ದಿನದ ಸುದ್ದಿ
ಕೋವಿಡ್ ಸಂಕಷ್ಟದಲ್ಲಿ ಗ್ರಾಮೀಣರ ನೆರವಿಗೆ ಉದ್ಯೋಗಖಾತ್ರಿ ಯೋಜನೆ , ಜಿಲ್ಲೆಯಲ್ಲಿ 4.90 ಲಕ್ಷ ಮಾನವ ದಿನ ಸೃಜನೆ : 16.18 ಕೋಟಿ ರೂ. ಕೂಲಿ ಪಾವತಿ
- ವಿಶೇಷ ವರದಿ: ಪ್ರೀತಿ.ಟಿ.ಎಸ್ (ತರಬೇತಾರ್ಥಿ) ವಾರ್ತಾ ಇಲಾಖೆ ದಾವಣಗೆರೆ
ಸುದ್ದಿದಿನ,ದಾವಣಗೆರೆ : ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಉದ್ಯೋಗ ದೊರಕಿಸುವ ಮೂಲಕ ಕೂಲಿಕಾರರ ಕೈಹಿಡಿದಿದೆ. ಜಿಲ್ಲೆಯಲ್ಲಿ ಈ ವರ್ಷ ಒಟ್ಟು 4.90 ಲಕ್ಷ ಮಾನವ ದಿನಗಳ ಸೃಜನೆಯಾಗಿದ್ದು, 16.18 ಕೋಟಿ ರೂ. ಕೂಲಿ ಪಾವತಿಸಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯರಿಂದಲೇ ಅಧಿಕ ಮಾನವ ದಿನ ಸೃಜನೆಯಾಗಿರುವುದು ವಿಶೇಷ.
ನರೇಗಾ ಯೋಜನೆಯಲ್ಲಿ ಫಲಾನುಭವಿಗಳಿಗೆ ಪ್ಯಾಕೇಜ್ ಮಾದರಿಯಲ್ಲಿ ಸೌಲಭ್ಯಗಳನ್ನು ದೊರಕಿಸಿಕೊಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಈ ಯೋಜನೆಯಡಿ ಸಿಗುವ ಸೌಲಭ್ಯಗಳನ್ನು ಹೆಚ್ಚು ಸದುಪಯೋಗಪಡಿಸಿಕೊಳ್ಳಬೇಕು. ಆದರೆ ಕೋವಿಡ್-19 ಎರಡನೇ ಅಲೆಯಲ್ಲಿ ಹೆಚ್ಚು ಗ್ರಾಮಗಳಲ್ಲಿ ಸೋಂಕು ಹರಡುತ್ತಿರುವುದರಿಂದ ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಮುಂದೆ ಬಾರದಿರುವುದೂ ಸಹ ಕಂಡುಬಂದಿದೆ. ಈ ವರ್ಷ ಜಿಲ್ಲೆಯಲ್ಲಿ 48686 ಗ್ರಾಮೀಣರಿಗೆ ಉದ್ಯೋಗಖಾತ್ರಿಯಡಿ ಕೆಲಸ ನೀಡುವ ಮೂಲಕ 4.90 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ.
ನರೇಗಾ ಯೋಜನೆ ಅಡಿ ಹಳ್ಳಿಗಳಲ್ಲಿ ಕೆರೆ ಹೂಳೆತ್ತುವುದು, ಗೋಕಟ್ಟೆ ಹೂಳೆತ್ತುವುದು, ಕೊಳವೆ ಬಾವಿ ಮರುಪೂರಣ ಘಟಕ, ಮೈದಾನ, ಕಣ, ಚೆಕ್ ಡ್ಯಾಂ, ಹೊಲಗಳಿಗೆ ಹೋಗಲು ದಾರಿ, ಕೃಷಿ ಹೊಂಡ, ಅಂಗನವಾಡಿ ಕೇಂದ್ರ, ಗ್ರಾಮೀಣ ಗೋದಾಮು, ಸ್ಮಶಾನ ಅಭಿವೃದ್ಧಿ, ಉದ್ಯಾನ, ಕಾಂಕ್ರಿಟ್ ರಸ್ತೆ ನಿರ್ಮಾಣದಂತಹ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಬಹುದಾದ ಅನೇಕ ಉದ್ಯೋಗಗಳನ್ನು ನೀಡಲಾಗುತ್ತಿದ್ದು, ಗುಂಪುಗೂಡಿ ಮಾಡಬಹುದಾದ ಕಾಮಗಾರಿ ಸ್ಥಳಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಕೂಲಿ ಕಾರ್ಮಿಕರು
ಕೋವಿಡ್ ಲಾಕ್ಡೌನ್ ಪರಿಣಾಮವಾಗಿ ಪ್ರಸ್ತುತ ಉದ್ಯೋಗ ಖಾತ್ರಿಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರ ಸಂಖ್ಯೆ ಕಡಿಮೆಯಿದ್ದು, ಚನ್ನಗಿರಿ ತಾಲ್ಲೂಕಿನಲ್ಲಿ 1,495 ಜನರು, ಹೊನ್ನಾಳಿ 792, ದಾವಣಗೆರೆ 337, ಹರಿಹರ 210, ಜಗಳೂರು 151, ನ್ಯಾಮತಿ 166 ಸೇರಿದಂತೆ ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 3,151 ಜನರು ಮಾತ್ರ ಉದ್ಯೋಗಕ್ಕೆ ಬರುತ್ತಿದ್ದಾರೆ.
15 ದಿನಗಳ ಹಿಂದೆ ಒಟ್ಟು 19,321 ಜನರು ಕೆಲಸಕ್ಕೆ ಬರುತ್ತಿದ್ದು, ಕೋವಿಡ್ ಸೋಂಕಿನ ಭೀತಿಯ ಕಾರಣದಿಂದ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಸದ್ಯ ಕಡಿಮೆ ಇದೆ. ಬರುವ ದಿನಗಳಲ್ಲಿ ಕೆಲಸ ಬಯಸಿ ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದೆ.
ಕೊರೊನಾ ಲಾಕ್ಡೌನ್ ಪರಿಣಾಮವಾಗಿ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪುರುಷರು ಮತ್ತು ಮಹಿಳೆಯರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ನರೇಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಕೋವಿಡ್ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಉದ್ಯೋಗ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2,11,851 ಜಾಬ್ಕಾರ್ಡ್ ಗಳನ್ನು ನೀಡಲಾಗಿದ್ದು, 2,26,985 ಮಹಿಳೆಯರು, 2,57,952 ಪುರುಷರು ಸೇರಿದಂತೆ ಒಟ್ಟು 4,84,937 ಜನರು ಜಾಬ್ಕಾರ್ಡ್ ಪಡೆದುಕೊಂಡಿದ್ದಾರೆ. ಅಲ್ಲದೇ ಏಪ್ರಿಲ್, ಮೇ ತಿಂಗಳಲ್ಲಿ 2280 ಹೊಸ ಜಾಬ್ಕಾರ್ಡ್ಗಳನ್ನು ವಿತರಿಸಲಾಗಿದೆ.
ಮಹಿಳೆಯರಿಂದ ಹೆಚ್ಚು ಮಾನವ ದಿನ ಸೃಜನೆ: ಪ್ರಸ್ತುತ ಶೇ.46.87ರಷ್ಟು ಮಹಿಳೆಯರು ನರೇಗಾ ಯೋಜನೆಯಡಿಯಲ್ಲಿ ಉದ್ಯೋಗವಕಾಶವನ್ನು ಪಡೆದುಕೊಂಡಿದ್ದು, ಮಹಿಳೆಯರಿಂದಲೇ ಹೆಚ್ಚು ಮಾನವ ದಿನಗಳು ಸೃಜನೆಯಾಗಿರುವುದು ವಿಶೇಷ. ಜಿಲ್ಲೆಯಲ್ಲಿ ಒಟ್ಟು 48686 ಜನರಿಗೆ ನರೇಗದಡಿ ಕೆಲಸ ದೊರೆತಿದ್ದು ಒಟ್ಟು 490614 ಮಾನವದಿನಗಳ ಸೃಜನೆಯಾಗಿದ್ದು, 16.18 ಕೋಟಿ ರೂ. ಮೊತ್ತ ಪಾವತಿಸಲಾಗಿದೆ.
ಚನ್ನಗಿರಿ ತಾಲ್ಲೂಕಿನಲ್ಲಿ ಒಟ್ಟು 12362 ಜನ ಕೆಲಸ ಮಾಡಿದ್ದು, 138511 ಮಾನವದಿನಗಳ ಸೃಜನೆಯಾಗಿದೆ. ಇಲ್ಲಿ 4.73 ಕೋಟಿ ರೂ. ಕೂಲಿ ಮೊತ್ತ ಪಾವತಿಸಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 4495 ಜನ ಕೆಲಸ ನಿರ್ವಹಿಸಿದ್ದು, 36020 ಮಾನವದಿನಗಳ ಸೃಜನೆಯಾಗಿ, 1.06 ಕೋಟಿ ರೂ. ಕೂಲಿ ಪಾವತಿಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 2032 ಕೂಲಿಕಾರರು ಕೆಲಸ ಮಾಡಿ 22015 ಮಾನವದಿನಗಳ ಸೃಜನೆಯಾಗಿದ್ದು 66.79 ಲಕ್ಷ ರೂ. ಕೂಲಿ ಮೊತ್ತ ಪಾವತಿಸಲಾಗಿದೆ.
ಹೊನ್ನಾಳಿ ತಾಲ್ಲೂಕಿನಲ್ಲಿ 8898 ಜನ ಕೆಲಸ ಮಾಡಿ 121933 ಮಾನವದಿನಗಳ ಸೃಜನೆ ಮಾಡಿದ್ದು, 3.78 ಕೋಟಿ ರೂ. ಮೊತ್ತ ಪಾವತಿಯಾಗಿದೆ. ಜಗಳೂರು ತಾಲ್ಲೂಕಿನಲ್ಲಿ 16605 ಜನ ಕೆಲಸ ಮಾಡಿ 126285 ಮಾನವದಿನಗಳನ್ನು ಸೃಜಿಸಿದ್ದು, 4.56 ಕೋಟಿ ರೂ. ಪಾವತಿಯಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 4294 ಜನ ಕೂಲಿಕಾರರು 45850 ಮಾನವ ದಿನಗಳನ್ನು ಸೃಜಿಸಿದ್ದು, 1.36 ಕೋಟಿ ರೂ. ಪಾವತಿಯಾಗಿದೆ.
ಮಾನವ ದಿನಗಳ ಗುರಿ
ಕೋವಿಡ್ ಲಾಕ್ಡೌನ್ ಕಾರಣದಿಂದ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಜನರಿಗೆ ನರೇಗ ಯೋಜನೆ ಆರ್ಥಿಕವಾಗಿ ಶಕ್ತಿ ತುಂಬಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ನರೇಗಾ ಅಡಿಯಲ್ಲಿ 31 ಲಕ್ಷ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ನೀಡಿದ್ದು, ಏಪ್ರಿಲ್ ತಿಂಗಳಿಂದ ಇಲ್ಲಿಯವರೆಗೆ 4,90,614 ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಕಳೆದ ವರ್ಷ 40 ಲಕ್ಷ ಗುರಿ ನೀಡಿದ್ದು, ಒಟ್ಟು 34,10,305 ಮಾನವ ದಿನಗಳನ್ನು ಸೃಜಿಸಲಾಗಿತ್ತು.
ದಿನಗೂಲಿ ಹಾಗೂ ಆಕಸ್ಮಿಕ ಮರಣ ಹೊಂದಿದವರಿಗೆ ಪರಿಹಾರ
ನರೇಗಾದಡಿ ಕೆಲಸ ಮಾಡುವವರಿಗೆ ದಿನಗೂಲಿ ರೂ.299 ನೀಡಲಾಗುತ್ತಿದ್ದು, ಲಾಕ್ಡೌನ್ ಅವಧಿಯಲ್ಲಿ ಬಹುತೇಕರಿಗೆ ಉದ್ಯೋಗ ಸೃಷ್ಟಿ ಮಾಡಿ ಬದುಕು ರೂಪಿಸಿಕೊಡುವಲ್ಲಿ ಮುನ್ನಡೆದಿದೆ. ನರೇಗಾ ಯೋಜನೆಯ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಯಾವುದೇ ಕಾರ್ಮಿಕರು ಕೆಲಸದ ಕಾರಣದಿಂದಾಗಿ ಮತ್ತು ಕೆಲಸದ ಸಮಯದಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ ಅಥವಾ ಶಾಶ್ವತವಾಗಿ ಅಂಗವಿಕಲರಾದಲ್ಲಿ ಅಂತಹ ಕಾರ್ಮಿಕರ ಅಧಿಕೃತ ವಾರಸುದಾರರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ ರೂ.2 ಲಕ್ಷ ಪರಿಹಾರ ನೀಡಲಾಗುತ್ತಿದೆ.
ಕೋವಿಡ್ ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರಕಿಸುವ ಮೂಲಕ ನರೇಗಾ ಯೋಜನೆ ಆರ್ಥಿಕವಾಗಿ ಆಸರೆ ನೀಡಿದ್ದು, ಉದ್ಯೋಗಕ್ಕಾಗಿ ಗ್ರಾಮೀಣರು ಸಂಬಂಧಪಟ್ಟ ಗ್ರಾಮ ಪಂಚಾಯತ್ಗಳನ್ನು ಸಂಪರ್ಕಿಸಿ, ಹೆಚ್ಚು ಹೆಚ್ಚು ಕೆಲಸ ಪಡೆಯಲು ಮುಂದಾಗಬೇಕಿದೆ ಎನ್ನುತ್ತಾರೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಅವರು.
ಕೃಪೆ : DPIR Davanagere
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ49 minutes agoದಾವಣಗೆರೆ | ಇಂದು ಕರೆಂಟ್ ಇರಲ್ಲ

