Connect with us

ದಿನದ ಸುದ್ದಿ

ಮಾರ್ಚ್ 13 ರಿಂದ 16 ರವರಗೆ ದುರ್ಗಾಂಬಿಕ ದೇವಿ ಜಾತ್ರೆ ; ದೇವರ ಕೃಪೆಗೆ ಪಾತ್ರರಾಗಲು ಪ್ರಾಣಿ ಹಿಂಸೆ ಮಾಡಬಾರದು : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ದೇವರ ಕೃಪೆಗೆ ಪಾತ್ರರಾಗುವ ನಾವು ಯಾವುದೇ ರೀತಿಯ ಪ್ರಾಣಿ ಹಿಂಸೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಶುಕ್ರವಾರ ನಗರ ದೇವತೆ ಶ್ರೀ ದುರ್ಗಾಂಬಿಕ ಜಾತ್ರಾ ಪ್ರಯುಕ್ತ ನಡೆದ ಸಭೆಯಲ್ಲಿ ಭಾಗವಹಿಸಿದ್ದ ದೇವಸ್ಥಾನದ ಧರ್ಮದರ್ಶಿಗಳು,ಟ್ರಸ್ಟ್ ಸದಸ್ಯರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಮಾರ್ಚ್ 13 ರಿಂದ 16 ರ ವರಗೆ ನಡೆಯುವ ಜಾತ್ರೆಯಲ್ಲಿ ಯಾವುದೇ ಪ್ರಾಣಿ ಬಲಿ ಆಗಬಾರದು ಪ್ರಾಣಿ ಹಿಂಸೆ ಮಹಾಪಾಪ ಎಂದು ನಂಬಿಕೊಂಡು ಬಂದಿರುವವರು ನಾವು, ದೇವರು ಭಕ್ತಿಯನ್ನು ಬಯಸುತ್ತಾನೆಯೇ ಹೊರತು ಹಿಂಸೆಯನ್ನಲ್ಲ, ನಮ್ಮ ಕಾನೂನು ಕೂಡ ಅದನ್ನೇ ಹೇಳುತ್ತದೆ, ಹಾಗಾಗಿ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಯಾವುದೇ ರೀತಿಯ ಪ್ರಾಣಿಹಿಂಸೆ ಮಾಡದೆ ಕೇವಲ ಸಿರೆಂಜ್ ಮೂಲಕ ಕೋಣದ ರಕ್ತವನ್ನು ತೆಗೆದು ತಾಯಿಗೆ ಅರ್ಪಿಸಿ ಜಾತ್ರೆ ಆಚರಿಸೋಣವೆಂದರು.

ಇದರೊಂದಿಗೆ ನಿಷೇಧಕ್ಕೆ ಒಳಗಾಗಿರುವ ಬೆತ್ತಲೆ ದೇಹದ ಮೇಲಿನ ಬೇವಿನುಡಿಗೆ, ಮುತ್ತು ಕಟ್ಟುವುದು ಮುಂತಾದ ಕಾನೂನು ಪ್ರಕಾರ ನಿಷೇಧಕ್ಕೊಳಗಾಗಿರುವ ಆಚರಣೆಗಳನ್ನು ಮಾಡದೆ ಕೈಯಲ್ಲಿ ಬೇವಿನ ಎಸಳನ್ನು ಹಿಡಿದು ಹರಕೆ ತೀರಿಸೋಣ. ಒಂದು ವೇಳೆ ದೂರುಗಳು ಬಂದರೆ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಹಾಗೂ ದೇವಸ್ಥಾನದ ಕಮಿಟಿಯವರ ವಿರುದ್ದ ಕ್ರಮ ಕೈಗೊಳ್ಳಲಾಗುವುದೆಂದರು.

ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಜಾತ್ರಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲಾ ಇಲಾಖೆಗಳು ಈ ಹಿಂದಿನ ವರ್ಷಗಳಲ್ಲಿ ನಿರ್ವಹಿಸಿರುವಂತೆ ತಮ್ಮ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕು, ದೇವಸ್ಥಾನದ ಆವರಣದಲ್ಲಿ ನಡೆಯುವ ಉರುಳು ಸೇವೆ, ಧೀಡ್ ನಮಸ್ಕಾರಗಳಿಗೆ ಅನುವಾಗುವಂತೆ ಪಾಲಿಕೆ ವತಿಯಿಂದ ಮರಳಿನ ವ್ಯವಸ್ಥೆ ಮಾಡಬೇಕು, ಒಂದು ವಾರ ಪೂರ್ತಿ ಸರಾಗ ನೀರು ಸರಬರಾಜು ಆಗಬೇಕು, ನಗರದ 45 ವಾರ್ಡ್‍ಗಳಲ್ಲಿಯೂ ಸ್ವಚ್ಚತೆ ಇರುವಂತೆ ನೋಡಿಕೊಳ್ಳಬೇಕು, ಜಾತ್ರೆಯನ್ನು ಒಂದು ರೀತಿ ದಾವಣಗೆರೆ ಹಬ್ಬ ಎಂಬಂತೆ ಆಚರಿಸಲು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿಕೊಡಬೇಕೆಂದರು.

ಪ್ಲಾಸ್ಟಿಕ್ ಬ್ಯಾನರ್ ಮತ್ತು ಪೋಸ್ಟರ್‍ಗಳನ್ನು ಅಳವಡಿಸುವುದನ್ನು ನಿಷೇಧ ಮಾಡಲಾಗಿದ್ದು, ಪ್ಲಾಸ್ಟಿಕ್ ಬ್ಯಾನರ್ ಅಳವಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಮಾತನಾಡಿ ಜಾತ್ರೆಯು ಯಶಸ್ವಿಯಾಗಲು ಎಲ್ಲರ ಸಹಕಾರ ಅಗತ್ಯ ಹಾಗಾಗಿ ಮುಂಜಾಗ್ರತೆ ಕ್ರಮ ವಹಿಸಿಕೊಂಡು ಅಲ್ಲಲ್ಲಿ ಕಸದ ಬುಟ್ಟಿಗಳು ಇಟ್ಟು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಭಕ್ತಾದಿಗಳಿಗೆ ಮಾಹಿತಿ ಒದಗಿಸಲು ನಾಮಫಲಕಗಳನ್ನು ಅಳವಡಿಸಬೇಕು. ಕಾನೂನಿನಲ್ಲಿ ಪ್ರಾಣಿಬಲಿಯನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ ಆಚರಣೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲಾದರೂ ಪ್ರಾಣಿ ಬಲಿ ನೀಡುವ ವರದಿಗಳು ಬಂದಲ್ಲಿ ಸಾಕ್ಷಿಗಳು ದೊರೆತರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.

ನಗರದಾದ್ಯಂತ ಸಿಸಿಟಿವಿ ಅಳವಡಿಸಲು ವ್ಯವಸ್ಥೆ ಮಾಡಲಾಗಿದೆ. ಸಂಚಾರಿ ದಟ್ಟಣೆ ನಿಯಂತ್ರಣ ಕುರಿತು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು ಆಚರಣೆ ಮಾಡಬೇಕು. ದೇವದಾಸಿ ಪದ್ಧತಿ, ಬೇವಿನ ಉಡುಗೆಯಂತಹ ಮೂಢನಂಬಿಕೆಗಳನ್ನು ಆಚರಿಸುವವರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಮಾತನಾಡಿ, ಪ್ರತಿಬಾರಿಯಂತೆ ಈ ಬಾರಿಯೂ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹಾಗೂ ವಿವಿಧ ಇಲಾಖೆಗಳು ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು.

ಮಾಜಿ ಧೂಡಾ ಅಧ್ಯಕ್ಷ ಯಶವಂತರಾವ್ ಜಾದವ್ ಮಾತನಾಡಿ ಜಿಲ್ಲಾಡಳಿತ ಹಾಗೂ ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ಕುಸ್ತಿ ಪಂದ್ಯಾವಳಿ ಹಾಗೂ ಕುರಿ ಕಾಳಗಗಳನ್ನು ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತ ಹಾಗೂ ಪೆÇಲೀಸ್ ಇಲಾಖೆಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ಹಾಗೂ ಉಪ ಮೇಯರ್ ಗಾಯಿತ್ರಿಬಾಯಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಬಿ.ಎಸ್ ಗಿರೀಶ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ.ಮುದ್ದಜ್ಜಿ, ಡಿವೈಎಸ್ಪಿ ನರಸಿಂಹ ತಾಮ್ರಧ್ವಜ, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಸುಂಕದ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending