ನೆಲದನಿ
ಮೋಕ್ಷ ಹುಡುಕುತ್ತ ಪ್ರೀತಿಯ ಬಂಧನದಲ್ಲಿ..!
- ಪಿ. ಲಂಕೇಶ್
ಈತ ನನ್ನನ್ನು ಚಕಿತಗೊಳಿಸುತ್ತಾನೆ. ಮತ್ತೆ ಮತ್ತೆ ನನ್ನ ಮನಸ್ಸಿಗೆ ಬಂದು ಹೊಸ ಹೊಸ ತಿಳಿವಳಿಕೆಗೆ ಕಾರಣವಾಗುವ ಈತನನ್ನು ನಿಮ್ಮೊಂದಿಗೆ ನೆನೆಯಲು ಯತ್ನಿಸುತ್ತೇನೆ. ಈತ ಪ್ರಖ್ಯಾತ ಗುರುವಾಗಿದ್ದ; ಸಾವಿರಾರು ಮೈಲುಗಳಿಂದ ದೊರೆಗಳು, ಸೇನಾನಿಗಳು ಬಂದು ಈತನನ್ನು ನೋಡಿ ಗೌರವಿಸುತ್ತಿದ್ದರು. ಈತ ಜನಕ್ಕೆ ಉಪದೇಶ ನೀಡುತ್ತಿದ್ದ.
ಹಾಗೆ ನೋಡಿದರೆ ಈತನಿಗೆ ದಿನದ ವೇಳೆಯೇ ಸಾಕಾಗುತ್ತಿರಲಿಲ್ಲ. ಆದರೆ ಎಂದೋ ನೋಡಿದ ಸಾಮಾನ್ಯನೊಬ್ಬನಿಗೆ ಕಾಯಿಲೆಯಾದರೆ, ಯಾವುದೇ ತೊಂದರೆಯಾದರೆ ಈತ ಹತ್ತಾರು ಮೈಲಿ ನಡೆದುಹೋಗಿ ಆತನನ್ನು ಕಂಡು ಆರೈಕೆ ಮಾಡುತ್ತಿದ್ದ; ಅವನ ತೊಂದರೆಗಳಿಗೆ ಪರಿಹಾರ ಹುಡುಕುತ್ತಿದ್ದ. ಒಮ್ಮೆ ಈತನ ಆಶ್ರಮದ ಮುದಿ ರೋಗಿಯೊಬ್ಬನನ್ನು ಯಾರೂ ಸರಿಯಾಗಿ ನೋಡಿಕೊಳ್ಳಲಿಲ್ಲ. ತನ್ನ ಕೆಲಸಗಳ ನಡುವೆ ಆ ಕಡೆ ಗಮನ ಹರಿಸದಿದ್ದಕ್ಕೆ ಗುರುವಿಗೆ ತನ್ನ ಬಗ್ಗೆ ಬೇಸರವಾಯಿತು. ಆ ಮುದಿ ರೋಗಿಯನ್ನು ತಾನೇ ಉಪಚರಿಸಿ ನೋಡಿಕೊಂಡ. ಅದು ತನ್ನೆಲ್ಲಾ ಉಪದೇಶಕ್ಕಿಂತ ಮುಖ್ಯವಾದದ್ದೆಂದು ಈ ಮನುಷ್ಯ ತಿಳಿದಿದ್ದ.
ನೀವು ಊಹಿಸಿರಬಹುದಾದಂತೆ ಈತ ಗೌತಮ. ಈತನ ಬಗ್ಗೆ ಕತೆಗಳನ್ನು ಕೇಳುತ್ತಾ ಈತನ ಉಪದೇಶಗಳನ್ನು ಓದುತ್ತಾ ನಾವೆಲ್ಲ ಈ ಗೌತಮ ಅಥವಾ ಸಿದ್ಧಾರ್ಥ ಎಂಬ ಮನುಷ್ಯನ ಬಗ್ಗೆ ದಡ್ಡುಗಟ್ಟಿದ್ದೇವೆ; ಈತ ಇನ್ನೊಬ್ಬ ಮಹಾತ್ಮ ಎಂದು ತಿಳಿದು ನಿರ್ಲಕ್ಷಿಸಲು ಬೇಕಾದ ಗೌರವವನ್ನು ಮಾತ್ರ ಇಟ್ಟುಕೊಂಡು ಸುಮ್ಮನಾಗುತ್ತೇವೆ. ಆದರೆ ಕೇವಲ ಮನುಷ್ಯನಾಗಿ ಈತನ ನಡವಳಿಕೆ ಅಚ್ಚರಿ ಹುಟ್ಟಿಸುತ್ತದೆ; ನನ್ನ ಅಚ್ಚರಿಯನ್ನು ಮಾತ್ರ ಇಲ್ಲಿ ವಿವರಿಸುತ್ತೇನೆ.
ವೈಶಾಖ ಶುದ್ಧ ಪೂರ್ಣಿಮೆಯಂದು ಚೆನ್ನನೊಂದಿಗೆ ಈತ ಅರಮನೆಯನ್ನು ಬಿಟ್ಟಿದ್ದು ಓದಿದ್ದೇವೆ. ಹೀಗೆ ಅರಮನೆ, ಅದರ ಸಂಪತ್ತು ಸುಖವನ್ನೆಲ್ಲ ಬಿಟ್ಟು ಹೊರಟಿದ್ದು ಈತನ ಉನ್ನತ ಗುಣ ತೋರುತ್ತದೆ ಎಂದು ಹೇಳುತ್ತಾರೆ. ಆದರೆ ನನಗೆ ಈ ಗೌತಮನ ಸಾಮಾನ್ಯತೆಯೇ ಇಲ್ಲಿ ಕಂಡುಬರುತ್ತದೆ. ಯಾಕೆಂದರೆ ಈತ ಹುಟ್ಟಿದಾಗಲೇ ಈತನ ತಂದೆ ಶುದ್ಧೋದನನ ಪುರೋಹಿತರು ಗೌತಮನೊಬ್ಬ ಮಹಾತ್ಮನಾಗುವ ಬಗ್ಗೆ, ಮಹಾನ್ ಗುರುವಾಗುವ ಬಗ್ಗೆ ಹೇಳಿದ್ದರಂತೆ; ಒಳಗೊಳಗೇ ಗೌತಮನ ಬಗ್ಗೆ ಭಕ್ತಿಯನ್ನಿಟ್ಟುಕೊಂಡಿದ್ದ ದೊರೆ ಗೌತಮ ಸಂನ್ಯಾಸಿಯಾದಾನೆಂದು ಹೆದರಿ ಆತನನ್ನು ರಾಜಭೋಗದಲ್ಲಿ ಇಟ್ಟಿದ್ದನಂತೆ.
ಇದು ನಿಜವಾದರೆ ಗೌತಮ ಅರಮನೆ ಬಿಡುವ ಅಗತ್ಯವಿರಲಿಲ್ಲ; ಆತನು ಮಹಾನ್ ಗುರುವಾಗುವುದು ಮೊದಲೇ ನಿಶ್ಚಿತವಾಗಿದ್ದರೆ ಅದಕ್ಕಾಗಿ ಗೌತಮ ಪ್ರಯತ್ನಿಸಬೇಕಾದ ಅಗತ್ಯವಿರಲಿಲ್ಲ. ಇಲ್ಲಿ ಗೌತಮನ ಸಹಜ ಕುತೂಹಲ, ಮನುಕುಲದ ದುರಂತದ ಬಗ್ಗೆ ಕಾಳಜಿ ಕಂಡುಬರುತ್ತದೆ. ಅರಮನೆ ಏನೂ ಗೊತ್ತಿಲ್ಲದ, ಏನೂ ಗೊತ್ತಾಗದಂತೆ ಇರುವ ಜಾಗವಾಗುತ್ತದೆ. ಆತ ಅರಿವು ಹುಡುಕಿ ಹೊರಡುತ್ತಾನೆ. ಇಲ್ಲಿ ಕೂಡ ಒಂದು ಪ್ರಶ್ನೆ ಏಳುತ್ತದೆ, ಗೌತಮ ದೊರೆಯಾಗಿ ಮನುಷ್ಯರಿಗೆ ನೆರವಾಗಲು ಆಗುತ್ತಿರಲಿಲ್ಲವೇ? ಆದರೆ ದೊರೆ ಮನುಷ್ಯರ ಯಾವುದೇ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಆಗುವುದಿಲ್ಲ ಎಂಬುದು ಗೌತಮನಿಗೆ ಗೊತ್ತಾಗಿದೆ. ರೋಗ, ಮುಪ್ಪು , ಸಾವುಗಳಿಗೆ ಉತ್ತರ ಹುಡುಕಿ ಹೊರಟ ಗೌತಮನ ದಾರಿ ಮತ್ತು ಮುಟ್ಟಿದ ಗುರಿ ವಿಚಿತ್ರವಾದ ಅರ್ಥಗಳಿಂದ ಕೂಡಿದೆ.
ಗೌತಮ ಅರಮನೆಯನ್ನು ಬಿಟ್ಟವನು ಕಾಡಿಗೆ ಹೋಗಲಿಲ್ಲ; ಮನುಷ್ಯರಲ್ಲಿಗೆ ಹೋದ. ಅನೇಕ ವಿದ್ವಾಂಸರನ್ನು, ವಿದ್ಯಾಲಯಗಳನ್ನು ಎಡತಾಕಿದ. ಅವರೊಂದಿಗೆ ಚರ್ಚಿಸಿ ಕಲಿಯಲು ಯತ್ನಿಸಿದ. ಅಲ್ಲಿಂದ ಅಧ್ಯಾತ್ಮದ ಗುರುಗಳನ್ನು ಕಂಡು ವಿನಯಪೂರ್ವಕವಾಗಿ ಕಲಿಯಲು ಯತ್ನಿಸಿದ. ಅವರಲ್ಲಿ ಕಲಿತಾಗ ಅವರನ್ನು “ಮುಂದೇನು?” ಎಂದು ಕೇಳಿದ.
ಆ ಅಧ್ಯಾತ್ಮದ ಗುರುಗಳು ತಮ್ಮ ಸಾಧನೆ ಅಷ್ಟಕ್ಕೇ ಮುಗಿಯಿತು, ಗೌತಮ ಈಗ ಅವರ ಸಮಾನ ಎಂದು ಹೇಳಿದರು. ಗೌತಮನಿಗೆ ತೃಪ್ತಿಯಾಗಲಿಲ್ಲ. ಮತ್ತೆ ಹುಡುಕಿ ಹೊರಟ. ಯಾರೋ ಅವನಿಗೆ ಸತ್ಯವನ್ನು ಕಾಣಲು ದೇಹದಂಡನೆಯ ಅಗತ್ಯದ ಬಗ್ಗೆ ಹೇಳಿದರು. ಊಟ, ನಿದ್ರೆಗಳನ್ನು ತ್ಯಜಿಸಿ ಹಠವಾದಿಯಂತೆ ಧ್ಯಾನಿಸತೊಡಗಿದ. ಅನೇಕ ವರ್ಷಗಳ ಬಳಿಕ ಗೌತಮ ತನ್ನ ಈ ಹಂತದ ಬಗ್ಗೆ ತಣ್ಣಗೆ, ನಸು ಹಾಸ್ಯದಿಂದ, ವಿಷಾದದಿಂದ ಹೇಳುತ್ತಿದ್ದ:
“ಆ ದಿನಗಳಲ್ಲಿ ನನ್ನ ಕೈಕಾಲುಗಳೆಲ್ಲ ಒಣಗಿದ ಬಳ್ಳಿಯಂತೆ, ಗಂಟುಗಂಟಾದ ಪುರಲೆಗಳಂತೆ ಆಗಿದ್ದವು; ನನ್ನ ಪುಷ್ಠ ಎಮ್ಮೆಯ ಗೊರಸಿನಂತೆ ಆಗಿತ್ತು; ನನ್ನ ಬೆನ್ನುಹುರಿ ಬಾಗಿದ ಚೆಂಡಿನ ಸರದಂತಾಗಿತ್ತು; ನನ್ನ ಎದೆಯ ಮೂಳೆಗಳು ಪಾಳುಬಿದ್ದ ಗುಡಿಸಲಿನಂತಾಗಿದ್ದವು; ನನ್ನ ಕಣ್ಣುಗಳು ತಮ್ಮ ಗುಳಿಯಲ್ಲಿ ಆಳವಾದ ಬಾವಿಯ ನೀರಿನಂತೆ ಕಾಣುತ್ತಿದ್ದವು; ನನ್ನ ತಲೆ ಬಿಸಿಲುಗಾಳಿಗೆ ಒಣಗಿದ ಸೋರೆಕಾಯಿಯಂತೆ ಆಗಿತ್ತು… ನನ್ನ ಹೊಟ್ಟೆಯ ಚರ್ಮ ಬೆನ್ನಿಗೆ ಅಂಟಿಕೊಂಡಿತ್ತು; ಬಹಿರ್ದೆಸೆಗೆ ಹೋಗಿ ಕೂತರೆ ಮುಖದ ಮೇಲೆ ನೆಲಕ್ಕೆ ಬಿದ್ದುಬಿಡುತ್ತಿದ್ದೆ; ನನ್ನ ಕೈಕಾಲುಗಳನ್ನು ತುರಿಸಿಕೊಂಡರೆ ಕೂದಲು ತಮ್ಮ ಬೇರು ಸಮೇತ ಕಿತ್ತುಕೊಂಡು ಬರುತ್ತಿದ್ದವು…”
ಈ ಸ್ಥಿತಿಯಿಂದ ಗೌತಮನಿಗೆ ಜ್ಞಾನೋದಯವಾಗಲಿಲ್ಲ. ಈ ಬಗೆಯ ದೇಹದಂಡನೆಯನ್ನು ಬಿಟ್ಟ, ಸುಜಾತ ಎಂಬ ಹೆಣ್ಣುಮಗಳು ಆತನಿಗೆ ಊಟ ನೀಡಿದಳು. ಅವನು ಸಹಜ ಮನುಷ್ಯನಂತೆ ಬದುಕುತ್ತ ಧ್ಯಾನಿಸಲು ಆರಂಭಿಸಿದಾಗ ಅವನ ಜೊತೆಗಾರರು ಕೆಲವರು ಆಕ್ಷೇಪಿಸಿ ಹೊರಟುಹೋದರು; ಗೌತಮ ಏಕಾಂಗಿಯಾಗಿ ಸತ್ಯ ಹುಡುಕತೊಡಗಿದ. ಮನುಷ್ಯ ತನ್ನ ಬಡತನ, ರೋಗ, ಸಾವು, ನೋವು, ಅನ್ಯಾಯಗಳನ್ನು ಗೆಲ್ಲುವ ಸಾಧ್ಯತೆಗಳನ್ನು ಹುಡುಕತೊಡಗಿದ. ನಿರ್ವಾಣ, ಮೋಕ್ಷ ಸಾಧ್ಯವೇ ಎಂದು ನೋಡಿದ. ದೇವರ ಅಸ್ತಿತ್ವಕ್ಕಾಗಿ ತಡಕಾಡಿದ.
ಹುಟ್ಟಿದಂತೆಯೇ ವೈಶಾಖ ಶುದ್ಧ ಪೂರ್ಣಿಮೆಯಂದು ಗೌತಮನಿಗೆ ಉತ್ತರ ದೊರಕಿತು. ಅದನ್ನು ಜ್ಞಾನೋದಯ ಎಂದು ಅನೇಕರು ಕರೆದರು. ಹಾಗೆ ಗೌತಮ ಎಂದೂ ಹೇಳಿಕೊಳ್ಳಲಿಲ್ಲ. ನಾನು ಕೂಡ ಅದನ್ನು ಜ್ಞಾನೋದಯ ಎಂದು ಕರೆಯದೆ ಮನುಷ್ಯನ ದುಃಖಕ್ಕೆ ಇರಬಹುದಾದ ಉತ್ತರ ಎಂದು ಕರೆಯಲು ಆಶಿಸುತ್ತೇನೆ.
ಯಾಕೆಂದರೆ ಗೌತಮನಲ್ಲಿ ಜ್ಞಾನೋದಯವಾದ ಒಂದೇ ಒಂದು ಸೂಚನೆ ಇದ್ದದ್ದು ಆತನ ಪ್ರಶಾಂತತೆಯಲ್ಲಿ; ಮನುಷ್ಯನ ಬಗ್ಗೆ ತಿಳಿವಳಿಕೆಯಲ್ಲಿ. “ದೇವರು ಇದ್ದಾನೆಯೆ?” ಎಂಬ ಪ್ರಶ್ನೆಗೆ ಗೌತಮನಲ್ಲಿ ಉತ್ತರವಿರಲಿಲ್ಲ. “ಆತ್ಮ ಎಂಬುದು ಇದೆಯೇ?” ಎಂಬುದಕ್ಕೆ ಆತನಲ್ಲಿ ಉತ್ತರವಿರಲಿಲ್ಲ. ತನಗೆ ಗೊತ್ತಿಲ್ಲದ್ದನ್ನು ಹೇಳಲು ನಿರಾಕರಿಸುವ ಗೌತಮನ ಜ್ಞಾನೋದಯ ಮನುಷ್ಯನ ಬದುಕಿನ ವಿವರಗಳನ್ನು ಒಳಗೊಂಡಿತ್ತು.
ಸಂನ್ಯಾಸ, ಧ್ಯಾನ, ತಪಸ್ಸುಗಳು ಸಾಮಾನ್ಯ ಮನುಷ್ಯನಲ್ಲಿ ಗೌರವದ ಜೊತೆಗೆ ಅಂಜಿಕ ಹುಟ್ಟಿಸುತ್ತವೆ. ಅವೆಲ್ಲ ತನ್ನಿಂದ ಸಾಧ್ಯವಾಗುವುದಿಲ್ಲ, ತನ್ನ ಸಣ್ಣಪುಟ್ಟ ಸಂತೋಷಗಳೊಂದಿಗೆ ಹೊಂದಿಕೊಳ್ಳುವುದಿಲ್ಲ ಎಂದುಕೊಳ್ಳುವ ಗೌತಮ ನಂತರ ಅವನ್ನೆಲ್ಲ ಹೊಕ್ಕು ಪರೀಕ್ಷಿಸಿ ಹೊರಬಂದ ಮೇಲೆ ಒಂದು ಘಟನೆ ನಡೆಯುತ್ತದೆ.
ಗೌತಮ ಉಪವಾಸ, ದೇಹದಂಡನೆ ಇತ್ಯಾದಿಗಳನ್ನು ಬಿಟ್ಟೊಡನೆ ಅವನನ್ನು ಬಿಟ್ಟು ಹೊರಟುಹೋದ ಗೆಳೆಯರನ್ನು ಕಾಣುತ್ತಾನೆ, ತನಗೆ ಮನುಷ್ಯನ ದುರಂತಕ್ಕೆ ಉತ್ತರ ದೊರಕಿದೆ ಎಂದು ಹೇಳುತ್ತಾನೆ. ಆ ಗೆಳೆಯರು ನಂಬುವುದಿಲ್ಲ, “ಎಲ್ಲರಂತೆ ಬದುಕಿದ ನಿನಗೆ ಜ್ಞಾನೋದಯವಾಗಿರುವುದು ಸಾಧ್ಯವಿಲ್ಲ” ಎಂದು ಹೇಳುತ್ತಾರೆ.
ಗೌತಮ ಏನು ಹೇಳಿದರೂ ನಂಬುವುದಿಲ್ಲ, ಆಗ ಗೌತಮ ಅನ್ಯೋನ್ಯತೆಯಿಂದ, “ನನ್ನ ಧ್ವನಿ ಮುಂಚಿನಂತಿದೆಯೇ? ನನ್ನ ಮಾತು ಬೇರೆ ಥರ ಎನಿಸುವುದಿಲ್ಲವೆ?” ಎಂದು ಕೇಳುತ್ತಾನೆ. ಆಗ ಅವರಿಗೆ ಗೌತಮನಲ್ಲಿ ಏನೋ ಹೊಸತು ಗೋಚರವಾಗುತ್ತದೆ. ಗೌತಮನ ಜೊತೆಗಾರಿಕೆಯಲ್ಲಿ ಆತನ ತಿಳಿವಳಿಕೆಯ ಅರಿವಾಗುತ್ತದೆ.
ದೇಶದ ಉದ್ದಗಲಕ್ಕೆ ಓಡಾಡಿದ ಸಿದ್ಧಾರ್ಥ ಜನಕ್ಕೆ ಬೋಧಿಸುತ್ತಿದ್ದುದು ಸರಳವಾಗಿತ್ತು. ‘ಆಶೆಯೇ ದುಃಖಕ್ಕೆ ಮೂಲ’ ಎಂದು ಹೇಳುತ್ತಿದ್ದ. ನೀತಿ, ವಿನಯ, ಪ್ರಾಮಾಣಿಕತೆಯನ್ನು ಬೋಧಿಸುತ್ತಿದ್ದ. ಒಮ್ಮೆ “ತಪ್ಪಿತಸ್ಥರನ್ನು ಶಿಕ್ಷಿಸುವುದರಿಂದ ಅಪರಾಧ ಕಮ್ಮಿಯಾಗುವುದಿಲ್ಲ” ಎಂದು ಹೇಳಿದ. ಅದರ ಬಗ್ಗೆ ವಿವರಣೆ ಕೇಳಿದಾಗ ಸಿದ್ಧಾರ್ಥ ಯಾವುದೇ ಪವಾಡದ ಬಗ್ಗೆ, ದೇವರನ್ನು ಕುರಿತ ಭಯದ ಬಗ್ಗೆ ಹೇಳಲಿಲ್ಲ. “ಬಡತನದ ನಿವಾರಣೆಯಾದರೆ ಮಾತ್ರ ಅಪರಾಧ, ಕ್ರೌರ್ಯ, ಅನ್ಯಾಯಗಳು ಹೋಗುತ್ತವೆ” ಎಂದು ಹೇಳಿದ. “ಶ್ರೀಮಂತರಾದರೆ?” ಎಂದು ಕೇಳಿದರೂ ಸಿದ್ಧಾರ್ಥ ಶ್ರೀಮಂತರ ದಾಹ, ಸ್ವಾರ್ಥ, ಶೋಷಣೆಯ ಬಗ್ಗೆ ಹೇಳುತ್ತಿದ್ದ. ಈತನ ಬೋಧನೆ ಎಲ್ಲರಿಗೆ ಗೊತ್ತಿರುವುದರಿಂದ ಇಲ್ಲಿ ಮತ್ತೆ ಹೇಳಬೇಕಿಲ್ಲ.
ಆದರೆ ಸರಿಯಾಗಿ ಎರಡೂವರೆ ಸಾವಿರ ವರ್ಷದ ಹಿಂದೆ ಬದುಕಿದ್ದ ಈ ಮನುಷ್ಯನ ವ್ಯಕ್ತಿತ್ವ ನೋಡಿ. ಅರಮನೆ, ದೇವಾಲಯಗಳನ್ನು ಬಿಟ್ಟು ನಿರ್ವಾಣವನ್ನು ಕಂಡುಕೊಳ್ಳಲು ಹೊರಟ ಈತ ದೇವರನ್ನು ತಲುಪಲಿಲ್ಲ. ಮನುಷ್ಯರನ್ನು ತಲುಪಿದ. ಅದು ಪ್ರೀತಿಯ ಮೂಲಕ, ನಿರ್ಮೋಹದ ನೋಟದ ಮೂಲಕ. ಸಿದ್ಧಾರ್ಥನಿಗೆ ವಯಸ್ಸಾದಂತೆಲ್ಲ ಆತನ ಸಹಜತೆ ಕೂಡ ಬೆಳೆಯುತ್ತಿತ್ತು.
ಗಾಢ ವ್ಯಾಮೋಹ, ದುಃಖ, ಸಾವುನೋವು, ವಿರಹಗಳ ಬಲೆಯಲ್ಲಿ ಬಿದ್ದ ಮನುಷ್ಯನ ಅಸಹಾಯಕ ಸ್ಥಿತಿಗೆ ಪರಿಹಾರವಾಗಿ ಈತನಲ್ಲಿ ಅಪಾರ ಪ್ರೀತಿ ಮಾತ್ರ ಇತ್ತು. ಲಕ್ಷಾಂತರ ಶಿಷ್ಯರು, ಅಭಿಮಾನಿಗಳನ್ನು ಪಡೆದಿದ್ದ ಬುದ್ಧ ಶಿಸ್ತಿಗೆ, ದಕ್ಷತೆಗೆ ಪ್ರಖ್ಯಾತನಾಗಿದ್ದ. ಈತನ ಆಶ್ರಮಗಳು ನಡೆಯುತ್ತಿದ್ದ ಬಗೆಯನ್ನು, ಈತನ ಅನುಯಾಯಿಗಳ ಜೀವನ ಕ್ರಮವನ್ನು ಗಮನಿಸಿದ ರಾಜನೊಬ್ಬ, “ನನ್ನೆಲ್ಲ ಸೈನ್ಯ, ಶಕ್ತಿ ಬಳಸಿದರೂ ಪ್ರಜೆಗಳಲ್ಲಿ ಈ ಶಿಸ್ತು ತರಲಾಗುತ್ತಿಲ್ಲ” ಅಂದ. ಅದಕ್ಕೆ ಸಿದ್ಧಾರ್ಥ, “ವಿಶ್ವಾಸ, ಪ್ರೀತಿ ಇದ್ದಲ್ಲಿ ಮಾತ್ರ ಶಿಸ್ತು ಸಾಧ್ಯ” ಎಂದು ಹೇಳಿದ.
ಸಿದ್ಧಾರ್ಥ ಜ್ಞಾನಿಯಾಗಿದ್ದ, ವಿದ್ವಾಂಸನಾಗಿರಲಿಲ್ಲ. ಗೊಡ್ಡು ಪಾಂಡಿತ್ಯ ಕಂಡು ವಿಸ್ಮಿತನಾಗುತ್ತಿದ್ದ. ಪ್ರಖಾಂಡ ಪಂಡಿತನೊಬ್ಬ ತನ್ನ ಪಾಂಡಿತ್ಯದಿಂದ ಎಲ್ಲರಿಗೂ ಮುಖಭಂಗ ಮಾಡುವುದರಲ್ಲಿ ನಿಷ್ಣಾತನಾಗಿದ್ದ. ಆತ ಸಿದ್ಧಾರ್ಥನನ್ನು ವಾದದಲ್ಲಿ ಸೋಲಿಸುವ ಸಲುವಾಗಿ ಬಂದು “ಬ್ರಾಹ್ಮಣನ ಮುಖ್ಯ ಲಕ್ಷಣಗಳೇನು?” ಎಂದು ಕೇಳಿದ. ಆಗ ಬುದ್ಧ ಗಂಭೀರವಾಗಿ, “ನೀಚತನದಿಂದ ಮುಕ್ತನಾದವನು, ಪರಿಶುದ್ಧ ಹೃದಯವುಳ್ಳವನು ಮತ್ತು ಇತರರ ಮುಖಭಂಗ ಮಾಡದಿರುವವನು” ಅಂದು ನಸುನಕ್ಕ.
ಗೌತಮನ ಮನುಷ್ಯತ್ವ, ಹಾಸ್ಯ, ರಸಿಕತೆ, ಭೂತದಯೆ, ಜೀವನ ಪ್ರೇಮವನ್ನು ಒಳಗೊಂಡಿತ್ತು. ಆತ ತಾನು ಕಂಡ ನದಿ, ಬೆಟ್ಟ, ಕಾಡುಗಳನ್ನು, ತನ್ನ ಪ್ರೀತಿಯ ಸ್ಥಳಗಳನ್ನು ಕುರಿತು ಭಾವುಕನಾಗಿ ಮಾತನಾಡುತ್ತಿದ್ದ. ಅನೇಕ ಸಲ ನೀನು ಈ ಭೂಮಿಯಲ್ಲಿ ಸ್ವರ್ಗ ಕಾಣಬೇಕೆಂದಿದ್ದರೆ ಈ ಜಿಲ್ಲೆಯ ಗಿರಿಜನರ ಹೆಣ್ಣುಮಕ್ಕಳನ್ನು ನೋಡು- ಎಂದು ಹೇಳಬಲ್ಲವನಾಗಿದ್ದ.
ಮುಖ್ಯವಾಗಿ ಈ ಸತ್ಯಶೋಧಕ ಸಿದ್ಧಾರ್ಥನ ಎದುರು ಜನ ಯಕ್ಷಿಣಿಗಾಗಿ, ಪವಾಡಕ್ಕಾಗಿ ಸೇರುತ್ತಿರಲಿಲ್ಲ. ಆತನ ಪ್ರೀತಿಯ ಸಂಗಕ್ಕಾಗಿ, ಆತನ ತಾಯ್ತನಕ್ಕಾಗಿ ಸೇರುತ್ತಿದ್ದರು. ನೊಂದ, ಅನ್ಯಾಯಕ್ಕೊಳಗಾದ, ಕ್ರೌರ್ಯದಲ್ಲಿ ಬೆಂದವರೆಲ್ಲ ಅಲ್ಲಿ ಪ್ರೀತಿ ಎಂಬ ಜ್ಞಾನದಲ್ಲಿ ಸ್ವಸ್ಥರಾಗುತ್ತಿದ್ದರು.
ಈಗ ಕೇಳಿಕೊಳ್ಳಿ. ಆತ ಇದಕ್ಕಾಗಿ ತನ್ನ ರಾಜ್ಯ ಬಿಟ್ಟಿದ್ದು ಸರಿಯೆ? ಆಡಳಿತಗಾರನಾಗಿ ಏನನ್ನಾದರೂ ಸಾಧಿಸಲು ಆಗುತ್ತಿರಲಿಲ್ಲವೆ? ಇದಕ್ಕೆ ನನ್ನಲ್ಲಿ ಒಂದು ಸಣ್ಣ ಉತ್ತರವಿದೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ, ನೆಹರೂ, ಪಟೇಲರೆಲ್ಲ ಸಂಭ್ರಮದಿಂದ ಕೂಗಾಡುತ್ತಿದ್ದ ದಿನ ಗಾಂಧೀಜಿ ಕಲ್ಕತ್ತಾದಲ್ಲಿ ಒಬ್ಬೊಂಟಿಯಾಗಿ ಓಡಾಡುತ್ತಿದ್ದರು.
ಎರಡೂವರೆ ಸಾವಿರ ವರ್ಷಗಳ ಬಳಿಕ ಬುದ್ಧನ ಅಂಶಗಳನ್ನು ಪಡೆದು ಬಂದ ಗಾಂಧಿ ಪ್ರಧಾನಿಯಾಗಿ ಆಗಲಿ, ರಾಷ್ಟ್ರಾಧ್ಯಕ್ಷರಾಗಿ ಆಗಲೀ ಅಧಿಕಾರ ಸ್ವೀಕರಿಸುವ ಸ್ಥಿತಿಯಲ್ಲಿ ಇರಲಿಲ್ಲ. ಆ ಬಾಪುವಿನದು ಕೂಡ ಬುದ್ಧನ ದಾರಿಯಾಗಿತ್ತು.
ಈತ ಕೂಡ ಸತ್ಯವನ್ನು, ದೇವರನ್ನು ಹುಡುಕುತ್ತಾ ಹೋಗಿ, ಬದುಕಿನ ವಿರೋಧಾಭಾಸಗಳನ್ನು, ಜೀವಸೆಲೆಗಳನ್ನು ಹುಡುಕುತ್ತಾ ಹೋಗಿ ಸರಳ ಕಾಣ್ಕೆಯನ್ನು ಕಂಡುಕೊಂಡಿದ್ದರು. ಈಶ್ವರನಿಗಾಗಿ ಹುಡುಕಾಟದಿಂದಾಗಿಯೇ ನಿರೀಶ್ವರವಾದಿಯ ನಿಷ್ಠುರತೆಯನ್ನೂ, ದುರಂತ ಪ್ರಜ್ಞೆಯನ್ನೂ ಪಡೆದುಕೊಂಡಿದ್ದರು. ಸಿದ್ಧಾರ್ಥನಂತೆಯೇ ಕನಿಷ್ಠ ಜೀವಿಯಲ್ಲೂ ಗಾಢ ಪ್ರೀತಯನ್ನು ಇಟ್ಟಿದ್ದ ಗಾಂಧಿ ಮನುಷ್ಯ ತನಗಾಗಿ ಸೃಷ್ಟಿಸಿಕೊಂಡಿರುವ ಜಾತಿ, ಮೂಢನಂಬಿಕೆ, ಕ್ರೌರ್ಯ, ಅಸಹಾಯಕತೆಯನ್ನು ಕಂಡು ತಮ್ಮ ಸರಳ ಸಿದ್ಧಾಂತಗಳನ್ನು ರೂಪಿಸಿಕೊಂಡಿದ್ದರು.
ಸಿದ್ಧಾರ್ಥನನ್ನು ಆತನ ಕಾಣ್ಕೆಯೊಂದಿಗೇ ಹೊರಗಟ್ಟಿದ್ದ ಭಾರತೀಯ ಗಾಂಧಿಯನ್ನೂ ಇಟ್ಟುಕೊಳ್ಳಲಿಕ್ಕಿಲ್ಲ. ಅಂದರೆ ಅವರ ಪ್ರೇಮವನ್ನು, ತಾಯ್ತನವನ್ನು, ಸರಳ ನೆಮ್ಮದಿಯನ್ನು. ಯಾವ ಅಧಿಕಾರದ ಗದ್ದುಗೆಯೂ, ಸೈನ್ಯದ ಆರ್ಭಟವೂ ಮನುಕುಲಕ್ಕೆ ನೀಡಲಾರದ ಕಾಣಿಕೆ ಇದು.
(ಡಿಸೆಂಬರ್ 28, 1986)-ಟೀಕೆ-ಟಿಪ್ಪಣಿ ಪುಸ್ತಕದಿಂದ (ಸಂಪುಟ-01, 1991)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ1 day agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ11 minutes agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ


