ಬಹಿರಂಗ
ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ
ನವ ಉದಾರವಾದದ ಮಾರುಕಟ್ಟೆ ವ್ಯವಸ್ಥೆಯಲ್ಲಿ ದೃಶ್ಯ ಮಾಧ್ಯಮಗಳೂ ಸಂವಹನದ ಸರಕುಗಳು
- ನಾ ದಿವಾಕರ
ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸಾರ್ವಜನಿಕ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕಾದ ವಿದ್ಯುನ್ಮಾನ ಮಾಧ್ಯಮಗಳ ಸ್ವರೂಪ ಹೇಗಿರಬೇಕು ? ಡಿಜಿಟಲೀಕರಣದತ್ತ ದಾಪುಗಾಲು ಹಾಕುತ್ತಿರುವ ಭಾರತದಲ್ಲಿ ಈ ಪ್ರಶ್ನೆ ಇನ್ನೂ ಹೆಚ್ಚು ಪ್ರಸ್ತುತ ಎನಿಸುತ್ತದೆ. ಮುದ್ರಣ ಮಾಧ್ಯಮ ಎಷ್ಟೇ ವ್ಯಾಪಕವಾದರೂ ಅದು ಅಕ್ಷರಸ್ತರನ್ನು ತಲುಪುವ ಒಂದು ಸಾಧನ. ಆದರೆ ದೃಶ್ಯ ಮಾಧ್ಯಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬಹುದಾದ ಒಂದು ಸಂವಹನ ಸಾಧನವಾಗಿದೆ. ಕಳೆದ ಎರಡು ದಶಕಗಳಲ್ಲಿ ಭಾರತದ ರಾಜಕಾರಣ, ಸಾಮಾಜಿಕ ಪಲ್ಲಟಗಳು, ಸಾಂಸ್ಕೃತಿಕ ತಲ್ಲಣಗಳು ಮತ್ತು ಸಾರ್ವಜನಿಕ ಜೀವನದ ಏಳುಬೀಳುಗಳನ್ನು ದಾಖಲಿಸುತ್ತಲೇ ಬಂದಿರುವ ವಿದ್ಯುನ್ಮಾನ ದೃಶ್ಯ ಮಾಧ್ಯಮಗಳ ಸ್ವರೂಪ ಮತ್ತು ಕಾರ್ಯವೈಖರಿ ಇಂದಿನ ಸನ್ನಿವೇಶದಲ್ಲಿ ಹೆಚ್ಚು ಚರ್ಚೆಗೊಳಗಾಗಬೇಕಿದೆ.
ಇದೇ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ, ವಿಶೇಷವಾಗಿ ಕನ್ನಡ ಸುದ್ದಿಮನೆಗಳ, ನೈತಿಕತೆ ಮತ್ತು ವೃತ್ತಿಪರತೆಯೇ ಪ್ರಶ್ನಾರ್ಹವಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯಲು ಒತ್ತಾಯಿಸುವ ಮೂಲಕ ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದು ರಾಜ್ಯಾದ್ಯಂತ ಜನರ ಆಕ್ರೋಶಕ್ಕೆ ತುತ್ತಾಗಿದ್ದು ಸಹಜ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ನ್ಯಾ ಮಲ್ಲಿಕಾರ್ಜುನ ಗೌಡ್ ಅವರನ್ನು ವಜಾ ಮಾಡಲು ಒತ್ತಾಯಿಸಿ ರಾಜ್ಯದ ಎಲ್ಲ ದಲಿತ ಸಂಘಟನೆಗಳು, ಪ್ರಗತಿಪರ ಗುಂಪುಗಳು ಮತ್ತು ವಿಚಾರವಂತರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.
ಬಹುಶಃ ಇತ್ತೀಚೆಗೆ ತಾನೇ ಅಂತ್ಯಗೊಂಡ ದೆಹಲಿಯ ರೈತಮುಷ್ಕರವನ್ನು ಹೊರತುಪಡಿಸಿದರೆ, ಫೆಬ್ರವರಿ 19ರ ಪ್ರತಿಭಟನಾ ಮೆರವಣಿಗೆ ಒಂದು ಚಾರಿತ್ರಿಕ ಗಳಿಗೆಯಾಗಿ ಕಾಣುತ್ತದೆ. ಸಾಗರೋಪಾದಿಯಲ್ಲಿ ನೆರೆದ ಜನರ ಆಕ್ರೋಶದ ದನಿಗಳು ಆಳುವವರನ್ನು ತಲುಪಿದ್ದರೂ, ರಸ್ತೆಗಳನ್ನು ನೀಲಿಮಯವಾಗಿಸಿದ ಈ ಜನಸ್ತೋಮ ಕನ್ನಡದ ಸುದ್ದಿಮನೆಗಳನ್ನು ತಲುಪದೆ ಹೋದದ್ದು, ಕನ್ನಡ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಗೆ ಕಾಣದೆ ಹೋದದ್ದು ಸಹಜವಾಗಿಯೇ ಜನಾಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಸುದ್ದಿಮನೆಗಳು ಏಕೆ ಶೋಷಿತ ಜನರ ದನಿಗೆ ಕಿವುಡಾಗಿವೆ ? ಏಕೆ ಶೋಷಿತ ಆಕ್ರೋಶಕ್ಕೆ, ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಕುರುಡಾಗಿವೆ ? ಹಿಜಾಬ್ ತೊಟ್ಟ ಪುಟ್ಟ ಹುಡುಗಿಯನ್ನು ಅಟ್ಟಿಸಿಕೊಂಡು ಹೋಗುವ ಕ್ಯಾಮರಾಗಳಿಗೆ, ಬೈಟ್ಗಳಿಗಾಗಿ ಪೀಡಿಸುವ, ರೋಚಕ ಸುದ್ದಿಗಾಗಿ ಹಪಹಪಿಸುವ ಸುದ್ದಿಮನೆಗಳ ಕ್ಯಾಮರಾವಾಹಕರಿಗೆ ಈ ಸಾವಿರಾರು ನೀಲವಸ್ತ್ರದ ಜನರು ಏಕೆ ಗೋಚರಿಸುವುದಿಲ್ಲ. ದೇಶಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಿರುವ ಲಕ್ಷಾಂತರ ಕಾರ್ಮಿಕರು, ಶ್ರಮಜೀವಿಗಳು, ಮಹಿಳೆಯರು, ಆದಿವಾಸಿಗಳು ಏಕೆ ಕಾಣುವುದಿಲ್ಲ ?
ಬಂಡವಾಳಶಾಹಿ ಅರ್ಥವ್ಯವಸ್ಥೆ ಮತ್ತು ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಭಾರತೀಯ ಸಮಾಜದಲ್ಲಿ ಇಂದಿಗೂ ಬೇರೂರಿರುವ ಊಳಿಗಮಾನ್ಯ ಧೋರಣೆಯ ಮೇಲರಿಮೆ ಈ ಮೂರೂ ವಿದ್ಯಮಾನಗಳನ್ನು ಭಾರತದ ಮಾಧ್ಯಮಗಳ ಕಾರ್ಯವೈಖರಿಯಲ್ಲಿ ಗುರುತಿಸಬಹುದು. ವಿದ್ಯುನ್ಮಾನ ಮಾಧ್ಯಮಗಳ ಅಸೂಕ್ಷ್ಮತೆಗೆ ಮಾರುಕಟ್ಟೆ ಪ್ರೇರಿತ ಟಿಆರ್ಪಿ ಗಣನೆಯೊಂದೇ ಕಾರಣವಲ್ಲ. ಈ ಮಾಧ್ಯಮಗಳನ್ನು ನಿಯಂತ್ರಿಸುವ ಬಂಡವಳಿಗ ಸಮೂಹ, ನಿರ್ವಹಿಸುವ ಮೇಲ್ಜಾತಿಯ ಮನಸುಗಳು ಮತ್ತು ಇವೆರಡನ್ನೂ ಪ್ರಭಾವಿಸುವ ಮಾರುಕಟ್ಟೆಯ ಅನಿವಾರ್ಯತೆಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಜನಸ್ಪಂದನೆಯ ಪ್ರಮಾಣವನ್ನೂ ನಿರ್ಧರಿಸುತ್ತವೆ. ಕನ್ನಡದ ಸುದ್ದಿಮನೆಗಳು ಮತ್ತು ವಾರ್ತಾಭಾರತಿಯನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರಿಕೆಗಳೂ ಬೆಂಗಳೂರಿನ ಪ್ರತಿಭಟನೆಯ ಸುದ್ದಿಗೆ ಪ್ರಾಶಸ್ತ್ಯ ನೀಡದಿರುವುದನ್ನು ಈ ನೆಲೆಯಲ್ಲೇ ವ್ಯಾಖ್ಯಾನಿಸಬೇಕಿದೆ.
ಮಾಧ್ಯಮಗಳು ದಲಿತ ಸಮುದಾಯಗಳ ದನಿಗೆ ದನಿಯಾಗುತ್ತಿಲ್ಲ ಎಂಬ ಹಲುಬುವಿಕೆಯ ನಡುವೆಯೇ ಈ ಮಾಧ್ಯಮಗಳ ಮೂಲ ಸ್ವರೂಪವನ್ನೂ ಪರಾಮರ್ಶಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಸಂಸ್ಥೆಯಾಗಿ, ಸಾಮಾನ್ಯ ಪ್ರಜೆಗಳ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದಷ್ಟೇ ಅಲ್ಲದೆ, ಆಡಳಿತ ವ್ಯವಸ್ಥೆಯೊಡನೆ, ಆಡಳಿತಾರೂಢ ಅಧಿಕಾರ ಕೇಂದ್ರಗಳೊಡನೆ ಮತ್ತು ಸ್ಥಾಪಿತ ಸಾಮಾಜಿಕ ವ್ಯವಸ್ಥೆಯೊಡನೆ ಗುರುತಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಒಂದು ವರ್ಷದ ಕಾಲ ದೆಹಲಿ ಗಡಿಗಳಲ್ಲಿ ನಡೆದ ಚಾರಿತ್ರಿಕ ರೈತ ಮುಷ್ಕರದ ಸಂದರ್ಭದಲ್ಲೂ ವಿದ್ಯುನ್ಮಾನ ಮಾಧ್ಯಮಗಳು ಇದೇ ನಿಷ್ಕ್ರಿಯತೆ ಮತ್ತು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದವು. 2019-20ರಲ್ಲಿ ಸಿಎಎ-ಎನ್ಆರ್ಸಿ ವಿರುದ್ಧ ನಡೆದ ಜನಾಂದೋಲನಗಳ ಸಂದರ್ಭದಲ್ಲೂ ಬಹುಪಾಲು ಸುದ್ದಿಮನೆಗಳು ಆಡಳಿತ ವ್ಯವಸ್ಥೆಯ ವಕ್ತಾರರಂತೆ ವರ್ತಿಸಿದ್ದವು.
ಇಲ್ಲಿ ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆ ಮತ್ತು ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಜ್ಜಾಗಿರುವ ಔದ್ಯಮಿಕ ವಲಯದ ಹಿತಾಸಕ್ತಿಗಳು ಮುನ್ನೆಲೆಗೆ ಬರುತ್ತವೆ. ದೇಶದ ಪ್ರಜೆಗಳ ದನಿಗೆ ದನಿಯಾಗಬೇಕಾದ ಮಾಧ್ಯಮ ವಲಯ ಪ್ರಭುತ್ವದ ದನಿಗೆ ದನಿಗೂಡಿಸಿದರೆ ಏನಾಗಬಹುದು ಎಂಬ ಪ್ರಶ್ನೆಗೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು, ವಿಶೇಷವಾಗಿ ಕನ್ನಡದ ಸುದ್ದಿಮನೆಗಳು ನಿದರ್ಶನವಾಗಿ ಕಾಣುತ್ತವೆ. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಇಂದು ತಮ್ಮ ವೃತ್ತಿಧರ್ಮದ ಚೌಕಟ್ಟನ್ನು ದಾಟಿ, ಮಾರುಕಟ್ಟೆಯ ಒಂದು ಭಾಗವಾಗಿವೆ. ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲೇ ಇರುವ ಬಹುಪಾಲು ಸುದ್ದಿಮನೆಗಳು ಮತ್ತು ವಾಹಿನಿಗಳು ಒಂದೆಡೆ ಮಾರುಕಟ್ಟೆ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ಮತ್ತು ಅದರ ಹಿಂದುತ್ವ ರಾಜಕಾರಣದೊಂದಿಗೆ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ತಿತ್ವವನ್ನೂ ಕಾಪಾಡಿಕೊಳ್ಳಲು ಶ್ರಮಿಸುತ್ತವೆ.
ಬಹುಪಾಲು ಮಾಧ್ಯಮ ಸಮೂಹಗಳ ಒಡೆತನವನ್ನು ಹಿಂದುತ್ವ ರಾಜಕಾರಣದ ಕಾಲಾಳು ಉದ್ಯಮಿಗಳೇ ಹೊಂದಿರುವುದರಿಂದಲೇ ಇಂದು ಕನ್ನಡದ ಮತ್ತು ಹಿಂದಿಯ ಸುದ್ದಿಮನೆಗಳು ಭಟ್ಟಂಗಿತನದ ಪರಾಕಾಷ್ಠೆ ತಲುಪಿವೆ. ಕನ್ನಡದ ಮಟ್ಟಿಗೆ ಹೇಳುವುದಾದರೆ ಕೋವಿದ್ ಸಾಂಕ್ರಾಮಿಕದ ಸಂದರ್ಭದಲ್ಲೇ ಕನ್ನಡದ ಸುದ್ದಿಮನೆಗಳ ಭ್ರಷ್ಟಾತಿಭ್ರಷ್ಟ ಅವತಾರವನ್ನು ಕಂಡಿದ್ದಾಗಿದೆ. ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಅಥವಾ ಜನಪರ ಧ್ವನಿಯನ್ನು ಪ್ರತಿನಿಧಿಸುವ ಯಾವುದೇ ಒಂದು ಪ್ರತಿಭಟನೆ, ಪ್ರತಿರೋಧ, ಆಂದೋಲನ ಅಥವಾ ಮುಷ್ಕರ ಈ ವಾಹಿನಿಗಳ ಪಾಲಿಗೆ ನಗಣ್ಯ ಎನಿಸುತ್ತದೆ. ಪ್ರಸ್ತುತ ಹಿಜಾಬ್ ವಿವಾದದಲ್ಲೂ ಇದೇ ಮಾದರಿಯನ್ನು ಗಮನಿಸುತ್ತಿದ್ದೇವೆ. ತಮ್ಮ ಮಾರುಕಟ್ಟೆ ಟಿಆರ್ಪಿ ಹೆಚ್ಚಿಸಿಕೊಳ್ಳುವುದರೊಂದಿಗೇ, ಅತಿಯಾದ ಸ್ವಾಮಿನಿಷ್ಠೆಯನ್ನು ಪ್ರದರ್ಶಿಸುವ ಮೂಲಕ ಕನ್ನಡದ ಸುದ್ದಿಮನೆಗಳು ಜನಸಮೂಹಗಳ ಸಾರ್ವತ್ರಿಕ ಸಮಸ್ಯೆಗಳಿಗೆ ವಿಮುಖವಾಗುತ್ತಿವೆ.
ಒಂದು ಔದ್ಯಮಿಕ ಸಂಸ್ಥೆಯಾಗಿ ಯಾವುದೇ ಮಾಧ್ಯಮ ಸಮೂಹ/ವಾಹಿನಿ/ಸುದ್ದಿಮನೆ ಮಾರುಕಟ್ಟೆಯ ಅನಿವಾರ್ಯತೆಗಳಿಗೆ ತಕ್ಕಂತೆ ವರ್ತಿಸುವುದು ಸಹಜವೇ ಆದರೂ, ಈ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಿಕೋದ್ಯೋಗಿಗಳು, ಪತ್ರಕರ್ತರು, ಸುದ್ದಿ ಸಂಪಾದಕರು ಮತ್ತು ವರದಿಗಾರರು ತಮ್ಮ ವೃತ್ತಿಧರ್ಮವನ್ನು ಪಾಲಿಸಬೇಕಲ್ಲವೇ ? ಸಂಘಪರಿವಾರದ ವಕ್ತಾರರಂತೆ ಮಾತನಾಡುವ ಕನ್ನಡದ ಸುದ್ದಿಮನೆಗಳ ಸಂಪಾದಕರು, ನಿರೂಪಕರು ಮತ್ತು ವರದಿಗಾರರು ಈ ವೃತ್ತಿಧರ್ಮವನ್ನು ಮರೆತಿರುವುದರಿಂದಲೇ ಕನ್ನಡದ ಮಾಧ್ಯಮ ಲೋಕ ನೈತಿಕವಾಗಿ ಅಧೋಗತಿಗಿಳಿದಿದೆ. ಈ ಅಧಃಪತನದ ಮೂಲ ಕಾರಣ ಇರುವುದು ಮಾಧ್ಯಮಗಳನ್ನು ಪ್ರತಿನಿಧಿಸುವ ವ್ಯಕ್ತಿಗಳ ಜಾತಿ ಶ್ರೇಷ್ಠತೆಯ ಮೇಲರಿಮೆ ಮತ್ತು ಅಹಮಿಕೆಯಲ್ಲಿ. ತಳಸಮುದಾಯಗಳೊಡನೆ, ಶೋಷಿತ, ತುಳಿತಕ್ಕೊಳಗಾದ, ದಮನಿತ ಜನತೆಯೊಡನೆ ಗುರುತಿಸಿಕೊಳ್ಳಲಾಗದಂತಹ ಒಂದು ತಾತ್ವಿಕ ನೆಲೆಗಳಲ್ಲಿ ಈ ಸಂಪಾದಕರ ವರ್ಗ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಂಡಿರುತ್ತದೆ.
ಪತ್ರಿಕಾವಲಯದಲ್ಲಿ ಅಥವಾ ವಿದ್ಯುನ್ಮಾನ ಮಾಧ್ಯಮ ವಲಯದಲ್ಲಿರುವ ಪತ್ರಿಕೋದ್ಯೋಗಿಗಳಿಗೆ ಸಮಷ್ಟಿ ಪ್ರಜ್ಞೆ ಸದಾ ಜಾಗೃತಾವಸ್ಥೆಯಲ್ಲಿರಬೇಕಾದ್ದು ಅತ್ಯವಶ್ಯ. ತಾವು ಪ್ರತಿನಿಧಿಸುವ ಮಾಧ್ಯಮ ಸಮೂಹದ ಒಡೆತನಕ್ಕೂ ತಾವು ನಿರ್ವಹಿಸುವ ಸಮಾಜಮುಖಿ ಚಟುವಟಿಕೆಗೂ ನಡುವೆ ಒಂದು ಗೋಡೆ ಅತ್ಯವಶ್ಯವಾಗಿ ಇರಬೇಕು. ಸುದ್ದಿ ವಾಹಕರಾಗಿ, ಸುದ್ದಿ ಸಂಪಾದಕರಾಗಿ ಮತ್ತು ಟಿವಿ ವಾಹಿನಿಯ ನಿರೂಪಕರಾಗಿ ಲಕ್ಷಾಂತರ ಜನರನ್ನು ಕ್ಷಣಮಾತ್ರದಲ್ಲಿ ತಲುಪುವ ಜವಾಬ್ದಾರಿಯನ್ನು ಹೊತ್ತಿರುವ ವ್ಯಕ್ತಿಗಳಲ್ಲಿ ಸಮಷ್ಟಿ ಪ್ರಜ್ಞೆಯೊಡನೆ ಸಮಾಜದ ಆಂತರಿಕ ತುಮುಲಗಳನ್ನು ಗ್ರಹಿಸುವ ತೀಕ್ಷ್ಣತೆಯೂ ಇರಬೇಕಾಗುತ್ತದೆ. ಒಬ್ಬ ಜನಪ್ರತಿನಿಧಿಯಲ್ಲಿ ಇರಬೇಕಾದ ಸೂಕ್ಷ್ಮ ಸಂವೇದನೆಯೇ ಸುದ್ದಿವಾಹಕರಲ್ಲೂ ಇರಬೇಕಾಗುತ್ತದೆ.(ಇಲ್ಲ ಎನ್ನುವುದು ವಾಸ್ತವ.)ಏಕೆಂದರೆ ತಮ್ಮ ಜೀವನೋಪಾಯಕ್ಕಾಗಿ ಮಾಧ್ಯಮದ ಒಡೆಯನನ್ನು ಆಶ್ರಯಿಸಬೇಕಾದರೂ, ಈ ಸುದ್ದಿವಾಹಕರು ಬೌದ್ಧಿಕವಾಗಿ ಜನಸಾಮಾನ್ಯರನ್ನೇ ಪ್ರತಿನಿಧಿಸುತ್ತಾರೆ. ಜನಸಮೂಹಗಳನ್ನು ಕಾಡುವ ಜ್ವಲಂತ ಸಮಸ್ಯೆಗಳು, ಸಂದಿಗ್ಧತೆಗಳು ಮತ್ತು ಜಟಿಲ ಬಿಕ್ಕಟ್ಟುಗಳು ಪ್ರತಿಯೊಬ್ಬ ಸುದ್ದಿವಾಹಕರಲ್ಲೂ ಪ್ರಕ್ಷುಬ್ಧತೆಯನ್ನು ಸೃಷ್ಟಿಸದೆ ಹೋದರೆ, ಅಂಥವರನ್ನು ಸ್ಥಾಪಿತ ವ್ಯವಸ್ಥೆಯ ಏಜೆಂಟರೆಂದಷ್ಟೇ ಪರಿಗಣಿಸಲು ಸಾಧ್ಯ.
ಇಂದು ಕನ್ನಡದ ಸುದ್ದಿಮನೆಗಳಲ್ಲಿ ಇಂತಹ ಏಜೆಂಟರೇ ಪ್ರಧಾನವಾಗಿ ಕಂಡುಬರುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಸಿಎಎ-ಎನ್ಆರ್ಸಿವರೆಗೆ, ಜೆಎನ್ಯು ವಿವಾದದಿಂದ ಮೈಸೂರಿನ ರಂಗಾಯಣದವರೆಗೆ, ಕೋವಿದ್ ಸಾಂಕ್ರಾಮಿಕದಿಂದ ಹಿಜಾಬ್ ವಿವಾದದವರೆಗೆ, ಕನ್ನಡದ ಸುದ್ದಿಮನೆಗಳ ಸುದ್ದಿವಾಹಕರು ತಮ್ಮ ವೃತ್ತಿಧರ್ಮಕ್ಕಿಂತಲೂ ಸ್ವಾಮಿನಿಷ್ಠೆಗೇ ಹೆಚ್ಚು ಪ್ರಾಮುಖ್ಯತೆ ನೀಡಿರುವುದನ್ನು ಗಮನಿಸಬೇಕು. ಇದಕ್ಕೆ ಕಾರಣ ಈ ಸುದ್ದಿವಾಹಕರು ತಮ್ಮ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರುವ ಪ್ರಯತ್ನವನ್ನೇ ಮಾಡದಿರುವುದು. ಒಂದೆಡೆ ಧನದಾಹಿ ಬಂಡವಾಳ ವ್ಯವಸ್ಥೆಯ ಆರಾಧಕರಾಗಿ ತಮ್ಮ ಜೀವನೋಪಾಯ ಕಂಡುಕೊಳ್ಳುತ್ತಲೇ ಮತ್ತೊಂದೆಡೆ ತಮ್ಮ ವ್ಯಕ್ತಿಗತ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರಲಾರದೆ, ಮನುಜ ಸೂಕ್ಷ್ಮತೆ ಮತ್ತು ಸಂವೇದನೆಯನ್ನೂ ಕಳೆದುಕೊಂಡು, ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ನೆಲೆಗಳಿಗೆ ಮೇವುಣಿಸುತ್ತಿರುವುದು ಕನ್ನಡ ಸುದ್ದಿಮನೆಗಳ ಸುದ್ದಿವಾಹಕರ ಲಕ್ಷಣ.
ಹಾಗಾಗಿಯೇ ಕನ್ನಡದ ಸುದ್ದಿಮನೆಗಳಿಗೆ ಕೊಪ್ಪಳದ ದೇವಸ್ಥಾನದ ಘಟನೆಯಂತಹ ಅಸ್ಪೃಶ್ಯತೆಯ ದೌರ್ಜನ್ಯಗಳು, ಹಾಥ್ರಸ್ನಂತಹ ಶೋಷಿತ ಮಹಿಳೆಯರ ಮೇಲಿನ ಅತ್ಯಾಚಾರಗಳು, ಹಿಜಾಬ್ ವಿವಾದದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಚ್ಯುತಿ, ದಿನನಿತ್ಯ ನಡೆಯುತ್ತಿರುವ ಜಾತಿ ದೌರ್ಜನ್ಯದ ಪ್ರಕರಣಗಳು ಪ್ರಮುಖ ಸುದ್ದಿಯಾಗಿ ಕಾಣುವುದಿಲ್ಲ. ಈ ಸುದ್ದಿಮನೆಗಳ ಕ್ಯಾಮರಾ ಕಣ್ಣುಗಳಿಗೆ ಶೋಷಣೆಯ ನೆಲೆಗಳು ಗೋಚರಿಸುವುದಿಲ್ಲ ಹಾಗೆಯೇ ಶೋಷಣೆಯ ವಿರುದ್ಧ ಸಮಾಜದಲ್ಲಿ ಗಟ್ಟಿಯಾಗಿಯೇ ಕೇಳಿಬರುವ ಪ್ರತಿರೋಧದ ಧ್ವನಿಗಳೂ ಕೇಳಿಸುವುದಿಲ್ಲ. ಹಾಗಾಗಿಯೇ ದೆಹಲಿಯ ರೈತಮುಷ್ಕರದಲ್ಲಿ ಆಳುವ ವರ್ಗಗಳಿಗೆ ಕಂಡ ಕಲ್ಪಿತ ಭಯೋತ್ಪಾದಕರು, ಖಲಿಸ್ತಾನಿಗಳು, ಉಗ್ರಗಾಮಿಗಳೇ ಈ ಸುದ್ದಿಮನೆಯ ಸಂಪಾದಕರಿಗೂ ಹಾಗೆಯೇ ಕಾಣುತ್ತಾರೆ. ಸುದ್ದಿಮನೆಗಳ ಸಂಪಾದಕರಿಗೆ ತಮ್ಮದೇ ಆದ ಕಣ್ಣೋಟ/ಮುನ್ನೋಟ ಇದ್ದಿದ್ದರೆ ದೆಹಲಿಯ ಗಡಿಗಳಲ್ಲಿ ರೈತರೇ ಕಾಣುತ್ತಿದ್ದರು. ಆದರೆ ಈ ಮಾಧ್ಯಮ ವಕ್ತಾರರರ ದೃಷ್ಟಿಗೆ ಮಾರುಕಟ್ಟೆಯ ಪರದೆ, ಜಾತಿ ಶ್ರೇಷ್ಠತೆಯ ಮಸುಕು ಕವಿದಿರುತ್ತದೆ.
ಬಂಡವಾಳಶಾಹಿ ಅರ್ಥವ್ಯವಸ್ಥೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಸ್ಥಾಪಿತ ವ್ಯವಸ್ಥೆಯೊಳಗಿನ ಇಂತಹ ಒಳಬಿರುಕುಗಳನ್ನೇ ಹೆಚ್ಚಾಗಿ ಆಶ್ರಯಿಸುತ್ತದೆ. ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ವ್ಯವಸ್ಥೆ, ಅದರೊಳಗಿನ ಶ್ರೇಷ್ಠತೆಯ ವ್ಯಸನ ಮತ್ತು ಅದು ಉಂಟುಮಾಡುವ ಬಿರುಕುಗಳು, ಈ ಜಾತಿ ವ್ಯವಸ್ಥೆಯನ್ನು ಪೋಷಿಸುವ ವೈದಿಕಶಾಹಿ ಸಾಂಸ್ಕೃತಿಕ ರಾಜಕಾರಣ ಇವೆಲ್ಲವೂ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಸಾಧನಗಳಾಗಿ ಬಳಕೆಯಾಗುತ್ತವೆ. ಹಾಗಾಗಿಯೇ ಪ್ರಜಾವಾಣಿಯಂತಹ ಪತ್ರಿಕೆಯೂ ಸಹ ತನ್ನ ಅಸೂಕ್ಷ್ಮತೆಯನ್ನು ಆಗಿಂದಾಗ್ಗೆ ಪ್ರದರ್ಶಿಸುತ್ತಲೇ ಇರುತ್ತದೆ. ಬಂಡವಾಳಶಾಹಿಯು ತನ್ನ ಉಳಿವಿಗಾಗಿ ಅವಲಂಬಿಸುವ ಪ್ರತಿಯೊಂದು ಸಾಮಾಜಿಕ ನೆಲೆಗಳನ್ನೂ ತನ್ನ ಬಂಡವಾಳದ ಮೂಲಕವೇ ಬಲಪಡಿಸುತ್ತಿರುತ್ತದೆ. ಇದರಲ್ಲಿ ಜಾತಿ ವ್ಯವಸ್ಥೆ ಮತ್ತು ಅದು ಪ್ರತಿನಿಧಿಸುವ ವೈದಿಕಶಾಹಿಯ ಶೋಷಕ ವ್ಯವಸ್ಥೆಯೂ ಒಂದು.
ತನಗೆ ಅತ್ಯವಶ್ಯವಾದ ಸಂವಹನ ಮಾಧ್ಯಮಗಳನ್ನು ಸಂರಕ್ಷಿಸಲು ಬಂಡವಾಳಶಾಹಿ ಮಾರುಕಟ್ಟೆ ಸಮಾಜದ ಬೌದ್ಧಿಕ ನೆಲೆಗಳನ್ನೂ ತನ್ನ ಬಾಹುಗಳಲ್ಲಿ ಬಂಧಿಸಲಾರಂಭಿಸುತ್ತದೆ. ಸಾಮಾನ್ಯ ಅಧ್ಯಯನ, ಸಂಶೋಧನೆ ಮತ್ತು ಪರಿಶೋಧನೆಯ ನೆಲೆಗಳನ್ನೂ ಸಹ ವಾಣಿಜ್ಯೀಕರಣಗೊಳಿಸುವ ಮೂಲಕ, ಸಂವಹನದ ಸೇತುವೆಗಳಲ್ಲಿ ತನ್ನದೇ ಆದ ನಿಯಂತ್ರಕ ಶಕ್ತಿಗಳನ್ನು ರೂಪಿಸುತ್ತಾ ಹೋಗುತ್ತದೆ. ಮಾಧ್ಯಮಗಳು ಏಕೆ ಹೀಗಾಗಿವೆ ? ಶೈಕ್ಷಣಿಕ ವಲಯ, ಬೌದ್ಧಿಕ ವಲಯ, ಅಕಾಡೆಮಿಕ್ ವಲಯ ಏಕೆ ನಿಷ್ಕ್ರಿಯವಾಗಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿ ಕಂಡುಕೊಳ್ಳಬೇಕಿದೆ. ಸಂಸ್ಕೃತಿ, ಕಲೆ, ಜ್ಞಾನ ಮತ್ತು ಬೌದ್ಧಿಕ ಸಂಪತ್ತನ್ನು ಮಾರುಕಟ್ಟೆಯ ಸರಕುಗಳಂತೆಯೇ ಪರಿಗಣಿಸುವ ಮಾರುಕಟ್ಟೆ ವ್ಯವಸ್ಥೆ ಈ ವಲಯಗಳ ಸಂವಹನ ಸೇತುವೆಗಳನ್ನೂ ಹರಾಜು ಮಾರುಕಟ್ಟೆಯ ಜಗುಲಿಯಂತೆಯೇ ಪರಿವರ್ತಿಸಿಬಿಡುತ್ತದೆ. ಹಾಗಾಗಿಯೇ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಳು ಬಿಕರಿಯಾಗುವಂತೆಯೇ ಸಂವಹನ ವಾಹಿನಿಗಳ ಸಂಪಾದಕ, ನಿರೂಪಕ, ಸುದ್ದಿವಾಹಕ ಹುದ್ದೆಗಳೂ ಬಿಕರಿಯಾಗತೊಡಗುತ್ತವೆ.
ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ಶ್ರೇಷ್ಠತೆಯ ನೆಲೆಗಳು ಮಾರುಕಟ್ಟೆ ಬಂಡವಾಳದೊಡನೆ ಸುಲಭವಾಗಿ ರಾಜಿಯಾಗುವುದರಿಂದಲೇ ಬಹುತೇಕ ಸಂವಹನದ ನೆಲೆಗಳು ತಮ್ಮ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡು ದಿನದಿಂದ ದಿನಕ್ಕೆ ಬೆತ್ತಲಾಗುತ್ತಿವೆ. ಆಳುವ ವರ್ಗಗಳ ಸುಳ್ಳುಗಳನ್ನು ವೈಭವೀಕರಿಸುವಷ್ಟೇ ರೋಚಕವಾಗಿ, ವಿನಾಶಕಾರಿ ಯುದ್ಧವನ್ನೂ ವೈಭವೀಕರಿಸುವ, ಕ್ರೂರ ಅತ್ಯಾಚಾರವನ್ನೂ ರಂಜನೀಯವಾಗಿಸುವ ಒಂದು ವಿಕೃತ ಧೋರಣೆಯನ್ನು ಭಾರತದ ಸುದ್ದಿವಾಹಿನಿಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ಈ ರಾಜೀ ಸೂತ್ರವೇ ಆಗಿರುತ್ತದೆ. ಹಾಗಾಗಿಯೇ ಆಳುವ ವರ್ಗಗಳ, ಪ್ರಭುತ್ವದ ಮತ್ತು ಸ್ಥಾಪಿತ ಹಿತಾಸಕ್ತಿಗಳ ಪರಿಭಾಷೆಯೇ ಮಾಧ್ಯಮದ ಪರಿಭಾಷೆಯೂ ಆಗುತ್ತದೆ. ಜೆಎನ್ಯು ಸಂಘರ್ಷದಲ್ಲಿ, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ, ಕೋವಿದ್ ನಿರ್ವಹಣೆಯಲ್ಲಿ ಇದನ್ನು ನೇರವಾಗಿಯೇ ಕಂಡಿದ್ದೇವೆ. ಹಿಜಾಬ್ ವಿವಾದದಲ್ಲೂ ಕಾಣುತ್ತಿದ್ದೇವೆ.
ಇಲ್ಲಿ ಆಧುನಿಕ ವಿದ್ಯುನ್ಮಾನ ಲೋಕದ ಸಾಮಾಜಿಕ ಮಾಧ್ಯಮಗಳ ಪಾತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಬಂಡವಾಳಶಾಹಿ ಮಾರುಕಟ್ಟೆಯ ಹಂಗಿಲ್ಲದೆ ಸಮಾಜಮುಖಿಯಾಗಿ, ಜನಸ್ಪಂದನೆಯೊಂದಿಗೆ, ಜನಸಮೂಹಗಳಿಗೆ ದನಿಗೆ ದನಿಯಾಗುವ ನೂತನ ಸಂವಹನ ಸೇತುವೆಗಳನ್ನು ನಾವಿಂದು ನಿರ್ಮಿಸಬೇಕಿದೆ. ಇಲ್ಲಿಯೂ ಸಹ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಾಮಾಜಿಕ ಮಾಧ್ಯಮಗಳು ಮತ್ತಷ್ಟು ಒಳಬಿರುಕುಗಳನ್ನು ಸೃಷ್ಟಿಸುತ್ತಲೇ ಹೋಗುವ ಸಾಧ್ಯತೆಗಳಿರುತ್ತವೆ. ಇವೆಲ್ಲವನ್ನೂ ಮೀರಿ ಜನಪರ ವಾಹಿನಿಗಳು ವೈಚಾರಿಕತೆಯ ನೆಲೆಯಲ್ಲಿ, ವೈಜ್ಞಾನಿಕ ಮನೋಭಾವದೊಂದಿಗೆ, ಸಾಂವಿಧಾನಿಕ ಬದ್ಧತೆಯೊಂದಿಗೆ, ಪ್ರಜಾಸತ್ತಾತ್ಮಕ ಪ್ರಜ್ಞಾವಂತಿಕೆಯೊಂದಿಗೆ, ಜನಸಮುದಾಯಗಳ ನೋವಿನ ದನಿಗೆ ದನಿಯಾಗಿ ರೂಪುಗೊಳ್ಳಬೇಕಿದೆ. ಭಾರತದ ಸಂವಿಧಾನದ ಆಶಯದಂತೆ ದೇಶವನ್ನು ಒಂದು ಸರ್ವಜನಾಂಗದ ಶಾಂತಿಯ ತೋಟದಂತೆ ರೂಪಿಸಬೇಕಾದರೆ, ಈ ಸಂವಹನ ಸೇತುವೆಗಳು ಬಲಿಷ್ಠವಾಗುವುದು ಅತ್ಯವಶ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ3 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ2 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ1 day agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ1 day agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


