Connect with us

ದಿನದ ಸುದ್ದಿ

ರೈತನ ಜೀವನ ಹಸನುಗೊಳಿಸಿದ ನರೇಗಾ 

Published

on

ಹನುಮಂತಪ್ಪ, ಫಲಾನುಭವಿ ರೈತ

ರೈತರ ನೆರವಿಗೆ ನಿಂತ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಜಿಲ್ಲೆಯಲ್ಲಿ ಸಣ್ಣ ರೈತರೂ ತಮ್ಮ ಕನಸಿನ ವಾಣಿಜ್ಯ ಬೆಳೆಯಾದ ಅಡಿಕೆ ತೋಟ ನಿರ್ಮಾಣ ಮಾಡಿಕೊಂಡು ಸಂತಸ ನಗೆ ಬೀರಿದ್ದಾರೆ.

ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತೇವೆ. ಆದರೆ ರೈತ ಇಂದಿಗೂ ಬಡತನದಿಂದ ಮುಕ್ತನಾಗಿಲ್ಲ. ಬೆಳೆಗೆ ಸಮರ್ಪಕ ಬೆಲೆ ಸಿಗದೆ ಹೈರಾಣಾಗಿದ್ದಾನೆ. ಇಂತಹ ಸ್ಥಿತಿಯಲ್ಲಿ ಆಹಾರ ಬೆಳೆ, ಧಾನ್ಯಗಳ ಜೊತೆಗೆ ರೈತರು ವಾಣಿಜ್ಯ ಬೆಳೆ ಬೆಳೆಯುವ ಬಗ್ಗೆ ಚಿಂತಿಸಿದ್ದರೂ ಸ್ವಂತ ಖರ್ಚಿನಿಂದ ಅಡಿಕೆ ತೋಟ ನಿರ್ಮಾಣ ಕಷ್ಟಸಾಧ್ಯ.

ಇಂತಹ ಪರಿಸ್ಥಿತಿಯಲ್ಲಿ ಸಣ್ಣ ರೈತರ ನೆರವಿಗೆ ಬಂದ ಯೋಜನೆಯೇ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ. ಜಿಲ್ಲೆಯಲ್ಲಿ ಅನೇಕ ಸಣ್ಣ ರೈತರು ಈ ಯೋಜನೆಯ ಮೂಲಕ ತಮ್ಮ ಜಮೀನಿನಲ್ಲಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾ.ಪಂ ವ್ಯಾಪ್ತಿಯ ತೆವರತೆಪ್ಪ ಗ್ರಾಮದ ಹನುಮಂತಪ್ಪ ಬಿನ್ ಹನುಮಣ್ಣ ಇವರು ತಮ್ಮ ಸರ್ವೆ ನಂ 13 ರಲ್ಲಿ 1.30 ಗುಂಟೆ ಜಮೀನಿನಲ್ಲಿ ಎಂಜಿ ನರೇಗಾ ಯೋಜನೆಯ ಮುಖಾಂತರ ಅಡಿಕೆ ತೋಟ ನಿರ್ಮಿಸಿಕೊಂಡಿದ್ದು, ಉತ್ತಮ ಆದಾಯ ಪಡೆಯುತ್ತಿದ್ದಾರೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣರು ಮತ್ತು ರೈತರ ಪಾಲಿನ ಆಶಾಕಿರಣವಾಗಿದೆ. ಆರ್ಥಿಕವಾಗಿ ಹಿಂದುಳಿದ ಸಣ್ಣ ರೈತರಿಗೆ ಸ್ವಂತ ಖರ್ಚಿನಲ್ಲಿ ಅಡಿಕೆ ತೋಟ ನಿರ್ಮಾಣ ಕಷ್ಟ. ಇಂತಹ ಸಮಯದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಡಿಕೆ ತೋಟ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಪ್ರಸ್ತುತ ಅಡಿಕೆ ಬೆಳೆಗೆ ಹೆಚ್ಚಿನ ಬೆಲೆ ಇದ್ದು ಇದರಿಂದ ಹೆಚ್ಚಿನ ಆದಾಯ ಗಳಿಸಬಹುದು. ಕಡಿಮೆ ಖರ್ಚಿನಲ್ಲಿ ಅಡಿಕೆ ತೋಟವನ್ನು ನಿರ್ವಹಣೆ ಮಾಡಬಹುದು. ಹಾಗೂ ಹನಿ ನೀರಾವರಿಯನ್ನು ಅಳವಡಿಸಿಕೊಂಡರೆ ಇನ್ನೂ ಕಡಿಮೆ ಖರ್ಚಿನಲ್ಲಿ ಅಡಿಕೆ ತೋಟವನ್ನು ನಿರ್ವಹಣೆ ಮಾಡಬಹುದಾಗಿದೆ.

ಅಡಿಕೆ ಬೆಳೆಯುವದರ ಜೊತೆಗೆ ಅಡಿಕೆ ತೋಟದಲ್ಲಿ ಅಂತರ ಬೆಳೆಯಾಗಿ ಬಾಳೆ, ಕಾಳುಮೆಣಸು ಹಾಗೂ ಇತರೆ ತರಕಾರಿ ಬೆಳೆಗಳನ್ನು ಬೆಳೆಯಬಹುದಾಗಿದ್ದು ಇದರಿಂದ ಇನ್ನೂ ಹೆಚ್ಚಿನ ಆದಾಯವನ್ನು ಗಳಿಸಬಹುದು.


  • ಹನುಮಂತಪ್ಪನವರು ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಅಡಿಕೆ ತೋಟ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವಂತೆ ಗ್ರಾ.ಪಂ ಗೆ ಅರ್ಜಿಯನ್ನು ಸಲ್ಲಿಸಿದ್ದು, ಗ್ರಾಮ ಸಭೆಯಲ್ಲಿ ಇವರ ಅರ್ಜಿಯನ್ನು ಅನುಮೋದಿಸಿ, ತೋಟಗಾರಿಕೆ ಇಲಾಖಾಧಿಕಾರಿಗಳ ತಾಂತ್ರಿಕ ಸಲಹೆಯೊಂದಿಗೆ ಯೋಜನೆಯ ಮಾರ್ಗಸೂಚಿಗಳನ್ವಯ2015-16 ನೇ ಸಾಲಿನಲ್ಲಿ ಅಂದಾಜು ವೆಚ್ಚ ರೂ.50 ಸಾವಿರದಲ್ಲಿ ರೂ.33 ಸಾವಿರ ಕೂಲಿ ಮೊತ್ತ ಮತ್ತು ರೂ.14 ಸಾವಿರ ಸಾಮಗ್ರಿ ಮೊತ್ತದಲ್ಲಿ ಅಡಿಕೆ ತೋಟ ಕಾಮಗಾರಿ ಅನುಷ್ಟಾನ ಮಾಡಲಾಯಿತು.

    | ಎಂ.ಎಲ್.ವೈಶಾಲಿ, ಜಿ.ಪಂ. ಸಿಇಓ


ರೈತ ಹನುಮಂತಪ್ಪನವರ ನುಡಿ

ಅಡಿಕೆ ಬೆಳೆ ಬರಲು ಕನಿಷ್ಟ 5 ರಿಂದ 6 ವರ್ಷ ಬೇಕಾಗಿದ್ದು, 6 ವರ್ಷಗಳವರೆಗೆ ಅಡಿಕೆ ತೋಟದಲ್ಲಿ ಅಂತ ಬೆಳೆಯಾಗಿ 2 ವರ್ಷ ಬಾಳೆ, 1 ವರ್ಷ ಶುಂಠಿ ಹಾಗೂ ತರಕಾರಿಗಳನ್ನು ಬೆಳೆದು ಆದಾಯ ಪಡೆದಿದ್ದೇನೆ.

ಅಡಿಕೆ ಬೆಳೆ ಬರಲು ಪ್ರಾರಂಭವಾದ 6 ನೇ ವರ್ಷದಲ್ಲಿ ರೂ.1 ಲಕ್ಷ ಆದಾಯ ಪಡೆದಿದ್ದೇನೆ. ಪ್ರಸ್ತುತ 7 ನೇ ವರ್ಷದಲ್ಲಿ 2 ರಿಂದ 3 ಲಕ್ಷಗಳವರೆಗೆ ಆದಾಯ ಪಡೆಯುವ ನಿರೀಕ್ಷೆ ಹೊಂದಿದ್ದೇನೆ. ಅಡಿಕೆ ಬೆಳೆಯ ಆದಾಯವು ಜೀವನ ನಿರ್ವಹಣೆ ಹಾಗೂ ಮಕ್ಕಳ ವಿದ್ಯಾಭ್ಯಾಸ ಮತ್ತು ಇತರೆ ಖರ್ಚುಗಳ ನಿರ್ವಹಣೆಗೆ ಆಸರೆಯಾಗಿದೆ.

ಅಡಿಕೆ ತೋಟ ನಿರ್ಮಾಣಕ್ಕೂ ಮುನ್ನ ಭತ್ತವನ್ನು ಬೆಳೆಯಲಾಗುತ್ತಿದ್ದು, ಅದರಲ್ಲ ಬಂದ ಆದಾಯದಲ್ಲಿ ಶೇ.70 ರಷ್ಟು ನಿರ್ವಹಣೆಗಾಗಿ ವ್ಯಯ ಮಾಡಬೇಕಿತ್ತು. ಆದರೆ ಅಡಿಕೆ ತೋಟ ನಿರ್ಮಾಣದಿಂದ ನಿರ್ವಹಣೆ ವೆಚ್ಚವೂ ಕಡಿಮೆಯಾಗಿದೆ.


  • ನರೇಗಾ ಯೋಜನೆ ಮೂಲಕ ನನಗೆ ಅಡಿಕೆ ತೋಟ ನಿರ್ಮಾಣ ಮಾಡಿಕೊಟಟಿರುವುದರಿಂದ ಉತ್ತಮ ಆದಾಯ ಬರುತ್ತಿದ್ದು ನಮ್ಮ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದೆ. ಅಡಿಕೆ ತೋಟ ನಿರ್ಮಿಸಲು ಸಹಕರಿಸಿದ ಯೋಜನೆ ಮತ್ತು ಎಲ್ಲ ಅಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇನೆ.

| ಹನುಮಂತಪ್ಪ, ಫಲಾನುಭವಿ ರೈತ


(ವರದಿ : ಭಾಗ್ಯ ಎಂ.ಟಿ, ವಾರ್ತಾ ಸಹಾಯಕರು
ವಾರ್ತಾ ಇಲಾಖೆ, ಶಿವಮೊಗ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending