Connect with us

ಬಹಿರಂಗ

ಸಾಮಾಜಿಕ ಪ್ರಜ್ಞೆಯೂ ಸಾಂಸ್ಕೃತಿಕ ಭೂಮಿಕೆಗಳೂ

Published

on


ಬೌದ್ಧಿಕ ಆಲೋಚನಾಕ್ರಮವನ್ನು ಮೊಳಕೆಯಲ್ಲೇ ಚಿವುಟುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ.


  • ನಾ ದಿವಾಕರ

ಳುವ ವರ್ಗಗಳು ಸದಾ ಸಮಾಜದಲ್ಲಿನ ಪ್ರಬಲ ವರ್ಗಗಳ ಭಾಷೆಯಲ್ಲೇ ಮಾತನಾಡಲಿಚ್ಚಿಸುತ್ತದೆ. ಪ್ರಜಾಪ್ರಭುತ್ವದಲ್ಲೂ ಸಹ ಸಾಂವಿಧಾನಿಕ ಮಾರ್ಗಗಳ ಮೂಲಕವೇ ಪ್ರಬಲ ವರ್ಗಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಗಳಿರುವುದರಿಂದ ಆಡಳಿತ ವ್ಯವಸ್ಥೆಯ ಎಲ್ಲ ಕವಲುಗಳಲ್ಲೂ ಇದೇ ವರ್ಗಗಳ ಅಭಿಪ್ರಾಯ, ಪ್ರತಿಪಾದನೆ ಮತ್ತು ತಾತ್ವಿಕ ನೆಲೆಗಳು ತಮ್ಮ ಪಾರಮ್ಯ ಕಂಡುಕೊಳ್ಳುತ್ತವೆ.

ವರ್ತಮಾನ ಭಾರತದ ಸಂದರ್ಭದಲ್ಲಿ ಈ ವರ್ಗಗಳನ್ನು ನಾವು ಮೂರು ಮಜಲುಗಳಲ್ಲಿ ಗುರುತಿಸಬಹುದು. ಮೊದಲನೆಯದು ಊಳಿಗಮಾನ್ಯ ವ್ಯವಸ್ಥೆಯ ಪಳೆಯುಳಿಕೆಗಳಾಗಿಯೇ ಈಗ ಕಾರ್ಪೋರೇಟ್‌ ಮಾರುಕಟ್ಟೆಯ ವಾರಸುದಾರರಾಗಿ ರೂಪಾಂತರಗೊಂಡಿರುವ ಔದ್ಯಮಿಕ ವರ್ಗ. ಎರಡನೆಯದು ಪ್ರಜಾಪ್ರಭುತ್ವದ ನೆರಳಿನಲ್ಲೇ, ಸಾಂವಿಧಾನಿಕ ಮಾರ್ಗದಲ್ಲೇ ಜನಪ್ರಾತಿನಿಧ್ಯದ ವಾರಸುದಾರಿಕೆ ವಹಿಸಿಕೊಂಡಿರುವ ಅಧಿಕಾರ ರಾಜಕಾರಣದ ಉತ್ತರಾಧಿಕಾರಿಗಳು.

ಮೂರನೆಯದು ಶ್ರೇಣೀಕೃತ ಜಾತಿ ವ್ಯವಸ್ಥೆಯನ್ನು ಆಧುನಿಕತೆಯ ಕವಚದೊಂದಿಗೆ ಯಥಾವತ್ತಾಗಿ ಕಾಪಾಡಿಕೊಂಡು ಬಂದಿರುವ ಸಾಂಸ್ಕೃತಿಕ ಆಧಿಪತ್ಯದ ವಾರಸುದಾರರು. ಈ ಮೂರೂ ವರ್ಗಗಳನ್ನು ಚುನಾವಣಾ ರಾಜಕಾರಣದ ಅಂಗಳದಲ್ಲಿ ಪ್ರತ್ಯೇಕಿಸಬಹುದಾದರೂ, ಪ್ರಭುತ್ವದ ಆಡಳಿತ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಏಕಾಭಿಪ್ರಾಯ ಹೊಂದಿರುವ ಒಂದು ಗುಂಪಾಗಿ ಕಾಣಬಹುದು.

ಸಾಮಾಜಿಕವಾಗಿ ಭಾರತ ತನ್ನ ಸಾಂವಿಧಾನಿಕ ಮೌಲ್ಯಗಳಿಗನುಗುಣವಾಗಿ ಎಷ್ಟೇ ಸಮಾನತೆಯ ಹಾದಿಯಲ್ಲಿ ಸಾಗುತ್ತಿದ್ದರೂ, ಪ್ರಬಲ ಜಾತಿ ಸಮುದಾಯಗಳು ಗ್ರಾಮದಿಂದ ದೆಹಲಿಯವರೆಗೆ ತಮ್ಮ ಆಧಿಪತ್ಯವನ್ನು ಸಾಧಿಸಿವೆ. ಸಮತಲ ನೆಲೆಯಲ್ಲಿ ಕಾಣಬಹುದಾದ ಸಮಾನತೆಯ ಹಾದಿಗಳು ಲಂಬ ನೆಲೆಯಲ್ಲಿ ಸಮತೋಲನವನ್ನು ಕಳೆದುಕೊಳ್ಳುವುದನ್ನೂ ಗಮನಿಸುತ್ತಿದ್ದೇವೆ. ಹಾಗಾಗಿಯೇ ಮೀಸಲಾತಿಯ ಫಲಾನುಭವಿಗಳೂ ಕೆಲವೊಮ್ಮೆ ಲಂಬನೆಲೆಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ.

ಊಳಿಗಮಾನ್ಯ ಧೋರಣೆ ಮತ್ತು ಪಿತೃಪ್ರಧಾನ ಮನಸ್ಥಿತಿ ಇಂದಿಗೂ ಜೀವಂತವಾಗಿರುವ ಭಾರತೀಯ ಸಮಾಜದಲ್ಲಿ ಈ ಮೇಲರಿಮೆಯ ಅಹಮಿಕೆಗಳು ಮತ್ತು ಶ್ರೇಷ್ಠತೆಯ ಜೀವಂತಿಕೆಯೇ ಇಲ್ಲಿನ ಕಾರ್ಪೋರೇಟ್‌ ಮಾರುಕಟ್ಟೆ ವ್ಯವಸ್ಥೆಯ ಬಂಡವಾಳಶಾಹಿ ಅಭಿವೃದ್ಧಿ ಮಾರ್ಗಗಳನ್ನು ಇಂದಿಗೂ ರಕ್ಷಿಸುತ್ತಿವೆ. ಸಾಮಾಜಿಕ ಸಮಾನತೆಯೊಂದಿಗೆ ಆರ್ಥಿಕ ಸಮಾನತೆಯನ್ನೂ ಸಾಧಿಸದಿದ್ದರೆ ಪ್ರಜಾಪ್ರಭುತ್ವ ಪರಿಪೂರ್ಣವಾಗುವುದಿಲ್ಲ ಎಂಬ ಅಂಬೇಡ್ಕರ್‌ ಅವರ ಮಾತುಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ.

ಬಂಡವಾಳಶಾಹಿ ಆರ್ಥಿಕತೆಯನ್ನೇ ಪೋಷಿಸಿಕೊಂಡು ಬಂದಿರುವ ಭಾರತದ ಆಳುವ ವರ್ಗಗಳು, ಪಕ್ಷಾತೀತವಾಗಿ ಈ ತರತಮಗಳನ್ನೂ ಕಾಪಾಡಿಕೊಂಡು ಬಂದಿವೆ. ಭಾರತದ ಮೇಲ್ಪದರದ ಶೇ 10ರಷ್ಟು ಜನರ ಬಳಿ ದೇಶದ ಶೇ 77ರಷ್ಟು ಸಂಪತ್ತು ಕ್ರೋಢೀಕೃತವಾಗಿದ್ದರೆ, ಶೇ 57ರಷ್ಟು ರಾಷ್ಟ್ರೀಯ ಆದಾಯದ ಪಾಲನ್ನು ಹೊಂದಿದೆ. ಶೇ 1ರಷ್ಟು ಜನರ ಬಳಿ ಶೇ 22ರಷ್ಟು ರಾಷ್ಟ್ರೀಯ ಆದಾಯ ಶೇಖರಣೆಯಾಗಿದೆ. 2017ರ ನಂತರ ಉತ್ಪಾದನೆಯಾದ ಶೇ 73ರಷ್ಟು ರಾಷ್ಟ್ರೀಯ ಸಂಪತ್ತು ಮೇಲ್ಪದರದ ಶೇ 1ರಷ್ಟು ಜನರ ಪಾಲಾಗಿದೆ.

ಭಾರತ ಜಾಗತಿಕ ಬಂಡವಾಳ ಮಾರುಕಟ್ಟೆಯಲ್ಲಿ ಯಾವ ಸ್ಥಾನವನ್ನು ಗಳಿಸಿದರೂ, ತಳಮಟ್ಟದ ವಾಸ್ತವ ಸನ್ನಿವೇಶವನ್ನು ಗಮನಿಸಿದಾಗ ಅನೌಪಚಾರಿಕ ಕ್ಷೇತ್ರವೇ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿರುವುದು ಕಂಡುಬರುತ್ತದೆ. ಎನ್‌ಎಸ್‌ಎಸ್‌ಒ ಬಿಡುಗಡೆ ಮಾಡಿರುವ ಇತ್ತೀಚಿನ ಅಧಿಕೃತ ವರದಿಯ ಪ್ರಕಾರ ಭಾರತದ ಕಾರ್ಮಿಕರಲ್ಲಿ ಶೇ 93ರಷ್ಟು ಅನೌಪಚಾರಿಕ ವಲಯದಲ್ಲಿದ್ದಾರೆ.

ಕೋವಿದ್‌ ಲಾಕ್‌ಡೌನ್‌ ಸಂದರ್ಭದಲ್ಲಿ ತೀವ್ರ ಆಘಾತಕ್ಕೊಳಗಾದ ಈ ವಲಯ ನಂತರ ಚೇತರಿಸಿಕೊಂಡಿದ್ದರೂ, ಮುಂಚಿನ ಸ್ಥಿತಿಗೆ ತಲುಪಲು ಸಾಧ್ಯವಾಗಿಲ್ಲ. 2021ರ ಸಮೀಕ್ಷೆಯ ಪ್ರಕಾರ ದೇಶದಲ್ಲಿರುವ ಒಟ್ಟು 6.36 ಕೋಟಿ ಉದ್ಯಮಗಳ ಪೈಕಿ ಶೇ 99.7ರಷ್ಟು ಉದ್ದಿಮೆಗಳು ಅಸಂಘಟಿತ ಕ್ಷೇತ್ರದಲ್ಲಿದೆ.

ನೋಂದಣಿಯಾಗಿರುವ ಔಪಚಾರಿಕ ಕ್ಷೇತ್ರದ ಉದ್ದಿಮೆಗಳ ಸಂಖ್ಯೆ ಕೇವಲ 1 ಲಕ್ಷ 70 ಸಾವಿರ ಅಥವಾ ಶೇ 0.3ರಷ್ಟಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಶ್ರಮಿಕರ ನೆರವಿಗೆ ಸೂಕ್ತ ಯೋಜನೆಗಳನ್ನು ರೂಪಿಸುವ ಸಲುವಾಗಿ ರಚಿಸಿರುವ ಇ-ಶ್ರಮ್‌ ಪೋರ್ಟಲ್‌ನಲ್ಲಿ ಅನೌಪಚಾರಿಕ ಕ್ಷೇತ್ರದ ಎಲ್ಲ ದುಡಿಮೆಗಾರರೂ ನೋಂದಣಿ ಮಾಡಿಸಬೇಕಿದೆ. ನಿಖರವಾಗಿ ಈ ವಲಯದಲ್ಲಿರುವ ಕಾರ್ಮಿಕರನ್ನು ಗುರುತಿಸುವುದೇ ಸಾಧ್ಯವಾಗದೆ ಇರುವುದರಿಂದ ನೋಂದಾಯಿತ 27.69 ಕೋಟಿ ಕಾರ್ಮಿಕರ ಪೈಕಿ ಶೇ 94ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ.

ನೋಂದಾಯಿತವಾಗಿರುವ 27.69 ಕೋಟಿ ಕಾರ್ಮಿಕರ ಪೈಕಿ ಶೇ 74ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಕಾರ್ಮಿಕರಿದ್ದಾರೆ. ಶೇ 45.32 ಒಬಿಸಿ, ಶೇ 20.95 ಪರಿಶಿಷ್ಟ ಜಾತಿ ಮತ್ತು ಶೇ 8.17ರಷ್ಟು ಪರಿಶಿಷ್ಟ ಪಂಗಡಗಳ ಕಾರ್ಮಿಕರಿದ್ದಾರೆ. ಅನೌಪಚಾರಿಕ ಕ್ಷೇತ್ರದಲ್ಲಿ ಶೇ 94.11ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ. ಶೇ 4.36ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ರಿಂದ 15 ಸಾವಿರ ರೂಗಳಷ್ಟಿದೆ.

ದೇಶದಲ್ಲಿ ಒಟ್ಟು 38 ಕೋಟಿ ಅನೌಪಚಾರಿಕ ವಲಯದ ಕಾರ್ಮಿಕರಿರುವುದಾಗಿ ಅಂದಾಜು ಮಾಡಲಾಗಿದ್ದು, ಈ ದತ್ತಾಂಶಗಳನ್ನು ಪರಿಶೀಲಿಸಿದರೆ ದೇಶದ ಆರ್ಥಿಕತೆಯಲ್ಲಿ ಅಸಮಾನತೆ ಢಾಳಾಗಿ ಕಾಣುತ್ತದೆ. ಈ ಕಾರ್ಮಿಕ ಕುಟುಂಬಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸುವುದು ಇ-ಶ್ರಮ್‌ ಪೋರ್ಟಲ್‌ನ ಸ್ಥಾಪಿತ ಉದ್ದೇಶವಾಗಿದೆ.

ಈ ಸಮೀಕ್ಷೆಯ ಅನುಸಾರ ನೋಂದಾಯಿತ ಶೇ 61.72ರಷ್ಟು ಕಾರ್ಮಿಕರ ವಯಸ್ಸು 18 ರಿಂದ 40 ವರ್ಷಗಳಷ್ಟಿದೆ. ಶೇ 22.12ರಷ್ಟು ಕಾರ್ಮಿಕರು 40 ರಿಂದ 40 ವಯೋಮಾನದವರಾಗಿದ್ದಾರೆ. ಶೇ 2.98ರಷ್ಟು ಕಾರ್ಮಿಕರ ವಯೋಮಾನ 16 ರಿಂದ 18 ವರ್ಷಗಳಾಗಿವೆ. ನೋಂದಾಯಿತ ಮಹಿಳಾ ಕಾರ್ಮಿಕರ ಸಂಖ್ಯೆ ಶೇ 52.18ರಷ್ಟಿದೆ. ಕೃಷಿ ಕ್ಷೇತ್ರವನ್ನು ಅವಲಂಬಿಸಿದ ಕಾರ್ಮಿಕರ ಸಂಖ್ಯೆಯೇ ಶೇ 52.11ರಷ್ಟಿದೆ. ಅಂದರೆ ಅರ್ಧಕ್ಕಿಂತಲೂ ಹೆಚ್ಚಿನ ಅಸಂಘಟಿತ ಕಾರ್ಮಿಕರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನೇ ಅವಲಂಬಿಸಿರುವುದು ಭಾರತೀಯ ಆರ್ಥಿಕತೆಯ ಸ್ಪಷ್ಟ ಚಿತ್ರಣವನ್ನು ನೀಡುತ್ತದೆ.

ಈ ಅಸಮಾನತೆಗಳು ಢಾಳಾಗಿ ಕಾಣುತ್ತಿರುವಂತೆಯೇ ದೇಶದ ಅನೌಪಚಾರಿಕ ವಲಯದ ಲಕ್ಷಾಂತರ ದುಡಿಮೆಯ ಕೈಗಳು ಬೀದಿಪಾಲಾಗುತ್ತಿವೆ. ಓಲಾ, ಊಬರ್‌, ಜಮೋಟೋ, ಸ್ವಿಗಿ ಮುಂತಾದ ಆದಾಯ ಮಾರ್ಗಗಳಲ್ಲಿ ಎದುರಾಗುತ್ತಿರುವ ಬಿಕ್ಕಟ್ಟು ಈ ದೇಶದ ನಿರುದ್ಯೋಗಿ ಯುವ ಜನತೆಯನ್ನು ಬಾಣಲೆಯಿಂದ ಬೆಂಕಿಗೆ ಬೀಳಿಸುತ್ತಿವೆ. ತಾತ್ಕಾಲಿಕವಾಗಿ ಜೀವನ ನಿರ್ವಹಣೆಗೆ ನೆರವಾಗುವ ಯಾವುದೇ ಉದ್ಯೋಗವೂ ಒಂದು ಸುಸ್ಥಿರ ಸಮಾಜವನ್ನು ನಿರ್ಮಿಸಲು ಪೂರಕವಾಗಿರುವುದಿಲ್ಲ. ಬಹುಶಃ ಇನ್ನು ಹತ್ತು ವರ್ಷಗಳಲ್ಲಿ ಭಾರತ ಈ ಸಂದಿಗ್ಧತೆಯನ್ನು ಎದುರಿಸುತ್ತದೆ.

ಸ್ವಯಂ ಉದ್ಯೋಗ, ಕೌಶಲ್ಯಾಧಾರಿತ ಉದ್ಯೋಗ ಮತ್ತು ತ್ವರಿತ ಆದಾಯ ಗಳಿಕೆಯ ಮಾರ್ಗಗಳು ಮಾರುಕಟ್ಟೆ ಅರ್ಥವ್ಯವಸ್ಥೆಯಲ್ಲಿ ಅದ್ಭುತ ಫಲಿತಾಂಶಗಳನ್ನು ತೋರುವುದಾದರೂ, ದೀರ್ಘಾವಧಿಯಲ್ಲಿ ಒಂದು ಅಸ್ಥಿರ ಸಮಾಜವನ್ನು ಸೃಷ್ಟಿಸುವುದನ್ನು ಹಲವು ದೇಶಗಳಲ್ಲಿ ಕಾಣಬಹುದು. ಹಾಗೆಯೇ ಮಾರುಕಟ್ಟೆ ವ್ಯವಸ್ಥೆ ರೂಪಿಸುವ ಉದ್ಯೋಗಾವಕಾಶಗಳು ಹಣಕಾಸು ಬಂಡವಾಳದ ಅವಶ್ಯಕತೆಗಳಿಗನುಗುಣವಾಗಿಯೇ ಇರುವುದರಿಂದ, ಈ ನೌಕರಿಯನ್ನು ಅವಲಂಬಿಸುವವರು ಮಾರುಕಟ್ಟೆ ವ್ಯತ್ಯಯಗಳ ಮೊದಲ ಬಲಿ ಆಗುತ್ತಾರೆ.

ಈ ಬಲಿಪೀಠಗಳನ್ನು ಸೃಷ್ಟಿಸಲೆಂದೇ ಸರ್ಕಾರಗಳು ಹಲವು ಯೋಜನೆಗಳನ್ನೂ, ಆಡಳಿತ ನೀತಿಗಳನ್ನೂ ರೂಪಿಸುತ್ತಿರುತ್ತವೆ. ಹಾಗಾಗಿಯೇ ಇಂದು ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಬಿಸಿಯೂಟ ಯೋಜನೆಯ ನೌಕರರು ತಮ್ಮ ಬದುಕಿನ ಘನತೆಗಾಗಿ, ಹಕ್ಕಿಗಾಗಿ ಹೋರಾಡುವಂತಾಗಿದೆ.

ದೇಶದ ಒಂದು ಬೃಹತ್‌ ಜನಸಮೂಹ ತಮ್ಮ ಜೀವನ ನಿರ್ವಹಣೆಗೆ ಪರದಾಡುತ್ತಿರುವುದನ್ನು ಅಧಿಕೃತ ಅಂಕಿಅಂಶಗಳೇ ಸಾಬೀತುಪಡಿಸುತ್ತವೆ. ಕರ್ನಾಟಕದಲ್ಲೇ 42 ಸಾವಿರ ಆಶಾ ಕಾರ್ಯಕರ್ತೆಯರು ತಮ್ಮ ಸೇವಾ ಭತ್ಯೆಗಳಿಗಾಗಿ, ಸುಭದ್ರ ನೌಕರಿಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಆಶಾ ಕಾರ್ಯಕರ್ತೆಯರು ಕನಿಷ್ಟ ವೇತನದೊಂದಿಗೆ, ಉದ್ಯೋಗ ಭದ್ರತೆ ಇಲ್ಲದೆ ಅನಿಶ್ಚಿತ ಬದುಕು ಎದುರಿಸುತ್ತಿದ್ದಾರೆ.

ಕರ್ನಾಟಕದಲ್ಲಿ 60 ವರ್ಷ ದಾಟಿದ ಕಾರಣಕ್ಕಾಗಿಯೇ ಹೊರಹಾಕಲ್ಪಟಿರುವ 12 ಸಾವಿರ ಬಿಸಿಯೂಟ ಯೋಜನೆಯ ಮಹಿಳೆಯರು ತಮ್ಮ ಜೀವನ ಭದ್ರತೆಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 13 ಲಕ್ಷ ಅಂಗನವಾಡಿ ನೌಕರರು, ಬಹುಪಾಲು ಮಹಿಳೆಯರು, ಹೊಸ ಶಿಕ್ಷಣ ನೀತಿಯ ಪರಿಣಾಮ ತಮ್ಮ ನೆಲೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ದೇಶದ ಬಹುದೊಡ್ಡ ಉದ್ಯೋಗದಾತ ಸಾರ್ವಜನಿಕ ಸಂಸ್ಥೆ ರೈಲ್ವೆ ಇಲಾಖೆಯಲ್ಲಿ 72 ಸಾವಿರ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಬಿಜೆಪಿ ಸಂಸದ ವರುಣ್‌ ಗಾಂಧಿ ಇತ್ತೀಚೆಗೆ ಹೇಳಿದಂತೆ 60 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ.

ಭಾರತದ ಬೃಹತ್‌ ಜನಸಮೂಹದ ಬದುಕಿನ ಪ್ರಶ್ನೆಯಾಗಿರುವ ಈ ಸಮಸ್ಯೆಗಳು ಇಂದಿನ ಸಾರ್ವಜನಿಕ ಸಂಕಥನದ ಒಂದು ಭಾಗವಾಗಬೇಕಿತ್ತು. ಆದರೆ ಭಾರತ ಇಂತಹ ಒಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, 45 ವರ್ಷಗಳಲ್ಲೇ ಅತಿ ಹೆಚ್ಚಿನ ನಿರುದ್ಯೋಗ ಪ್ರಮಾಣ ದಾಖಲಾಗಿದ್ದರೂ, ಎಂಟು ವರ್ಷಗಳಲ್ಲೇ ಅತಿ ಹೆಚ್ಚು ಹಣದುಬ್ಬರ ದಾಖಲಾಗಿದ್ದರೂ ಸಾರ್ವಜನಿಕ ಹಾಗೂ ಬೌದ್ಧಿಕ ವಲಯದ ಸಂಕಥನಗಳು ಭಿನ್ನ ಮಾರ್ಗದಲ್ಲಿ ಸಾಗುತ್ತಿವೆ. ಈ ವಿಕೃತ ಬೆಳವಣಿಗೆಯ ಮೂಲವನ್ನು ನಾವು ಸಾಂಸ್ಕೃತಿಕ ಹಾಗೂ ರಾಜಕೀಯ ಭೂಮಿಕೆಗಳಲ್ಲಿ ಶೋಧಿಸಬೇಕಿದೆ.

ಇಲ್ಲಿ ಬೌದ್ಧಿಕ ವಲಯದ ತಾತ್ವಿಕ ಗ್ರಹಿಕೆ ಮತ್ತು ಸಾಂಸ್ಕೃತಿಕ ವಲಯದ ಪ್ರಾಮಾಣಿಕತೆ ಮುಖ್ಯವಾಗುತ್ತದೆ. ರಾಜಕೀಯ ಮತ್ತು ಸೈದ್ಧಾಂತಿಕ ನಿಲುಮೆಗಳು ವಸ್ತುನಿಷ್ಠವಾಗದೆ ಹೋದರೆ ಸತ್ಯದ ಸಮಾಧಿಯಾಗುತ್ತದೆ. ತಾವು ಅನುಕರಿಸುವ ನಾಯಕರಲ್ಲಿ ಸರ್ವಶ್ರೇಷ್ಠತೆಯನ್ನು, ಸಾರ್ವಭೌಮತ್ವವನ್ನು ಕಾಣುವಂತಹ ವಂಧಿಮಾಗದ ಸಂಸ್ಕೃತಿಯನ್ನು ತಳಮಟ್ಟದವರೆಗೂ ತಲುಪಿಸಿರುವ ಭಾರತದ ರಾಜಕೀಯ ಪರಂಪರೆ ಇಂದು ದೇಶದ ಭವಿಷ್ಯತ್ತಿಗೆ ಮುಳುವಾಗಲಿದೆ. ಆಂತರಿಕ ಪ್ರಜಾತಂತ್ರದ ಮೌಲ್ಯಗಳನ್ನೇ ಮರೆತಿರುವ ರಾಜಕೀಯ ಪಕ್ಷಗಳು ಅಧಿಕಾರ ರಾಜಕಾರಣವನ್ನು ಒಂದು ಅವಕಾಶದ ಭೂಮಿಕೆ ಎಂದು ಭಾವಿಸದೆ, ತಮ್ಮ ವಾರಸುದಾರಿಕೆ ಅಥವಾ ಉತ್ತರಾಧಿಕಾರದ ವೇದಿಕೆ ಎಂದು ಭಾವಿಸುತ್ತಿರುವುದೇ ಇಂದಿನ ಸಕಲ ಸಮಸ್ಯೆಗಳಿಗೆ ಕಾರಣವಾಗಿದೆ.

ವರ್ತಮಾನದ ಭಾರತ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಈ ದೇಶದ ಸಂಸ್ಕೃತಿಯಷ್ಟೇ ವೈವಿಧ್ಯಮಯ ಅಷ್ಟೇ ಜಟಿಲ. ಆದರೆ ಈ ಸಮಸ್ಯೆಗಳಿಗೆ ಅಧಿಕಾರ ರಾಜಕಾರಣ ಸೂಚಿಸುತ್ತಿರುವ ಪರಿಹಾರ ಮಾರ್ಗಗಳು ಜನಸಾಮಾನ್ಯರಿಗೆ ಅರ್ಥವೇ ಆಗದಷ್ಟು ಸಂಕೀರ್ಣವಾಗಿರುತ್ತವೆ. ಹಾಗಾಗಿಯೇ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ಡ್ರೋನ್‌ ಮೂಲಕ ವೀಕ್ಷಿಸುತ್ತಿದ್ದೇನೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಿಂದ ಇಡೀ ದೇಶವೇ ಪುಳಕಿತವಾಗುತ್ತದೆ.

ಆದರೆ ಈ ಡ್ರೋನ್‌ ವೀಕ್ಷಣೆಗೆ ಕರ್ನಾಟಕದ ಭ್ರಷ್ಟಾಚಾರದ ಕೂಪಗಳು ನಿಲುಕದೆ ಹೋಗುತ್ತವೆ. ರಾಜಕೀಯ ಭ್ರಷ್ಟಾಚಾರ ಭಾರತದ ಆಡಳಿತ ವ್ಯವಸ್ಥೆಯ ಒಂದು ಅವಿಭಾಜ್ಯ ಅಂಗ ಎನ್ನುವ ವಾಸ್ತವವನ್ನು ಅರಿತಿದ್ದರೂ ಜನಸಾಮಾನ್ಯರು ಭ್ರಷ್ಟರನ್ನೇ ಪೋಷಿಸಲು ತತ್ವ ಸಿದ್ಧಾಂತಗಳ ಮೊರೆ ಹೋಗುತ್ತಿದ್ದಾರೆ. ಕರ್ನಾಟಕದಲ್ಲಿ ಕೇಳಿಬರುತ್ತಿರುವ 40 % ಕಮಿಷನ್‌ ದಂಧೆ, ಪಿಎಸ್‌ಐ ಪರೀಕ್ಷೆಯ ಹಗರಣ, ಕೆಪಿಎಸ್‌ಸಿ ಹಗರಣ ಇವೆಲ್ಲವೂ ಕೇವಲ ಅಧಿಕಾರಶಾಹಿಯ ಚೌಕಟ್ಟಿನಲ್ಲೇ ಕಂಡುಬರುತ್ತವೆ.

ಸಾರಿಗೆ ನೌಕರರ ಸಂಘಟಿತ ಶಕ್ತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ತಮ್ಮ ಪರಿಣತ ಕ್ಷೇತ್ರವನ್ನು ಬಿಟ್ಟು ಕಾರ್ಮಿಕ ಸಂಘಟನೆಗೆ ಮುಂದಾದ ಕೋಡಿಹಳ್ಳಿ ಚಂದ್ರಶೇಖರ್‌ ಈಗ ಬೃಹತ್‌ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ, ಪ್ರಾಮಾಣಿಕತೆಯನ್ನೇ ಹೊದ್ದಿಕೊಂಡಿರುವ ಆಮ್‌ ಆದ್ಮಿ ಪಕ್ಷ ಅವರನ್ನು ಉಚ್ಚಾಟಿಸಲು ಹಿಂಜರಿಯುತ್ತದೆ. ಕಾನೂನು ಪಾಲನೆ ರಕ್ಷಣೆ ಮತ್ತು ಸಾರ್ವಜನಿಕ ಸ್ವಾಸ್ಥ್ಯದ ಹೊಣೆ ಹೊರಬೇಕಾಗಿರುವ ಪೊಲೀಸ್‌ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವಾಡುತ್ತಿದೆ. ತಾಂಡವಾಡುತ್ತಿದೆ

ಈ ಎಲ್ಲ ಬೆಳವಣಿಗೆಗಳೂ ಅಭಿವೃದ್ಧಿ ಕಾಮಗಾರಿಗಳ ಒಂದು ಭಾಗವಾಗಿಯೇ ಇರುವಾಗ, ಡ್ರೋನ್‌ ವೀಕ್ಷಣೆಯಲ್ಲಿ ಕಾಣದೆ ಹೋಗುವುದಾದರೂ ಹೇಗೆ ? ಇಷ್ಟೆಲ್ಲಾ ಅಕ್ರಮಗಳ ನಡುವೆಯೂ ಸರ್ಕಾರಗಳು ಅಬಾಧಿತವಾಗಿರುತ್ತವೆ, ಸಂಬಂಧಪಟ್ಟ ಸಚಿವರು ʼಮೇಲಿನವರʼ ಕೃಪಾಕಟಾಕ್ಷದೊಂದಿಗೆ ನಿರಾಳವಾಗಿರುತ್ತಾರೆ. ಸಾರ್ವಜನಿಕ ವಲಯದಲ್ಲೂ ಇದು ಯಾವುದೇ ಪ್ರತಿರೋಧದ ದನಿಗಳನ್ನು ಮೂಡಿಸುವುದಿಲ್ಲ. ಏಕೆಂದರೆ ಜನಸಾಮಾನ್ಯರ ಸಾಮಾಜಿಕ ಪ್ರಜ್ಞೆ ಯಾವುದೋ ಒಂದು ನಿಷ್ಠೆಗೊಳಗಾಗಿ ನಿಷ್ಕ್ರಿಯವಾಗಿರುತ್ತದೆ.

ಈ ತಾರತಮ್ಯಗಳನ್ನು ಯಥಾವತ್ತಾಗಿ ಕಾಪಾಡಲೆಂದೇ ಅಥವಾ ಮತ್ತಷ್ಟು ಕಂದರಗಳನ್ನು ಸೃಷ್ಟಿಸುವ ಸಲುವಾಗಿಯೇ ರೂಪಿಸಲಾಗುವ ಆಡಳಿತ ನೀತಿಗಳನ್ನು ಜಾರಿಗೊಳಿಸಲು ಗ್ರಾಮ ಮಟ್ಟದಿಂದ ದೆಹಲಿಯವರೆಗೂ ಒಂದು ಸಾಮಾಜಿಕ ವ್ಯವಸ್ಥೆ ಇನ್ನೂ ಜೀವಂತವಾಗಿದೆ. ಈ ಸಾಮಾಜಿಕ ಚೌಕಟ್ಟು ಶತಮಾನಗಳ ಬುನಾದಿ ಇರುವ ಜಾತಿ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುತ್ತದೆ. ದಿನನಿತ್ಯ ಕೇಳಿಬರುವ ಜಾತಿ ದೌರ್ಜನ್ಯಗಳು ನಮ್ಮ ಆಂತರಿಕ ಪ್ರಜ್ಞೆಯನ್ನು ಕದಡುತ್ತಿಲ್ಲ. ಏಕೆಂದರೆ ದೌರ್ಜನ್ಯಕ್ಕೊಳಗಾಗುತ್ತಿರುವುದು ಆರ್ಥಿಕ ನೆಲೆಯಲ್ಲಿ ಕೆಳಸ್ತರಕ್ಕೆ ಸೇರಿದವರಾಗಿದ್ದಾರೆ.

ಇಲ್ಲಿರುವ ಜಾತ್ಯತೀತ ಲಕ್ಷಣ ರಾಜಕೀಯ ನೆಲೆಯಲ್ಲಾಗಲೀ, ಸಾಂಸ್ಕೃತಿಕ ನೆಲೆಯಲ್ಲಾಗಲೀ ಕಂಡುಬರುವುದಿಲ್ಲ. ಅಂದರೆ, ಮತನಿರಪೇಕ್ಷವಾಗಿ, ಜಾತಿ ಗೋಡೆಗಳನ್ನು ಮೀರಿದ ಒಂದು ಅಸಮಾನತೆ ನಮ್ಮ ಸಮಾಜದಲ್ಲಿ ಬೇರೂರುತ್ತಿದೆ. ಶ್ರೀಮಂತಿಕೆ ಮತ್ತು ದಾರಿದ್ರ್ಯತೆಯ ನಡುವಿನ ಕಂದರದಲ್ಲಿ ಹುದುಗಿಹೋಗುವ ಅಸಂಖ್ಯಾತ ಅಸಹಾಯಕ ದನಿಗಳು ತಮ್ಮ ಪ್ರತಿರೋಧವನ್ನು ದಾಖಲಿಸಲೂ ಸಾಧ್ಯವಾಗದಂತೆ ಕಾಯ್ದೆ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಎಲ್ಲ ಜಾತಿ ಮತದ ನೆಲೆಗಳಲ್ಲಿ ವಿಸ್ತರಿಸಿರುವ ಈ ತಾರತಮ್ಯಗಳನ್ನು ವಿರೋಧಿಸಲು ಅತ್ಯವಶ್ಯವಾದ ಒಂದು ಜಾತ್ಯತೀತ ಭೂಮಿಕೆಯನ್ನು ಶೈಶಾವಸ್ಥೆಯಲ್ಲೇ ಭಗ್ನಗೊಳಿಸಲಾಗುತ್ತಿದೆ.

ಯಾವುದೇ ಭೌಗೋಳಿಕ ರಾಷ್ಟ್ರದ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾತಾವರಣದಲ್ಲಿ ಜಾಗೃತವಾಗಿರಬೇಕಾದ ಸಾರ್ವಜನಿಕ ಅರಿವು ಮತ್ತು ಸಾಮಾಜಿಕ ಪ್ರಜ್ಞೆಯನ್ನು ಮೊಳಕೆಯಲ್ಲೇ ಚಿವುಟಿ, ಯಾವುದೋ ಒಂದು ಆಧಿಪತ್ಯಕ್ಕೊಳಪಡಿಸುವ ನಿಟ್ಟಿನಲ್ಲಿ ಇಂದು ರಾಷ್ಟ್ರ ರಾಜಕಾರಣ ಬೆಳೆಯುತ್ತಿದೆ. ಅಂತರಿಕವಾಗಿ ಜಾತಿ, ಉಪಜಾತಿ, ಒಳಜಾತಿ ಮತ್ತು ಮೇಲ್ಜಾತಿಗಳ ಆಧಿಪತ್ಯಗಳು ಬಲವಾಗುತ್ತಿರುವಂತೆಯೇ ವ್ಯಾಪಕ ನೆಲೆಯಲ್ಲಿ ಮತಧರ್ಮಗಳ ಆಧಿಪತ್ಯದ ನೆಲೆಗಳೂ ಪ್ರಬಲವಾಗುತ್ತಿವೆ.

ಈ ಆಧಿಪತ್ಯದ ನೆಲೆಗಳು ತಮ್ಮ ಸಾಂಸ್ಥಿಕ, ಸಾಂಘಿಕ ಅಸ್ತಿತ್ವವನ್ನು ಕಾಪಾಡಿಕೊಳ್ಳಲೆಂದೇ ಸಾರ್ವಜನಿಕ ಸಂಕಥನಗಳ ನಿರೂಪಣೆಗಳನ್ನೂ ನಿರ್ಧರಿಸುತ್ತವೆ. ಆಳುವ ವರ್ಗಗಳು ಈ ಆಧಿಪತ್ಯದ ನೆಲೆಗಳನ್ನೇ ಬಳಸಿಕೊಂಡು ಇಂತಹ ಸಾಪೇಕ್ಷ ನಿರೂಪಣೆಗಳಿಗೆ ಸಾರ್ವತ್ರಿಕತೆಯನ್ನು ಕಲ್ಪಿಸಲು ಸಾಂವಿಧಾನಿಕ ಮಾರ್ಗಗಳನ್ನೇ ಅನುಸರಿಸುತ್ತವೆ. ತಂತ್ರಜ್ಞಾನ ಯುಗದಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಡಿಜಿಟಲ್‌ ವೇದಿಕೆಗಳು ಇದಕ್ಕೆ ಸಹಾಯಕವಾಗಿರುತ್ತವೆ. ಇಂದು ಸಾರ್ವಜನಿಕವಾಗಿ ಬಹುಚರ್ಚಿತವಾಗಿರುವ ಪಠ್ಯ ಪರಿಷ್ಕರಣೆಯೂ ಇದರ ಒಂದು ಭಾಗವಷ್ಟೇ ಆಗಿದೆ.

ಹಿಂದುತ್ವ ರಾಜಕಾರಣ ಈ ಮೇಲ್ಜಾತಿ, ಮೇಲ್ವರ್ಗ ಮತ್ತು ವೈದಿಕಶಾಹಿ ಸಾಂಸ್ಕೃತಿಕ ನೆಲೆಗಳ ಸಮ್ಮಿಶ್ರಣವಾಗಿರುವುದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಈ ಆಧಿಪತ್ಯ ರಾಜಕಾರಣದ ಮಹತ್ವಾಕಾಂಕ್ಷೆಗೆ ಒಂದು ಪ್ರಜಾಸತ್ತಾತ್ಮಕ ಪ್ರತಿರೋಧದ ನೆಲೆಯನ್ನು ರೂಪಿಸುವುದು ಈ ಸಂದರ್ಭದ ಅನಿವಾರ್ಯತೆಯೂ ಆಗಿದೆ. ಭಾರತದ ಸಂವಿಧಾನ ಈ ನಿಟ್ಟಿನಲ್ಲಿ ನಮಗೆ ದಾರಿದೀಪವಾಗಬಹುದು ಹಾಗೆಯೇ ನಮ್ಮೊಳಗಿನ ಜಾಗೃತ ಸಾಮಾಜಿಕ ಪ್ರಜ್ಞೆ ಬೆಳಕಿನ ಕಿಂಡಿಯೂ ಆಗಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending