Connect with us

ದಿನದ ಸುದ್ದಿ

ಬಹುಜನರು ನಂಬಿರುವ ‘ಕತ್ತೆ ಕಥೆ’..!

Published

on

  • ಪರಶುರಾಮ್. ಎ

ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ.

ನಂಬಿಕೆ, ಭಕ್ತಿ, ಮೌಲ್ಯಗಳನ್ನು ಬಂಡವಾಳವಾಗಿಸಿಕೊಂಡಿರುವವರೇ ಈ ಕಥೆಯ ಸೃಷ್ಟಿಕರ್ತರು. ಯಾವುದೋ ಒಂದು ಕಾಲದಲ್ಲಿ ಹುಟ್ಟಿರಬಹುದಾದ ಈ ಕಥೆ ಇನ್ನೂ ನಿಮ್ಮನ್ನು ಬಂಧನದಲ್ಲಿ ಇಟ್ಟಿದೆ ಎಂದರೆ ಅದಿನ್ನೆಂತಹ ಕ್ರೂರ ಲಾಭಕೋರ ವ್ಯವಸ್ಥೆ ಇರಬಹುದು ನೀವೇ ಊಹಿಸಿ ಯೋಚಿಸಿ! ಈ ಕಥೆ ಬಗ್ಗೆ ಈಗಾಗಲೇ ಕನ್ನಡದ ಲೇಖಕರು ಭಾಷಣಕಾರರು ಬಹುಜನರಿಗೆ ತಿಳಿಸಿ ಎಚ್ಚರಿಸುತಿದ್ದರು ಬಹುಜನರು ಇನ್ನೂ ಅದೇ ಕುತಂತ್ರ ಷಡ್ಯಂತ್ರಗಳಿಗೆ ಬಲಿಯಾಗಿರುವುದು ಸಮಾಜದ ಅಧೋಗತಿಗೆ ಒಂದು ಕಾರಣವು ಹೌದು. ತಮ್ಮನ್ನು ತಾವು ಶೋಷಿಸಿಕೊಳ್ಳುವುದು ಮತಿಹೀನ ಕೃತ್ಯ ಅಜ್ಞಾನ ಮೌಢ್ಯ ಪ್ರದರ್ಶನವಾಗಿದೆ.

ಡಾ.ಸಿದ್ದಲಿಂಗಯ್ಯ ನವರ “ಕತ್ತೆ ಮತ್ತು ಧರ್ಮ” ಕವನದಲ್ಲಿದೆ ನಾನು ಹೇಳಲು ಹೊರಟ ಸಾರಾಂಶ. (ಬಹುಜನರು ಕತ್ತೆ ಮತ್ತು ಧರ್ಮ ಕವನ ಓದಿ) ನಾನು ಇಲ್ಲಿ ಅದರ ಸಣ್ಣ ಸಾರಾಂಶ ಮಾತ್ರ ಉದಾಹರಿಸುವೆ. ಸಿದ್ದಯ್ಯನೆಂಬ ಅಗಸನಿಗೆ ಕತ್ತೆ ಎಂಬುದು ಜೊತೆಗಾರ, ಅದರೊಂದಿಗೆ ಅಪಾರ ಸ್ನೇಹ ಮಮತೆ ಹೊಂದಿದವನು ಈತ. ಎಷ್ಟರಮಟ್ಟಿಗೆ ಎಂದರೆ ಜನಗಳು ಕತ್ತೆಯನ್ನು ಸಿದ್ದಯ್ಯನ ಸಾಕುಮಗಳು ಅನ್ನುವಷ್ಟು ಪ್ರೀತಿ ಒಬ್ಬರಿಗೊಬ್ಬರಿಗೆ.

ಇಂಥ ತನ್ನ ನೆಚ್ಚಿನ ಕತ್ತೆ ಒಂದು ದಿನ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದು ಮಲಗಿತು. ದಾರಿಯ ಮೂಲೆಯಲ್ಲಿ ಒಂದು ಕಡೆ ಮಣ್ಣು ಮಾಡಿ ಸಮಾಧಿಗೆ ನಮಿಸಿ ಪೂಜಿಸಿ ನೊಂದ ಸಿದ್ದಯ್ಯ ದೇಶಾಂತರ ಹೊರಟು ಹೋದ. ವ್ಯಾಪಾರಕ್ಕೆ ಅದೇ ದಾರಿಯಲ್ಲಿ ಹೊರಟಿದ್ದ ಜಯಶೆಟ್ಟಿ ಎಂಬುವನು ಅಗಸನ ಪೂಜೆ ನೋಡಿ ಯಾವುದೊ ಮಹಾತ್ಮರ ಸನ್ನಿಧಿಯೆಂದುಕೊಂಡು ಕೈ ಮುಗಿದು ತನ್ನ ವ್ಯಾಪಾರಕ್ಕೆ ಮರಳಿದ.

ಶೆಟ್ಟಿಗೆ ಅವತ್ತು ಲಾಭದ ಮೇಲೆ ಲಾಭ ವ್ಯಾಪಾರ ‘ದಿಲ್ಕುಷ್’ ಆಗಿ ಸಮಾಧಿಗೆ ದೇವರಕಂಬ ಎಣ್ಣೆ ತಂದುಕೊಟ್ಟ. ಈ ಸುದ್ದಿ ಇಡೀ ಊರಿಗೆ ಹರಡಿ ಕೆಲವೇ ದಿನಗಳಲ್ಲಿ ಭಕ್ತರು ಹೆಚ್ಚಾಗಿ ಅಲ್ಲೊಂದು ದೇವಾಲಯ ನಿರ್ಮಾಣವಾಗಿ ಪರಿಷೆ ನಡೆಯೊ ಮಟ್ಟಿಗೆ ಬೆಳೆದಿರುತ್ತೆ. ಆ ದೇವಾಲಯದ ಮುಂದೆ ಭಿಕ್ಷುಕರು ಸಣ್ಣ ಸಣ್ಣ ಅಂಗಡಿಗಳು ಜನಗಳು ವೈದಿಕರು, ದಾನ ನೀಡಲು ಸಾಹುಕಾರರು ಎಲ್ಲರೂ ಸೇರಿರುತ್ತಾರೆ.

ಈ ಸುದ್ದಿ ಅರಮನೆಯ ತಲುಪಿ ರಾಜ ರಾಣಿ ಈ ದೇವಾಲಯ(ಅಲ್ಲಲ್ಲ ಕತ್ತೆ ಸಮಾಧಿ) ನೋಡಲು ಬಯಸಿ ಹೊರಟು ಬರುತ್ತಾರೆ. ವರ್ಷ ಕಳೆದ ನಂತರ ಅಗಸ ಸಿದ್ದಯ್ಯ ತಾನು ಮಾಡಿದ ಕತ್ತೆ ಸಮಾಧಿ ಹುಡುಕಿ ಕಾಣಲು ಬರುತ್ತಾನೆ ಆದರೆ ತಳವಾರರು ಅವನನ್ನು ಕತ್ತು ಹಿಡಿದು ಆಚೆ ತಳ್ಳುತ್ತಾರೆ ಇದಿಷ್ಟು ಕವನದ ಸಾರಾಂಶ.

ಈ ಕವನದಲ್ಲಿ ಬಹುಜನರು ನಂಬಿರಬಹುದಾದ ಅನೇಕ ಮೌಢ್ಯಗಳನ್ನು ಹೊತ್ತಿವೆ. ಜ್ಞಾನದ ಮಾರ್ಗವು ಸಹ ಇದೆ. ನಮಗೆಲ್ಲರಿಗೂ ಗೊತ್ತು ಸಿಂಧೂ ಬಯಲಿನ ನಾಗರೀಕತೆಯಿಂದಲೂ ಇಲ್ಲಿನ ಮೂಲನಿವಾಸಿ ತಳಸಮುದಾಯದ “ಬಹುಜನರು” ಪ್ರಾಣಿ- ಪಕ್ಷಿ. ನಾಯಿ. ಪಶುಸಂಗೋಪನೆ, ಕಾಡು ಪ್ರಾಣಿಗಳ ಬೇಟೆಯಲ್ಲಿ ಬಹು ಪ್ರಸಿದ್ಧರು ನಿಷ್ಣತೆಯುಳ್ಳವರು ಕೂಡಾ.

ಅವು ತಮ್ಮ ಜೀವನದ ಅವಿಭಾಜ್ಯ ಅಂಗವೇನೊ ಎಂಬ ಮಟ್ಟಿಗೆ ಸಹ ಪಳಗಿಸಿ ಸಾಕುತ್ತಿದ್ದರು. ಹೀಗೆಯೇ ಸಿದ್ದಯ್ಯನೆಂಬ ಅಗಸ ತನ್ನ ಕತ್ತೆ ಸಾಕಿದ್ದು ಅದು ಸತ್ತ ನಂತರ ಅದರ ಗುರುತಿಗೆ ಮಣ್ಣು ಮಾಡಿ ಧನ್ಯವಾದಕ್ಕಾಗಿ ಪೂಜೆ ಸಲ್ಲಿಸುವುದು ಸಹ ಈ ನೆಲದ ನೈಜ ಸಂಸ್ಕೃತಿಗಳ ಬಿಂಬವೇ ಅಗಿದೆ.

ಈಗಲೂ ಕೂಡ ನಾವುಗಳು ಸತ್ತವರ ಸಮಾಧಿ ಮೇಲೆ ತುಳಸಿ ಗಿಡ ವಿವಿಧ ಸಸಿ ನೆಟ್ಟು ಪೋಷಿಸುವುದು ಕಾಣಬಹುದು.(ಬೆಂಕಿಯಲ್ಲಿ ದೇಹ ಸುಟ್ಟು ಅದರ ಅಸ್ಥಿಯನ್ನು ನೀರಿನಲ್ಲಿ ಬಿಟ್ಟು ಗುರುತೇ ಇಲ್ಲದಂತೆ ಸಂಬಂಧ ಕಡಿದು ಕೊಳ್ಳುವುದು ಕುತಂತ್ರಿ ಆರ್ಯರ ಸಂಸ್ಕೃತಿಯಾಗಿದೆ ನೆನಪಿರಲಿ).

ಮಹಾನವಮಿ ಅಥವಾ ಮಾರ್ನಾಮಿ ಹಬ್ಬದ ಸಂದರ್ಭದಲ್ಲಿ ತೀರಿ ಹೋದ ಹಿರಿಯರಿಗೆ – ವ್ಯಕ್ತಿಗಳಿಗೆ ಎಡೆ ಇಡುವುದು ಈ ನೆಲ ಮೂಲದ ಸಂಸ್ಕೃತಿ, ಪಿಂಡ ಪ್ರದಾನವಲ್ಲ. ಆದರೆ ಈ ಕುತಂತ್ರಕ್ಕೂ ಬಹುಜನರು ಬಲಿಯಾಗಿದ್ದಾರೆ. ಕತ್ತೆ ಸಮಾಧಿಗೆ ಪೂಜೆ ಸಲ್ಲಿಸುವಾಗ ಜಯಶೆಟ್ಟಿ ಎಂಬುವ ವ್ಯಾಪಾರಸ್ಥ ನೋಡಿ ಕೈಮುಗಿದು ಹೋದ ನಂತರ ಲಾಭವಾಯಿತು ಎಂಬುದು ಇಲ್ಲಿ ಬೇರೆಯವರು ಯಾರು ಏನು ಮಾಡುತ್ತಿದ್ದಾರೆ ತಾನು ಅವರಂತೆ ಅನುಕರಿಸುವುದು ಸಾಬೀತಾಗುತ್ತದೆ.

ಆಗಲೇ ಹೇಳಿದಂತೆ ನಮ್ಮದಲ್ಲದ ಪಿಂಡ ಪ್ರದಾನವೂ ಸಹ. ನಿಮಗೆ ಗೊತ್ತಿರಲಿ ಧ್ಯಾನ ಯೋಗ ಪ್ರಾರ್ಥನೆ ವಿವಿಧ ಚಟುವಟಿಕೆ ಯಿಂದ ಮನಸ್ಸು ಉಲ್ಲಾಸಿತಗೊಂಡು ಪಾಸಿಟಿವ್ ನಿಂದ ಆ ದಿನದ ಚಟುವಟಿಕೆಯ ಎಲ್ಲದರ ಮೇಲೂ ಪ್ರಭಾವ ಬೀರುತ್ತದೆ. ಶೆಟ್ಟಿಗೆ ಇಲ್ಲಾಗಿದ್ದು ಅದೇ. ನಂತರ ತನ್ನ ಸ್ವಪ್ರಯತ್ನ ಸ್ವಂತ ಶಕ್ತಿ ಮರೆತವನೊಬ್ಬ ಸಮಾಧಿಯ ಬಗ್ಗೆ ದೊಡ್ಡ ಪುಕಾರು ಮಾಡಿ ಮೌಢ್ಯ ಪ್ರಸಾರದಲ್ಲಿ ತೊಡಗಿದ.

ಅಲ್ಲೊಂದು ಜಾತ್ರೆ ಪೂಜೆ ನಡೆಯುತ್ತದೆ. ದಾನ ವ್ಯವಹಾರ ಆಗುವಂತೆ ಮಾಡುವಲ್ಲಿ ತಾನು ತೊಡಗಿಸಿಕೊಂಡ. ಇಂತದ್ದೇ ಪರಿಸ್ಥಿತಿ ಈಗಲೂ ಕಾಣಬಹುದು. ವರ್ಷ ಕಳೆದ ನಂತರ ಕತ್ತೆ ಸಮಾಧಿಯ ಜಾಗ ಹುಡುಕಿ ಸತ್ಯ ಅರಿತಿದ್ದ ಸಿದ್ದಯ್ಯ ಅಲ್ಲಿಗೆ ಬಂದ. ತಳವಾರ್ರು ಅವನನ್ನು ಕತ್ತು ಹಿಡಿದು ಆಚೆ ತಳ್ಳಿ ದೇವಾಲಯದ ಹತ್ತಿರವು ಬಿಟ್ಟು ಕೊಳ್ಳಲಿಲ್ಲ.

ಇದು ಈಗಲೂ ಸತ್ಯ ಬೇಕಾದರೆ ನೋಡಿ ದೇವಸ್ಥಾನದಲ್ಲಿ ಇರುವ ಸತ್ಯವನ್ನು ವಿವಿಧ ಸಂಶೋಧಕರು, ಲೇಖಕರು ಮೌಢ್ಯಭಂಜಕರು ಅದನ್ನು ಬಯಲಿಗೆಳೆಯುವರು ಎಂಬ ಭಯ ಆ ವರ್ಗಕ್ಕಿದೆ. ಅದಕ್ಕೆ ಆಳುವ ಜನರ ಸಹಕಾರವು ಸಿಗುತ್ತದೆ. ಕತ್ತೆ ಸಮಾಧಿ ಎಲ್ಲಿಯಾದರೂ ಪವಾಡ ಸೃಷ್ಟಿಸಲು ಸಾಧ್ಯವ? ಇಂತಹ ಅದೆಷ್ಟೋ ನಿರ್ವೀರ್ಯ ಕತ್ತೆಯ ಸಮಾಧಿಗಳು ಓಣಿ ಓಣಿಗಳಲ್ಲಿ ರಸ್ತೆ ರಸ್ತೆಯಲ್ಲಿ ಸಿಗುತ್ತವೆ.

ಅದೆಲ್ಲವೂ ದೇವಾಲಯವೆಂಬ ಮೌಢ್ಯದ ಆಸ್ಥಾನಗಳೆಂದು ತಿಳಿದಿರಲಿ. ಇನ್ನೂ ಕರ್ನಾಟಕದ ವಾಗ್ಮಿಗಳಾದ ಗುರುರಾಜ ಕರ್ಜಗಿಯವರು ಕರುಣಾಳು ಬಾ ಬೆಳಕೆ 2ನೇ ಸಂಪುಟದಲ್ಲಿ ಉಲ್ಲೇಖಿಸಿರುವಂತೆ ‘ಸಮಾಧಿಯ ಮಹಿಮೆ’ ಎಂಬ ಲೇಖನ ಸಹ ಇದೇ ಕತೆಯ ತಿರುಳು ಹೊಂದಿದೆ. ಗುರುಕುಲದಲ್ಲಿ ಲೋಕ ಜ್ಞಾನ ವ್ಯವಹಾರ ಜ್ಞಾನವಿಲ್ಲದ ದಡ್ಡ ವಿದ್ಯಾರ್ಥಿಯೊಬ್ಬನಿಗೆ ಬರಗಾಲ ಬಂದಾಗ ಗುರುಗಳು ಆತನಿಗೆ ಒಂದು ಕತ್ತೆಯನ್ನು ನೀಡಿ ನಿನ್ನ ಜೀವನ ನೀನು ನೋಡಿಕೊ ಎಂದು ಕಳುಹಿಸಿ ಕೊಡುವರು.

ಮುಂದೊಂದು ದಿನ ಆ ಕತ್ತೆ ಸತ್ತಾಗ ಅದನ್ನು ಮಣ್ಣು ಮಾಡಿ ಸಮಾಧಿಗೆ ತನಗೆ ತಿಳಿದಂತೆ ದಿನನಿತ್ಯ ಪೂಜೆ ಸಲ್ಲಿಸುತ್ತಿರುತ್ತಾನೆ. ಈ ದಡ್ಡ ವಿದ್ಯಾರ್ಥಿಯ ಕತ್ತೆ ಸಮಾಧಿ ಮುಂದೆ ಅದೊಂದು ಜಾಗೃತ ಸ್ಥಾನವೆಂಬಂತೆ ಪ್ರಚಲಿತಗೊಂಡು ಹರಕೆ ಹೊತ್ತು ಜನ ಬಂದರು. ಈತನ ಆದಾಯ ಹೆಚ್ಚಿತು. ಸಮಾಧಿಗೊಂದು ದೇವಾಲಯ ಶಿಷ್ಯನಿಗೆ ಒಂದು ಕೊಠಡಿ ಆಯಿತು.

ಶಿಷ್ಯನ ಗುರುಗಳು ಭೇಟಿಯಾಗಿ ಅದು ಯಾವ ಮಹಾತ್ಮನ ಕಂಡು ನಿನ್ನ ಜೀವನ ಉದ್ದರಿಸಿಕೊಂಡೆ ಎಂದು ಪ್ರಶ್ನಿಸಿದಾಗ ಶಿಷ್ಯ ನೀವು ಕೊಟ್ಟ ಕತ್ತೆಯೇ ನನ್ನ ಪಾಲಿನ ಮಹಾತ್ಮ: ಅದರ ಸಮಾಧಿಯೇ ಈ ದೇವಾಲಯ. ಅದ ನಂಬಿದ ಮೂರ್ಖ ಮಂದಿಗಳ ಭಕ್ತಿಯೇ ಇಂದಿನ ನನ್ನ ಆದಾಯ ಎಂದು ಹೇಳಿ ಬೆರಗಾಗಿಸಿದ್ದ. ಒಟ್ಟಾರೆ ಈ ಮೇಲಿನ ಎರಡೂ ಕತೆಗಳು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ವರ್ಗವೊಂದು ಅದರ ಹೆಸರಿನಲ್ಲಿ ವ್ಯವಹಾರಕ್ಕಿಳಿದು ಪೂಜೆ ಪುರಸ್ಕಾರ ಜಾತ್ರೆ ಹೋಮ ಹವನ ಅರ್ಚನೆ ದಕ್ಷಿಣೆ ಅಂಗಡಿ ಇತರೆ ಎಲ್ಲರಿಂದಲೂ ಲಾಭಗಳನ್ನು ಪಡೆಯುತ್ತ ಬಂದರು.

ತಮ್ಮ ಬುದ್ದಿ ಸಾಮರ್ಥ್ಯ ಮರೆತು ಸತ್ಯವನ್ನರಿಯದ ಗೋಜಿಗೆ, ಸತ್ಯ ಮಾರ್ಗಕ್ಕೆ ಹೋಗದೇ ತಮ್ಮನ್ನು ತಾವೇ ಶೋಷಣೆಗೆ ಒಡ್ಡಿ ಬಹುಜನರು ಪ್ರಜ್ಞಾಹೀನ ಸ್ಥಿತಿಯ ತಲುಪಿದರು. ಮೌಢ್ಯಕ್ಕೆ ಬಲಿಯಾದರು. ಇಂತಹ ವರ್ಣ ರಂಜಿತ ಕತೆಗಳನ್ನು ಈಗಲೂ ಹಲವಾರು ದೇವರು ನಂಬಿ ನಿಮಗೆ ಒಳ್ಳೆಯದಾಗುತ್ತೆ, ನಾನು ಹೇಳೊದು ಕೇಳಿ: ಹೇಳಿದಂತೆ ಮಾಡಿ ನಿಮ್ಮ ಭವಿಷ್ಯ ಸರಿ ಹೋಗುತ್ತೆ ಎಂದು ಬೊಬ್ಬೆ ಇಡುವವರೇ ಹೆಚ್ಚು. ಇಂತಹವರ ಮದ್ಯದಲ್ಲಿ ಸತ್ಯ ನುಡಿಯುವ ಬಹುಜನರಿಗೆ ವೈಚಾರಿಕತೆ ಬಿತ್ತುವ ಸತ್ಯ ಮಾರ್ಗಕ್ಕೆ ಮಾರ್ಗದರ್ಶನ ನೀಡುವ ಶ್ರೀನಿಜಗುಣಾನಂದ ಸ್ವಾಮಿಗಳೇ ನಮ್ಮೆಲ್ಲರಿಗೂ ಆದರ್ಶ.

ನಿಜಗುಣ ಸ್ವಾಮಿಗಳು ವಿವಿಧ ವೇದಿಕೆಯಲ್ಲಿ ಈ ಮೇಲಿನ ಕತೆಯನ್ನು ಉದಾಹರಿಸಿ ಜನರನ್ನು ಮೌಢ್ಯದಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾರೆ. ಜನರಿಗೆ ತಿಳಿ ಹೇಳಿ ಜ್ಞಾನ ಹಂಚುತ್ತಿದ್ದಾರೆ. ನಮಗೆ ಆದರ್ಶವಾಗಬೇಕಾದವರು ನಿಜಗುಣ ಸ್ವಾಮೀಜಿಗಳೆ ಹೊರತು ಬ್ರಹ್ಮಾಂಡ ಅಂಡ ಪಿಂಡ ದಿನ ವಾರ ವರ್ಷ ಭವಿಷ್ಯ ನುಡಿವ, ಸ್ತ್ರೀವಶ, ಧನಪ್ರಾಪ್ತಿ ಅತ್ತೆ ಸೊಸೆ ಕಿತ್ತಾಟ ಕೋರ್ಟ್ ಕೇಸ್ ಈಡೇರಿಸಿ ಕೊಡುವೆನೆಂಬ ಸಾಧು ಗುರೂಜಿಗಳಲ್ಲ. ನಿಮ್ಮನ್ನು ಮೌಢ್ಯದಿಂದ ಬಿಡುಗಡೆಗೊಳಿಸಿ ಸನ್ಮಾರ್ಗದಲ್ಲಿ ಕೊಂಡೊಯ್ಯುವವರ ಬಳಿ ಸಾಗಿ. ಮೌಢ್ಯದ ಬಾವಿಗೆ ಹಾಕುವವರೆಡೆಯಲ್ಲ. ಈ ಕತ್ತೆ ಕಥೆ ನಿಮಗೆ ಸತ್ಯವನ್ನು ತಿಳಿಯಲು ಸಾಧ್ಯವಾಯಿತು ಎಂದು ಭಾವಿಸಿ ಕುವೆಂಪುರವರ ಈ ಸಾಲು

ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನ್ನು ಗುರುವನು ಮಾಡಿ
ಬಡವರ ಹಣವನು ಕಾಣಿಕೆ ನೀಡಿ
ಧರ್ಮವ ಮೆರೆದರು ನೋಡಯ್ಯ

ಪವಾಡ – ಮೂಢನಂಬಿಕೆಗಳು, ದುರ್ಬಲತೆ ಮತ್ತು ಮೃತ್ಯುವಿನ ಸಂಕೇತಗಳು ಅವುಗಳ ಬಗ್ಗೆ ಎಚ್ಚರಿಕೆಯಿಂದಿರಿ”

ಸ್ವಾಮಿ ವಿವೇಕಾನಂದರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending