ಬಹಿರಂಗ
ಡಾಕಿನಿ ಎಂದರೆ ಬೌದ್ಧ ಭಿಕ್ಕುಣಿ / ಬೌದ್ಧ ಯೋಗಿಣಿ
- ಪರಶುರಾಮ್. ಎ
ಭಾರತದ ಬಹುಭಾಗ ಇತಿಹಾಸ, ಇತಿಹಾಸವೇ ಅಲ್ಲ. ಹಾಗೆಂದರೆ ಭಾರತಕ್ಕೆ ಇತಿಹಾಸವಿಲ್ಲ ಎಂದಲ್ಲ. ಭಾರತದ ಪ್ರಾಚೀನ ಇತಿಹಾಸವನ್ನು ಬೇಕೆಂದೆ ಮನುವಾದಿಗಳು ತಿರುಚಿದ್ದಾರೆ. ಬುದ್ಧ ಮತ್ತು ಆರ್ಯರ ನಡುವೆ ನಡೆದ ಈ ಇತಿಹಾಸವನ್ನು ಬೇಕೆಂದೆ ಮರೆಮಾಚಿದ್ದಾರೆ. ಹಾಗೂ ಮಕ್ಕಳಿಗೆ ಮಹಿಳೆಯರಿಗೆ ಮನೋರಂಜನಾ ಕಥೆಗಳನ್ನಾಗಿ ಮಾಡಿದ್ದಾರೆ ಎಂದು ಡಾ.ಬಿ.ಆರ್ ಅಂಬೇಡ್ಕರರು ಹೇಳಿರುವುದು ಎಷ್ಟು ಸತ್ಯವೆಂಬುದನ್ನು ನಾವು ಈಗ ಗಮನಿಸೋಣ.
ಈ ಮಾತಿನಿಂದ ನಮಗೆ ತಿಳಿಯುವುದೇನೆಂದರೆ ಒಂದು ಕಾಲದಲ್ಲಿ ಪ್ರಚಲಿತವಿದ್ದ ಬುದ್ಧ ಧರ್ಮವನ್ನು ಇತಿಹಾಸಕಾರರು ಬೇಕೆಂದೆ ನಿರ್ಲಕ್ಷಿಸಿದ್ದಾರೆ. ಮತ್ತು ತಿರಸ್ಕರಿಸಿದ್ದಾರೆ. ಇಂತಹ ಅದೆಷ್ಟೋ ನಿರ್ಲಕ್ಷಿತಗೊಂಡ ಬೌದ್ಧ ಇತಿಹಾಸವನ್ನು ಡಾ.ಬಿ.ಅಂಬೇಡ್ಕರರು ತಮ್ಮ ಅಪೂರ್ವ ಜ್ಞಾನ ಸಂಪತ್ತಿನಿಂದಾಗಿ ಬಯಲಿಗೆ ಎಳೆದಿದ್ದಾರೆ. ಅವರ ಪುಸ್ತಕ ಓದಿನ ದಾಹ ಇಂತಹ ಅಪೂರ್ವ ಇತಿಹಾಸದ ಮೇಲೆ ಬೆಳಕು ಚೆಲ್ಲಿದೆ. ಹಾಗೂ ಇತ್ತೀಚಿನ ಕೆಲವು ಸಂಶೋಧಕರು ಕೂಡಾ ಬೌದ್ಧ ಧರ್ಮಾವಲಂಬಿಗಳ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಿ ಬೆಳಕು ಚೆಲ್ಲಿದ್ದಾರೆ.
ಭಾರತದಲ್ಲಿ ಹುಟ್ಟಿದ ಬುದ್ಧ ಧರ್ಮವನ್ನು ಮತ್ತು ಅದರ ಅನುಯಾಯಿಗಳನ್ನು ವಿದೇಶಿ ಬ್ರಾಹ್ಮಣ ಆರ್ಯರು ಬೇಕುಂತಲೇ ತುಚ್ಛೀಕರಿಸಿ, ದುಷ್ಟೀಕರಿಸಿ, ಭಯ ಮತ್ತು ಕ್ಷುದ್ರರೆಂಬಂತೆ ಬಿಂಬಿಸಿದ್ದಾರೆ. “ಭಾರತದ ದಾರ್ಶನಿಕ ಚರ್ಚೆಗಳಲ್ಲಿ ದರ್ಶನವು ಇನ್ನೊಂದರ ಬಗ್ಗೆ ತಾತ್ವಿಕ ಭಿನ್ನಮತಗಳು ಸೂಚಿಸುವುದು ಸಾಮಾನ್ಯ. ಈ ಭಿನ್ನಮತಗಳು ಕೆಲವೊಮ್ಮೆ ಯುದ್ಧರೂಪಿಯಾಗಿ ಇರುತ್ತವೆ. ತಾತ್ವಿಕ ಭಿನ್ನಮತವು ತಾನಾಗಿಯೇ 1 ದೊಡ್ಡ ಸಮಸ್ಯೆಯಲ್ಲ. ಆದರೆ ತಾನು ಒಪ್ಪದ ವಿಚಾರಧಾರೆಯಯೂ ಇರಬಾರದು ಎಂಬ ಹಗೆತನದಲ್ಲಿ ಮತ್ತೊಂದನ್ನು ದುಷ್ಟೀಕರಿಸುವುದು ಸಮಸ್ಯೆ.
ಆಧುನಿಕ ರಾಜಕಾರಣದಲ್ಲಿ ಸೈದ್ಧಾಂತಿಕ ಗುಂಪುಗಳು ಹಗೆಗಳಾಗಿ ಕಾದಾಟ ಮಾಡುವಂತೆ ಚರಿತ್ರೆಯಲ್ಲಿ ಪಂಥಗಳು ಪರಸ್ಪರ ಸಂಘರ್ಷ ಮಾಡಿಸಿ ಭಾರತದ “ಅವೈದಿಕ” ಎನ್ನಲಾಗುವ ದಾರ್ಶನಿಕ ಧಾರೆ ಹಾಗೂ ಪಂಥಗಳನ್ನು ಏಕಕಾಲಕ್ಕೆ ವಿಶಾಲ ಸಮುದಾಯಗಳಿಂದ ಸ್ವೀಕಾರವನ್ನು ಸ್ಥಾಪಿತ ವರ್ಗದಿಂದ ವಿರೋಧವನ್ನು ಪಡೆದಿದ್ದವು. ವೈದಿಕ ಪುರಾಣಗಳು ತಮ್ಮ ವಿರೋಧಿಗಳನ್ನು ರಾಕ್ಷಸರನ್ನಾಗಿ ಚಿತ್ರಿಸುವಂತೆ ವೈದಿಕರು ದಾರ್ಶನಿಕರು ಕೂಡಾ “ಅವೈದಿಕ” ಭೌತವಾದಿ ದರ್ಶನ ಹಾಗೂ ಪಂಥಗಳನ್ನು ವಿಕೃತವಾಗಿ ಚಿತ್ರಿಸಲು ಇದನ್ನು ದಾರ್ಶನಿಕ ಅಮಾನುಷೀಕರಣ ಅಥವಾ ದುಷ್ಟೀಕರಣ ಎನ್ನಬಹುದು”. (ಕರ್ನಾಟಕ ನಾಥಪಂಥ- ರಹಮತ್ ತರೀಕೆರೆ. ಪುಟ 7).
ಹೀಗೇ ವಿರೋಧಿಗಳನ್ನು ವಿರೋಧಿಸುವ ಭರದಲ್ಲಿ ಉಪದ್ರವಿಗಳು, ರಾಕ್ಷಸರೆಂಬಂತೆ ಬಿಂಬಿತರಾದವರ ಸಾಲಿನಲ್ಲಿ ಬಹುತೇಕ ಬೌದ್ಧ ಅರಸರು, ಭಿಕ್ಕುಗಳು, ಭಿಕ್ಕುಣಿಗಳನ್ನು ಕಾಣಬಹುದು. ಈ ವೈದಿಕ ಧರ್ಮ ಕೇವಲ ದುಷ್ಟೀಕರಣವನ್ನು ಮಾತ್ರ ಮಾಡಿಲ್ಲ. ತಮ್ಮ ನಿಲುವುಗಳಿಗೆ ಹಿತಾಸಕ್ತಿ ಸ್ಥಾಪನೆಗೆ ಸಹಕರಿಸಿದ ವ್ಯಕ್ತಿಗಳು, ರಾಜರು, ಇತರರನ್ನು ದೈವತ್ವ ಮಟ್ಟಕ್ಕೆ ಸಹ ಏರಿಸಿದೆ. ಅದಕ್ಕೊಂದು ಉದಾಹರಣೆ “ಮಹಿಷಾಸುರ” ಒಂದು ಕಾಲದಲ್ಲಿ ಮಹಿಷನೂರು ಈಗ ಮೈಸೂರು ಆಗಿದೆ. ರಾಜನಾಗಿ ಆಳ್ವಿಕೆ ಮಾಡುತ್ತಿದ್ದ ಮಹಿಷಾಸುರನನ್ನು ವೈದಿಕರು ಉಪದೃವಿ ಕೇಡುಂಟು ಮಾಡುವ ರಾಕ್ಷಸನಂತೆ ಚಿತ್ರಿಸಿದ್ದಾರೆ.
ಮಹಿಷಾಸುರ ರಾಕ್ಷಸನಲ್ಲ ಈ ಭಾಗದ ಜನಪ್ರಿಯ ಜನಾನುರಾಗಿ ರಾಜ ಆತನೊಬ್ಬ ಬೌದ್ಧ ಧರ್ಮ ಪ್ರಚಾರಕನೂ ಕೂಡಾ ಹೌದು. ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ಅತ್ಯಂತ ವಿಶಾಲವಾಗಿ ನಿರ್ಮಿಸಿ ನಿಲ್ಲಿಸಿರುವ ಮಹಿಷಾಸುರನ ಪ್ರತಿಮೆ ಈತನದ್ದೇ ಆಗಿದೆ. ಅವನು ನಿಜವಾಗಿ ದುಷ್ಟನಾಗಿದ್ದರೆ, ಮೈಸೂರಿನಂಥ ಸುಂದರ ನಗರಕ್ಕೆ ಅವನ ಹೆಸರು ಇಡಲು ಸಾಧ್ಯವಾಗುತ್ತಿತ್ತೆ? ಅತ್ಯಂತ ಕ್ರೂರಿಯಾದ ವ್ಯಕ್ತಿಯ ಹೆಸರನ್ನು ನರನಿಗಾಗಲಿ ಸ್ಥಳಕ್ಕಾಗಲಿ ಇಟ್ಟಿರುವ ನಿದರ್ಶನ ಎಲ್ಲಿಯಾದರೂ ಉಂಟೆ? ಬದಲಿಗೆ ಮಹಿಷ ಜನಾನುರಾಗಿ ಆದ್ದರಿಂದ, ಜನೋದ್ದಾರಕ ಕೆಲಸ ಮಾಡಿದ್ದರಿಂದ ಅವನ ಹೆಸರನ್ನು ಮೈಸೂರಿಗೆ ಕೃತಜ್ಞಾಪೂರ್ವಕವಾಗಿ ಇಡಲಾಗಿದೆ.
ಇದು ಎಂಥವರಿಗಾದರೂ ಹೊಳೆಯುವ ಸಾಮಾನ್ಯ ವಿಷಯ.
ಮಹಿಷಾಸುರ ರಾಕ್ಷಸನಲ್ಲ, ಅವನು ಬೌದ್ಧ ಭಿಕ್ಕು. ಅವನ ನಿಜವಾದ ಹೆಸರು ಮಹಾದೇವ. ಸಾಮ್ರಾಟ್ ಅಶೋಕನ ಕಾಲದಲ್ಲಿ, ಬೌದ್ಧ ಗುರು ಮೊಗ್ಗಲಿತಿಸ್ಸನ ಬುದ್ಧಧಮ್ಮ ಪ್ರಚಾರಕ್ಕಾಗಿ ತೇರಾ ಮಹಾದೇವನನ್ನು ಮಹಿಷಮಂಡಲಕ್ಕೂ, ತೇರಾ ರಕ್ಕಿತ ಎಂಬುವವನನ್ನು ಬನವಾಸಿಗೂ ಕಳುಹಿಸಿದ. (ನೋಡಿ; ಸಿದ್ಧಸ್ವಾಮಿಯವರ ಅಪರೂಪ ಮಾಹಿತಿಯುಳ್ಳ ಸಂಶೋಧನಾ ಕೃತಿ – ಪ್ರಾಚೀನ ಅಸುರ ರಾಷ್ಟ್ರ 2016. ಪುಟ. 27ಮತ್ತು 81-116)
ಮಹಿಷನಿಗೆ ಅಸುರ ಎಂಬ ಹೆಸರನ್ನು ಕಿತ್ತುಹಾಕಿ ಮಹಿಷ ಬೌದ್ಧ. ಮಹಿಷ ಗೌತಮ ಅಥವಾ ಭಿಕ್ಕು ಮಹಾದೇವ ಎಂಬ ಹೆಸರನ್ನು ಇಡಬೇಕು. ಅಸುರ ಎಂಬುದು ಆರೋಪಿತ ಹೆಸರು. ಬೈಗುಳ ಅದು – ಹೆಂಡ ಕುಡುಕ ಎಂದು! ಅಸುರ ಎಂದರೆ ಸುರೆಯನ್ನು ಕುಡಿಯದವನು ಎಂದು ಅರ್ಥ.
ಇಲ್ಲಿ ಕುಡಿಯುವವರಿಗೇ ಗೌರವ! ಕುಡಿಯದವರಿಗೆ ಅವಮಾನ! ಎಂಥ ಅದ್ಭುತ ವ್ಯವಸ್ಥೆ ಬ್ರಾಹ್ಮಣ ಧರ್ಮದ್ದು ಭಲೇ! ಜನರ ಏಳಿಗೆಗೆ ಹೋರಾಡಿ ಚಾತುರ್ವರ್ಣ ವ್ಯವಸ್ಥೆಯನ್ನು ಧಿಕ್ಕರಿಸಿದ ಪ್ರಜಾಪ್ರೇಮಿಗಳನ್ನು ರಾಕ್ಷಸರೆಂದು ತೀರಾ ಕ್ರೂರಿಗಳನ್ನಾಗಿ ಪುರಾಣಗಳಲ್ಲಿ ಹಾರುವರು ಚಿತ್ರಿಸಿರುವುದು ಹಾರುವರೆಷ್ಟು ಮಹಾರಕ್ಕಸರೆಂದು ನಿಜಕ್ಕೂ ತಿಳಿಯುತ್ತದೆ.(ಹೆಚ್ಚಿನ ಓದಿಗಾಗಿ ಸಿದ್ಧಸ್ವಾಮಿಯವರ ಬೌದ್ಧ ರಾಜ ಮಹಿಷಾಸುರ ಪುಸ್ತಕ ಓದಿ). ಎಂದು ಕೆ.ಎಸ್ ಭಗವಾನ್ರವರು ರಾಮಮಂದಿರ ಏಕೆಬೇಡ? ಎಂಬ ತಮ್ಮ ಪುಸ್ತಕದಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಜಮ್ನಾದಾಸ್ ಎಂಬುವವರು ತಿರುಪತಿಯ ವೆಂಕಟೇಶ್ವರ ಒಂದು ಬೌದ್ಧ ದೇವಾಲಯವೆಂದು ಸಂಶೋಧನಾ ಪುಸ್ತಕವನ್ನೇ ರಚಿಸಿದ್ದಾರೆ. ಇದು ಕನ್ನಡಕ್ಕೇ ಸಹ ಅನುವಾದಗೊಂಡಿದೆ.
ಇದೇ ರೀತಿಯಲ್ಲಿ ಇಲ್ಲಿನ ಸ್ಥಳೀಯ ದೇವತೆಗಳ ಹೆಸರುಗಳನ್ನು ಸಹ ಒಂದು ಕಾಲದಲ್ಲಿ ತಮ್ಮ ಮಕ್ಕಳಿಗೆ ಇಡುವ ಪದ್ಧತಿಯಿತ್ತು. ಆದರೆ ಅವುಗಳನ್ನು ಮನುಸ್ಮೃತಿಯಲ್ಲಿ ಭೀಕರ ಅಪಾಯವುಂಟುಮಾಡುವ ಕೆಡುಕನ್ನು ತರುವ ಹೆಸರುಗಳೆಂದು ಪಟ್ಟಿ ಮಾಡಿ ಅಂತಹ ಹೆಸರುಗಳನ್ನು ದುಷ್ಟರು ಎಂಬಂತೆ ಬಿಂಬಿಸ ತೊಡಗಿದರು. ಅಲ್ಲದೇ ಭೀಷಣವಾದ ಹೆಸರುಳ್ಳ ಹೆಣ್ಣುಗಳನ್ನು ಮದುವೆಯಾಗಬಾರದು ಎಂದಿದೆ ಮನುಸ್ಮೃತಿ.
ಮನುಸ್ಮೃತಿಯ 3ನೇ ಅಧ್ಯಾಯದ 9ನೇ ಸೂತ್ರವು ‘ನಕ್ಷತ್ರಗಳ, ವೃಕ್ಷಗಳ, ನದಿಗಳ, ಕಿರಾತ ಜಾತಿಗಳು ವಾಸಿಸುವ ಬೆಟ್ಟಗಳ, ಪಕ್ಷಿಗಳ, ಹಾವುಗಳ, ದಸ್ಯುಗಳ ಹೆಸರುಗಳನ್ನು ಹೊಂದಿದ ಹಾಗೂ ಕ್ರೂರವಾದ ಭೀಷಣ ಹೆಸರುಗಳುಳ್ಳ ಹೆಣ್ಣನ್ನು ಮದುವೆಯಾಗಬಾರದು’ ಎಂದಿದೆ. ಅಂದರೆ ಮನುಸ್ಮೃತಿಯ ಕಾಲದಲ್ಲಿ ಹಾಗೂ ಅದಕ್ಕೂ ಮೊದಲು ವಿವಿಧ ಬೌದ್ಧ ಭಿಕ್ಕುಗಳ-ಭಿಕ್ಕುಣಿಯರ, ನದಿ, ಪರ್ವತ, ಪಕ್ಷಿಗಳ ದೇವತೆಗಳ ಅಥವಾ ಕ್ಷುದ್ರ ರೆಂದು ವೈದಿಕರು ಬಗೆದ ವ್ಯಕ್ತಿಗಳ ಹೆಸರನ್ನು ಇಡುವ ಸಂಪ್ರದಾಯವೊಂದಿತ್ತು ಎಂಬುದು ಗಮನಿಸಬೇಕಾದ ವಿಚಾರವಾಗಿದೆ.
ಬುದ್ಧನ ಕಾಲದಲ್ಲಿ ಬೌದ್ಧ ಸಂನ್ಯಾಸಿ, ಭಿಕ್ಕು -ಭಿಕ್ಕುಣಿಯಾಗಿದ್ದವರನ್ನು ಮುಂದೆ ಅವರನ್ನು ರಾಕ್ಷಸ- ರಾಕ್ಷಸಿ ಉಪದ್ರವಿಗಳೆಂಬಂತೆ ಬಿಂಬಿತರಾದವರಲ್ಲಿ ‘ಡಾಕಿನಿ’ ಎಂಬ ಬೌದ್ಧ ಭಿಕ್ಕುಣಿಯು ಸಹ ಒಬ್ಬಳು. 2020ರ ಅಕ್ಟೋಬರ್ ಸಂವಾದ ಮಾಸಪತ್ರಿಕೆಯಲ್ಲಿ ಪ್ರೊ. ಶಿವಗಂಗಾ ರುಮ್ಮಾ ಎಂಬುವವರು “ಡಾಕಿಣಿ ಬೌದ್ಧ ಯೋಗಿಣಿ” ಎಂಬ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ಈ ಪ್ರಬಂಧದ ಉದ್ದಕ್ಕೂ ‘ಡಾಕಿನಿ’ ಎಂಬ ಬೌದ್ಧ ಬಿಕ್ಕುಣಿ ಹೇಗೆ ಪಿಶಾಚಿ, ರಾಕ್ಷಸಿ ರೂಪ ಪಡೆದು ನಂತರದ ಕಾಲದಲ್ಲಿ ಉಪದ್ರವಿ ಎಂಬಂತೆ ಚಿತ್ರಿತವಾದಳು ಎಂದು ನಿರೂಪಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ನಿಘಂಟು ಡಾಕಿನಿಯು ಹೆಣ್ಣು ದೆವ್ವಗಳಲ್ಲಿ ಒಂದು ಬಗೆಯ ಹೆಣ್ಣು ಪಿಶಾಚಿ ಎಂದು ಹೇಳುತ್ತದೆ. ಡಾಕಿನಿ ಎಂದರೆ ರಕ್ಕಸಿಯ ಖಡ್ಗ ಕಾಳಿ ದೇವಿಯ ಪರಿಚಾರಿಕೆಯರ ಒಂದು ವರ್ಗಕ್ಕೆ ಸೇರಿದವಳೆಂದೆ ಹೇಳುತ್ತದೆ. ಸುರಂಗ ಕವಿಯ ವೀರಭದ್ರ ಲೀಲಾರತ್ನ ಕೃತಿಯಲ್ಲಿ ಡಾಕಿನಿಯ ಉಲ್ಲೇಖ ಹೀಗೆ ಇದೆ;
ಅಗ್ಗದ ಯೋಗಿಣಿ ಚಂಡಿ ಭೈರವಿ
ಕಾಳಿ ದುರ್ಗಿ ಡಾಕಿನಿ ಪ್ರೇತಶ್ವಿನಿಯು
ಉಗ್ರದ ಹ್ರೂಂಕಾರಿ ಮಹಾಭೂತವೇತಾಳರೊಗ್ಗಿದಲುಋಬಿ ಕಾಳಗಕೆ” ಸುಮಾರು 16ನೇಯ ಶತಮಾನಕ್ಕಾಗಲೇ ಈ ಎಲ್ಲಾ ಹೆಣ್ಣು ದೈವಗಳು ಕೀಳು ದೈವಗಳಾಗಿ ಪರಿವರ್ತಿತವಾದವು.
ಡಾಕಿನಿ ಕೂಡಾ ಇಲ್ಲಿ ಅಗ್ಗದ ಮತ್ತು ಉಗ್ರ ಕೀಳು ದೈವಗಳಾಗಿದ್ದಾಳೆ. ಲಕ್ಷ್ಮೀಶನ ಜೈಮಿನಿ ಭಾರತದಲ್ಲಿ ಕೂಡಾ ಸುಧನ್ವ ಹಾಗೂ ಅರ್ಜುನನ ನಡುವೆ ನಡೆದ ಕಾಳಗದಲ್ಲಿ ರಣರಂಗದಲ್ಲಿ ಭೀಕರ ದೃಶ್ಯವನ್ನು ಲಕ್ಷ್ಮೀಶನಹೀಗೆ ಚಿತ್ರಿಸುತ್ತಾನೆ.
“ಕಾಕ ಬಕ ಗೋಮಯ ಸಂತತಿಗಳಿಂ
ಡಾಕಿನಿ ಪಿಶಾಚಿ ವೇತಾಳ ಭೂತಂಗಳಿಂ ಭೀಕರದೊಳಂ ಜನಿಸಿದುವಾರ್ದು ರಿಂಗಣಗುಣಿವ ಕಲಿಗಳ ಕಪಾಲಂಗಳು” ಹೀಗೆ ಡಾಕಿನಿಯು ಇಲ್ಲಿಯೂ ಕೂಡಾ ಕ್ಷುದ್ರ ದೇವತೆಯಾಗಿ ಭೀಭತ್ಸ ರೂಪದಲ್ಲಿ ಚಿತ್ರಿತಗೊಂಡಿದ್ದಾಳೆ.
ಮರಾಠಿಯಲ್ಲಿ ಡಾಕಿನಿಗೆ ಡಂಕಿಣಿ ಎನ್ನುತ್ತಾರೆ. ಡಾಳಕಿ ಎಂಬ ಇನ್ನೊಂದು ಪದವು ಕೂಡಾ ಡಾಕಿನಿಯಿಂದಲೇ ಬಂದಿದೆ. ಡಾಳಕಿ ಎಂದರೆ ಗಯ್ಯಾಳಿ, ಮೋಸಗಾತಿ, ಎಂಬ ಅರ್ಥಗಳಿವೆ. ‘ಸಗ್ಗಂಬಡೆದು ಬಂದ ಪ್ರತ್ಯಕ್ಷಮಿಲ್ಲೆನಬಹುದು ಈ ಡಾಳಕಿ’. ಇಲ್ಲಿ ಮೋಸಗಾತಿ ಎಂಬ ಅರ್ಥವೇ ಇದೆ. ಹೀಗೆ ಡಾಕಿನಿ ಪದವು ಕೀಳು, ಕ್ಷುದ್ರ, ಉಗ್ರ, ರುದ್ರ, ಋಣಾತ್ಮಕ ವ್ಯಕ್ತಿತ್ವವಾಗಿಯೇ ಕನ್ನಡ ಸಾಹಿತ್ಯದಲ್ಲಿ ಚಿತ್ರಿತಗೊಂಡಿದೆ.
ಇನ್ನೂ ವಿಚಿತ್ರವೆಂದರೆ ಗ್ರಾಮದೇವತೆಯ ಮೇಲೆ ವಿಶೇಷ ಅಧ್ಯಯನವನ್ನು ನಡೆಸಿದ ಸಿದ್ಧಲಿಂಗಯ್ಯನವರ “ಗ್ರಾಮದೇವತೆಗಳು” ಪುಸ್ತಕವು ಈ ನೆಲದ ಎಲ್ಲಾ ತಳಸಮುದಾಯದ ದೇವತೆಗಳನ್ನು ಕುರಿತು ಹೇಳುತ್ತವೆಯಾದರೂ ಅಲ್ಲೆಲ್ಲಿಯೂ ಈ ಡಾಕಿನಿಯೆಂಬ ದೇವತೆಯ ಅಸ್ತಿತ್ವವಿಲ್ಲವೆಂದೇ ಹೇಳಬೇಕಾಗುತ್ತದೆ. ಅಷ್ಟೇ ಅಲ್ಲ ಕರ್ನಾಟಕ ಜನಪದ ಸ್ತ್ರೀ ದೈವಗಳೂ ಸಾಂಸ್ಕೃತಿಕ ಪದಕೋಶದಲ್ಲಿಯೂ ಈ ಡಾಕಿನಿಯ ಪ್ರಸ್ತಾಪವಿಲ್ಲ.
ಇಷ್ಟೆಲ್ಲಾ ಹೇಳುವ ಕಾರಣವೇನೆಂದರೆ ಒಂದು ಕಾಲದಲ್ಲಿ ಬೌದ್ಧ ಯೋಗಿನಿಯಾಗಿ ಪೂಜೆಗೊಂಡ ಡಾಕಿನಿಯು ನಂತರದ ಕಾಲಘಟ್ಟದಲ್ಲಿ ಇಂತಹ ಕ್ಷುದ್ರ ದೇವತೆಯಾಗಿ ಅವಗಣನೆಗೆ ಅಪಹಾಸ್ಯಕ್ಕೆ ಒಳಗಾದಳು. ಎಂಬುದು ತುಂಬಾ ಕುತೂಹಲಕರವಾದ ಸಂಗತಿಯಾಗಿದೆ. ವೈದಿಕರು ಬೌದ್ಧ ವ್ಯಕ್ತಿಗಳನ್ನು ಇತಿಹಾಸದಲ್ಲಿ ಚಿತ್ರಿಸುವಾಗ ಚಾರಿತ್ರಿಕ ಹಂತಗಳಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ ಎನ್ನಲು ಇದಕ್ಕಿಂತ ಸಾಕ್ಷಿ ಬೇಕೆ?!
ಈ ಮೇಲಿನದು ಒಂದು ಸಾಕ್ಷಿಯಾದರೆ25 ನೇ ಡಿಸೆಂಬರ್ 1954ರಲ್ಲಿ ಪೂನಾದ ಹತ್ತಿರ ದೇಹು ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿದ ಬುದ್ಧ ವಿಹಾರದಲ್ಲಿ ಸ್ಥಾಪಿಸಿರುವ ಒಂದು ಬುದ್ಧ ಪ್ರತಿಮೆಯನ್ನು ಅನಾವರಣಗೊಳಿಸುತ್ತಾ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರರು ಅಲ್ಲಿದ್ದ ಸಭಿಕರಿಗೆ, “ಪಂಡರಾಪುರದಲ್ಲಿರುವ ವಿಠೋಬಾ ನಿಜಕ್ಕೂ ಬುದ್ಧನ ವಿಗ್ರಹವೇ ಆಗಿದೆ. ಪಾಂಡುರಂಗ ಎಂಬ ಹೆಸರು ಪುಂಡಲೀಕ ಶಬ್ದದ ನಿಷ್ಪತ್ತಿಯಾಗಿದೆ ಎನ್ನುತ್ತಾ.
ಪುಂಡಲೀಕ ಅಂದರೆ ಕಮಲ ಮತ್ತು ಪಾಳಿ ಭಾಷೆಯಲ್ಲಿ ಕಮಲವನ್ನು ಪಾಂಡುರಂಗ ಎನ್ನುತ್ತಾರೆ ಆದ್ದರಿಂದ ಪಾಂಡುರಂಗ ಎಂದರೆ ಬುದ್ಧನಲ್ಲದೇ ಬೇರೆ ಯಾರೂ ಅಲ್ಲ. ಬುದ್ಧನೇ ಆಗಿದ್ದಾನೆ. ಪಂಡರಾಪುರದ ಪಂಢರಿನಾಥನ ಬಗ್ಗೆ ಸಂಶೋಧನೆ ನಡೆದಿದೆ. ಪಂಡರಿನಾಥ ದೇವಾಲಯ ಬುದ್ಧನ ದೇವಾಲಯವೆಂದು ನಾನು ಸಿದ್ಧ ಮಾಡಿಕೊಡುವೆ ಎಂದರು.
ಪುಂಡಲೀಕ ಶಬ್ದವೇ ಪಾಂಡುರಂಗವೆಂದು ಪರಿವರ್ತಿತ ಹೊಂದಿದೆ. ಪುಂಡಲೀಕ ಎಂದರೆ ಕಮಲ. ಬುದ್ಧರಲ್ಲಿ ಮೂರ್ತಿ ಪೂಜೆ ಇಲ್ಲ. ಪಾಲಿ ಭಾಷೆಯಲ್ಲಿ ಕಮಲಕ್ಕೆ ಪಾಂಡುರಂಗವೆಂದು ಹೇಳುತ್ತಾರೆ. ಜನರಿಗೆ ಮೋಸ ಮಾಡಲು ಬುದ್ಧನ ಹೆಸರು ತಪ್ಪಿಸಲಾಯಿತು”. ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.
ಬಹುಶಃ ಡಾ.ಅಂಬೇಡ್ಕರರು ಆರೋಗ್ಯ ಸರಿಯಿದ್ದು ಇನ್ನಷ್ಟು ವರ್ಷಗಳು ಕಾಲ ಜೀವಿಸಿದ್ದರೆ ಈ ದೇಶದಲ್ಲಿನ ದೇವಾಲಯದಲ್ಲಿರುವ ಬೌದ್ಧ ಇತಿಹಾಸವನ್ನು ಹಾಗೂ ದೇವರೆಂದು, ರಾಕ್ಷಸರೆಂದು ಪರಿಗಣಿಸಲ್ಪಟ್ಟ ಬೌದ್ಧ ಭಿಕ್ಕು, ಭಿಕ್ಕುಣಿಯರ ಹೆಸರುಗಳನ್ನು ಬಯಲಿಗೆ ಎಳೆಯುತ್ತಿದ್ದರು. ಈ ಕಾರ್ಯ ಮಾಡುವ ಮೊದಲೇ ಅವರು ಅಸ್ತಂತಗರಾದರು.
ಒಟ್ಟಾರೆ ಭಾರತದಲ್ಲಿ ದೇವರೆಂದು ಪೂಜಿಸಲ್ಪಟ್ಟಿದ್ದ ಕೆಲವು ದೆವ್ವ, ಪಿಶಾಚಿ, ರಾಕ್ಷಸರೆಂಬಂತೆ ದುಷ್ಟೀಕರಿಸಲ್ಪಟ್ಟವರು ಬೌದ್ಧ ಭಿಕ್ಕುಗಳು- ಭಿಕ್ಕುಣಿಯರು ಆಗಿದ್ದರೆಂಬುದನ್ನು ಅರಿಯಬಹುದು. ಹಾಗೂ ವೈದಿಕರು ಬೇಕೆಂದೆ ಇವರುಗಳನ್ನು ದುಷ್ಟೀಕರಿಸಿ, ರೌದ್ರಾವತಾರಿಗಳನ್ನಾಗಿ ಮಾಡಿರುವುದು ಸಾಬೀತಾಗುತ್ತದೆ.
ಒಂದು ಕಾಲದಲ್ಲಿ ರಾಜರು ಬೌದ್ಧ ಭಿಕ್ಕು ಭಿಕ್ಕುಣಿಯರಾಗಿದ್ದ ಅದೆಷ್ಟೊ ವ್ಯಕ್ತಿಗಳು ನಮ್ಮ ಕಣ್ಣ ಮುಂದೆಯೇ ದೈಹಿಕವಾಗಿ ವಿರೂಪಗೊಳಿಸಿ, ಚಾರಿತ್ರಿಕವಾಗಿ ಖಳರನ್ನಾಗಿಸಿ, ಕ್ರೂರ, ಕೇಡುಂಟು ಮಾಡುವ ವಿಕೃತರನ್ನಾಗಿಸಿ ದೆವ್ವ ಪಿಶಾಚಿಗಳೆಂಬಂತೆ ಬಿಂಬಿಸಲಾಗಿರುವುದನ್ನು ಇತಿಹಾಸದಲ್ಲಿ ಕಾಣಬಹುದು. ಇಂತಹ ವ್ಯಕ್ತಿಗಳ ಬಗ್ಗೆ ಇನ್ನಷ್ಟು ಸಂಶೋಧನೆಗಳು ನಡೆಸುವುದು ಅವಶ್ಯಕವಿದೆ. ಇನ್ನಾದರೂ ಎಚ್ಚೆತ್ತುಕೊಂಡು ಬಹುಜನರು ಜಾಗೃತರಾಗಲಿ. ವೈದಿಕರ ಕಟ್ಟುಕತೆಗಳನ್ನು ನಂಬದೇ ಸಂಶೋಧಾನಾತ್ಮಕ ದೃಷ್ಟಿಯಿಂದ ಮುಂದುವರೆಯಲಿ ಎಂದು ಆಶೀಸುತ್ತೇನೆ.
ಆಕರ ಗ್ರಂಥಗಳು
- ಸಂವಾದ. ಮಾಸ ಪತ್ರಿಕೆ. ಅಕ್ಟೋಬರ್. 2020.
- ರಾಮಂದಿರ ಏಕೆ ಬೇಡ?. ಲೇಖಕರು; ಕೆ.ಎಸ್.ಭಗವಾನ್. ಪುಟ 18-19.
- ಕರ್ನಾಟಕ ನಾಥ ಪಂಥ. ಲೇಖಕರು; ರಹಮತ್ ತರೀಕೆರೆ. ಪುಟ-7.
- ಡಾ.ಬಿ.ಆರ್ ಅಂಬೇಡ್ಕರ್ ಭಾಷಣ ಬರಹ. ಸಂಪುಟ–7. ಪುಟ 18.
- ವಿಜಯಕ್ಕನ ವಿಚಾರ ಲಹರಿ. ಲೇಖಕಿ; ಶ್ರೀಮತಿ,ವಿಜಯಾ ಮಹೇಶ್. ಪ್ರಬುದ್ದ ಪ್ರಕಾಶನ 2017.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ3 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ2 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ1 day agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ1 day agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


