ಬಹಿರಂಗ
ಡಾನಿಷ್ ಸಿದ್ದಿಖಿ- ಅಸಹಿಷ್ಣುತೆಗೆ ಮತ್ತೊಂದು ಬಲಿ
- ನಾ ದಿವಾಕರ
ಆಫ್ಘಾನಿಸ್ತಾನದ ಬಂಡುಕೋರರ ದಾಳಿಗೆ ಬಲಿಯಾದ ಭಾರತದ ಪತ್ರಿಕಾ ಛಾಯಾಗ್ರಾಹಕ ಡಾನಿಷ್ ಸಿದ್ದಿಖಿ ( 1983-2021 ) ಬಹುಶಃ ಜಗತ್ತಿನಾದ್ಯಂತ ಹೆಚ್ಚಾಗುತ್ತಿರುವ ಬಲಪಂಥೀಯ ಮತಾಂಧತೆ, ಅಸಹಿಷ್ಣುತೆ ಮತ್ತು ಉಲ್ಬಣಿಸುತ್ತಿರುವ ಹಿಂಸಾತ್ಮಕ ರಾಜಕಾರಣಕ್ಕೆ ಸಾಕ್ಷಿಯಾಗಿ, ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ.
ರಾಯ್ಟರ್ಸ್ ಸುದ್ದಿ ಸಂಸ್ಥೆಯ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ 38 ವರ್ಷದ ಡಾನಿಷ್ ಸಿದ್ದಿಖಿ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿದ್ದ ಸೇನೆ ಮತ್ತು ತಾಲಿಬಾನ್ ಉಗ್ರರ ನಡುವಿನ ಕಾಳಗವನ್ನು ಸೆರೆಹಿಡಿಯುತ್ತಿದ್ದ ವೇಳೆ, ತಾಲಿಬಾನ್ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಕಳೆದ ಹತ್ತು ವರ್ಷದಿಂದಲೂ ಈ ಸುದ್ದಿ ಸಂಸ್ಥೆಯೊಡನೆ ಕಾರ್ಯ ನಿರ್ವಹಿಸುತ್ತಿದ್ದ ಡಾನಿಷ್ 2018ರಲ್ಲಿ ಪುಲಿಟ್ಜರ್ ಪ್ರಶಸ್ತಿಗೆ ಭಾಜನರಾಗಿದ್ದರು.
ಇತ್ತೀಚೆಗೆ ಕೋವಿದ್ 2ನೆಯ ಅಲೆಯ ಸಂದರ್ಭದಲ್ಲಿ ಭಾರತದಲ್ಲಿ ಸಾವಿರಾರು ಅನಾಥ ಶವಗಳಿಗೆ ಸಾಮೂಹಿಕ ಶವಸಂಸ್ಕಾರ ಮಾಡಿದ ಚಿತ್ರಗಳನ್ನೂ ಸೆರೆಹಿಡಿದಿದ್ದ ಡಾನಿಷ್, ಕಳೆದ ವರ್ಷದ ದೆಹಲಿ ಗಲಭೆಗಳ ಸಂದರ್ಭದಲ್ಲೂ ತಮ್ಮ ಮನಮುಟ್ಟುವ ಛಾಯಾಚಿತ್ರಗಳ ಮೂಲಕ ವಾಸ್ತವಗಳನ್ನು ಜನರ ಮುಂದಿಟ್ಟಿದ್ದರು.
“ವಾಣಿಜ್ಯ, ವ್ಯಾಪಾರ ಮತ್ತು ರಾಜಕೀಯ ಚಟುವಟಿಕೆಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿಯುವುದಕ್ಕಿಂತಲೂ, ಸ್ಫೋಟಕ ಸುದ್ದಿಗಳ ಹಿಂದಿನ ಮಾನವೀಯ ಮುಖವನ್ನು ತಮ್ಮ ಕ್ಯಾಮರಾ ಕಣ್ಣಿನ ಮೂಲಕ ಸೆರೆಹಿಡಿದು ಜನರಿಗೆ ಮುಟ್ಟಿಸುವುದರಲ್ಲಿ ನನಗೆ ಹೆಚ್ಚಿನ ಖುಷಿ ಇದೆ ”ಏಂದು ಹೇಳುತ್ತಿದ್ದ ಡಾನಿಷ್ ಇಂತಹುದೇ ಚಿತ್ರೀಕರಣದ ಸಂದರ್ಭದಲ್ಲಿ ಅಮಾನುಷ ಶಕ್ತಿಗಳ ದಾಳಿಗೆ ಬಲಿಯಾಗಿರುವುದು ವಿಡಂಬನೆ ಎನಿಸುತ್ತದೆ.
ಜಗತ್ತಿನ ರಾಜಕಾರಣದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಹಿಂಸೆಗೆ ನಾನಾ ರೂಪಗಳು. ಪ್ರಭುತ್ವಗಳ ವಿರುದ್ಧ ಹೋರಾಡುವ ವಿಚ್ಚಿದ್ರಕಾರಿ ಶಕ್ತಿಗಳ ಹಿಂಸೆ ಒಂದೆಡೆಯಾದರೆ, ಪ್ರಜಾ ವಿಮೋಚನೆಯ ಹೆಸರಿನಲ್ಲಿ ದಂಗೆಯೆದ್ದು, ಪ್ರಭುತ್ವದ ಶಕ್ತಿಗೆ ಸರಿಸಮನಾಗಿ ಹೋರಾಡುತ್ತಾ ಸಮಾಜದಲ್ಲಿ ಹಿಂಸೆ, ಕ್ಷೋಭೆಯನ್ನು ಹರಡುವ ಉಗ್ರಗಾಮಿಗಳ ಹಿಂಸೆ ಮತ್ತೊಂದೆಡೆ.
ಸಾಮಾನ್ಯ ಜನರ ದೃಷ್ಟಿಯಿಂದ ನೋಡಿದಾಗ ಹಿಂಸೆ ಅಥವಾ ಹಿಂಸಾತ್ಮಕ ಕೃತ್ಯಗಳನ್ನು ನಿರ್ದಿಷ್ಟ ಚೌಕಟ್ಟಿನಲ್ಲಿ ಬಂಧಿಸಿಡಲು ಸಾಧ್ಯವೇ ಇಲ್ಲ. ತಾಲಿಬಾನ್ ಉಗ್ರರು ಆಫ್ಘಾನಿಸ್ತಾನದಲ್ಲಿ ನಡೆಸುತ್ತಿರುವ ಪೈಶಾಚಿಕ ಕೃತ್ಯಗಳು ಪಾಕಿಸ್ತಾನದ ಪೇಷಾವರದಲ್ಲೂ ಸಂಭವಿಸಿವೆ, ಭಾರತದ ಗುಜರಾತ್ನಲ್ಲೂ ಸಂಭವಿಸಿವೆ, ಮುಂಬಯಿಯಲ್ಲೂ ಘಟಿಸಿವೆ. 2020ರಲ್ಲಿ ಭಾರತದ ರಾಜಧಾನಿ ದೆಹಲಿಯಲ್ಲೂ ಸಂಭವಿಸಿದೆ.
ಈ ಹಿಂಸಾಕೃತ್ಯಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಉಗ್ರವಾದ, ಉಗ್ರಗಾಮಿ ಚಟುವಟಿಕೆ, ಭಯೋತ್ಪಾದನೆ, ಜಿಹಾದ್ ಎಂದು ವರ್ಗೀಕರಿಸುವ ಜಗತ್ತಿನ ಪ್ರಭುತ್ವಗಳು ಜನಸಾಮಾನ್ಯರ ಪ್ರತಿರೋಧದ ಧ್ವನಿಯನ್ನು ಅಡಗಿಸಲು ಇನ್ನೂ ಹೆಚ್ಚಿನ ಹಿಂಸಾತ್ಮಕ ಮಾರ್ಗಗಳನ್ನು ಅನುಸರಿಸುತ್ತಿವೆ. ನಾಗರಿಕ ಸಮಾಜ ಇದನ್ನು ಗಮನಿಸುತ್ತಲೂ ಇದೆ. ಹತ್ಯೆಯಲ್ಲಿ ಪರ್ಯಾವಸಾನಗೊಳ್ಳುವ ಹಿಂಸೆ ಪ್ರಧಾನವಾಗಿ ಕಾಣುತ್ತದೆ. ಆದರೆ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಹೋರಾಡುವ ಸಾರ್ವಭೌಮ ಪ್ರಜೆಗಳನ್ನು ಚಿತ್ರಹಿಂಸೆಗೊಳಪಡಿಸುವ ಪ್ರಭುತ್ವದ ಹಿಂಸಾತ್ಮಕ ಮಾರ್ಗಗಳು ಸಾರ್ವಜನಿಕ ಮಾನ್ಯತೆ ಪಡೆದುಬಿಡುತ್ತವೆ.
ಆಫ್ಘಾನಿಸ್ತಾನದಲ್ಲಿ ಇದು ಇನ್ನೂ ಹೆಚ್ಚು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂದು ಡಾನಿಷ್ ಸಿದ್ದಿಖಿ ಸಾವಿಗೆ ಸಂತಾಪ ಸೂಚಿಸುವ ಅಮೆರಿಕದ ಅಧ್ಯಕ್ಷರಾಗಲೀ, ಇತರ ಸಾಮ್ರಾಜ್ಯಶಾಹಿ ರಾಷ್ಟ್ರಗಳ ನಾಯಕರಾಗಲೀ ತಮ್ಮ ಬೆನ್ನ ಹಿಂದಿನ ಚರಿತ್ರೆ ಮತ್ತು ಸಮಕಾಲೀನ ಘಟನೆಗಳತ್ತ ಒಮ್ಮೆ ನೋಡಿದರೆ, ಈ ಸಮರವೀರರ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಗೆ ಬಲಿಯಾದ ಸಾವಿರಾರು, ಲಕ್ಷಾಂತರ ಜನರ ಶವಗಳ ಮೆರವಣಿಗೆಯೇ ಕಾಣುತ್ತದೆ.
ಇಂದು ಡಾನಿಷ್ ಕೊಲೆಗೆ ಕಾರಣರಾದ ತಾಲಿಬಾನ್ ಪಡೆಯೇ ಸಾಮ್ರಾಜ್ಯಶಾಹಿಯ , ಒಂದು ಕಾಲದ ಮುದ್ದಿನ, ಕೂಸು ಎನ್ನುವುದು ಚಾರಿತ್ರಿಕ ಸತ್ಯ. ಈ ತಾಲಿಬಾನ್ ಉಗ್ರರು ಇಸ್ಲಾಂ ಹೆಸರಿನಲ್ಲಿ ನಡೆಸುವ ನರಮೇಧಗಳಿಗೆ ಬಳಸಲಾಗುವ ಶಸ್ತ್ರಾಸ್ತ್ರಗಳ ಮೂಲವೇ ಅಮೆರಿಕದ ಪೆಂಟಗನ್. ಸಿರಿಯಾ, ಲೆಬನಾನ್, ಇರಾಕ್, ಯಮನ್ ಮತ್ತಿತರ ರಾಷ್ಟ್ರಗಳಲ್ಲಿ ಸಾಮ್ರಾಜ್ಯಗಳ ಡ್ರೋನ್ ದಾಳಿಗಳಿಗೆ ಬಲಿಯಾದ ಲಕ್ಷಾಂತರ ಅಮಾಯಕರ ಸಾಲಿಗೆ ತಾಲಿಬಾನ್ ತನ್ನದೂ ಒಂದಿಷ್ಟಿರಲಿ ಎಂದು ಶವಗಳನ್ನು ಸೇರಿಸುತ್ತಲೇ ಇರುತ್ತದೆ. ಡಾನಿಷ್ ಈ ಸಾವಿನ ಸರದಾರರ ಹರಕೆಯ ಕುರಿಯಂತೆ ಕಾಣುತ್ತಾರೆ.
ವಿಶ್ವದ ಎಲ್ಲ ಪ್ರಮುಖ ನಾಯಕರೂ ಡಾನಿಷ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊನೆಗೆ ತಾಲಿಬಾನ್ ಮುಖ್ಯಸ್ತರೂ ಸಹ ಸಂತಾಪ ವ್ಯಕ್ತಪಡಿಸುವ ಮೂಲಕ ಪಾಪಪ್ರಜ್ಞೆಯನ್ನು ತೊಳೆದುಕೊಂಡಿದ್ದಾಗಿದೆ. ಆದರೆ ಭಾರತದ ಪ್ರಜೆಯೊಬ್ಬ, ವಿದೇಶಿ ನೆಲದಲ್ಲಿ ತನ್ನ ವೃತ್ತಿಯಲ್ಲಿ ತೊಡಗಿರುವಾಗ ಉಗ್ರವಾದಿಗಳ ಧಾಳಿಗೆ ಬಲಿಯಾಗಿದ್ದರೂ ಭಾರತದ ಪ್ರಧಾನಿ, ವಿದೇಶಾಂಗ ಮಂತ್ರಿ ಅಥವಾ ಆಡಳಿತಾರೂಢ ಪಕ್ಷದ ನಾಯಕರು ವಿಷಾದವನ್ನೂ ವ್ಯಕ್ತಪಡಿಸದೆ ಇರುವುದನ್ನು ನೋಡಿದರೆ, ಡಾನಿಷ್ ಸಿದ್ದಿಖಿ #ಆತ್ಮನಿರ್ಭರ ಭಾರತದ ದೃಷ್ಟಿಯಲ್ಲಿ ಸಾವಿಗೆ/ಹತ್ಯೆಗೆ ಅರ್ಹನಾಗಿದ್ದ ವ್ಯಕ್ತಿ ಎನಿಸುತ್ತದೆ.
ಫಾದರ್ ಸ್ಟ್ಯಾನ್ ಸ್ವಾಮಿ ಅವರಂತೆ ಡಾನಿಷ್ ಸಿದ್ದಿಖಿಯೂ ಸಹ ಸಾವಿನ ಕದ ತಟ್ಟುತ್ತಿದ್ದ ಒಬ್ಬ ಸಂವೇದನಾಶೀಲ ಪ್ರಜೆ ಆಗಿದ್ದಿರಬಹುದು. ಹತ್ಯೆಯ ಹಿಂದಿನ ಹಿಂಸೆಗಿಂತಲೂ, ಹತ್ಯೆಯನ್ನು ಸಂಭ್ರಮಿಸುವ ಮನಸ್ಥಿತಿ ಮತ್ತು ಹತ್ಯೆಯ ಬಗ್ಗೆ ಮೌನ ವಹಿಸುವ ಮನಸ್ಥಿತಿ ಇನ್ನೂ ಹಿಂಸಾತ್ಮಕ ಅಲ್ಲವೇ ?
ಭಾರತಕ್ಕೆ ಇದೇನೂ ಹೊಸತಲ್ಲ. ಸಾವಿರಾರು ಸಿದ್ದಿಖಿಗಳು, ಸ್ವಾಮಿಗಳು, ನಿಯೋಗಿಗಳು, ಸಫ್ದಾರ್ ಹಷ್ಮಿಗಳು ಈ ದೇಶದ ಮಣ್ಣಲ್ಲಿ ಅನಾಥರಂತೆ ಮಣ್ಣಾಗಿ ಹೋಗಿದ್ದಾರೆ. ಕಳೆದ ವರ್ಷದ ಲಾಕ್ಡೌನ್ ವೇಳೆಯಲ್ಲಿ ಸಾವು ಬದುಕಿನೊಡನೆ ಸೆಣಸಾಡಿದ ವಲಸೆ ಕಾರ್ಮಿಕರು, ತಮ್ಮ ಮೂಲ ನೆಲೆಯಿಂದಲೇ ಉಚ್ಚಾಟಿಸಲ್ಪಟ್ಟು ನಿರಾಶ್ರಿತರಾದ ರೋಹಿಂಗ್ಯಾಗಳು, ವಾರಸುದಾರರಿಲ್ಲದೆ ಸಾಮೂಹಿಕವಾಗಿ ದಹಿಸಲ್ಪಟ್ಟ ಅಸಂಖ್ಯಾತ ಕೋವಿದ್ ಪೀಡಿತ ಶವಗಳು, ಗಂಗೆಯಲ್ಲಿ ತೇಲಿಬಂದ ಶವಗಳು, ಇವೆಲ್ಲವನ್ನೂ ತಮ್ಮ ಮಸೂರದಲ್ಲಿ ಬಂಧಿಸಿ ಸಾರ್ವಜನಿಕರ ಮುಂದಿಟ್ಟಿದ್ದ ಡಾನಿಷ್, ದೆಹಲಿ ಗಲಭೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ, ಕೈಕಟ್ಟಿ ನಿಂತಿದ್ದ ಪೊಲೀಸರ ಎದುರೇ ಪ್ರತಿಭಟನಕಾರರಿಗೆ ಪಿಸ್ತೂಲು ತೋರಿಸಿ ಹೆದರಿಸಿದ್ದ ಬಿಜೆಪಿ ನಾಯಕನ ಚಿತ್ರವನ್ನೂ ಸೆರೆಹಿಡಿದಿದ್ದರು. ಬಹುಶಃ ಸಾಯುವ ಅರ್ಹತೆ ಪಡೆಯಲು ಇಷ್ಟು ಸಾಕಾಗಿತ್ತು ಎನಿಸುತ್ತದೆ. ಡಾನಿಷ್ ಸಹ ಮತ್ತೊಂದು ಅನಾಥ ಶವವಾಗಿ ಅಂತ್ಯ ಕಂಡಿದ್ದಾರೆ.
ಹಥ್ರಾಸ್ನಲ್ಲಿ ನಡುರಾತ್ರಿಯಲ್ಲಿ ದಹಿಸಲ್ಪಟ್ಟ ಅತ್ಯಾಚಾರಕ್ಕೀಡಾದ ಯುವತಿಗೂ, ಜಾಮೀನು ದೊರೆಯದೆ ಸೆರೆವಾಸದಲ್ಲೇ ಅಂತ್ಯ ಕಂಡ ರೋಗಪೀಡಿತ ಸ್ಟ್ಯಾನ್ ಸ್ವಾಮಿಗೂ, ದನದ ಮಾಂಸದ ತುಂಡನ್ನು ಮನೆಯಲ್ಲಿಟ್ಟ ತಪ್ಪಿಗಾಗಿ ಹತ್ಯೆಗೀಡಾದ ಅಖ್ಲಾಕ್ಗೂ, ತಾಲಿಬಾನ್ ಉಗ್ರರ ಧಾಳಿಗೆ ಬಲಿಯಾದ ಡಾನಿಷ್ಗೂ ವ್ಯತ್ಯಾಸವೇನಿದೆ ? ಸಾವನ್ನು ಸಾಪೇಕ್ಷಗೊಳಿಸುವ ವಿಕೃತ ಪರಂಪರೆಯೊಂದನ್ನು ನಾವು, ಭಾರತೀಯರು ಪೋಷಿಸಿಕೊಂಡೇ ಬಂದಿದ್ದೇವೆ.
ಹಾಗೆಯೇ ನಮಗೆ ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ ಸತ್ತ 24 ಅಮಾಯಕರೂ ನಗಣ್ಯ ಎನಿಸಿಬಿಡುತ್ತಾರೆ. ಹಸಿವಿನಿಂದ ಕಂಗೆಟ್ಟು ನಡುಬೀದಿಯಲ್ಲೇ ಸತ್ತ ವಲಸೆ ಕಾರ್ಮಿಕರೂ ನಿಕೃಷ್ಟರಾಗಿಬಿಡುತ್ತಾರೆ. ಆತ್ಮಹತ್ಯೆಗೆ ಶರಣಾಗುವ ಲಕ್ಷಾಂತರ ರೈತರೂ ನಿರ್ಲಕ್ಷಿತರಾಗಿಬಿಡುತ್ತಾರೆ.
ನವ ಉದಾರವಾದ, ಬಲಪಂಥೀಯ ರಾಜಕಾರಣ, ಜಾತಿ ದ್ವೇಷ, ಮತಾಂಧತೆ, ದ್ವೇಷ ರಾಜಕಾರಣ ಮತ್ತು ಇವೆಲ್ಲವನ್ನೂ ಕಾಪಾಡಲು ಅಗತ್ಯವಾದ ಹಿಂಸಾತ್ಮಕ ಮನಸ್ಥಿತಿ ಇಂದು ವಿಭಿನ್ನ ಧಾರೆಗಳಲ್ಲಿ ನಮ್ಮ ನಡುವೆ ಪ್ರವಹಿಸುತ್ತಿದೆ. ದೇಶಾದ್ಯಂತ ಕೋವಿದ್ ಮೊದಲನೆ ಅಲೆಯ ಸಂದರ್ಭದಲ್ಲಿ ನೂರಾರು ವಲಸೆ ಕಾರ್ಮಿಕರು ಕೂಳಿಲ್ಲದೆ ಅನಾಥರಂತೆ ಸಾವನ್ನಪ್ಪಿದ್ದರು, ಎರಡನೆ ಅಲೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ, ಆಮ್ಲಜನಕದ ಕೊರತೆಯಿಂದ ಸಾವಿರಾರು ಜನರು ಸಾವನ್ನಪ್ಪಿದ್ದಾರೆ.
ಆದರೆ ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಸಂಸತ್ತಿನಲ್ಲಿ ಹೇಳುವ ಮೂಲಕ ಕೇಂದ್ರ ಸರ್ಕಾರ ಕೈತೊಳೆದುಕೊಳ್ಳುತ್ತದೆ. ತಾಲಿಬಾನ್ ಕ್ರೌರ್ಯಕ್ಕೂ ಈ ಬೌದ್ಧಿಕ ಕ್ರೌರ್ಯಕ್ಕೂ ವ್ಯತ್ಯಾಸವೇನಾದರೂ ಕಾಣಲು ಸಾಧ್ಯವೇ ? ಒಟ್ಟಿನಲ್ಲಿ ಸಾಮಾನ್ಯ ಜನರ ಸಾವು ಸ್ವೀಕೃತವಾದ ಒಂದು ವಿದ್ಯಮಾನ, ಕೆಲವೊಮ್ಮೆ ಸ್ವೀಕಾರಾರ್ಹ, ಕೆಲವೊಮ್ಮೆ ಅಪೇಕ್ಷಿತ, ಕೆಲವೊಮ್ಮೆ ನಿರೀಕ್ಷಿತ ಇನ್ನು ಕೆಲವೊಮ್ಮೆ ನಿಗದಿತ. ಹೌದಲ್ಲವೇ ?
ಹಾಗಾಗಿಯೇ ಡಾನಿಷ್ ಸಿದ್ದಿಖಿ ಒಬ್ಬ ಹುತಾತ್ಮನಾಗಲಿಲ್ಲ. ವಿದೇಶಿ ಉಗ್ರವಾದಿಗಳ ಗುಂಡೇಟಿಗೆ, ವಿದೇಶಿ ನೆಲದಲ್ಲೇ ಬಲಿಯಾದ ಭಾರತದ ಪತ್ರಿಕಾ ಛಾಯಾಗ್ರಾಹಕನೊಬ್ಬನಿಗೆ ರಾಷ್ಟ್ರೀಯ ಸಮ್ಮಾನ ದೊರೆಯಲಿಲ್ಲ. ರಾಷ್ಟ್ರೀಯ ಸಂತಾಪವೂ ದೊರೆಯಲಿಲ್ಲ. ದ್ವೇಷ ರಾಜಕಾರಣದ ಮುದ್ದು ಕೂಸುಗಳು ಸಾಮಾಜಿಕ ತಾಣಗಳಲ್ಲಿ ಸಂಭ್ರಮಿಸಿ, ಕೇಕೆ ಹಾಕಿದ್ದವು. ಆಫ್ಘಾನಿಸ್ತಾನದ ಬಲಿಪೀಠದಲ್ಲಿ, ತಾಲಿಬಾನ್ ಅರಣ್ಯ ನ್ಯಾಯಕ್ಕೆ ಬಲಿಯಾದ ಡಾನಿಷ್ ಸಿದ್ದಿಖಿ , #ಆತ್ಮನಿರ್ಭರ ಭಾರತದ ದೃಷ್ಟಿಯಲ್ಲಿ ಓರ್ವ ಮುಸ್ಲಿಂ ಆಗಿಬಿಟ್ಟ, ಪ್ರತಿರೋಧದ ದನಿಯಾಗಿಬಿಟ್ಟ, ನಮ್ಮ ಸ್ವಘೋಷಿತ ದೇಶಪ್ರೇಮದ ವ್ಯಾಪ್ತಿಯಿಂದ ಹೊರತಾಗಿಬಿಟ್ಟ.
ಹಾಗಾಗಿ ಕ್ಯಾಮರಾ ಹಿಡಿದ ಈ ಸೇನಾನಿ ಶಸ್ತ್ರ ಹಿಡಿದ ಸೇನಾನಿಗಿಂತಲೂ ಭಿನ್ನವಾಗಿ ಕಂಡುಬಿಟ್ಟ. ತ್ರಿವರ್ಣ ಧ್ಜಜದ ಹೊದಿಕೆಗಾಗಲೀ, ಭಾವೈಕ್ಯತೆಯ ಸಂಕೇತವಾಗಿ ಸಮ್ಮಾನಕ್ಕಾಗಲೀ ಹಕ್ಕುದಾರನಾಗಲಿಲ್ಲ. ಕೊನೆಯ ಪಕ್ಷ ಆಳುವ ವರ್ಗಗಳ ಸಂತಾಪದ ಮಾತುಗಳಿಗೂ ಅರ್ಹನಾಗಲಿಲ್ಲ.
ಇದೇನೂ ಅತಿಶಯ ಎನಿಸುವುದಿಲ್ಲ. ಏಕೆಂದರೆ ಈ ಪವಿತ್ರ ಭೂಮಿಯಲ್ಲೇ ಕಳೆದ ಐದಾರು ವರ್ಷಗಳಲ್ಲಿ ಪತ್ರಕರ್ತರ ಮೇಲೆ 200ಕ್ಕೂ ಹೆಚ್ಚು ಧಾಳಿಗಳು ನಡೆದಿವೆ. 2014-19ರ ಅವಧಿಯಲ್ಲಿ 40 ಪತ್ರಕರ್ತರು ಹತ್ಯೆಗೀಡಾಗಿದ್ದಾರೆ. ಇವರ ಪೈಕಿ 21 ಮೃತರು ನೇರ ಪತ್ರಿಕಾ ಧರ್ಮವನ್ನೇ ಪಾಲಿಸುತ್ತಿದ್ದವರಾಗಿದ್ದಾರೆ.
2010ರ ನಂತರ ದಾಖಲಾಗಿರುವ ಪತ್ರಕರ್ತರ ಹತ್ಯೆಯ 30 ಪ್ರಕರಣಗಳಲ್ಲಿ ಮೂರರಲ್ಲಿ ಮಾತ್ರವೇ ಶಿಕ್ಷೆಯಾಗಿದೆ. 2014ರ ನಂತರ ಯಾವುದೇ ಶಿಕ್ಷೆಯಾಗಿಲ್ಲ. ಒಂದು ಅಧ್ಯಯನದ ಪ್ರಕಾರ 2014ರ ನಂತರ 19 ಮಹಿಳಾ ಪತ್ರಕರ್ತರು ಹಲ್ಲೆಗೊಳಗಾಗಿದ್ದಾರೆ. ಮಹಿಳಾ ಆಯೋಗಕ್ಕಾಗಲೀ, ಸಚಿವಾಲಯಕ್ಕಾಗಲೀ ಇದು ಗಂಭೀರ ವಿಚಾರ ಎನಿಸಿಯೇ ಇಲ್ಲ.
ಕಳೆದ ಏಳು ವರ್ಷಗಳಲ್ಲಿ ಮಾಧ್ಯಮ ವಲಯದಲ್ಲಿ ಸೃಷ್ಟಿಯಾಗಿರುವ ಧೃವೀಕರಣವೂ ಈ ನಿಷ್ಕ್ರಿಯತೆಗೆ ಕಾರಣವಾಗಿದೆ. ರಾಜಕೀಯ ಪಕ್ಷಗಳ, ನಾಯಕರ ಮತ್ತು ಅಧಿಕಾರ ಕೇಂದ್ರಕ್ಕೆ ನಿಕಟ ಸಂಪರ್ಕ ಹೊಂದಿರುವವರ ಮಾಲಿಕತ್ವದಲ್ಲಿರುವ ಸುದ್ದಿ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರಕರ್ತರ ಮೇಲಿನ ಧಾಳಿಗಳು ರಾಜಕೀಯ ಲೆಕ್ಕಾಚಾರಗಳಾಗಿ ಮಾತ್ರವೇ ಕಾಣುತ್ತದೆ.
“ ಸುದ್ದಿಯ ಸಂಸ್ಕರಣ ಮತ್ತು ಅಭಿಪ್ರಾಯ ಉತ್ಪಾದನೆ ”ಯ ಕಾರ್ಖಾನೆಗಳಂತೆ ಕಾರ್ಯ ನಿರ್ವಹಿಸುತ್ತಿರುವ ಬಹುಪಾಲು ಸುದ್ದಿಮನೆಗಳು ಮತ್ತು ಪತ್ರಿಕೆಗಳು ತಮ್ಮ ಪತ್ರಿಕೋದ್ಯಮದ ಸಂಹಿತೆಗಳಿಗಿಂತಲೂ, ತಾವು ಆಶ್ರಯಿಸುವ ರಾಜಕೀಯ ಅಧಿಕಾರ ಕೇಂದ್ರಗಳ ಸಂಹಿತೆಗಳನ್ನು ಹೆಚ್ಚು ನಿಷ್ಠೆಯಿಂದ ಪಾಲಿಸುತ್ತಿರುವುದನ್ನೂ ಈ ಸಂದರ್ಭದಲ್ಲಿ ಗಮನಿಸಬೇಕಿದೆ. ಕರ್ನಾಟಕದ ಗೌರಿ ಲಂಕೇಶ್, ಶ್ರೀನಗರದ ಶೂಜತ್ ಬುಖಾರಿ, ದೂರದರ್ಶನದ ಛಾಯಾಗ್ರಾಹಕ ಅಚ್ಯುತಾನಂದಸಾಹು (ಮಾವೋವಾದಿಗಳ ಗುಂಡೇಟಿಗೆ ಬಲಿಯಾದ್ದರು), ಈ ಮೂರು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಪ್ರಸಂಗಗಳಲ್ಲಿ ಸಾಮಾನ್ಯವಾಗಿ ರಾಜಕೀಯ ಅಕ್ರಮಗಳ ವಿರುದ್ಧ ಮತ್ತು ಭೂಮಾಫಿಯಾ, ಜಲ ಮಾಫಿಯಾ, ಹೆಂಡದ ದೊರೆಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಪತ್ರಕರ್ತರೇ ಧಾಳಿಗೊಳಗಾಗಿದ್ದಾರೆ. ಈ ವಿಚಾರದಲ್ಲಿ ಮಾತ್ರ ನಮ್ಮ ದೇಶ ಅಪ್ಪಟ ಜಾತ್ಯತೀತ.
2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಗಲಭೆಗಳ ಹಿನ್ನೆಲೆಯಲ್ಲಿ 14 ಪತ್ರಕರ್ತರ ವಿರುದ್ಧ ದೆಹಲಿ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿರುವುದು ಕಾಕತಾಳೀಯವೇನಲ್ಲ. ಇದೇ ಸಂದರ್ಭದಲ್ಲಿ ಸಾರ್ವಜನಿಕವಾಗಿಯೇ ಪಿಸ್ತೂಲು ತೋರಿಸಿದ ವ್ಯಕ್ತಿ ಸರ್ವ ಸ್ವತಂತ್ರನಾಗಿದ್ದರೆ, “ ಗೋಲಿ ಮಾರೋ ಸಾಲೋಂಕೋ ” ಎಂದು ಮುಕ್ತವಾಗಿ ಕರೆ ನೀಡಿದ ವ್ಯಕ್ತಿ ಸಾಂವಿಧಾನಿಕ ರಕ್ಷಣೆ ಪಡೆದಿದ್ದಾರೆ. ಇಷ್ಟರ ನಡುವೆ ಕಳೆದ ಏಳು ವರ್ಷಗಳಲ್ಲಿ ದೇಶಾದ್ಯಂತ 200 ಮಾಹಿತಿ ಹಕ್ಕು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಈ ಕಾರ್ಯಕರ್ತರು ಯಾವುದೇ ಮಾಧ್ಯಮ ಸಮೂಹಕ್ಕೆ ಸೇರದೆ, ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದರಿಂದ ಬಹುಶಃ ಗಣನೆಗೇ ಬರುವುದಿಲ್ಲ ಎನಿಸುತ್ತದೆ.
ಮಾಧ್ಯಮ ವಲಯದ ಈ ಬಂಧುಗಳ ಹತ್ಯೆಗಳಿಗೆ ಮತ್ತು ಅವರ ಮೇಲೆ ನಿರಂತರವಾಗಿ ನಡೆಯುತ್ತಿರುವ ಧಾಳಿಗಳ ಬಗ್ಗೆ ಮಾಧ್ಯಮ ಸಮೂಹವೇ ಮೌನವಾಗಿರುವುದನ್ನು ಗಮನಿಸಿದರೆ, ಈ ದೇಶದ ಅಧಿಕಾರ ರಾಜಕಾರಣ ಮತ್ತು ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳು ಮಾಧ್ಯಮ ವಲಯದ ಮೇಲೆ ಹೇಗೆ ನಿಯಂತ್ರಣ ಸಾಧಿಸಿವೆ ಎನ್ನುವುದು ಸ್ಪಷ್ಟವಾಗುತ್ತದೆ.
ಕೋವಿದ್ ಸಾವುಗಳ ಬಗ್ಗೆ ಮತ್ತು ಸರ್ಕಾರ ಕೋವಿದ್ ಸಾವುಗಳನ್ನು ಬಚ್ಚಿಡುತ್ತಿರುವುದನ್ನು ಸವಿಸ್ತಾರವಾಗಿ ವರದಿ ಮಾಡಿದ ದೈನಿಕ್ ಭಾಸ್ಕರ್ ಪತ್ರಿಕಾ ಸಮೂಹ ಈಗ ಆದಾಯ ತೆರಿಗೆ ಧಾಳಿಗೆ ಒಳಗಾಗಿದೆ. 2014ರಲ್ಲಿ ನರೇಂದ್ರ ಮೋದಿಯವರನ್ನು ವೈಭವೀಕರಿಸಿದಾಗ ಪ್ರಾಮಾಣಿಕವಾಗಿ ಕಂಡುಬಂದಿದ್ದ ಈ ಪತ್ರಿಕೆ ಈಗ ಪ್ರತಿರೋಧದ ಧ್ವನಿಯಾಗಿ ಶಿಕ್ಷೆಗೊಳಗಾಗುತ್ತಿದೆ. ಕರ್ನಾಟಕದಲ್ಲಿ ಪವರ್ ಟಿವಿ ವಾಹಿನಿಯ ಪ್ರಕರಣವನ್ನೂ ಇಲ್ಲಿ ಸ್ಮರಿಸಬಹುದು.
ಸ್ವತಂತ್ರ ಮಾಧ್ಯಮದ ಪರಿಕಲ್ಪನೆಯನ್ನೇ ಬದಿಗೊತ್ತಿ ಈ ರೀತಿಯ ರಾಜಕೀಯ ಧೃವೀಕರಣಕ್ಕೊಳಗಾಗಿರುವುದರಿಂದಲೇ ಮಾಧ್ಯಮ ವಲಯ ಇಂದು ಅತಿ ಹೆಚ್ಚು ಆಕ್ರಮಣಗಳನ್ನು ಎದುರಿಸುತ್ತಿದೆ. ಇದರ ಹೊರೆಯನ್ನು ಪತ್ರಕರ್ತರು ಹೊರುತ್ತಿದ್ದಾರೆ. ಆಳುವ ವರ್ಗಗಳ ಪರ, ಕಾರ್ಪೋರೇಟ್ ಪರ , ಭೂಮಾಫಿಯಾ ಮತ್ತಿತರ ಅಕ್ರಮ ಸಂತಾನಗಳ ಪರ ಇರುವ ಶಕ್ತಿಗಳು ಪ್ರಾಮಾಣಿಕ ವರದಿಗಾರರನ್ನು, ಮಾಹಿತಿ ಹಕ್ಕು ಕಾರ್ಯಕರ್ತರನ್ನು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿ ತಮ್ಮ ಅಕ್ರಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಿವೆ. #ಆತ್ಮನಿರ್ಭರ ಭಾರತದಲ್ಲಿ ಇಂತಹ ಶಕ್ತಿಗಳಿಗೆ ಹೆಚ್ಚು ನಿರ್ಭರವಾಗುತ್ತಿವೆ. ಪ್ರಾಮಾಣಿಕತೆ ದುರ್ಭರವಾಗುತ್ತಿವೆ. ಮತಾಂಧತೆ, ಜಾತಿ ದ್ವೇಷ ಮತ್ತು ಕೋಮುವಾದದ ಛಾಯೆ ಸಮಾಜದ ಮೇಲೆ ದಟ್ಟವಾಗಿ ಆವರಿಸುತ್ತಿರುವಂತೆಯೇ, ಈ ಅನ್ಯಾಯಗಳನ್ನು ಪ್ರಶ್ನಿಸುವ ವ್ಯವಧಾನವನ್ನೂ ನಮ್ಮ ಸುತ್ತಲಿನ ಸಮಾಜ ಕಳೆದುಕೊಳ್ಳುತ್ತಿದೆ.
ಈ ಕಗ್ಗೊಲೆಗಳ ವಿರುದ್ಧ, ರಾಜಕೀಯ ಪ್ರೇರಿತ, ದ್ವೇಷಪೂರಿತ, ಜಾತಿ ಪ್ರೇರಿತ ಹತ್ಯೆಗಳ ವಿರುದ್ಧ ನಾವು ಧ್ವನಿ ಎತ್ತಿ ಪ್ರತಿರೋಧ ವ್ಯಕ್ತಪಡಿಸಿದ್ದಲ್ಲಿ ಇಂದು ಡಾನಿಷ್ ಸಿದ್ದಿಖಿ ಅನಾಥ ಶವ ಆಗುತ್ತಿರಲಿಲ್ಲ. ಸುಶಿಕ್ಷಿತ ಎಂದು ಬೆನ್ನುತಟ್ಟಿಕೊಳ್ಳುವ ದೇಶದ ಬೃಹತ್ ಬೌದ್ಧಿಕ ವಲಯ ಇಂದು ಈ ನಿಷ್ಕ್ರಿಯತೆಯಿಂದ ಬಳಲುತ್ತಿದೆ. ಇದು ವಿಚ್ಚಿದ್ರಕಾರಿ ಶಕ್ತಿಗಳ ಪ್ರಾಬಲ್ಯವನ್ನು ಹೆಚ್ಚಿಸುತ್ತಿದೆ. ದುರಂತ ಎಂದರೆ ಪತ್ರಿಕಾ ಧರ್ಮ ಅಥವಾ ಮಾಧ್ಯಮ ಸಂಹಿತೆಯನ್ನು ಪಾಲಿಸಬೇಕಾದ ನಮ್ಮ ಸುದ್ದಿಮನೆಗಳೂ ತಮ್ಮ ನೈತಿಕ ಹೊಣೆಗಾರಿಕೆಯಿಂದ ವಿಮುಖವಾಗಿವೆ. ಡಾನಿಷ್ ಹತ್ಯೆಯನ್ನು ರಂಜನೀಯವಾಗಿ ಬಿತ್ತರಿಸುವ ಸುದ್ದಿಮನೆಗಳ ನಿರೂಪಕರಿಗೆ ನಮ್ಮ ನೆಲದಲ್ಲೇ ಅನಾಥರಾಗಿ ಮಡಿದ 200 ಪತ್ರಕರ್ತರ ಸಾವು ಗಣನೆಗೇ ಬರುವುದಿಲ್ಲ. ಮಾಧ್ಯಮ ಲೋಕದ ಈ ನಿರ್ದಯಿ ನಿಷ್ಕ್ರಿಯತೆ ಮತ್ತು ವಂದಿಮಾಗಧ ಧೋರಣೆಯೇ ಡಾನಿಷ್ ಸಿದ್ದಿಖಿ ಅಂತಹ ಅದ್ಭುತ ಪ್ರತಿಭೆಗಳಿಗೆ ಮಾರಕವಾಗುತ್ತದೆ.
ಜಾತೀಯತೆ, ಮತಾಂಧತೆ ಮತ್ತು ಹುಸಿ ದೇಶಪ್ರೇಮದ ಗುಂಗಿನಲ್ಲಿ ಬಹುಪಾಲು ಸುದ್ದಿಮನೆಗಳು, ಮಾಧ್ಯಮಗಳು ತಮ್ಮ ಸ್ವ ಪ್ರಜ್ಞೆಯನ್ನು ಮಾರಿಕೊಂಡಿವೆ, ಬಹಳಷ್ಟು ಮಾಧ್ಯಮ ಬಂಧುಗಳು ತಮ್ಮ ವಿವೇಕವನ್ನು ಒತ್ತೆ ಇಟ್ಟಿದ್ದಾರೆ, ತಮ್ಮ ವಿವೇಚನೆಯನ್ನು ಕಳೆದುಕೊಂಡಿದ್ದಾರೆ, ಸ್ವಾಮಿನಿಷ್ಠೆಗೆ ಬದ್ಧರಾಗಿ ವೃತ್ತಿನಿಷ್ಠೆಯನ್ನು ಕಳೆದುಕೊಂಡಿದ್ದಾರೆ. ಹಾಗಾಗಿಯೇ ಅಸಹಿಷ್ಣುತೆಯನ್ನೂ ಸಹ ಸಹನೀಯವಾಗಿಸುತ್ತಿದ್ದಾರೆ. ಆದರೆ ಈ ಪಾಪಪ್ರಜ್ಞೆ ಸಾರ್ವಜನಿಕರನ್ನಾದರೂ ಕಾಡುವಂತಾದರೆ, ಆಫ್ಘಾನ್ ನೆಲದಲ್ಲಿ ಉಗ್ರಗಾಮಿಗಳ ಧಾಳಿಗೆ ಬಲಿಯಾದ ಡಾನಿಷ್ ಸಿದ್ದಿಖಿಗೆ ಶ್ರದ್ಧಾಂಜಲಿ ಅರ್ಪಿಸುವ ಅರ್ಹತೆಯನ್ನಾದರೂ ಪಡೆಯಬಹುದೇನೋ !!!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



