Connect with us

ದಿನದ ಸುದ್ದಿ

ಖ್ಯಾತ ಸಮಾಜವಾದಿ ಚಿಂತಕ ಡಿ.ಎಸ್.ನಾಗಭೂಷಣ ನಿಧನ ; ಒಡನಾಡಿಗಳ ನುಡಿ ನಮನ

Published

on

ಸುದ್ದಿದಿನ ಡೆಸ್ಕ್ : ಖ್ಯಾತ ಸಮಾಜವಾದಿ ಚಿಂತಕ, ಬರಹಗಾರ , ವಿಮರ್ಶಕ, “ಗಾಂಧಿ ಕಥನ” ದ ಕರ್ತೃ ಡಿ.ಎಸ್.ನಾಗಭೂಷಣ (70) ಅವರು ಶಿವಮೊಗ್ಗದಲ್ಲಿ ರಾತ್ರಿ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಇಂದು, ಮೇ 19 ರ ಸಂಜೆ 5 ಗಂಟೆಗೆ ಶಿವಮೊಗ್ಗದ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಿ.ಎಸ್.ನಾಗಭೂಷಣ ಅವರ ಒಡನಾಡಿಗಳಾದ, ಶ್ರೀಪಾದ್ ಯ, ದಿನೇಶ್ ಅಮೀನ್ ಮಟ್ಟು, ರಾಘವೇಂದ್ರ, ಸಾಗರ ಸೇರಿದಂತೆ ಹಲವು ನುಡಿ ನಮನ ಸಲ್ಲಿಸಿದ್ದಾರೆ.


  • ಶ್ರೀಪಾದ್ ಭಟ್, ಚಿಂತಕರು

ಡಿ. ಎಸ್. ನಾಗಭೂಷಣ ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಡಿ. ಎಸ್. ಎನ್ ಜೊತೆಗೆ ಚರ್ಚೆ, ಸಂವಾದ ಜಗಳ ಸಾಮಾನ್ಯ ಸಂಗತಿಯಾಗಿತ್ತು. ಅವರು ಸಿಕ್ಕಾಗಲೆಲ್ಲ ಸಣ್ಣ ಮಟ್ಟದ ವಾದ ಮಾಡದೇ ಹೋದರೆ ನನಗೆ ಭಣ ಭಣ ಎನಿಸುತ್ತಿತ್ತು. ಆದರೆ ಅವರನ್ನು ಭೇಟಿಯಾಗಿ ಅನೇಕ ವರ್ಷಗಳಾಗಿದ್ದವು.

ಎಪ್ಪತ್ತರ ದಶಕದ ನಮ್ಮ ಬಾಲ್ಯದ ದಿನಗಳಲ್ಲಿ
ಆಕಾಶವಾಣಿಯಲ್ಲಿದ್ದ ಡಿ. ಎಸ್. ಎನ್ ಓದುತ್ತಿದ್ದ ಪ್ರದೇಶ ಸಮಾಚಾರ ಜನಪ್ರಿಯವಾಗಿತ್ತು. ಹಾಗೆಯೇ ಲೋಹಿಯಾ, ಕುವೆಂಪು, ಜಿಎಸ್ ಎಸ್, ಗಾಂಧಿ ಕುರಿತ ಅವರ ಆಳವಾದ ಓದು, ಗ್ರಹಿಕೆ ಮತ್ತು ವಿಚಾರ ಮಂಡನೆ ಬೆರಗುಗೊಳಿಸುತ್ತಿತ್ತು. ಪ್ರತಿಭಾವಂತ ಲೇಖಕ. ವಸ್ತುನಿಷ್ಠವಾಗಿ ಬರೆಯುವುದು ಹೇಗೆ ಎಂಬುದಕ್ಕೆ ಉತ್ತಮ ಉದಾಹರಣೆ ಡಿ. ಎಸ್. ಎನ್
he is one of the best reader.

1990ರಲ್ಲಿ ದೇವನೂರ ಮಹಾದೇವ ಅವರ ‘ಕುಸುಮ ಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ನೆಪದಲ್ಲಿ ಲೇಖಕರಿಗೆ ತುಮಕೂರಿನಲ್ಲಿ ಒಂದು ಅಭಿನಂದನೆ, ಚರ್ಚೆ ಗೋಷ್ಠಿಯಿತ್ತು. ನಾನು ಮೊದಲ ಬಾರಿಗೆ ಡಿ. ಎಸ್. ಎನ್ ರನ್ನು ಮಾತನಾಡಿಸಿದ್ದು ಅಲ್ಲಿ. ಆ ಸಮಾರಂಭಕ್ಕೆ ಬರಲು ಒಪ್ಪಿಕೊಂಡು ನಂತರ ಕೈ ಕೊಟ್ಟ ಲಂಕೇಶ್ ರನ್ನು ಶರ್ಟಿನ ತೋಳು ಮೇಲೇರಿಸಿಕೊಳ್ಳುತ್ತಾ ಟೀಕಿಸುತ್ತಿದ್ದ ಆ ದೃಶ್ಯ ನಿನ್ನೆ, ಮೊನ್ನೆ ನಡೆದಂತಿದೆ.

ಆದರೆ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಸಂದರ್ಭದಲ್ಲಿ ಚಂಡಿ ಹಿಡಿದು ಹಠದಿಂದ ವರ್ತಿಸುವ ಅವರ ಇನ್ನೊಂದು ಮುಖ ಅನೇಕ ಸಂದರ್ಭಗಳಲ್ಲಿ ಎದುರುಗಿರುವವರನ್ನು ಪರಚುತ್ತಿತ್ತು, ಗಾಯಗೊಳಿಸುತ್ತಿತ್ತು.
ತನ್ನದೇ ಸತ್ಯ ಎಂಬ ಧೋರಣೆ ಜಗಳಗಳಿಗೆ ಕಾರಣವಾಗಿದ್ದು ಲೆಕ್ಕವೇ ಇಲ್ಲ.

ನಾವು ಸ್ನೇಹಿತರು ‘ಇದೊಂದು ವಿಷಯದಲ್ಲಿ ಡಿ.ಎಸ್.ಎನ್ ಪ್ರಬುದ್ದರಾಗಿದ್ದರೆ ಎಷ್ಟು ಚಂದ’ ಎಂದು ಬೇಸರಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಬದುಕು ಹಾಗೆಲ್ಲಾ ಚೆಂದವಾಗಿ ಇರಲು ಬಿಡುವುದಿಲ್ಲ. ಡಿ. ಎಸ್. ಎನ್ ರವರಿಗೆ ಈ ಫೋಟೋ ತೋರಿಸಿ ಹೀಗೆ ಇರಬೇಕಿತ್ತು ಸರ್ ನೀವು ಎಂದು ಎಷ್ಟೋ ಬಾರಿ ಹೇಳಬೇಕೆಂದುಕೊಂಡಿದ್ದೆ. ಹೇಳಲಿಲ್ಲ. ತಮ್ಮ ಬದುಕಿನ ಪಯಣ ಮುಗಿಸಿ ಎದ್ದು ನಡೆದ ಡಿ. ಎಸ್. ಎನ್ ಗೆ ನಮನಗಳು.


  • ದಿನೇಶ್ ಅಮೀನ್ ಮಟ್ಟು, ಹಿರಿಯ ಪತ್ರಕರ್ತರು

ನೇರ, ನಿಷ್ಠುರ , ಪ್ರಾಮಾಣಿಕ, ಜಾತ್ಯತೀತ, ಸಿದ್ದಾಂತ ಬದ್ದ…ಎಂಬೀತ್ಯಾದಿ ವಿಶೇಷಣಗಳನ್ನು ಅಳುಕಿಲ್ಲದೆ ಬಳಸಲು ಸಾಧ್ಯವಿರುವ ನಮ್ಮ ನಡುವಿನ ಒಂದು ಕೈಬೆರಳೆಣಿಕೆಯ ವ್ಯಕ್ತಿಗಳಲ್ಲಿ ಡಿ.ಎಸ್.ನಾಗಭೂಷಣ್ ಒಬ್ಬರಾಗಿದ್ದರು.

ತರಗತಿಗಳಲ್ಲಿ ಎಂದೂ ಪಾಠ ಮಾಡದೆ ಇದ್ದರೂ ನನ್ನಂತಹ ಸಾವಿರಾರು ಕಿರಿಯರಿಗೆ ಅವರು ಬದುಕಿನ ಶಾಲೆಯ ಮೇಷ್ಟ್ರು ಆಗಿದ್ದರು. ಅವರ ಪ್ರತಿಯೊಂದು ಜಗಳ,‌ ಮುನಿಸುಗಳಲ್ಲಿ ಕಲಿಯುವ ಪಾಠ ಇತ್ತು.

ಹೆಚ್ಚು ಪರಿಚಯವೇ ಇಲ್ಲದ ದಿನಗಳಲ್ಲಿ ಅಂದರೆ ಸುಮಾರು ಹದಿನೈದು ವರ್ಷಗಳ ಹಿಂದೆ ನಾನು ದೆಹಲಿಯಲ್ಲಿದ್ದಾಗ ನನಗೆ ಪೋನ್ ಮಾಡಿ ಅವರ‌ ಪುಸ್ತಕಕ್ಕೆ ಬೆನ್ನುಡಿ ಬರೆಸಿದ್ದರು. ಅವರ ಕೋರಿಕೆಯನ್ನು ಕೇಳಿದಾಗಲೇ ಆಘಾತಕ್ಕೀಡಾಗಿದ್ದ ನಾನು ಒಲ್ಲೆ‌ ಎಂದಾಗ ಗದರಿಸಿ ಬರೆಸಿದ್ದರು.

ಅದರ ನಂತರ ನಿರಂತರವಾಗಿ ನನ್ನ ಮತ್ತು ಅವರ ನಡುವೆ ಸಣ್ಣ ಪುಟ್ಟ ಜಗಳಗಳು ನಡೆಯುತ್ತಲೇ ಇತ್ತು. ಇದೇ ವೇಳೆ ಅವರ ‘ಆದೇಶ’ಗಳನ್ನು ಗಳನ್ನು ನಾನು ವಿಧೇಯನಾಗಿ ಪಾಲಿಸುತ್ತಲೇ ಹೋಗುತ್ತಿದ್ದೆ.

ದೆಹಲಿಯಿಂದ ಬಂದ ನಂತರ ಬಹುಷ: ನಾನು ಭಾಗವಹಿಸಿದ್ದ ಮೊದಲ ಕಾರ್ಯಕ್ರಮ ಅವರೇ ಕುಪ್ಪಳ್ಳಿಯಲ್ಲಿ ಆಯೋಜಿಸಿದ್ದ ಸಮಾಜವಾದಿ ಶಿಬಿರ ಆಗಿತ್ತು.

ಹೊಸಮನುಷ್ಯ ಪತ್ರಿಕೆಗೆ ಮೂರೋ ನಾಲ್ಕೋ ದೀರ್ಘ ಲೇಖನಗಳನ್ನು ಬರೆಸಿದ್ದರು. ಅವರೇ ಏರ್ಪಡಿಸುತ್ತಿದ್ದ ಕಾರ್ಯಕ್ರಮಗಳಿಗೆ ಕರೆಸಿ‌ ಮಾತನಾಡಿಸುತ್ತಿದ್ದರು. ಅವುಗಳೆಲ್ಲ ಅವರು ನೀಡುತ್ತಿದ್ದ ‘ಆದೇಶ’ಗಳೇ ಆಗಿರುತ್ತಿದ್ದವು. ವಿಧೇಯ ಶಿಷ್ಯನ ರೀತಿ ನಾನು ತಲೆಯಾಡಿಸುತ್ತಿದ್ದೆ. ನನ್ನೊಳಗೆ ಅವರ ಬಗ್ಗೆ ಇದ್ದ ಗೌರವ ಇದಕ್ಕೆ ಕಾರಣ.

ಅಪ್ಪಟ ಲೋಹಿಯಾವಾದಿಯಾಗಿದ್ದ ಡಿಎಸ್ ಎನ್ ಕೇವಲ ಭಾಷಣ ಮಾಡಿಲ್ಲ, ಬರೆದು ಸಾಲು ಸಾಲು ಪುಸ್ತಕಗಳನ್ನು ಪ್ರಕಟಿಸಿದ್ದರು.‌ ಅವೆಲ್ಲವೂ ಲೋಹಿಯಾವಾದ ಪಾಠಕ್ಕೆ ಪಠ್ಯಗಳಂತಿವೆ.

ಲೋಹಿಯಾ ಅವರಂತೆ ಕೊನೆಯ ವರೆಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಭಿನ್ನಾಭಿಪ್ರಾಯ ಮತ್ತು ಅಂತರ ಇಟ್ಟುಕೊಂಡೇ ಬದುಕಿದರು. ಇದೇ ಕಾರಣದಿಂದಾಗಿ ಇತ್ತೀಚಿನ ವರೆಗೆ ಬಿಜೆಪಿಯನ್ನು ವಿರೋಧಿಸಬೇಕಾಗಿರುವಷ್ಟು ವಿರೋಧಿಸುತ್ತಿರಲಿಲ್ಲ.

ನಾನು ಮುಖ್ಯಮಂತ್ರಿ ಕಚೇರಿ ಸೇರಿದ ನಂತರ ಉದ್ದೇಶಪೂರ್ವಕವಾಗಿ ನನ್ನೊಡನೆ ಕಾಂಗ್ರೆಸ್ ಬಗ್ಗೆ ಕಟುವಾಗಿ ಮಾತನಾಡುತ್ತಿದ್ದರು. ನಾನು ಅಷ್ಟೇ ಕಟುವಾಗಿ ಬಿಜೆಪಿ, ಆರ್ ಎಸ್ ಎಸ್ ಗಳನ್ನು ಟೀಕಿಸುತ್ತಿದ್ದೆ. ನಮ್ಮ ನಡುವಿನ ಬಹುತೇಕ ಕೋಳಿಜಗಳಗಳಿಗೆ ಇದೇ ಕಾರಣವಾಗಿರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಈ ವಿಷಯದ ಚರ್ಚೆಗಳನ್ನು ನಡೆಸುತ್ತಿರಲಿಲ್ಲ.

ಹಣಕಾಸಿನ ವ್ಯವಹಾರದಲ್ಲಿ ಅವರಷ್ಟು ಪ್ರಾಮಾಣಿಕ, ನಿಷ್ಠುರರ ವ್ಯಕ್ತಿಗಳನ್ನೇ ನಾನು ಕಂಡಿಲ್ಲ, ಬಹುಷ: ಕಾಣಲು ಸಾಧ್ಯವೇ ಇಲ್ಲವೇನೋ? ಹೊಸ‌ಮನುಷ್ಯ ವಿಶೇಷಾಂಕಕ್ಕೆ ಲೇಖನಗಳನ್ನು ಬರೆದಾಗ ತಪ್ಪದೆ ಸಂಭಾವನೆ ಕೊಡುತ್ತಿದ್ದರು. ವಿಶೇಷಾಂಕಕ್ಕೆ ಜಾಹೀರಾತಿನಿಂದ ಬಂದಿರುವ ಹಣ ಮತ್ತು ಖರ್ಚಾಗಿರುವ ಹಣವನ್ನು ಲೆಕ್ಕ‌‌ಮಾಡಿ ಲೇಖಕರಿಗೆ ಹಂಚುತ್ತಿದ್ದರು.

‘ಸಾರ್, ಪತ್ರಿಕೆ ನಡೆಸುವುದು ಕಷ್ಟ ಇದೆ, ಉಳಿದ ಹಣ ಇಟ್ಕೊಳ್ಳಿ’ ಎಂದರೆ ಒಪ್ಪುತ್ತಿರಲಿಲ್ಲ. ಕೊನೆಗೆ ಪುಸ್ತಕ ಕಳಿಸಿ ಎಂದು ಹೇಳಿದಾಗ‌ ಲೆಕ್ಕಹಾಕಿ ಅಷ್ಟೇ ಬೆಲೆಯ ಪುಸ್ತಕ ಕಳಿಸಿದ್ದರು. ಇಂತಹ ನಿಷ್ಠುರ ಪ್ರಾಮಾಣಿಕತೆಯನ್ನು ಸಣ್ಣ ಪತ್ರಿಕೆಗಳು ಬಿಡಿ ದೊಡ್ಡ ಪತ್ರಿಕೆಗಳಿಂದಲೂ ನಿರೀಕ್ಷಿಸಲು ಸಾಧ್ಯ ಇಲ್ಲ.

ನಾಗಭೂಷಣ್ ಅವರಿಂದ ಕಲಿಯಬೇಕಾದ ಹಲವಾರು ಪಾಠಗಳಿವೆ, ಅವುಗಳಲ್ಲಿ ಎಂದೂ ಬತ್ತಿಹೋಗದ ಹಾಗೆ ಕಾಪಿಟ್ಟುಕೊಂಡ ಬಂದಿದ್ದ ಅವರ ಜೀವನೋತ್ಸಾಹವೂ ಒಂದು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರೂ ಅದೆಂದೂ ಅವರ ಓದು-ಬರವಣಿಗೆಗಳಿಗೆ ಅಡ್ಡಿಯಾಗಿರಲಿಲ್ಲ.

ನಾಗಭೂಷಣ್ ಅವರ ಬದುಕಿನ ಯಶಸ್ಸಿನಲ್ಲಿ
ಈ ಕಪ್ಪು ಹುಡುಗನ ಪ್ರೀತಿಗೆ ಬಿದ್ದು ಕೊನೆಯ ವರೆಗೂ ಅದನ್ನು ನಿಭಾಯಿಸಿದ ಸವಿತಾ ನಾಗಭೂಷಣ್ ಪಾತ್ರ ದೊಡ್ಡದು. ಗಂಡನ‌ ಆರೈಕೆಗಾಗಿ ಸ್ವಯಂನಿವೃತ್ತಿ ಪಡೆದು ತಾಯಿಯಂತೆ ಸಲಹಿದ್ದಾರೆ. ಒಂದು ರೀತಿಯಲ್ಲಿ ಇಬ್ಬರೂ ಪರಸ್ಪರರಿಗೆ ಮಕ್ಕಳಂತಿದ್ದರು. ಅನಿವಾರ್ಯವಾದ ಅಗಲಿಕೆಯ ದಿನಗಳಲ್ಲಿ ಹೇಗೆ ಬದುಕಬೇಕೆಂಬುದನ್ನು ನಾಗಭೂಷಣ್ ಖಂಡಿತ ಹೇಳಿಕೊಟ್ಟು ಹೋಗಿರುತ್ತಾರೆ, ಹಾಗೆಯೇ ಅವರು ಬದುಕಲಿ, ನಾಗಭೂಷಣ್ ಅವರನ್ನು ಪ್ರೀತಿಸುವವರೆಲ್ಲರೂ ಸವಿತಾ ಅವರ ಜೊತೆಯಲ್ಲಿಯೂ ಇರುತ್ತಾರೆ.

ನಾಲ್ಕು ದಿಕ್ಕುಗಳಿಂದಲೂ ನಿರಾಶೆ ,ಹತಾಶೆ, ಸೋಲುಗಳ ಕಾರ್ಮೋಡ ಆವರಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ನಾವೆಲ್ಲರೂ ಡಿಎಸ್ ಎನ್ ಅವರ ನಿಷ್ಠುರತೆ, ಪ್ರಾಮಾಣಿಕತೆ, ಬದ್ಧತೆಯ ಜೊತೆಗೆ ಒಂದೆರಡು ಬೊಗಸೆ ಅವರಲ್ಲಿದ್ದ ಜೀವನೋತ್ಸಾಹವನ್ನು ಪಡೆದುಕೊಳ್ಳಲು ಸಾಧ್ಯವಾದರೆ ನಮ್ಮ ಬದುಕು ಅರ್ಥಪೂರ್ಣವಾದೀತು,‌ ಅವರ ಹಾಗೆ.

ಪ್ರೀತಿಯ ಮೇಸ್ಟ್ರೇ, ನಿಮ್ಮೆಲ್ಲ ಪ್ರೀತಿ,‌ ಜಗಳ, ಕಾಳಜಿ, ನಂಬಿಕೆಗಳನ್ನು ಸದಾ ನೆನಪಲ್ಲಿಟ್ಟುಕೊಳ್ಳುವೆ. ಬದುಕು ಹೇಗಿರಬೇಕೆನ್ನುವುದನ್ನು ಬದುಕಿ ತೋರಿಸಿದ್ದೀರಿ.

ನಿಮಗೆ ಗೌರವಾದರದ ವಿದಾಯ…


  • ಎಂ ರಾಘವೇಂದ್ರ, ಪತ್ರಕರ್ತರು, ಸಾಗರ

ಬಿಟ್ಟು ಹೋಗಿರುವ ಆಸ್ತಿ ಕರಗುವುದಿಲ್ಲ…
( ಈ ಕ್ಷಣಕ್ಕೆ ಸಿಕ್ಕಿರುವವು ಇವು ಇನ್ನೂ ಸುಮಾರಿವೆ. )
ಹಿರಿಯ ಲೇಖಕರು,ಸಮಾಜವಾದಿ ಚಿಂತಕ ಡಿ.ಎಸ್.ನಾಗಭೂಷಣ ಅವರು ನಮ್ಮನ್ನು ಅಗಲಿದ್ದಾರೆ.ಅವರ ಗಾಂಧಿ ಕಥನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭ್ಯವಾಗಿದೆ.ನೇರ ನಡೆ,ನುಡಿ,ನಿಷ್ಠುರ ವ್ಯಕ್ತಿ ತ್ವದ ಡಿಎಸ್ ಎನ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ,ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.

ಸಾಹಿತ್ಯ, ಸಂಸ್ಕೃತಿ,ಕಲೆ,ರಾಜಕೀಯದ ಕುರಿತು ಅಪಾರವಾದ ತಿಳವಳಿಕೆ,ಪಾಂಡಿತ್ಯ ಹೊಂದಿದ್ದ ನಾಗಭೂಷಣ್ ಸಮಕಾಲೀನ ವಿದ್ಯಮಾನಗಳಿಗೆ ಪ್ರತಿಕ್ರಿಯಿಸುತ್ತಿದ್ದ ರೀತಿ ವಿಶಿಷ್ಟವಾಗಿತ್ತು.
ಲೋಹಿಯಾರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದ ಅವರು ಈಚೀನ ವರ್ಷಗಳಲ್ಲಿ ಗಾಂಧೀವಾದದ ಕಡೆ ಹೆಚ್ಚು ಒಲವು ತೋರಿದ್ದರು.ಜಾಗತೀಕರಣ ತಂದಿರುವ ವಿಸ್ಮೃತಿಗಳನ್ನು ಎದುರಿಸಲು ಗಾಂಧೀ ಪ್ರತಿಪಾದಿಸಿದ ಸರಳ,ಸಭ್ಯ ,ಕಡಿಮೆ ಅವಶ್ಯಕತೆಗಳ ಬದುಕು ನಮ್ಮದಾಗಬೇಕು ಎಂದು ಬಯಸಿದ್ದರು.

ಪ್ರತಿವರ್ಷ ಅಕ್ಟೋಬರ್ ನಲ್ಲಿ ಲೋಹಿಯಾ ಪ್ರತಿಷ್ಠಾನದ ಮೂಲಕ ಕುಪ್ಪಳ್ಳಿಯಲ್ಲಿ ಅವರು ಆಯೋಜಿಸುತ್ತಿದ್ದ ಸಮಾಜವಾದಿ ಅಧ್ಯಯನ ಶಿಬಿರದ ಮೂಲಕ ಯುವಜನರಲ್ಲಿ ಗಾಂಧಿ,ಲೋಹಿಯಾ.ಅಂಬೇಡ್ಕರ್, ಜೆ.ಪಿ.ಚಿಂತನೆಯನ್ನು ತಲುಪಿಸಲು ಉತ್ಸುಕರಾಗಿದ್ದರು.ಮೇಲ್ನೋಟಕ್ಕೆ ಒರಟು ಸ್ವಭಾವದವರಂತೆ ಕಾಣುತ್ತಿದ್ದ ಡಿಎಸ್ ಎನ್ ಆಳದಲ್ಲಿ ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದರು. ಬಲಪಂಥೀಯ ರಾಜಕಾರಣದ ದೋಷಗಳನ್ನು ಗುರುತಿಸಿ ಟೀಕಿಸುವಷ್ಟೆ ಪ್ರಖರತೆಯನ್ನು ಕಾಂಗ್ರೆಸ್ ನ ಓಲೈಕೆ ರಾಜಕಾರಣದ ಕುರಿತೂ ತೋರುತ್ತಿದ್ದರು.
ನಾಗಭೂಷಣ್ ರ ಎಲ್ಲ ಸಮಾಜಮುಖಿ ಕೆಲಸಗಳ ಹಿಂದೆ ಗಟ್ಟಿಯಾಗಿ ನಿಂತವರು ಅವರ ಪತ್ನಿ ಕವಯತ್ರಿ ಸವಿತಾ ನಾಗಭೂಷಣ. ಈ ಹೊತ್ತಿನಲ್ಲಿ ನಾವು ಸವಿತಾ ಅವರ ಜೊತೆ ನಿಲ್ಲಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending