Connect with us

ದಿನದ ಸುದ್ದಿ

ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ; ಅಗತ್ಯ ವಸ್ತುಗಳ ಖರೀದಿಗೆ ಮೇ 31 ಮತ್ತು ಜೂ.3 ರಂದು ಅವಕಾಶ : ಡಿಸಿ ಮಹಾಂತೇಶ್ ಬೀಳಗಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 03 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿ, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳಿಗೆ ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಜಿಲ್ಲೆಯಲ್ಲಿ ಸತತವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಮಾಣ ತಗ್ಗಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದಾಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೊಸ ನಿರ್ಬಂಧಗಳನ್ವಯ ಮೇ.31 ಮತ್ತು ಜೂ.3 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳಿಗೆ ಮಾತ್ರ ಅವಕಾಶ ಇದ್ದು ಉಳಿದ ದಿನಗಳು ಹಾಲು ಮತ್ತು ಔಷಧಿಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಬಂದ್ ಇರುತ್ತದೆ.

ಇದನ್ನೂ ಓದಿ | ಮಾಸ್ಕ್ ಮತ್ತು ದೈಹಿಕ ಅಂತರ ರೂಲ್ಸ್ ಬ್ರೇಕ್ ; 52,438 ಪ್ರಕರಣ ದಾಖಲು : ಎಸ್ಪಿ ಹನುಮಂತರಾಯ

ಹಾಗೂ ಜೂ.4 ರವರೆಗೆ ಮಾತ್ರ ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಷ್ಠ 10 ಜನರು ಮಾತ್ರ ಭಾಗವಹಿಸಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

• ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

• ಸಾರ್ವಜನಿಕರು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸುವುದನ್ನು ನಿರ್ಬಂಧಿಸಿ, ನಡೆದುಕೊಂಡು ಹೊಗಲು ಮಾತ್ರ ಅವಕಾಶ ನೀಡಲಾಗಿದೆ.

• ಕೃಷಿ ಅವಲಂಬಿತ ಕೈಗಾರಿಕೆಗಳು ಕಾರ್ಯನಿರ್ವಹಿಸಲು ಅನುಮತಿಸಿದೆ ಹಾಗೂ ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತಕ್ಷಂಬಂಧಿತ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಹಾಗೂ ಸಿಬ್ಬಂದಿಗಳು ಕೃಷಿ ಕೈಗಾರಿಕಾ ಸಂಸ್ಥೆಗಳು ನೀಡಿದ ಅರ್ಹ ಗುರುತಿನ ಚೀಟಿ/ಅಧಿಕೃತ ಪತ್ರವನ್ನು ತೋರಿಸುವ ಮೂಲಕ ಓಡಾಡುವುದಕ್ಕೆ ಅನುಮತಿಸಿದೆ.

• ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಸಂಬಂಧಿಸಿದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿಸಿದೆ.

• ಜೂ.4 ರವರೆಗೆ ಮಾತ್ರ ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಸಷ್ಠ 10 ಜನರು ಮಾತ್ರ ಭಾಗವಹಿಸಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ.

• ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.

• ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೆ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂದಿಗಳಿಗೆ ತೋರಿಸಬೇಕು. ಖಾಸಗಿ ಭದ್ರತಾ ಸೇವೆಗಳಿಗೆ ಅನುಮತಿಸಲಾಗಿದೆ.

• ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

• ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

• ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ಆದೇಶ ಸಂಖ್ಯೆ ಆರ್‍ಡಿ/158/ಟಿಎನ್‍ಆರ್/2020 ದಿ.07.05.2021ರಂತೆ ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

• ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

• ಭಾರತ ಸರ್ಕಾರದ, ಅದರ ಸ್ವಾಯತ್ತ/ಅಧೀನ ಸಂಸ್ಥೆಗಳ ಮತ್ತು ಸಾರ್ವಜನಿಕ ನಿಗಮಗಳ ಕಚೇರಿಗಳಾದ ದೂರಸಂಪರ್ಕ, ಅಂಚೆ ಕಚೇರಿ, ಬ್ಯಾಂಕುಗಳು, ಆರ್‍ಬಿಐ ನಿಯಂತ್ರಿಕ ಹಣಕಾಸು ಸಂಸ್ಥೆಗಳು, ರೈಲ್ವೇ ಮತ್ತು ತತ್ಸಂಬಂಧಿತ ಕಾರ್ಯಚಾರಣೆಗಳು ಕೆಲವು ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸತಕ್ಕದ್ದು.

• ಸರ್ಕಾರದ ಆದೇಶದ ಪ್ರಕಾರ ಸರ್ಕಾರೇತರ ಸಂಸ್ಥೆಗಳ ಕಛೇರಿಗಳು, ಇತರೆ ಎಲ್ಲಾ ಕಚೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.

ಜಿಲ್ಲೆಯಲ್ಲಿ ಮಾರ್ಚ್ 2020 ರಿಂದ ಮೇ 28 ರವರೆಗೆ ಮತ್ತು ಮತ್ತು 28 ಮೇ ರಂದು 522 ಹೊಸ ಪ್ರಕರಣಗಳು ಸೇರಿದಂತೆ ಒಟ್ಟು 40887 ಕೋವಿಡ್ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿರುತ್ತದೆ.

ಮೇ 27 ರವರೆಗೆ ಒಟ್ಟು 5,76,809 ಪರೀಕ್ಷೆಗಳನ್ನು ಮಾಡಲಾಗಿದ್ದು, 4,53,534 ಗಂಟಲು ದ್ರವದ ಮಾದರಿಗಳು ಆರ್‍ಟಿಪಿಸಿಆರ್ ಪರೀಕ್ಷೆಗಾಗಿ ಕಳುಹಿಸಿದ್ದು, 29173 ಪಾಸಿಟಿವ್ ಇರುತ್ತವೆ ಮತ್ತು ರ್ಯಾಪಿಡ್ ಅಂಟಿಜಿನ್ 1,22,588 ಪರೀಕ್ಷೆ ಮಾಡಲಾಗಿದ್ದು, 11,714 ಪಾಸಿಟಿವ್ ಇರುತ್ತವೆ.

ಜಿಲ್ಲೆಯಲ್ಲಿ ಈ ದಿನದವರೆಗೆ ಸಕ್ರಿಯ ಪ್ರಕರಣಗಳು 5,337 ಇರುತ್ತವೆ. ದಾವಣಗೆರೆ 2273, ಹರಿಹರ 665, ಜಗಳೂರು 376, ಚನ್ನಗಿರಿ 962, ಹೊನ್ನಾಳಿ 987, ಹೊರ ಜಿಲ್ಲೆ 74 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2021 ರ ಮೇ ಮಾಹೆಯಲ್ಲಿ 14,797 ಕೋವಿಡ್-19 ಪ್ರಕರಣಗಳು ದಾಖಲಾಗಿರುತ್ತವೆ.

ದಾವಣಗೆರೆ ಜಿಲ್ಲೆಯಲ್ಲಿ ಈ ದಿನದವರೆಗೆ ಒಟ್ಟು 21 ಮ್ಯುಕರ್‍ಮೈಕೋಸಿಸ್(ಬ್ಲಾಕ್ ಫಂಗಸ್) ಪ್ರಕರಣಗಳು ವರದಿಯಾಗಿವೆ. ಕೋವಿಡ್‍ನಿಂದ ಇದುವರೆಗೆ 342 ಜನ ಮೃತರಾಗಿದ್ದಾರೆ. ಎರಡನೇ ಅಲೆಯಲ್ಲಿ 78 ಜನರು ಮೃತ ಹೊಂದಿದ್ದು ಇದರಲ್ಲಿ ಪುರುಷರು 49 ಮಹಿಳೆಯರು 29 ಇದ್ದಾರೆ. ಹೋಂ ಐಸೋಲೇಷನ್ 2851, ಆಸ್ಪತ್ರೆಯಲ್ಲಿ 2486 ದಾಖಲಾಗಿದ್ದಾರೆ. 5337 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರನ್ನು ಮನವೊಲಿಸಿ ಸಿಸಿಸಿ ಗೆ ಕರೆತರಲಾಗುತ್ತದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸೋಂಕಿತರ ಕುರಿತು ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಮೇ. 15 ರಿಂದ 25 ರವರೆಗೆ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು ಕಳೆದ 2 ದಿನಗಳಿಂದ ಇಳಿಮುಖ ಕಾಣುತ್ತಿದೆ. ಪ್ರಸ್ತುತ 183 ಗ್ರಾಮಗಳಲ್ಲಿ ಸಕ್ರಿಯ ಪ್ರಕರಣಗಳು ಇರುವುದಿಲ್ಲ. 419 ಗ್ರಾಮಗಳಲ್ಲಿ 1 ರಿಂದ 5 ಪ್ರಕರಣಗಳು, 101 ಗ್ರಾಮಗಳಲ್ಲಿ 6 ಇಂದ 10 ಪ್ರಕರಣ ಮತ್ತು 74 ಗ್ರಾಮಗಳಲ್ಲಿ 10 ಕ್ಕಿಂತ ಹೆಚ್ಚು ಪ್ರಕರಣಗಳು ಇವೆ. 1343 ಜನರು ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಿಸಲಾಗಿದೆ. ಗ್ರಾಮಗಳಲ್ಲಿ ಸಾರ್ವಜನಿಕ ಪೂಜೆಗಳನ್ನು ನಿಷೇಧಿಸಲಾಗಿದೆ. ವಾರಕ್ಕೆರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತಿದೆ.

ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರವೀರಮಲ್ಲಪ್ಪ, ಡಿಹೆಚ್‍ಓ ಡಾ.ನಾಗರಾಜ್, ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending