ಬಹಿರಂಗ
ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ
ನವ ಉದಾರವಾದದ ಮಾರುಕಟ್ಟೆ ವ್ಯವಸ್ಥೆಯಲ್ಲಿ ದೃಶ್ಯ ಮಾಧ್ಯಮಗಳೂ ಸಂವಹನದ ಸರಕುಗಳು
- ನಾ ದಿವಾಕರ
ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸಾರ್ವಜನಿಕ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕಾದ ವಿದ್ಯುನ್ಮಾನ ಮಾಧ್ಯಮಗಳ ಸ್ವರೂಪ ಹೇಗಿರಬೇಕು ? ಡಿಜಿಟಲೀಕರಣದತ್ತ ದಾಪುಗಾಲು ಹಾಕುತ್ತಿರುವ ಭಾರತದಲ್ಲಿ ಈ ಪ್ರಶ್ನೆ ಇನ್ನೂ ಹೆಚ್ಚು ಪ್ರಸ್ತುತ ಎನಿಸುತ್ತದೆ. ಮುದ್ರಣ ಮಾಧ್ಯಮ ಎಷ್ಟೇ ವ್ಯಾಪಕವಾದರೂ ಅದು ಅಕ್ಷರಸ್ತರನ್ನು ತಲುಪುವ ಒಂದು ಸಾಧನ. ಆದರೆ ದೃಶ್ಯ ಮಾಧ್ಯಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬಹುದಾದ ಒಂದು ಸಂವಹನ ಸಾಧನವಾಗಿದೆ. ಕಳೆದ ಎರಡು ದಶಕಗಳಲ್ಲಿ ಭಾರತದ ರಾಜಕಾರಣ, ಸಾಮಾಜಿಕ ಪಲ್ಲಟಗಳು, ಸಾಂಸ್ಕೃತಿಕ ತಲ್ಲಣಗಳು ಮತ್ತು ಸಾರ್ವಜನಿಕ ಜೀವನದ ಏಳುಬೀಳುಗಳನ್ನು ದಾಖಲಿಸುತ್ತಲೇ ಬಂದಿರುವ ವಿದ್ಯುನ್ಮಾನ ದೃಶ್ಯ ಮಾಧ್ಯಮಗಳ ಸ್ವರೂಪ ಮತ್ತು ಕಾರ್ಯವೈಖರಿ ಇಂದಿನ ಸನ್ನಿವೇಶದಲ್ಲಿ ಹೆಚ್ಚು ಚರ್ಚೆಗೊಳಗಾಗಬೇಕಿದೆ.
ಇದೇ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ, ವಿಶೇಷವಾಗಿ ಕನ್ನಡ ಸುದ್ದಿಮನೆಗಳ, ನೈತಿಕತೆ ಮತ್ತು ವೃತ್ತಿಪರತೆಯೇ ಪ್ರಶ್ನಾರ್ಹವಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯಲು ಒತ್ತಾಯಿಸುವ ಮೂಲಕ ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದು ರಾಜ್ಯಾದ್ಯಂತ ಜನರ ಆಕ್ರೋಶಕ್ಕೆ ತುತ್ತಾಗಿದ್ದು ಸಹಜ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ನ್ಯಾ ಮಲ್ಲಿಕಾರ್ಜುನ ಗೌಡ್ ಅವರನ್ನು ವಜಾ ಮಾಡಲು ಒತ್ತಾಯಿಸಿ ರಾಜ್ಯದ ಎಲ್ಲ ದಲಿತ ಸಂಘಟನೆಗಳು, ಪ್ರಗತಿಪರ ಗುಂಪುಗಳು ಮತ್ತು ವಿಚಾರವಂತರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.
ಬಹುಶಃ ಇತ್ತೀಚೆಗೆ ತಾನೇ ಅಂತ್ಯಗೊಂಡ ದೆಹಲಿಯ ರೈತಮುಷ್ಕರವನ್ನು ಹೊರತುಪಡಿಸಿದರೆ, ಫೆಬ್ರವರಿ 19ರ ಪ್ರತಿಭಟನಾ ಮೆರವಣಿಗೆ ಒಂದು ಚಾರಿತ್ರಿಕ ಗಳಿಗೆಯಾಗಿ ಕಾಣುತ್ತದೆ. ಸಾಗರೋಪಾದಿಯಲ್ಲಿ ನೆರೆದ ಜನರ ಆಕ್ರೋಶದ ದನಿಗಳು ಆಳುವವರನ್ನು ತಲುಪಿದ್ದರೂ, ರಸ್ತೆಗಳನ್ನು ನೀಲಿಮಯವಾಗಿಸಿದ ಈ ಜನಸ್ತೋಮ ಕನ್ನಡದ ಸುದ್ದಿಮನೆಗಳನ್ನು ತಲುಪದೆ ಹೋದದ್ದು, ಕನ್ನಡ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಗೆ ಕಾಣದೆ ಹೋದದ್ದು ಸಹಜವಾಗಿಯೇ ಜನಾಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಸುದ್ದಿಮನೆಗಳು ಏಕೆ ಶೋಷಿತ ಜನರ ದನಿಗೆ ಕಿವುಡಾಗಿವೆ ? ಏಕೆ ಶೋಷಿತ ಆಕ್ರೋಶಕ್ಕೆ, ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಕುರುಡಾಗಿವೆ ? ಹಿಜಾಬ್ ತೊಟ್ಟ ಪುಟ್ಟ ಹುಡುಗಿಯನ್ನು ಅಟ್ಟಿಸಿಕೊಂಡು ಹೋಗುವ ಕ್ಯಾಮರಾಗಳಿಗೆ, ಬೈಟ್ಗಳಿಗಾಗಿ ಪೀಡಿಸುವ, ರೋಚಕ ಸುದ್ದಿಗಾಗಿ ಹಪಹಪಿಸುವ ಸುದ್ದಿಮನೆಗಳ ಕ್ಯಾಮರಾವಾಹಕರಿಗೆ ಈ ಸಾವಿರಾರು ನೀಲವಸ್ತ್ರದ ಜನರು ಏಕೆ ಗೋಚರಿಸುವುದಿಲ್ಲ. ದೇಶಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಿರುವ ಲಕ್ಷಾಂತರ ಕಾರ್ಮಿಕರು, ಶ್ರಮಜೀವಿಗಳು, ಮಹಿಳೆಯರು, ಆದಿವಾಸಿಗಳು ಏಕೆ ಕಾಣುವುದಿಲ್ಲ ?
ಬಂಡವಾಳಶಾಹಿ ಅರ್ಥವ್ಯವಸ್ಥೆ ಮತ್ತು ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಭಾರತೀಯ ಸಮಾಜದಲ್ಲಿ ಇಂದಿಗೂ ಬೇರೂರಿರುವ ಊಳಿಗಮಾನ್ಯ ಧೋರಣೆಯ ಮೇಲರಿಮೆ ಈ ಮೂರೂ ವಿದ್ಯಮಾನಗಳನ್ನು ಭಾರತದ ಮಾಧ್ಯಮಗಳ ಕಾರ್ಯವೈಖರಿಯಲ್ಲಿ ಗುರುತಿಸಬಹುದು. ವಿದ್ಯುನ್ಮಾನ ಮಾಧ್ಯಮಗಳ ಅಸೂಕ್ಷ್ಮತೆಗೆ ಮಾರುಕಟ್ಟೆ ಪ್ರೇರಿತ ಟಿಆರ್ಪಿ ಗಣನೆಯೊಂದೇ ಕಾರಣವಲ್ಲ. ಈ ಮಾಧ್ಯಮಗಳನ್ನು ನಿಯಂತ್ರಿಸುವ ಬಂಡವಳಿಗ ಸಮೂಹ, ನಿರ್ವಹಿಸುವ ಮೇಲ್ಜಾತಿಯ ಮನಸುಗಳು ಮತ್ತು ಇವೆರಡನ್ನೂ ಪ್ರಭಾವಿಸುವ ಮಾರುಕಟ್ಟೆಯ ಅನಿವಾರ್ಯತೆಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಜನಸ್ಪಂದನೆಯ ಪ್ರಮಾಣವನ್ನೂ ನಿರ್ಧರಿಸುತ್ತವೆ. ಕನ್ನಡದ ಸುದ್ದಿಮನೆಗಳು ಮತ್ತು ವಾರ್ತಾಭಾರತಿಯನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರಿಕೆಗಳೂ ಬೆಂಗಳೂರಿನ ಪ್ರತಿಭಟನೆಯ ಸುದ್ದಿಗೆ ಪ್ರಾಶಸ್ತ್ಯ ನೀಡದಿರುವುದನ್ನು ಈ ನೆಲೆಯಲ್ಲೇ ವ್ಯಾಖ್ಯಾನಿಸಬೇಕಿದೆ.
ಮಾಧ್ಯಮಗಳು ದಲಿತ ಸಮುದಾಯಗಳ ದನಿಗೆ ದನಿಯಾಗುತ್ತಿಲ್ಲ ಎಂಬ ಹಲುಬುವಿಕೆಯ ನಡುವೆಯೇ ಈ ಮಾಧ್ಯಮಗಳ ಮೂಲ ಸ್ವರೂಪವನ್ನೂ ಪರಾಮರ್ಶಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಸಂಸ್ಥೆಯಾಗಿ, ಸಾಮಾನ್ಯ ಪ್ರಜೆಗಳ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದಷ್ಟೇ ಅಲ್ಲದೆ, ಆಡಳಿತ ವ್ಯವಸ್ಥೆಯೊಡನೆ, ಆಡಳಿತಾರೂಢ ಅಧಿಕಾರ ಕೇಂದ್ರಗಳೊಡನೆ ಮತ್ತು ಸ್ಥಾಪಿತ ಸಾಮಾಜಿಕ ವ್ಯವಸ್ಥೆಯೊಡನೆ ಗುರುತಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಒಂದು ವರ್ಷದ ಕಾಲ ದೆಹಲಿ ಗಡಿಗಳಲ್ಲಿ ನಡೆದ ಚಾರಿತ್ರಿಕ ರೈತ ಮುಷ್ಕರದ ಸಂದರ್ಭದಲ್ಲೂ ವಿದ್ಯುನ್ಮಾನ ಮಾಧ್ಯಮಗಳು ಇದೇ ನಿಷ್ಕ್ರಿಯತೆ ಮತ್ತು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದವು. 2019-20ರಲ್ಲಿ ಸಿಎಎ-ಎನ್ಆರ್ಸಿ ವಿರುದ್ಧ ನಡೆದ ಜನಾಂದೋಲನಗಳ ಸಂದರ್ಭದಲ್ಲೂ ಬಹುಪಾಲು ಸುದ್ದಿಮನೆಗಳು ಆಡಳಿತ ವ್ಯವಸ್ಥೆಯ ವಕ್ತಾರರಂತೆ ವರ್ತಿಸಿದ್ದವು.
ಇಲ್ಲಿ ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆ ಮತ್ತು ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಜ್ಜಾಗಿರುವ ಔದ್ಯಮಿಕ ವಲಯದ ಹಿತಾಸಕ್ತಿಗಳು ಮುನ್ನೆಲೆಗೆ ಬರುತ್ತವೆ. ದೇಶದ ಪ್ರಜೆಗಳ ದನಿಗೆ ದನಿಯಾಗಬೇಕಾದ ಮಾಧ್ಯಮ ವಲಯ ಪ್ರಭುತ್ವದ ದನಿಗೆ ದನಿಗೂಡಿಸಿದರೆ ಏನಾಗಬಹುದು ಎಂಬ ಪ್ರಶ್ನೆಗೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು, ವಿಶೇಷವಾಗಿ ಕನ್ನಡದ ಸುದ್ದಿಮನೆಗಳು ನಿದರ್ಶನವಾಗಿ ಕಾಣುತ್ತವೆ. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಇಂದು ತಮ್ಮ ವೃತ್ತಿಧರ್ಮದ ಚೌಕಟ್ಟನ್ನು ದಾಟಿ, ಮಾರುಕಟ್ಟೆಯ ಒಂದು ಭಾಗವಾಗಿವೆ. ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲೇ ಇರುವ ಬಹುಪಾಲು ಸುದ್ದಿಮನೆಗಳು ಮತ್ತು ವಾಹಿನಿಗಳು ಒಂದೆಡೆ ಮಾರುಕಟ್ಟೆ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ಮತ್ತು ಅದರ ಹಿಂದುತ್ವ ರಾಜಕಾರಣದೊಂದಿಗೆ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ತಿತ್ವವನ್ನೂ ಕಾಪಾಡಿಕೊಳ್ಳಲು ಶ್ರಮಿಸುತ್ತವೆ.
ಬಹುಪಾಲು ಮಾಧ್ಯಮ ಸಮೂಹಗಳ ಒಡೆತನವನ್ನು ಹಿಂದುತ್ವ ರಾಜಕಾರಣದ ಕಾಲಾಳು ಉದ್ಯಮಿಗಳೇ ಹೊಂದಿರುವುದರಿಂದಲೇ ಇಂದು ಕನ್ನಡದ ಮತ್ತು ಹಿಂದಿಯ ಸುದ್ದಿಮನೆಗಳು ಭಟ್ಟಂಗಿತನದ ಪರಾಕಾಷ್ಠೆ ತಲುಪಿವೆ. ಕನ್ನಡದ ಮಟ್ಟಿಗೆ ಹೇಳುವುದಾದರೆ ಕೋವಿದ್ ಸಾಂಕ್ರಾಮಿಕದ ಸಂದರ್ಭದಲ್ಲೇ ಕನ್ನಡದ ಸುದ್ದಿಮನೆಗಳ ಭ್ರಷ್ಟಾತಿಭ್ರಷ್ಟ ಅವತಾರವನ್ನು ಕಂಡಿದ್ದಾಗಿದೆ. ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಅಥವಾ ಜನಪರ ಧ್ವನಿಯನ್ನು ಪ್ರತಿನಿಧಿಸುವ ಯಾವುದೇ ಒಂದು ಪ್ರತಿಭಟನೆ, ಪ್ರತಿರೋಧ, ಆಂದೋಲನ ಅಥವಾ ಮುಷ್ಕರ ಈ ವಾಹಿನಿಗಳ ಪಾಲಿಗೆ ನಗಣ್ಯ ಎನಿಸುತ್ತದೆ. ಪ್ರಸ್ತುತ ಹಿಜಾಬ್ ವಿವಾದದಲ್ಲೂ ಇದೇ ಮಾದರಿಯನ್ನು ಗಮನಿಸುತ್ತಿದ್ದೇವೆ. ತಮ್ಮ ಮಾರುಕಟ್ಟೆ ಟಿಆರ್ಪಿ ಹೆಚ್ಚಿಸಿಕೊಳ್ಳುವುದರೊಂದಿಗೇ, ಅತಿಯಾದ ಸ್ವಾಮಿನಿಷ್ಠೆಯನ್ನು ಪ್ರದರ್ಶಿಸುವ ಮೂಲಕ ಕನ್ನಡದ ಸುದ್ದಿಮನೆಗಳು ಜನಸಮೂಹಗಳ ಸಾರ್ವತ್ರಿಕ ಸಮಸ್ಯೆಗಳಿಗೆ ವಿಮುಖವಾಗುತ್ತಿವೆ.
ಒಂದು ಔದ್ಯಮಿಕ ಸಂಸ್ಥೆಯಾಗಿ ಯಾವುದೇ ಮಾಧ್ಯಮ ಸಮೂಹ/ವಾಹಿನಿ/ಸುದ್ದಿಮನೆ ಮಾರುಕಟ್ಟೆಯ ಅನಿವಾರ್ಯತೆಗಳಿಗೆ ತಕ್ಕಂತೆ ವರ್ತಿಸುವುದು ಸಹಜವೇ ಆದರೂ, ಈ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಿಕೋದ್ಯೋಗಿಗಳು, ಪತ್ರಕರ್ತರು, ಸುದ್ದಿ ಸಂಪಾದಕರು ಮತ್ತು ವರದಿಗಾರರು ತಮ್ಮ ವೃತ್ತಿಧರ್ಮವನ್ನು ಪಾಲಿಸಬೇಕಲ್ಲವೇ ? ಸಂಘಪರಿವಾರದ ವಕ್ತಾರರಂತೆ ಮಾತನಾಡುವ ಕನ್ನಡದ ಸುದ್ದಿಮನೆಗಳ ಸಂಪಾದಕರು, ನಿರೂಪಕರು ಮತ್ತು ವರದಿಗಾರರು ಈ ವೃತ್ತಿಧರ್ಮವನ್ನು ಮರೆತಿರುವುದರಿಂದಲೇ ಕನ್ನಡದ ಮಾಧ್ಯಮ ಲೋಕ ನೈತಿಕವಾಗಿ ಅಧೋಗತಿಗಿಳಿದಿದೆ. ಈ ಅಧಃಪತನದ ಮೂಲ ಕಾರಣ ಇರುವುದು ಮಾಧ್ಯಮಗಳನ್ನು ಪ್ರತಿನಿಧಿಸುವ ವ್ಯಕ್ತಿಗಳ ಜಾತಿ ಶ್ರೇಷ್ಠತೆಯ ಮೇಲರಿಮೆ ಮತ್ತು ಅಹಮಿಕೆಯಲ್ಲಿ. ತಳಸಮುದಾಯಗಳೊಡನೆ, ಶೋಷಿತ, ತುಳಿತಕ್ಕೊಳಗಾದ, ದಮನಿತ ಜನತೆಯೊಡನೆ ಗುರುತಿಸಿಕೊಳ್ಳಲಾಗದಂತಹ ಒಂದು ತಾತ್ವಿಕ ನೆಲೆಗಳಲ್ಲಿ ಈ ಸಂಪಾದಕರ ವರ್ಗ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಂಡಿರುತ್ತದೆ.
ಪತ್ರಿಕಾವಲಯದಲ್ಲಿ ಅಥವಾ ವಿದ್ಯುನ್ಮಾನ ಮಾಧ್ಯಮ ವಲಯದಲ್ಲಿರುವ ಪತ್ರಿಕೋದ್ಯೋಗಿಗಳಿಗೆ ಸಮಷ್ಟಿ ಪ್ರಜ್ಞೆ ಸದಾ ಜಾಗೃತಾವಸ್ಥೆಯಲ್ಲಿರಬೇಕಾದ್ದು ಅತ್ಯವಶ್ಯ. ತಾವು ಪ್ರತಿನಿಧಿಸುವ ಮಾಧ್ಯಮ ಸಮೂಹದ ಒಡೆತನಕ್ಕೂ ತಾವು ನಿರ್ವಹಿಸುವ ಸಮಾಜಮುಖಿ ಚಟುವಟಿಕೆಗೂ ನಡುವೆ ಒಂದು ಗೋಡೆ ಅತ್ಯವಶ್ಯವಾಗಿ ಇರಬೇಕು. ಸುದ್ದಿ ವಾಹಕರಾಗಿ, ಸುದ್ದಿ ಸಂಪಾದಕರಾಗಿ ಮತ್ತು ಟಿವಿ ವಾಹಿನಿಯ ನಿರೂಪಕರಾಗಿ ಲಕ್ಷಾಂತರ ಜನರನ್ನು ಕ್ಷಣಮಾತ್ರದಲ್ಲಿ ತಲುಪುವ ಜವಾಬ್ದಾರಿಯನ್ನು ಹೊತ್ತಿರುವ ವ್ಯಕ್ತಿಗಳಲ್ಲಿ ಸಮಷ್ಟಿ ಪ್ರಜ್ಞೆಯೊಡನೆ ಸಮಾಜದ ಆಂತರಿಕ ತುಮುಲಗಳನ್ನು ಗ್ರಹಿಸುವ ತೀಕ್ಷ್ಣತೆಯೂ ಇರಬೇಕಾಗುತ್ತದೆ. ಒಬ್ಬ ಜನಪ್ರತಿನಿಧಿಯಲ್ಲಿ ಇರಬೇಕಾದ ಸೂಕ್ಷ್ಮ ಸಂವೇದನೆಯೇ ಸುದ್ದಿವಾಹಕರಲ್ಲೂ ಇರಬೇಕಾಗುತ್ತದೆ.(ಇಲ್ಲ ಎನ್ನುವುದು ವಾಸ್ತವ.)ಏಕೆಂದರೆ ತಮ್ಮ ಜೀವನೋಪಾಯಕ್ಕಾಗಿ ಮಾಧ್ಯಮದ ಒಡೆಯನನ್ನು ಆಶ್ರಯಿಸಬೇಕಾದರೂ, ಈ ಸುದ್ದಿವಾಹಕರು ಬೌದ್ಧಿಕವಾಗಿ ಜನಸಾಮಾನ್ಯರನ್ನೇ ಪ್ರತಿನಿಧಿಸುತ್ತಾರೆ. ಜನಸಮೂಹಗಳನ್ನು ಕಾಡುವ ಜ್ವಲಂತ ಸಮಸ್ಯೆಗಳು, ಸಂದಿಗ್ಧತೆಗಳು ಮತ್ತು ಜಟಿಲ ಬಿಕ್ಕಟ್ಟುಗಳು ಪ್ರತಿಯೊಬ್ಬ ಸುದ್ದಿವಾಹಕರಲ್ಲೂ ಪ್ರಕ್ಷುಬ್ಧತೆಯನ್ನು ಸೃಷ್ಟಿಸದೆ ಹೋದರೆ, ಅಂಥವರನ್ನು ಸ್ಥಾಪಿತ ವ್ಯವಸ್ಥೆಯ ಏಜೆಂಟರೆಂದಷ್ಟೇ ಪರಿಗಣಿಸಲು ಸಾಧ್ಯ.
ಇಂದು ಕನ್ನಡದ ಸುದ್ದಿಮನೆಗಳಲ್ಲಿ ಇಂತಹ ಏಜೆಂಟರೇ ಪ್ರಧಾನವಾಗಿ ಕಂಡುಬರುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಸಿಎಎ-ಎನ್ಆರ್ಸಿವರೆಗೆ, ಜೆಎನ್ಯು ವಿವಾದದಿಂದ ಮೈಸೂರಿನ ರಂಗಾಯಣದವರೆಗೆ, ಕೋವಿದ್ ಸಾಂಕ್ರಾಮಿಕದಿಂದ ಹಿಜಾಬ್ ವಿವಾದದವರೆಗೆ, ಕನ್ನಡದ ಸುದ್ದಿಮನೆಗಳ ಸುದ್ದಿವಾಹಕರು ತಮ್ಮ ವೃತ್ತಿಧರ್ಮಕ್ಕಿಂತಲೂ ಸ್ವಾಮಿನಿಷ್ಠೆಗೇ ಹೆಚ್ಚು ಪ್ರಾಮುಖ್ಯತೆ ನೀಡಿರುವುದನ್ನು ಗಮನಿಸಬೇಕು. ಇದಕ್ಕೆ ಕಾರಣ ಈ ಸುದ್ದಿವಾಹಕರು ತಮ್ಮ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರುವ ಪ್ರಯತ್ನವನ್ನೇ ಮಾಡದಿರುವುದು. ಒಂದೆಡೆ ಧನದಾಹಿ ಬಂಡವಾಳ ವ್ಯವಸ್ಥೆಯ ಆರಾಧಕರಾಗಿ ತಮ್ಮ ಜೀವನೋಪಾಯ ಕಂಡುಕೊಳ್ಳುತ್ತಲೇ ಮತ್ತೊಂದೆಡೆ ತಮ್ಮ ವ್ಯಕ್ತಿಗತ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರಲಾರದೆ, ಮನುಜ ಸೂಕ್ಷ್ಮತೆ ಮತ್ತು ಸಂವೇದನೆಯನ್ನೂ ಕಳೆದುಕೊಂಡು, ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ನೆಲೆಗಳಿಗೆ ಮೇವುಣಿಸುತ್ತಿರುವುದು ಕನ್ನಡ ಸುದ್ದಿಮನೆಗಳ ಸುದ್ದಿವಾಹಕರ ಲಕ್ಷಣ.
ಹಾಗಾಗಿಯೇ ಕನ್ನಡದ ಸುದ್ದಿಮನೆಗಳಿಗೆ ಕೊಪ್ಪಳದ ದೇವಸ್ಥಾನದ ಘಟನೆಯಂತಹ ಅಸ್ಪೃಶ್ಯತೆಯ ದೌರ್ಜನ್ಯಗಳು, ಹಾಥ್ರಸ್ನಂತಹ ಶೋಷಿತ ಮಹಿಳೆಯರ ಮೇಲಿನ ಅತ್ಯಾಚಾರಗಳು, ಹಿಜಾಬ್ ವಿವಾದದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಚ್ಯುತಿ, ದಿನನಿತ್ಯ ನಡೆಯುತ್ತಿರುವ ಜಾತಿ ದೌರ್ಜನ್ಯದ ಪ್ರಕರಣಗಳು ಪ್ರಮುಖ ಸುದ್ದಿಯಾಗಿ ಕಾಣುವುದಿಲ್ಲ. ಈ ಸುದ್ದಿಮನೆಗಳ ಕ್ಯಾಮರಾ ಕಣ್ಣುಗಳಿಗೆ ಶೋಷಣೆಯ ನೆಲೆಗಳು ಗೋಚರಿಸುವುದಿಲ್ಲ ಹಾಗೆಯೇ ಶೋಷಣೆಯ ವಿರುದ್ಧ ಸಮಾಜದಲ್ಲಿ ಗಟ್ಟಿಯಾಗಿಯೇ ಕೇಳಿಬರುವ ಪ್ರತಿರೋಧದ ಧ್ವನಿಗಳೂ ಕೇಳಿಸುವುದಿಲ್ಲ. ಹಾಗಾಗಿಯೇ ದೆಹಲಿಯ ರೈತಮುಷ್ಕರದಲ್ಲಿ ಆಳುವ ವರ್ಗಗಳಿಗೆ ಕಂಡ ಕಲ್ಪಿತ ಭಯೋತ್ಪಾದಕರು, ಖಲಿಸ್ತಾನಿಗಳು, ಉಗ್ರಗಾಮಿಗಳೇ ಈ ಸುದ್ದಿಮನೆಯ ಸಂಪಾದಕರಿಗೂ ಹಾಗೆಯೇ ಕಾಣುತ್ತಾರೆ. ಸುದ್ದಿಮನೆಗಳ ಸಂಪಾದಕರಿಗೆ ತಮ್ಮದೇ ಆದ ಕಣ್ಣೋಟ/ಮುನ್ನೋಟ ಇದ್ದಿದ್ದರೆ ದೆಹಲಿಯ ಗಡಿಗಳಲ್ಲಿ ರೈತರೇ ಕಾಣುತ್ತಿದ್ದರು. ಆದರೆ ಈ ಮಾಧ್ಯಮ ವಕ್ತಾರರರ ದೃಷ್ಟಿಗೆ ಮಾರುಕಟ್ಟೆಯ ಪರದೆ, ಜಾತಿ ಶ್ರೇಷ್ಠತೆಯ ಮಸುಕು ಕವಿದಿರುತ್ತದೆ.
ಬಂಡವಾಳಶಾಹಿ ಅರ್ಥವ್ಯವಸ್ಥೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಸ್ಥಾಪಿತ ವ್ಯವಸ್ಥೆಯೊಳಗಿನ ಇಂತಹ ಒಳಬಿರುಕುಗಳನ್ನೇ ಹೆಚ್ಚಾಗಿ ಆಶ್ರಯಿಸುತ್ತದೆ. ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ವ್ಯವಸ್ಥೆ, ಅದರೊಳಗಿನ ಶ್ರೇಷ್ಠತೆಯ ವ್ಯಸನ ಮತ್ತು ಅದು ಉಂಟುಮಾಡುವ ಬಿರುಕುಗಳು, ಈ ಜಾತಿ ವ್ಯವಸ್ಥೆಯನ್ನು ಪೋಷಿಸುವ ವೈದಿಕಶಾಹಿ ಸಾಂಸ್ಕೃತಿಕ ರಾಜಕಾರಣ ಇವೆಲ್ಲವೂ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಸಾಧನಗಳಾಗಿ ಬಳಕೆಯಾಗುತ್ತವೆ. ಹಾಗಾಗಿಯೇ ಪ್ರಜಾವಾಣಿಯಂತಹ ಪತ್ರಿಕೆಯೂ ಸಹ ತನ್ನ ಅಸೂಕ್ಷ್ಮತೆಯನ್ನು ಆಗಿಂದಾಗ್ಗೆ ಪ್ರದರ್ಶಿಸುತ್ತಲೇ ಇರುತ್ತದೆ. ಬಂಡವಾಳಶಾಹಿಯು ತನ್ನ ಉಳಿವಿಗಾಗಿ ಅವಲಂಬಿಸುವ ಪ್ರತಿಯೊಂದು ಸಾಮಾಜಿಕ ನೆಲೆಗಳನ್ನೂ ತನ್ನ ಬಂಡವಾಳದ ಮೂಲಕವೇ ಬಲಪಡಿಸುತ್ತಿರುತ್ತದೆ. ಇದರಲ್ಲಿ ಜಾತಿ ವ್ಯವಸ್ಥೆ ಮತ್ತು ಅದು ಪ್ರತಿನಿಧಿಸುವ ವೈದಿಕಶಾಹಿಯ ಶೋಷಕ ವ್ಯವಸ್ಥೆಯೂ ಒಂದು.
ತನಗೆ ಅತ್ಯವಶ್ಯವಾದ ಸಂವಹನ ಮಾಧ್ಯಮಗಳನ್ನು ಸಂರಕ್ಷಿಸಲು ಬಂಡವಾಳಶಾಹಿ ಮಾರುಕಟ್ಟೆ ಸಮಾಜದ ಬೌದ್ಧಿಕ ನೆಲೆಗಳನ್ನೂ ತನ್ನ ಬಾಹುಗಳಲ್ಲಿ ಬಂಧಿಸಲಾರಂಭಿಸುತ್ತದೆ. ಸಾಮಾನ್ಯ ಅಧ್ಯಯನ, ಸಂಶೋಧನೆ ಮತ್ತು ಪರಿಶೋಧನೆಯ ನೆಲೆಗಳನ್ನೂ ಸಹ ವಾಣಿಜ್ಯೀಕರಣಗೊಳಿಸುವ ಮೂಲಕ, ಸಂವಹನದ ಸೇತುವೆಗಳಲ್ಲಿ ತನ್ನದೇ ಆದ ನಿಯಂತ್ರಕ ಶಕ್ತಿಗಳನ್ನು ರೂಪಿಸುತ್ತಾ ಹೋಗುತ್ತದೆ. ಮಾಧ್ಯಮಗಳು ಏಕೆ ಹೀಗಾಗಿವೆ ? ಶೈಕ್ಷಣಿಕ ವಲಯ, ಬೌದ್ಧಿಕ ವಲಯ, ಅಕಾಡೆಮಿಕ್ ವಲಯ ಏಕೆ ನಿಷ್ಕ್ರಿಯವಾಗಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿ ಕಂಡುಕೊಳ್ಳಬೇಕಿದೆ. ಸಂಸ್ಕೃತಿ, ಕಲೆ, ಜ್ಞಾನ ಮತ್ತು ಬೌದ್ಧಿಕ ಸಂಪತ್ತನ್ನು ಮಾರುಕಟ್ಟೆಯ ಸರಕುಗಳಂತೆಯೇ ಪರಿಗಣಿಸುವ ಮಾರುಕಟ್ಟೆ ವ್ಯವಸ್ಥೆ ಈ ವಲಯಗಳ ಸಂವಹನ ಸೇತುವೆಗಳನ್ನೂ ಹರಾಜು ಮಾರುಕಟ್ಟೆಯ ಜಗುಲಿಯಂತೆಯೇ ಪರಿವರ್ತಿಸಿಬಿಡುತ್ತದೆ. ಹಾಗಾಗಿಯೇ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಳು ಬಿಕರಿಯಾಗುವಂತೆಯೇ ಸಂವಹನ ವಾಹಿನಿಗಳ ಸಂಪಾದಕ, ನಿರೂಪಕ, ಸುದ್ದಿವಾಹಕ ಹುದ್ದೆಗಳೂ ಬಿಕರಿಯಾಗತೊಡಗುತ್ತವೆ.
ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ಶ್ರೇಷ್ಠತೆಯ ನೆಲೆಗಳು ಮಾರುಕಟ್ಟೆ ಬಂಡವಾಳದೊಡನೆ ಸುಲಭವಾಗಿ ರಾಜಿಯಾಗುವುದರಿಂದಲೇ ಬಹುತೇಕ ಸಂವಹನದ ನೆಲೆಗಳು ತಮ್ಮ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡು ದಿನದಿಂದ ದಿನಕ್ಕೆ ಬೆತ್ತಲಾಗುತ್ತಿವೆ. ಆಳುವ ವರ್ಗಗಳ ಸುಳ್ಳುಗಳನ್ನು ವೈಭವೀಕರಿಸುವಷ್ಟೇ ರೋಚಕವಾಗಿ, ವಿನಾಶಕಾರಿ ಯುದ್ಧವನ್ನೂ ವೈಭವೀಕರಿಸುವ, ಕ್ರೂರ ಅತ್ಯಾಚಾರವನ್ನೂ ರಂಜನೀಯವಾಗಿಸುವ ಒಂದು ವಿಕೃತ ಧೋರಣೆಯನ್ನು ಭಾರತದ ಸುದ್ದಿವಾಹಿನಿಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ಈ ರಾಜೀ ಸೂತ್ರವೇ ಆಗಿರುತ್ತದೆ. ಹಾಗಾಗಿಯೇ ಆಳುವ ವರ್ಗಗಳ, ಪ್ರಭುತ್ವದ ಮತ್ತು ಸ್ಥಾಪಿತ ಹಿತಾಸಕ್ತಿಗಳ ಪರಿಭಾಷೆಯೇ ಮಾಧ್ಯಮದ ಪರಿಭಾಷೆಯೂ ಆಗುತ್ತದೆ. ಜೆಎನ್ಯು ಸಂಘರ್ಷದಲ್ಲಿ, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ, ಕೋವಿದ್ ನಿರ್ವಹಣೆಯಲ್ಲಿ ಇದನ್ನು ನೇರವಾಗಿಯೇ ಕಂಡಿದ್ದೇವೆ. ಹಿಜಾಬ್ ವಿವಾದದಲ್ಲೂ ಕಾಣುತ್ತಿದ್ದೇವೆ.
ಇಲ್ಲಿ ಆಧುನಿಕ ವಿದ್ಯುನ್ಮಾನ ಲೋಕದ ಸಾಮಾಜಿಕ ಮಾಧ್ಯಮಗಳ ಪಾತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಬಂಡವಾಳಶಾಹಿ ಮಾರುಕಟ್ಟೆಯ ಹಂಗಿಲ್ಲದೆ ಸಮಾಜಮುಖಿಯಾಗಿ, ಜನಸ್ಪಂದನೆಯೊಂದಿಗೆ, ಜನಸಮೂಹಗಳಿಗೆ ದನಿಗೆ ದನಿಯಾಗುವ ನೂತನ ಸಂವಹನ ಸೇತುವೆಗಳನ್ನು ನಾವಿಂದು ನಿರ್ಮಿಸಬೇಕಿದೆ. ಇಲ್ಲಿಯೂ ಸಹ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಾಮಾಜಿಕ ಮಾಧ್ಯಮಗಳು ಮತ್ತಷ್ಟು ಒಳಬಿರುಕುಗಳನ್ನು ಸೃಷ್ಟಿಸುತ್ತಲೇ ಹೋಗುವ ಸಾಧ್ಯತೆಗಳಿರುತ್ತವೆ. ಇವೆಲ್ಲವನ್ನೂ ಮೀರಿ ಜನಪರ ವಾಹಿನಿಗಳು ವೈಚಾರಿಕತೆಯ ನೆಲೆಯಲ್ಲಿ, ವೈಜ್ಞಾನಿಕ ಮನೋಭಾವದೊಂದಿಗೆ, ಸಾಂವಿಧಾನಿಕ ಬದ್ಧತೆಯೊಂದಿಗೆ, ಪ್ರಜಾಸತ್ತಾತ್ಮಕ ಪ್ರಜ್ಞಾವಂತಿಕೆಯೊಂದಿಗೆ, ಜನಸಮುದಾಯಗಳ ನೋವಿನ ದನಿಗೆ ದನಿಯಾಗಿ ರೂಪುಗೊಳ್ಳಬೇಕಿದೆ. ಭಾರತದ ಸಂವಿಧಾನದ ಆಶಯದಂತೆ ದೇಶವನ್ನು ಒಂದು ಸರ್ವಜನಾಂಗದ ಶಾಂತಿಯ ತೋಟದಂತೆ ರೂಪಿಸಬೇಕಾದರೆ, ಈ ಸಂವಹನ ಸೇತುವೆಗಳು ಬಲಿಷ್ಠವಾಗುವುದು ಅತ್ಯವಶ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


