ದಿನದ ಸುದ್ದಿ
ಐತಿಹಾಸಿಕ ಚರಿತ್ರೆಯುಳ್ಳ ನಲ್ಕುದುರೆ ಗ್ರಾಮದ ಸಮುದಾಯ ಭವನ ಮೇ 15 ರಂದು ಲೋಕಾರ್ಪಣೆ
- ಹಾಲೇಶ್ ಹೆಚ್. ಎಸ್. ಹಂಚಿನಮನೆ ನಲ್ಕುದುರೆ
ಮೇ 15 ರಂದು ನೆರವೇರಲಿರುವ ಚನ್ನಗಿರಿ ತಾಲ್ಲೂಕಿನ ನಲ್ಕುದುರೆ ಗ್ರಾಮದ ಶ್ರೀ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶೇಷ ಲೇಖನ.
ಭದ್ರಾ ಅಚ್ಚುಕಟ್ಟು ಪ್ರದೇಶ, ಅರೆ ಮಲೆನಾಡಿನ ಬಯಲು ಸೀಮೆ, ಸಮಶೀತೋಷ್ಣ ವಲಯ, ಭತ್ತ ಗದ್ದೆಗಳ ಸಾಲು, ಕಂಗೊಳಿಸುವ ಆಡಿಕೆ – ತೆಂಗಿನ ಬೀಡು, ಭದ್ರಾ ನದಿಯ ಹುಸಿರಾದ ಐತಿಹಾಸಿಕ ಚರಿತ್ರೆಯುಳ್ಳ ಗ್ರಾಮ ಚನ್ನಗಿರಿ ತಾಲೂಕಿನ ನಲ್ಕುದುರೆ. ಅಗ್ರಹಾರ ಕೇಂದ್ರವಾಗಿದ್ದ ಇಲ್ಲಿನ ಪುರಾತನ ದೇವಾಲಯಗಳು, ಶಾಸನ, ವೀರಗಲ್ಲು, ಮಾಸ್ತಿಗಲ್ಲುಗಳು ಇಂದಿಗೂ ಸಂಶೊಧನೆಗೆ ಗ್ರಾಸವಾಗಿವೆ.
ಈ ಗ್ರಾಮದಲ್ಲಿ ಬಹುತೇಕ ಸೌಲಭ್ಯಗಳಿದ್ದು, ಮಾನವ ಕಲ್ಯಾಣಾರ್ಥ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನ ಇದೇ ಮೇ 15 ರಂದು ಲೋಕಾರ್ಪಣೆ ಯಾಗಲಿದೆ.
ನಲ್ಕುದುರೆ ಗ್ರಾಮ ಪಂಚಾಯತಿಗೆ ಗೋಮಾಳ, ನಲ್ಕುದುರೆ ಕ್ಯಾಂಪ್ ಕೂಡ ಸೇರಿದ್ದು, ಸುಮಾರು ಮೂರರಿಂದ ನಾಲ್ಕು ಸಾವಿರ ಸಂಖ್ಯೆಯ ಈ ಗ್ರಾಮದ ಜನತೆ ಪ್ರೀತಿ, ಶಾಂತಿ, ಸಹಕಾರ, ಅನ್ಯೋನ್ಯತೆಯ ಬದುಕಿಗೆ ಮಾದರಿಯಾಗಿದ್ದಾರೆ. ಕಾಯಕವೇ ಕೈಲಾಸವೆಂದು ಭಾವಿಸಿ ವೃತ್ತಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಗ್ರಾಮದ ಜನತೆ ಮದುವೆ, ಸಭೆ – ಸಮಾರಂಭ ಆಯೋಜನೆಗಾಗಿ ಸುಮಾರು 25 ರಿಂದ 30 ಕಿಲೋಮೀಟರ್ ದೂರ ಹೋಗಬೇಕಿತ್ತು. ಅಲ್ಲದೆ ನಗರದ ಸಮುದಾಯದ ಭವನಗಳಿಗೆ ಅತಿ ಹಣ ಹೊಂದಿಸುವುದು ಬಡವರಿಗೆ, ಸಾಮಾನ್ಯ ವರ್ಗದವರಿಗೆ ಸಾಧ್ಯವಾಗದ ಮಾತಾಗಿತ್ತು.
ವಿವಿಧ ಬಗೆಯ ಕಾರ್ಮಿಕರ ಕೊರತೆಯಿಂದ ಹಳ್ಳಿಯಲ್ಲಿ ಸಮಾರಂಭ ಮಾಡುವುದು ಯುದ್ಧಕ್ಕೆ ಸಿದ್ಧತೆ ಮಾಡಿಕೊಂಡಂತಾಗುತಿತ್ತು. ಇದನ್ನರಿತ ಗ್ರಾಮದ ಜನತೆ ಸಾಂದರ್ಭಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತ ಕೊನೆಗೊಮ್ಮೆ ಅನೌಪಚಾರಿಕವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಭೆ ಕರೆದು ಸಮುದಾಯದ ಭವನ ನಿರ್ಮಾಣ ಮಾಡಲೇಬೇಕೆಂದು ತೀರ್ಮಾನಿಸಿ, ಕೈಲಾದ ಹಣ ಘೋಷಣೆ ಮಾಡಿದಲ್ಲದೆ ಅದಕ್ಕಾಗಿ ಸಮಿತಿ ರಚನೆ ಮಾಡಿದರು.
ಈ ಸಮಿತಿಯ ಕಾರ್ಯದರ್ಶಿಯಾಗಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀಯುತ ಹೆಚ್. ವಿ. ಸಿದ್ದಪ್ಪ ಹಂಚಿನಮನಿ ಇವರನ್ನು ಆಯ್ಕೆ ಮಾಡಲಾಯಿತು. ಇವರ ನೇತೃತ್ವದಲ್ಲಿ ಗ್ರಾಮದ ಮುಖಂಡರ ಸಹಯೋಗದೊಂದಿಗೆ ದೇಣಿಗೆ ಸಂಗ್ರಹ ಮೂಲಕ ಸಂಪೂರ್ಣಗೊಂಡು ಸಮಾರಂಭಗಳ ಆಯೋಜನೆಗೆ ಇದೀಗ ಭವನ ಸಜ್ಜಾಗಿ ನಿಂತಿದೆ.
ಈ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಯುತರು ಹಾಕಿದ ನಿರಂತರ ಶ್ರಮ, ಪರಿಶ್ರಮ, ಸಹಕಾರ, ವಿಶ್ವಾಸ ಹಾಗೂ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಗ್ರಾಮಸ್ಥರು, ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಕ್ತರು, ಮನೆ ದೇವರು ಎಂದು ಪೂಜಿಸುವ ಭಕ್ತಾದಿಗಳು, ಬೇರೆ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮದ ನೌಕರರು, ಗ್ರಾಮ ಪಂಚಾಯಿತಿಯ ಸದಸ್ಯರು, ಅಧ್ಯಕ್ಷರು, ತಾಲೂಕು ಪಂಚಾಯತ್ ಸದಸ್ಯರು, ವಿಧಾನ ಪರಿಷತ್, ವಿಧಾನಸಭೆ , ಲೋಕ ಸಭೆಯ ಹಾಲಿ ಹಾಗೂ ಮಾಜಿ ಮಂತ್ರಿಗಳು, ಇತ್ಯಾದಿ ಎಲ್ಲರ ತನು ಮನ ಧನ ಸಹಕಾರದೊಂದಿಗೆ ನಿರ್ಮಾಣವಾದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ ಲೋಕಾರ್ಪಣೆಯಾಗುತ್ತಿದೆ.
ಐತಿಹಾಸಿಕ ಹಿನ್ನೆಲೆಯ ಗ್ರಾಮ
ಈ ಗ್ರಾಮದಲ್ಲಿ ಸಾವಿರ ವರ್ಷಗಳ ಹಿಂದೆ ನಿರ್ಮಾಣವಾದ ರಾಷ್ಟ್ರಕೂಟ ಮತ್ತು ಚಾಲುಕ್ಯ ಶೈಲಿಯ ಪುರಾತನ ದೇವಾಲಯಗಳು, ವೀರಗಲ್ಲುಗಳು, ಮಾಸ್ತಿ ಕಲ್ಲುಗಳು, ಹೆಜ್ಜೆಗೊಂದು ದೇವಸ್ಥಾನ, ಅಗ್ರಹಾರ ಕೇಂದ್ರ ಹಾಗೂ 1802 ರಲ್ಲಿ ಲೂಯಿಸ್ ರೈಸ್ ಗುರುತು ಮಾಡಿರುವ ಬ್ರಹ್ಮಶ್ವರ್ ದೇವಾಲಯವಿದೆ. ಶಿವಲಿಂಗ, ನಂದಿ, ಭೈರವ, ಕೇಶವ, ನಾಗ ಮೂರ್ತಿಗಳು ಕಲೆಗೆ ಹೆಸರಾಗಿವೆ. ಅಲ್ಲದೆ ಈಶ್ವರ ದೇವಸ್ಥಾನದಲ್ಲಿ ಶಾಸನ ಹಳೆಗನ್ನಡದಲ್ಲಿದ್ದು ಇದರ ಮಾಹಿತಿ ಪರಿಪೂರ್ಣ ಪ್ರಕಟಿಸಬೇಕಾಗಿದೆ. ಸುಮಾರು 300 ವರ್ಷ ಇತಿಹಾಸ ಉಳ್ಳ ವೀರಭದ್ರಸ್ವಾಮಿಯ ದೇವಾಲಯ ಇತ್ತೀಚಿಗೆ ಜೀರ್ಣೋದ್ದಾರವಾಗಿದೆ. ವಿದ್ಯಾರಣ್ಯರು ತಾಮ್ರ ಪತ್ರ ನೀಡಿರುವ ಉಲ್ಲೇಖವಿದೆ.
ಶಿಥಿಲಾವಸ್ಥೆಯಲ್ಲಿರುವ ಇಲ್ಲಿನ ಕೆಲ ದೇವಸ್ಥಾನಗಳನ್ನು ಜೀರ್ಣೋದ್ದಾರ ಮಾಡಿ ಉಳಿಸುವ ಜೊತೆ ಮುಂದಿನ ಜನಾಂಗಕ್ಕೆ ಸ್ಥಳೀಯ ಇತಿಹಾಸದ ಅಂಶಗಳನ್ನು ತಿಳಿಸಬೇಕಾಗಿದೆ.
ನೀರಿನ ಹೊಂಡಗಳು
ಗ್ರಾಮದಲ್ಲಿ ಲಕ್ಕಣ್ಣನ ಕಟ್ಟೆ ಮತ್ತು ಕಲ್ಲೇಶ್ವರ ಹೊಂಡವಿದ್ದು, ಕೆರೆ ಮತ್ತು ಭದ್ರ ಕಾಲುವೆಗಳು ಕೃಷಿ, ವ್ಯವಸಾಯ ಮಾಡಲು ಅನುಕೂಲಕರ ವಾತಾವರಣವಿದೆ.
ರಾಜಕೀಯ ಛಾಪು
ರಾಜಕೀಯವಾಗಿ ತಮ್ಮದೇ ಆದ ವಿಶಿಷ್ಠ ಛಾಪು ಬಿಟ್ಟು ಹೋಗಿರುವ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದ ದಿವಂಗತ ಟಿ. ವಿ.ಚಂದ್ರಶೇಖರಪ್ಪನವರು ಹಾಗೂ ಪರಿಸರ ಮತ್ತು ತಂತ್ರಜ್ಞಾನ ರಾಜ್ಯ ಸಚಿವರಾಗಿದ್ದ ದಿವಂಗತ ಎನ್. ಜಿ ಹಾಲಪ್ಪನವರು ಇದೇ ಊರಿನವರು ಎಂಬುದು ಗ್ರಾಮದ ಹೆಗ್ಗಳಿಕೆ.
ಶಿವಮೊಗ್ಗದಿಂದ ಬೇರ್ಪಟ್ಟ ನಂತರ ನಲ್ಕುದುರೆ ಗ್ರಾಮ ಚನ್ನಗಿರಿ ತಾಲ್ಲೂಕಿನಲ್ಲಿ ಇದ್ದರೂ ಮಾಯಕೊಂಡ ಕ್ಷೇತ್ರಕ್ಕೆ ಸೇರಿದೆ. ಪ್ರಸ್ತುತ ಚನ್ನಗಿರಿ ತಾಲ್ಲೂಕಿಗೂ ಹಾಗೂ ಮಾಯಕೊಂಡಕ್ಕೂ ಕೊನೆಯ ಅಂಚಿನಲ್ಲಿ ಇರುವ ಕಾರಣ ರಾಜಕೀಯವಾಗಿ ನಿರ್ಲಕ್ಷ್ಯಕ್ಕೆ ಗುರಿಯಾಗದೆ ಸರ್ವರಂಗದಲ್ಲೂ ಈ ಗ್ರಾಮ ಅಭಿವೃದ್ಧಿ ಸಾಧಿಸಲು ರಾಜಕೀಯ ಧುರೀಣರು ಹಾಗೂ ಅಧಿಕಾರಿಗಳ ಸಹಾಯ ಸಹಕಾರದ ಹಸ್ತ ತಮ್ಮ ಗ್ರಾಮದ ಜೊತೆ ಸದಾ ಇರಲಿ ಎಂಬುದು ಗ್ರಾಮಸ್ಥರ ಆಶಯ.
(- ಹಾಲೇಶ್ ಹೆಚ್. ಎಸ್. ಹಂಚಿನಮನೆ ನಲ್ಕುದುರೆ
M.NO – 8867702396)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ5 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ5 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

