ಬಹಿರಂಗ
‘ಕೋರೆಗಾಂವ್’ ಎಂಬ ಶೋಷಿತರು ನಡೆಸಿದ ಶ್ರೇಷ್ಠ ಯುದ್ಧದ ಬಗ್ಗೆ
- ರಘೋತ್ತಮ. ಹೊಬ
ಭಾರತದ ಇತಿಹಾಸದಲ್ಲಿ ನಡೆದಿರುವ ವಿವಿಧ ಯುದ್ಧಗಳಲ್ಲಿ, ಬರೇ ಆ ರಾಜರು ಈ ರಾಜರ ವಿರುದ್ಧ, ಮಹಮ್ಮದೀಯರು ಬ್ರಿಟಿಷರ ವಿರುದ್ಧ, ಬ್ರಿಟಿಷರು ಫ್ರೆಂಚರ ವಿರುದ್ಧ, ಫ್ರೆಂಚರು ಡಚ್ಚರ ವಿರುದ್ಧ… ಹೀಗೆ ಸಾಮ್ರಾಜ್ಯಶಾಹಿಗಳು ನಡೆಸಿದ ಯುದ್ಧಗಳ ಬಗ್ಗೆಯಷ್ಟೆ ಚರಿತ್ರೆ ದಾಖಲಿಸಲಾಗಿದೆ. ಆದರೆ ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು ದಾಖಲಿಸಿದ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ! ಇತಿಹಾಸ ಕೃತಿಯ ಯಾವ ಪುಟದಲ್ಲೂ ಅಂತಹದ್ದೊಂದು ಯುದ್ಧದ ಬಗ್ಗೆ ಉಲ್ಲೇಖವಿಲ್ಲ. ಯಾಕೆ? ಖಂಡಿತ ಅದು ಶೋಷಿತ ಸಮುದಾಯದ ಬಗೆಗಿನ ಇತಿಹಾಸಕಾರರ ದಿವ್ಯ ತಾತ್ಸಾರವಷ್ಟೆ!
ಈ ನಿಟ್ಟಿನಲ್ಲಿ ಶೋಷಿತರು ಶೋಷಕ ಶಕ್ತಿಗಳ ವಿರುದ್ಧ ಸಾರಿದ ಯುದ್ಧದ ಬಗ್ಗೆ ಹೇಳಲೇಬೇಕಾಗುತ್ತದೆ. ಖಂಡಿತ, ಆ ಯುದ್ಧ ಕೋರೇಗಾಂವ್ ಯುದ್ಧ. ಭೀಮಾ ನದಿಯ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ. ಹಾಗಿದ್ದರೆ ಆ ಯುದ್ಧ ಯಾರ ವಿರುದ್ಧ ನಡೆಯಿತು? ಯಾರು ನಡೆಸಿದರು? ಎಂಬ ಪ್ರಶ್ನೆ ಮೂಡುತ್ತದೆ. ಈ ನಿಟ್ಟಿನಲ್ಲಿ 1818ರ ಹೊಸ ವರ್ಷದ ಸಂದರ್ಭದಲ್ಲಿ ನಡೆದ ಆ ಯುದ್ಧದ details ಹೇಳುವುದಕ್ಕೂ ಮುನ್ನ ಆ ಸಮಯದಲ್ಲಿ ಇದ್ದ ಸಾಮಾಜಿಕ ಸ್ಥಿತಿಗತಿಯನ್ನು ದಾಖಲಿಸುವುದು ಸೂಕ್ತವೆನಿಸುತ್ತದೆ.
ಹೌದು, 1818 ಅದು ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತದ ಕಾಲ. ಆಗಿನ ಪೇಶ್ವೆ ಅಥವಾ ಬ್ರಾಹ್ಮಣ ಮಂತ್ರಿ 2ನೇ ಬಾಜೀರಾಯನಾಗಿದ್ದ. ಹಾಗಿದ್ದರೆ ಪೇಶ್ವೆಗಳ ಆ ಕಾಲದಲ್ಲಿ ಸಾಮಾಜಿಕ ಪರಿಸ್ಥಿತಿ ಹೇಗಿತ್ತು? ಬಾಬಾಸಾಹೇಬ್ ಅಂಬೇಡ್ಕರರ ಪ್ರಕಾರವೇ ಹೇಳುವುದಾದರೆ “ಮರಾಠರ ರಾಜ್ಯದಲ್ಲಿ ಪೇಶ್ವೆಗಳ ಆಡಳಿತದಲ್ಲಿ, ಅಸ್ಪೃಶ್ಯರ ನೆರಳು ಹಿಂದೂವೊಬ್ಬನ ಮೇಲೆ ಬಿದ್ದು ಆತ ಮಲಿನವಾಗುವುದನ್ನು ತಪ್ಪಿಸಲು ಸಾರ್ವಜನಿಕ ಬೀದಿಗಳಲ್ಲಿ ಅಸ್ಪೃಶ್ಯರಿಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಒಂದು ವೇಳೆ by mistake ಅಸ್ಪೃಶ್ಯನೊಬ್ಬನನ್ನು ಹಿಂದೂವೊಬ್ಬ ಮುಟ್ಟಿದರೆ ಆಗ ಆ ಹಿಂದೂ ಮಲಿನಗೊಳ್ಳುವುದನ್ನು ತಪ್ಪಿಸಲು ಅಸ್ಪೃಶ್ಯನು ತನ್ನ ಕುತ್ತಿಗೆಗೆ ಅಥವಾ ಮುಂಗೈಗೆ ಕಪ್ಪು ದಾರವೊಂದನ್ನು ಕಟ್ಟಿಕೊಳ್ಳುವುದು ಆ ದಿನಗಳಲ್ಲಿ ಕಡ್ಡಾಯವಾಗಿತ್ತು.
ಅಲ್ಲದೆ ಪೇಶ್ವೆಗಳ ಆಗಿನ ರಾಜಧಾನಿಯಾದ ಪೂನಾದಲ್ಲಿ ಅಸ್ಪೃಶ್ಯನೋರ್ವ ನಡೆದ ದಾರಿಯಲ್ಲಿ ಹಿಂದೂಗಳು ನಡೆದು ಸದರಿ ಹಿಂದೂ ಮಲಿನಗೊಳ್ಳುವುದನ್ನು ತಡೆಯಲು ಅಸ್ಪೃಶ್ಯನು ತನ್ನ ನಡುವಿಗೆ ಹಗ್ಗವೊಂದನ್ನು ಬಿಗಿದು ಅದಕ್ಕೆ ಕಸಪೊರಕೆಯೊಂದನ್ನು ಕಟ್ಟಿ ತಾನು ನಡೆದ ದಾರಿಯನ್ನು ತಾನೇ ಗುಡಿಸಬೇಕಾಗಿತ್ತು! ಅದಲ್ಲದೆ ಅದೇ ಪೂನಾ ನಗರದಲ್ಲಿ ಅಕಸ್ಮಾತ್ ಅಸ್ಪೃಶ್ಯನೊಬ್ಬ ದಾರಿಯಲ್ಲಿ ಉಗಿದರೆ ಮತ್ತು ಆ ಉಗುಳನ್ನು ಹಿಂದೂವೊಬ್ಬ ತುಳಿದು ಆತ ಮಲಿನವಾಗುವುದನ್ನು ತಪ್ಪಿಸಲು ಅಸ್ಪೃಶ್ಯ ತನ್ನ ಕೊರಳಿಗೆ ಮಣ್ಣಿನ ಮಡಕೆಯೊಂದನ್ನು ನೇತುಹಾಕಿಕೊಳ್ಳಬೇಕಾಗುತ್ತಿತ್ತು ಮತ್ತು ಉಗಿಯಬೇಕೆಂದಾಗ ಆತ ಆ ಮಡಕೆಯಲ್ಲಿ ಉಗಿಯಬೇಕಾಗಿತ್ತು”! ಪೇಶ್ವೆಗಳ ಕಾಲದ ಅಸ್ಪೃಶ್ಯರ ಸ್ಥಿತಿಗತಿಯನ್ನು ಅಂಬೇಡ್ಕರರು ಹೀಗೆ ವಿವರಿಸುತ್ತಾ ಹೋಗುತ್ತಾರೆ.
ಹೀಗಿರುವಾಗ ಇಂತಹ ವಿಚಿತ್ರ ಸಾಮಾಜಿಕ ದುಸ್ಥಿತಿಯ ಸಂದರ್ಭದಲ್ಲಿ ಮಾಹಾರಾಷ್ಟ್ರದ ಅಸ್ಪೃಶ್ಯರಾದ ಮಹಾರರಿಗೆ ದೌರ್ಜನ್ಯಕೋರ ಇಂತಹ ಪೇಶ್ವೆಗಳ, ಮತ್ತವರ ಸಾಮ್ರಾಜ್ಯದ ವಿರುದ್ಧ ಹೋರಾಡುವ ಅದ್ಭುತ ಅವಕಾಶವೊಂದು ಬರುತ್ತದೆ. ಹೌದು, ಅದೇ ಕೋರೇಗಾಂವ್ ಯುದ್ಧ! ಅಂದಹಾಗೆ ಇದೇನು ಅಸ್ಪೃಶ್ಯರು ಮೇಲ್ಜಾತಿಗಳ ವಿರುದ್ಧ, ಅವರ ದೌರ್ಜನ್ಯದ ವಿರುದ್ಧ ನೇರಾನೇರ ಕಾದಾಟಕ್ಕಿಳಿದದ್ದಲ್ಲ. ಆದರೆ ಯಾವ ಜಾತಿ/ವರ್ಣವ್ಯವಸ್ಥೆಯಲ್ಲಿ ಶಸ್ತ್ರಹಿಡಿಯುವುದು ಇಂತಹ ಜಾತಿಗೆ/ವರ್ಣಕ್ಕೆ ಎಂದು ಮೀಸಲಾಗಿತ್ತೋ ಅಂತಹ ಶ್ರೇಣೀಕೃತ ಜಾತಿವ್ಯವಸ್ಥೆಯ ಸಮಯದಲ್ಲಿ ಬ್ರಿಟಿಷರ ಪರವಾಗಿ, ಅವರ ಸೇನೆಯಲ್ಲಿ ಸೈನಿಕರಾಗಿಯಷ್ಟೆ ಅಸ್ಪೃಶ್ಯ ಮಹಾರರು ಕಾದಾಡಿದ್ದು.
ಹಾಗಿದ್ದರೆ ಆ ಹೋರಾಟ ಹೇಗಿತ್ತು? ಬಾಬಾಸಾಹೇಬ್ ಅಂಬೇಡ್ಕರರ ಬರಹಗಳು ಮತ್ತು ಭಾಷಣಗಳು, ಸಂಪುಟ 17, ಭಾಗ 3(ಇಂಗ್ಲೀಷ್ ಆವೃತ್ತಿ) ಪುಟ.4ರ ಪ್ರಕಾರ ಹೇಳುವುದಾದರೆ “ಭೀಮಾನದಿಯ ತೀರದಲ್ಲಿದ್ದ ಆ ಕೋರೇಗಾಂವ್ ರಣಾಂಗಣದಲ್ಲಿ ಬಾಂಬೆ ರೆಜಿಮೆಂಟ್ನ ಕೇವಲ 500 ಜನ ಮಹಾರ್ ಕಾಲ್ದಳದ ಸೈನಿಕರು ಪೂನಾದ 250 ಅಶ್ವದಳದವರ ನೆರವಿನೊಂದಿಗೆ, ಜೊತೆಗೆ ಮದ್ರಾಸ್ನ 24 ಗನ್ಮೆನ್ಗಳ ಸಹಾಯದಿಂದ 20000 ಅಶ್ವದಳವಿದ್ದ, 8000ದಷ್ಟು ಕಾಲ್ದಳವಿದ್ದ ಪೇಶ್ವೆಯ ಬೃಹತ್ ಸೇನೆಯ ವಿರುದ್ಧ 1818 ಜನವರಿ 1ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ಸತತ 12ಗಂಟೆಗಳು ಯಾವುದೇ ವಿಶ್ರಾಂತಿ ಆಯಾಸವಿಲ್ಲದೆ, ಆಹಾರ-ನೀರಿನ ಪರಿವಿಲ್ಲದೆ ಕ್ಯಾಪ್ಟನ್ ಎಫ್.ಎಫ್.ಸ್ಟಾಂಟನ್ನ ನೇತೃತ್ವದಲ್ಲಿ ಹೋರಾಡಿ ಅಭೂತಪೂರ್ವ ಗೆಲುವು ಸಾಧಿಸುತ್ತಾರೆ”!
ಸವಿಸ್ತಾರವಾಗಿ ಹೇಳುವುದಾದರೆ ಕ್ಯಾಪ್ಟನ್ ಸ್ಟಾಂಟನ್ನ ನೇತೃತ್ವದಲ್ಲಿ ಸಿರೂರ್ನಿಂದ 1818 ಡಿಸೆಂಬರ್ 31ರ ರಾತ್ರಿ ಹೊರಟ ಮಹಾರ್ ಸೇನೆ ಸತತ 27 ಕಿ.ಮೀ ನಡೆದು ಮಾರನೇ ದಿನ 1ನೇ ತಾರೀಖು ಬೆಳಿಗ್ಗೆ ಕೋರೇಗಾಂವ್ ರಣಾಂಗಣವನ್ನು ತಲುಪುತ್ತದೆ. ಅದೇ ಸಮಯದಲ್ಲಿ ಮೂರೂ ದಿಕ್ಕುಗಳಿಂದಲೂ ತಲಾ 600ರಷ್ಟಿದ್ದ ಪೇಶ್ವೆಯ ಕಾಲ್ದಳದ 3 ತುಕಡಿಗಳು ಕ್ಯಾಪ್ಟನ್ ಸ್ಟಾಂಟನ್ನ ಪಡೆಯನ್ನು ಸುತ್ತುವರೆಯುತ್ತವೆ.
ಅಲ್ಲದೆ ಪೇಶ್ವೆಯ ಈ ಸೈನ್ಯದ ಬೆಂಬಲಕ್ಕೆ ಬೃಹತ್ ಅಶ್ವದಳ, ರಾಕೆಟ್ದಳ ಬೇರೆ! ಒಟ್ಟಾರೆ ಸಂದಿಗ್ಧ ಸ್ಥಿತಿಯಲ್ಲಿ ಬ್ರಿಟಿಷ್ ಸೇನೆಯು ಪೇಶ್ವೆಗಳ ಕಾಲ್ದಳ ಮತ್ತು ಫಿರಂಗಿದಳಗಳಿಂದ ಸಂಪೂರ್ಣ ವೃತ್ತಾಕಾರ ಮಾದರಿಯಲ್ಲಿ ಸುತ್ತುವರಿಯಲ್ಪಡುತ್ತದೆ. ಹೇಗೆಂದರೆ ಪಕ್ಕದಲ್ಲೇ ಇದ್ದ ಭೀಮಾನದಿಗೆ ಹೋಗುವ ದಾರಿಗಳೆಲ್ಲ ಬಂದ್ ಆಗುವ ಮಟ್ಟಿಗೆ! ಕಡೆಗೆ ವಿಧಿಯಿಲ್ಲದೆ ಎರಡೂ ದಳಗಳೂ ಕೋರೇಗಾಂವ್ ಗ್ರಾಮವನ್ನು ಪ್ರವೇಶಿಸುತ್ತವೆ.
ಕೋರೇಗಾಂವ್ ಗ್ರಾಮವನ್ನು ಪ್ರವೇಶಿಸಿದ್ದೇ ತಡ ಎರಡೂ ಪಡೆಗಳೂ ಬೀದಿಬೀದಿಗಳಲ್ಲಿ, ಮನೆ-ಗುಡಿಸಲುಗಳ ಮುಂದೆ ಕೈಕೈ ಮಿಲಾಯಿಸುತ್ತಾ ನೇರಾ-ನೇರ ಕಾದಾಟಕ್ಕಿಳಿಯುತ್ತವೆ. ಅದರಲ್ಲೂ ಬಹುತೇಕ ಮಹಾರರೇ ತುಂಬಿದ್ದ ಬ್ರಿಟಿಷ್ ಸೈನ್ಯಕ್ಕೆ ಬಹಳ ಹಾನಿಯಾಗುತ್ತದೆ.
ಆದರೂ ಎದೆಗುಂದದ ಮಹಾರ್ ಸೈನಿಕರು ಅತ್ಯುತ್ಕೃಷ್ಟ ಧೈರ್ಯದಿಂದ ಮುನ್ನುಗ್ಗುತ್ತಲೇ ಹೋಗುತ್ತಾರೆ. ಪಡೆಯ ನೇತೃತ್ವ ವಹಿಸಿದ್ದ ಕ್ಯಾಪ್ಟನ್ ಸ್ಟಾಂಟನ್ನಂತೂ “ಕಡೆಯ ಸೈನಿಕನಿರುವ ತನಕ, ಕಡೆಯ ಬುಲೆಟ್ ಇರುವ ತನಕ ಹೋರಾಡುತ್ತಲೇ ಇರಿ” ಎಂದು ಹುರಿದುಂಬಿಸುತ್ತಲೇ ಇರುತ್ತಾನೆ. ಪರಿಣಾಮವಾಗಿ ಮಹಾರ್ ಸೈನಿಕರು ಅತ್ಯಮೋಘ ಧೈರ್ಯದಿಂದ, ಎಲ್ಲಾ ದುರಾದೃಷ್ಟಗಳ ನಡುವೆ ಹೋರಾಡುತ್ತ ವೀರಾವೇಶದಿಂದ ಮುನ್ನುಗ್ಗುತ್ತಾರೆ. ಅಂದಹಾಗೆ ಮಹಾರ್ ಸೈನಿಕರ ಅಂತಹ ಮುನ್ನುಗ್ಗುವಿಕೆಯಲ್ಲಿ ಅದೆಂತಹ, ಅದೆಷ್ಟು ಶತಮಾನಗಳ ನೋವಿನ ಆಕ್ರೋಶವಿತ್ತು? ತತ್ಫಲವಾಗಿ ಬಹುಸಂಖ್ಯೆಯಲ್ಲಿದ್ದರೂ ಕೂಡ ಪೇಶ್ವೆಯ ಸೈನ್ಯ ಹಿಮ್ಮೆಟ್ಟಿ ಸೋತು ರಾತ್ರಿ 9 ಗಂಟೆಗೆ ಧಾಳಿಯನ್ನು ನಿಲ್ಲಿಸುತ್ತದೆ ಹಾಗೂ ವಿಧಿಯಿಲ್ಲದೆ ಕೋರೇಗಾಂವ್ನಿಂದ ರಾತ್ರೋರಾತ್ರಿ ಕಾಲ್ಕೀಳುತ್ತದೆ!
ಒಟ್ಟಾರೆ ಅತ್ಯಮೋಘ ಧೈರ್ಯ ಮತ್ತು ಶಿಸ್ತುಬದ್ಧ ಶೌರ್ಯವನ್ನು ಪ್ರದರ್ಶಿಸಿದ ಮಹಾರ್ ಸೈನಿಕರು ಶೋಷಕ ಪೇಶ್ವೆಗಳ ವಿರುದ್ಧ ಅಭೂತಪೂರ್ವ ಜಯ ದಾಖಲಿಸುತ್ತಾರೆ. ಅಂದಹಾಗೆ ಈ ಯುದ್ಧದ ನಂತರ ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತ ಕೊನೆಗೊಳ್ಳುತ್ತದೆ. ಹಾಗೆಯೇ ಅಸ್ಪೃಶ್ಯರ ದಯನೀಯ ಸ್ಥಿತಿ ಕೂಡ ಸುಧಾರಣೆ ಕಾಣಲು ಆರಂಭಿಸುತ್ತದೆ. ಈ ಯುದ್ಧದಲ್ಲಿ ಜಯ ತಂದುಕೊಟ್ಟು ಮಡಿದ 22 ಮಹಾರ್ ಸೈನಿಕರ ಸ್ಮರಣಾರ್ಥ ಕೋರೇಗಾಂವ್ನಲ್ಲಿ ಮಹಾರ್ ಸೈನಿಕರು ಪ್ರಥಮ ಗುಂಡು ಸಿಡಿಸಿದ ಸ್ಥಳದಲ್ಲೇ 65 ಅಡಿ ಎತ್ತರದ ಒಂದು ಶಿಲಾ ಸ್ಮಾರಕ ಕೂಡ 1821 ಮಾರ್ಚ್ 26ರಂದು ನಿರ್ಮಾಣಗೊಳ್ಳುತ್ತದೆ. ಹಾಗೂ ಆ ಸ್ಮಾರಕದಲ್ಲಿ ಮಡಿದ 22 ಸೈನಿಕರ ಜೊತೆಗೆ ಗಾಯಗೊಂಡವರ ಹೆಸರನ್ನೂ ಕೆತ್ತಿಸಲಾಗುತ್ತದೆ.
ಒಂದು ವಾಸ್ತವ, ಅದೆಂದರೆ “ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು” ಎಂದು ಹೇಳಿದ ಬಾಬಾಸಾಹೇಬ್ ಅಂಬೇಡ್ಕರರಿಗೆ ತನ್ನ ಜನರ ಇಂತಹ ಅದ್ಭುತ ಐತಿಹಾಸಿಕ ಜಯದ ಬಗ್ಗೆ ಬಹಳ ಹೆಮ್ಮೆ ಇತ್ತು. ಆ ಕಾರಣಕ್ಕಾಗಿ ಕೋರೆಗಾಂವ್ನಲ್ಲಿನ ಮಹಾರ್ ಸೈನಿಕರ ಈ ಸ್ಮಾರಕಕ್ಕೆ ಅಂಬೇಡ್ಕರರು ಪ್ರತೀ ವರ್ಷ ಕುಟುಂಬ ಸಮೇತರಾಗಿ ಭೇಟಿ ನೀಡುತ್ತಿದ್ದರು.
ಅಲ್ಲದೆ ಅಗಲಿದ ಯೋಧರಿಗೆ ಬಾಬಾಸಾಹೇಬರು ತಮ್ಮ ಅಭೂತಪೂರ್ವ ನಮನ ಸಲ್ಲಿಸುತ್ತಿದ್ದರು. ಯಾಕೆಂದರೆ ಬಾಬಾಸಾಹೇಬರಿಗೆ ತಿಳಿದಿತ್ತು ಕೋರೇಗಾಂವ್ನಲ್ಲಿ ಮಹಾರ್ ಸೈನಿಕರು ಹೋರಾಡಿದ್ದು ಒಂದು ಸಾಮ್ರಾಜ್ಯದ ವಿರುದ್ಧವಲ್ಲ ವ್ಯವಸ್ಥೆಯ ವಿರುದ್ಧ, ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಪ್ರಾಣಿಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿತ್ತೋ ಅಂತಹ ದೌರ್ಜನ್ಯಕೋರ ಸಂಸ್ಕೃತಿಯ ವಿರುದ್ಧ ಎಂದು.
ಒಂದು ವೇಳೆ ಕೋರೇಗಾಂವ್ ಯುದ್ಧ ನಡೆಯದಿದ್ದರೆ ಪೇಶ್ವೆಗಳ ಅಟ್ಟಹಾಸ ಮತ್ತೂ ಮುಂದುವರಿದಿರುತ್ತಿತ್ತು. ಅಂದಹಾಗೆ ಅಂತಹ ಅಟ್ಟಹಾಸದ ವಾತಾವರಣದಲ್ಲಿ ಆ ಯುದ್ಧ ನಡೆದು 73 ವರ್ಷಗಳ ನಂತರ(1891) ಹುಟ್ಟಿದ ಬಾಬಾಸಾಹೇಬ್ ಅಂಬೇಡ್ಕರರು ಶಿಕ್ಷಣ ಪಡೆಯಲಾಗುತ್ತಿತ್ತೇ? ವಿದೇಶಿ ವ್ಯಾಸಂಗಕ್ಕೆ ತೆರಳಲಾಗುತ್ತಿತ್ತೆ? ಸಂವಿಧಾನ ಶಿಲ್ಪಿಯಾಗಲು ಸಾಧ್ಯವಿತ್ತೆ? ಈ ನಿಟ್ಟಿನಲ್ಲಿ ಕೋರೇಗಾಂವ್ ಯುದ್ಧ ಅಸ್ಪೃಶ್ಯರ ಹೋರಾಟದ ಇತಿಹಾಸದಲ್ಲಿ ಒಂದು ಅಪರೂಪದ ಮೈಲುಗಲ್ಲಾಗಿ ಉಳಿಯುತ್ತದೆ. ಹಾಗೆಯೇ ಸ್ಫೂರ್ತಿಯ ಸಂಕೇತವೂ ಅದಾಗುತ್ತದೆಯೆಂದರೆ ಅತಿಶಯೋಕ್ತಿಯೇನಲ್ಲ.
(ಈ ಲೇಖನ 2014 ರಲ್ಲಿ ಬಿಡುಗಡೆಯಾದ ನನ್ನ ಮೂರನೇ ಕೃತಿ “ಎದೆಗೆ ಬಿದ್ದ ಗಾಂಧಿ” ಯಲ್ಲಿ ಪ್ರಕಟವಾಗಿದೆ. – ರಹೊಬ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ3 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ2 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ1 day agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ1 day agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


