Connect with us

ರಾಜಕೀಯ

ಕನ್ಹಯ್ಯ, ಜಿಗ್ನೇಶ್ ಕಾಂಗ್ರೆಸ್ ಸೇರಿದ್ದನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು..?

Published

on

  • ಹರ್ಷಕುಮಾರ್ ಕುಗ್ವೆ

ಮಾಜಿ ಕಮ್ಯುನಿಸ್ಟ್ ಯುವ ಮುಂದಾಳು ಕನ್ಹಯ್ಯ ಕುಮಾರ್ ಮೇಲೆ ನಮ್ಮ ಕೆಲವು ಕಮ್ಯುನಿಸ್ಟ್ ಗೆಳೆಯರು ನಡೆಸುತ್ತಿರುವ ಟ್ರೋಲ್ ಕುರಿತು ನಾನೂ ಒಂದೆರಡು ಪೋಸ್ಟ್ ಹಾಕಿದ್ದಕ್ಕೆ ಕೆಲವರಿಗೆ ಬೇಜಾರಾಗಿದೆ ಎಂದು ತಿಳಿಯಿತು. ನನ್ನ ಉದ್ದೇಶ ಯಾರನ್ನೂ ನೋಯಿಸುವುದಲ್ಲ.

ಆದರೆ ಫ್ಯಾಸಿಸ್ಟರನ್ನು ವಿರೋದಿಸುವಲ್ಲಿ ತಾನು ತೋರಿದ ದಿಟ್ಟತನ, ವಾಕ್ಚಾತುರ್ಯದ ಕಾರಣಕ್ಕೆ ಇಷ್ಟು ದಿನ ಎಲ್ಲರ ಕಣ್ಮಣಿಯಾಗಿದ್ದ ಹೆಮ್ಮೆಯ ಕೂಸಾಗಿದ್ದ ಹುಡುಗನೊಬ್ಬ ಮತ್ತೊಂದು ಪಕ್ಷ ಸೇರಿದ ಕೂಡಲೇ ದ್ರೋಹಿ, ವಂಚಕ ಏನೇನೆಲ್ಲಾ ಆಗಿ ಯಾವ ಮಾರ್ಜಿನ್ ಕೊಡದೇ ನಿಂದಿಸತೊಡಗಿದಾಗ ಆದ ಕಳವಳದಿಂದ ‘ವಾರೆ’ನೋಟದಿಂದ ಒಂದೆರಡು ಸಾಲು ಬರೆಯಬೇಕಾಯಿತು.

ಕನ್ಹಯ್ಯ, ಜಿಗ್ನೇಶ್ ಕಾಂಗ್ರೆಸ್ ಸೇರಿದ್ದನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ಸೈದ್ಧಾಂತಿಕ, ಸಂಘಟನಾತ್ಮಕ ಬದ್ಧತೆ ಇಲ್ಲದ ಅವಕಾಶವಾದಿಗಳು ಬಂಡವಾಳಶಾಹಿ ಪಕ್ಷವನ್ನು ಸೇರಿಕೊಂಡರು ಎಂದು ಸರಳವಾಗಿ ತೀರ್ಪು ಹೊರಡಿಸಬಹುದೆ? ಖಂಡಿತಾ ಇಂತಹ ನಿಲುವು ಸರಿಯಲ್ಲ ಎಂಬುದು ನನ್ನ ಖಚಿತ ಅಭಿಪ್ರಾಯ. ಯಾಕೆ ಎಂದು ಮುಂದೆ ವಿವರಿಸುವೆ.

ನಾನು ಯಾವುದೇ ಪಕ್ಷದ ಸದಸ್ಯನಾಗಲೀ ವಕ್ತಾರನಾಗಲೀ ಅಲ್ಲ. ಯಾವುದೇ ಒಂದು ಪಕ್ಷದ ಐಡಿಯಾಲಜಿಗೂ ಆತುಕೊಂಡಿಲ್ಲ. ಸಧ್ಯದ ಮಟ್ಟಿಗೆ ಫ್ಯಾಸಿಸ್ಟರನ್ನು ಹೊರತುಪಡಿಸಿದ ಎಲ್ಲಾ ಪಕ್ಷ ಮತ್ತು ಸಂಘಟನೆಗಳ ನಡುವೆ ಯಾವುದಾದರೂ ರೂಪದ ಸಮನ್ವಯ ಆಗಬಹುದೇ ಎಂಬ ಆಸೆ ಇಟ್ಟುಕೊಂಡಿದ್ದೇನೆ.

ನನ್ನ ದೃಷ್ಟಿಯಲ್ಲಿ ಇಂದು ಅವನತಿಯ ಅಂಚಿನಲ್ಲಿರುವ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಯಾವುದೋ ರೀತಿಯಲ್ಲಿ ಒಂದುಗೂಡಲೇಬೇಕು, ಇಂತಹ ಒಂದುಗೂಡುವಿಕೆಗೆ ವಿರೋಧವಿರುವವರು ಫ್ಯಾಸಿಸ್ಟ್ ಶಕ್ತಿಗಳಿಗೆ ಪೂರಕವಾಗಿಯೇ ಇರಲು ಸಾಧ್ಯ ಎಂಬ ನಿಲುವು ನನ್ನದು.

ಕೆಲ ವರ್ಷಗಳ ಹಿಂದೆ ಹೆಸರಾಂತ ಪತ್ರಕರ್ತ ರವೀಶ್ ಕುಮಾರ್ ಇಂತಹುದೇ ಒಂದು ಸಲಹೆ ಮುಂದಿಟ್ಟಿದ್ದರು. ದೇಶದ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳು ಸ್ವಯಂ ವಿಸರ್ಜನೆಗೊಂಡು ಹೊಸ ಪಕ್ಷ ಆಗಬೇಕು ಎಂಬ ಒಂದು ಅವಾಸ್ತವಿಕ ಯೋಜನೆಯೊಂದನ್ನು ಅವರು ಮುಂದಿಟ್ಟಿದ್ದರು. ಅವರ ಸಲಹೆ ಜಾರಿಯಾಗಲು ಅಸಾಧ್ಯ ಎಂದರೂ ಅವರ ಆಶಯ ಸರಿಯಾಗಿತ್ತು ಎಂದು ನನ್ನ ಭಾವನೆ.

ವರ್ಷದ ಹಿಂದೆ ಕಾಂಗ್ರೆಸ್ ಸೇರಿದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ‘ಯಾಕೆ ಕಾಂಗ್ರೆಸ್ ಸೇರಿದ್ರಿ? ಅಂತ ಕೇಳಿದ್ದೆ. ಅದಕ್ಕವರು ನೇರ ಉತ್ತರಿಸದೇ ಒಂದು ಉದಾಹರಣೆ ಮೂಲಕ ಹೇಳಿದ್ದರು. ಈಗ ಒಂದು ಮನೆ ಹೊತ್ತಿ ಉರಿಯುತ್ತಿದೆ. ಅದರ ಸನಿಹದಲ್ಲಿ ಒಂದು ಫೈರ್ ಎಂಜಿನ್ ಇದೆ. ಆದರೆ ಅದರಲ್ಲಿ ಇರುವವರು ನಿದ್ದೆ ಮಾಡ್ತಾ ಇದ್ದಾರೆ. ಆ ಮನೆಯಿಂದ ಬಹಳ ದೂರದಲ್ಲಿ ಇರುವ ಫೈರ್ ಇಂಜಿನ್ ಗಳು ಹತ್ತಿರ ಬರೋ ಅಷ್ಟರಲ್ಲಿ ಇಡೀ ಮನೆ ಉರಿದು ಹೋಗತ್ತೆ. ಹೀಗಾಗಿ ಹತ್ತಿರ ಇರುವ ಫೈರ್ ಇಂಜಿನ್ ಹತ್ತಿ ಅದರಲ್ಲಿ ಇರೋರನ್ನ ಎಚ್ಚರಿಸಿ ನಾವೂ ಮನೆಯ ಬೆಂಕಿ ಆರಿಸಲು ಪ್ರಯತ್ನ ಮಾಡಬೇಕಾಗುತ್ತೆ’ ಎಂದು ಹೇಳಿದ್ದರು.

ಈಗ ಜಿಗ್ನೇಶ್, ಕನ್ಹಯ್ಯ ವಿಶಯಕ್ಕೆ ಬರೋಣ. ಕಳೆದ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದಲೇ ವಡಗಾಂವ್ ಕ್ಷೇತ್ರದಿಂದ ಜಿಗ್ನೇಶ್ ಪಕ್ಷೇತರ ಅಭ್ಯರ್ಥಿಯಾಗಿ ಆರಿಸಿ ಬಂದಿದ್ದರು. ಅಂದು ತಮ್ಮ ಪಕ್ಷ ಸೇರಲು ಒಪ್ಪದ ಜಿಗ್ನೇಶ್ ಗೆ ರಾಹುಲ್ ಗಾಂಧಿ ಬೆಂಬಲಿಸಿ ಆರಿಸಿ ಬರಲು ಸಹಕರಿಸಿದ್ದರು. ಅಂದಿನ ಸಂದರ್ಭದಲ್ಲಿ ಜಿಗ್ನೇಶ್ ಚುನಾವಣೆಯಲ್ಲಿ ಗೆಲ್ಲಬೇಕೆಂದು ಇಡೀ ದೇಶದ ಶೋಷಿತರು ಬಯಸಿದ್ದರು.

ಯಾಕೆಂದರೆ ಅದು ಕೇವಲ ಜಿಗ್ನೇಶ್ ಗೆಲುವಾಗಿರಲಿಲ್ಲ. ಜಿಗ್ನೇಶ್ ಪ್ರತಿನಿಧಿಸಿದ್ದ ಚಿಂತನೆಗಳ ಗೆಲುವಾಗಿತ್ತು. ಹೀಗಾಗೇ ಜಿಗ್ನೇಶ್ ರನ್ನು ಸೋಲಿಸಲು ಮೋದಿ ಮತ್ತು ಶಾ ಮಾಡಿದ ಪ್ರಯತ್ನ ಅಷ್ಟಿಷ್ಡಿರಲಿಲ್ಲ‌. ಜಿಗ್ನೇಶ್ ಗೆಲುವಿನೊಂದಿಗೆ ನಾವೆಲ್ಲರೂ ಬೀಗಿದ್ದೆವು. ಕರ್ನಾಟದಿಂದಲೂ ಸಾವಿರಾರು ರೂಪಾಯಿಗಳನ್ನು ಸಂಗ್ರಹಿಸಿ ಕಳಿಸಿದ್ದೆವು.

ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೇಗುಸರಾಯ್ ನಿಂದ ಸಿಪಿಐ ಪಕ್ಷದ ಅಭ್ಯರ್ಥಿಯಾಗಿ ಕನ್ಹಯ್ಯ ಸ್ಪರ್ದಿಸಿದ್ದರು. ಆಗಲೂ ಇಡೀ ದೇಶದ ಪ್ರಗತಿಪರ ಶಕ್ತಿಗಳು ಕನ್ಹಯ್ಯ ಗೆಲುವಿಗೆ ಆಶಿಸಿದ್ದರು. ಆದರೆ ಮಹಾಘಟಬಂದನ್ ಮಾಡಿದ ಎಡವಟ್ಟಿನಿಂದಾಗಿ ಹಾಗೂ ಬೂಮಿಹಾರ್ ಜಾತಿಯವರು ಬಿಜೆಪಿ ಜೊತೆ ನಿಂತ ಕಾರಣದಿಂದ ಕನ್ಹಯ್ಯ ಬಿಜೆಪಿ ಸ್ಪರ್ಧಿ ಎದುರು ಸೋಲುಂಡರು.

ಈಗ ಮತ್ತೊಂದು ಚುನಾವಣೆ ಬರುತ್ತಲಿದೆ. ಎಂದಿನಂತೆ ಫ್ಯಾಸಿಸ್ಟ್ ರು ಜನರ ಮನಸುಗಳನ್ನು ಒಡೆಯುತ್ತಿದ್ದಾರೆ. ಬೆಂಕಿ ಹಚ್ಚುತ್ತಿದ್ದಾರೆ. ಅವರ ಆಡಳಿತರ ವೈಫಲ್ಯ ಮುಚ್ಚಿಕೊಳ್ಳಲು ಧರ್ಮ ದ್ವೇಷವನ್ನು ದೇಶವ್ಯಾಪಿ ಹರಡುವ ತಯಾರಿ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಮುಂದೆ ಕೆಲವು ಪ್ರಶ್ನೆಗಳು ಎದುರಾಗುತ್ತವೆ.‌

ಅಕಸ್ಮಾತ್ ಮುಂದಿನ ಚುನಾವಣೆಗಳಲ್ಲೂ ಈ ಬ್ರಾಹ್ಮಿನಿಕಲ್ ಫ್ಯಾಸಿಸ್ಟ್ ಶಕ್ತಿಗಳೇ ಗೆಲುವು ಸಾಧಿಸಿದರೆ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ತತ್ವಗಳ ಸ್ಥಿತಿ ಎಲ್ಲಿಗೆ ತಲುಪಬಹುದು? ಈಗಾಗಲೇ ಡಾ.ಆನಂದ್ ತೇಲ್ತುಂಬ್ಡೆ, ಸಂಜೀವ್ ಭಟ್, ರೋಣಾ ಮುಂತಾದ ಪ್ರಜಾತಂತ್ರ ಮುಂದಾಳುಗಳನ್ನು ಜೈಲಿನಲ್ಲಿ ಕೊಳೆಸುತ್ತಿರುವ ಇವರು ಮತ್ತೊಂದು ಅಧಿಕಾರಕ್ಕೆ ಬಂದರೆ ಯಾವ ರೀತಿ ಆಡಳಿತ ನಡೆಸಬಹುದು?

ಇಂತಹ ಒಂದು ಪ್ರಜಾಪ್ರಭುತ್ವದ ಬಿಕ್ಕಟ್ಟಿನ ಸನ್ನಿವೇಶದಲ್ಲಿ ನಮ್ಮ ನಡೆ ಏನಾಗಬೇಕು?

ಕಮ್ಯುನಿಸ್ಟ್, ಬಿ ಎಸ್ ಪಿ, ಎಸ್ಡಿಪಿಐ ಗಳು ಫ್ಯಾಸಿಸ್ಟರನ್ನು ಅಧಿಕಾರದಿಂದ ತಡೆಯಲು ನಿಜಕ್ಕೂ ಸಮರ್ಥವಾಗಿವೆಯಾ? ಅವುಗಳ ತತ್ವ ಚಿಂತನೆಗಳು ಉತ್ತಮವೂ ಉದಾತ್ತವೂ ಇರಬಹುದು. ಆದರೆ ತಕ್ಷಣದ ಅಜೆಂಡಾ ಒಂದು ದೇಶದ ಮುಂದಿದೆಯಲ್ಲವೆ?

ಇಂತಹ ಸನ್ನಿವೇಶದಲ್ಲಿ ಪ್ರಾಯಶಃ ಕಾಂಗ್ರೆಸ್ ಉಳಿದ ಪಕ್ಷಗಳಿಗಿಂತ ಉತ್ತಮ ಎಂದುಕೊಂಡು ಜಿಗ್ನೇಶ್, ಕನ್ಹಯ್ಯ, ಸೆಂಥಿಲ್ ತರದವರು ಕಾಂಗ್ರೆಸ್ ಸೇರಿಕೊಂಡಿದ್ದರೆ ಅದರ ಬಗ್ಗೆ ತೀರಾ ಬೇಸರ ಪಟ್ಟುಕೊಳ್ಳುವ ಅಗತ್ಯ ನನಗಂತೂ ಕಾಣುತ್ತಿಲ್ಲ.‌

ಹಾಗಂತ ಕಾಂಗ್ರೆಸ್ ಸರಿಯಾದ ಆಯ್ಕೆಯಾ? ಅಲ್ಲಿ ಎಲ್ಲವೂ ಸರಿ ಇದೆಯಾ? ಇದಕ್ಕೆ ಸಕಾರಾತ್ಮಕ ಉತ್ತರವನ್ನು ಪ್ರಾಯಶಃ ಕಾಂಗ್ರೆಸ್ ನವರೂ ಎದೆ ತಟ್ಟಿಕೊಂಡು ಕೊಡಲಾರರು. ಅಲ್ಲಿ ತತ್ವ ಸಿದ್ದಾಂತಗಳಿಗೆ, ಪ್ರಾಮಾಣಿಕತೆಗೆ ಯಾವ ಬೆಲೆ ಇದೆ ಎಂಬುದೂ ಪ್ರಶ್ನೆಯೇ.

ದೇಶದ ಮಟ್ಟದಲ್ಲಿ ಲಕ್ಷಾಂತರ ಕಾರ್ಯಕರ್ತರ ಮುಂದಾಳುಗಳ ಪಡೆ ಇದ್ದರೂ unity of thought and action ಅಂತೂ ಅಲ್ಲಿಲ್ಲ. ಕಾಂಗ್ರೆಸ್ ನ ಮೂಲ ತತ್ವಗಳ ಕುರಿತೇ ಸೂಕ್ತ ಪರಿಣಾಮಕಾರಿ ಶಿಕ್ಷಣವೂ ಅಲ್ಲಿ ಇದ್ದಂತಿಲ್ಲ. ಈಗ ಇರುವ ವ್ಯಕ್ತಿ ಕೇಂದ್ರಿತ ಕಾಂಗ್ರೆಸನ್ನು ಸ್ವಲ್ಪ ಮಟ್ಟಿಗೆ ಕೇಡರ್ ಬೇಸ್ಡ್ ಮತ್ತು ಸಂವಿಧಾನವಾದಿ ಪಕ್ಷವಾಗಿ ಮಾರ್ಪಡಿಸಲು ಸಾಧ್ಯವಾದರೆ ಒಂದಷ್ಟು ಉತ್ತಮ ಫಲಿತಾಂಶ ನಿರೀಕ್ಷಿಸಬಹುದು.

ಕಾಂಗ್ರೆಸ್ ನ ವರ್ಗ ಹಿನ್ನೆಲೆ, ಅವರ ಆರ್ಥಿಕ ನೀತಿಗಳು ಇತ್ಯಾದಿಗಳ ಬಗ್ಗೆ ತಕರಾರು ಬೇಜ್ಜಾನ್ ಇವೆ. ಆದರೆ ನರಹತ್ಯೆಗಳನ್ನು ಯಾವ ಕ್ಷಣದಲ್ಲಿ ನಡೆಸಬಲ್ಲ ಒಂದು ಶಕ್ತಿಯನ್ನು ಎದುರಿಸಲು ಮಿಕ್ಕೆಲ್ಲರೂ ತಕ್ಷಣದ ಕನಿಷ್ಟ ಸಾಮಾನ್ಯ ಕಾರ್ಯಕ್ರಮವೊಂದರ ಬಗ್ಗೆ ಚಿಂತಿಸುವ ಅಗತ್ಯವಿದೆ.

ಕೇವಲ ಚುನಾವಣೆಯಿಂದ ಫ್ಯಾಸಿಸ್ಟ್ ಶಕ್ತಿಗಳನ್ನು ಹಿಮ್ಮೆಟ್ಟಿಸುವುದು ಅಸಾಧ್ಯ. ಆದರೆ ಬೀದಿಯ ಮೇಲೆ ಎದುರಿಸಲಾದರೂ ನಮಗೊಂದಷ್ಟು ಸಮಾಯಾವಕಾಶ ತೆಗೆದುಕೊಳ್ಳಲಾದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಲೇಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ.

ಈ ನಡುವೆ ಯಾರಾದರೂ ಕಮ್ಯುನಿಸ್ಟ್ ಪಕ್ಷದಿಂದ ಕಾಂಗ್ರೆಸ್ ಗೆ, ಬಿಎಸ್ ಪಿಯಿಂದ ಎಸ್ ಡಿ ಪಿ ಐ, ಎಸ್ ಡಿ ಪಿ ಐ‌ನಿಂದ ಕಾಂಗ್ರೆಸ್ ಹೀಗೆ ಸ್ಥಾನ ಪಲ್ಲಟ ಮಾಡಿಕೊಂಡರೆ ತೀರಾ ತಲೆಕೆಡಿಸಿಕೊಳ್ಳಬೇಕಿಲ್ಲ. Let’s welcome…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending