Connect with us

ದಿನದ ಸುದ್ದಿ

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಿಳೆ

Published

on

  • ಸಿದ್ದರಾಜು, ಶಿಕ್ಷಕರು, ಹಿರಿಸಾವೆ

ಬಾಬಾ ಸಾಹೇಬ್ ಡಾಕ್ಟರ್ ಅಂಬೇಡ್ಕರ್ ಶತಮಾನದ ಮಹಾಚೇತನ. ಅನೀತಿ, ಅನ್ಯಾಯ, ಅಜ್ಞಾನ, ಮೂಢನಂಬಿಕೆ ಇವುಗಳ ವಿರುದ್ಧ ಹೋರಾಟ ನಡೆಸುವವರಿಗೆ ಪ್ರೇರಕ ಶಕ್ತಿಯಾಗಿದ್ದಾರೆ, ಸ್ಫೂರ್ತಿಯಾಗಿದ್ದಾರೆ.

ಸಾವಿರಾರು ವರ್ಷಗಳಿಂದ ಸಮಾಜದಲ್ಲಿ ಬೇರು ಬಿಟ್ಟಿದ್ದ, ಸಾಮಾಜಿಕ ಪಿಡುಗಿನ ವಿರುದ್ಧ ಜನರಲ್ಲಿ ಜಾಗೃತಿಯನ್ನು, ಕ್ರಾಂತಿಯ ಕಿಡಿಯನ್ನು ಹಾಗೂ ಆತ್ಮಾಭಿಮಾನವನ್ನು ಮೂಡಿಸಲು ತಮ್ಮ ಜೀವನವನ್ನೇ ಸವೆಸಿದ ಮಹಾ ಪುರುಷರಲ್ಲಿ ಅಂಬೇಡ್ಕರ್ ಅವರ ಹೆಸರು ಹಚ್ಚ ಹಸಿರಾಗಿ ಉಳಿದಿದೆ.

ಜಾತಿ-ಕುಲ, ಸ್ತ್ರೀ-ಪುರುಷ ಎಂಬ ಭೇದಭಾವವಿಲ್ಲದೆ ಭಾರತೀಯರೆಲ್ಲರಿಗೂ ಮೂಲಭೂತ ಹಕ್ಕುಗಳನ್ನು ಕೊಡಬೇಕು, ಮಹಿಳೆಯರಿಗೆ ತಂದೆಯ ಆಸ್ತಿಯಲ್ಲಿ ಸಮಪಾಲು ದೊರೆಯಬೇಕು ಎಂದು ಪ್ರಪ್ರಥಮವಾಗಿ ಘೋಷಿಸಿದ ಮೊಟ್ಟಮೊದಲ ಭಾರತದ ರಾಜಕೀಯ ನೇತಾರ ಡಾಕ್ಟರ್ ಬಿಆರ್ ಅಂಬೇಡ್ಕರ್. ಹೆಣ್ಣು ಮಕ್ಕಳಿಗೆ, ಗಂಡು ಮಕ್ಕಳಂತೆಯೇ ಆಸ್ತಿಯಲ್ಲಿ ಸಮಪಾಲು ನೀಡಬೇಕು. ಮಹಿಳೆಯರು ದೈಹಿಕವಾಗಿ ಮಾನಸಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕ ವಾಗಿ ಉದ್ಧಾರವಾಗಿ, ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಮಾಡಬೇಕೆಂದು ಕನಸುಕಂಡವರಲ್ಲಿ ಬಾಬಾ ಸಾಹೇಬರು ಮೊದಲಿಗರು.

ಮಹಿಳೆಯರ ಉದ್ಧಾರಕ್ಕಾಗಿ ಹಲವಾರು ಅನುಚ್ಛೇದಗಳನ್ನು ಸೇರಿಸಿ ಸಂವಿಧಾನಬದ್ಧವಾಗಿ ಮಹಿಳೆಗೆ ಸಿಗಬೇಕಾದ ಮಾನ್ಯತೆ ಸಿಗುವಂತೆ ನೋಡಿಕೊಂಡರು. ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಒದ್ದಾಡುತ್ತಿರುವ ಇಂದಿನ ಸರ್ಕಾರಗಳು ಡಾಕ್ಟರ್ ಅಂಬೇಡ್ಕರಿಂದ ಪಾಠ ಕಲಿಯಬೇಕು.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕಾಣೆಯಾಗಿರುವುದನ್ನು ನೋಡಿದರೆ ನಮ್ಮ ಪುರುಷ ರಾಜಕಾರಣಿಗಳು ಈಗಲೂ ಮಹಿಳೆಯರನ್ನು ತಮ್ಮ ಸಮಾನಳೆಂದು ಒಪ್ಪಿಕೊಂಡಿಲ್ಲ. ಡಾಕ್ಟರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾರಿದ್ದು ಈಗಲೂ ಮಹಿಳೆಯರಿಗೆ ಅರ್ಥವಾಗದೆ ಇರುವುದು ದುರಂತ.

ಮಹಿಳೆಯ ಮೂಲಭೂತ ಹಕ್ಕುಗಳನ್ನು ಹಾಗೂ ಸಮಾನ ಬದುಕನ್ನು ಕಾನೂನುಬದ್ಧವಾಗಿ ನೀಡಲು ಸರ್ವ ಪ್ರಯತ್ನ ಮಾಡಿದ ಮಾನವತಾವಾದಿ, ತಮ್ಮ ಜೀವನ ಪರ್ಯಂತ ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸಿದರು.

ಎಲ್ಲ ವರ್ಗಗಳಿಂದ ತುಳಿತಕ್ಕೊಳಗಾದ ಮಹಿಳೆಯರ ಉದ್ಧಾರದ ಬಗ್ಗೆ ಅವರು ಮುಕ್ತಮನಸ್ಸು ಹೊಂದಿದ್ದರು. ಅದಕ್ಕಾಗಿ ಶತಶತಮಾನಗಳಿಂದ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರನ್ನು ಸ್ವತಂತ್ರ ಸಹಜ ಬದುಕಿಗೆ ತರಲು, ಮಹಿಳೆ ಪುರುಷನಿಗಿಂತ ಕಡಿಮೆಯೇನೂ ಇಲ್ಲ ಪುರುಷರಷ್ಟೇ ಸಬಲರು, ಬುದ್ಧಿವಂತರು ಆಗಿದ್ದಾರೆ ಎಂದು ಸಾರಿದರು.

ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಕಲ್ಪಿಸಿ ಕೊಡುವುದಕ್ಕಾಗಿ ಹಗಲಿರುಳು ಶ್ರಮಿಸಿದರು. ಪ್ರಾಮಾಣಿಕ ಪ್ರಯತ್ನದಿಂದ ಭಾರತೀಯ ಮಹಿಳೆಗೆ ಸಂವಿಧಾನಬದ್ಧವಾಗಿ ಅನೇಕ ಅಧಿಕಾರಗಳನ್ನು ಅನುಚ್ಛೇದ ಗಳ ಮೂಲಕ ದೊಕಿಸಿಕೊಟ್ಟಿದ್ದಾರೆ.

ಅನುಚ್ಛೇದ 14: ಸ್ತ್ರೀ-ಪುರುಷ ಕುಲ ಜಾತಿ ಭೇದ ಭಾವ ಮಾಡದೆ ಭಾರತದಲ್ಲಿ ವಾಸಿಸುವ ಎಲ್ಲಾ ಪ್ರಜೆಗಳು ಕಾನೂನಿನ ಮುಂದೆ ಸಮಾನರು.

ಅನುಚ್ಛೇದ 15: ಜಾತಿ, ಮತ, ಲಿಂಗ ಮತ್ತು ಹುಟ್ಟಿನ ಆಧಾರದ ಮೇಲೆ ಯಾವುದೇ ರೀತಿಯ ತಾರತಮ್ಯ ಮಾಡತಕ್ಕದ್ದಲ್ಲ.

ಅನುಚ್ಛೇದ 39: ಸ್ತ್ರೀ ಪುರುಷರಿಗೆ ಸರಿಸಮಾನವಾಗಿ ಜೀವನವನ್ನು ಒದಗಿಸತಕ್ಕದ್ದು ಪುರುಷ ಸ್ತ್ರೀ ಸೇವೆಗೆ ಸಮಾನ ವೇತನ ನೀಡಬೇಕು.

ಅನುಚ್ಛೇದ 42: ಉದ್ಯೋಗಸ್ಥ ಮಹಿಳೆಯರಿಗೆ ಹೆರಿಗೆ ಸಂದರ್ಭದಲ್ಲಿ ವೇತನ ಸಹಿತ ರಜೆ ಹಾಗೂ ಇನ್ನಿತರ ಸೌಲಭ್ಯ ಒದಗಿಸುವುದು. ಸರ್ಕಾರದ ಕರ್ತವ್ಯವಾಗಿದೆ.

ಡಾಕ್ಟರ್ ಅಂಬೇಡ್ಕರ್ ಅಸ್ಪೃಷ್ಯತೆ ನಿವಾರಣೆಯಷ್ಟೆ ಮಹತ್ವವನ್ನು ಮಹಿಳೆಯರ ಅಭಿವೃದ್ಧಿಗಾಗಿಯೂ ಸಹ ಕೊಟ್ಟಿದ್ದರು.

ಅವರ ಸುಧಾರಣೆಯಲ್ಲಿ ಅವರು ಮಾಡಿದ ಮತ್ತೊಂದು ಸಾಧನೆಯೆಂದರೆ ಮಹಿಳಾಪರ ನಾಲ್ಕು ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ಅವು ಸ್ವೀಕೃತವಾಗಿದ್ದು, ಮಹಿಳಾ ಸ್ವಾತಂತ್ರಕ್ಕೆ ಸಂಬಂಧಪಟ್ಟ ಪ್ರಮುಖ ಕಾಯ್ದೆಗಳು
1: ಹಿಂದೂ ವಿವಾಹ ಕಾಯ್ದೆ 1955.

2:ಹಿಂದೂ ಉತ್ತರಾಧಿಕಾರ ಕಾನೂನು 1956. ಮತ್ತು ಈ ಕಾಯ್ದೆ ಪ್ರಕಾರ ದತ್ತುಸ್ವೀಕಾರ ಸಂಬಂಧದಲ್ಲಿ ಹೆಣ್ಣು ಮತ್ತು ಗಂಡಿನ ನಡುವೆ ಯಾವುದೇ ತಾರತಮ್ಯ ಇರುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಈ ಮೊದಲು ಹೆಣ್ಣುಮಕ್ಕಳಿಗೆ ಅವಕಾಶ ಇರಲಿಲ್ಲ.

3:ಪೋಷಕತ್ವ ಕಾನೂನು 1956 ಇವರಿಗೆ ಸಲ್ಲುತ್ತದೆ.

4: 1956 ಹಿಂದೂ ದತ್ತಕ ಕಾಯ್ದೆ ಗಂಡುಮಗನಷ್ಟೆ ಹೆಣ್ಣು ಮಗುವನ್ನು ದತ್ತು ಸ್ವೀಕರಿಸುವ ಆಕಾಶವನ್ನು ನೀಡಲಾಯಿತು. ಅಲ್ಲದೆ ಗಂಡ-ಹೆಂಡತಿಯರಿಬ್ಬರೂ ದತ್ತು ಸ್ವೀಕರಿಸುವ ಸಂಬಂಧದಲ್ಲಿ ಪರಸ್ಪರ ಒಪ್ಪಿಕೊಳ್ಳಬೇಕು.

ಹೀಗೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಹಾಗೂ ಕಾನೂನುಬದ್ಧವಾಗಿ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯವನ್ನು ನೀಡುವುದರ ಮೂಲಕ ಶತಶತಮಾನಗಳಿಂದ ಶೋಷಣೆಗೊಳಗಾಗುತ್ತಾ ಬಂದಿದ್ದ ಮಹಿಳೆಯರಿಗೆ ಹೊಸ ಜೀವನ ನೀಡಿದರು. ಹೊಸ ಸ್ಪೂರ್ತಿ ತುಂಬಿದರು

ಮಾನ್ಯ ಅಂಬೇಡ್ಕರ್ ರವರ ಪರಿಶ್ರಮದಿಂದ ಭಾರತೀಯ ಮಹಿಳೆ ಸಂವಿಧಾನದ ಅವಕಾಶಗಳು ಹಕ್ಕುಗಳು ದೊರೆತಿರುವುದರಿಂದ ಮಹಿಳೆ ಇಷ್ಟೊಂದು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಅಮೇರಿಕಾದ ನ್ಯೂಯಾರ್ಕ್ ನ ಕೊಲಂಬಿಯಾ ವಿಶ್ವವಿದ್ಯಾಲಯವು ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರಿಗೆ ಡಾಕ್ಟರೇಟ್ 1952ರಲ್ಲಿ ನೀಡಿ ಗೌರವಿಸಿದೆ.

ಸಮಾಜ ಸುಧಾರಕರು, ಮಾನವೀಯ ಹಕ್ಕುಗಳ ದಿಟ್ಟ ಪ್ರತಿಪಾದಕರು ಅವರು ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ, ಅಲ್ಲದೆ ತನ್ಮೂಲಕ ರಾಷ್ಟ್ರದ ಅಖಂಡತೆಯನ್ನು ಎತ್ತಿ ಹಿಡಿದು ಮಹಿಳೆಯನ್ನು ಸಮಾನ ಸ್ಥಾನದಲ್ಲಿ ಪ್ರತಿಷ್ಠಾಪಿಸುವ ಮೂಲಕ ಈ ನೆಲಕ್ಕೆ ಅಪೂರ್ವ ಸಮಾನತೆಯ ಹರಿಕಾರರಾಗಿ ನಿಂತಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ 131ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಹೃದಯತುಂಬಿ ಇಡೀ ಪ್ರಪಂಚದಾದ್ಯಂತ ಕೋರಲಾಗುತ್ತಿದೆ.

ಜೈ ಭೀಮ್ ಜೈ ಭಾರತ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending