ಅಂತರಂಗ
‘ಪ್ರಸಿದ್ಧ ಪರ್ವ’ ಕೂಡ್ಲಿಗಿ ತಾಲೂಕಿನ ಕರ್ಣ ಅಂಗಡಿ ಸಿದ್ದಣ್ಣನವರ ದಂತಕಥೆ
- ಕೆ.ಶ್ರೀಧರ್ (ಕೆ.ಸಿರಿ)
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ದಾನವೇ ಒಂದು ಧರ್ಮವಾಗಿ ಅಗ್ರಪಂಕ್ತಿಯಲ್ಲಿರುವುದು ಇಡೀ ವಿಶ್ವದ ಭೂಪಟದಲ್ಲಿ ಬಹುಶಃ ಭಾರತವನ್ನು ಬಿಟ್ಟರೆ ಮೊದಲ ಸ್ಥಾನದಲ್ಲಿ ಬೇರಿನ್ಯಾವ ದೇಶವನ್ನು ನೋಡಲು ಸಾಧ್ಯವಿಲ್ಲ.
ಇದಕ್ಕೆ ಕಾರಣವೂ ಇದೆ ಅದಕ್ಕೆ ಕಾರಣ ಈ ನೆಲದ ಮಣ್ಣಿನಲ್ಲಿ ಹುದುಗಿರುವ ಶಕ್ತಿ ಈ ನಾಡು ಶರಣರು,ಸಂತರು,ಪವಾಡ ಪುರುಷರು, ಸಿದ್ದಿಗಳು ಮಹಾತ್ಮಾರು ನಡೆದಾಡಿದ ಬೀಡು, “ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತ ಮಿಗಿಲು” ಎಂಬ ನಾಣ್ಣುಡಿಯಂತೆ ಈ ದೇಶದಲ್ಲಿ ಜನಿಸಿದ ಪ್ರತಿಯೋರ್ವನಿಗೂ ದೇಶಾಭಿಮಾನ ತಂತಾನೆ ಮೈದಾಳುತ್ತದೆ.
ಭಾರತದ ಪವಿತ್ರ ಗ್ರಂಥಗಳಾದ ರಾಮಾಯಣ, ಮಹಾಭಾರತ, ವೇದಗಳು, ಪುರಾಣಗಳಲ್ಲಿ ಅನೇಕ ಮಹನೀಯರು ದಾನ ಧರ್ಮದ ಮೂಲಕ ಸರಳ ಕರ್ಮದ ಮೂಲಕ ಅನವರತವಾಗಿರುವುದನ್ನು ಇಂದಿಗೂ ಈ ಜಗತ್ತಿಗೆ ಸಾರುತ್ತಿವೆ.
ದಾನ ಎಂದಾಕ್ಷಣ ನಮಗೆ ನೆನಪಿಗೆ ಬರುವ ಮೊದಲ ವ್ಯಕ್ತಿಯೇ ಕರ್ಣ ಅಂತೆಯೇ ನಮ್ಮ ಕೂಡ್ಲಿಗಿ ತಾಲೂಕು ಬರದ ಸೀಮೆಯಾಗಿದ್ದು ಇಲ್ಲಿ ದೀರ್ಘಕಾಲಿಕ ಬೆಳೆಗಳಾದ ತೆಂಗು,ಅಡಿಕೆ ಮುಂತಾದ ಬೆಳೆಗಳನ್ನು ಬೆಳೆಯುವುದು ಬೆರಳೆಕೆ ಮಾತ್ರ ಅಂತೂ ಮೀರಿ ಊರಿಗೆ ಒಂದು ಅಥವಾ ಎರಡು ತೆಂಗಿನ ತೋಟಗಳಿದ್ದರೆ ಅವನು ಆ ಊರಿನ ಪ್ರಮುಖ ವಿಶೇಷ ಆಕರ್ಷಣೀಯ ವ್ಯಕ್ತಿಯಾಗಿ ಬಿಡುತ್ತಾನೆ.
ಮಹಾಭಾರತದಲ್ಲಿ ಬರುವ ಕರ್ಣನಂತೆಯೇ ನಮ್ಮ ಕೂಡ್ಲಿಗಿ ತಾಲೂಕಿನ ಪ್ರಸಿದ್ಧ ಪರ್ವ ಪುಸ್ತಕದಲ್ಲಿಯೂ ಕೂಡ ಒಂದು ಕೊಡುಗೈ ದಾನದ ಕುಟುಂಬವಿದೆ ಎಂದು ನನಗೆ ತಿಳಿದದ್ದು ಶ್ರೀಯುತ ವೀರೇಶ್ ಅಂಗಡಿ ಸರ್ ರವರು ನಮ್ಮ ಮನೆಯ ಗೃಹಪ್ರವೇಶದ ಸಮಾರಂಭಕ್ಕೆ ಬಂದು ಶುಭಕೋರಿ ‘ಪ್ರಸಿದ್ಧ ಪರ್ವ’ (ತಿರು ಸಿದ್ಧ ಪರ್ವಗಳ ವಿಹಂಗಮ ನೋಟ ) ಪುಸ್ತಕ ನೀಡಿದಾಗಲೆ ನನಗೆ ತಿಳಿದದ್ದು.
ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ಒಬ್ಬ ವ್ಯಕ್ತಿಯನ್ನು ಅದರಲ್ಲೂ ಆ ವ್ಯಕ್ತಿಯ ವ್ಯಕ್ತಿತ್ವವನ್ನು ಪರ್ವತಕ್ಕೆ ಹೋಲಿಸಿ ಮಾತನಾಡುವುದು ಎಂದರೆ ಸುಲಭದ ಮಾತಲ್ಲ.
ಶ್ರೀಯುತ ಕೆ.ಯಂ ವೀರೇಶ್ ಲೇಖಕರು ಈ ಪುಸ್ತಕಕ್ಕೆ ಪ್ರಸಿದ್ಧ ಪರ್ವ ಎಂಬ ತಲೆಬರಹನ್ನು ಏಕೆ ನೀಡಿದರು ಎಂಬುದು ನನಗೆ ತಿಳಿದಿರಲಿಲ್ಲ ಮುಖಪುಟದ ಮೇಲಿರುವ ಸಿದ್ದಣ್ಣ ರವರ ಅಂಗಡಿರವರ ಭಾವಚಿತ್ರವನ್ನು ನೋಡಿದಾಗಲೇ ಒಂದು ರೀತಿಯ ಸೆಳೆತಕ್ಕೊಳಗಾದೆ ಆ ಮುಖದಲ್ಲಿರುವ ತೇಜಸ್ಸು ಅಂತದ್ದು ಬುದ್ದನ ನಗೆಗೆ ಸನಿಹವಿರುವ ನಗುವದು ಆ ಕಣ್ಣುಬ್ಬುಗಳು, ಆ ಚೆಂದದಣೆ, ಕುಡಿಮೀಸೆ,ಬಟ್ಟಲುಗಣ್ಣು, ಹರವಾದ ಹಣೆ, ಅನಂತತೆಯತ್ತ ಸಾಗುತ್ತಿರುವ ಆ ಮುಗುಳ್ನಗು ಓದುಗರನ್ನು ಒಂದರಗಳಿಗೆ ಧ್ಯಾನಿಸದೆ ಬಿಡುವುದಿಲ್ಲ ಅಂತಹ ತೇಜಸ್ಸು ಎಲ್ಲರಲ್ಲಿಯೂ ಬರುವುದಿಲ್ಲ ಸಿರಿವಂತಿಕೆಯನ್ನು ಮೀರಿ ಹೃದಯವಂತಿಕೆ ಮೈದಾಳಿದ ವ್ಯಕ್ತಿಯಲ್ಲಿ ಮಾತ್ರ ಆ ದಿಗಂತದ ತೇಜಸ್ಸು ಒಡಮೂಡಲು ಸಾಧ್ಯ.
“ಮಾವಿನ ಮರದಲ್ಲಿ ಮಾವಿನ ಹಣ್ಣೆ ಬಿಡುವುದು ” ಎಂಬಂತೆ ತಂದೆ ತಿರುಕಪ್ಪನವರ ಗುಣಗಳ ಪಡಿಯಚ್ಚಿನಂತೆಯೇ ಸಿದ್ದಣ್ಣ ಅಂಗಡಿಯವರ ವ್ಯಕ್ತಿತ್ವ ಸಾಗಿ ಬಂದಂತೆ ಕಾಣುತ್ತದೆ ತಿರುಕಪ್ಪನವರ ತೋಟದ ಗರಿಗಳು, ತೆಂಗಿನಕಾಯಿಗಳು ಊರ ತೆಂಗಿನಕಾಯಿಗಳು ಕೂಡ್ಲಿಗಿ ತಾಲೂಕಿನ ಸುತ್ತಹತ್ತಳ್ಳಿಗೆ ಹೇರಳವಾಗಿ ನೀಡುತ್ತಿದ್ದರು ಎಂದು ಆರಂಭಗೊಳ್ಳುವ ಕಥೆ ನಿಜಕ್ಕೂ ನಮ್ಮೂರಿನ ನೀರಾವರಿ ಚಿತ್ರಣದ ಮೇಲೆ ಕನ್ನಡಿ ಹಿಡಿದಂತಿದೆ ಏಕೆಂದರೆ ಊರಿಗೊಂದಿರುವುದೇ ಹೆಚ್ಚು ಇದ್ದರೂ ಶುಭಕಾರ್ಯಗಳಿಗೆ ಗರಿ ತೆಂಗಿನಕಾಯಿಗಳನ್ನು ಉದಾರತೆಯಿಂದ ನೀಡುವ ಮನಸ್ಸು ಸಿಗುವುದು ವಿರಳ.
ಲೇಖಕರು ಬರೆದಿರುವಂತೆ “ಒಂದು ಮಂಗಳ ಕಾರ್ಯಕ್ಕೆ ನಮ್ಮ ತೋಟದ ಗರಿಗಳು ಒಂದು ಸಾರ್ಥಕ ಕೆಲಸಕ್ಕೆ ಉಪಯೋಗವಾದರೆ ಅದು ನಮ್ಮ ಸೌಭಾಗ್ಯವಲ್ಲವೇ ಈ ಕಾರ್ಯದಿಂದ ನಮ್ಮ ಮನೆತನಕ್ಕೆ ಒಳ್ಳೆಯ ಹೆಸರು ಬರುತ್ತದೆ ಇದ್ದುದರಲ್ಲಿ ಕೊಡುವುದರಲ್ಲಿ ನನ್ನ ಗಂಟೇನು ಕರಗುವುದು, ಕೊಡುವ ದಾನ ಮಾಡಿದ ಸಹಾಯ ನಮಗೆ ನೆನಪಿರದಿದ್ದರೆ ಸಾಕು” ಎಂದು ಹೇಳುವ ತಿರುಕಪ್ಪನ ಮಾತಿನಲ್ಲಿ ಎಷ್ಟೋಂದು ನಿಸ್ವಾರ್ಥ ಮನಸ್ಸಿದೆ ಎಂಬುದು ಓದುಗರಿಗೆ ತಿಳಿಯುತ್ತದೆ.
ದೈವಾನುಗ್ರಹದಂತೆ 7 ಮಕ್ಕಳ ತೀರುವಿಕೆಯಿಂದ 8 ನೇ ಮಗನಾಗಿ ಜನಿಸಿದ ಶ್ರೀಯುತ ಸಿದ್ದಣ್ಣ ಅಂಗಡಿಯವರು ಶ್ರೀಕೃಷ್ಣನಂತೆ ಜನಿಸಿದರು ನಿಂಗಮ್ಮ ಪಾಲನೆ ಪೋಷಣೆ ನಡೆಸಿದರು ಸಮಾರ್ಧ ಆಸ್ತಿಯನ್ನು ತಿರುಕಪ್ಪ ಸೋದರಳಿಯನಿಗೆ ನೀಡಿದರು ಎಂಬ ಸಂಗತಿಗಳಲ್ಲಿ ಸಿದ್ದಣ್ಣ ಅಂಗಡಿಯವರ ಮೇಲಿದ್ದ ತಿರುಕಪ್ಪನವರ ಪುತ್ರ ಪ್ರೇಮ ಅರ್ಥವಾಗುತ್ತದೆ.
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯಾನಂತರದ ದಿನಗಳ ಕೂಡ್ಲಿಗಿ ತಾಲೂಕಿನ ಚಿತ್ರಣವನ್ನು ಓದುಗರಿಗೆ ತಿಳಿಸಿಕೊಡುವಲ್ಲಿ ಲೇಖಕರು ಸಫಲತೆಯನ್ನು ಸಾಧಿಸಿದ್ದಾರೆ. ಆ ಕಾಲದಲ್ಲಿಯೇ ಸಿದ್ದಣ್ಣರವರು ವಿದೇಶಿ ರಷ್ಯಾ ಕ್ಯಾಮೆರಾ ಬಳಸುತ್ತಿದ್ದರು ಹಾಗೂ ಅತ್ಯುತ್ತಮ ಫೋಟೋಗ್ರಾಫರ್ ಆಗಿದ್ದರು ಎಂಬುದು ಕಥೆಯ ಮತ್ತೊಂದು ವಿಶೇಷ.
ತಂದೆಗೆ ತಕ್ಕ ಮಗನಂತೆಯೆ ಸಿದ್ದಣ್ಣ ಅಂಗಡಿಯವರು ಕೂಡ ಮೇರು ವ್ಯಕ್ತಿತ್ವದವರು ಯಾವುದನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳದೆ ಆರೋಗ್ಯ ಸರಿ ಇದ್ದರೆ ಸಾಕು ಎಂಬ ಮನೋಭಾವದಿಂದ ಪಿತರಂತೆ ದಾನ ಧರ್ಮ ಮುಂದುವರೆಸಲು ಗುರುಗಳಾದ ಶ್ರೀ ಬಿಂದು ಮಾಧವ ರಾವ್ ರ ದೈಹಿಕ ತರಬೇತಿ ಸಧೃಡ ದೇಹ ನಿರ್ಮಾಣ ಇವೆಲ್ಲವೂ ಬಾಲ್ಯದಿಂದಲೇ ಒಂದು ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣವಾಗುವಲ್ಲಿ ತಿರುಕಪ್ಪನವರ ಅತಿಯಾದ ಮುದ್ದಿಲ್ಲದ ಅತೀ ಸೂಕ್ಷ್ಮವೂ ಅಲ್ಲದ ವಾತಾವರಣ ನಿರ್ಮಿಸಿಕೊಟ್ಟ ತಂದೆಯ ಜವಾಬ್ದಾರಿ ಗುರುತರವಾದದ್ದು ಮನೆಯಲ್ಲಿ ಸಾಕಷ್ಟು ಆಳು ಕಾಳು ಮೃಷ್ಟಾನ್ನ ಭೋಜನವಿದ್ದರೂ ಒಂದಿಷ್ಟು ಅಹಂಕಾರದ ವ್ಯಕ್ತಿತ್ವ ಮೈದಾನದ ತಂದೆಯ ಕಾಲಾಂತರದಲ್ಲಿಯೂ ಕೂಡಾ ಮನೆತನದ ದಾನ ಧರ್ಮಗಳನ್ನು ಮುಂದುವರೆಸಿಕೊಂಡು ಹೋಗುವ ಸಿದ್ದಣ್ಣ ಅಂಗಡಿಯವರವರ ಮನೋವೈಶ್ಯಾಲ್ಯತೆಯನ್ನು ಓದುಗರು ಅರಿಯಬೇಕು.
ತಿರುಕಪ್ಪನವರ ಏಕಮಾತ್ರ ಪುತ್ರ ಸಿದ್ದಣ್ಣ ಅಂಗಡಿಯವರು ಒಬ್ಬನೇ ಪುತ್ರನಾಗಿದ್ದು ಸಾಕಷ್ಟು ಆಸ್ತಿ ಅಡುವು ಇದ್ದ ಕಾರಣ ಸರ್ಕಾರಿ ನೌಕರಿ ಚಾಕರಿ ಗೊಡವೆ ಏಕೆಂದು ಪುತ್ರ ಪ್ರೇಮ ಮೆರೆದರು ಸರ್ಕಾರಿ ಶಿಕ್ಷಕ ವೃತ್ತಿ ತನ್ನೂರಿನಲ್ಲಿಯೇ ದೊರೆತಾಗ ಸ್ವತಃ ತಿರುಕಪ್ಪನವರೆ ಮಗನನ್ನು ಸೇವೆಗೆ ಸೇರಿಸುವ ಜಾಣ್ಮೆ ಮೆಚ್ಚುವಂತದ್ದು.
ಅಲ್ಲದೆಯೂ ಪುಸ್ತಕ ರಚನೆಗೆ ಕೂಡ್ಲಿಗಿ ತಾಲೂಕಿನ ರಾಜಕಾರಣಿಗಳ, ಕಲಾವಿದರ, ಸಿದ್ದಣ್ಣ ಅಂಗಡಿಯವರ ಸಹಪಾಠಿಗಳ,ಸ್ನೇಹಿತರ, ಶಿಷ್ಯರ ಹಾಗೂ ಕಲಾವಿದರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಪುಸ್ತಕದಲ್ಲಿ ದಾಖಲಿಸಿರುವುದು ಸಿದ್ದಣ್ಣ ಅಂಗಡಿಯವರ ಸಾಮಾಜಿಕ,ರಾಜಕೀಯ ಹಾಗೂ ಸಮಾಜಮುಖಿ ಸಂಘಟನೆಯ ಸಾಮರ್ಥ್ಯ ಮೇಲೆ ನೈಜತೆಯ ಕನ್ನಡಿ ಹಿಡಿದಂತಿದೆ ಅಷ್ಟೇಲ್ಲಾ ಸಂಘಟನೆ ಇದ್ದರೂ ಸಿದ್ಧಣ್ಣರವರಾಗಲಿ ಅವರ ಕುಟುಂಬದವರನ್ನಾಗಲಿ ರಾಜಕೀಯ ಗಾಳಿ ಸೋಕದಿರುವುದು ಈ ಕುಟುಂಬದ ಶಕ್ತಿ ಹಾಗೂ ಈ ದೃಷ್ಟಿಯಿಂದ ನೋಡಿದರೆ ಸಿದ್ದಣ್ಣ ಅಂಗಡಿಯವರು ಬರೀ ವ್ಯಕ್ತಿಯಲ್ಲ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.
ತನ್ನ ಗೆಳೆಯರ ಬಳಗದವರೊಂದಿಗೆ ರಾಜಕೀಯ ಮುತ್ಸದ್ದಿಗಳೊಂದಿಗೆ ಒಂದು ಪದವಿ ಪೂರ್ವ ಕಾಲೇಜು ನಮ್ಮ ತಾಲ್ಲೂಕಿನಲ್ಲಿ ಸ್ಥಾಪಿಸಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಶಾಸಕರೊಂದಿಗೆ ಮಾತನಾಡಿ ಮುಖ್ಯಮಂತ್ರಿಗಳ ಸಮ್ಮತಿ ಸಿಕ್ಕಾಗ ಕಟ್ಟಡ ನಿರ್ಮಾಣಕ್ಕೆ ಭೂಮಿಯ ಸಮಸ್ಯೆಯಾದಾಗ ಕೋಟ್ಯಾಂತರ ರೂಪಾಯಿ ಮೌಲ್ಯದ 7 ಎಕರೆ ಜಾಗವನ್ನು ಸರ್ಕಾರಕ್ಕೆ ಭೂದಾನ ಮಾಡಿದ ಕೂಡ್ಲಿಗಿ ತಾಲೂಕಿನ ಕರ್ಣ ಸಿದ್ದಪ್ಪ ಅಂಗಡಿಯವರ ಹಾಗೂ ಅವರ ಮನೆತನದ ಈ ಎದೆಗಾರಿಕೆಯ ನಿಲುವನ್ನು ಸ್ಮರಿಸದೆ ಹೋದರೆ ದೇವರು ಮೆಚ್ಚಲಾರ ಇಷ್ಟಲ್ಲದೆಯೂ ವಿದ್ಯಾರ್ಥಿ ನಿಲಯಗಳಿಗೆ ಆ ಕಾಲದಲ್ಲಿ ಪ್ರಸಾದ ವ್ಯವಸ್ಥೆ ಮಾಡಿದಂತಹ ಪುಣ್ಯಾತ್ಮ ಸಿದ್ದಣ್ಣ ಅಂಗಡಿಯವರು ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ಕೂಡ ಬಡ ಮಕ್ಕಳಿಗೆ ಮಾಡಿದ್ದರು ಎಂಬುದನ್ನು ಕೂಡ್ಲಿಗಿ ತಾಲೂಕಿನ ಬಲ್ಲವರು ಹೃದಯ ತುಂಬಿ ಹೇಳುತ್ತಾರೆ.
ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ 144 ಸೆಕ್ಷನ್ ಜಾರಿಯಾಗಿ ಸುಮಾರು 800 ಕ್ಕೂ ಅಧಿಕ ಮಂದಿ ಜೈಲಾದಾಗ ನ್ಯಾಯಾಲಯದಲ್ಲಿ ಜಾಮೀನು ನೀಡಿ ನ್ಯಾಯಾಧೀಶರ ಹುಬ್ಬೇರಿಸುವಂತೆ ಮಾಡಿ ಔದಾರ್ಯ ಮೆರೆದು ಇಂದಿಗೂ ಆ ಎರಡು ಗುಂಪಿನ ನಡುವೆ ಘರ್ಷಣೆಯಾಗದಂತೆ ಸಿದ್ದಣ್ಣ ಅಂಗಡಿಯವರ ಆ ಘಟನೆಯೇ ಕಾರಣ ಎಂಬುದನ್ನು ಆ ಪ್ರಕರಣದಿಂದ ಮುಕ್ತರಾದವರು ಹೇಳಿರುವುದು ಪುಸ್ತಕದಲ್ಲಿ ದಾಖಲಾಗಿದ್ದು ನಿಜಕ್ಕೂ ಈ ನಿಲುವಿನ ಹಿಂದೆ ಅವರಲ್ಲಿದ್ದ ತನ್ನೂರಿನ ಅಭಿಮಾನ ಹಾಗೂ ನಾಯಕತ್ವದ ಗುಣದ ಅರಿವು ನಮಗಾಗುತ್ತದೆ ಅಲ್ಲಲ್ಲಿ ರಾಮಕೃಷ್ಣ ಹೆಗಡೆಯವರ ರಾಜಕೀಯ ವಿಚಾರಗಳು ಬರುತ್ತಲೇ ಕೂಡ್ಲಿಗಿ ತಾಲೂಕಿನ ಆ ಕಾಲದ ರಾಜಕೀಯ ಚೀತ್ರಣದ ಅರಿವು ನಮನ್ನು ಕಾಡದೆ ಬಿಡುವುದಿಲ್ಲ.
ಕೂಡ್ಲಿಗಿ ತಾಲೂಕಿನ ಚಿತಾಭಸ್ಮದ ಹಿನ್ನೆಲೆ ನನಗಲ್ಲದೆ ಬಹುಶಃ ಕೂಡ್ಲಿಗಿ ತಾಲೂಕಿನ ಬಹುತೇಕ ಯಾರಿಗೂ ತಿಳಿದಿರುವುದಿಲ್ಲ ಎಂಬುದು ನನ್ನ ಭಾವನೆ ಸ್ವಾತಂತ್ರ್ಯ ಬಂದ ನಂತರ ಭಾರತ ದೇಶದಲ್ಲಿ ಮೊಳಗುತ್ತಿದ್ದ ರಾಷ್ಟ್ರಗೀತೆ ಹಾಡುಗಳು ಗೀತೆಗಳು ಆಗ ತಾನೆ ಸ್ವಾತಂತ್ರ್ಯ ಬಂದಿದ್ದರಿಂದ ಅದೊಂದು ತರಹದ ನಿತ್ಯ ಸ್ವಾತಂತ್ರ್ಯ ದಿನಾಚರಣೆ ರೀತಿ ಇತ್ತು ಎನ್ನುವ ಹಾಗೆ ರಾಷ್ಟ್ರೀಯ ಹಬ್ಬಗಳು ಬಂದರೆ ಸಾಕು ಸಿದ್ದಣ್ಣ ಅಂಗಡಿಯವರು ತಯಾರಾಗಿ ದೇಶಭಕ್ತಿ ಗೀತೆಗಳನ್ನು ಹಾಡುತ್ತಿದ್ದ ರೀತಿ ರಿವಾಜುಗಳು ಹಾಗೂ ಬಿಂದು ಮಾಧವ್ ರಾಯ್ ರ ಗಾಂಧೀಜಿ ಅಭಿಮಾನಿಗಳ ಸಂಘದ ಮೂಲಕ ಸಿದ್ದಣ್ಣ ಅಂಗಡಿಯವರು ಗೋಡ್ಸೆ ಗಾಂಧೀಜಿಯವರನ್ನು ಕೊಂದಾಗ ಕಷ್ಟಪಟ್ಟು ಭಸ್ಮವನ್ನು ತಂದು ಹುತಾತ್ಮ ಮಹಾತ್ಮ ಗಾಂಧಿಯವರ ಚಿತಾಭಸ್ಮವನ್ನು ಸ್ಥಾಪಿಸಿದ ಕೀರ್ತಿ ಸ್ವಾತಂತ್ರ್ಯ ಹೋರಾಟದ ಕುರುವಾಗಿ ಕೂಡ್ಲಿಗಿ ಮತ್ತು ಭಾರತದ ಸ್ವಾತಂತ್ರ್ಯದ ಹೋರಾಟದ ದಿನದ ಸಂಬಂಧಗಳ ಮೇಲೆ ಬೆಳಕು ಚೆಲ್ಲುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ.
ಇಷ್ಟಲ್ಲದೆಯೂ ರಕ್ತರಾತ್ರಿ ನಾಟಕದ ಮೂಲಕ ತಾವೇ ಶಕುನಿ ಪಾತ್ರ ಮಾಡಿ ಬಂದ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯ ಮಾಡುವ ಅವರ ಕಾಯಕದಲ್ಲಿ ಅದೆಷ್ಟು ನಾಡ ಪ್ರೇಮವಿದೆಯೆಂಬುದನ್ನು ನಾವೆಲ್ಲರೂ ಅಲ್ಲಗಳೆಯುವಂತಿಲ್ಲ.
ಒಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂಬುವಂತೆ ಶ್ರೀಯುತ ದಿವಂಗತ ಸಿದ್ದಣ್ಣ ಅಂಗಡಿಯವರ ಹೆಂಡತಿಯ ಪ್ರೇರಣೆ ಆ ತಾಯಿ ಕಾಸಿನಗಲ ಹಣೆಯ ಮೇಲೆ ಇಡುತ್ತಿದ್ದ ಹಣೆಯ ಕುಂಕುಮ ಹಾಗೂ ಹುಣಸೆ ಹಣ್ಣಿನ ಬೀಜವನ್ನು ಬೇರ್ಪಡಿಸಲು ಬರುತ್ತಿದ್ದ ಆಳುಗಳೊಂದಿಗೆ ನಡೆದುಕೊಳ್ಳುತ್ತಿದ್ದ ರೀತಿ ಕೆಲಸದವರ ಮಕ್ಕಳುಗಳಿಗೆ ಹಾಲು ಬಿಸ್ಕೇಟ್ ನೀಡಿ ಸತ್ಕರಿಸಿ ವಿಶ್ವಾಸದಿಂದ ಕೆಲಸ ತೆಗೆದುಕೊಳ್ಳುತ್ತಿದ್ಧ ರೀತಿ ನಿಜಕ್ಕೂ ಅನುಕರಣೀಯ.
ಸಿದ್ದಣ್ಣ ಅಂಗಡಿಯವರ ವ್ಯಕ್ತಿತ್ವಕ್ಕೆ ಪ್ರೇರಣೆ ನೀಡುವಂತಹ ಮಡದಿ ಇದೇ ಅಲ್ಲವೇ ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುವುದು ಶಿವಂಗೆ. ಹಾಗೂ ಯಾರೆ ಅತಿಥಿಗಳು ಮನೆಗೆ ಬಂದರೂ ಅತಿಥಿ ಸತ್ಕಾರ ಮಾಡುವುದು ಒಂದು ದಿನವೂ ಬೆಣ್ಣೆ ತುಪ್ಪವಿಲ್ಲದೆ ಊಟ ಮಾಡುತ್ತಿದ್ದ ಸಿದ್ದಣ್ಣ ಅಂಗಡಿಯವರ ವ್ಯಕ್ತಿತ್ವದಲ್ಲಿ ಮಾತ್ರ ಸಾತ್ವಿಕ ಗುಣವೆ ಬಂದದ್ದು ದೈವಾನುಗ್ರಹವಲ್ಲವೇ? ತೋಟದಲ್ಲಿ ಬೆಳೆದ ಮಾವಿನ ಹಣ್ಣಿಗಳನ್ನು ಓಣಿಯ ಮಂದಿಗೆ ಸ್ನೇಹಿತರಿಗೆ ಹಂಚಿ ತಿನ್ನುವ ಗುಣ ನಿಜಕ್ಕೂ ಶ್ಲಾಘನೀಯ.
ಹೀಗೆಯೇ ತಮ್ಮ ತಂದೆ ಕಟ್ಟಿದ್ದ ಮನೆಯಲ್ಲಿ ತಮ್ಮ ತಂದೆಯಂತೆಯೇ ನೀವು ದಾನ ಧರ್ಮಗಳನ್ನು ಮಾಡಿ ಈ ಬದುಕು ನಶ್ವರ ಕೊಟ್ಟು ಕೊರಗಬೇಡಿ ನಿಮ್ಮಿಷ್ಟದಂತೆ ಬದುಕಿ ಎಂದು ಹೋದ ವರುಷ ದೈವಾದೀನರಾದರು ಎಂದು ಶ್ರೀಯುತ ವೀರೇಶ್ ಅಂಗಡಿ ಸರ್ ಸಿದ್ದಣ್ಣ ಅಂಗಡಿಯವರ ತೃತೀಯ ಪುತ್ರ ಗದ್ಗದಿತರಾಗಿ ಹೇಳುವಲ್ಲಿ ಸಿದ್ದಣ್ಣ ಅಂಗಡಿಯವರ ವ್ಯಕ್ತಿತ್ವ ನಮ್ಮ ಕಣ್ಮುಂದೆ ಕಟ್ಟಿ ನಿಲ್ಲುತ್ತದೆ ಶ್ರೀಯುತರು ಶತಾಯುಷಿಗಳಾಗಬೇಕಿತ್ತು ಆದರೆ ದೈವಾನುಗ್ರಹವೇನಿದೆಯೋ ಯಾರು ಬಲ್ಲರು.
ಹೂಂ… ಇರಲಿ ಶ್ರೀಯುತ ಸಿದ್ದಣ್ಣ ಅಂಗಡಿಯವರ ವ್ಯಕ್ತಿತ್ವ ನಮ್ಮ ಕೂಡ್ಲಿಗಿ ತಾಲೂಕಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತದ್ಧು ಈ ಪುಸ್ತಕವನ್ನು ನಮ್ಮ ನಾಡಿನ ಮೂಲೆ ಮೂಲೆಗು ತಲುಪಿಸಬೇಕೆಂಬ ನನ್ನ ವೈಯಕ್ತಿಕ ಮನವಿಯನ್ನು ವೀರೇಶ್ ಅಂಗಡಿ ಸರ್ ರವರಲ್ಲಿಡುತ್ತಾ ಸಿದ್ದಣ್ಣ ಅಂಗಡಿಯವರ ವ್ಯಕ್ತಿತ್ವವನ್ನು ನಾನು ಕೊಂಚ ಮಟ್ಟಿಗೆ ವೀರೇಶ್ ಅಂಗಡಿ ಸರ್ ರವರಲ್ಲಿ ಕಂಡೆ ಈ ಸಿದ್ದಣ್ಣ ಅಂಗಡಿಯವರ ಕುಟುಂಬಕ್ಕೆ ಇನ್ನಷ್ಟು ದಾನ ಧರ್ಮ ಮಾಡುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂಬುದು ನನ್ನ ಮನದಾಸೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

