Connect with us

ಅಂತರಂಗ

ಕಗ್ಗತ್ತಲ ವ್ಯಾಪಾರದಲ್ಲಿ, ವೇಶ್ಯೆ ಅಳುವ ಮಗು..!

Published

on

  • ಮೈತ್ರಾವತಿ ವಿ. ಐರಣಿ, ಚಿಕ್ಕಬೂದಿಹಾಳು, ದಾವಣಗೆರೆ

ವೇಶ್ಯಾವಾಟಿಕೆ ಎಂಬುದು ಸ್ತ್ರೀ ಕುಲಕ್ಕೆ ಅಂಟಿಕೊಂಡಿರುವ ಅಭಿಶಾಪಗಳಲ್ಲೊಂದು!ಇಂತಹ ಶಾಪದ ಕೂಪವನ್ನು ಸೃಷ್ಟಿಸಿದವರು,ಪೋಷಿಸಿದವರು ,ಪರವಾನಿಗೆ ಕೊಟ್ಟವರು ನಮ್ಮ ಸೋ ಕಾಲ್ಡ್ ಮಾರ್ಯದಸ್ಥ ಸಮಾಜ.

ವೇಶ್ಯಾ ವೃತ್ತಿ ಎಂದರೆ ಹಣದ ಪ್ರತಿಫಲಕ್ಕಾಗಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವ ಕ್ರಿಯೆ. ಜಗತ್ತಿನಾದ್ಯಂತ ಅನಾದಿಕಾಲದಿಂದಲೂ ಇದು ರೂಢಿಯಲ್ಲಿದೆ. ವಿಪರ್ಯಾಸ ಏನೆಂದರೆ ಕಾಲಾಂತರದಲ್ಲಿ ಈ ವೃತ್ತಿಗೆ ಆಧುನಿಕತೆಯ ಸ್ಪರ್ಶ ಸಿಕ್ಕು ಹೈಟೆಕ್ ದಂಧೆಯಾಗಿ,ವ್ಯವಹಾರವಾಗಿ ಹೆಮ್ಮರವಾಗಿ ಬೆಳೆದು ನಿಂತಿದೆ. ಇದರಲ್ಲಿ ಪುರುಷರ ಸಹಭಾಗಿತ್ವ ಇದ್ದರೂ ದೂಷಿಸುವುದು ಮಾತ್ರ ಸ್ತ್ರೀಯರನ್ನೇ ಇದು ಯಾವ ಕಾಡಿನ ನ್ಯಾಯ? ನನಗಿವತ್ತಿಗೂ ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.

ಅದ್ಯಾರದ್ದೇ ಬದುಕಾಗಿರಬಹುದು ಬದುಕಲಾರದಷ್ಟು ಅಸಹ್ಯವಾಗಿರುವುದಿಲ್ಲ,ಹೇಸಿಗೆ ಪಡುವಷ್ಟು ನಿಷ್ಕೃಷ್ಠವಾಗಿರುವುದಿಲ್ಲ,ಲೋಕನಿಂದನೆಗೊಳಗಾಗಿ ಮುಖ ಮುಚ್ಚಿ ಓಡಾಡುವಂತಹ ಹೀನ ಸ್ಥಿತಿ ಇರುವುದಿಲ್ಲ. ಅಷ್ಟಕ್ಕೂ ಯಾರ ಬದುಕು ದಟ್ಟ ದರಿದ್ರವಲ್ಲ.ಅವರವರ ವೃತ್ತಿಗೆ ಅವರದೇ ನೆಲೆಯಲ್ಲಿ ತಕ್ಕುದಾದ ಗೌರವ ಆದರಗಳಿರುತ್ತವೆ. ಅವನೆಂತಹ ನೀಚನೇ ಆಗಿರಲಿ,ಪರಮಪಾಪಿಯೇ ಆಗಿರಲಿ, ಕೊಲೆಗಡುಕನೇ ಆಗಿರಲಿ ಅವನು ಸಹ ಸಮಾಜದಲ್ಲಿ ಚೂರು ಪಾರು ಮರ್ಯಾದೆ, ಗೌರವ ಸಂಪಾದಿಸಿರುತ್ತಾನೆ.ಅವನ ಬದುಕಿನ ಅಸ್ತಿತ್ವಕ್ಕೊಂದು ಸಾರ್ಥಕ ಕಂಡುಕೊಳ್ಳುತ್ತಾನೆ.

ಬಹುಶಃ ವೃತ್ತಿ ಗೌರವವಿಲ್ಲದ ಏಕಮಾತ್ರ ದಂಧೆ ಎಂದರೆ ಅದು ವೇಶ್ಯೆ ವೃತ್ತಿಯೊಂದೇ.ಆಕೆ ದೇಹವನ್ನು ಮಾರಿ ಅಷ್ಟೈಶರ್ಯವನ್ನು ಸಂಪಾದಿಸಿರಲಿ ಅದನ್ನು ನಾನು ನನ್ನ ದೇಹ ಮಾರಿ ಸಂಪಾದಿಸಿದ್ದೇನೆಂದು ಅಭಿಮಾನದಿಂದ, ಹೆಮ್ಮೆಯಿಂದ ಸಮಾಜದಲ್ಲಿ ನಿಂತು ಹೇಳುವ ಧೈರ್ಯ, ಸ್ಥೈರ್ಯ ಅವರಿಗಿರುವುದಿಲ್ಲ.ಯಾವುದೇ ಮಾನ,ಸಮ್ಮಾನ, ಬಡ್ತಿ, ಗೌರವಗಳಿಲ್ಲದ ಏಕಮಾತ್ರ ವೃತ್ತಿಯಿದು.

ವೇಶ್ಯೆ ಎಂದರೆ ಪರಮ ಪಾಪಿ,ನಿತ್ಯ ಕಳಂಕಿತೆ,ಲೋಕನಿಂದಿತೆ,ಜಾರಿಣಿ ಹೀಗೆ ನಾನಾ ಹೆಸುರುಗಳಿಂದ ಕರೆಸಿಕೊಳ್ಳುವ ಆ ಪಾಪದ ಜೀವಗಳಿಗೆ ಎಷ್ಟು ಜನ್ಮ ಕಳೆದರೂ ಆ ಕಳಂಕ ಅವರಿಂದ ದೂರವಾಗುವುದಿಲ್ಲ.

ಅಷ್ಟಕ್ಕೂ ವೇಶ್ಯೆ ಎಂದರೆ ಮೂಗು ಮುರಿಯುವ ಸಮಾಜದಲ್ಲಿ ನಾವು ಬದುಕಿದ್ದೇವೆ.ಹೌದು ಹಾಗಾದರೆ ಆಕೆ ವೇಶ್ಯೆಯಾಗಲಿಕ್ಕೆ ಭಾರತದಂತಹ ಮಡಿವಂತಿಕೆಯ ರಾಷ್ಟ್ರದಲ್ಲಿ ವೇಶ್ಯಾವಾಟಿಕೆ ಒಂದು ದಂಧೆಯಾಗಿ ,ವೃತ್ತಿಯಾಗಿ ಬೆಳೆಯಲಿಕ್ಕೆ ಕಾರಣ ಯಾರು?, ಅದಕ್ಕೆ ಅಧಿಕೃತವಾಗಿ ಪರವಾನಿಗೆ ಕೊಟ್ಟವರು ಯಾರು?

ವೇಶ್ಯಾವಾಟಿಕೆ ಎಂಬುದು ಸ್ತ್ರೀ ಕುಲಕ್ಕೆ ಅಂಟಿಕೊಂಡಿರುವ ಅಭಿಶಾಪಗಳಲ್ಲೊಂದು!ಇಂತಹ ಶಾಪದ ಕೂಪವನ್ನು ಸೃಷ್ಟಿಸಿದವರು,ಪೋಷಿಸಿದವರು ,ಪರವಾನಿಗೆ ಕೊಟ್ಟವರು ನಮ್ಮ ಸೋ ಕಾಲ್ಡ್ ಮಾರ್ಯದಸ್ಥ ಸಮಾಜ.

ಹೌದು ಬದುಕಿನಲ್ಲಿ ಯಾವುದೋ ಅಸಹಾಯಕತೆಗೋ,ಅನೀರಿಕ್ಷಿತ ಒತ್ತಡಕ್ಕೋ ಸಿಲುಕಿ ವೇಶ್ಯಾವಾಟಿಕೆ ಪ್ರಪಂಚಕ್ಕೆ ಕಾಲಿಡುವ ಸ್ತ್ರೀ ಜಗತ್ತಿಗೆ ವೇಶ್ಯೆ ಎಂದು ಚಿರಪರಿಚಿತಳಾಗುತ್ತಾಳೆ.ಆದರೆ ಆಕೆಯ ಅಸಹಾಯಕತೆಯನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳುವ ಪುರುಷ(ಕೆಲವರು) ಮಾತ್ರ ಜಗತ್ತಿನ ಮುಂದೆ ಸಭ್ಯಸ್ಥನಾಗಿ ಕಾಣಿಸಿಕೊಳ್ಳುತ್ತಾನೆ.ಸಮಾಜದ ಇಂತಹ ಕುರುಡು ಕಾನೂನಿಗೆ ನನ್ನ ಧಿಕ್ಕಾರವಿದೆ.

ಹೆಣ್ಣು ಮಕ್ಕಳನ್ನು ಮಾರಾಟ ಮಾಡುವ ದಂಧೆ ಕೋಡ್ ವರ್ಡ್ ಗಳ ಮೂಲಕ ನಡೆಯುತ್ತದೆ. ಅದಕ್ಕೆಂದೇ ದುರುಳರ ವರ್ಗ ಹುಟ್ಟಿಕೊಂಡಿದೆ.ಕಿತ್ತು ತಿನ್ನುವ ಬಡತನ, ಬದುಕಿನ ಅಸಹಾಯಕ ಸ್ಥಿತಿ, ಕಾಮುಕ ಕಣ್ಣಿನ ಕೀಚಕರ ದುರಾಸೆಗೆ ಬಲಿಯಾಗುವ ಹೆಣ್ಣು ಮಕ್ಕಳು ಮುಂದೆ ಕಾಮಾಟಿಪುರಂನ ವೇಶ್ಯಾವಾಟಿಕೆ ಅಡ್ಡೆಗಳಲ್ಲಿ ಇನ್ನೊಬ್ಬರ ದೈಹಿಕ‌ ಸುಖದ ಸರಕಾಗುತ್ತಾಳೆ‌. ಮುಂಬೈ ನ ರೆಡ್ ಲೈಟ್ ಏರಿಯಾ (ಕಾಮಾಟಿಪುರಂ) ಹೆಣ್ಣು ಮಕ್ಕಳ ಪಾಲಿಗದು.

ಲೇಖಕಿ | ಮೈತ್ರಾವತಿ ವಿ. ಐರಣಿ, ಚಿಕ್ಕಬೂದಿಹಾಳು, ದಾವಣಗೆರೆ

ರೌರವ ನರಕ ಇಡೀ ಜೀವ ಹಿಡಿದುಕೊಂಡು ಪರರ ಸುಖಕ್ಕಾಗಿ ಮನಸ್ಸು ಮತ್ತು ದೇಹಗಳ ನಡುವೆ ನಿತ್ಯವೂ ಹೋರಾಟ ನಡೆಸುತ್ತಿರುತ್ತಾಳೆ.ಏಕೆಂದರೆ ಪ್ರತಿಯೊಂದು ಹೆಣ್ಣಿಗೂ ಅವಳದೇ ಬದುಕಿನ ಕನಸಿರುತ್ತದೆ.ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಾಳೆ.ಆರ್ಥಿಕ ಬಿಕ್ಕಟ್ಟು, ಸಮಾಜದ ದೂಷಣೆ,ಬದುಕಿನ ಅಸಹಾಯಕತೆ ಎದುರಾದಾಗ ಆಕೆ ಯಾರದ್ದೋ ಸಹಾಯದ ಬಾಗಿಲಿಗೆ ಬಂದು ನಿಲ್ಲುತ್ತಾಳೆ.ಹಾಗಂತ ಅವಳಿಗೆ ನಿಸ್ವಾರ್ಥ ಮನಸ್ಸಿನಿಂದ, ಒಳ್ಳೆಯ ದೃಷ್ಟಿಯಿಂದ ಸಹಾಯ ಮಾಡೋ ಸಭ್ಯಸ್ಥ ಮಂದಿ ನಮ್ಮ ನಡುವೆ ಎಷ್ಟಿದ್ದಾರೆ.

ಒಬ್ಬ ಖ್ಯಾತ ಸೀರಿಯಲ್ ನಟಿಯವರು ಕಣ್ಣಾರೆ ಕಂಡ ಘಟನೆಯನ್ನು ಇಲ್ಲಿ ಪ್ರಸ್ತುತ ಪಡಿಸಲಿಚ್ಛಿಸುತ್ತೇನೆ.ಲಾಲ್ ಬಾಗ್ ಹತ್ತಿರ ಒಬ್ಬ ತಾಯಿ ತನ್ನ ಮಗುವಿಗೆ ಹಾಲು ಕುಡಿಸಲು ಹಣ ಅಂತ ಬೀದೀಲಿ ನಿಂತು ಬರುವವರ ಹತ್ತಿರ ಹಣ ಕೇಳ್ತಾಳೆ.ಯಾರು ಬಿಡಿಗಾಸು ಬಿಚ್ಛೋದಿಲ್ಲ.ಒಬ್ಬ ಬಂದು ನಿನಗೆ ಹಣ ಕೊಡ್ತೀನಿ ನನ್ನ ಜೊತೆ ಬಾ ಎಂದು ಕರೆದುಕೊಂಡು ಹೋಗುತ್ತಾನೆ.ತನ್ನಾಸೆಗಳನ್ನು ಪೂರೈಸಿಕೊಂಡು ಹಣ ಬಿಸಾಕಿ ಹೋಗುತ್ತಾನೆ.

ಹಾಗಾದರೆ ಇಲ್ಲಿ ಮಗುವಿನ ಹಸಿವಿನ ತಪ್ಪಾ? ಆ ತಾಯಿ ತೆಗೆದುಕೊಂಡ ನಿರ್ಧಾರದ ತಪ್ಪಾ? ಅಥವಾ ಆಕೆಯ ಅಸಾಹಯಕತೆಯನ್ನು ಬಳಸಿಕೊಂಡ ಆ ಆಗುತಂಕನ ತಪ್ಪಾ? ಎಲ್ಲಕ್ಕೂ ಮೌನವೋಂದೇ ಉತ್ತರ. ಈ ತರಹದ.ಸಣ್ಣ ಸಣ್ಣ ಘಟನೆಗಳಿಂದ ರೋಸಿ ಹೋದ ಹೆಣ್ಣು ಮಕ್ಕಳು ಮುಂದೆ ವೇಶ್ಯಾವಾಟಿಕೆಯನ್ನೇ ವೃತ್ತಿ ಮಾಡಿಕೊಳ್ಳುತ್ತಾರೆ. ಕಾಮಾಟಿಪುರಂನ ಗಲ್ಲಿ ಗಲ್ಲಿಗಳಲ್ಲಿ ಇಂತಹುದೇ ಅನೇಕ ಹೆಣ್ಣು ಮಕ್ಕಳು ಕಾಣ ಸಿಗುತ್ತಾರೆ.

ಇನ್ನೂ ವಿಪರ್ಯಾಸ ಎಂದರೆ ಅಂದರೆ ಎಷ್ಟೋ ದೇಶಗಳಲ್ಲಿ ಇದನ್ನು ಕಾನೂನು ಬದ್ದಗೊಳಿಸಲಾಗಿದೆ. ಇನ್ನು ಹಲವು ದೇಶಗಳಲ್ಲಿ ಅದೇ ಚಿಂತನೆಗಳು ನಡೆಯುತ್ತಿವೆ.ಭಾರತವೂ ಇದರಿಂದ ಹೊರತಾಗಿಲ್ಲ ಬಿಡಿ.ನಮ್ಮ ಸಮಾಜದ ದುರಂತ ನೋಡಿ ಸ್ತ್ರೀ ಕುಲಕ್ಕೆ ಮುಳುವಾಗಿರುವ ಈ ಶಾಪವನ್ನು ಹೊಡೆದೋಡಿಸಿ ಅವಳಿಗೂ ಒಂದು ಬದುಕು ಕಟ್ಟಿ ಕೊಡುವ ಅವಕಾಶವನ್ನು ನಾವ್ಯಾರು ಮಾಡುತ್ತಿಲ್ಲ.

ಬದಲಿಗೆ ಆಕೆಗೆ ಲೈಂಗಿಕ ಕಾರ್ಯಕರ್ತರು, ನಿತ್ಯ ಸುಮಂಗಲಿಯರು ಎಂಬ ಬಿರುದು ನೀಡಿ ಮಹಾ ಉಪಕಾರ ಮಾಡಿದ್ದೇವೆಂದು ಬೀಗುತ್ತಿದ್ದೇವೆ. ಇದು ಎಷ್ಟರಮಟ್ಟಿಗೆ ಸರಿ ಎಂಬುದನ್ನು ನಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕು.

ವೇಶ್ಯಾವಾಟಿಕೆ ಭೂಮಿಯ ಮೇಲಿನ ಭೀಭತ್ಸ ನರಕ ಈ “ಕರಿ ಕತ್ತಲೆಯ ವ್ಯಾಪಾರದಲ್ಲಿ ವೇಶ್ಯೆ ಅಕ್ಷರಶಃ ಅಳುವ ಮಗು”
ಆಕೆಯ ನಿತ್ಯ ರೋಧನೆ ಕೇಳೋರು ಯಾರು?ತಾವು ಬಿಸಾಡುವ ಕಾಸಿಗೆ ಸೆರಗು ನೀಡುವ ಸರಕೆಂದೇ ಭಾವಿಸುವ ಆಕೆಯನ್ನು ಅನುಭವಿಸಿ ಹೋಗುವ ಮಂದಿಗೆ ಆಕೆಗೊಂದು ಸಾಂತ್ವನ ಹೇಳುವ ಸಮಯವಾದರೂ ಎಲ್ಲೀದ್ದೀತು!

ತೀಟೆ ತೀರಿದ ಬಳಿಕ..
ನೋಟು ಎಸೆದು
ಹೋಗುವ ಜನ ;
ತಿರುಗಿ ನೋಡಿದರೆ
ಅಸಹ್ಯ ಪಡುವ
ಅವರ ಮನ ;
ಆಮೇಲೆ ನಾನ್ಯಾರೊ,
ಅವರಾರೋ ;
ಅವರಿಗೋ..ತೀಟೆ ತೀರಿದರೆ ಸಾಕು ;
ನನಗೆ ಅದರಿಂದಲೇ ಬದುಕು;

ಕತ್ತಲೆಯಲಿ ಬೆತ್ತಲಾಗಿ
ಕಳೆದು ಹೋಗಿಹೆ ನಾನು ;
ಬೆತ್ತಲೆಯ ಮೈ ಹಿಂಡಿ,
ಸುಖಪಡುವವರಿಗೆ ತಿಳಿಯದು
ನನ್ನೊಳಗಿನ ನೋವು !
ಕಾಮರೂಪದಿ ಬರುವವರಲಿ
ರಾಮರೂಪವ ನೋಡಲಾದೀತೆ ?
ಸುಖ ಬಯಸಿ ಬರುವವರಲಿ
ನನ್ನ ನೋವ ಹೇಳಿಕೊಳ್ಳಲಾದೀತೆ(ರಚನೆ;ಕೃಷ್ಣ ಮೂರ್ತಿ)

ಈ ವೃತ್ತಿಯಲ್ಲಿ ತೊಡಗಿದ ಹೆಣ್ಣು ಮಗಳೊಬ್ಬಳು ಹೇಳಿದ ಒಂದು ಮಾತು ನಿಜಕ್ಕೂ ನನ್ನನ್ನು ತಲ್ಲಣಗೊಳಿಸಿತು.ಅನೀರಿಕ್ಷಿತವಾಗಿ ಈ ಪಾಪ ಕೂಪಕ್ಕೆ ನಾವು ಬಂದ್ವಿ ನಾವು ದೇಹವನ್ನು ಮಾತ್ರ ಕೊಡ್ತೀವಿ ನಮ್ಮ ಮನಸ್ಸನಲ್ಲ ಅದಿನ್ನೂ ಪರಿಶುದ್ಧವಾಗಿದೆ.ದೇಹ ಮಲಿನವಾಗಿದೆಯೇ ಹೊರತು ಮನಸ್ಸಲ್ಲ!

ನಮಗೂ ಮನಸಿದೆ ಅರಿತು ಕೈ ಹಿಡಿಯುವ ಮನುಷ್ಯ ಅದ್ಯಾರೇ ಆಗಿರಲಿ ತುಂಬು ಮನಸ್ಸಿನಿಂದ ಅವರನ್ನು ಸ್ವೀಕರಿಸಿ ಅವರಿಗೆ ಆದರ್ಶ ಸತಿಯಾಗಿ ಬದುಕುತ್ತೇನೆ.ನಮ್ಮನ್ನು ಕೀಳು ಭಾಷೆಯಿಂದ ನಿಂದಿಸುತ್ತಾರಲ್ಲ ನಮ್ಮ ಸೆರಗಿನಲ್ಲಿ ತಮ್ಮ ಕಾಮದ ಸುಖವನ್ನು ಪಡೆದುಕೊಂಡು ಹೋದವರನ್ನೇಕೇ ನೀವು ಕೀಳು ಭಾಷೆಯಿಂದ ನಿಂದಿಸುವುದಿಲ್ಲ ಎಂಬ ಪ್ರಶ್ನೆ ನನ್ನನ್ನು ಗದ್ಗಗದಿತಳನ್ನಾಗಿ ಮಾಡಿದ್ದಲ್ಲದೇ ಈ ಬರಹಕ್ಕೆ ಸ್ಪೂರ್ತಿಯನ್ನು ನೀಡಿತು. ಹಾಗೆ ಅವರ ಮೇಲೆ ಇದ್ದ ಮುಜುಗರದ ಭಾವವೊಂದು ಕರಗಿ ಗೌರವದ ಭಾವವು ಒಡಮೂಡಿತು.

ನಾನು ಈ ವೃತ್ತಿಯಲ್ಲಿ ತೊಡಗಿರುವವರಿಗೆ ಅಥವಾ ಮುಂದೆ ಅಸಹಾಯಕತೆಗೆ ಸಿಲುಕಿ ಈ ಪಾಪ ಕೂಪಕ್ಕೆ ಅನಿವಾರ್ಯವಾಗಿ ಬಿದ್ದರೆ ನೀವು ಚಿಂತಿಸಬೇಡಿ.ಅದೇ ಕಾಮಾಟಿಪುರಂನ ಬೀದಿಗಳಲ್ಲಿ ಬೆಳೆದ ಶ್ವೇತಾ ಕಟ್ಟಿ ಈಗ ನ್ಯೂಯಾರ್ಕ್ ವಿಶ್ವ ವಿದ್ಯಾಲಯದಲ್ಲಿ ಓದುತ್ತಿದ್ದಾಳೆ.ಆಕೆ ಏಕೆ ನಿಮಗೆ ಸ್ಪೂರ್ತಿಯಾಗಬಾರದು? ಅವಳು ನಿಮ್ಮ ಹಾಗೆ ಅನಿವಾರ್ಯ ಎಂದು ಕೂತಿದಿದ್ದರೆ ನ್ಯೂಯಾರ್ಕ್ ಇರಲಿ ಕಾಮಾಟಿಪುರಂ ಸಹ ದಾಟುತ್ತಿರಲಿಲ್ಲ‌.ಇವತ್ತಿನ ಕಾಲದಲ್ಲಿ ಅವಕಾಶಗಳಿಗೇನು ಕೊರತೆ ಇಲ್ಲ.

ನಿಮ್ಮ ಮನದ ಸಂಕೋಚದ ಸಂಕೋಲೆಗಳಿಂದ ಹೊರ ಬಂದರೆ ಬದುಕಿನ ಸಾವಿರ ಅವಕಾಶಗಳು ನಿಮ್ಮ ಪಾಲಿಗಿವೆ.ಯಾರದ್ದೋ ಕಾಮೋದ್ರೇಗ ತೀರಿಸಲು ನೀವೇಕೆ ಅನುಭೋಗದ ಸರಕಾಗುತ್ತೀರೀ?ನಿಮ್ಮತನವನ್ನೇ ಕಳೆದುಕೊಂಡು ನಿರ್ಭಾರ ಸ್ಥಿತಿಗೆ ತಲುಪಿ ಬದುಕುವುದು ನಿಮಗೆ ನೀವೇ ಮಾಡಿಕೊಳ್ಳುವ ಆತ್ಮವಂಚನೆ.

ಭಾರತದಂತಹ ದೇಶದಲ್ಲಿ ಪುರುಷ ಎಷ್ಟು ಜನರ ಜೊತೆ ಲೈಂಗಿಕ ಸಂಪರ್ಕ ಇಟ್ಟುಕೊಳ್ಳಬಹುದು,ಮದುವೆ, ಮೋಸ ಎಲ್ಲವನ್ನೂ ಮಾಡಬಹುದು ಏಕೆಂದರೆ ಅವನು ಏನೇ ಮಾಡಿದರೂ ಸಭ್ಯಸ್ಥ ಆದರೆ ಅದನ್ನೇ ಸ್ತ್ರೀ ಮಾಡಿದರೆ ಅವಳಿಗೆ ನೂರೆಂಟು ಕಳಂಕ,ನಿಂದನೆಗಳು ಏಕೆಂದರೆ ನಮ್ಮ ದೇಶದಲ್ಲಿ ಮಡಿವಂತಿಕೆಯ ಗೆರೆ ಇರುವುದು ಕೇವಲ ಸ್ತ್ರೀಯರಿಗಷ್ಟೇ ಪುರುಷರಿಗಲ್ಲ.

ಜೀವನ ಪೂರ್ತಿ ಯಾರಿಗೋ ಸುಖ ಕೊಡಲಿಕ್ಕೆ ಜೈವಿಕ ಗೊಂಬೆಯಾಗಿ ನೀವಿರಬೇಕಾಗಿಲ್ಲ, ಬದುಕಿನಾಚೆಗೂ ಒಂದು ಬದುಕಿದೆ ಅದಕ್ಕಾಗಿ ಹಪಹಪಿಸಿ ಇಂತಹ ಪಾಪಕೂಪದಿಂದ ದಯವಿಟ್ಟು ಹೊರಬನ್ನಿ ಹೊಸದೊಂದು ಬದುಕು ಕಟ್ಟಿಕೊಳ್ಳಿ.ಎದೆಯಲ್ಲಿ ಆತ್ಮವಿಶ್ವಾಸ, ನ್ಯಾಯವಾಗಿ ದುಡಿದು ತಿನ್ನೋ ಹಠ ಇದ್ರೆ ಏನು ಬೇಕಾದರೂ ಸಂಪಾದಿಸಬಹುದು.
“ವೇಶ್ಯಾವಾಟಿಕೆಗೆ ಬೀಳುವುದು ಶಾಪವಲ್ಲ ಅದರಿಂದ
ಹೊರಬರದೇ ಇರುವುದು ನಿಜವಾದ ಶಾಪ.”

(ಮೈತ್ರಾವತಿ ವಿ. ಐರಣಿ,ಲೇಖಕಿ.
ಚಿಕ್ಕಬೂದಿಹಾಳು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending