Connect with us

ಬಹಿರಂಗ

ಸಾಮಾಜಿಕ ಪ್ರಜ್ಞೆಯೂ ಸಾಂಸ್ಕೃತಿಕ ಭೂಮಿಕೆಗಳೂ

Published

on


ಬೌದ್ಧಿಕ ಆಲೋಚನಾಕ್ರಮವನ್ನು ಮೊಳಕೆಯಲ್ಲೇ ಚಿವುಟುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ.


  • ನಾ ದಿವಾಕರ

ಳುವ ವರ್ಗಗಳು ಸದಾ ಸಮಾಜದಲ್ಲಿನ ಪ್ರಬಲ ವರ್ಗಗಳ ಭಾಷೆಯಲ್ಲೇ ಮಾತನಾಡಲಿಚ್ಚಿಸುತ್ತದೆ. ಪ್ರಜಾಪ್ರಭುತ್ವದಲ್ಲೂ ಸಹ ಸಾಂವಿಧಾನಿಕ ಮಾರ್ಗಗಳ ಮೂಲಕವೇ ಪ್ರಬಲ ವರ್ಗಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಗಳಿರುವುದರಿಂದ ಆಡಳಿತ ವ್ಯವಸ್ಥೆಯ ಎಲ್ಲ ಕವಲುಗಳಲ್ಲೂ ಇದೇ ವರ್ಗಗಳ ಅಭಿಪ್ರಾಯ, ಪ್ರತಿಪಾದನೆ ಮತ್ತು ತಾತ್ವಿಕ ನೆಲೆಗಳು ತಮ್ಮ ಪಾರಮ್ಯ ಕಂಡುಕೊಳ್ಳುತ್ತವೆ.

ವರ್ತಮಾನ ಭಾರತದ ಸಂದರ್ಭದಲ್ಲಿ ಈ ವರ್ಗಗಳನ್ನು ನಾವು ಮೂರು ಮಜಲುಗಳಲ್ಲಿ ಗುರುತಿಸಬಹುದು. ಮೊದಲನೆಯದು ಊಳಿಗಮಾನ್ಯ ವ್ಯವಸ್ಥೆಯ ಪಳೆಯುಳಿಕೆಗಳಾಗಿಯೇ ಈಗ ಕಾರ್ಪೋರೇಟ್‌ ಮಾರುಕಟ್ಟೆಯ ವಾರಸುದಾರರಾಗಿ ರೂಪಾಂತರಗೊಂಡಿರುವ ಔದ್ಯಮಿಕ ವರ್ಗ. ಎರಡನೆಯದು ಪ್ರಜಾಪ್ರಭುತ್ವದ ನೆರಳಿನಲ್ಲೇ, ಸಾಂವಿಧಾನಿಕ ಮಾರ್ಗದಲ್ಲೇ ಜನಪ್ರಾತಿನಿಧ್ಯದ ವಾರಸುದಾರಿಕೆ ವಹಿಸಿಕೊಂಡಿರುವ ಅಧಿಕಾರ ರಾಜಕಾರಣದ ಉತ್ತರಾಧಿಕಾರಿಗಳು.

ಮೂರನೆಯದು ಶ್ರೇಣೀಕೃತ ಜಾತಿ ವ್ಯವಸ್ಥೆಯನ್ನು ಆಧುನಿಕತೆಯ ಕವಚದೊಂದಿಗೆ ಯಥಾವತ್ತಾಗಿ ಕಾಪಾಡಿಕೊಂಡು ಬಂದಿರುವ ಸಾಂಸ್ಕೃತಿಕ ಆಧಿಪತ್ಯದ ವಾರಸುದಾರರು. ಈ ಮೂರೂ ವರ್ಗಗಳನ್ನು ಚುನಾವಣಾ ರಾಜಕಾರಣದ ಅಂಗಳದಲ್ಲಿ ಪ್ರತ್ಯೇಕಿಸಬಹುದಾದರೂ, ಪ್ರಭುತ್ವದ ಆಡಳಿತ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಏಕಾಭಿಪ್ರಾಯ ಹೊಂದಿರುವ ಒಂದು ಗುಂಪಾಗಿ ಕಾಣಬಹುದು.

ಸಾಮಾಜಿಕವಾಗಿ ಭಾರತ ತನ್ನ ಸಾಂವಿಧಾನಿಕ ಮೌಲ್ಯಗಳಿಗನುಗುಣವಾಗಿ ಎಷ್ಟೇ ಸಮಾನತೆಯ ಹಾದಿಯಲ್ಲಿ ಸಾಗುತ್ತಿದ್ದರೂ, ಪ್ರಬಲ ಜಾತಿ ಸಮುದಾಯಗಳು ಗ್ರಾಮದಿಂದ ದೆಹಲಿಯವರೆಗೆ ತಮ್ಮ ಆಧಿಪತ್ಯವನ್ನು ಸಾಧಿಸಿವೆ. ಸಮತಲ ನೆಲೆಯಲ್ಲಿ ಕಾಣಬಹುದಾದ ಸಮಾನತೆಯ ಹಾದಿಗಳು ಲಂಬ ನೆಲೆಯಲ್ಲಿ ಸಮತೋಲನವನ್ನು ಕಳೆದುಕೊಳ್ಳುವುದನ್ನೂ ಗಮನಿಸುತ್ತಿದ್ದೇವೆ. ಹಾಗಾಗಿಯೇ ಮೀಸಲಾತಿಯ ಫಲಾನುಭವಿಗಳೂ ಕೆಲವೊಮ್ಮೆ ಲಂಬನೆಲೆಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ.

ಊಳಿಗಮಾನ್ಯ ಧೋರಣೆ ಮತ್ತು ಪಿತೃಪ್ರಧಾನ ಮನಸ್ಥಿತಿ ಇಂದಿಗೂ ಜೀವಂತವಾಗಿರುವ ಭಾರತೀಯ ಸಮಾಜದಲ್ಲಿ ಈ ಮೇಲರಿಮೆಯ ಅಹಮಿಕೆಗಳು ಮತ್ತು ಶ್ರೇಷ್ಠತೆಯ ಜೀವಂತಿಕೆಯೇ ಇಲ್ಲಿನ ಕಾರ್ಪೋರೇಟ್‌ ಮಾರುಕಟ್ಟೆ ವ್ಯವಸ್ಥೆಯ ಬಂಡವಾಳಶಾಹಿ ಅಭಿವೃದ್ಧಿ ಮಾರ್ಗಗಳನ್ನು ಇಂದಿಗೂ ರಕ್ಷಿಸುತ್ತಿವೆ. ಸಾಮಾಜಿಕ ಸಮಾನತೆಯೊಂದಿಗೆ ಆರ್ಥಿಕ ಸಮಾನತೆಯನ್ನೂ ಸಾಧಿಸದಿದ್ದರೆ ಪ್ರಜಾಪ್ರಭುತ್ವ ಪರಿಪೂರ್ಣವಾಗುವುದಿಲ್ಲ ಎಂಬ ಅಂಬೇಡ್ಕರ್‌ ಅವರ ಮಾತುಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ.

ಬಂಡವಾಳಶಾಹಿ ಆರ್ಥಿಕತೆಯನ್ನೇ ಪೋಷಿಸಿಕೊಂಡು ಬಂದಿರುವ ಭಾರತದ ಆಳುವ ವರ್ಗಗಳು, ಪಕ್ಷಾತೀತವಾಗಿ ಈ ತರತಮಗಳನ್ನೂ ಕಾಪಾಡಿಕೊಂಡು ಬಂದಿವೆ. ಭಾರತದ ಮೇಲ್ಪದರದ ಶೇ 10ರಷ್ಟು ಜನರ ಬಳಿ ದೇಶದ ಶೇ 77ರಷ್ಟು ಸಂಪತ್ತು ಕ್ರೋಢೀಕೃತವಾಗಿದ್ದರೆ, ಶೇ 57ರಷ್ಟು ರಾಷ್ಟ್ರೀಯ ಆದಾಯದ ಪಾಲನ್ನು ಹೊಂದಿದೆ. ಶೇ 1ರಷ್ಟು ಜನರ ಬಳಿ ಶೇ 22ರಷ್ಟು ರಾಷ್ಟ್ರೀಯ ಆದಾಯ ಶೇಖರಣೆಯಾಗಿದೆ. 2017ರ ನಂತರ ಉತ್ಪಾದನೆಯಾದ ಶೇ 73ರಷ್ಟು ರಾಷ್ಟ್ರೀಯ ಸಂಪತ್ತು ಮೇಲ್ಪದರದ ಶೇ 1ರಷ್ಟು ಜನರ ಪಾಲಾಗಿದೆ.

ಭಾರತ ಜಾಗತಿಕ ಬಂಡವಾಳ ಮಾರುಕಟ್ಟೆಯಲ್ಲಿ ಯಾವ ಸ್ಥಾನವನ್ನು ಗಳಿಸಿದರೂ, ತಳಮಟ್ಟದ ವಾಸ್ತವ ಸನ್ನಿವೇಶವನ್ನು ಗಮನಿಸಿದಾಗ ಅನೌಪಚಾರಿಕ ಕ್ಷೇತ್ರವೇ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿರುವುದು ಕಂಡುಬರುತ್ತದೆ. ಎನ್‌ಎಸ್‌ಎಸ್‌ಒ ಬಿಡುಗಡೆ ಮಾಡಿರುವ ಇತ್ತೀಚಿನ ಅಧಿಕೃತ ವರದಿಯ ಪ್ರಕಾರ ಭಾರತದ ಕಾರ್ಮಿಕರಲ್ಲಿ ಶೇ 93ರಷ್ಟು ಅನೌಪಚಾರಿಕ ವಲಯದಲ್ಲಿದ್ದಾರೆ.

ಕೋವಿದ್‌ ಲಾಕ್‌ಡೌನ್‌ ಸಂದರ್ಭದಲ್ಲಿ ತೀವ್ರ ಆಘಾತಕ್ಕೊಳಗಾದ ಈ ವಲಯ ನಂತರ ಚೇತರಿಸಿಕೊಂಡಿದ್ದರೂ, ಮುಂಚಿನ ಸ್ಥಿತಿಗೆ ತಲುಪಲು ಸಾಧ್ಯವಾಗಿಲ್ಲ. 2021ರ ಸಮೀಕ್ಷೆಯ ಪ್ರಕಾರ ದೇಶದಲ್ಲಿರುವ ಒಟ್ಟು 6.36 ಕೋಟಿ ಉದ್ಯಮಗಳ ಪೈಕಿ ಶೇ 99.7ರಷ್ಟು ಉದ್ದಿಮೆಗಳು ಅಸಂಘಟಿತ ಕ್ಷೇತ್ರದಲ್ಲಿದೆ.

ನೋಂದಣಿಯಾಗಿರುವ ಔಪಚಾರಿಕ ಕ್ಷೇತ್ರದ ಉದ್ದಿಮೆಗಳ ಸಂಖ್ಯೆ ಕೇವಲ 1 ಲಕ್ಷ 70 ಸಾವಿರ ಅಥವಾ ಶೇ 0.3ರಷ್ಟಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಶ್ರಮಿಕರ ನೆರವಿಗೆ ಸೂಕ್ತ ಯೋಜನೆಗಳನ್ನು ರೂಪಿಸುವ ಸಲುವಾಗಿ ರಚಿಸಿರುವ ಇ-ಶ್ರಮ್‌ ಪೋರ್ಟಲ್‌ನಲ್ಲಿ ಅನೌಪಚಾರಿಕ ಕ್ಷೇತ್ರದ ಎಲ್ಲ ದುಡಿಮೆಗಾರರೂ ನೋಂದಣಿ ಮಾಡಿಸಬೇಕಿದೆ. ನಿಖರವಾಗಿ ಈ ವಲಯದಲ್ಲಿರುವ ಕಾರ್ಮಿಕರನ್ನು ಗುರುತಿಸುವುದೇ ಸಾಧ್ಯವಾಗದೆ ಇರುವುದರಿಂದ ನೋಂದಾಯಿತ 27.69 ಕೋಟಿ ಕಾರ್ಮಿಕರ ಪೈಕಿ ಶೇ 94ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ.

ನೋಂದಾಯಿತವಾಗಿರುವ 27.69 ಕೋಟಿ ಕಾರ್ಮಿಕರ ಪೈಕಿ ಶೇ 74ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಕಾರ್ಮಿಕರಿದ್ದಾರೆ. ಶೇ 45.32 ಒಬಿಸಿ, ಶೇ 20.95 ಪರಿಶಿಷ್ಟ ಜಾತಿ ಮತ್ತು ಶೇ 8.17ರಷ್ಟು ಪರಿಶಿಷ್ಟ ಪಂಗಡಗಳ ಕಾರ್ಮಿಕರಿದ್ದಾರೆ. ಅನೌಪಚಾರಿಕ ಕ್ಷೇತ್ರದಲ್ಲಿ ಶೇ 94.11ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ. ಶೇ 4.36ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ರಿಂದ 15 ಸಾವಿರ ರೂಗಳಷ್ಟಿದೆ.

ದೇಶದಲ್ಲಿ ಒಟ್ಟು 38 ಕೋಟಿ ಅನೌಪಚಾರಿಕ ವಲಯದ ಕಾರ್ಮಿಕರಿರುವುದಾಗಿ ಅಂದಾಜು ಮಾಡಲಾಗಿದ್ದು, ಈ ದತ್ತಾಂಶಗಳನ್ನು ಪರಿಶೀಲಿಸಿದರೆ ದೇಶದ ಆರ್ಥಿಕತೆಯಲ್ಲಿ ಅಸಮಾನತೆ ಢಾಳಾಗಿ ಕಾಣುತ್ತದೆ. ಈ ಕಾರ್ಮಿಕ ಕುಟುಂಬಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸುವುದು ಇ-ಶ್ರಮ್‌ ಪೋರ್ಟಲ್‌ನ ಸ್ಥಾಪಿತ ಉದ್ದೇಶವಾಗಿದೆ.

ಈ ಸಮೀಕ್ಷೆಯ ಅನುಸಾರ ನೋಂದಾಯಿತ ಶೇ 61.72ರಷ್ಟು ಕಾರ್ಮಿಕರ ವಯಸ್ಸು 18 ರಿಂದ 40 ವರ್ಷಗಳಷ್ಟಿದೆ. ಶೇ 22.12ರಷ್ಟು ಕಾರ್ಮಿಕರು 40 ರಿಂದ 40 ವಯೋಮಾನದವರಾಗಿದ್ದಾರೆ. ಶೇ 2.98ರಷ್ಟು ಕಾರ್ಮಿಕರ ವಯೋಮಾನ 16 ರಿಂದ 18 ವರ್ಷಗಳಾಗಿವೆ. ನೋಂದಾಯಿತ ಮಹಿಳಾ ಕಾರ್ಮಿಕರ ಸಂಖ್ಯೆ ಶೇ 52.18ರಷ್ಟಿದೆ. ಕೃಷಿ ಕ್ಷೇತ್ರವನ್ನು ಅವಲಂಬಿಸಿದ ಕಾರ್ಮಿಕರ ಸಂಖ್ಯೆಯೇ ಶೇ 52.11ರಷ್ಟಿದೆ. ಅಂದರೆ ಅರ್ಧಕ್ಕಿಂತಲೂ ಹೆಚ್ಚಿನ ಅಸಂಘಟಿತ ಕಾರ್ಮಿಕರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನೇ ಅವಲಂಬಿಸಿರುವುದು ಭಾರತೀಯ ಆರ್ಥಿಕತೆಯ ಸ್ಪಷ್ಟ ಚಿತ್ರಣವನ್ನು ನೀಡುತ್ತದೆ.

ಈ ಅಸಮಾನತೆಗಳು ಢಾಳಾಗಿ ಕಾಣುತ್ತಿರುವಂತೆಯೇ ದೇಶದ ಅನೌಪಚಾರಿಕ ವಲಯದ ಲಕ್ಷಾಂತರ ದುಡಿಮೆಯ ಕೈಗಳು ಬೀದಿಪಾಲಾಗುತ್ತಿವೆ. ಓಲಾ, ಊಬರ್‌, ಜಮೋಟೋ, ಸ್ವಿಗಿ ಮುಂತಾದ ಆದಾಯ ಮಾರ್ಗಗಳಲ್ಲಿ ಎದುರಾಗುತ್ತಿರುವ ಬಿಕ್ಕಟ್ಟು ಈ ದೇಶದ ನಿರುದ್ಯೋಗಿ ಯುವ ಜನತೆಯನ್ನು ಬಾಣಲೆಯಿಂದ ಬೆಂಕಿಗೆ ಬೀಳಿಸುತ್ತಿವೆ. ತಾತ್ಕಾಲಿಕವಾಗಿ ಜೀವನ ನಿರ್ವಹಣೆಗೆ ನೆರವಾಗುವ ಯಾವುದೇ ಉದ್ಯೋಗವೂ ಒಂದು ಸುಸ್ಥಿರ ಸಮಾಜವನ್ನು ನಿರ್ಮಿಸಲು ಪೂರಕವಾಗಿರುವುದಿಲ್ಲ. ಬಹುಶಃ ಇನ್ನು ಹತ್ತು ವರ್ಷಗಳಲ್ಲಿ ಭಾರತ ಈ ಸಂದಿಗ್ಧತೆಯನ್ನು ಎದುರಿಸುತ್ತದೆ.

ಸ್ವಯಂ ಉದ್ಯೋಗ, ಕೌಶಲ್ಯಾಧಾರಿತ ಉದ್ಯೋಗ ಮತ್ತು ತ್ವರಿತ ಆದಾಯ ಗಳಿಕೆಯ ಮಾರ್ಗಗಳು ಮಾರುಕಟ್ಟೆ ಅರ್ಥವ್ಯವಸ್ಥೆಯಲ್ಲಿ ಅದ್ಭುತ ಫಲಿತಾಂಶಗಳನ್ನು ತೋರುವುದಾದರೂ, ದೀರ್ಘಾವಧಿಯಲ್ಲಿ ಒಂದು ಅಸ್ಥಿರ ಸಮಾಜವನ್ನು ಸೃಷ್ಟಿಸುವುದನ್ನು ಹಲವು ದೇಶಗಳಲ್ಲಿ ಕಾಣಬಹುದು. ಹಾಗೆಯೇ ಮಾರುಕಟ್ಟೆ ವ್ಯವಸ್ಥೆ ರೂಪಿಸುವ ಉದ್ಯೋಗಾವಕಾಶಗಳು ಹಣಕಾಸು ಬಂಡವಾಳದ ಅವಶ್ಯಕತೆಗಳಿಗನುಗುಣವಾಗಿಯೇ ಇರುವುದರಿಂದ, ಈ ನೌಕರಿಯನ್ನು ಅವಲಂಬಿಸುವವರು ಮಾರುಕಟ್ಟೆ ವ್ಯತ್ಯಯಗಳ ಮೊದಲ ಬಲಿ ಆಗುತ್ತಾರೆ.

ಈ ಬಲಿಪೀಠಗಳನ್ನು ಸೃಷ್ಟಿಸಲೆಂದೇ ಸರ್ಕಾರಗಳು ಹಲವು ಯೋಜನೆಗಳನ್ನೂ, ಆಡಳಿತ ನೀತಿಗಳನ್ನೂ ರೂಪಿಸುತ್ತಿರುತ್ತವೆ. ಹಾಗಾಗಿಯೇ ಇಂದು ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಬಿಸಿಯೂಟ ಯೋಜನೆಯ ನೌಕರರು ತಮ್ಮ ಬದುಕಿನ ಘನತೆಗಾಗಿ, ಹಕ್ಕಿಗಾಗಿ ಹೋರಾಡುವಂತಾಗಿದೆ.

ದೇಶದ ಒಂದು ಬೃಹತ್‌ ಜನಸಮೂಹ ತಮ್ಮ ಜೀವನ ನಿರ್ವಹಣೆಗೆ ಪರದಾಡುತ್ತಿರುವುದನ್ನು ಅಧಿಕೃತ ಅಂಕಿಅಂಶಗಳೇ ಸಾಬೀತುಪಡಿಸುತ್ತವೆ. ಕರ್ನಾಟಕದಲ್ಲೇ 42 ಸಾವಿರ ಆಶಾ ಕಾರ್ಯಕರ್ತೆಯರು ತಮ್ಮ ಸೇವಾ ಭತ್ಯೆಗಳಿಗಾಗಿ, ಸುಭದ್ರ ನೌಕರಿಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಆಶಾ ಕಾರ್ಯಕರ್ತೆಯರು ಕನಿಷ್ಟ ವೇತನದೊಂದಿಗೆ, ಉದ್ಯೋಗ ಭದ್ರತೆ ಇಲ್ಲದೆ ಅನಿಶ್ಚಿತ ಬದುಕು ಎದುರಿಸುತ್ತಿದ್ದಾರೆ.

ಕರ್ನಾಟಕದಲ್ಲಿ 60 ವರ್ಷ ದಾಟಿದ ಕಾರಣಕ್ಕಾಗಿಯೇ ಹೊರಹಾಕಲ್ಪಟಿರುವ 12 ಸಾವಿರ ಬಿಸಿಯೂಟ ಯೋಜನೆಯ ಮಹಿಳೆಯರು ತಮ್ಮ ಜೀವನ ಭದ್ರತೆಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 13 ಲಕ್ಷ ಅಂಗನವಾಡಿ ನೌಕರರು, ಬಹುಪಾಲು ಮಹಿಳೆಯರು, ಹೊಸ ಶಿಕ್ಷಣ ನೀತಿಯ ಪರಿಣಾಮ ತಮ್ಮ ನೆಲೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ದೇಶದ ಬಹುದೊಡ್ಡ ಉದ್ಯೋಗದಾತ ಸಾರ್ವಜನಿಕ ಸಂಸ್ಥೆ ರೈಲ್ವೆ ಇಲಾಖೆಯಲ್ಲಿ 72 ಸಾವಿರ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಬಿಜೆಪಿ ಸಂಸದ ವರುಣ್‌ ಗಾಂಧಿ ಇತ್ತೀಚೆಗೆ ಹೇಳಿದಂತೆ 60 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ.

ಭಾರತದ ಬೃಹತ್‌ ಜನಸಮೂಹದ ಬದುಕಿನ ಪ್ರಶ್ನೆಯಾಗಿರುವ ಈ ಸಮಸ್ಯೆಗಳು ಇಂದಿನ ಸಾರ್ವಜನಿಕ ಸಂಕಥನದ ಒಂದು ಭಾಗವಾಗಬೇಕಿತ್ತು. ಆದರೆ ಭಾರತ ಇಂತಹ ಒಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, 45 ವರ್ಷಗಳಲ್ಲೇ ಅತಿ ಹೆಚ್ಚಿನ ನಿರುದ್ಯೋಗ ಪ್ರಮಾಣ ದಾಖಲಾಗಿದ್ದರೂ, ಎಂಟು ವರ್ಷಗಳಲ್ಲೇ ಅತಿ ಹೆಚ್ಚು ಹಣದುಬ್ಬರ ದಾಖಲಾಗಿದ್ದರೂ ಸಾರ್ವಜನಿಕ ಹಾಗೂ ಬೌದ್ಧಿಕ ವಲಯದ ಸಂಕಥನಗಳು ಭಿನ್ನ ಮಾರ್ಗದಲ್ಲಿ ಸಾಗುತ್ತಿವೆ. ಈ ವಿಕೃತ ಬೆಳವಣಿಗೆಯ ಮೂಲವನ್ನು ನಾವು ಸಾಂಸ್ಕೃತಿಕ ಹಾಗೂ ರಾಜಕೀಯ ಭೂಮಿಕೆಗಳಲ್ಲಿ ಶೋಧಿಸಬೇಕಿದೆ.

ಇಲ್ಲಿ ಬೌದ್ಧಿಕ ವಲಯದ ತಾತ್ವಿಕ ಗ್ರಹಿಕೆ ಮತ್ತು ಸಾಂಸ್ಕೃತಿಕ ವಲಯದ ಪ್ರಾಮಾಣಿಕತೆ ಮುಖ್ಯವಾಗುತ್ತದೆ. ರಾಜಕೀಯ ಮತ್ತು ಸೈದ್ಧಾಂತಿಕ ನಿಲುಮೆಗಳು ವಸ್ತುನಿಷ್ಠವಾಗದೆ ಹೋದರೆ ಸತ್ಯದ ಸಮಾಧಿಯಾಗುತ್ತದೆ. ತಾವು ಅನುಕರಿಸುವ ನಾಯಕರಲ್ಲಿ ಸರ್ವಶ್ರೇಷ್ಠತೆಯನ್ನು, ಸಾರ್ವಭೌಮತ್ವವನ್ನು ಕಾಣುವಂತಹ ವಂಧಿಮಾಗದ ಸಂಸ್ಕೃತಿಯನ್ನು ತಳಮಟ್ಟದವರೆಗೂ ತಲುಪಿಸಿರುವ ಭಾರತದ ರಾಜಕೀಯ ಪರಂಪರೆ ಇಂದು ದೇಶದ ಭವಿಷ್ಯತ್ತಿಗೆ ಮುಳುವಾಗಲಿದೆ. ಆಂತರಿಕ ಪ್ರಜಾತಂತ್ರದ ಮೌಲ್ಯಗಳನ್ನೇ ಮರೆತಿರುವ ರಾಜಕೀಯ ಪಕ್ಷಗಳು ಅಧಿಕಾರ ರಾಜಕಾರಣವನ್ನು ಒಂದು ಅವಕಾಶದ ಭೂಮಿಕೆ ಎಂದು ಭಾವಿಸದೆ, ತಮ್ಮ ವಾರಸುದಾರಿಕೆ ಅಥವಾ ಉತ್ತರಾಧಿಕಾರದ ವೇದಿಕೆ ಎಂದು ಭಾವಿಸುತ್ತಿರುವುದೇ ಇಂದಿನ ಸಕಲ ಸಮಸ್ಯೆಗಳಿಗೆ ಕಾರಣವಾಗಿದೆ.

ವರ್ತಮಾನದ ಭಾರತ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಈ ದೇಶದ ಸಂಸ್ಕೃತಿಯಷ್ಟೇ ವೈವಿಧ್ಯಮಯ ಅಷ್ಟೇ ಜಟಿಲ. ಆದರೆ ಈ ಸಮಸ್ಯೆಗಳಿಗೆ ಅಧಿಕಾರ ರಾಜಕಾರಣ ಸೂಚಿಸುತ್ತಿರುವ ಪರಿಹಾರ ಮಾರ್ಗಗಳು ಜನಸಾಮಾನ್ಯರಿಗೆ ಅರ್ಥವೇ ಆಗದಷ್ಟು ಸಂಕೀರ್ಣವಾಗಿರುತ್ತವೆ. ಹಾಗಾಗಿಯೇ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ಡ್ರೋನ್‌ ಮೂಲಕ ವೀಕ್ಷಿಸುತ್ತಿದ್ದೇನೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಿಂದ ಇಡೀ ದೇಶವೇ ಪುಳಕಿತವಾಗುತ್ತದೆ.

ಆದರೆ ಈ ಡ್ರೋನ್‌ ವೀಕ್ಷಣೆಗೆ ಕರ್ನಾಟಕದ ಭ್ರಷ್ಟಾಚಾರದ ಕೂಪಗಳು ನಿಲುಕದೆ ಹೋಗುತ್ತವೆ. ರಾಜಕೀಯ ಭ್ರಷ್ಟಾಚಾರ ಭಾರತದ ಆಡಳಿತ ವ್ಯವಸ್ಥೆಯ ಒಂದು ಅವಿಭಾಜ್ಯ ಅಂಗ ಎನ್ನುವ ವಾಸ್ತವವನ್ನು ಅರಿತಿದ್ದರೂ ಜನಸಾಮಾನ್ಯರು ಭ್ರಷ್ಟರನ್ನೇ ಪೋಷಿಸಲು ತತ್ವ ಸಿದ್ಧಾಂತಗಳ ಮೊರೆ ಹೋಗುತ್ತಿದ್ದಾರೆ. ಕರ್ನಾಟಕದಲ್ಲಿ ಕೇಳಿಬರುತ್ತಿರುವ 40 % ಕಮಿಷನ್‌ ದಂಧೆ, ಪಿಎಸ್‌ಐ ಪರೀಕ್ಷೆಯ ಹಗರಣ, ಕೆಪಿಎಸ್‌ಸಿ ಹಗರಣ ಇವೆಲ್ಲವೂ ಕೇವಲ ಅಧಿಕಾರಶಾಹಿಯ ಚೌಕಟ್ಟಿನಲ್ಲೇ ಕಂಡುಬರುತ್ತವೆ.

ಸಾರಿಗೆ ನೌಕರರ ಸಂಘಟಿತ ಶಕ್ತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ತಮ್ಮ ಪರಿಣತ ಕ್ಷೇತ್ರವನ್ನು ಬಿಟ್ಟು ಕಾರ್ಮಿಕ ಸಂಘಟನೆಗೆ ಮುಂದಾದ ಕೋಡಿಹಳ್ಳಿ ಚಂದ್ರಶೇಖರ್‌ ಈಗ ಬೃಹತ್‌ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ, ಪ್ರಾಮಾಣಿಕತೆಯನ್ನೇ ಹೊದ್ದಿಕೊಂಡಿರುವ ಆಮ್‌ ಆದ್ಮಿ ಪಕ್ಷ ಅವರನ್ನು ಉಚ್ಚಾಟಿಸಲು ಹಿಂಜರಿಯುತ್ತದೆ. ಕಾನೂನು ಪಾಲನೆ ರಕ್ಷಣೆ ಮತ್ತು ಸಾರ್ವಜನಿಕ ಸ್ವಾಸ್ಥ್ಯದ ಹೊಣೆ ಹೊರಬೇಕಾಗಿರುವ ಪೊಲೀಸ್‌ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವಾಡುತ್ತಿದೆ. ತಾಂಡವಾಡುತ್ತಿದೆ

ಈ ಎಲ್ಲ ಬೆಳವಣಿಗೆಗಳೂ ಅಭಿವೃದ್ಧಿ ಕಾಮಗಾರಿಗಳ ಒಂದು ಭಾಗವಾಗಿಯೇ ಇರುವಾಗ, ಡ್ರೋನ್‌ ವೀಕ್ಷಣೆಯಲ್ಲಿ ಕಾಣದೆ ಹೋಗುವುದಾದರೂ ಹೇಗೆ ? ಇಷ್ಟೆಲ್ಲಾ ಅಕ್ರಮಗಳ ನಡುವೆಯೂ ಸರ್ಕಾರಗಳು ಅಬಾಧಿತವಾಗಿರುತ್ತವೆ, ಸಂಬಂಧಪಟ್ಟ ಸಚಿವರು ʼಮೇಲಿನವರʼ ಕೃಪಾಕಟಾಕ್ಷದೊಂದಿಗೆ ನಿರಾಳವಾಗಿರುತ್ತಾರೆ. ಸಾರ್ವಜನಿಕ ವಲಯದಲ್ಲೂ ಇದು ಯಾವುದೇ ಪ್ರತಿರೋಧದ ದನಿಗಳನ್ನು ಮೂಡಿಸುವುದಿಲ್ಲ. ಏಕೆಂದರೆ ಜನಸಾಮಾನ್ಯರ ಸಾಮಾಜಿಕ ಪ್ರಜ್ಞೆ ಯಾವುದೋ ಒಂದು ನಿಷ್ಠೆಗೊಳಗಾಗಿ ನಿಷ್ಕ್ರಿಯವಾಗಿರುತ್ತದೆ.

ಈ ತಾರತಮ್ಯಗಳನ್ನು ಯಥಾವತ್ತಾಗಿ ಕಾಪಾಡಲೆಂದೇ ಅಥವಾ ಮತ್ತಷ್ಟು ಕಂದರಗಳನ್ನು ಸೃಷ್ಟಿಸುವ ಸಲುವಾಗಿಯೇ ರೂಪಿಸಲಾಗುವ ಆಡಳಿತ ನೀತಿಗಳನ್ನು ಜಾರಿಗೊಳಿಸಲು ಗ್ರಾಮ ಮಟ್ಟದಿಂದ ದೆಹಲಿಯವರೆಗೂ ಒಂದು ಸಾಮಾಜಿಕ ವ್ಯವಸ್ಥೆ ಇನ್ನೂ ಜೀವಂತವಾಗಿದೆ. ಈ ಸಾಮಾಜಿಕ ಚೌಕಟ್ಟು ಶತಮಾನಗಳ ಬುನಾದಿ ಇರುವ ಜಾತಿ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುತ್ತದೆ. ದಿನನಿತ್ಯ ಕೇಳಿಬರುವ ಜಾತಿ ದೌರ್ಜನ್ಯಗಳು ನಮ್ಮ ಆಂತರಿಕ ಪ್ರಜ್ಞೆಯನ್ನು ಕದಡುತ್ತಿಲ್ಲ. ಏಕೆಂದರೆ ದೌರ್ಜನ್ಯಕ್ಕೊಳಗಾಗುತ್ತಿರುವುದು ಆರ್ಥಿಕ ನೆಲೆಯಲ್ಲಿ ಕೆಳಸ್ತರಕ್ಕೆ ಸೇರಿದವರಾಗಿದ್ದಾರೆ.

ಇಲ್ಲಿರುವ ಜಾತ್ಯತೀತ ಲಕ್ಷಣ ರಾಜಕೀಯ ನೆಲೆಯಲ್ಲಾಗಲೀ, ಸಾಂಸ್ಕೃತಿಕ ನೆಲೆಯಲ್ಲಾಗಲೀ ಕಂಡುಬರುವುದಿಲ್ಲ. ಅಂದರೆ, ಮತನಿರಪೇಕ್ಷವಾಗಿ, ಜಾತಿ ಗೋಡೆಗಳನ್ನು ಮೀರಿದ ಒಂದು ಅಸಮಾನತೆ ನಮ್ಮ ಸಮಾಜದಲ್ಲಿ ಬೇರೂರುತ್ತಿದೆ. ಶ್ರೀಮಂತಿಕೆ ಮತ್ತು ದಾರಿದ್ರ್ಯತೆಯ ನಡುವಿನ ಕಂದರದಲ್ಲಿ ಹುದುಗಿಹೋಗುವ ಅಸಂಖ್ಯಾತ ಅಸಹಾಯಕ ದನಿಗಳು ತಮ್ಮ ಪ್ರತಿರೋಧವನ್ನು ದಾಖಲಿಸಲೂ ಸಾಧ್ಯವಾಗದಂತೆ ಕಾಯ್ದೆ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಎಲ್ಲ ಜಾತಿ ಮತದ ನೆಲೆಗಳಲ್ಲಿ ವಿಸ್ತರಿಸಿರುವ ಈ ತಾರತಮ್ಯಗಳನ್ನು ವಿರೋಧಿಸಲು ಅತ್ಯವಶ್ಯವಾದ ಒಂದು ಜಾತ್ಯತೀತ ಭೂಮಿಕೆಯನ್ನು ಶೈಶಾವಸ್ಥೆಯಲ್ಲೇ ಭಗ್ನಗೊಳಿಸಲಾಗುತ್ತಿದೆ.

ಯಾವುದೇ ಭೌಗೋಳಿಕ ರಾಷ್ಟ್ರದ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾತಾವರಣದಲ್ಲಿ ಜಾಗೃತವಾಗಿರಬೇಕಾದ ಸಾರ್ವಜನಿಕ ಅರಿವು ಮತ್ತು ಸಾಮಾಜಿಕ ಪ್ರಜ್ಞೆಯನ್ನು ಮೊಳಕೆಯಲ್ಲೇ ಚಿವುಟಿ, ಯಾವುದೋ ಒಂದು ಆಧಿಪತ್ಯಕ್ಕೊಳಪಡಿಸುವ ನಿಟ್ಟಿನಲ್ಲಿ ಇಂದು ರಾಷ್ಟ್ರ ರಾಜಕಾರಣ ಬೆಳೆಯುತ್ತಿದೆ. ಅಂತರಿಕವಾಗಿ ಜಾತಿ, ಉಪಜಾತಿ, ಒಳಜಾತಿ ಮತ್ತು ಮೇಲ್ಜಾತಿಗಳ ಆಧಿಪತ್ಯಗಳು ಬಲವಾಗುತ್ತಿರುವಂತೆಯೇ ವ್ಯಾಪಕ ನೆಲೆಯಲ್ಲಿ ಮತಧರ್ಮಗಳ ಆಧಿಪತ್ಯದ ನೆಲೆಗಳೂ ಪ್ರಬಲವಾಗುತ್ತಿವೆ.

ಈ ಆಧಿಪತ್ಯದ ನೆಲೆಗಳು ತಮ್ಮ ಸಾಂಸ್ಥಿಕ, ಸಾಂಘಿಕ ಅಸ್ತಿತ್ವವನ್ನು ಕಾಪಾಡಿಕೊಳ್ಳಲೆಂದೇ ಸಾರ್ವಜನಿಕ ಸಂಕಥನಗಳ ನಿರೂಪಣೆಗಳನ್ನೂ ನಿರ್ಧರಿಸುತ್ತವೆ. ಆಳುವ ವರ್ಗಗಳು ಈ ಆಧಿಪತ್ಯದ ನೆಲೆಗಳನ್ನೇ ಬಳಸಿಕೊಂಡು ಇಂತಹ ಸಾಪೇಕ್ಷ ನಿರೂಪಣೆಗಳಿಗೆ ಸಾರ್ವತ್ರಿಕತೆಯನ್ನು ಕಲ್ಪಿಸಲು ಸಾಂವಿಧಾನಿಕ ಮಾರ್ಗಗಳನ್ನೇ ಅನುಸರಿಸುತ್ತವೆ. ತಂತ್ರಜ್ಞಾನ ಯುಗದಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಡಿಜಿಟಲ್‌ ವೇದಿಕೆಗಳು ಇದಕ್ಕೆ ಸಹಾಯಕವಾಗಿರುತ್ತವೆ. ಇಂದು ಸಾರ್ವಜನಿಕವಾಗಿ ಬಹುಚರ್ಚಿತವಾಗಿರುವ ಪಠ್ಯ ಪರಿಷ್ಕರಣೆಯೂ ಇದರ ಒಂದು ಭಾಗವಷ್ಟೇ ಆಗಿದೆ.

ಹಿಂದುತ್ವ ರಾಜಕಾರಣ ಈ ಮೇಲ್ಜಾತಿ, ಮೇಲ್ವರ್ಗ ಮತ್ತು ವೈದಿಕಶಾಹಿ ಸಾಂಸ್ಕೃತಿಕ ನೆಲೆಗಳ ಸಮ್ಮಿಶ್ರಣವಾಗಿರುವುದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಈ ಆಧಿಪತ್ಯ ರಾಜಕಾರಣದ ಮಹತ್ವಾಕಾಂಕ್ಷೆಗೆ ಒಂದು ಪ್ರಜಾಸತ್ತಾತ್ಮಕ ಪ್ರತಿರೋಧದ ನೆಲೆಯನ್ನು ರೂಪಿಸುವುದು ಈ ಸಂದರ್ಭದ ಅನಿವಾರ್ಯತೆಯೂ ಆಗಿದೆ. ಭಾರತದ ಸಂವಿಧಾನ ಈ ನಿಟ್ಟಿನಲ್ಲಿ ನಮಗೆ ದಾರಿದೀಪವಾಗಬಹುದು ಹಾಗೆಯೇ ನಮ್ಮೊಳಗಿನ ಜಾಗೃತ ಸಾಮಾಜಿಕ ಪ್ರಜ್ಞೆ ಬೆಳಕಿನ ಕಿಂಡಿಯೂ ಆಗಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending