ದಿನದ ಸುದ್ದಿ
ಸದ್ದಿಲ್ಲದೆ ಬದಲಾಗುತ್ತಿದೆ ಮಕ್ಕಳ ಜೀವನ ; ನೀವೇ ಹೇಳಿ, ಈ ಬದುಕು ಸರೀನಾ?
- ಕುಮಾರಸ್ವಾಮಿ ವಿ ಕೆ,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಶಾಲೆ,ಬೆಂಗಳೂರು ಉತ್ತರ
ಕಳೆದ ತಿಂಗಳು ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗಿದ್ದೆ. ಹೀಗೆ ರಸ್ತೆಯಲ್ಲಿ ಸುತ್ತಾಡುವಾಗ ಒಂದಷ್ಟು ಹುಡುಗಿಯರ ಹಿಂಡು ಕಾಣಿಸಿತು. ಸಣ್ಣದೊಂದು ಟೀ ಅಂಗಡಿಯ ಮುಂದೆ ಒಬ್ಬಳಂತು ರಾಜಾರೋಷವಾಗಿ ನಿಂತು ಸಿಗರೇಟನ್ನು ಬಾಯಿಗೆ ಸಿಕ್ಕಿಸಿಕೊಂಡು ಉಗಿಬಂಡಿಯಂತೆ ನಿರಂತರವಾಗಿ ಹೊಗೆ ಬಿಡುತ್ತಿದ್ದಳು, ಮತ್ತೊಂದಷ್ಟು ಲಲನೆಯರು ಸಿಗರೇಟ್ ಸೇದಲು ಕಲಿಯಲು ಪರದಾಡುತ್ತಿದ್ದರು, ಇನ್ನೊಂದಷ್ಟು ಗುಂಪು ತಾವು ಸಿಗರೇಟ್ ಸೇದುವುದನ್ನು ಯಾರಾದರೂ ನೋಡಿಯಾರು ಎಂಬ ಆತಂಕದಲ್ಲೇ ಬಾಯಲ್ಲಿ ಹೊಗೆ ಬಿಡುತ್ತಿದ್ದರು. ಅವರ ಕೈಲಿದ್ದ ಪುಸ್ತಕಗಳು ಹೇಳುತ್ತಿದ್ದವು ಬಹುತೇಕ ಅವರೆಲ್ಲರೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರು!! ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣು ಎಂಬಂತೆ ಮೊಳಕೆಗಳು ಚೆನ್ನಾಗೇ ಕಂಡವು!!
ಘಟನೆ -2 : ಅದೊಂದು ಸರಕಾರಿ ಕಾಲೇಜು, ಒಂದಷ್ಟು ಗಂಡು ಮಕ್ಕಳು ಕಾಲೇಜಿನ ಕಾಂಪೌಂಡ್ ಗೋಡೆಯ ಮೇಲೆ ಕುಳಿತು ಬುಸ್ಸೆಂದು ಬಾಯಿ ತುಂಬಾ ಹೊಗೆ ತುಂಬಿಕೊಂಡು ಸಿನಿಮಾ ಸ್ಟೈಲ್ ನಲ್ಲಿ ಬಿಡುತ್ತಿದ್ದರು. ಅಲ್ಲೇ ಓಡಾಡುತ್ತಿದ್ದ ಶಿಕ್ಷಕ ಮಹಾಷಯರು ನೋಡಿಯೂ ನೋಡದಂತೆ ತಲೆ ತಗ್ಗಿಸಿ ಮುಂದೆ ಸಾಗಿದರು. ಎರಡು ವರ್ಷಗಳ ಶಿಕ್ಷಣದ ಅಂತರ ಮಾಡಿರುವ ಅನಾಹುತಗಳ ಪೈಕಿ ಇವು ಒಂದೆರಡು ನಿದರ್ಶನಗಳು ಅಷ್ಟೇ.
ಹೌದು ಮಕ್ಕಳ ಲೋಕದಲ್ಲಿ ಇಂತಹ ಹತ್ತು ಹಲವು ತಲ್ಲಣಗಳು ಪ್ರಾರಂಭವಾಗಿವೆ. ಕಳೆದ ಎರಡು ವರ್ಷಗಳ ಕಾಲ ಕೊರೋನಾ ಕಾರಣದಿಂದ ಶಾಲೆಗಳು ಮುಚ್ಚಿದ್ದ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಸಂಪೂರ್ಣ ಬದಲಿಸಿದೆ. ಅಂತಹ ಮಕ್ಕಳನ್ನು ಈಗ ಸಹಜ ಸ್ಥಿತಿಗೆ ತರುವುದು ಅತ್ಯಂತ ಪ್ರಾಯಾಸ ಹಾಗೂ ದೊಡ್ಡ ಮಟ್ಟದ ಸವಾಲಾಗಿದೆ.
ಹೆಚ್ಚಾಗಿದೆ ದುರ್ನಡತೆ
ಬಹುತೇಕ ಮಕ್ಕಳಲ್ಲಿ ಅವರ ವಯೋಮಾನಕ್ಕೆ ಮೀರಿದ ದುರ್ನಡತೆಗಳು ತಲೆದೋರುತ್ತಿವೆ. ಧೂಮಪಾನ, ಮದ್ಯಪಾನ, ಅಶ್ಲೀಲ ಚಿತ್ರಗಳ ವೀಕ್ಷಣೆ, ಸಮಾಜ ವಿರೋಧಿ ಕೃತ್ಯಗಳತ್ತ ಆಕರ್ಷಣೆ, ತಮಗಿಂತ ಕಿರಿಯ ವಯಸ್ಸಿನವರನ್ನು ಬೆದರಿಸುವುದು ಹೀಗೆ ಹಲವು ಭಾವನಾತ್ಮಕ ಸಮಸ್ಯೆಗಳು ಮಕ್ಕಳ ಪಾಲಿಗೆ ಮುಳ್ಳಾಗುತ್ತಿವೆ. ಈ ಹಂತದಲ್ಲಿ ಮಕ್ಕಳು ಸ್ವಲ್ಪ ಎಡವಿದರೂ ಅವರ ಭವಿಷ್ಯ ಅಲ್ಲೋಲ – ಕಲ್ಲೋಲವಾಗುವುದು ನಿಶ್ಚಿತ. ಎಷ್ಟೋ ಶಾಲೆಗಳಲ್ಲಿ ಮಕ್ಕಳು ಚಾಕು, ಚೂರಿಗಳಂತ ಶಸ್ತ್ರಗಳನ್ನೂ ತರುತ್ತಿದ್ದಾರೆಂಬ ಮಾಹಿತಿ ಆತಂಕ ಮೂಡಿಸುತ್ತಿದೆ. ಇಂತಹ ಮಾನಸಿಕ ಅಸಮತೋಲನಗಳನ್ನು ಅತೀ ತುರ್ತಾಗಿ ಸರಿಪಡಿಸುವ ಕೆಲಸ ಆಗಬೇಕಿದೆ.
ಶಿಕ್ಷಣದ ಮೇಲೆ ಬಿದ್ದಿದೆ ಋಣಾತ್ಮಕ ಪರಿಣಾಮ
ಮಕ್ಕಳ ವರ್ತನೆಯಲ್ಲಿ ಆಗುತ್ತಿರುವ ಕೆಲವು ಬದಲಾವಣೆಗಳಿಂದ ಇದು ಶಿಕ್ಷಣದ ಮೇಲೂ ಸಹ ಋಣಾತ್ಮಕ ಪ್ರಭಾವ ಬೀರುತ್ತಿದೆ. ಸಹಜವಾಗಿಯೇ ಮಕ್ಕಳ ಸ್ಮರಣ ಶಕ್ತಿ ಕಡಿಮೆಯಾಗುತ್ತಿದ್ದು, ಶಿಕ್ಷಣದ ಮೇಲಿನ ಒಲವು ಕಡಿಮೆಯಾಗುತ್ತಿದೆ. ಮಕ್ಕಳು ತಮ್ಮ ಭವಿಷ್ಯದ ಗುರಿಗಳನ್ನು ಹೊಂದಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಅವರ ಆಸಕ್ತಿ, ಕುತೂಹಲ ಎಲ್ಲವೂ ಕ್ರಮೇಣ ಕ್ಷೀಣಿಸುತ್ತಿದೆ. ಇಂತಹ ಪರಿಸ್ಥಿತಿಯಿಂದ ಮಕ್ಕಳನ್ನು ಸಹಜ ಸ್ಥಿತಿಗೆ ತರುವುದು ಸವಾಲೇ ಸರಿ. ಎಲ್ಲಕ್ಕಿಂತ ಹೆಚ್ಚಾಗಿ ಮಕ್ಕಳು ಶಿಕ್ಷಣದ ಕನಿಷ್ಠ ಮೂಲಭೂತ ಪರಿಕಲ್ಪನೆಗಳಿಂದಲೂ ದೂರ ಉಳಿಯುತ್ತಿರುವುದು ಬಹು ದೊಡ್ಡ ತಲೆನೋವಾಗಿದೆ.
ವಿಧೇಯತೆಯ ಮಾತೇ ಇಲ್ಲ
ಸರ್ಕಾರ ಈಗಾಗಲೇ ಶಿಕ್ಷೆ ಇಲ್ಲದ ಶಿಕ್ಷಣ ನೀಡಬೇಕೆಂಬ ಕಾನೂನು ಮಾಡಿರುವುದರಿಂದ ಮಕ್ಕಳಲ್ಲಿ ವಿಧೇಯತೆ ತೀರಾ ಕಡಿಮೆಯಾಗಿದೆ. ಶಿಕ್ಷಕರಿಗೆ ಬೆತ್ತ ಹಿಡಿದು ಹೆದರಿಸುವ ಸಾಮಾನ್ಯ ಅಧಿಕಾರವನ್ನೂ ಮೊಟಕುಗೊಳಿಸಿರುವುದು ಮಕ್ಕಳ ಅವಿಧೇಯ ನಡುವಳಿಕೆಗಳ ಮತ್ತಷ್ಟು ಕುಮ್ಮಕ್ಕು ನೀಡಿದೆ. ಈ ಪರಿಣಾಮವಾಗಿ ಅನೇಕರು ಬಾಲಾಪರಾಧಿಗಳಾಗುತ್ತಿದ್ದಾರೆ. ವಿಚಿತ್ರವೆಂದರೆ ಶಿಕ್ಷಕರೇ ಮಕ್ಕಳ ಅವಿಧೇಯ ನಡವಳಿಕೆಗಳಿಂದ ಬೆಚ್ಚಿ ಬೀಳುವಂತಾಗಿದೆ. ಏರು ಧ್ವನಿಯಲ್ಲಿ ಪ್ರತ್ಯುತ್ತರ, ಶಿಕ್ಷಕರ ಮಾತಿಗೆ ಅಗೌರವ ತೋರುವುದು, ತೋರ್ಪಡಿಕೆಯ ಗೌರವಗಳು ಸಹಜವಾಗಿ ಮಕ್ಕಳನ್ನು ಕಾಡುತ್ತಿವೆ. ಹಿಂದಿನ ಶಿಕ್ಷಣದಲ್ಲಿದ್ದ ಭಯ ಮತ್ತು ಗೌರವಗಳನ್ನು ಒಂದರ್ಥದಲ್ಲಿ ಇಂದಿನ ಕಾನೂನುಗಳೇ ಮುರಿಯುವಂತಾಗಿದೆ!
ಮೊಬೈಲ್ ಎಂಬ ಪೆಡಂಭೂತ
ಮಕ್ಕಳಲ್ಲಿ ಕಂಡುಬರುತ್ತಿರುವ ಬಹುತೇಕ ಅಸಹಜ ನಡವಳಿಕೆಗಳಿಕೆ ಮೊಬೈಲ್ ಎಂಬ ಮಾಯಾ ಪೆಟ್ಟಿಗೆಯ ಕಾರಣ ಹೆಚ್ಚಾಗಿದೆ. ಕ್ಷಣ ಮಾತ್ರವೂ ಮೊಬೈಲನ್ನು ಬಿಟ್ಟಿರದಂತಹ ಸ್ಥಿತಿಯನ್ನು ಅನೇಕ ಮಕ್ಕಳು ತಲುಪಿದ್ದಾರೆ. ಮಕ್ಕಳ ಕೈಲಿ ಮೊಬೈಲ್ ಇದೆ ಎಂದರೆ ಅಲ್ಲಿ ಪೋಷಕರ ಕಣ್ಣಿದ್ದರೆ ಮಾತ್ರ ಕೆಲವು ಋಣಾತ್ಮಕ ಬೆಳವಣಿಗೆಗಳನ್ನು ತಡೆಯಲು ಸಾಧ್ಯ.
ನೂರು ಜನ ವಿದ್ಯಾರ್ಥಿಗಳನ್ನು ಸರಿದಾರಿಗೆ ತರಲು ಒಬ್ಬ ಶಿಕ್ಷಕ ಪ್ರಯತ್ನಿಸುತ್ತಿರುವ ವೇಳೆ, ಅದೇ ನೂರು ಜನರನ್ನು ಕೇವಲ ಒಂದು ಮೊಬೈಲ್ ಫೋನ್ ದಿಕ್ಕು ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿದೆ! ಅಷ್ಟೇ ಅಲ್ಲದೆ ಎಲ್ಲಕ್ಕೂ ಮೊಬೈಲ್ ಮೇಲೆಯೇ ಅವಲಂಬಿಸುತ್ತಿರುವುದು ಮಕ್ಕಳ ಸಹಜ ಯೋಚನಾ ಶಕ್ತಿಯನ್ನು ಕ್ಷೀಣಿಸುತ್ತಿದೆ.
ಈ ಅಭ್ಯಾಸದಿಂದ ಮಕ್ಕಳನ್ನು ಬಿಡಿಸಲು ಪೋಷಕರು ಅನ್ಯ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಅದೇ ಮೊಬೈಲನ್ನು ಬಳಸಿ ಮಗುವನ್ನು ಕ್ರಿಯಾತ್ಮಕವಾಗಿಸುವ ಹಾದಿಯಲ್ಲಿ ತೆರಳಬಹುದಾಗಿದೆ. ಒಂದೆರಡು ಅಂಕಗಳು ಕಡಿಮೆಯಾದರೂ ಪರವಾಗಿಲ್ಲ, ಜೀವನದ ತತ್ವಗಳು ಕ್ಷೀಣಿಸಬಾರದು. ಇರುಳು ಕಂಡ ಬಾವಿಗೆ ಹಗಲಿನಲ್ಲಿ ಮಕ್ಕಳನ್ನು ತಳ್ಳಬಾರದು. ನೆನಪಿರಲಿ ಮೊಬೈಲ್ ಎಂಬ ಮಾಯಾ ಪೆಟ್ಟಿಗೆ ಕೇವಲ ಮಕ್ಕಳ ಜೀವನಕ್ಕಷ್ಟೇ ಅಲ್ಲ, ಜೀವಕ್ಕೂ ಮಾರಕವಾಗಬಹುದು.
ಬೇಕಿದೆ ನೈತಿಕ ಶಿಕ್ಷಣ
ಶಾಲಾ ಕಾಲೇಜುಗಳಲ್ಲಿ ಇಂದು ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯತೆ ಅಗತ್ಯವಾಗಿದೆ. ಪ್ರಸ್ತುತ ಸಮಾಜವು ದಿಕ್ಕು ತಪ್ಪಲು ಇಂದು ಹೆಚ್ಚಾಗಿ ಯುವ ಜನತೆಯೇ ಕಾರಣವಾಗುತ್ತಿರುವುದರಿಂದ ಮಕ್ಕಳಿಗೆ ಬಾಲ್ಯದಲ್ಲೇ ತಿಳುವಳಿಕೆ ನೀಡಿದಾಗ ಇಂತಹ ಆತಂಕಗಳನ್ನು ಕ್ರಮೇಣ ಕಡಿಮೆಗೊಳಿಸಲು ಸಾಧ್ಯ. ಕೆಲವು ಮಕ್ಕಳಿಗಂತೂ ತಾವೇನು ಮಾಡುತ್ತಿದ್ದೇವೆ, ತಮ್ಮ ನಡೆ ಸರಿಯೋ ತಪ್ಪೋ ಎಂಬ ಅರಿವೂ ಸಹ ಆಗುತ್ತಿಲ್ಲ.
ಅಂತಹ ಮಕ್ಕಳನ್ನು ಶೀಘ್ರವಾಗಿ ಗುರುತಿಸಿ ಅವರನ್ನು ವೈಯಕ್ತಿಕವಾಗಿ ತಿದ್ದುವ ಕೆಲಸ ಆಗಬೇಕಿದೆ. ಇಲ್ಲವಾದಲ್ಲಿ ಮುಂದಿನ ಕ್ರೂರ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾತ್ರಧಾರಿಗಳಾಗಬೇಕಿದೆ! ನೈತಿಕ ಶಿಕ್ಷಣವು ಸಾಂಪ್ರದಾಯಿಕ ಶಿಕ್ಷಣದ ಒಂದು ಪ್ರಮುಖ ಭಾಗವಾಗಬೇಕಿದೆ. ಮಗುವನ್ನು ಕೇವಲ ಅಂಕ ಗಳಿಕೆಯ ಯಂತ್ರವನ್ನಾಗಿಸದೆ, ಅದನ್ನು ಸರಿಯಾದ ಕ್ರಮದಲ್ಲಿ ಸಮಾಜಕ್ಕೆ ಪರಿಚಯಿಸುವ ತಂತ್ರಗಳನ್ನು ಹೆಣೆಯಬೇಕಿದೆ.
ಪೋಷಕರ ನಿಗಾ ತುಂಬಾ ಅಗತ್ಯ
ಶಾಲಾ ಕಾಲೇಜುಗಳಿಗೆ ಹೋಗುತ್ತಿರುವ ತಮ್ಮ ಮಕ್ಕಳ ನಡವಳಿಕೆಗಳನ್ನು ಗಮನಿಸುವುದು ಎಲ್ಲಾ ಪೋಷಕರ ಆದ್ಯ ಕರ್ತವ್ಯವಾಗಿದೆ. ಆದರೆ ಆಧುನಿಕ ಜೀವನ ಶೈಲಿಯ ನಡುವೆ ಪೋಷಕರು ಕೇವಲ ದುಡಿಯುವ ಯಂತ್ರದಂತಾಗುತ್ತಿದ್ದಾರೆ. ತಮ್ಮ ಮಕ್ಕಳಲ್ಲಾಗುತ್ತಿರುವ ಕನಿಷ್ಠ ಋಣಾತ್ಮಕ ನಡವಳಿಕೆಗಳನ್ನು ಗುರುತಿಸುವಲ್ಲಿ ಹೆಚ್ಚು ಪೋಷಕರು ವಿಫಲವಾಗುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕ, ಪಠ್ಯ ವಸ್ತು ಹಾಗೂ ಪೋಷಕರ ನಡುವಿನ ಸಂಬಂಧಗಳು ಸರಿಯಾದ ಪ್ರಮಾಣದಲ್ಲಿ ಮಿಶ್ರಣವಾಗದ ಹೊರತು ನಿರೀಕ್ಷಿತ ಫಲಗಳನ್ನು ಪಡೆಯಲು ಸಾಧ್ಯವಿಲ್ಲ.
ಹೀಗಾಗಿ ಮನೆಯೇ ಮೊದಲ ಪಾಠಶಾಲೆ ಎಂಬಂತೆ ತಾಯಂದಿರು ಈ ಬಗ್ಗೆ ಹೆಚ್ಚಿನ ಆಸ್ತೆ ವಹಿಸಬೇಕಿದೆ. ಸುಮಾರು ಮಂದಿ ಪೋಷಕರು ಎಲ್ಲದಕ್ಕೂ ಶಾಲೆಯನ್ನೇ ಹೊಣೆ ಮಾಡುವ ಚಾಳಿ ಮುಂದುವರಿಸುವುದರಿಂದ ತಮ್ಮ ಮಕ್ಕಳ ತಪ್ಪುಗಳನ್ನು ಅರಿಯುವಲ್ಲಿ ವಿಫಲರಾಗುತ್ತಿದ್ದಾರೆ.
ಎಲ್ಲ ಶಿಕ್ಷಕರ ಸಂಯೋಜನೆ
ಶಾಲೆಗಳಲ್ಲಿ ಮಕ್ಕಳ ಮನೋವಿಕಾಸದ ನಿಮಿತ್ತ ಆಗುತ್ತಿರುವ ಬದಲಾವಣೆಗಳನ್ನು ಸರಿಪಡಿಸುವಲ್ಲಿ ಎಲ್ಲಾ ಶಿಕ್ಷಕರ ಸಂಯೋಜನೆ ಅತ್ಯಗತ್ಯ. ಮಕ್ಕಳ ನಡವಳಿಕೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಅದಕ್ಕೆ ಸೂಕ್ತ ಪರಿಹಾರ ಒದಗಿಸುವಲ್ಲಿ ಶಿಕ್ಷಕರ ಪಾತ್ರ ಹೆಚ್ಚಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಹಡಗನ್ನು ಮುನ್ನಡೆಸುವ ನಾವಿಕನಂತಿರುವ ಶಿಕ್ಷಕರು ಬಾಲ್ಯದಲ್ಲೇ ಬೇಡದ ಚಟುವಟಿಕೆಗಳನ್ನು ಚಿವುಟಿದಾಗ ಮಾತ್ರ ಸದೃಢ ಸಮಾಜವನ್ನು ನಿರ್ಮಿಸಲು ಸಾಧ್ಯ.
ಆತ್ಮಹತ್ಯೆಯ ಬೆದರಿಕೆಗಳು
ತಮ್ಮ ಪೋಷಕರನ್ನು ಬೆದರಿಸಲೆಂದು ಅಥವಾ ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳುವಲ್ಲಿ ಅಸಮತೋಲನ ಏರ್ಪಟ್ಟಾಗ ಸುಮಾರು ಮಕ್ಕಳು ತಮ್ಮ ಪೋಷಕರಿಗೆ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಭಯ ಹುಟ್ಟಿಸುವ ನಿದರ್ಶನಗಳೂ ಇವೆ. ಮಕ್ಕಳನ್ನು ಮಕ್ಕಳಂತೆಯೇ ನೋಡುವ ಮನೋಭಾವವನ್ನು ತೊರೆದರ ಪರಿಣಾಮ ಇದಾಗಿದೆ. ಯಾರಿಗೆ ಕಷ್ಟಗಳ ಅರಿವು ಆಗುವುದಿಲ್ಲವೋ, ಓದುವ ವೇಳೆ ಎಲ್ಲ ಸೌಕರ್ಯಗಳು ಕ್ಷಣಮಾತ್ರದಲ್ಲಿ ಸಿಗುತ್ತಿವೆಯೋ ಅಂತಹ ಮಕ್ಕಳ ಭಾವನಾತ್ಮಕ ಆಲೋಚನೆಗಳು ಮಿತಿ ಮೀರುತ್ತಿವೆ. ಆದರೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಹೆತ್ತವರು ಮಾತ್ರ ನಿರಾಳವಾಗಿ ಸಾಗುತ್ತಿದ್ದಾರೆ.
(ಕುಮಾರಸ್ವಾಮಿ ವಿ ಕೆ
ಪ್ರೌಢಶಾಲಾ ಮುಖ್ಯ ಶಿಕ್ಷಕರು
ಸಿದ್ಧಾರ್ಥ ಆಂಗ್ಲ ಶಾಲೆ
ಬೆಂಗಳೂರು ಉತ್ತರ
ಮೊ : 9113906120)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ5 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

