ಬಹಿರಂಗ
ಡಾನಿಷ್ ಸಿದ್ದಿಖಿ- ಅಸಹಿಷ್ಣುತೆಗೆ ಮತ್ತೊಂದು ಬಲಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/07/Danish-Siddiqui_suddidina.jpg&description=ಡಾನಿಷ್ ಸಿದ್ದಿಖಿ- ಅಸಹಿಷ್ಣುತೆಗೆ ಮತ್ತೊಂದು ಬಲಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/07/Danish-Siddiqui_suddidina.jpg&description=ಡಾನಿಷ್ ಸಿದ್ದಿಖಿ- ಅಸಹಿಷ್ಣುತೆಗೆ ಮತ್ತೊಂದು ಬಲಿ', 'pinterestShare', 'width=750,height=350'); return false;" title="Pin This Post">
- ನಾ ದಿವಾಕರ
ಆಫ್ಘಾನಿಸ್ತಾನದ ಬಂಡುಕೋರರ ದಾಳಿಗೆ ಬಲಿಯಾದ ಭಾರತದ ಪತ್ರಿಕಾ ಛಾಯಾಗ್ರಾಹಕ ಡಾನಿಷ್ ಸಿದ್ದಿಖಿ ( 1983-2021 ) ಬಹುಶಃ ಜಗತ್ತಿನಾದ್ಯಂತ ಹೆಚ್ಚಾಗುತ್ತಿರುವ ಬಲಪಂಥೀಯ ಮತಾಂಧತೆ, ಅಸಹಿಷ್ಣುತೆ ಮತ್ತು ಉಲ್ಬಣಿಸುತ್ತಿರುವ ಹಿಂಸಾತ್ಮಕ ರಾಜಕಾರಣಕ್ಕೆ ಸಾಕ್ಷಿಯಾಗಿ, ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ.
ರಾಯ್ಟರ್ಸ್ ಸುದ್ದಿ ಸಂಸ್ಥೆಯ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ 38 ವರ್ಷದ ಡಾನಿಷ್ ಸಿದ್ದಿಖಿ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿದ್ದ ಸೇನೆ ಮತ್ತು ತಾಲಿಬಾನ್ ಉಗ್ರರ ನಡುವಿನ ಕಾಳಗವನ್ನು ಸೆರೆಹಿಡಿಯುತ್ತಿದ್ದ ವೇಳೆ, ತಾಲಿಬಾನ್ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಕಳೆದ ಹತ್ತು ವರ್ಷದಿಂದಲೂ ಈ ಸುದ್ದಿ ಸಂಸ್ಥೆಯೊಡನೆ ಕಾರ್ಯ ನಿರ್ವಹಿಸುತ್ತಿದ್ದ ಡಾನಿಷ್ 2018ರಲ್ಲಿ ಪುಲಿಟ್ಜರ್ ಪ್ರಶಸ್ತಿಗೆ ಭಾಜನರಾಗಿದ್ದರು.
ಇತ್ತೀಚೆಗೆ ಕೋವಿದ್ 2ನೆಯ ಅಲೆಯ ಸಂದರ್ಭದಲ್ಲಿ ಭಾರತದಲ್ಲಿ ಸಾವಿರಾರು ಅನಾಥ ಶವಗಳಿಗೆ ಸಾಮೂಹಿಕ ಶವಸಂಸ್ಕಾರ ಮಾಡಿದ ಚಿತ್ರಗಳನ್ನೂ ಸೆರೆಹಿಡಿದಿದ್ದ ಡಾನಿಷ್, ಕಳೆದ ವರ್ಷದ ದೆಹಲಿ ಗಲಭೆಗಳ ಸಂದರ್ಭದಲ್ಲೂ ತಮ್ಮ ಮನಮುಟ್ಟುವ ಛಾಯಾಚಿತ್ರಗಳ ಮೂಲಕ ವಾಸ್ತವಗಳನ್ನು ಜನರ ಮುಂದಿಟ್ಟಿದ್ದರು.
“ವಾಣಿಜ್ಯ, ವ್ಯಾಪಾರ ಮತ್ತು ರಾಜಕೀಯ ಚಟುವಟಿಕೆಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿಯುವುದಕ್ಕಿಂತಲೂ, ಸ್ಫೋಟಕ ಸುದ್ದಿಗಳ ಹಿಂದಿನ ಮಾನವೀಯ ಮುಖವನ್ನು ತಮ್ಮ ಕ್ಯಾಮರಾ ಕಣ್ಣಿನ ಮೂಲಕ ಸೆರೆಹಿಡಿದು ಜನರಿಗೆ ಮುಟ್ಟಿಸುವುದರಲ್ಲಿ ನನಗೆ ಹೆಚ್ಚಿನ ಖುಷಿ ಇದೆ ”ಏಂದು ಹೇಳುತ್ತಿದ್ದ ಡಾನಿಷ್ ಇಂತಹುದೇ ಚಿತ್ರೀಕರಣದ ಸಂದರ್ಭದಲ್ಲಿ ಅಮಾನುಷ ಶಕ್ತಿಗಳ ದಾಳಿಗೆ ಬಲಿಯಾಗಿರುವುದು ವಿಡಂಬನೆ ಎನಿಸುತ್ತದೆ.
ಜಗತ್ತಿನ ರಾಜಕಾರಣದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಹಿಂಸೆಗೆ ನಾನಾ ರೂಪಗಳು. ಪ್ರಭುತ್ವಗಳ ವಿರುದ್ಧ ಹೋರಾಡುವ ವಿಚ್ಚಿದ್ರಕಾರಿ ಶಕ್ತಿಗಳ ಹಿಂಸೆ ಒಂದೆಡೆಯಾದರೆ, ಪ್ರಜಾ ವಿಮೋಚನೆಯ ಹೆಸರಿನಲ್ಲಿ ದಂಗೆಯೆದ್ದು, ಪ್ರಭುತ್ವದ ಶಕ್ತಿಗೆ ಸರಿಸಮನಾಗಿ ಹೋರಾಡುತ್ತಾ ಸಮಾಜದಲ್ಲಿ ಹಿಂಸೆ, ಕ್ಷೋಭೆಯನ್ನು ಹರಡುವ ಉಗ್ರಗಾಮಿಗಳ ಹಿಂಸೆ ಮತ್ತೊಂದೆಡೆ.
ಸಾಮಾನ್ಯ ಜನರ ದೃಷ್ಟಿಯಿಂದ ನೋಡಿದಾಗ ಹಿಂಸೆ ಅಥವಾ ಹಿಂಸಾತ್ಮಕ ಕೃತ್ಯಗಳನ್ನು ನಿರ್ದಿಷ್ಟ ಚೌಕಟ್ಟಿನಲ್ಲಿ ಬಂಧಿಸಿಡಲು ಸಾಧ್ಯವೇ ಇಲ್ಲ. ತಾಲಿಬಾನ್ ಉಗ್ರರು ಆಫ್ಘಾನಿಸ್ತಾನದಲ್ಲಿ ನಡೆಸುತ್ತಿರುವ ಪೈಶಾಚಿಕ ಕೃತ್ಯಗಳು ಪಾಕಿಸ್ತಾನದ ಪೇಷಾವರದಲ್ಲೂ ಸಂಭವಿಸಿವೆ, ಭಾರತದ ಗುಜರಾತ್ನಲ್ಲೂ ಸಂಭವಿಸಿವೆ, ಮುಂಬಯಿಯಲ್ಲೂ ಘಟಿಸಿವೆ. 2020ರಲ್ಲಿ ಭಾರತದ ರಾಜಧಾನಿ ದೆಹಲಿಯಲ್ಲೂ ಸಂಭವಿಸಿದೆ.
ಈ ಹಿಂಸಾಕೃತ್ಯಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಉಗ್ರವಾದ, ಉಗ್ರಗಾಮಿ ಚಟುವಟಿಕೆ, ಭಯೋತ್ಪಾದನೆ, ಜಿಹಾದ್ ಎಂದು ವರ್ಗೀಕರಿಸುವ ಜಗತ್ತಿನ ಪ್ರಭುತ್ವಗಳು ಜನಸಾಮಾನ್ಯರ ಪ್ರತಿರೋಧದ ಧ್ವನಿಯನ್ನು ಅಡಗಿಸಲು ಇನ್ನೂ ಹೆಚ್ಚಿನ ಹಿಂಸಾತ್ಮಕ ಮಾರ್ಗಗಳನ್ನು ಅನುಸರಿಸುತ್ತಿವೆ. ನಾಗರಿಕ ಸಮಾಜ ಇದನ್ನು ಗಮನಿಸುತ್ತಲೂ ಇದೆ. ಹತ್ಯೆಯಲ್ಲಿ ಪರ್ಯಾವಸಾನಗೊಳ್ಳುವ ಹಿಂಸೆ ಪ್ರಧಾನವಾಗಿ ಕಾಣುತ್ತದೆ. ಆದರೆ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಹೋರಾಡುವ ಸಾರ್ವಭೌಮ ಪ್ರಜೆಗಳನ್ನು ಚಿತ್ರಹಿಂಸೆಗೊಳಪಡಿಸುವ ಪ್ರಭುತ್ವದ ಹಿಂಸಾತ್ಮಕ ಮಾರ್ಗಗಳು ಸಾರ್ವಜನಿಕ ಮಾನ್ಯತೆ ಪಡೆದುಬಿಡುತ್ತವೆ.
ಆಫ್ಘಾನಿಸ್ತಾನದಲ್ಲಿ ಇದು ಇನ್ನೂ ಹೆಚ್ಚು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂದು ಡಾನಿಷ್ ಸಿದ್ದಿಖಿ ಸಾವಿಗೆ ಸಂತಾಪ ಸೂಚಿಸುವ ಅಮೆರಿಕದ ಅಧ್ಯಕ್ಷರಾಗಲೀ, ಇತರ ಸಾಮ್ರಾಜ್ಯಶಾಹಿ ರಾಷ್ಟ್ರಗಳ ನಾಯಕರಾಗಲೀ ತಮ್ಮ ಬೆನ್ನ ಹಿಂದಿನ ಚರಿತ್ರೆ ಮತ್ತು ಸಮಕಾಲೀನ ಘಟನೆಗಳತ್ತ ಒಮ್ಮೆ ನೋಡಿದರೆ, ಈ ಸಮರವೀರರ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಗೆ ಬಲಿಯಾದ ಸಾವಿರಾರು, ಲಕ್ಷಾಂತರ ಜನರ ಶವಗಳ ಮೆರವಣಿಗೆಯೇ ಕಾಣುತ್ತದೆ.
ಇಂದು ಡಾನಿಷ್ ಕೊಲೆಗೆ ಕಾರಣರಾದ ತಾಲಿಬಾನ್ ಪಡೆಯೇ ಸಾಮ್ರಾಜ್ಯಶಾಹಿಯ , ಒಂದು ಕಾಲದ ಮುದ್ದಿನ, ಕೂಸು ಎನ್ನುವುದು ಚಾರಿತ್ರಿಕ ಸತ್ಯ. ಈ ತಾಲಿಬಾನ್ ಉಗ್ರರು ಇಸ್ಲಾಂ ಹೆಸರಿನಲ್ಲಿ ನಡೆಸುವ ನರಮೇಧಗಳಿಗೆ ಬಳಸಲಾಗುವ ಶಸ್ತ್ರಾಸ್ತ್ರಗಳ ಮೂಲವೇ ಅಮೆರಿಕದ ಪೆಂಟಗನ್. ಸಿರಿಯಾ, ಲೆಬನಾನ್, ಇರಾಕ್, ಯಮನ್ ಮತ್ತಿತರ ರಾಷ್ಟ್ರಗಳಲ್ಲಿ ಸಾಮ್ರಾಜ್ಯಗಳ ಡ್ರೋನ್ ದಾಳಿಗಳಿಗೆ ಬಲಿಯಾದ ಲಕ್ಷಾಂತರ ಅಮಾಯಕರ ಸಾಲಿಗೆ ತಾಲಿಬಾನ್ ತನ್ನದೂ ಒಂದಿಷ್ಟಿರಲಿ ಎಂದು ಶವಗಳನ್ನು ಸೇರಿಸುತ್ತಲೇ ಇರುತ್ತದೆ. ಡಾನಿಷ್ ಈ ಸಾವಿನ ಸರದಾರರ ಹರಕೆಯ ಕುರಿಯಂತೆ ಕಾಣುತ್ತಾರೆ.
ವಿಶ್ವದ ಎಲ್ಲ ಪ್ರಮುಖ ನಾಯಕರೂ ಡಾನಿಷ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊನೆಗೆ ತಾಲಿಬಾನ್ ಮುಖ್ಯಸ್ತರೂ ಸಹ ಸಂತಾಪ ವ್ಯಕ್ತಪಡಿಸುವ ಮೂಲಕ ಪಾಪಪ್ರಜ್ಞೆಯನ್ನು ತೊಳೆದುಕೊಂಡಿದ್ದಾಗಿದೆ. ಆದರೆ ಭಾರತದ ಪ್ರಜೆಯೊಬ್ಬ, ವಿದೇಶಿ ನೆಲದಲ್ಲಿ ತನ್ನ ವೃತ್ತಿಯಲ್ಲಿ ತೊಡಗಿರುವಾಗ ಉಗ್ರವಾದಿಗಳ ಧಾಳಿಗೆ ಬಲಿಯಾಗಿದ್ದರೂ ಭಾರತದ ಪ್ರಧಾನಿ, ವಿದೇಶಾಂಗ ಮಂತ್ರಿ ಅಥವಾ ಆಡಳಿತಾರೂಢ ಪಕ್ಷದ ನಾಯಕರು ವಿಷಾದವನ್ನೂ ವ್ಯಕ್ತಪಡಿಸದೆ ಇರುವುದನ್ನು ನೋಡಿದರೆ, ಡಾನಿಷ್ ಸಿದ್ದಿಖಿ #ಆತ್ಮನಿರ್ಭರ ಭಾರತದ ದೃಷ್ಟಿಯಲ್ಲಿ ಸಾವಿಗೆ/ಹತ್ಯೆಗೆ ಅರ್ಹನಾಗಿದ್ದ ವ್ಯಕ್ತಿ ಎನಿಸುತ್ತದೆ.
ಫಾದರ್ ಸ್ಟ್ಯಾನ್ ಸ್ವಾಮಿ ಅವರಂತೆ ಡಾನಿಷ್ ಸಿದ್ದಿಖಿಯೂ ಸಹ ಸಾವಿನ ಕದ ತಟ್ಟುತ್ತಿದ್ದ ಒಬ್ಬ ಸಂವೇದನಾಶೀಲ ಪ್ರಜೆ ಆಗಿದ್ದಿರಬಹುದು. ಹತ್ಯೆಯ ಹಿಂದಿನ ಹಿಂಸೆಗಿಂತಲೂ, ಹತ್ಯೆಯನ್ನು ಸಂಭ್ರಮಿಸುವ ಮನಸ್ಥಿತಿ ಮತ್ತು ಹತ್ಯೆಯ ಬಗ್ಗೆ ಮೌನ ವಹಿಸುವ ಮನಸ್ಥಿತಿ ಇನ್ನೂ ಹಿಂಸಾತ್ಮಕ ಅಲ್ಲವೇ ?
ಭಾರತಕ್ಕೆ ಇದೇನೂ ಹೊಸತಲ್ಲ. ಸಾವಿರಾರು ಸಿದ್ದಿಖಿಗಳು, ಸ್ವಾಮಿಗಳು, ನಿಯೋಗಿಗಳು, ಸಫ್ದಾರ್ ಹಷ್ಮಿಗಳು ಈ ದೇಶದ ಮಣ್ಣಲ್ಲಿ ಅನಾಥರಂತೆ ಮಣ್ಣಾಗಿ ಹೋಗಿದ್ದಾರೆ. ಕಳೆದ ವರ್ಷದ ಲಾಕ್ಡೌನ್ ವೇಳೆಯಲ್ಲಿ ಸಾವು ಬದುಕಿನೊಡನೆ ಸೆಣಸಾಡಿದ ವಲಸೆ ಕಾರ್ಮಿಕರು, ತಮ್ಮ ಮೂಲ ನೆಲೆಯಿಂದಲೇ ಉಚ್ಚಾಟಿಸಲ್ಪಟ್ಟು ನಿರಾಶ್ರಿತರಾದ ರೋಹಿಂಗ್ಯಾಗಳು, ವಾರಸುದಾರರಿಲ್ಲದೆ ಸಾಮೂಹಿಕವಾಗಿ ದಹಿಸಲ್ಪಟ್ಟ ಅಸಂಖ್ಯಾತ ಕೋವಿದ್ ಪೀಡಿತ ಶವಗಳು, ಗಂಗೆಯಲ್ಲಿ ತೇಲಿಬಂದ ಶವಗಳು, ಇವೆಲ್ಲವನ್ನೂ ತಮ್ಮ ಮಸೂರದಲ್ಲಿ ಬಂಧಿಸಿ ಸಾರ್ವಜನಿಕರ ಮುಂದಿಟ್ಟಿದ್ದ ಡಾನಿಷ್, ದೆಹಲಿ ಗಲಭೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ, ಕೈಕಟ್ಟಿ ನಿಂತಿದ್ದ ಪೊಲೀಸರ ಎದುರೇ ಪ್ರತಿಭಟನಕಾರರಿಗೆ ಪಿಸ್ತೂಲು ತೋರಿಸಿ ಹೆದರಿಸಿದ್ದ ಬಿಜೆಪಿ ನಾಯಕನ ಚಿತ್ರವನ್ನೂ ಸೆರೆಹಿಡಿದಿದ್ದರು. ಬಹುಶಃ ಸಾಯುವ ಅರ್ಹತೆ ಪಡೆಯಲು ಇಷ್ಟು ಸಾಕಾಗಿತ್ತು ಎನಿಸುತ್ತದೆ. ಡಾನಿಷ್ ಸಹ ಮತ್ತೊಂದು ಅನಾಥ ಶವವಾಗಿ ಅಂತ್ಯ ಕಂಡಿದ್ದಾರೆ.
ಹಥ್ರಾಸ್ನಲ್ಲಿ ನಡುರಾತ್ರಿಯಲ್ಲಿ ದಹಿಸಲ್ಪಟ್ಟ ಅತ್ಯಾಚಾರಕ್ಕೀಡಾದ ಯುವತಿಗೂ, ಜಾಮೀನು ದೊರೆಯದೆ ಸೆರೆವಾಸದಲ್ಲೇ ಅಂತ್ಯ ಕಂಡ ರೋಗಪೀಡಿತ ಸ್ಟ್ಯಾನ್ ಸ್ವಾಮಿಗೂ, ದನದ ಮಾಂಸದ ತುಂಡನ್ನು ಮನೆಯಲ್ಲಿಟ್ಟ ತಪ್ಪಿಗಾಗಿ ಹತ್ಯೆಗೀಡಾದ ಅಖ್ಲಾಕ್ಗೂ, ತಾಲಿಬಾನ್ ಉಗ್ರರ ಧಾಳಿಗೆ ಬಲಿಯಾದ ಡಾನಿಷ್ಗೂ ವ್ಯತ್ಯಾಸವೇನಿದೆ ? ಸಾವನ್ನು ಸಾಪೇಕ್ಷಗೊಳಿಸುವ ವಿಕೃತ ಪರಂಪರೆಯೊಂದನ್ನು ನಾವು, ಭಾರತೀಯರು ಪೋಷಿಸಿಕೊಂಡೇ ಬಂದಿದ್ದೇವೆ.
ಹಾಗೆಯೇ ನಮಗೆ ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ ಸತ್ತ 24 ಅಮಾಯಕರೂ ನಗಣ್ಯ ಎನಿಸಿಬಿಡುತ್ತಾರೆ. ಹಸಿವಿನಿಂದ ಕಂಗೆಟ್ಟು ನಡುಬೀದಿಯಲ್ಲೇ ಸತ್ತ ವಲಸೆ ಕಾರ್ಮಿಕರೂ ನಿಕೃಷ್ಟರಾಗಿಬಿಡುತ್ತಾರೆ. ಆತ್ಮಹತ್ಯೆಗೆ ಶರಣಾಗುವ ಲಕ್ಷಾಂತರ ರೈತರೂ ನಿರ್ಲಕ್ಷಿತರಾಗಿಬಿಡುತ್ತಾರೆ.
ನವ ಉದಾರವಾದ, ಬಲಪಂಥೀಯ ರಾಜಕಾರಣ, ಜಾತಿ ದ್ವೇಷ, ಮತಾಂಧತೆ, ದ್ವೇಷ ರಾಜಕಾರಣ ಮತ್ತು ಇವೆಲ್ಲವನ್ನೂ ಕಾಪಾಡಲು ಅಗತ್ಯವಾದ ಹಿಂಸಾತ್ಮಕ ಮನಸ್ಥಿತಿ ಇಂದು ವಿಭಿನ್ನ ಧಾರೆಗಳಲ್ಲಿ ನಮ್ಮ ನಡುವೆ ಪ್ರವಹಿಸುತ್ತಿದೆ. ದೇಶಾದ್ಯಂತ ಕೋವಿದ್ ಮೊದಲನೆ ಅಲೆಯ ಸಂದರ್ಭದಲ್ಲಿ ನೂರಾರು ವಲಸೆ ಕಾರ್ಮಿಕರು ಕೂಳಿಲ್ಲದೆ ಅನಾಥರಂತೆ ಸಾವನ್ನಪ್ಪಿದ್ದರು, ಎರಡನೆ ಅಲೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ, ಆಮ್ಲಜನಕದ ಕೊರತೆಯಿಂದ ಸಾವಿರಾರು ಜನರು ಸಾವನ್ನಪ್ಪಿದ್ದಾರೆ.
ಆದರೆ ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಸಂಸತ್ತಿನಲ್ಲಿ ಹೇಳುವ ಮೂಲಕ ಕೇಂದ್ರ ಸರ್ಕಾರ ಕೈತೊಳೆದುಕೊಳ್ಳುತ್ತದೆ. ತಾಲಿಬಾನ್ ಕ್ರೌರ್ಯಕ್ಕೂ ಈ ಬೌದ್ಧಿಕ ಕ್ರೌರ್ಯಕ್ಕೂ ವ್ಯತ್ಯಾಸವೇನಾದರೂ ಕಾಣಲು ಸಾಧ್ಯವೇ ? ಒಟ್ಟಿನಲ್ಲಿ ಸಾಮಾನ್ಯ ಜನರ ಸಾವು ಸ್ವೀಕೃತವಾದ ಒಂದು ವಿದ್ಯಮಾನ, ಕೆಲವೊಮ್ಮೆ ಸ್ವೀಕಾರಾರ್ಹ, ಕೆಲವೊಮ್ಮೆ ಅಪೇಕ್ಷಿತ, ಕೆಲವೊಮ್ಮೆ ನಿರೀಕ್ಷಿತ ಇನ್ನು ಕೆಲವೊಮ್ಮೆ ನಿಗದಿತ. ಹೌದಲ್ಲವೇ ?
ಹಾಗಾಗಿಯೇ ಡಾನಿಷ್ ಸಿದ್ದಿಖಿ ಒಬ್ಬ ಹುತಾತ್ಮನಾಗಲಿಲ್ಲ. ವಿದೇಶಿ ಉಗ್ರವಾದಿಗಳ ಗುಂಡೇಟಿಗೆ, ವಿದೇಶಿ ನೆಲದಲ್ಲೇ ಬಲಿಯಾದ ಭಾರತದ ಪತ್ರಿಕಾ ಛಾಯಾಗ್ರಾಹಕನೊಬ್ಬನಿಗೆ ರಾಷ್ಟ್ರೀಯ ಸಮ್ಮಾನ ದೊರೆಯಲಿಲ್ಲ. ರಾಷ್ಟ್ರೀಯ ಸಂತಾಪವೂ ದೊರೆಯಲಿಲ್ಲ. ದ್ವೇಷ ರಾಜಕಾರಣದ ಮುದ್ದು ಕೂಸುಗಳು ಸಾಮಾಜಿಕ ತಾಣಗಳಲ್ಲಿ ಸಂಭ್ರಮಿಸಿ, ಕೇಕೆ ಹಾಕಿದ್ದವು. ಆಫ್ಘಾನಿಸ್ತಾನದ ಬಲಿಪೀಠದಲ್ಲಿ, ತಾಲಿಬಾನ್ ಅರಣ್ಯ ನ್ಯಾಯಕ್ಕೆ ಬಲಿಯಾದ ಡಾನಿಷ್ ಸಿದ್ದಿಖಿ , #ಆತ್ಮನಿರ್ಭರ ಭಾರತದ ದೃಷ್ಟಿಯಲ್ಲಿ ಓರ್ವ ಮುಸ್ಲಿಂ ಆಗಿಬಿಟ್ಟ, ಪ್ರತಿರೋಧದ ದನಿಯಾಗಿಬಿಟ್ಟ, ನಮ್ಮ ಸ್ವಘೋಷಿತ ದೇಶಪ್ರೇಮದ ವ್ಯಾಪ್ತಿಯಿಂದ ಹೊರತಾಗಿಬಿಟ್ಟ.
ಹಾಗಾಗಿ ಕ್ಯಾಮರಾ ಹಿಡಿದ ಈ ಸೇನಾನಿ ಶಸ್ತ್ರ ಹಿಡಿದ ಸೇನಾನಿಗಿಂತಲೂ ಭಿನ್ನವಾಗಿ ಕಂಡುಬಿಟ್ಟ. ತ್ರಿವರ್ಣ ಧ್ಜಜದ ಹೊದಿಕೆಗಾಗಲೀ, ಭಾವೈಕ್ಯತೆಯ ಸಂಕೇತವಾಗಿ ಸಮ್ಮಾನಕ್ಕಾಗಲೀ ಹಕ್ಕುದಾರನಾಗಲಿಲ್ಲ. ಕೊನೆಯ ಪಕ್ಷ ಆಳುವ ವರ್ಗಗಳ ಸಂತಾಪದ ಮಾತುಗಳಿಗೂ ಅರ್ಹನಾಗಲಿಲ್ಲ.
ಇದೇನೂ ಅತಿಶಯ ಎನಿಸುವುದಿಲ್ಲ. ಏಕೆಂದರೆ ಈ ಪವಿತ್ರ ಭೂಮಿಯಲ್ಲೇ ಕಳೆದ ಐದಾರು ವರ್ಷಗಳಲ್ಲಿ ಪತ್ರಕರ್ತರ ಮೇಲೆ 200ಕ್ಕೂ ಹೆಚ್ಚು ಧಾಳಿಗಳು ನಡೆದಿವೆ. 2014-19ರ ಅವಧಿಯಲ್ಲಿ 40 ಪತ್ರಕರ್ತರು ಹತ್ಯೆಗೀಡಾಗಿದ್ದಾರೆ. ಇವರ ಪೈಕಿ 21 ಮೃತರು ನೇರ ಪತ್ರಿಕಾ ಧರ್ಮವನ್ನೇ ಪಾಲಿಸುತ್ತಿದ್ದವರಾಗಿದ್ದಾರೆ.
2010ರ ನಂತರ ದಾಖಲಾಗಿರುವ ಪತ್ರಕರ್ತರ ಹತ್ಯೆಯ 30 ಪ್ರಕರಣಗಳಲ್ಲಿ ಮೂರರಲ್ಲಿ ಮಾತ್ರವೇ ಶಿಕ್ಷೆಯಾಗಿದೆ. 2014ರ ನಂತರ ಯಾವುದೇ ಶಿಕ್ಷೆಯಾಗಿಲ್ಲ. ಒಂದು ಅಧ್ಯಯನದ ಪ್ರಕಾರ 2014ರ ನಂತರ 19 ಮಹಿಳಾ ಪತ್ರಕರ್ತರು ಹಲ್ಲೆಗೊಳಗಾಗಿದ್ದಾರೆ. ಮಹಿಳಾ ಆಯೋಗಕ್ಕಾಗಲೀ, ಸಚಿವಾಲಯಕ್ಕಾಗಲೀ ಇದು ಗಂಭೀರ ವಿಚಾರ ಎನಿಸಿಯೇ ಇಲ್ಲ.
ಕಳೆದ ಏಳು ವರ್ಷಗಳಲ್ಲಿ ಮಾಧ್ಯಮ ವಲಯದಲ್ಲಿ ಸೃಷ್ಟಿಯಾಗಿರುವ ಧೃವೀಕರಣವೂ ಈ ನಿಷ್ಕ್ರಿಯತೆಗೆ ಕಾರಣವಾಗಿದೆ. ರಾಜಕೀಯ ಪಕ್ಷಗಳ, ನಾಯಕರ ಮತ್ತು ಅಧಿಕಾರ ಕೇಂದ್ರಕ್ಕೆ ನಿಕಟ ಸಂಪರ್ಕ ಹೊಂದಿರುವವರ ಮಾಲಿಕತ್ವದಲ್ಲಿರುವ ಸುದ್ದಿ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರಕರ್ತರ ಮೇಲಿನ ಧಾಳಿಗಳು ರಾಜಕೀಯ ಲೆಕ್ಕಾಚಾರಗಳಾಗಿ ಮಾತ್ರವೇ ಕಾಣುತ್ತದೆ.
“ ಸುದ್ದಿಯ ಸಂಸ್ಕರಣ ಮತ್ತು ಅಭಿಪ್ರಾಯ ಉತ್ಪಾದನೆ ”ಯ ಕಾರ್ಖಾನೆಗಳಂತೆ ಕಾರ್ಯ ನಿರ್ವಹಿಸುತ್ತಿರುವ ಬಹುಪಾಲು ಸುದ್ದಿಮನೆಗಳು ಮತ್ತು ಪತ್ರಿಕೆಗಳು ತಮ್ಮ ಪತ್ರಿಕೋದ್ಯಮದ ಸಂಹಿತೆಗಳಿಗಿಂತಲೂ, ತಾವು ಆಶ್ರಯಿಸುವ ರಾಜಕೀಯ ಅಧಿಕಾರ ಕೇಂದ್ರಗಳ ಸಂಹಿತೆಗಳನ್ನು ಹೆಚ್ಚು ನಿಷ್ಠೆಯಿಂದ ಪಾಲಿಸುತ್ತಿರುವುದನ್ನೂ ಈ ಸಂದರ್ಭದಲ್ಲಿ ಗಮನಿಸಬೇಕಿದೆ. ಕರ್ನಾಟಕದ ಗೌರಿ ಲಂಕೇಶ್, ಶ್ರೀನಗರದ ಶೂಜತ್ ಬುಖಾರಿ, ದೂರದರ್ಶನದ ಛಾಯಾಗ್ರಾಹಕ ಅಚ್ಯುತಾನಂದಸಾಹು (ಮಾವೋವಾದಿಗಳ ಗುಂಡೇಟಿಗೆ ಬಲಿಯಾದ್ದರು), ಈ ಮೂರು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಪ್ರಸಂಗಗಳಲ್ಲಿ ಸಾಮಾನ್ಯವಾಗಿ ರಾಜಕೀಯ ಅಕ್ರಮಗಳ ವಿರುದ್ಧ ಮತ್ತು ಭೂಮಾಫಿಯಾ, ಜಲ ಮಾಫಿಯಾ, ಹೆಂಡದ ದೊರೆಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಪತ್ರಕರ್ತರೇ ಧಾಳಿಗೊಳಗಾಗಿದ್ದಾರೆ. ಈ ವಿಚಾರದಲ್ಲಿ ಮಾತ್ರ ನಮ್ಮ ದೇಶ ಅಪ್ಪಟ ಜಾತ್ಯತೀತ.
2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಗಲಭೆಗಳ ಹಿನ್ನೆಲೆಯಲ್ಲಿ 14 ಪತ್ರಕರ್ತರ ವಿರುದ್ಧ ದೆಹಲಿ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿರುವುದು ಕಾಕತಾಳೀಯವೇನಲ್ಲ. ಇದೇ ಸಂದರ್ಭದಲ್ಲಿ ಸಾರ್ವಜನಿಕವಾಗಿಯೇ ಪಿಸ್ತೂಲು ತೋರಿಸಿದ ವ್ಯಕ್ತಿ ಸರ್ವ ಸ್ವತಂತ್ರನಾಗಿದ್ದರೆ, “ ಗೋಲಿ ಮಾರೋ ಸಾಲೋಂಕೋ ” ಎಂದು ಮುಕ್ತವಾಗಿ ಕರೆ ನೀಡಿದ ವ್ಯಕ್ತಿ ಸಾಂವಿಧಾನಿಕ ರಕ್ಷಣೆ ಪಡೆದಿದ್ದಾರೆ. ಇಷ್ಟರ ನಡುವೆ ಕಳೆದ ಏಳು ವರ್ಷಗಳಲ್ಲಿ ದೇಶಾದ್ಯಂತ 200 ಮಾಹಿತಿ ಹಕ್ಕು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಈ ಕಾರ್ಯಕರ್ತರು ಯಾವುದೇ ಮಾಧ್ಯಮ ಸಮೂಹಕ್ಕೆ ಸೇರದೆ, ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದರಿಂದ ಬಹುಶಃ ಗಣನೆಗೇ ಬರುವುದಿಲ್ಲ ಎನಿಸುತ್ತದೆ.
ಮಾಧ್ಯಮ ವಲಯದ ಈ ಬಂಧುಗಳ ಹತ್ಯೆಗಳಿಗೆ ಮತ್ತು ಅವರ ಮೇಲೆ ನಿರಂತರವಾಗಿ ನಡೆಯುತ್ತಿರುವ ಧಾಳಿಗಳ ಬಗ್ಗೆ ಮಾಧ್ಯಮ ಸಮೂಹವೇ ಮೌನವಾಗಿರುವುದನ್ನು ಗಮನಿಸಿದರೆ, ಈ ದೇಶದ ಅಧಿಕಾರ ರಾಜಕಾರಣ ಮತ್ತು ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳು ಮಾಧ್ಯಮ ವಲಯದ ಮೇಲೆ ಹೇಗೆ ನಿಯಂತ್ರಣ ಸಾಧಿಸಿವೆ ಎನ್ನುವುದು ಸ್ಪಷ್ಟವಾಗುತ್ತದೆ.
ಕೋವಿದ್ ಸಾವುಗಳ ಬಗ್ಗೆ ಮತ್ತು ಸರ್ಕಾರ ಕೋವಿದ್ ಸಾವುಗಳನ್ನು ಬಚ್ಚಿಡುತ್ತಿರುವುದನ್ನು ಸವಿಸ್ತಾರವಾಗಿ ವರದಿ ಮಾಡಿದ ದೈನಿಕ್ ಭಾಸ್ಕರ್ ಪತ್ರಿಕಾ ಸಮೂಹ ಈಗ ಆದಾಯ ತೆರಿಗೆ ಧಾಳಿಗೆ ಒಳಗಾಗಿದೆ. 2014ರಲ್ಲಿ ನರೇಂದ್ರ ಮೋದಿಯವರನ್ನು ವೈಭವೀಕರಿಸಿದಾಗ ಪ್ರಾಮಾಣಿಕವಾಗಿ ಕಂಡುಬಂದಿದ್ದ ಈ ಪತ್ರಿಕೆ ಈಗ ಪ್ರತಿರೋಧದ ಧ್ವನಿಯಾಗಿ ಶಿಕ್ಷೆಗೊಳಗಾಗುತ್ತಿದೆ. ಕರ್ನಾಟಕದಲ್ಲಿ ಪವರ್ ಟಿವಿ ವಾಹಿನಿಯ ಪ್ರಕರಣವನ್ನೂ ಇಲ್ಲಿ ಸ್ಮರಿಸಬಹುದು.
ಸ್ವತಂತ್ರ ಮಾಧ್ಯಮದ ಪರಿಕಲ್ಪನೆಯನ್ನೇ ಬದಿಗೊತ್ತಿ ಈ ರೀತಿಯ ರಾಜಕೀಯ ಧೃವೀಕರಣಕ್ಕೊಳಗಾಗಿರುವುದರಿಂದಲೇ ಮಾಧ್ಯಮ ವಲಯ ಇಂದು ಅತಿ ಹೆಚ್ಚು ಆಕ್ರಮಣಗಳನ್ನು ಎದುರಿಸುತ್ತಿದೆ. ಇದರ ಹೊರೆಯನ್ನು ಪತ್ರಕರ್ತರು ಹೊರುತ್ತಿದ್ದಾರೆ. ಆಳುವ ವರ್ಗಗಳ ಪರ, ಕಾರ್ಪೋರೇಟ್ ಪರ , ಭೂಮಾಫಿಯಾ ಮತ್ತಿತರ ಅಕ್ರಮ ಸಂತಾನಗಳ ಪರ ಇರುವ ಶಕ್ತಿಗಳು ಪ್ರಾಮಾಣಿಕ ವರದಿಗಾರರನ್ನು, ಮಾಹಿತಿ ಹಕ್ಕು ಕಾರ್ಯಕರ್ತರನ್ನು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿ ತಮ್ಮ ಅಕ್ರಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಿವೆ. #ಆತ್ಮನಿರ್ಭರ ಭಾರತದಲ್ಲಿ ಇಂತಹ ಶಕ್ತಿಗಳಿಗೆ ಹೆಚ್ಚು ನಿರ್ಭರವಾಗುತ್ತಿವೆ. ಪ್ರಾಮಾಣಿಕತೆ ದುರ್ಭರವಾಗುತ್ತಿವೆ. ಮತಾಂಧತೆ, ಜಾತಿ ದ್ವೇಷ ಮತ್ತು ಕೋಮುವಾದದ ಛಾಯೆ ಸಮಾಜದ ಮೇಲೆ ದಟ್ಟವಾಗಿ ಆವರಿಸುತ್ತಿರುವಂತೆಯೇ, ಈ ಅನ್ಯಾಯಗಳನ್ನು ಪ್ರಶ್ನಿಸುವ ವ್ಯವಧಾನವನ್ನೂ ನಮ್ಮ ಸುತ್ತಲಿನ ಸಮಾಜ ಕಳೆದುಕೊಳ್ಳುತ್ತಿದೆ.
ಈ ಕಗ್ಗೊಲೆಗಳ ವಿರುದ್ಧ, ರಾಜಕೀಯ ಪ್ರೇರಿತ, ದ್ವೇಷಪೂರಿತ, ಜಾತಿ ಪ್ರೇರಿತ ಹತ್ಯೆಗಳ ವಿರುದ್ಧ ನಾವು ಧ್ವನಿ ಎತ್ತಿ ಪ್ರತಿರೋಧ ವ್ಯಕ್ತಪಡಿಸಿದ್ದಲ್ಲಿ ಇಂದು ಡಾನಿಷ್ ಸಿದ್ದಿಖಿ ಅನಾಥ ಶವ ಆಗುತ್ತಿರಲಿಲ್ಲ. ಸುಶಿಕ್ಷಿತ ಎಂದು ಬೆನ್ನುತಟ್ಟಿಕೊಳ್ಳುವ ದೇಶದ ಬೃಹತ್ ಬೌದ್ಧಿಕ ವಲಯ ಇಂದು ಈ ನಿಷ್ಕ್ರಿಯತೆಯಿಂದ ಬಳಲುತ್ತಿದೆ. ಇದು ವಿಚ್ಚಿದ್ರಕಾರಿ ಶಕ್ತಿಗಳ ಪ್ರಾಬಲ್ಯವನ್ನು ಹೆಚ್ಚಿಸುತ್ತಿದೆ. ದುರಂತ ಎಂದರೆ ಪತ್ರಿಕಾ ಧರ್ಮ ಅಥವಾ ಮಾಧ್ಯಮ ಸಂಹಿತೆಯನ್ನು ಪಾಲಿಸಬೇಕಾದ ನಮ್ಮ ಸುದ್ದಿಮನೆಗಳೂ ತಮ್ಮ ನೈತಿಕ ಹೊಣೆಗಾರಿಕೆಯಿಂದ ವಿಮುಖವಾಗಿವೆ. ಡಾನಿಷ್ ಹತ್ಯೆಯನ್ನು ರಂಜನೀಯವಾಗಿ ಬಿತ್ತರಿಸುವ ಸುದ್ದಿಮನೆಗಳ ನಿರೂಪಕರಿಗೆ ನಮ್ಮ ನೆಲದಲ್ಲೇ ಅನಾಥರಾಗಿ ಮಡಿದ 200 ಪತ್ರಕರ್ತರ ಸಾವು ಗಣನೆಗೇ ಬರುವುದಿಲ್ಲ. ಮಾಧ್ಯಮ ಲೋಕದ ಈ ನಿರ್ದಯಿ ನಿಷ್ಕ್ರಿಯತೆ ಮತ್ತು ವಂದಿಮಾಗಧ ಧೋರಣೆಯೇ ಡಾನಿಷ್ ಸಿದ್ದಿಖಿ ಅಂತಹ ಅದ್ಭುತ ಪ್ರತಿಭೆಗಳಿಗೆ ಮಾರಕವಾಗುತ್ತದೆ.
ಜಾತೀಯತೆ, ಮತಾಂಧತೆ ಮತ್ತು ಹುಸಿ ದೇಶಪ್ರೇಮದ ಗುಂಗಿನಲ್ಲಿ ಬಹುಪಾಲು ಸುದ್ದಿಮನೆಗಳು, ಮಾಧ್ಯಮಗಳು ತಮ್ಮ ಸ್ವ ಪ್ರಜ್ಞೆಯನ್ನು ಮಾರಿಕೊಂಡಿವೆ, ಬಹಳಷ್ಟು ಮಾಧ್ಯಮ ಬಂಧುಗಳು ತಮ್ಮ ವಿವೇಕವನ್ನು ಒತ್ತೆ ಇಟ್ಟಿದ್ದಾರೆ, ತಮ್ಮ ವಿವೇಚನೆಯನ್ನು ಕಳೆದುಕೊಂಡಿದ್ದಾರೆ, ಸ್ವಾಮಿನಿಷ್ಠೆಗೆ ಬದ್ಧರಾಗಿ ವೃತ್ತಿನಿಷ್ಠೆಯನ್ನು ಕಳೆದುಕೊಂಡಿದ್ದಾರೆ. ಹಾಗಾಗಿಯೇ ಅಸಹಿಷ್ಣುತೆಯನ್ನೂ ಸಹ ಸಹನೀಯವಾಗಿಸುತ್ತಿದ್ದಾರೆ. ಆದರೆ ಈ ಪಾಪಪ್ರಜ್ಞೆ ಸಾರ್ವಜನಿಕರನ್ನಾದರೂ ಕಾಡುವಂತಾದರೆ, ಆಫ್ಘಾನ್ ನೆಲದಲ್ಲಿ ಉಗ್ರಗಾಮಿಗಳ ಧಾಳಿಗೆ ಬಲಿಯಾದ ಡಾನಿಷ್ ಸಿದ್ದಿಖಿಗೆ ಶ್ರದ್ಧಾಂಜಲಿ ಅರ್ಪಿಸುವ ಅರ್ಹತೆಯನ್ನಾದರೂ ಪಡೆಯಬಹುದೇನೋ !!!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ3 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

