವುದು ನಿಜಕ್ಕೂ ಅಚ್ಚರಿ ಹಾಗೂ ನೋವು ತಂದಿದೆ. ಸರ್ಕಾರ ಖಾಸಗಿ ಆಡಳಿತ ಮಂಡಳಿಯೊಂದಿಗೆ ಘರ್ಷಣೆಯನ್ನು ಬಯಸುವುದಿಲ್ಲ. ರಾಜ್ಯದಲ್ಲಿ ಎಲ್ಲ ಖಾಸಗಿ ಮೆಡಿಕಲ್ ಕಾಲೇಜಗಳೂ ಕೂಡ ನಿಗದಿತ ಪ್ರಮಾಣದಲ್ಲಿ ಬೆಡ್ ನೀಡುವ ಮೂಲಕ ಸ್ಪಂದಿಸಿದ್ದಾರೆ. ಎಲ್ಲಿಯೂ ಕೂಡ ಈ ರೀತಿಯ ಅಸಹಾಕಾರ ಕಂಡುಬಂದಿಲ್ಲ.
ರಾಜ್ಯದ ಜನರ ಆರೋಗ್ಯ ಹಾಗೂ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ನಿಗದಿತ ಸಂಖ್ಯೆಯಷ್ಟು ಬೆಡ್ ನೀಡಲೇಬೇಕು. ನಾವೇನು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳುತ್ತಿಲ್ಲ. ಪ್ರತಿ ರೋಗಿಗೂ ಸರ್ಕಾರದಿಂದ ಹಣ ಪಾವತಿಸುತ್ತೇವೆ. ಇದು ಹೆಲ್ತ್ ಎಮರ್ಜೆನ್ಸಿ ಕಾಲವಾಗಿದ್ದು ಅತ್ಯಂತ ತುರ್ತು ನಾನ್ ಕೋವಿಡ್ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳು ಚಿಕಿತ್ಸೆ ನೀಡಬೇಕು.
ಇತರೆ ಚಿಕಿತ್ಸೆಗಳನ್ನು 2-3 ತಿಂಗಳು ಮುಂದೂಡಬೇಕು. ಕೋವಿಡ್ ರೋಗಿಗಳಿಗೇ ಬೆಡ್ಗಳನ್ನು ಒದಗಿಸಬೇಕು. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ನಿಗದಿಯಂತೆ ಕ್ರಮವಾಗಿ ಶೇ. 75 ಹಾಗೂ ಶೇ. 50 ರಷ್ಟು ಬೆಡ್ಗಳನ್ನು ನೀಡಲೇಬೇಕು ಹಾಗೂ ಬೆಡ್ ಲಭ್ಯತೆಯ ಸ್ಥಿತಿಗತಿಯ ಬೋರ್ಡ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಕಾನೂನು ಪ್ರಕಾರ ನಾವು ತೆಗೆದುಕೊಳ್ಳಬೇಕಾಗುತ್ತದೆ.
ನಿಗದಿಯಂತೆ ಬೆಡ್ಗಳನ್ನು ಪಡೆಯದಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಸಹಕಾರ ನೀಡದವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಒ ಅವರು ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರು ಸೂಚನೆ ನೀಡಿದರು.
2150 ವೈದ್ಯರ ನೇಮಕ
ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ಗಳನ್ನು ಒದಗಿಸಲಾಗಿದ್ದು, ಕೆಲವೆಡೆ ತಜ್ಞ ವೈದ್ಯರು ಹಾಗೂ ನುರಿತ ಸಿಬ್ಬಂದಿ ಕೊರತೆ ಕಾರಣ ಬಳಕೆಗೆ ತೊಂದರೆಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಲಿದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಳಕೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಿಬ್ಬಂದಿಗಳಿಗೆ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ತರಬೇತಿಯನ್ನು ಕೊಡಿಸಬೇಕು, ಜಿಲ್ಲೆಯಲ್ಲಿ ಕೂಡಲೆ ಈ ಕಾರ್ಯ ಆಗಬೇಕು ಎಂದು ಸಚಿವರು ತಾಕೀತು ಮಾಡಿದರು.
ಆಂಬುಲೆನ್ಸ್ಗೆ ದರ ನಿಗದಿ
ರಾಜ್ಯದಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವ ಸಂದರ್ಭದ ಪರಿಸ್ಥಿತಿಯ ದುರ್ಲಾಭ ಪಡೆದು, ಖಾಸಗಿ ಆಂಬುಲೆನ್ಸ್ಗಳು ರೋಗಿಗಳಿಂದ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ, ಮೊದಲೇ ನೊಂದಿರುವವರಿಗೆ ಇನ್ನಷ್ಟು ಹಿಂಸೆ ನೀಡುವಂತಹ ಅಮಾನವೀಯ ವರ್ತನೆ ತೋರುವುದು ಸಮಂಜಸವಲ್ಲ.
ಈ ಕುರಿತು ಬಹಳಷ್ಟು ದೂರುಗಳು ಕೇಳಿಬಂದಿದ್ದು, ಈಗಾಗಲೆ ಈ ದಿಸೆಯಲ್ಲಿ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಖಾಸಗಿ ಆಂಬುಲೆನ್ಸ್ಗಳಿಗೆ ದರವನ್ನು ನಿಗದಿಪಡಿಸಲಾಗುವುದು. ನಿಗದಿಗಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಎಲ್ಲ ತಾಲ್ಲೂಕುಗಳಿಗೆ ಆಕ್ಸಿಜನ್ ಘಟಕ : ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕವನ್ನು ಸ್ಥಾಪಿಸುವ ಆಲೋಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರು ತಮ್ಮ ಟ್ರಸ್ಟ್ ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕ ನೀಡಲು ಕ್ರಮ ವಹಿಸಿದ್ದಕ್ಕಾಗಿ ಹಾಗೂ ಚನ್ನಗಿರಿ ಶಾಸಕರು ಹಾಗೂ ಕೆಸ್ಎಸ್ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಕೂಡ ಚನ್ನಗಿರಿಯಲ್ಲಿ ನಿಗಮದ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಕ್ಕಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.
ದಾವಣಗೆರೆ ಜಿಲ್ಲೆಗೆ ಒಟ್ಟು 115 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ರಾಜ್ಯದಲ್ಲಿ 18-44 ವರ್ಷದವರಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮರು ಚಾಲನೆ ನೀಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಎಲ್ಲರಿಗೂ ಲಸಿಕೆ ಕೊಡಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಗೆ ಕೋವಿಡ್ಗೆ ನೀಡಲಾಗುವ ಯಾವುದೇ ಔಷಧಿಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.
ಬ್ಲ್ಯಾಕ್ ಫಂಗಸ್ ಆತಂಕದ ಅಗತ್ಯವಿಲ್ಲ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಿಗೆ ಸೋಂಕು ಕಂಡುಬಂದಿದೆ. ಈ ಸೋಂಕಿಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 03, 07, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸುವ ಮೂಲಕ, ಈಗಾಗಲೆ ಕೋವಿಡ್ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರಿಗೆ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ, ಯಾರು ಯಾವುದೇ ಮಟ್ಟದ ಪ್ರಭಾವ ಬಳಸಿದರೂ, ಬೆಡ್ ದೊರೆಯುತ್ತಿಲ್ಲ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದಲ್ಲಿ ಬೆಡ್ ಪಡೆಯದಿರುವುದನ್ನು ಪ್ರಸ್ತಾಪಿಸಿ, ಈ ನಿಟ್ಟಿನಲ್ಲಿ ಸಚಿವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದ್ದು, ಎಲ್ಲ ಶಿಕ್ಷಕರಿಗೂ ಲಸಿಕಾಕರಣ ಆಗಬೇಕು. ಜಿಲ್ಲೆಯಲ್ಲಿ ಇನ್ನೂ 700 ಕ್ಕೂ ಹೆಚ್ಚು ಶಿಕ್ಷಕರಿಗೆ ಲಸಿಕೆ ನೀಡಿಲ್ಲ. ಸೋಂಕಿತರ ಪ್ರಾಥಮಿಕ 10 ಹಾಗೂ ದ್ವಿತೀಯ ಹಂತದ 20 ಸಂಪರ್ಕಿತರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಆದರೆ ಜಿಲ್ಲೆಯಲ್ಲಿ ಇದು ಆಗುತ್ತಿಲ್ಲ. ಹೀಗಾಗಿ ಸೋಂಕು ಏರಿಕೆಯಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಈಗಾಗಲೆ ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಮಾಧ್ಯಮದವರು, ಬ್ಯಾಂಕ್ ಹಾಗೂ ರೈಲ್ವೆ ಸಿಬ್ಬಂದಿಗಳಿಗೆ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದ ಬೆಡ್ ಗಳನ್ನು ಸರ್ಕಾರದ ಆದೇಶಕ್ಕೆ ಅನುಗುಣವಾಗಿ ತಪ್ಪದೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ರಾಮಪ್ಪ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿಜಯ ಮಹಾಂತೇಶ್, ಜೆಜೆಎಂಸಿ ಹಾಗೂ ಎಸ್ಎಸ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಪ್ರಾಂಶುಪಾಲರು, ಡಿಹೆಚ್ಒ ಡಾ. ನಾಗರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ದಿನದ ಸುದ್ದಿ
ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.
ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.
ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.
ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.
ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.
ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.
~ವರದಿ: ಪವನ್ ಕಲ್ಯಾಣ್ ಡಿ.ಜಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

