ದಿನದ ಸುದ್ದಿ
ದಾವಣಗೆರೆ | ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ; ಜನತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದೇ ಕಾರಣ | ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಸೋಮವಾರ ಜಗಳೂರಿನ ತರಳಬಾಳು ಸಮುದಾಯದ ಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 2ನೇ ಅಲೆಯ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಮೇ.23 ರಂದು ಜಗಳೂರು ತಾಲ್ಲೂಕಿನಲ್ಲಿ ಒಟ್ಟು 852 ಪಾಸಿಟಿವ್ ಪ್ರಕರಣಗಳಿದ್ದು, 390 ಜನರು ಗುಣಮುಖರಾಗಿದ್ದಾರೆ.
167 ಜನರು ಹೋಮ್ ಐಸೋಲೇಷನ್ ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಒಟ್ಟು 462 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಡಿ.ಸಿ.ಹೆಚ್.ಸಿ ಯಲ್ಲಿ 37 ಜನ, ಮೆದಗಿನಕೆರೆ ಕೋವಿಡ್ ಕೇರ್ ಸೆಂಟರ್ನಲ್ಲಿ 85 ಜನ, ಜಗಳೂರು ಟೌನ್ (ಲಿಂಗನಹಳ್ಳಿ ರಸ್ತೆ) ಕೋವಿಡ್ ಕೇರ್ ಸೆಂಟರ್ನಲ್ಲಿ 9 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ ಒಟ್ಟು 9 ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಕೋವಿಡ್-19 2ನೇ ಅಲೆಯಲ್ಲಿ ಹೆಚ್ಚಾಗಿ ಗ್ರಾಮಾಂತರ ಭಾಗಗಳಲ್ಲೇ ಸೋಂಕು ಹೆಚ್ಚಾಗಿ ಹರಡುತ್ತಿರುವುದಕ್ಕೆ ಕಾರಣವೆಂದರೆ ಗ್ರಾಮದ ಜನರು ನಿಯಮಗಳನ್ನು ಮೀರಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜಲ್ಲಿಕಟ್ಟೆ, ದೇವಸ್ಥಾನದ ಆವರಣಗಳಲ್ಲಿ ಗುಂಪುಗಟ್ಟಿ ಸೇರುವುದಲ್ಲದೇ, ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿಬಿಟ್ಟಿದ್ದಾರೆ.
ಗ್ರಾಮಗಳಲ್ಲಿ ಬಹುತೇಕರು ಮಾಸ್ಕ್ ಧರಿಸುವುದೇ ಇಲ್ಲ. ಧರಿಸಿದರು ಬೇಕಾಬಿಟ್ಟಿ ಹಾಕಿಕೊಳ್ಳುತ್ತಾರೆ.
ಬೆಂಗಳೂರಿನಿಂದ ಬರುವವರು ಅಗತ್ಯ ಮಾಹಿತಿಗಳನ್ನು ಕೊಡದೇ ಮನೆ ಸೇರುತ್ತಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದೇ ಸ್ಥಳೀಯ ವೈದ್ಯರ ಬಳಿಯೋ ಅಥವಾ ಮೆಡಿಕಲ್ ಶಾಪ್ಗಳಲ್ಲೋ ಬೇಕಾದ ಮಾತ್ರೆಗಳನ್ನು ತೆಗೆದುಕೊಂಡು ನುಂಗುತ್ತಾರೆ.
ಇದನ್ನೂ ಓದಿ | ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಎಸ್ಪಿ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ
ಸೋಂಕಿನ ಪ್ರಮಾಣ ಹೆಚ್ಚಾಗಿ ಆಕ್ಸಿಜನ್ ಸ್ಯಾಚುರೇಷನ್ ಲೆವೆಲ್ 50-70 ಕ್ಕೆ ಬಂದಾಗ ಬೆಡ್ ಬೇಕು, ವೆಂಟಿಲೇಟರ್ ಬೇಕು ಎಂದು ಕೊನೆಯ ಹಂತದಲ್ಲಿ ಆಸ್ಪತ್ರೆಗಳಿಗೆ ಬರುತ್ತಾರೆ. ಇದರಿಂದ ಜೀವ ಉಳಿಸಲು ಕಷ್ಟವಾಗುತ್ತಿದೆ ಎಂದರು.
ಕೋವಿಡ್ ಕೇರ್ ಸೆಂಟರ್ಗಳಲ್ಲಿ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿದ್ದು, ಯಾರು ಕೂಡ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಕೋವಿಡ್ ಕೇರ್ ಸೆಂಟರ್ಗೆ ಬರಬೇಕು.
ಮನೆಯಲ್ಲೆ ಚಿಕಿತ್ಸೆ ಪಡೆಯುವ ಸೋಂಕಿತನಿಗೆ ಪ್ರತ್ಯೇಕ ಕೊಠಡಿ ಮತ್ತು ಶೌಚಾಲಯ ಇರಬೇಕು. ಹಾಗೂ ಸೋಂಕಿತ ಮುಟ್ಟಿದ ವಸ್ತುಗಳನ್ನು ಮನೆಯ ಇತರೆ ಸದಸ್ಯರು ಮುಟ್ಟಬಾರದು. ಇಂತಹದೊಂದು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವವರು ಮಾತ್ರ ಮನೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.
ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು ಗ್ರಾಮೀಣ ಜನರ ಬದುಕು ದುಸ್ತರವಾಗಿದೆ. ಜಗಳೂರಿನಂತಹ ತಾಲ್ಲೂಕಿನಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು ಅವರು ಜೀವನ ನಡೆಸಲು ನರೇಗ ಕೆಲಸ ಆಧಾರವಾಗಿದೆ. ಆದ್ದರಿಂದ ಉದ್ಯೋಗ ಖಾತ್ರಿಯೊಳಗೆ ಹೆಚ್ಚು ಕೆಲಸ ಕೊಡಿ ಎಂದು ಸಿಇಒಗೆ ಸೂಚನೆ ನೀಡಿದರು.
ಕೊರೊನಾ ಹಿನ್ನೆಲೆಯಲ್ಲಿ ಗುಂಪು ಕೆಲಸ ನಿಲ್ಲಿಸಿ ವೈಯಕ್ತಿಕ ನೆಲೆಯಲ್ಲಿ ಉದ್ಯೋಗ ಕೈಗೊಳ್ಳಲು ಅವಕಾಶ ನೀಡಿದರೆ ಅವರ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕೃಷಿ ಕೂಲಿಕಾರರು ಅಗತ್ಯ ಕೃಷಿ ಪರಿಕರ ಖರೀದಿಸಲು ಹಾಗೂ ಕೃಷಿ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡಿ. ಲಾಕ್ಡೌನ್ ಇದ್ದರು ಕೃಷಿ ಚಟುವಟಿಕೆದಾರರಿಗೆ ರಿಯಾಯಿತಿ ಇದ್ದು ಪೊಲೀಸರು ಈ ವರ್ಗದ ಜನರಿಗೆ ಸಹಕಾರ ನೀಡಬೇಕು ಎಂದರು.
ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಜಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು ಪರಿಸ್ಥಿತಿ ಹತೋಟಿಯಲ್ಲಿದೆ. ಇದು ಹೀಗೆ ಮುಂದುವರಿಯಲಿ. ತಾಲ್ಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್ಗಳಿದ್ದು ಅಗತ್ಯವಿರುವಷ್ಟು ಆಕ್ಸಿಜನ್ ಬಳಸಿ. ಅನಗತ್ಯವಾಗಿ ಆಕ್ಸಿಜನ್ನ್ನು ರೋಗಿಗಳಿಗೆ ಪೂರೈಕೆ ಮಾಡಬೇಡಿ. ಈಗಾಗಲೇ ತಾಲ್ಲೂಕಿನ 13 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಿದ್ದು, ಹೋಮ್ ಐಸೋಲೆಷನ್ನ್ನು ಸಂಪೂರ್ಣ ನಿಲ್ಲಿಸಿ ಸೋಂಕಿತರನ್ನು ಈ ಕೇಂದ್ರಗಳಿಗೆ ದಾಖಲಿಸಿ ಎಂದ ಅವರು ಹೆಚ್ಚು ಆಕ್ಸಿಜನ್ ಬಳಸಿದರೆ ಬ್ಲಾಕ್ ಫಂಗಸ್ ಬರುತ್ತದೆ ಎಂದು ವಿಜ್ಞಾನಗಳು ಹೇಳಿದ್ದಾರೆ ಎಂದರು.
ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಮಾತನಾಡಿ, ಸರ್ಕಾರದಿಂದ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಕೊರೊನಾ ತಡೆಗೆ ವಿವಿಧ ಪರಿಕರಗಳ ಖರೀದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಸುಮಾರು ರೂ.1 ಕೋಟಿ ಅನುದಾನ ನೀಡಲಾಗುವುದು ಎಂದ ಅವರು, ತಾಲ್ಲೂಕಿನ ಕಾಟನಹಳ್ಳಿ ಗ್ರಾಮದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಜೀವ ಅಮೂಲ್ಯವಾದರಿಂದ ಕಾಪಾಡಲು ಎಲ್ಲರೂ ಪ್ರಯತ್ನ ಮಾಡೋಣ ಎಂದು ತಿಳಿಸಿದರು.
ನನಗೆ ಕೊರೊನಾ ಸೋಂಕು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅನೇಕರು ರಾಮಚಂದ್ರ ಹೋಗಿಬಿಟ್ಟ, ವೆಂಟಿಲೇಟರ್ ಗೆ ಹಾಕಿದ್ದಾರೆ. ಗುಂಡಿ ಸಿದ್ಧವಾಗಿದೆ ಎಂದು ಕೆಲವರು ಟೀಕೆ ಮಾಡಿದರು. ಆದರೆ ನನಗೆ ಅವರ ಟೀಕೆಗಳೇ ಶ್ರೀರಕ್ಷೆ ಎಂದ ಅವರು, ನಾನು ಆಸ್ಪತ್ರೆಯಲ್ಲಿದ್ದರೆ ನನ್ನ ಮನಸ್ಸು ಜಗಳೂರಿನಲ್ಲಿತ್ತು. ಬಹಳ ಮಂದಿ ಆತ್ಮೀಯರು ಅಗಲಿದ್ದಾರೆ. ಅಗಲಿದ್ದ ಕುಟುಂಬದವರೊಂದಿಗೆ ನಾವಿದ್ದೇವೆ, ಅವರ ಯೋಗಕ್ಷೇಮ ನೋಡುತ್ತೇನೆ ಎಂದು ಭಾವುಕರಾಗಿ ನುಡಿದರು. ಪಕ್ಷಾತೀತವಾಗಿ ಕಲ್ಲೆರುದ್ರೇಶ್ ತಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕೋವಿಡ್-19 ಮೊದಲನೇ ಅಲೆ ಪ್ರಾರಂಭವಾದಾಗ ದಾವಣಗೆರೆಯಲ್ಲಿ ಒಂದೆರೆಡು ಕೇಸ್ಗಳು ಇತ್ತು. ಮೇ ತಿಂಗಳಿಂದ ಸೆಪ್ಟೆಂಬರ್ ವರೆಗೂ ಹೆಚ್ಚು ಪ್ರಕರಣಗಳು ದಾಖಲಾದವು. ಅಕ್ಟೋಬರ್ ತಿಂಗಳಲ್ಲಿ ಪ್ರಕರಣಗಳು ಕಡಿಮೆ ಆಗುತ್ತಾ ಬಂದವು. ಈ ಹಂತದಲ್ಲಿ ಕೋವಿಡ್ ಕುರಿತಾದ ಮಾಹಿತಿ ಕೊರತೆ ಇತ್ತು. ಆದರೆ 2ನೇ ಅಲೆಯಲ್ಲಿ ಮಾಹಿತಿ ಹಾಗೂ ಅನುಭವಗಳಡೆರೆಡು ಇದ್ದು ಸೋಂಕಿನ ವಿರುದ್ಧ ಹೋರಾಡಲು ಜನರು ಸ್ಪಂದನೆ ಕೊಡುತ್ತಿಲ್ಲ ಎಂದು ಬೇಸರಿಸಿದರು.
ಮೊದಲ ಹಂತದಲ್ಲಿ ಕೆಮ್ಮು, ಶೀತ, ಜ್ವರ, ತಲೆನೋವು ಬರುವ ಮೂಲಕ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿತ್ತು, 2ನೇ ಅಲೆಯಲ್ಲಿ ಈ ಲಕ್ಷಣಗಳೊಂದಿಗೆ ತಲೆನೋವು, ಕಣ್ಣು ಕೆಂಪಾಗುವುದು, ಉಸಿರಾಟದ ತೊಂದರೆ, ಅಲರ್ಜಿ ಸೇರಿದಂತೆ ಇನ್ನಿತರ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಜನರು ನಿರ್ಲಕ್ಷ್ಯ ಮಾಡದೇ ಮೊದಲ ಹಂತದಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡರೆ ಜೀವ ಉಳಿಸುವ ಎಲ್ಲಾ ಸಾಧ್ಯತೆಗಳಿವೆ. ಆದರೆ ಜನರು ಕೊನೆಯ ಹಂತದಲ್ಲಿ ಸೋಂಕು ಶ್ವಾಸಕೋಶ ತಲುಪಿ ಉಸಿರಾಟದ ತೊಂದರೆಯಾದ ಬಳಿಕ ಬರುತ್ತಿದ್ದಾರೆ. ಇದರಿಂದ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ ಎಂದರು.
ಪ್ರತೀ ಗ್ರಾಮ ಪಂಚಾಯಿತಿ ಪಟ್ಟಣದಲ್ಲಿ ಹಾಗೂ ಸ್ಥಳೀಯ ಟಾಸ್ಕ್ ಪೋರ್ಸ್ ಸಮಿತಿಯವರು ಒಂದೊಂದು ಥೀಮ್ ಇಟ್ಟುಕೊಂಡು ಜನರಲ್ಲಿ ಕೊರೊನಾ ಸೋಂಕು ಹಾಗೂ ವ್ಯಾಕ್ಸಿನೇಷನ್ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಈ ವೇಳೆ ಶಾಸಕ ರಾಮಚಂದ್ರಪ್ಪ ಜಗಳೂರಿನಲ್ಲಿ ಬ್ಲಾಕ್ ಫಂಗಸ್ ಗೆ ತುತ್ತಾದವರು ಎಷ್ಟು ಜನ ಇದ್ದಾರೆ? ಇದಕ್ಕೆ ಬೇಕಾದ ಔಷಧಿಗಳು ಸಿಗುತ್ತಿದ್ದೇಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಡಾ.ರಾಘವನ್ ಜಗಳೂರು ತಾಲ್ಲೂಕಿನಲ್ಲಿ ಇಲ್ಲಿಯವೆರಗೂ ಯಾರಿಗೂ ಬ್ಲಾಕ್ ಫಂಗಸ್ ಬಂದಿಲ್ಲ. ಈ ಖಾಯಿಲೆ ಬಂದವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುತ್ತಿದ್ದು, ಬೇಕಾದ ಔಷಧಿಗಳನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಡಿಹೆಚ್ಒ ಡಾ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ತಾಲ್ಲೂಕು ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ3 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ1 day agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

