ದಿನದ ಸುದ್ದಿ
ಸನಾತನಿಗಳಿಗೇಕೆ ಭೀಮ ಭಯ
- ಡಾ.ಕೆ.ಎ.ಓಬಳೇಶ್,ದಾವಣಗೆರೆ
ಭಾರತದ ನೆಲದಲ್ಲಿ ಸಾವಿರಾರು ವರ್ಷಗಳ ಕಾಲ ಅಸಮಾನತೆಯನ್ನು ಪಾಲಿಸಿಕೊಂಡು ಬಂದ ವೈದಿಕತೆಯ ಕಟ್ಟುಪಾಡುಗಳನ್ನು ಮೀರಿ ನಿಂತ ಹಲವಾರು ದಾರ್ಶನಿಕರು ನಮ್ಮ ನಡುವೆ ಅಜರಾಮರವಾಗಿ ಉಳಿದಿದ್ದಾರೆ.
ಇವರು ವೈಚಾರಿಕ ತಳಹದಿಯ ಮೇಲೆ ಸಮಾನತೆಯನ್ನು ಪ್ರತಿಪಾದಿಸಿ, ಮಾನವ ಮಾನವನ ನಡುವಿನ ಸಾಮಾಜಿಕ ಅಂತರದ ಕಂದಕವನ್ನು ಮೆಟ್ಟಿನಿಂತು ಜೀವಪರವಾದ ಚಿಂತನೆಗಳನ್ನು ಬಿತ್ತಿದ್ದಾರೆ. ಇಂತಹ ಮಹಾನ್ ದಾರ್ಶನಿಕರಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರಮುಖರಾಗಿದ್ದಾರೆ. ವೈದಿಕರು ತಮ್ಮ ಅಸ್ತಿತ್ವಕ್ಕಾಗಿ ರೂಪಿಸಿಕೊಂಡು ಬಂದ ಅಸಮಾನತೆಯ ವರ್ಣವೃಕ್ಷವನ್ನು ಬೇರು ಸಹಿತ ಕಿತ್ತು ಹಾಕಿ ಸಮಾನತೆಯನ್ನು ಹಂಚಿದ ಶ್ರೇಷ್ಟ ದಾರ್ಶನಿಕರಲ್ಲಿ ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದು.
ಹೀಗಾಗಿ ಇವರು ಕೇವಲ ವ್ಯಕ್ತಿ ಮಾತ್ರವಲ್ಲ, ಭಾರತದ ಶೂದ್ರರ ಪಾಲಿನ ಭೀಮಬಲ. ಪ್ರಸ್ತುತದಲ್ಲಿ ಬಾಬಾಸಾಹೇಬರ ೧೩೧ನೇ ಜನ್ಮದಿನವನ್ನು ಆಚರಿಸುತ್ತಿರುವ ಸುಸಂದರ್ಭದಲ್ಲಿ ನಾವು ಅವರ ಮೂರ್ತಿ ಆರಾಧನೆಗಿಂತ ಅವರ ಸಾಮಾಜಿಕ ಕಳಕಳಿ, ತುಡಿತ-ಮಿಡಿತ, ಭಾರತಕ್ಕೆ ನೀಡಿದ ಕೊಡುಗೆ ಹಾಗೂ ಶೂದ್ರ ಸಮುದಾಯಗಳ ಮೇಲೆ ಅವರಿಗಿದ್ದ ಬದ್ಧತೆಯನ್ನು ಅರಿಯುವುದು ಸೂಕ್ತವೆಂದು ಭಾವಿಸಲಾಗಿದೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೇವಲ ಒಬ್ಬ ಸಾಮಾನ್ಯ ವ್ಯಕ್ತಿಯಾಗಿದ್ದರೆ ನಾವು ಇಂದು ಸ್ಮರಣೆ ಮಾಡುವ ಅಗತ್ಯವೇ ಇರಲಿಲ್ಲ. ಹಾಗೆಯೇ ಇವರು ಸಾರ್ವತ್ರಿಕ ನೆಲೆಯಲ್ಲಿ ಭಾರತೀಯರ ಸ್ಮರಣೆಯಲ್ಲಿಯೂ ಉಳಿಯುತ್ತಿರಲಿಲ್ಲ. ಆದರೆ ಭಾರತದ ಪ್ರತಿಯೊಬ್ಬ ಪ್ರಜೆಯು ಇಂದು ಬಾಬಾಸಾಹೇಬರನ್ನು ಸ್ಮರಣೆ ಮಾಡಿಕೊಳ್ಳಬೇಕಾದ ಅನಿವಾರ್ಯದೆ ಇದೆ ಎಂದಾದರೆ ಅದಕ್ಕೆ ಕಾರಣ ಈ ನಿಸ್ವಾರ್ಥ ವ್ಯಕ್ತಿತ್ವದ ಹಿರಿಮೆಯ ಪ್ರತೀಕವೇ ಸರಿ.
ಭಾರತೀಯರಾದ ನಾವು ಎಪ್ಪತ್ತು-ಎಂಬತ್ತು ವರ್ಷಗಳ ಹಿಂದಿನ ಭಾರತವನ್ನು ಒಂದು ಕ್ಷಣ ಕಣ್ಣು ಮುಚಿ ಸ್ಮರಿಸಿಕೊಂಡರೆ ನಮಗೆ ಬಾಬಾಸಾಹೇಬ್ ಅಂಬೇಡ್ಕರ್ ಎಂಬ ಭೀಮಶಕ್ತಿಯ ಸಾಹಸಮಯ ಹೋರಾಟದ ಬದುಕು ಅರ್ಥವಾಗುತ್ತದೆ. ಇಂದು ಹಿಂದುತ್ವದ ಹೆಸರಿನಲ್ಲಿ ಕೋಮುವಾದಿಗಳ ಕೈಗೊಂಬೆಯಾಗಿ ಕುಣಿಯುತ್ತ, ಈ ನೆಲದ ಸಾಮರಸ್ಯವನ್ನು ತಮ್ಮ ಕೈಯಾರೆ ಕೆಡಿಸುತ್ತಿರುವ ಶೂದ್ರ ಸಮುದಾಯದ ಯುವ ಸಮುದಾಯವು ಒಂದು ಕ್ಷಣ ಎಂಬತ್ತು ವರ್ಷಗಳ ಹಿಂದಿನ ತಮ್ಮ ಪೂರ್ವಜರ ಸ್ಥಿತಿಗತಿಗಳನ್ನು ಅರ್ಥ ಮಾಡಿಕೊಂಡರೆ ಬ್ರಾಹ್ಮಣ್ಯದ ತಾಳಕ್ಕೆ ಕುಣಿಯುತ್ತಿರಲಿಲ್ಲ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ‘ಚರಿತ್ರೆ ಇಲ್ಲದ ಜನಾಂಗ ಚರಿತ್ರೆಯನ್ನು ನಿರ್ಮಿಸಲು ಸಾಧ್ಯವಿಲ್ಲ. ಚರಿತ್ರೆ ಮರೆತವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿಲ್ಲ’ ಎಂಬ ಮಾತು ಸತ್ಯದಿಂದ ಕೂಡಿದೆ. ಇಂದು ಬ್ರಾಹ್ಮಣ್ಯದ ತಾಳಕ್ಕೆ ತಕ್ಕಂತೆ ಕುಣಿದು ‘ಹಿಂದುತ್ವ’ದ ಅಮಲೇರಿಸಿಕೊಂಡ ಶೂದ್ರ ಸಮುದಾಯಗಳಿಗೆ ತಮ್ಮ ಚರಿತ್ರೆಯ ಅರಿವಿಲ್ಲ. ಈ ಕಾರಣಕ್ಕೆ ಇವರು ಸಾವಿರಾರು ವರ್ಷಗಳಿಂದ ತಮ್ಮನ್ನು ದಾಸ್ಯಕ್ಕೆ ಒಳಪಡಿಸಿದ ಧರ್ಮದ ರಕ್ಷಣೆಗೆ ಮುಂದಾಗಿದ್ದಾರೆ.
ಬಾಬಾಸಾಹೇಬರ ಈ ಮಾತು ಶೂದ್ರರಿಗೆ ಅರ್ಥವಾಗಿ ತಮ್ಮ ವಾಸ್ತವ ಚರಿತ್ರೆಯನ್ನು ಅರಿತರೆ ಸನಾತನವಾದಿಗಳಿಗೆ ಉಳಿಗಾಲವಿಲ್ಲ. ಇಂತಹ ಸೂಕ್ಷö್ಮತೆಯನ್ನು ಅರಿತ ಸನಾತನವಾದಿಗಳು ಒಂದಿಲ್ಲೊAದು ವಿವಾದ ಸೃಷ್ಟಿಸುವ ಮೂಲಕ ಶೂದ್ರ ಸಮುದಾಯದ ಯುವಶಕ್ತಿಯನ್ನು ಮುಸ್ಲಿಮರು, ಕ್ರೈಸ್ತರ ವಿರುದ್ಧ ಎತ್ತಿಕಟ್ಟುವ ಮೂಲಕ ದೇಶದ ಶಾಂತಿಯನ್ನು ಕದಡುವ ಮೂಲಕ ತಮ್ಮ ಪಟ್ಟಾಭದ್ರ ಹಿತಾಸಕ್ತಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದಾರೆ.
ಸನಾತನಿಗಳಿಗೇಕೆ ಭೀಮ ಭಯ
ಸಾವಿರಾರು ವರ್ಷಗಳಿಂದಲೂ ಭಾರತದ ಸೌಹಾರ್ದ ನೆಲದಲ್ಲಿ ಅಸಮಾನತೆಯ ವಿಷಬೀಜವನ್ನು ಬಿತ್ತುತ್ತಲೇ ಬಂದವರು ವೈದಿಕರು. ವೈದಿಕರು ಬಿತ್ತಿದ ಈ ವಿಷಬೀಜ ಮೊಳಕೆಯೊಡೆದು, ಸಸಿಯಾಗಿ, ಗಿಡವಾಗಿ, ಮರವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ವೈದಿಕರು ಬಿತ್ತಿದ ಈ ವಿಷಬೀಜದ ಫಲವನ್ನು ಈ ನೆಲದ ಹಲವಾರು ಜೀವಪರ ದಾರ್ಶನಿಕರು ಕಿತ್ತುಹಾಕುವ ಪ್ರಯತ್ನ ಮಾಡಿದ್ದಾರೆ. ಆದರೆ ಸನಾತನವಾದಿಗಳು ಅವರ ಕಾರ್ಯವನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದು ಬುದ್ಧ ಗುರುವಿನಿಂದ ಆರಂಭಗೊಂಡು ಸಮಕಾಲೀನ ಸಂದರ್ಭದ ಅನುಭಾವಿಕ ಚಿಂತಕರವರೆಗೂ ಮುಂದುವರೆದಿದೆ. ಆದರೆ ಈ ಎಲ್ಲಾ ದಾರ್ಶನಿಕರ ಜೀವಪರವಾದ ಸಮಾನತೆಯ ತತ್ವ-ಚಿಂತನೆಗಳನ್ನು ಮೂಲಭೂತವಾದಿಗಳು ಜೀರ್ಣಿಸಿಕೊಂಡು ವೈದಿಕೀಕರಣಗೊಳಿಸಿದ್ದಾರೆ. ಆದರೆ ಬಾಬಾಸಾಹೇಬರು, ಮತ್ತವರ ತತ್ವ-ಚಿಂತನೆಗಳನ್ನು ಮಾತ್ರ ತಿಂದು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅಂಬೇಡ್ಕರ್ ಅವರು ವೈದಿಕರ ದಾಹಕ್ಕೆ ಆಹಾರವಾಗದೆ ಶೂದ್ರರ ನೋವಿಗೆ ಆಸರೆಯಾಗಿ ನಿಂತ ಹೆಬ್ಬಂಡೆಯಾದರು.
ಈ ಹೆಬ್ಬಂಡೆಯನ್ನು ಮಾತ್ರ ವೈದಿಕರು ಮಣಿಸಲು ಸಾಧ್ಯವಾಗಲೇ ಇಲ್ಲ. ಅಂಬೇಡ್ಕರ್ ಅವರು ಸಾವಿರಾರು ವರ್ಷಗಳಿಂದ ಭಾರತದ ನೆಲದಲ್ಲಿ ಅಸಮಾನತೆಯನ್ನು ಬಿತ್ತಿ ಬೆಳೆದುಕೊಂಡು ಬಂದಿದ್ದ ಬ್ರಾಹ್ಮಣ್ಯದ ಕಸದಲ್ಲಿ ಕೃಷಿ ಮಾಡಿ ಹಸನು ಮಾಡಿದರು. ಹಿಂದುತ್ವದ ಕಳೆಯ ಮಧ್ಯೆ ನೆನೆಗುದಿಗೆ ಬಿದ್ದಿದ್ದ ‘ಬುದ್ಧತ್ವ’ಕ್ಕೆ ಜೀವ ತುಂಬಿದರು. ಬುದ್ಧಗುರುವಿನ ಜೀವಪರವಾದ ಆಶಯಗಳನ್ನು ಕೇಂದ್ರವಾಗಿಟ್ಟುಕೊಂಡು ಸರ್ವರನ್ನು ಸಮಾನವಾಗಿ ಕಾಣುವಂತಹ ಸಂವಿಧಾನವನ್ನು ರಚಿಸಿ ಹಿಂದುತ್ವದಲ್ಲಿ ದಾಸ್ಯಕ್ಕೆ ಒಳಗಾಗಿದ್ದ ಶೂದ್ರರು, ಮಹಿಳೆಯರಿಗೆ ಸ್ವಾಭಿಮಾನವನ್ನು ಕಲ್ಪಿಸಿದರು.
ಪ್ರಜಾಪ್ರಭುತ್ವದ ಮಾದರಿಯನ್ನು ಸಂವಿಧಾನಿಕ ನೆಲೆಯಲ್ಲಿ ಜಾರಿಗೆ ತಂದು ಸಾವಿರಾರು ವರ್ಷಗಳ ಕಾಲ ಗುಲಾಮಗಿರಿಯಿಂದ ಬಳಲುತ್ತಿದ್ದ ಪ್ರಜೆಗಳನ್ನೇ ಪ್ರಭುಗಳಾಗಿ ರೂಪಿಸಿದರು. ಇದು ಭಾರತದ ನೆಲದಲ್ಲಿ ಅಂಬೇಡ್ಕರ್ ಎಂಬ ಮಹಾನ್ ಚೇತನದಿಂದ ಮಾತ್ರವೇ ಸಾಧ್ಯವಾಯಿತು.
ಬಾಬಾಸಾಹೇಬರು ಜೀವಪರ ಆಶಯಗಳ ಬೆನ್ನೇರಿ ರೂಪಿಸಿದ ಈ ಸಂವಿಧಾನವು ಸನಾತನವಾದಿಗಳಿಗೆ ಸಹಿಸದ ತುತ್ತಾಗಿತ್ತು. ಭೀಮರಾವ್ ಎಂಬ ಬಲವೇ ಇವರಿಗೆ ಸಿಂಹಸ್ವಪ್ನವಾಯಿತು.
ಬುದ್ಧರನ್ನು ನುಂಗಿದಂತೆ, ಬಸವಣ್ಣರನ್ನು ನುಂಗಿದAತೆ, ಸ್ವಾಮಿ ವಿವೇಕಾಂದರನ್ನು ನುಂಗಿದಂತೆ ಬಾಬಾಸಾಹೇಬರನ್ನು ನುಂಗಲು ಸಾಧ್ಯವಾಗದೆ ಇರುವುದಕ್ಕೆ ಕಾರಣ ಅವರಿಗಿದ್ದ ಶೂದ್ರ, ಅತೀಶೂದ್ರ ಹಾಗೂ ಮಹಿಳೆಯರ ಮೇಲೆ ಇದ್ದಂತಹ ಬದ್ಧತೆ. ಹಾಗೆಯೇ ಇವರು ರೂಪಿಸಿದ ಸರ್ವಸಮಾನತೆಯ ಲಿಖಿತ ಮಾದರಿಯ ಸಂವಿಧಾನ. ಅಂಬೇಡ್ಕರ್ ಅವರು ರೂಪಿಸಿದ ಈ ಸಂವಿಧಾನ ಭಾರತದ ಶೂದ್ರರು ಹಾಗೂ ಮಹಿಳೆಯರ ಪಾಲಿಗೆ ಕೇವಲ ಹೊತ್ತಿಗೆ ಮಾತ್ರವಲ್ಲ. ಸ್ವಾಭಿಮಾನದ ಪ್ರತಿರೂಪ.
ಭಾರತೀಯರೆಲ್ಲರ ಪಾಲಿನ ಶ್ರೇಷ್ಟ ಧರ್ಮಗ್ರಂಥ. ‘ಭಾರತೀಯರಾದ ನಾವು’ ಎಂಬ ಘೋಷವಾಕ್ಯದ ಮೂಲಕ ಆರಂಭವಾದ ಈ ಗ್ರಂಥವು ವೈದಿಕರ ಕಟ್ಟುಪಾಡುಗಳನ್ನು ಬುಡಮೇಲು ಮಾಡಿತು. ಸಾವಿರಾರು ವರ್ಷಗಳ ಕಾಲ ಶ್ರಮರಹಿತವಾಗಿ ಜೀವಿಸುತ್ತಿದ್ದ ಬ್ರಾಹ್ಮಣಶಾಹಿಗಳ ಬದುಕಿಗೆ ಪ್ರಬಲವಾದ ಪೆಟ್ಟು ನೀಡಿತು. ಭಾರತದ ನೆಲದಲ್ಲಿ ವೈದಿಕತೆಯ ಎಲ್ಲಾ ಕುತಂತ್ರಗಳನ್ನು ನೆಲಸಮಗೊಳಿಸಿದವರು ಭೀಮರಾವ್ ಅಂಬೇಡ್ಕರ್. ಹೀಗಾಗಿ ಸನಾತನವಾದಿಗಳಿಗೆ ಇಂದಿಗೂ ಭೀಮಭಯ ಕಾಡುತ್ತಲೇ ಇದೆ.
ಈ ಕಾರಣಕ್ಕಾಗಿಯೇ ಅವರು ಸಂವಿಧಾನವನ್ನು ಬದಲಾಯಿಸುವ ಹುನ್ನಾರಗಳನ್ನು ನಿರಂತರವಾಗಿ ರೂಪಿಸುತ್ತಿದ್ದಾರೆ. ಶೂದ್ರರನ್ನು ಬಳಸಿಕೊಂಡು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಕೋಮುವಾದಿ ನೆಲೆಯಲ್ಲಿ ರೂಪಿಸುತ್ತಿರುವ ಎಲ್ಲಾ ತಂತ್ರಗಳು ಅನ್ಯಧರ್ಮಿಯರ ಮೇಲಿನ ದ್ವೇಷದಿಂದಲ್ಲ. ಅವುಗಳೆಲ್ಲ ಭಾರತದ ಮಣ್ಣಿನ ಮಕ್ಕಳಾದ ಶೂದ್ರರು ಹಾಗೂ ಅತೀಶೂದ್ರರನ್ನು ಹತ್ತಿಕ್ಕುವಲ್ಲಿ ರೂಪಿಸಿದ ತಂತ್ರಗಳು. ಸನಾತನವಾದಿಗಳಿಗೆ ಮುಸ್ಲಿಮರ ಮೇಲೆ ದ್ವೇಷವಿಲ್ಲ.
ಚರಿತ್ರೆಯ ವಾಸ್ತವತೆಯತ್ತ ಕಣ್ಣಾಯಿಸಿದರೆ ವಿದೇಶಿ ಆಕ್ರಮಣಕಾರರಾದ ಮುಸಲ್ಮಾನರು, ಫ್ರೆಂಚರು, ಡಚ್ಚರು, ಪೋರ್ಚಗೀಸರು, ಬ್ರಿಟಿಷರನ್ನೆಲ್ಲ ಸ್ವಾಗತಿಸಿ ದೇಶಿಯ ದೊರೆಗಳ ವಿರುದ್ಧ ಎತ್ತಿಕಟ್ಟಿದವರು ಇದೇ ಸನಾತನವಾದಿಗಳು. ಭಾರತದ ಚರಿತ್ರೆಯ ಪುಟಗಳಲ್ಲಿ ಯಾವುದೇ ಒಬ್ಬ ದೇಶಿಯ ರಾಜ ಸೋಲನ್ನು ಅನುಭವಿಸಿದ್ದಾನೆ ಎಂದಾದರೆ ಅದರಲ್ಲಿ ಬ್ರಾಹ್ಮಣ್ಯದ ತಂತ್ರಗಾರಿಗೆ ಅಡಗಿಯೇ ಇರುತ್ತದೆ.
ಇಂದು ವಿದೇಶಗಳಿಗೆ ಗುಪ್ತಚರ ಮಾಹಿತಿಗಳನ್ನು ಸೋರಿಕೆ ಮಾಡುತ್ತಿರುವವರಲ್ಲಿ ಇವರದು ಮೇಲುಗೈ. ಹೀಗಾಗಿ ಇವರಿಗೆ ಮುಸಲ್ಮಾನರು ಹಾಗೂ ಇತರೆ ಅನ್ಯಧರ್ಮಿಯರ ಮೇಲೆ ದ್ವೇಷವಿಲ್ಲ. ಇವರ ಮೇಲಿನ ದ್ವೇಷಕ್ಕೆ ಕಾರಣ ಈ ನೆಲದ ಶೂದ್ರರನ್ನು ಹತ್ತಿಕ್ಕುವುದೇ ಆಗಿದೆ. ಆದರೆ ಸನಾತನವಾದಿಗಳಿಗೆ ಇರುವ ಭೀಮ ಭಯದಿಂದ ಶೂದ್ರರು ಹಾಗೂ ಅತೀಶೂದ್ರರನ್ನು ನೇರವಾಗಿ ಎದುರು ಹಾಕಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ ಕಾರಣ ಕೋಮುದ್ವೇಷವನ್ನು ಬಿತ್ತುವ ಮೂಲಕ ಶೂದ್ರರನ್ನು ಹತ್ತಿಕ್ಕುವ ಹುನ್ನಾರಗಳನ್ನು ನಿರಂತರವಾಗಿ ಮುನ್ನೆಡೆಸಿಕೊಂಡು ಬಂದಿದ್ದಾರೆ.
ಭೀಮ ಬಲ ಶೂದ್ರರಿಗೆಷ್ಟು ಗೊತ್ತು
ಯಾವುದೇ ಒಬ್ಬ ಮುಂದುವರೆದ ಜಾತಿಯ ಶೂದ್ರನನ್ನು ಅಂಬೇಡ್ಕರ್ ಯಾರು ಎಂದು ಕೇಳಿದರೆ ಅವನ ಬಾಯಿಯಿಂದ ಸಹಜವಾಗಿಯೇ ಹೊರಹೊಮ್ಮುವ ಮಾತು ಅವರೊಬ್ಬ ‘ಹೊಲೆಯ ಮಾದಿಗ’ ಸಮುದಾಯದ ನಾಯಕ ಎಂಬುದೇ ಆಗಿರುತ್ತದೆ. ಆದರೆ ಈ ಭೀಮ ಶಕ್ತಿ ನನಗೆಷ್ಟು ಸ್ವಾಭಿಮಾನ, ಸ್ವಾವಲಂಬನೆಯನ್ನು ಕಲ್ಪಿಸಿಕೊಟ್ಟಿದೆ ಎಂಬ ಅರಿವು ಶೂದ್ರರಿಗೆ ಇಲ್ಲವಾಗಿದೆ. ಇದು ಆ ವ್ಯಕ್ತಿ ಅಥವಾ ಸಮುದಾಯದ ತಪ್ಪಲ್ಲ.
ಅವರ ತಲೆಯೊಳಗೆ ಅಂಬೇಡ್ಕರ್ ಎಂಬ ಶಕ್ತಿಯ ಬಗ್ಗೆ ಮೂಲಭೂತವಾದಿಗಳು ತುಂಬಿರುವ ಹುಸಿ ಹುನ್ನಾರಗಳಿವು. ಅಂಬೇಡ್ಕರ್ ಎಂಬ ಈ ವ್ಯಕ್ತಿತ್ವ ಭಾರತದ ನೆಲದಲ್ಲಿ ಜನ್ಮತಳೆಯದೆ ಹೋಗಿದ್ದರೆ ನಾವೆಲ್ಲ ಶಿಕ್ಷಣ, ರಾಜಕೀಯ, ಅಧಿಕಾರದಿಂದ ಹೊರಗುಳಿದು ಜೀತ ಮಾಡಬೇಕಾದ ಪರಿಸ್ಥಿತಿ ಇನ್ನೂ ಜೀವಂತವಾಗಿರುತ್ತಿತ್ತು ಎಂಬುದು ಶೂದ್ರ ಸಮುದಾಯಗಳಿಗೆ ಅರ್ಥವಾಗಿಯೇ ಇಲ್ಲ.
ಶೂದ್ರರಿಗೆ ಸಾವಿರಾರು ವರ್ಷಗಳಿಂದಲೂ ನಮ್ಮ ಪೂರ್ವಜರನ್ನು ಶೋಷಣೆಗೆ ಒಳಪಡಿಸಿದ ‘ಹಿಂದುತ್ವ’ವನ್ನು ಕಾಪಾಡಿಕೊಳ್ಳಲು ಇರುವ ತವಕ, ನಮಗಾಗಿ ಹಗಲಿರುಳು ದುಡಿದು, ದಣಿದ ಅಂಬೇಡ್ಕರ್ ಎಂಬ ಮಹಾತಾಯಿಯ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲ. ಈ ದೇಶದಲ್ಲಿ ಶೇ ೩% ಇರುವ ಬ್ರಾಹ್ಮಣರು ಸಂವಿಧಾನವನ್ನು ಬದಲಾಯಿಸುವುದೇ ನಮ್ಮ ಗುರಿ ಎಂದರೆ ಅದಕ್ಕೆ ಚಪ್ಪಾಳೆ ತಟ್ಟುವವರು ಈ ಶೂದ್ರ ಹಾಗೂ ಅತೀಶೂದ್ರ ಸಮುದಾಯದ ಮೂರ್ಖರೆ ಆಗಿದ್ದಾರೆ.
ಜೈ ಶ್ರೀರಾಮ್ ಎಂದು ಗಂಟಲು ಕಿತ್ತೊಗುವಂತೆ ಕೂಗುವ ಶೂದ್ರನಿಗೆ ‘ಜೈಭೀಮ್’ ಎಂಬ ಸ್ವಾಭಿಮಾನದ ಘೋಷ ತಾಗುತ್ತಲೇ ಇಲ್ಲ. ತಾನಗಾಗಿ ದುಡಿದು ನೆಮ್ಮದಿಯ ಬದುಕನ್ನು ಕಟ್ಟಿಕೊಟ್ಟ ತಾಯಿಯನ್ನು ಮರೆತು, ಅಳಸಿದ ಅನ್ನವನ್ನು ವೈಯಾರದಿಂದ ತಿನ್ನಿಸುವ ಆಂಟಿಯನ್ನು ಹೊಗಳುವ ಮಟ್ಟಕ್ಕೆ ಶೂದ್ರ ಸಮುದಾಯ ಇಳಿದು ನಿಂತಿದೆ. ಹೀಗಾಗಿ ಅಂಬೇಡ್ಕರ್ ಎಂಬ ವಿಶ್ವಜ್ಞಾನ ಜಗತ್ತಿಗೆ ಅರಿವಾದರೂ ಭಾರತೀಯ ಶೂದ್ರರಿಗೆ ಮಾತ್ರ ಅಂಬೇಡ್ಕರ್ ಇನ್ನೂ ಅರ್ಥವಾಗಿಲ್ಲ. ಅದು ಅರ್ಥವಾಗಿದ್ದರೆ ಕೇವಲ ‘ಹೊಲೆಯ ಮಾದಿಗ’ ಎಂಬುದಾಗಿಯೇ ಮಾತ್ರ.
ದುರಂತವೆಂದರೆ ಹಲವಾರು ವೈಯಕ್ತಿಕ ಕಾರಣಗಳಿಂದಾಗಿ ಈ ಒಳಪಂಗಡಗಳು ಕೂಡ ಅಂಬೇಡ್ಕರ್ ಅವರಿಂದ ದೂರ ಸರಿದು ಪರ್ಯಾಯ ನಾಯಕನನ್ನು ಎತ್ತಿಕಟ್ಟುವ ಅಪಾಯಕಾರಿ ಸನ್ನಿವೇಶವನ್ನು ನಿರ್ಮಿಸಿಕೊಳ್ಳುತ್ತಿವೆ.
ಶೂದ್ರ ಭಾರತಕ್ಕೆ ಭೀಮ ಬಲವೇ ಅಂತಿಮ
ಭಾರತದೊಳಗೆ ಎರಡು ಬಗೆಯ ಭಾರತಗಳಿವೆ. ಒಂದು ಶೂದ್ರ ಭಾರತ. ಮತ್ತೊಂದು ಬ್ರಾಹ್ಮಣ್ಯ ಭಾರತ. ಶೂದ್ರ ಭಾರತವು ಮೂಲನಿವಾಸಿಗಳದ್ದು. ಬ್ರಾಹ್ಮಣ್ಯ ಭಾರತವು ವಲಸಿಗರದ್ದು. ಹೀಗಾಗಿ ವಲಸಿಗರು ಮೂಲನಿವಾಸಿಗಳ ಮೇಲೆ ನಿರಂತರವಾದ ಆಕ್ರಮಣವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಮೂಲನಿವಾಸಿಗಳ ಭ್ರಾತೃತ್ವ, ಸಮಾನತೆ, ಸೋದರತ್ವ ತತ್ವಕ್ಕೆ ವಿರುದ್ಧವಾಗಿ ವಲಸಿಗರು ವರ್ಣಾಧಾರಿತ ಶ್ರೇಣೀಕೃತ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.
ಈ ಶ್ರೇಣೀಕೃತ ಸೌಧವನ್ನು ಕೆಡವಿ ಸಮಾನತೆಯ ಸಮಾಜದ ನಿರ್ಮಾಣಕ್ಕೆ ಮುಂದಾದವರು ಬಾಬಾಸಾಹೇಬ್ ಅಂಬೇಡ್ಕರ್ ಅವರು. ಹೀಗಾಗಿ ಇಂದು ಶೂದ್ರಾತೀಶೂದ್ರ ಸಮುದಾಯಗಳು ನೆಮ್ಮದಿಯಿಂದ ಬದುಕುವುದಕ್ಕೆ ಕಾರಣ ಭೀಮಶಕ್ತಿ. ಈ ಭೀಮಶಕ್ತಿಯನ್ನು ಅರಿತು ನಡೆದರೆ ನಮ್ಮ ಮುಂದಿರುವ ಇಕ್ಕಟ್ಟು-ಬಿಕ್ಕಟ್ಟುಗಳಿಗೆ ಪರಿಹಾರವಿದೆ. ಈ ಭೀಮ ಬಲದ ಅರಿವು ಶೂದ್ರರೊಳಗೆ ಮೂಡದೇ ಹೋಗಿರುವ ಕಾರಣಕ್ಕೆ ಸನಾತನವಾದಿಗಳು ತಮ್ಮ ವಿಕೃತತೆಯನ್ನು ಮೆರೆಯುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಭಾರತವನ್ನು ಛಿದ್ರಗೊಳಿಸುತ್ತಿದ್ದಾರೆ.
ದಲಿತ, ದಮನಿತ, ಮಹಿಳೆಯರ ಹಕ್ಕುಗಳ ಹರಣಕ್ಕೆ ಮುಂದಾಗಿದ್ದಾರೆ. ಈ ವಿಷಧರ್ಮವು ರಾಜಕೀಯದೊಳಗೆ ಬೆರೆತು ಇಂದು ಭಾರತವನ್ನೇ ಮಾರಾಟ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದೆ. ಈ ಕಾರಣಕ್ಕಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಶೂದ್ರಾತೀಶೂದ್ರ ಸಮುದಾಯಗಳು ಕನಿಷ್ಠ ಜೀವನ ನಡೆಸುವುದು ಕೂಡ ಕಷ್ಟಕರವಾಗಿದೆ.
ಶೂದ್ರರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ಸಮುದಾಯಗಳ ಮಹಿಳೆಯರು ನೆಮ್ಮದಿಯ ಮತ್ತು ಸ್ವಾಭಿಮಾನದ ಜೀವನ ನಡೆಸಬೇಕಾದರೆ ಭೀಮ ಬಲವನ್ನು ಅರಿಯಬೇಕು. ಅದನ್ನು ಅರಿತರೆ ಮಾತ್ರವೇ ಸಾಲದು. ಭೀಮರ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಪ್ರಬುದ್ಧ ಭಾರತದ ನಿರ್ಮಾಣದತ್ತ ಸಾಗಬೇಕಾಗಿದೆ. ಇಂದು ಬಾಬಾಸಾಹೇಬರ 131ನೇ ಜನ್ಮದಿನದ ಸಂಭ್ರಮದಲ್ಲಿರುವ ನಾವುಗಳೆಲ್ಲ ನಮ್ಮ ನಮ್ಮ ಕಾರ್ಯವೈಖರಿಗಳನ್ನು ಆತ್ಮವಿಮರ್ಶೆಗೆ ಒಳಪಡಿಸಿಕೊಳ್ಳಬೇಕಿದೆ.
ಆ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬದುಕು, ಅವರ ತತ್ವ-ಚಿಂತನೆಗಳನ್ನು ಅರಿತು ಸ್ವಾಭಿಮಾನದ ಬದುಕಿನತ್ತ ಮುಖ ಮಾಡಬೇಕಾದ ತುರ್ತು ನಮ್ಮ ಮುಂದಿದೆ. ಹೀಗಾಗಿ ಶೂದ್ರ ಭಾರತಕ್ಕೆ ಭೀಮಬಲವೊಂದೆ ಅಂತಿಮ ಎಂಬ ಸತ್ಯ ಶೂದ್ರರ ಮನೆ ಮನಗಳನ್ನು ಪ್ರವೇಶಿಸಬೇಕಾಗಿದೆ. ಈ ನೆಲೆಯಲ್ಲಿ ಬಾಬಾಸಾಹೇಬರ ಜನ್ಮದಿನ ನಮ್ಮೆಲ್ಲರ ಅರಿವಿನ ದಿನವಾಗಲಿ. ಜೈಭೀಮ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ1 day agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ4 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

