ಬಹಿರಂಗ
ಯುವ ಪೀಳಿಗೆಯ ದಿಕ್ಕು ತಪ್ಪಿಸುತ್ತಿರುವ ಕೋಮು ಧೃವೀಕರಣ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/04/Illustration-by-Manisha-Yadav-_-ThePrint_suddidina.jpg&description=ಯುವ ಪೀಳಿಗೆಯ ದಿಕ್ಕು ತಪ್ಪಿಸುತ್ತಿರುವ ಕೋಮು ಧೃವೀಕರಣ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/04/Illustration-by-Manisha-Yadav-_-ThePrint_suddidina.jpg&description=ಯುವ ಪೀಳಿಗೆಯ ದಿಕ್ಕು ತಪ್ಪಿಸುತ್ತಿರುವ ಕೋಮು ಧೃವೀಕರಣ', 'pinterestShare', 'width=750,height=350'); return false;" title="Pin This Post">
-
ಎರಡು ಮತೀಯ ಶಕ್ತಿಗಳ ಮೇಲಾಟದಲ್ಲಿ ಯುವಪೀಳಿಗೆ ಸಂಯಮ ಕಳೆದುಕೊಳ್ಳುತ್ತ
- ನಾ ದಿವಾಕರ
ಕೋಮುವಾದಿ ರಾಜಕಾರಣಕ್ಕೆ ಭಾರತದಲ್ಲಿ ಶತಮಾನದ ಇತಿಹಾಸವಿದೆ. ಹಾಗೆಯೇ ರಾಜಕೀಯ ಕೋಮು ಧೃವೀಕರಣಕ್ಕೆ ದಶಕಗಳ ಇತಿಹಾಸವಿದೆ. ಭಾರತದ ಬಹುತ್ವ ಸಂಸ್ಕೃತಿಗೆ ಸವಾಲಾಗಿಯೇ ಪರಿಣಮಿಸಿರುವ ಏಕಸಂಸ್ಕೃತಿಯ ಪ್ರತಿಪಾದಕರು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಸ್ಥಾಪಿಸಲು ಪಣತೊಟ್ಟಿರುವುದರಿಂದ ಅನ್ಯ ಮತೀಯ ಜನಾಂಗಗಳು ಈ ಧೃವೀಕರಣದ ಕೇಂದ್ರ ಬಿಂದು ಆಗಿರುತ್ತವೆ.
ಕಳೆದ ಮೂರು ದಶಕಗಳಲ್ಲಿ ಸಾಂಸ್ಕೃತಿಕ ರಾಜಕಾರಣ ತನ್ನದೇ ಆದ ಸ್ಪಷ್ಟ ರೂಪ ಪಡೆಯುತ್ತಿದ್ದು ಹಿಂದುತ್ವ ರಾಜಕಾರಣದ ಮುನ್ನಡೆಗೆ ಫಲವತ್ತಾದ ಭೂಮಿಕೆಯೂ ಸಿದ್ಧವಾಗುತ್ತಿದೆ. ಈ ನಡುವೆಯೇ ಅಪಾಯಕ್ಕೊಳಗಾಗಿರುವುದು ಈ ದೇಶದ ಬಹುಸಂಸ್ಕೃತಿ ನೆಲೆಗಳು ಮತ್ತು ಈ ಬಹುತ್ವ ನೆಲೆಗಳ ವಾರಸುದಾರರು. ಈಗಾಗಲೇ ಶತಮಾನಗಳ ಜಾತಿ ದೌರ್ಜನ್ಯ ಮತ್ತು ತಾರತಮ್ಯಗಳಿಂದ ಜರ್ಜರಿತವಾಗಿರುವ ಭಾರತೀಯ ಸಮಾಜವನ್ನು ಜನಾಂಗೀಯ ನೆಲೆಯಲ್ಲಿ ಮತ್ತಷ್ಟು ವಿಘಟನೆಗೊಳಪಡಿಸುವ ಪ್ರಯತ್ನಗಳು ನಮ್ಮ ಸುತ್ತಲಿನ ಸಮಾಜವನ್ನು ದ್ವೇಷ, ಆಕ್ರೋಶ, ಅಸೂಯೆ ಮತ್ತು ಶತ್ರುತ್ವದ ಕೂಪವನ್ನಾಗಿ ಮಾಡುತ್ತಿದೆ.
ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ, ಮಧ್ಯಪ್ರದೇಶದಲ್ಲಿ, ದೆಹಲಿಯಲ್ಲಿ ಒಡಿಷಾದಲ್ಲಿ ನಡೆಯುತ್ತಿರುವ ಪ್ರಕ್ಷುಬ್ಧತೆ ಭಾರತವನ್ನು ಸಾಮಾಜಿಕ ಅರಾಜಕತೆಯತ್ತ ಕೊಂಡೊಯ್ಯುವಂತಿದೆ. ಕೋಮುವಾದಿ ಶಕ್ತಿಗಳು ತಮ್ಮ ಅಸ್ತಿತ್ವವನ್ನು ರಕ್ಷಿಸಿಕೊಳ್ಳಲು, ತಾವು ನಂಬುವ ಮತ್ತು ಪೋಷಿಸುವ ಒಂದು ಧಾರ್ಮಿಕ ನಂಬಿಕೆ ಮತ್ತು ಸಾಂಸ್ಥಿಕ ಅಸ್ಮಿತೆಗಳನ್ನು ಸಮರ್ಥಿಸಿಕೊಳ್ಳಲು ಕೋಮುವಾದಿಗಳು ಸದಾ ಮತ್ತೊಂದು ಕೋಮಿನ ವಿರುದ್ಧ ಕತ್ತಿ ಮಸೆಯುತ್ತಲೇ ಇರುತ್ತವೆ.
ಒಂದು ಪ್ರೇಮ ವಿವಾಹ, ಒಂದು ಸಣ್ಣ ಮೆರವಣಿಗೆ, ಒಂದು ಪೂಜೆ ಅಥವಾ ಒಂದು ಪೂಜಾಸ್ಥಳದ ಗೋಡೆಯ ಮೇಲಿನ ಬರಹ ಈ ವಿಚ್ಚಿದ್ರಕಾರಿ ಶಕ್ತಿಗಳಲ್ಲಿರುವ ಕಿಚ್ಚನ್ನು ಹೊತ್ತಿಸಿ ಇಡೀ ಸಮುದಾಯಗಳನ್ನು ಆವರಿಸಿಬಿಡುತ್ತದೆ. ಬಡತನ, ನಿರುದ್ಯೋಗ, ಬೆಲೆ ಏರಿಕೆ, ವಸತಿಹೀನತೆ, ದುಬಾರಿ ಶಿಕ್ಷಣ, ಅಪೌಷ್ಟಿಕತೆ, ಅನಾರೋಗ್ಯ, ಅಶುಚಿತ್ವ, ಶಿಶುಮರಣ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಈ ಎಲ್ಲ ಸಮಸ್ಯೆಗಳ ವಿರುದ್ಧ ಹೋರಾಡಲು ಸಜ್ಜಾಗಬೇಕಿರುವ ಒಂದು ಇಡೀ ಯುವ ಪೀಳಿಗೆ ಇಂದು ಹಿಜಾಬ್, ಹಲಾಲ್, ಜಟ್ಕಾ, ರಾಮನವಮಿ, ಹನುಮಜಯಂತಿ ಮುಂತಾದ ವಿವಾದಗಳಿಗೆ ಸ್ಪಂದಿಸುತ್ತಾ ತನ್ನೊಳಗಿನ ಅಪಾರ ಶಕ್ತಿಯನ್ನು ವ್ಯರ್ಥ ಮಾಡುತ್ತಿದೆ.
“ ಧಾರ್ಮಿಕ ಭಾವನೆಗಳಿಗೆ ಧಕ್ಕೆ ! ” ಈ ಮೂರು ಪದಗಳು ಭಾರತದ ನೂರಾರು ಯುವ ಜೀವಗಳಿಗೆ ಮಾರಕವಾಗಿ ಪರಿಣಮಿಸಿವೆ. ಯಾವುದೋ ಒಬ್ಬ ತಿಳಿಗೇಡಿಯ ಸಾಮಾಜಿಕ ತಾಣದ ಪೋಸ್ಟ್ ಒಂದು ಇಡೀ ಸಮುದಾಯದೊಳಗಿನ ಕಿಚ್ಚನ್ನು ಭುಗಿಲೇಳಿಸುವ ಮಟ್ಟಕ್ಕೆ ನಮ್ಮ ನಡುವಿನ ಯುವ ಪೀಳಿಗೆ ದುರ್ಬಲವಾಗಿದೆ. ಈ ದೌರ್ಬಲ್ಯವೇ ಹಿಂದೂ ಮತೀಯವಾದಿಗಳಿಗೆ, ಮುಸ್ಲಿಂ ಮತಾಂಧ ಸಂಘಟನೆಗಳಿಗೆ ಬಂಡವಾಳವಾಗುತ್ತದೆ.
ಹಿಂದೂ, ಇಸ್ಲಾಂ ಅಥವಾ ಇತರ ಯಾವುದೇ ಧಾರ್ಮಿಕ ನೆಲೆಗಳಾದರೂ ಒಬ್ಬ ವ್ಯಕ್ತಿಯ ಒಂದು ಕ್ಷುಲ್ಲಕ ಅಭಿವ್ಯಕ್ತಿಯಿಂದ ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವಷ್ಟು ದುರ್ಬಲವಲ್ಲ ಎನ್ನುವುದನ್ನು ಇತಿಹಾಸ ನಿರೂಪಿಸಿದೆ. ಆದರೆ ಈ ರೀತಿಯ ಕ್ಷುಲ್ಲಕ ಘಟನೆಗಳೇ ಕೋಮು ದಳ್ಳುರಿಯನ್ನು ಹೆಚ್ಚಿಸಿ ನೂರಾರು ಅಮಾಯಕರ ಆಸ್ತಿಪಾಸ್ತಿಗಳ ನಷ್ಟಕ್ಕೆ, ಹತ್ತಾರು ಯುವಕರ ಸಾವಿಗೆ ಕಾರಣವಾಗುತ್ತದೆ ಎನ್ನುವುದನ್ನೂ ಸಮಕಾಲೀನ ಭಾರತೀಯ ಇತಿಹಾಸ ನಿರೂಪಿಸಿದೆ.
ಯಾವುದೇ ಜನಸಮುದಾಯಗಳ ಧಾರ್ಮಿಕ ಅಥವಾ ಸಾಮುದಾಯಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಕೃತ್ಯವನ್ನು ಶಿಕ್ಷೆಗೊಳಪಡಿಸಲು ಒಂದು ಕಾನೂನು ವ್ಯವಸ್ಥೆ ಇದೆ ಎನ್ನುವ ಪರಿಜ್ಞಾನವೇ ಇಲ್ಲದಂತೆ ಕಾನೂನು ಕೈಗೆತ್ತಿಕೊಳ್ಳುವ ಬೃಹತ್ ಕಾವಲುಪಡೆಗಳನ್ನೇ ಮತೀಯ ಶಕ್ತಿಗಳು, ಮತಾಂಧ ಸಂಘಟನೆಗಳು ಸೃಷ್ಟಿಸಿವೆ.
ಈ ಹಾದಿ ತಪ್ಪಿದ ಯುವ ಪೀಳಿಗೆ ಯಾವ ಧರ್ಮವನ್ನು ರಕ್ಷಿಸಲು ಸೆಣಸಾಡುತ್ತಿದೆ ? ಯಾರ ಧರ್ಮದ ಸಂರಕ್ಷಣೆಗಾಗಿ ಹೋರಾಡುತ್ತಿದೆ ? ಬಹುಶಃ ಈ ಪ್ರಶ್ನೆಗೆ ಆ ಯುವಕರ ನಡುವೆಯೇ ಉತ್ತರ ದೊರಕಲಾರದು. ಸಮಾಜದ ತಳಮಟ್ಟದಲ್ಲಿ ತಮ್ಮದೇ ಆದ ನಿತ್ಯ ಬದುಕಿನ ಬವಣೆಯೊಂದಿಗೆ ಜೀವನೋಪಾಯದ ಮಾರ್ಗಗಳ ಶೋಧದಲ್ಲಿರುವ ಜನರನ್ನು ಸಮೂಹ ಸನ್ನಿಗೊಳಪಡಿಸಿ ತಮ್ಮ ಸಾಂಸ್ಥಿಕ ಅಸ್ತಿತ್ವವನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮತೀಯವಾದಿ ಸಂಘಟನೆಗಳು ಸುಭದ್ರ ಬುನಾದಿಯೊಂದಿಗೆ ನೆಲೆ ಕಂಡುಕೊಂಡಿವೆ.
ಈ ಸಾಂಸ್ಥಿಕ ನೆಲೆಗಳನ್ನು ನಿಯಂತ್ರಿಸುವ ನೈತಿಕ ಹೊಣೆಗಾರಿಕೆ ಸರ್ಕಾರಗಳ ಮೇಲಿರುತ್ತದೆ. ದುರಂತ ಎಂದರೆ ಚುನಾಯಿತ ಸರ್ಕಾರಗಳು ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನೂ ಮರೆತು ಮತೀಯ ಪಡೆಗಳನ್ನು ಸಮರ್ಥಿಸುತ್ತಲೋ, ಖಂಡಿಸುತ್ತಲೋ ಕಾಲ ಕಳೆಯುತ್ತವೆ. ಹುಬ್ಬಳ್ಳಿಯ ಘಟನೆಗೆ ಕಾರಣರಾದವರು ಕಲ್ಲು ತೂರಿದ ಅಮಾಯಕ ಹುಡುಗರಷ್ಟೇ ಅಲ್ಲ. ಅಥವಾ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಯುವಕ ಮಾತ್ರ ಅಲ್ಲ. ಈ ಯುವಕರ ಹಿಂದೆ ಒಂದು ಸಾಂಘಿಕ ಶಕ್ತಿ ಇದೆ. ತಮ್ಮ ನಿತ್ಯ ಬದುಕಿನಲ್ಲಿ ಯಾವುದೇ ವ್ಯಕ್ತಿಯೂ ಧಾರ್ಮಿಕ ಭಾವನೆಗಳ ಬಗ್ಗೆ ಚಿಂತಿತನಾಗುವುದಿಲ್ಲ. ಅಥವಾ ಧಾರ್ಮಿಕ ಆಚರಣೆಗಳಲ್ಲಿ ಉಂಟಾಗುವ ವ್ಯತ್ಯಯಗಳು ವ್ಯಕ್ತಿಗತವಾಗಿ ಯಾರನ್ನೂ ಬಾಧಿಸುವುದೂ ಇಲ್ಲ.
ಈ ʼಧಾರ್ಮಿಕ ಭಾವನೆಗಳಿಗೆ ʼ ಒಂದು ಸಾಂಸ್ಥಿಕ ಸ್ವರೂಪ ನೀಡಿ, ಕಾಣದ ಕೈಗಳಿಂದ ನಿಯಂತ್ರಿಸಲ್ಪಡುವ ಈ ಸಾಂಸ್ಥಿಕ ಅಸ್ತಿತ್ವವನ್ನು ಸಂರಕ್ಷಿಸಲು ಸಮಾಜದ ಒಳಗಿನಿಂದಲೇ ಒಂದು ಸಂಘಟನಾತ್ಮಕ ಶಕ್ತಿಯನ್ನು ರೂಪಿಸಿ, ತಮ್ಮ ನಿಯಂತ್ರಣಾಧಿಕಾರವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಕಾವಲುಪಡೆಗಳನ್ನು ಸೃಷ್ಟಿಸುವ ಒಂದು ವ್ಯವಸ್ಥಿತ ಸಂಚು ಇಲ್ಲಿ ಕಾಣುತ್ತದೆ.
ಜಾತಿ ಮತಗಳ ಅಸ್ಮಿತೆಗಳ ಚೌಕಟ್ಟಿನಲ್ಲಿ ನಿರ್ಬಂಧಿಸಲ್ಪಡುವ ಯುವ ಪೀಳಿಗೆಯ ಮನಸುಗಳನ್ನು ಸಮನ್ವಯದ ಬದುಕಿಗೆ ಹೊಂದಿಕೊಳ್ಳುವಂತೆ ಮಾಡಬೇಕಾದ ಈ ಸಾಂಸ್ಥಿಕ ನೆಲೆಗಳು, ಅಧಿಕಾರ ರಾಜಕಾರಣದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಇದೇ ಯುವ ಪಡೆಗಳನ್ನು ಹಿಂಸಾತ್ಮಕ ಮಾರ್ಗಗಳಿಗೆ ಪ್ರಚೋದಿಸುತ್ತವೆ. ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ಪೋಸ್ಟ್ ಒಂದನ್ನು ಸಾಮಾಜಿಕ ತಾಣದಲ್ಲಿ ಹರಡುವ ಯುವಕ, ಇದರಿಂದ ಕೆರಳಿ ಸಮಾಜದಲ್ಲಿ ಕ್ಷೋಭೆ ಉಂಟುಮಾಡುವ ಪುಂಡ ಪಡೆಗಳು, ದೆಹಲಿಯ ಜಹಂಗೀರ್ಪುರಿಯಲ್ಲಿ ಹನುಮ ಜಯಂತಿಯ ಮೆರವಣಿಗೆಯ ಮೇಲೆ ಕಲ್ಲೆಸೆಯುವ ಯುವಕರು ಈ ಎಲ್ಲರೂ ಇಂತಹ ಒಂದು ಅಗೋಚರ ಸಾಂಸ್ಥಿಕ ನೆಲೆಗಳಿಂದ ನಿಯಂತ್ರಿಸಲ್ಪಡುತ್ತಾರೆ.
ತಮ್ಮ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ನಿಷ್ಪ್ರಯೋಜಕವಾದ ಚಟುವಟಿಕೆಗಳಿಗೆ ಈ ಯುವಕರು ಬಲಿಯಾಗುತ್ತಾರೆ. ಈ ಒಂದು ಪೀಳಿಗೆಯಲ್ಲಿ ಸೃಷ್ಟಿಸಲಾಗುವ ಭಾವಾವೇಶ, ಉನ್ಮಾದ, ಅಂಧಾಭಿಮಾನ ಮತ್ತು ಹಿಂಸಾತ್ಮಕ ಧೋರಣೆ, ಯಾವುದೋ ಅಗೋಚರ ಶಕ್ತಿಯೊಂದನ್ನು ರಕ್ಷಿಸುತ್ತದೆ. ಈ ಅಗೋಚರ ಶಕ್ತಿಗಳೇ ಸಾಮಾಜಿಕ ಕ್ಷೋಭೆ ಮತ್ತು ಸಾಮುದಾಯಿಕ ವಿಘಟನೆಯ ಫಲಾನುಭವಿಗಳಾಗಿರುತ್ತವೆ.
ಯುವ ಮನಸುಗಳಲ್ಲಿ ಅನ್ಯಮತ ದ್ವೇಷ, ಜಾತಿ ಶ್ರೇಷ್ಠತೆ, ಪುರುಷ ಪ್ರಧಾನ ಅಹಮಿಕೆ, ಸಾಮಾಜಿಕ ಮೇಲರಿಮೆ ಮತ್ತು ಮತಭೇದದ ಬೀಜಗಳನ್ನು ಬಿತ್ತುವ ಮೂಲಕ, ಸಮಾಜದಲ್ಲಿ ಶಾಶ್ವತ ಬಿರುಕುಗಳನ್ನು ಸೃಷ್ಟಿಸುವುದರಲ್ಲಿ ಈ ಫಲಾನುಭವಿ ಸಂಘಟನೆಗಳು, ಸಂಸ್ಥೆಗಳು ಯಶಸ್ವಿಯಾಗುತ್ತವೆ.
ಈ ಸಾಂಸ್ಥಿಕ ನೆಲೆಗಳು ಅಧಿಕಾರ ರಾಜಕಾರಣದಲ್ಲಿ ತಮ್ಮ ಅಸ್ತಿತ್ವವನ್ನು ಗುರುತಿಸಿಕೊಳ್ಳಲಾರಂಭಿಸಿದಾಗ ಇಡೀ ರಾಜಕೀಯ ಕ್ಷೇತ್ರವೇ ಕಲುಷಿತವಾಗಿಬಿಡುತ್ತದೆ. ಭಾರತ ಇಂತಹ ಒಂದು ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ನೆರವಾಗಬೇಕಿದ್ದ ಬಹುಸಾಂಸ್ಕೃತಿಕ ನೆಲೆಗಳಲ್ಲಿ ಇದ್ದಂತಹ ಒಳಬಿರುಕುಗಳನ್ನೇ ಬಳಸಿಕೊಂಡ ಹಿಂದುತ್ವ ರಾಜಕಾರಣ ಭಾರತದ ಯುವ ಪೀಳಿಗೆಯನ್ನು ವಿಭಿನ್ನ ಮಾರ್ಗದಲ್ಲಿ ಕೊಂಡೊಯ್ದಿದೆ.
ಬಹುತ್ವ ಸಂಸ್ಕೃತಿಯನ್ನು ಕಾಪಾಡಬೇಕಿದ್ದ ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳು ತಮ್ಮೊಳಗಿನ ವಿಘಟನೆಯ ಕಾರಣದಿಂದಾಗಿಯೇ ಇಂದು ಹಿಂದೂ ಮತ್ತು ಮುಸ್ಲಿಂ ಮತೀಯವಾದಕ್ಕೆ ಬಲಿಯಾಗುತ್ತಿವೆ. ಯುವ ಜನಾಂಗದಲ್ಲಿ ಇರುವ ಉತ್ಸಾಹ ಮತ್ತು ಸ್ಪೂರ್ತಿಯನ್ನು ಸಮಾಜಮುಖಿ ಮಾರ್ಗದಲ್ಲಿ ಬಳಸಿಕೊಂಡು ಒಂದು ಸೌಹಾರ್ದಯುತ ಸಮಾಜವನ್ನು ಕಟ್ಟಲು ಮುಂದಾಗಬೇಕಾದ ಹೊತ್ತಿನಲ್ಲಿ, ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳು ಈ ಯುವ ಮನಸುಗಳಲ್ಲಿ ಧಾರ್ಮಿಕ ಉನ್ಮಾದವನ್ನು ಹೆಚ್ಚಿಸುವ ಮೂಲಕ ತಮ್ಮ ಸಾಂಸ್ಥಿಕ ನೆಲೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ.
ತಾವು ಅನುಸರಿಸುವ, ಅನುಕರಿಸುವ ಮತ್ತು ಆಚರಿಸುವ ಧರ್ಮ ಮತ್ತು ಮತೀಯ ಆಚರಣೆಗಳ ಮೂಲ ಸ್ವರೂಪವನ್ನೂ ಅರಿಯದ ಯುವ ಪೀಳಿಗೆ, ಮತಾಂಧ ನಾಯಕರ ಅಣತಿಯಂತೆ ನಡೆಯುತ್ತಿರುವುದರಿಂದಲೇ ಹುಬ್ಬಳ್ಳಿ, ಜಹಂಗೀರಪುರ ಸಂಭವಿಸುತ್ತದೆ. ಅಥವಾ ಕೇರಳದಲ್ಲಿ ನಡೆಯುತ್ತಿರುವಂತಹ ಹತ್ಯಾಸರಣಿಗೆ ಕಾರಣವಾಗುತ್ತವೆ. ಎಡಪಕ್ಷಗಳು ಅಧಿಕಾರದಲ್ಲಿರುವ ಕೇರಳದಲ್ಲೂ ಸಹ ಎಸ್ಡಿಪಿಐ ಮತ್ತು ಆರೆಸ್ಸೆಸ್ ನಡುವಿನ ಸಂಘರ್ಷದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ.
ಇದನ್ನು ಸಾಂಸ್ಕೃತಿಕ ಸಂಘರ್ಷ ಎನ್ನುವುದಕ್ಕಿಂತಲೂ ಮತಾಂಧ ಸಂಘಟನೆಗಳ ನಡುವಿನ ಅಸ್ತಿತ್ವದ ಸಂಘರ್ಷ ಎಂದು ಪರಿಗಣಿಸಿದರೆ, ಮತಾಂಧತೆಯ ಒಳಸುಳಿಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ತಾವು ಹಿಂಸಾತ್ಮಕ ಮಾರ್ಗವನ್ನು ಅನುಸರಿಸುವುದಿಲ್ಲ ಎಂದು ಶಪಥ ಮಾಡುವ ಮತೀಯ ಸಂಘಟನೆಗಳು ಕೇರಳದಲ್ಲಿ ನಡೆದಂತಹ ಹತ್ಯೆಗಳು ಸಂಭವಿಸಿದಾಗ, ನೇಪಥ್ಯಕ್ಕೆ ಸರಿಯುತ್ತವೆ.
ಹುಬ್ಬಳ್ಳಿಯಂತಹ ಘಟನೆಗಳು ಸಂಭವಿಸಿದಾಗ ಅದನ್ನು ಕಿಡಿಗೇಡಿಗಳ ಕೃತ್ಯ ಎಂದು ಬಣ್ಣಿಸಿ ಸುಮ್ಮನಾಗುತ್ತವೆ. ಸರ್ಕಾರದ ದೃಷ್ಟಿಯಲ್ಲಿ ಇಂತಹ ಘಟನೆಗಳು ಕೇವಲ ಕಾನೂನು ಸುವ್ಯವಸ್ಥೆಯ ಪ್ರಶ್ನೆಯಾಗಿಯೇ ಉಳಿಯುವುದರಿಂದ, ಅಗೋಚರ ಸಾಂಘಿಕ ನೆಲೆಗಳು ತಮ್ಮ ಭದ್ರಕೋಟೆಗಳಲ್ಲಿ ಸುರಕ್ಷಿತವಾಗಿ ಉಳಿಯುವುದು ಸಾಧ್ಯವಾಗುತ್ತದೆ.
ಆಡಳಿತಾರೂಢ ರಾಜಕೀಯ ಪಕ್ಷಗಳಿಗೆ ಸಮಾಜದ ನಾಡಿ ಮಿಡಿತ ಅರ್ಥವಾಗುವಂತಿದ್ದರೆ, ಈ ರೀತಿಯ ಕ್ಷೋಭೆಯ ಮೂಲ ಕಾರಣಗಳನ್ನು ಶೋಧಿಸಿ, ನಿಯಂತ್ರಿಸುವುದು ಕಷ್ಟವಾಗಲಿಕ್ಕಿಲ್ಲ. ದುರಂತ ಎಂದರೆ ಭಾರತದ ಪ್ರಜಾತಂತ್ರ ವ್ಯವಸ್ಥೆ ಇಂದು ಮತೀಯ ರಾಜಕಾರಣದ ನೆಲೆಯಾಗಿದೆ. ಸಂವಿಧಾನವನ್ನು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿನಿಧಿಸಬೇಕಾದ ಜನಪ್ರತಿನಿಧಿಗಳು ಹಿಂದೂ ಅಥವಾ ಮುಸ್ಲಿಂ ಮತಾಂಧ ಸಂಘಟನೆಗಳ ವಕ್ತಾರರಂತೆ ವರ್ತಿಸುವುದು ಸಾಮಾನ್ಯವಾಗಿಹೋಗಿದೆ.
ತಮ್ಮ ರಾಜಕೀಯ ಭೂಮಿಕೆಯ ವಿಸ್ತರಣೆಗಾಗಿ ಮತೀಯ ನೆಲೆಗಳನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಂತಾದ ಪಕ್ಷಗಳು ಸಾಮಾಜಿಕ ಸಮನ್ವಯಕ್ಕಿಂತಲೂ ಹೆಚ್ಚಿನ ಪ್ರಾಶಸ್ತ್ಯವನ್ನು ಸಾಮುದಾಯಿಕ ಅಸ್ಮಿತೆಗಳಿಗೆ ನೀಡುತ್ತಿರುವುದರಿಂದಲೇ ಓಲೈಕೆ ರಾಜಕಾರಣ, ತುಷ್ಟೀಕರಣ ಮುಂತಾದ ಪದಗಳು ಅರ್ಥಹೀನವಾಗುತ್ತಿವೆ. ಜಾತಿ, ಮತ ಮತ್ತು ಧಾರ್ಮಿಕ ಅಸ್ಮಿತೆಗಳನ್ನು ಅವಲಂಬಿಸದೆ ಹೋದರೆ ಈ ಮೂರೂ ಪಕ್ಷಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತವೆ.
ಅಧಿಕಾರ ರಾಜಕಾರಣಕ್ಕೆ ನೆರವಾಗುವ ಕಾರ್ಪೋರೇಟ್ ಮಾರುಕಟ್ಟೆಯ ಶಕ್ತಿಗಳನ್ನು ಓಲೈಸುತ್ತಲೇ ತಮ್ಮ ಈ ಅಸ್ತಿತ್ವವನ್ನು ವಿಸ್ತರಿಸಿಕೊಳ್ಳಲು ಹವಣಿಸುತ್ತಿರುವ ಮೂರೂ ರಾಜಕೀಯ ಪಕ್ಷಗಳು, ಯುವ ಪೀಳಿಗೆಗೆ ಒಂದು ಮೌಲ್ಯಯುತವಾದ ರಾಜಕೀಯ ವಾತಾವರಣವನ್ನು ನಿರ್ಮಿಸಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
ಇಂದು ಯುವ ಪೀಳಿಗೆಯಲ್ಲಿ ಹಲವು ರೀತಿಯ ಕನಸುಗಳಿವೆ. ಈ ಕನಸುಗಳು ರೆಕ್ಕೆ ಪುಕ್ಕವಿಲ್ಲದೆ ಯಾವ ದಿಕ್ಕಿನಲ್ಲಿ ಬೇಕಾದರೂ ಸಂಚರಿಸುತ್ತವೆ. ಸ್ವಾತಂತ್ರ್ಯ ಮತ್ತು ಸ್ವೇಚ್ಚಾಚಾರದ ನಡುವಿನ ಸೂಕ್ಷ್ಮ ವ್ಯತ್ಯಾಸವನ್ನು ಗ್ರಹಿಸುವ ಸಾಮರ್ಥ್ಯವನ್ನೂ ಕಳೆದುಕೊಂಡಿರುವ ಈ ಯುವ ಪೀಳಿಗೆಗೆ ಭಾರತದ ಬಹುಸಾಂಸ್ಕೃತಿಕ ನೆಲೆಗಳಲ್ಲಿ ಮುಕ್ತ ಅವಕಾಶ ನೀಡುವುದು,. ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಉಂಟುಮಾಡುವಂತಹ ಒಂದು ಸೌಹಾರ್ದ ವಾತಾವರಣವನ್ನು ನಿರ್ಮಿಸುವುದು ಸಮಾಜದ ನೈತಿಕ ಜವಾಬ್ದಾರಿಯಾಗಿದೆ.
ಈ ಜವಾಬ್ದಾರಿಯನ್ನು ನಿರ್ವಹಿಸುವ ನೈತಿಕತೆಯನ್ನು, ಮೌಲ್ಯಯುತ ಅರ್ಹತೆಯನ್ನು ಪ್ರಧಾನ ರಾಜಕೀಯ ಪಕ್ಷಗಳು ಕಳೆದುಕೊಂಡಿವೆ. ಮಾರುಕಟ್ಟೆಯ ಪ್ರಲೋಭನೆಗೊಳಗಾಗಿ ತಮ್ಮ ಸ್ವಂತಿಕೆಯನ್ನೇ ಕಳೆದುಕೊಂಡಿರುವ ಮಾಧ್ಯಮಗಳು ಅಧಿಕಾರ ರಾಜಕಾರಣದ ಬಾಲಂಗೋಚಿಗಳಾಗಿರುವುದರಿಂದ ತಮ್ಮ ಸಾಮಾಜಿಕ ಜವಾಬ್ದಾರಿಯಿಂದ ವಿಮುಖವಾಗಿವೆ.
ಸಮಾಜದಲ್ಲಿ ಸಂಭವಿಸುವ ಕ್ಷೋಭೆಯನ್ನು ಮತ್ತಷ್ಟು ತೀಕ್ಷ್ಣಗೊಳಿಸುವ ರೀತಿಯಲ್ಲಿ ಸುದ್ದಿಗಳನ್ನು ಬಿತ್ತರಿಸುವ ವಿದ್ಯುನ್ಮಾನ ಸುದ್ದಿಮನೆಗಳು ಮತ್ತು ಅದರ ನಿರೂಪಕರು, ಯಾವುದೋ ಒಂದು ಪಕ್ಷದ ಸೈದ್ಧಾಂತಿಕ ನೆಲೆಗಳಲ್ಲಿ ಅಥವಾ ಮತೀಯ ಸಾಂಸ್ಥಿಕ ನೆಲೆಗಳಲ್ಲಿ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳುತ್ತಿರುವುದರಿಂದ, ಯುವ ಪೀಳಿಗೆಯನ್ನು ಸರಿದಾರಿಗೆ ತರುವ ನೈತಿಕತೆಯನ್ನು ಕಳೆದುಕೊಂಡಿವೆ. ಸುದ್ದಿಮನೆಗಳು ನಡೆಸುವ ಚರ್ಚೆಗಳು ಮತ್ತು ಚರ್ಚೆಗೆ ಆಹ್ವಾನಿಸಲಾಗುವ ವ್ಯಕ್ತಿಗಳನ್ನು ಗಮನಿಸಿದಾಗ, ಕೆಲವು ಅಪವಾದಗಳನ್ನು ಹೊರತುಪಡಿಸಿ, ಇಡೀ ಮಾಧ್ಯಮ ವಲಯ ನೈತಿಕವಾಗಿ ಅವನತಿ ಹೊಂದಿರುವುದು ಸ್ಪಷ್ಟವಾಗುತ್ತದೆ.
ಇಂತಹ ವಿಷಮ ಸನ್ನಿವೇಶದಲ್ಲಿ ದಿಕ್ಕುತಪ್ಪಿದಂತೆ ಕಾಣುತ್ತಿರುವ ಯುವ ಪೀಳಿಗೆಗೆ ಸರಿದಾರಿಯನ್ನು ತೋರುವುದಾದರೂ ಯಾರು ? ತೋರುವುದಾದರೂ ಹೇಗೆ? ರಾಮಭಕ್ತರ ಮೇಲೆ, ಹನುಮ ಆರಾಧಕರ ಮೇಲೆ ಕಲ್ಲೆಸೆಯುವ ಮುಸ್ಲಿಂ ಯುವಕರು, ಮಸೀದಿಯ ಮೇಲೆ ಕಲ್ಲೆಸೆಯುವ ಹಿಂದೂ ಹುಡುಗರು, ಸಾಮಾಜಿಕ ತಾಣದ ಒಂದು ಸಾಧಾರಣ ಪೋಸ್ಟ್ನಿಂದ ಉನ್ಮಾದಕ್ಕೊಳಗಾಗುವ ಯುವ ಪೀಳಿಗೆ, ಲೇಖನಿ ಕುಂಚ ಹಿಡಿಯುವ ಕೈಗಳಲ್ಲಿ ಲಾಂಗು ಮಚ್ಚು ತಲವಾರು ಪಿಸ್ತೂಲುಗಳನ್ನು ಹಿಡಿಯುವ ಯುವ ಜನಾಂಗ ಇವರಾರೂ ವಸ್ತುಶಃ ದಿಕ್ಕುತಪ್ಪಿದವರಲ್ಲ. ದಿಕ್ಕುಗಾಣದವರು.
ಏಕೆಂದರೆ ಈ ಯುವ ಪೀಳಿಗೆ ಯಾವ ದಿಕ್ಕಿನಲ್ಲಿ ಹೋದರೆ ಒಂದು ಸೌಹಾರ್ದಯುತ ಬದುಕು ಸಾಧ್ಯ ಎಂದು ತೋರಿಸಬೇಕಾದ ಪ್ರಜ್ಞಾವಂತ ಮನಸುಗಳು ಇಂದು ಹಿತವಲಯಗಳಲ್ಲಿ ಅಡಗಿ ಕುಳಿತಿವೆ. ವಾಮ ಮಾರ್ಗಗಳಿಗೆ ಪ್ರಚೋದಿಸುವ ಕಾಣದ ಕೈಗಳು ಈ ಯುವಜನಾಂಗದಲ್ಲಿ ಪ್ರೀತಿ, ವಾತ್ಸಲ್ಯ, ಭ್ರಾತೃತ್ವದ ಬದಲು ದ್ವೇಷ, ಅಸೂಯೆ, ಮತ್ಸರಗಳನ್ನು ಬೆಳೆಸುತ್ತಿವೆ. ಜಾತಿ, ಮತ, ಧಾರ್ಮಿಕ ಉನ್ನಾದಕ್ಕೊಳಗಾಗಿರುವ ಯುವ ಜನಾಂಗ ತನ್ನ ವಿವೇಕ ಮತ್ತು ವಿವೇಚನೆ ಕಳೆದುಕೊಳ್ಳುವುದು ಸ್ವಾಭಾವಿಕ.
ಆಳುವ ವರ್ಗಗಳು ಉದ್ದೇಶಪೂರ್ವಕವಾಗಿಯೇ, ತಮ್ಮ ಸ್ವಾರ್ಥ ಸಾಧನೆಗಾಗಿ ವಿವೇಕರಹಿತವಾಗಿ ವರ್ತಿಸುತ್ತವೆ. ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುವ ಸಂಸ್ಥೆಗಳು ವಿವೇಚನೆ ಇಲ್ಲದೆ ಸರ್ಕಾರದ ಆದೇಶಗಳನ್ನು ಪಾಲಿಸುತ್ತವೆ. ಈ ಹೊತ್ತಿನಲ್ಲಿ ಜಾಗೃತವಾಗಬೇಕಾದ್ದು ನಾಗರಿಕ ಪ್ರಜ್ಞೆ . ಸಾಮಾಜಿಕ ಕಾಳಜಿ ಮತ್ತು ಕಳಕಳಿ, ಮಾನವೀಯ ಮೌಲ್ಯಗಳನ್ನು ಜೀವಂತವಾಗಿರಿಸಲು ಶ್ರಮಿಸಬೇಕಾದ್ದು ನಮ್ಮ ಸಮಾಜ. ಈ ಸಮಾಜ ಪ್ರತಿಬಾರಿ ಎಡವಿದಾಗಲೂ ವಿಧ್ವಂಸಕ ಶಕ್ತಿಗಳು, ವಿಭಜಕ ಶಕ್ತಿಗಳು ವಿಜೃಂಭಿಸುತ್ತವೆ. ಇಂತಹ ಒಂದು ಸಂದಿಗ್ಧತೆಗೆ ಕರ್ನಾಟಕ, ಭಾರತ ಸಾಕ್ಷಿಯಾಗುತ್ತಿದೆ.
ಜಹಂಗೀರಪುರದಿಂದ ಹುಬ್ಬಳ್ಳಿಯವರೆಗೆ ಇದು ಢಾಳಾಗಿ ಕಾಣುತ್ತಿದೆ. ಪ್ರಗತಿಪರ ಎಂದು ಬೆನ್ನುತಟ್ಟಿಕೊಳ್ಳುವ ಸಂಘಟನೆಗಳು, ಎಡಪಂಥೀಯ ಚಳುವಳಿಗಳು, ಮಹಿಳಾ ಸಮೂಹಗಳು, ಶೋಷಿತ ತಳಸಮುದಾಯಗಳನ್ನು ಪ್ರತಿನಿಧಿಸುವ ದಲಿತ ಸಂಘಟನೆಗಳು ಈ ನೈತಿಕ ಜವಾಬ್ದಾರಿಯನ್ನು ಹೆಗಲೇರಿಸಿಕೊಳ್ಳುವ ಕಾಲ ಸನ್ನಿಹಿತವಾಗಿದೆ. ಇಡೀ ಯುವ ಜನಾಂಗ ನಮ್ಮತ್ತ ನೋಡುತ್ತಿದೆ. ನಾವು ಅವರತ್ತ ಹೋಗುತ್ತಿದ್ದೇವೆಯೇ ? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ7 days agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ7 days agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ4 days agoಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
-
ದಿನದ ಸುದ್ದಿ4 days agoಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

