ದಿನದ ಸುದ್ದಿ
ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ
ಸುದ್ದಿದಿನ,ಬೆಳಗಾವಿ :ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಇದು ಜ್ಞಾನದ ಶತಮಾನವಾಗಿದೆ. ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.
ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ 126 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಬುಧವಾರ (ಡಿ.22) ಭೂಮಿಪೂಜೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ವಿವಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವ ಬದ್ಧತೆ ಸಿಪಾಯಿಯಿಂದ ಹಿಡಿದು ಕುಲಪತಿಗಳವರೆಗೆ ಎಲ್ಲರಿಗೂ ಇರಬೇಕು. ವಿವಿಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಎಲ್ಲ ಕ್ಷೇತ್ರದಲ್ಲಿ ಸಾಧನೆಗೈಯಬೇಕು.
ಹೊಸ ಪ್ರಯೋಗಗಳು ವಿಶ್ವವಿದ್ಯಾಲಯದಲ್ಲಿ ಆಗಬೇಕು. ಊಹೆಗೂ ನಿಲುಕದಂತಹ ತಾಂತ್ರಿಕ ಮತ್ತು ವೈಜ್ಞಾನಿಕ ಬದಲಾವಣೆಗಳಾಗುತ್ತಿವೆ. ಇದಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯ ಬದಲಾಗುವ ಮೂಲಕ ಆವಿಷ್ಕಾರದ ಕೇಂದ್ರವಾಗಬೇಕು.
ಶಿಕ್ಷಣ ಕ್ಷೇತ್ರದ ಆಮೂಲಾಗ್ರ ಬದಲಾವಣೆ ತರಬೇಕಾದರೆ ಅದು ವಿಶ್ವವಿದ್ಯಾಲಯದ ಮೂಲಕ ಮಾತ್ ಸಾಧ್ಯವಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ವಿಶ್ವವಿದ್ಯಾಲಯದಲ್ಲಿ ಆವಿಷ್ಕಾರಗಳನ್ನು ಕೈಗೊಳ್ಳಬೇಕು.
ಸತ್ವಯುತ ಸಂಶೋಧನೆಗೆ ಸಿಎಂ ಸಲಹೆ
ಯುವಸಮುದಾಯಕ್ಕೆ ಜ್ಞಾನ ಹಾಗೂ ಆತ್ಮವಿಶ್ವಾಸದ ಬಲ ನೀಡಲು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಪ್ರಾಧ್ಯಾಪಕರು ವಿಶ್ವವಿದ್ಯಾಲಯಗಳ ಕ್ಲಾಸ್ ರೂಮ್ ಗಳಿಂದ ಹೊರಬಂದು ತಮ್ಮ ಸಂಶೋಧನೆಯನ್ನು ಒರೆಗೆ ಹಚ್ಚಬೇಕು. ಸತ್ವಯುತವಾದ ಸಂಶೋಧನೆ ಎಂದಿಗೂ ಉಳಿದುಕೊಳ್ಳುತ್ತದೆ. ಆದ್ದರಿಂದ ಸತ್ವಯುತ ಹಾಗೂ ಜನೋಪಯೋಗಿ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣದಲ್ಲಿ ಸಮರ್ಥ ನಾಯಕತ್ವ ಅತೀ ಮುಖ್ಯವಾಗಿದೆ. ವಿಶ್ವವಿದ್ಯಾಲಯದ ಕುಲಪತಿಗಳು ಇಂತಹ ನಾಯಕತ್ವ ವಹಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಸರಕಾರ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಪಿ.ಎಚ್ಡಿ ಗಳ ವಿಶ್ಲೇಷಣೆ ಆಗಬೇಕು. ಅವುಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಕೂಡ ಅಧ್ಯಯನ ನಡೆಸಬೇಕು ಎಂದು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ರಾಚವಿ ಆದರ್ಶ ವಿವಿ ಆಗಲಿ; ಸಿಎಂ ಆಶಯ
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಆದರ್ಶ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಲಿ ಎಂದು ಆಶಯ ವ್ಯಕ್ತಪಡಿಸಿದರು. ರಸ್ತೆ, ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ. ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು.
ವಿವಿಯ ಪ್ರತಿ ಕೊಠಡಿಯು ಡಿಜಿಟಲೀಕರಣ ಆಗಬೇಕು. ತಾರ್ಕಿಕ ಚಿಂತನೆಯನ್ನು ಬೆಳೆಸಿಕೊಂಡು ಪ್ರಶ್ನೆಗಳನ್ನು ಕೇಳುವ ಧೈರ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿ ಸ್ಥಾಪನೆಯಿಂದ ಕುಡಿಯುವ ನೀರಿನ ಯೋಜನೆಗೆ ಸ್ವಲ್ಪಮಟ್ಟಿಗೆ ತೊಂದರೆಯಾಗಿದೆ. ಆದ್ದರಿಂದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.
ಉತ್ಕೃಷ್ಟ ಶಿಕ್ಷಣ ಒದಗಿಸಲು ಸರಕಾರ ಬದ್ಧ
ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಅಶ್ವತ್ಥನಾರಾಯಣ ಸಿ.ಎನ್., ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ಧೇಶದಿಂದ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸಲಾಗಿದೆ ಎಂದರು.
ಉತ್ತಮ ಶಿಕ್ಷಣ, ಕೌಶಲ್ಯ , ತಂತ್ರಜ್ಞಾನವನ್ನು ಒದಗಿಸುವ ಮೂಲಕ ಯುವ ಸಮುದಾಯವನ್ನು ಸ್ವಾವಲಂಬಿ ಮತ್ತು ಉತ್ತಮ ಬದುಕು ಕಟ್ಟಿಕೊಳ್ಳಲು ಸರಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ.ಬೆಳಗಾವಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಸರಕಾರ ಎಲ್ಲಾ ಸೌಲಭ್ಯ ಒದಗಿಸಲಿದೆ.
ಈ ಭಾಗದ ಸವಾಲು ಮತ್ತು ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ನಿವಾರಣೆಗಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು ಎಂಬ ನಿರೀಕ್ಷೆಯನ್ನು ಸರಕಾರ ಹೊಂದಿದೆ ಎಂದು ತಿಳಿಸಿದರು.
ಸದ್ಯಕ್ಕೆ ಎಂಟು ಸಾವಿರ ಪೈಕಿ ಈಗಾಗಲೇ ಎರಡು ಸಾವಿರ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ. ಉಳಿದ ಆರು ಸಾವಿರ ಕ್ಲಾಸ್ ಗಳನ್ನು ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಪರಿವರ್ತಿಸುವ ಕೆಲಸ ಮಾಡಲಾಗುವುದು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಸಬಲೀಕರಣ, ಸ್ವಾಯತ್ತತೆಯನ್ನು ಒದಗಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಉತ್ಕೃಷ್ಟ ಮತ್ತು ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಸೂಪರ್ ಥರ್ಟಿ ಯೋಜನೆ ಮೂಲಕ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆಯನ್ನು ನೀಡಿದರು. ಸಮಗ್ರ, ಸದೃಢ ಕರ್ನಾಟಕ ಕಟ್ಟಲು ಶಿಕ್ಷಣವೇ ಬುನಾದಿಯಾಗಿದೆ. ಆದ್ದರಿಂದ ಶಿಕ್ಷಣ ಮತ್ತು ಎಲ್ಲರಿಗೂ ಉದ್ಯೋಗ ನೀಡುವ ಪ್ರಯತ್ನವನ್ನು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಜರಾಯಿ, ಹಜ್ ಹಾಗೂ ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಮನವಿ
ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧ, ವಿಟಿಯು ಹಾಗೂ ಆರ್.ಸಿ.ಯು. ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಳಶಪ್ರಾಯವಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಅಭಿವೃದ್ಧಿಗೆ ಪೂರಕವಾಗಿರುವ ಗ್ರಾಮೀಣ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಇದನ್ನು ನಿವಾರಿಸಲು ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 300 ಕೋಟಿ ರೂಪಾಯಿಗೂ ಅಧಿಕ ಅನುದಾನವನ್ನು ಮಂಜೂರು ಮಾಡಿಸಲಾಗಿದೆ. ಕೆರೆ ತುಂಬಿಸುವ ಯೋಜನೆ ಮುಂದುವರಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಹಿರೇಬಾಗೇವಾಡಿ ಗ್ರಾಮದ ಕಸ ವಿಲೇವಾರಿಗೆ ಹತ್ತು ಎಕರೆ ಜಮೀನು ಒದಗಿಸಲು ಲಕ್ಷ್ಮೀ ಹೆಬ್ಬಾಳಕರ ಮನವಿ ಮಾಡಿಕೊಂಡರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದಿಂದ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇಡಿ ಬಳಿ 126 ಎಕರೆ ವಿಶಾಲವಾದ ಜಾಗೆ ದೊರೆತಿದೆ ಎಂದು ತಿಳಿಸಿದರು.
ವಿವಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೆ ಉತ್ಕೃಷ್ಟವಾದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಇದಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪುರ, ಡಾ.ತಳವಾರ ಸಾಬಣ್ಣ, ಹನಮಂತ ನಿರಾಣಿ, ಸಿಂಡಿಕೇಟ್ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿನಾಯಕ ಮೋರೆ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಕುಲಪತಿ ಪ್ರೊ.ಬಸವರಾಜ ಪದ್ಮಶಾಲಿ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ21 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

