ಬಹಿರಂಗ
ಸಾಮಾಜಿಕ ಪ್ರಜ್ಞೆಯೂ ಸಾಂಸ್ಕೃತಿಕ ಭೂಮಿಕೆಗಳೂ
ಬೌದ್ಧಿಕ ಆಲೋಚನಾಕ್ರಮವನ್ನು ಮೊಳಕೆಯಲ್ಲೇ ಚಿವುಟುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ.
- ನಾ ದಿವಾಕರ
ಆಳುವ ವರ್ಗಗಳು ಸದಾ ಸಮಾಜದಲ್ಲಿನ ಪ್ರಬಲ ವರ್ಗಗಳ ಭಾಷೆಯಲ್ಲೇ ಮಾತನಾಡಲಿಚ್ಚಿಸುತ್ತದೆ. ಪ್ರಜಾಪ್ರಭುತ್ವದಲ್ಲೂ ಸಹ ಸಾಂವಿಧಾನಿಕ ಮಾರ್ಗಗಳ ಮೂಲಕವೇ ಪ್ರಬಲ ವರ್ಗಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಗಳಿರುವುದರಿಂದ ಆಡಳಿತ ವ್ಯವಸ್ಥೆಯ ಎಲ್ಲ ಕವಲುಗಳಲ್ಲೂ ಇದೇ ವರ್ಗಗಳ ಅಭಿಪ್ರಾಯ, ಪ್ರತಿಪಾದನೆ ಮತ್ತು ತಾತ್ವಿಕ ನೆಲೆಗಳು ತಮ್ಮ ಪಾರಮ್ಯ ಕಂಡುಕೊಳ್ಳುತ್ತವೆ.
ವರ್ತಮಾನ ಭಾರತದ ಸಂದರ್ಭದಲ್ಲಿ ಈ ವರ್ಗಗಳನ್ನು ನಾವು ಮೂರು ಮಜಲುಗಳಲ್ಲಿ ಗುರುತಿಸಬಹುದು. ಮೊದಲನೆಯದು ಊಳಿಗಮಾನ್ಯ ವ್ಯವಸ್ಥೆಯ ಪಳೆಯುಳಿಕೆಗಳಾಗಿಯೇ ಈಗ ಕಾರ್ಪೋರೇಟ್ ಮಾರುಕಟ್ಟೆಯ ವಾರಸುದಾರರಾಗಿ ರೂಪಾಂತರಗೊಂಡಿರುವ ಔದ್ಯಮಿಕ ವರ್ಗ. ಎರಡನೆಯದು ಪ್ರಜಾಪ್ರಭುತ್ವದ ನೆರಳಿನಲ್ಲೇ, ಸಾಂವಿಧಾನಿಕ ಮಾರ್ಗದಲ್ಲೇ ಜನಪ್ರಾತಿನಿಧ್ಯದ ವಾರಸುದಾರಿಕೆ ವಹಿಸಿಕೊಂಡಿರುವ ಅಧಿಕಾರ ರಾಜಕಾರಣದ ಉತ್ತರಾಧಿಕಾರಿಗಳು.
ಮೂರನೆಯದು ಶ್ರೇಣೀಕೃತ ಜಾತಿ ವ್ಯವಸ್ಥೆಯನ್ನು ಆಧುನಿಕತೆಯ ಕವಚದೊಂದಿಗೆ ಯಥಾವತ್ತಾಗಿ ಕಾಪಾಡಿಕೊಂಡು ಬಂದಿರುವ ಸಾಂಸ್ಕೃತಿಕ ಆಧಿಪತ್ಯದ ವಾರಸುದಾರರು. ಈ ಮೂರೂ ವರ್ಗಗಳನ್ನು ಚುನಾವಣಾ ರಾಜಕಾರಣದ ಅಂಗಳದಲ್ಲಿ ಪ್ರತ್ಯೇಕಿಸಬಹುದಾದರೂ, ಪ್ರಭುತ್ವದ ಆಡಳಿತ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಏಕಾಭಿಪ್ರಾಯ ಹೊಂದಿರುವ ಒಂದು ಗುಂಪಾಗಿ ಕಾಣಬಹುದು.
ಸಾಮಾಜಿಕವಾಗಿ ಭಾರತ ತನ್ನ ಸಾಂವಿಧಾನಿಕ ಮೌಲ್ಯಗಳಿಗನುಗುಣವಾಗಿ ಎಷ್ಟೇ ಸಮಾನತೆಯ ಹಾದಿಯಲ್ಲಿ ಸಾಗುತ್ತಿದ್ದರೂ, ಪ್ರಬಲ ಜಾತಿ ಸಮುದಾಯಗಳು ಗ್ರಾಮದಿಂದ ದೆಹಲಿಯವರೆಗೆ ತಮ್ಮ ಆಧಿಪತ್ಯವನ್ನು ಸಾಧಿಸಿವೆ. ಸಮತಲ ನೆಲೆಯಲ್ಲಿ ಕಾಣಬಹುದಾದ ಸಮಾನತೆಯ ಹಾದಿಗಳು ಲಂಬ ನೆಲೆಯಲ್ಲಿ ಸಮತೋಲನವನ್ನು ಕಳೆದುಕೊಳ್ಳುವುದನ್ನೂ ಗಮನಿಸುತ್ತಿದ್ದೇವೆ. ಹಾಗಾಗಿಯೇ ಮೀಸಲಾತಿಯ ಫಲಾನುಭವಿಗಳೂ ಕೆಲವೊಮ್ಮೆ ಲಂಬನೆಲೆಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ.
ಊಳಿಗಮಾನ್ಯ ಧೋರಣೆ ಮತ್ತು ಪಿತೃಪ್ರಧಾನ ಮನಸ್ಥಿತಿ ಇಂದಿಗೂ ಜೀವಂತವಾಗಿರುವ ಭಾರತೀಯ ಸಮಾಜದಲ್ಲಿ ಈ ಮೇಲರಿಮೆಯ ಅಹಮಿಕೆಗಳು ಮತ್ತು ಶ್ರೇಷ್ಠತೆಯ ಜೀವಂತಿಕೆಯೇ ಇಲ್ಲಿನ ಕಾರ್ಪೋರೇಟ್ ಮಾರುಕಟ್ಟೆ ವ್ಯವಸ್ಥೆಯ ಬಂಡವಾಳಶಾಹಿ ಅಭಿವೃದ್ಧಿ ಮಾರ್ಗಗಳನ್ನು ಇಂದಿಗೂ ರಕ್ಷಿಸುತ್ತಿವೆ. ಸಾಮಾಜಿಕ ಸಮಾನತೆಯೊಂದಿಗೆ ಆರ್ಥಿಕ ಸಮಾನತೆಯನ್ನೂ ಸಾಧಿಸದಿದ್ದರೆ ಪ್ರಜಾಪ್ರಭುತ್ವ ಪರಿಪೂರ್ಣವಾಗುವುದಿಲ್ಲ ಎಂಬ ಅಂಬೇಡ್ಕರ್ ಅವರ ಮಾತುಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ.
ಬಂಡವಾಳಶಾಹಿ ಆರ್ಥಿಕತೆಯನ್ನೇ ಪೋಷಿಸಿಕೊಂಡು ಬಂದಿರುವ ಭಾರತದ ಆಳುವ ವರ್ಗಗಳು, ಪಕ್ಷಾತೀತವಾಗಿ ಈ ತರತಮಗಳನ್ನೂ ಕಾಪಾಡಿಕೊಂಡು ಬಂದಿವೆ. ಭಾರತದ ಮೇಲ್ಪದರದ ಶೇ 10ರಷ್ಟು ಜನರ ಬಳಿ ದೇಶದ ಶೇ 77ರಷ್ಟು ಸಂಪತ್ತು ಕ್ರೋಢೀಕೃತವಾಗಿದ್ದರೆ, ಶೇ 57ರಷ್ಟು ರಾಷ್ಟ್ರೀಯ ಆದಾಯದ ಪಾಲನ್ನು ಹೊಂದಿದೆ. ಶೇ 1ರಷ್ಟು ಜನರ ಬಳಿ ಶೇ 22ರಷ್ಟು ರಾಷ್ಟ್ರೀಯ ಆದಾಯ ಶೇಖರಣೆಯಾಗಿದೆ. 2017ರ ನಂತರ ಉತ್ಪಾದನೆಯಾದ ಶೇ 73ರಷ್ಟು ರಾಷ್ಟ್ರೀಯ ಸಂಪತ್ತು ಮೇಲ್ಪದರದ ಶೇ 1ರಷ್ಟು ಜನರ ಪಾಲಾಗಿದೆ.
ಭಾರತ ಜಾಗತಿಕ ಬಂಡವಾಳ ಮಾರುಕಟ್ಟೆಯಲ್ಲಿ ಯಾವ ಸ್ಥಾನವನ್ನು ಗಳಿಸಿದರೂ, ತಳಮಟ್ಟದ ವಾಸ್ತವ ಸನ್ನಿವೇಶವನ್ನು ಗಮನಿಸಿದಾಗ ಅನೌಪಚಾರಿಕ ಕ್ಷೇತ್ರವೇ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿರುವುದು ಕಂಡುಬರುತ್ತದೆ. ಎನ್ಎಸ್ಎಸ್ಒ ಬಿಡುಗಡೆ ಮಾಡಿರುವ ಇತ್ತೀಚಿನ ಅಧಿಕೃತ ವರದಿಯ ಪ್ರಕಾರ ಭಾರತದ ಕಾರ್ಮಿಕರಲ್ಲಿ ಶೇ 93ರಷ್ಟು ಅನೌಪಚಾರಿಕ ವಲಯದಲ್ಲಿದ್ದಾರೆ.
ಕೋವಿದ್ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ಆಘಾತಕ್ಕೊಳಗಾದ ಈ ವಲಯ ನಂತರ ಚೇತರಿಸಿಕೊಂಡಿದ್ದರೂ, ಮುಂಚಿನ ಸ್ಥಿತಿಗೆ ತಲುಪಲು ಸಾಧ್ಯವಾಗಿಲ್ಲ. 2021ರ ಸಮೀಕ್ಷೆಯ ಪ್ರಕಾರ ದೇಶದಲ್ಲಿರುವ ಒಟ್ಟು 6.36 ಕೋಟಿ ಉದ್ಯಮಗಳ ಪೈಕಿ ಶೇ 99.7ರಷ್ಟು ಉದ್ದಿಮೆಗಳು ಅಸಂಘಟಿತ ಕ್ಷೇತ್ರದಲ್ಲಿದೆ.
ನೋಂದಣಿಯಾಗಿರುವ ಔಪಚಾರಿಕ ಕ್ಷೇತ್ರದ ಉದ್ದಿಮೆಗಳ ಸಂಖ್ಯೆ ಕೇವಲ 1 ಲಕ್ಷ 70 ಸಾವಿರ ಅಥವಾ ಶೇ 0.3ರಷ್ಟಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಶ್ರಮಿಕರ ನೆರವಿಗೆ ಸೂಕ್ತ ಯೋಜನೆಗಳನ್ನು ರೂಪಿಸುವ ಸಲುವಾಗಿ ರಚಿಸಿರುವ ಇ-ಶ್ರಮ್ ಪೋರ್ಟಲ್ನಲ್ಲಿ ಅನೌಪಚಾರಿಕ ಕ್ಷೇತ್ರದ ಎಲ್ಲ ದುಡಿಮೆಗಾರರೂ ನೋಂದಣಿ ಮಾಡಿಸಬೇಕಿದೆ. ನಿಖರವಾಗಿ ಈ ವಲಯದಲ್ಲಿರುವ ಕಾರ್ಮಿಕರನ್ನು ಗುರುತಿಸುವುದೇ ಸಾಧ್ಯವಾಗದೆ ಇರುವುದರಿಂದ ನೋಂದಾಯಿತ 27.69 ಕೋಟಿ ಕಾರ್ಮಿಕರ ಪೈಕಿ ಶೇ 94ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ.
ನೋಂದಾಯಿತವಾಗಿರುವ 27.69 ಕೋಟಿ ಕಾರ್ಮಿಕರ ಪೈಕಿ ಶೇ 74ರಷ್ಟು ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ ಕಾರ್ಮಿಕರಿದ್ದಾರೆ. ಶೇ 45.32 ಒಬಿಸಿ, ಶೇ 20.95 ಪರಿಶಿಷ್ಟ ಜಾತಿ ಮತ್ತು ಶೇ 8.17ರಷ್ಟು ಪರಿಶಿಷ್ಟ ಪಂಗಡಗಳ ಕಾರ್ಮಿಕರಿದ್ದಾರೆ. ಅನೌಪಚಾರಿಕ ಕ್ಷೇತ್ರದಲ್ಲಿ ಶೇ 94.11ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ. ಶೇ 4.36ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ರಿಂದ 15 ಸಾವಿರ ರೂಗಳಷ್ಟಿದೆ.
ದೇಶದಲ್ಲಿ ಒಟ್ಟು 38 ಕೋಟಿ ಅನೌಪಚಾರಿಕ ವಲಯದ ಕಾರ್ಮಿಕರಿರುವುದಾಗಿ ಅಂದಾಜು ಮಾಡಲಾಗಿದ್ದು, ಈ ದತ್ತಾಂಶಗಳನ್ನು ಪರಿಶೀಲಿಸಿದರೆ ದೇಶದ ಆರ್ಥಿಕತೆಯಲ್ಲಿ ಅಸಮಾನತೆ ಢಾಳಾಗಿ ಕಾಣುತ್ತದೆ. ಈ ಕಾರ್ಮಿಕ ಕುಟುಂಬಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸುವುದು ಇ-ಶ್ರಮ್ ಪೋರ್ಟಲ್ನ ಸ್ಥಾಪಿತ ಉದ್ದೇಶವಾಗಿದೆ.
ಈ ಸಮೀಕ್ಷೆಯ ಅನುಸಾರ ನೋಂದಾಯಿತ ಶೇ 61.72ರಷ್ಟು ಕಾರ್ಮಿಕರ ವಯಸ್ಸು 18 ರಿಂದ 40 ವರ್ಷಗಳಷ್ಟಿದೆ. ಶೇ 22.12ರಷ್ಟು ಕಾರ್ಮಿಕರು 40 ರಿಂದ 40 ವಯೋಮಾನದವರಾಗಿದ್ದಾರೆ. ಶೇ 2.98ರಷ್ಟು ಕಾರ್ಮಿಕರ ವಯೋಮಾನ 16 ರಿಂದ 18 ವರ್ಷಗಳಾಗಿವೆ. ನೋಂದಾಯಿತ ಮಹಿಳಾ ಕಾರ್ಮಿಕರ ಸಂಖ್ಯೆ ಶೇ 52.18ರಷ್ಟಿದೆ. ಕೃಷಿ ಕ್ಷೇತ್ರವನ್ನು ಅವಲಂಬಿಸಿದ ಕಾರ್ಮಿಕರ ಸಂಖ್ಯೆಯೇ ಶೇ 52.11ರಷ್ಟಿದೆ. ಅಂದರೆ ಅರ್ಧಕ್ಕಿಂತಲೂ ಹೆಚ್ಚಿನ ಅಸಂಘಟಿತ ಕಾರ್ಮಿಕರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನೇ ಅವಲಂಬಿಸಿರುವುದು ಭಾರತೀಯ ಆರ್ಥಿಕತೆಯ ಸ್ಪಷ್ಟ ಚಿತ್ರಣವನ್ನು ನೀಡುತ್ತದೆ.
ಈ ಅಸಮಾನತೆಗಳು ಢಾಳಾಗಿ ಕಾಣುತ್ತಿರುವಂತೆಯೇ ದೇಶದ ಅನೌಪಚಾರಿಕ ವಲಯದ ಲಕ್ಷಾಂತರ ದುಡಿಮೆಯ ಕೈಗಳು ಬೀದಿಪಾಲಾಗುತ್ತಿವೆ. ಓಲಾ, ಊಬರ್, ಜಮೋಟೋ, ಸ್ವಿಗಿ ಮುಂತಾದ ಆದಾಯ ಮಾರ್ಗಗಳಲ್ಲಿ ಎದುರಾಗುತ್ತಿರುವ ಬಿಕ್ಕಟ್ಟು ಈ ದೇಶದ ನಿರುದ್ಯೋಗಿ ಯುವ ಜನತೆಯನ್ನು ಬಾಣಲೆಯಿಂದ ಬೆಂಕಿಗೆ ಬೀಳಿಸುತ್ತಿವೆ. ತಾತ್ಕಾಲಿಕವಾಗಿ ಜೀವನ ನಿರ್ವಹಣೆಗೆ ನೆರವಾಗುವ ಯಾವುದೇ ಉದ್ಯೋಗವೂ ಒಂದು ಸುಸ್ಥಿರ ಸಮಾಜವನ್ನು ನಿರ್ಮಿಸಲು ಪೂರಕವಾಗಿರುವುದಿಲ್ಲ. ಬಹುಶಃ ಇನ್ನು ಹತ್ತು ವರ್ಷಗಳಲ್ಲಿ ಭಾರತ ಈ ಸಂದಿಗ್ಧತೆಯನ್ನು ಎದುರಿಸುತ್ತದೆ.
ಸ್ವಯಂ ಉದ್ಯೋಗ, ಕೌಶಲ್ಯಾಧಾರಿತ ಉದ್ಯೋಗ ಮತ್ತು ತ್ವರಿತ ಆದಾಯ ಗಳಿಕೆಯ ಮಾರ್ಗಗಳು ಮಾರುಕಟ್ಟೆ ಅರ್ಥವ್ಯವಸ್ಥೆಯಲ್ಲಿ ಅದ್ಭುತ ಫಲಿತಾಂಶಗಳನ್ನು ತೋರುವುದಾದರೂ, ದೀರ್ಘಾವಧಿಯಲ್ಲಿ ಒಂದು ಅಸ್ಥಿರ ಸಮಾಜವನ್ನು ಸೃಷ್ಟಿಸುವುದನ್ನು ಹಲವು ದೇಶಗಳಲ್ಲಿ ಕಾಣಬಹುದು. ಹಾಗೆಯೇ ಮಾರುಕಟ್ಟೆ ವ್ಯವಸ್ಥೆ ರೂಪಿಸುವ ಉದ್ಯೋಗಾವಕಾಶಗಳು ಹಣಕಾಸು ಬಂಡವಾಳದ ಅವಶ್ಯಕತೆಗಳಿಗನುಗುಣವಾಗಿಯೇ ಇರುವುದರಿಂದ, ಈ ನೌಕರಿಯನ್ನು ಅವಲಂಬಿಸುವವರು ಮಾರುಕಟ್ಟೆ ವ್ಯತ್ಯಯಗಳ ಮೊದಲ ಬಲಿ ಆಗುತ್ತಾರೆ.
ಈ ಬಲಿಪೀಠಗಳನ್ನು ಸೃಷ್ಟಿಸಲೆಂದೇ ಸರ್ಕಾರಗಳು ಹಲವು ಯೋಜನೆಗಳನ್ನೂ, ಆಡಳಿತ ನೀತಿಗಳನ್ನೂ ರೂಪಿಸುತ್ತಿರುತ್ತವೆ. ಹಾಗಾಗಿಯೇ ಇಂದು ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಬಿಸಿಯೂಟ ಯೋಜನೆಯ ನೌಕರರು ತಮ್ಮ ಬದುಕಿನ ಘನತೆಗಾಗಿ, ಹಕ್ಕಿಗಾಗಿ ಹೋರಾಡುವಂತಾಗಿದೆ.
ದೇಶದ ಒಂದು ಬೃಹತ್ ಜನಸಮೂಹ ತಮ್ಮ ಜೀವನ ನಿರ್ವಹಣೆಗೆ ಪರದಾಡುತ್ತಿರುವುದನ್ನು ಅಧಿಕೃತ ಅಂಕಿಅಂಶಗಳೇ ಸಾಬೀತುಪಡಿಸುತ್ತವೆ. ಕರ್ನಾಟಕದಲ್ಲೇ 42 ಸಾವಿರ ಆಶಾ ಕಾರ್ಯಕರ್ತೆಯರು ತಮ್ಮ ಸೇವಾ ಭತ್ಯೆಗಳಿಗಾಗಿ, ಸುಭದ್ರ ನೌಕರಿಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಆಶಾ ಕಾರ್ಯಕರ್ತೆಯರು ಕನಿಷ್ಟ ವೇತನದೊಂದಿಗೆ, ಉದ್ಯೋಗ ಭದ್ರತೆ ಇಲ್ಲದೆ ಅನಿಶ್ಚಿತ ಬದುಕು ಎದುರಿಸುತ್ತಿದ್ದಾರೆ.
ಕರ್ನಾಟಕದಲ್ಲಿ 60 ವರ್ಷ ದಾಟಿದ ಕಾರಣಕ್ಕಾಗಿಯೇ ಹೊರಹಾಕಲ್ಪಟಿರುವ 12 ಸಾವಿರ ಬಿಸಿಯೂಟ ಯೋಜನೆಯ ಮಹಿಳೆಯರು ತಮ್ಮ ಜೀವನ ಭದ್ರತೆಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 13 ಲಕ್ಷ ಅಂಗನವಾಡಿ ನೌಕರರು, ಬಹುಪಾಲು ಮಹಿಳೆಯರು, ಹೊಸ ಶಿಕ್ಷಣ ನೀತಿಯ ಪರಿಣಾಮ ತಮ್ಮ ನೆಲೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ದೇಶದ ಬಹುದೊಡ್ಡ ಉದ್ಯೋಗದಾತ ಸಾರ್ವಜನಿಕ ಸಂಸ್ಥೆ ರೈಲ್ವೆ ಇಲಾಖೆಯಲ್ಲಿ 72 ಸಾವಿರ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಇತ್ತೀಚೆಗೆ ಹೇಳಿದಂತೆ 60 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ.
ಭಾರತದ ಬೃಹತ್ ಜನಸಮೂಹದ ಬದುಕಿನ ಪ್ರಶ್ನೆಯಾಗಿರುವ ಈ ಸಮಸ್ಯೆಗಳು ಇಂದಿನ ಸಾರ್ವಜನಿಕ ಸಂಕಥನದ ಒಂದು ಭಾಗವಾಗಬೇಕಿತ್ತು. ಆದರೆ ಭಾರತ ಇಂತಹ ಒಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, 45 ವರ್ಷಗಳಲ್ಲೇ ಅತಿ ಹೆಚ್ಚಿನ ನಿರುದ್ಯೋಗ ಪ್ರಮಾಣ ದಾಖಲಾಗಿದ್ದರೂ, ಎಂಟು ವರ್ಷಗಳಲ್ಲೇ ಅತಿ ಹೆಚ್ಚು ಹಣದುಬ್ಬರ ದಾಖಲಾಗಿದ್ದರೂ ಸಾರ್ವಜನಿಕ ಹಾಗೂ ಬೌದ್ಧಿಕ ವಲಯದ ಸಂಕಥನಗಳು ಭಿನ್ನ ಮಾರ್ಗದಲ್ಲಿ ಸಾಗುತ್ತಿವೆ. ಈ ವಿಕೃತ ಬೆಳವಣಿಗೆಯ ಮೂಲವನ್ನು ನಾವು ಸಾಂಸ್ಕೃತಿಕ ಹಾಗೂ ರಾಜಕೀಯ ಭೂಮಿಕೆಗಳಲ್ಲಿ ಶೋಧಿಸಬೇಕಿದೆ.
ಇಲ್ಲಿ ಬೌದ್ಧಿಕ ವಲಯದ ತಾತ್ವಿಕ ಗ್ರಹಿಕೆ ಮತ್ತು ಸಾಂಸ್ಕೃತಿಕ ವಲಯದ ಪ್ರಾಮಾಣಿಕತೆ ಮುಖ್ಯವಾಗುತ್ತದೆ. ರಾಜಕೀಯ ಮತ್ತು ಸೈದ್ಧಾಂತಿಕ ನಿಲುಮೆಗಳು ವಸ್ತುನಿಷ್ಠವಾಗದೆ ಹೋದರೆ ಸತ್ಯದ ಸಮಾಧಿಯಾಗುತ್ತದೆ. ತಾವು ಅನುಕರಿಸುವ ನಾಯಕರಲ್ಲಿ ಸರ್ವಶ್ರೇಷ್ಠತೆಯನ್ನು, ಸಾರ್ವಭೌಮತ್ವವನ್ನು ಕಾಣುವಂತಹ ವಂಧಿಮಾಗದ ಸಂಸ್ಕೃತಿಯನ್ನು ತಳಮಟ್ಟದವರೆಗೂ ತಲುಪಿಸಿರುವ ಭಾರತದ ರಾಜಕೀಯ ಪರಂಪರೆ ಇಂದು ದೇಶದ ಭವಿಷ್ಯತ್ತಿಗೆ ಮುಳುವಾಗಲಿದೆ. ಆಂತರಿಕ ಪ್ರಜಾತಂತ್ರದ ಮೌಲ್ಯಗಳನ್ನೇ ಮರೆತಿರುವ ರಾಜಕೀಯ ಪಕ್ಷಗಳು ಅಧಿಕಾರ ರಾಜಕಾರಣವನ್ನು ಒಂದು ಅವಕಾಶದ ಭೂಮಿಕೆ ಎಂದು ಭಾವಿಸದೆ, ತಮ್ಮ ವಾರಸುದಾರಿಕೆ ಅಥವಾ ಉತ್ತರಾಧಿಕಾರದ ವೇದಿಕೆ ಎಂದು ಭಾವಿಸುತ್ತಿರುವುದೇ ಇಂದಿನ ಸಕಲ ಸಮಸ್ಯೆಗಳಿಗೆ ಕಾರಣವಾಗಿದೆ.
ವರ್ತಮಾನದ ಭಾರತ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಈ ದೇಶದ ಸಂಸ್ಕೃತಿಯಷ್ಟೇ ವೈವಿಧ್ಯಮಯ ಅಷ್ಟೇ ಜಟಿಲ. ಆದರೆ ಈ ಸಮಸ್ಯೆಗಳಿಗೆ ಅಧಿಕಾರ ರಾಜಕಾರಣ ಸೂಚಿಸುತ್ತಿರುವ ಪರಿಹಾರ ಮಾರ್ಗಗಳು ಜನಸಾಮಾನ್ಯರಿಗೆ ಅರ್ಥವೇ ಆಗದಷ್ಟು ಸಂಕೀರ್ಣವಾಗಿರುತ್ತವೆ. ಹಾಗಾಗಿಯೇ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ಡ್ರೋನ್ ಮೂಲಕ ವೀಕ್ಷಿಸುತ್ತಿದ್ದೇನೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಿಂದ ಇಡೀ ದೇಶವೇ ಪುಳಕಿತವಾಗುತ್ತದೆ.
ಆದರೆ ಈ ಡ್ರೋನ್ ವೀಕ್ಷಣೆಗೆ ಕರ್ನಾಟಕದ ಭ್ರಷ್ಟಾಚಾರದ ಕೂಪಗಳು ನಿಲುಕದೆ ಹೋಗುತ್ತವೆ. ರಾಜಕೀಯ ಭ್ರಷ್ಟಾಚಾರ ಭಾರತದ ಆಡಳಿತ ವ್ಯವಸ್ಥೆಯ ಒಂದು ಅವಿಭಾಜ್ಯ ಅಂಗ ಎನ್ನುವ ವಾಸ್ತವವನ್ನು ಅರಿತಿದ್ದರೂ ಜನಸಾಮಾನ್ಯರು ಭ್ರಷ್ಟರನ್ನೇ ಪೋಷಿಸಲು ತತ್ವ ಸಿದ್ಧಾಂತಗಳ ಮೊರೆ ಹೋಗುತ್ತಿದ್ದಾರೆ. ಕರ್ನಾಟಕದಲ್ಲಿ ಕೇಳಿಬರುತ್ತಿರುವ 40 % ಕಮಿಷನ್ ದಂಧೆ, ಪಿಎಸ್ಐ ಪರೀಕ್ಷೆಯ ಹಗರಣ, ಕೆಪಿಎಸ್ಸಿ ಹಗರಣ ಇವೆಲ್ಲವೂ ಕೇವಲ ಅಧಿಕಾರಶಾಹಿಯ ಚೌಕಟ್ಟಿನಲ್ಲೇ ಕಂಡುಬರುತ್ತವೆ.
ಸಾರಿಗೆ ನೌಕರರ ಸಂಘಟಿತ ಶಕ್ತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ತಮ್ಮ ಪರಿಣತ ಕ್ಷೇತ್ರವನ್ನು ಬಿಟ್ಟು ಕಾರ್ಮಿಕ ಸಂಘಟನೆಗೆ ಮುಂದಾದ ಕೋಡಿಹಳ್ಳಿ ಚಂದ್ರಶೇಖರ್ ಈಗ ಬೃಹತ್ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ, ಪ್ರಾಮಾಣಿಕತೆಯನ್ನೇ ಹೊದ್ದಿಕೊಂಡಿರುವ ಆಮ್ ಆದ್ಮಿ ಪಕ್ಷ ಅವರನ್ನು ಉಚ್ಚಾಟಿಸಲು ಹಿಂಜರಿಯುತ್ತದೆ. ಕಾನೂನು ಪಾಲನೆ ರಕ್ಷಣೆ ಮತ್ತು ಸಾರ್ವಜನಿಕ ಸ್ವಾಸ್ಥ್ಯದ ಹೊಣೆ ಹೊರಬೇಕಾಗಿರುವ ಪೊಲೀಸ್ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವಾಡುತ್ತಿದೆ. ತಾಂಡವಾಡುತ್ತಿದೆ
ಈ ಎಲ್ಲ ಬೆಳವಣಿಗೆಗಳೂ ಅಭಿವೃದ್ಧಿ ಕಾಮಗಾರಿಗಳ ಒಂದು ಭಾಗವಾಗಿಯೇ ಇರುವಾಗ, ಡ್ರೋನ್ ವೀಕ್ಷಣೆಯಲ್ಲಿ ಕಾಣದೆ ಹೋಗುವುದಾದರೂ ಹೇಗೆ ? ಇಷ್ಟೆಲ್ಲಾ ಅಕ್ರಮಗಳ ನಡುವೆಯೂ ಸರ್ಕಾರಗಳು ಅಬಾಧಿತವಾಗಿರುತ್ತವೆ, ಸಂಬಂಧಪಟ್ಟ ಸಚಿವರು ʼಮೇಲಿನವರʼ ಕೃಪಾಕಟಾಕ್ಷದೊಂದಿಗೆ ನಿರಾಳವಾಗಿರುತ್ತಾರೆ. ಸಾರ್ವಜನಿಕ ವಲಯದಲ್ಲೂ ಇದು ಯಾವುದೇ ಪ್ರತಿರೋಧದ ದನಿಗಳನ್ನು ಮೂಡಿಸುವುದಿಲ್ಲ. ಏಕೆಂದರೆ ಜನಸಾಮಾನ್ಯರ ಸಾಮಾಜಿಕ ಪ್ರಜ್ಞೆ ಯಾವುದೋ ಒಂದು ನಿಷ್ಠೆಗೊಳಗಾಗಿ ನಿಷ್ಕ್ರಿಯವಾಗಿರುತ್ತದೆ.
ಈ ತಾರತಮ್ಯಗಳನ್ನು ಯಥಾವತ್ತಾಗಿ ಕಾಪಾಡಲೆಂದೇ ಅಥವಾ ಮತ್ತಷ್ಟು ಕಂದರಗಳನ್ನು ಸೃಷ್ಟಿಸುವ ಸಲುವಾಗಿಯೇ ರೂಪಿಸಲಾಗುವ ಆಡಳಿತ ನೀತಿಗಳನ್ನು ಜಾರಿಗೊಳಿಸಲು ಗ್ರಾಮ ಮಟ್ಟದಿಂದ ದೆಹಲಿಯವರೆಗೂ ಒಂದು ಸಾಮಾಜಿಕ ವ್ಯವಸ್ಥೆ ಇನ್ನೂ ಜೀವಂತವಾಗಿದೆ. ಈ ಸಾಮಾಜಿಕ ಚೌಕಟ್ಟು ಶತಮಾನಗಳ ಬುನಾದಿ ಇರುವ ಜಾತಿ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುತ್ತದೆ. ದಿನನಿತ್ಯ ಕೇಳಿಬರುವ ಜಾತಿ ದೌರ್ಜನ್ಯಗಳು ನಮ್ಮ ಆಂತರಿಕ ಪ್ರಜ್ಞೆಯನ್ನು ಕದಡುತ್ತಿಲ್ಲ. ಏಕೆಂದರೆ ದೌರ್ಜನ್ಯಕ್ಕೊಳಗಾಗುತ್ತಿರುವುದು ಆರ್ಥಿಕ ನೆಲೆಯಲ್ಲಿ ಕೆಳಸ್ತರಕ್ಕೆ ಸೇರಿದವರಾಗಿದ್ದಾರೆ.
ಇಲ್ಲಿರುವ ಜಾತ್ಯತೀತ ಲಕ್ಷಣ ರಾಜಕೀಯ ನೆಲೆಯಲ್ಲಾಗಲೀ, ಸಾಂಸ್ಕೃತಿಕ ನೆಲೆಯಲ್ಲಾಗಲೀ ಕಂಡುಬರುವುದಿಲ್ಲ. ಅಂದರೆ, ಮತನಿರಪೇಕ್ಷವಾಗಿ, ಜಾತಿ ಗೋಡೆಗಳನ್ನು ಮೀರಿದ ಒಂದು ಅಸಮಾನತೆ ನಮ್ಮ ಸಮಾಜದಲ್ಲಿ ಬೇರೂರುತ್ತಿದೆ. ಶ್ರೀಮಂತಿಕೆ ಮತ್ತು ದಾರಿದ್ರ್ಯತೆಯ ನಡುವಿನ ಕಂದರದಲ್ಲಿ ಹುದುಗಿಹೋಗುವ ಅಸಂಖ್ಯಾತ ಅಸಹಾಯಕ ದನಿಗಳು ತಮ್ಮ ಪ್ರತಿರೋಧವನ್ನು ದಾಖಲಿಸಲೂ ಸಾಧ್ಯವಾಗದಂತೆ ಕಾಯ್ದೆ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಎಲ್ಲ ಜಾತಿ ಮತದ ನೆಲೆಗಳಲ್ಲಿ ವಿಸ್ತರಿಸಿರುವ ಈ ತಾರತಮ್ಯಗಳನ್ನು ವಿರೋಧಿಸಲು ಅತ್ಯವಶ್ಯವಾದ ಒಂದು ಜಾತ್ಯತೀತ ಭೂಮಿಕೆಯನ್ನು ಶೈಶಾವಸ್ಥೆಯಲ್ಲೇ ಭಗ್ನಗೊಳಿಸಲಾಗುತ್ತಿದೆ.
ಯಾವುದೇ ಭೌಗೋಳಿಕ ರಾಷ್ಟ್ರದ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾತಾವರಣದಲ್ಲಿ ಜಾಗೃತವಾಗಿರಬೇಕಾದ ಸಾರ್ವಜನಿಕ ಅರಿವು ಮತ್ತು ಸಾಮಾಜಿಕ ಪ್ರಜ್ಞೆಯನ್ನು ಮೊಳಕೆಯಲ್ಲೇ ಚಿವುಟಿ, ಯಾವುದೋ ಒಂದು ಆಧಿಪತ್ಯಕ್ಕೊಳಪಡಿಸುವ ನಿಟ್ಟಿನಲ್ಲಿ ಇಂದು ರಾಷ್ಟ್ರ ರಾಜಕಾರಣ ಬೆಳೆಯುತ್ತಿದೆ. ಅಂತರಿಕವಾಗಿ ಜಾತಿ, ಉಪಜಾತಿ, ಒಳಜಾತಿ ಮತ್ತು ಮೇಲ್ಜಾತಿಗಳ ಆಧಿಪತ್ಯಗಳು ಬಲವಾಗುತ್ತಿರುವಂತೆಯೇ ವ್ಯಾಪಕ ನೆಲೆಯಲ್ಲಿ ಮತಧರ್ಮಗಳ ಆಧಿಪತ್ಯದ ನೆಲೆಗಳೂ ಪ್ರಬಲವಾಗುತ್ತಿವೆ.
ಈ ಆಧಿಪತ್ಯದ ನೆಲೆಗಳು ತಮ್ಮ ಸಾಂಸ್ಥಿಕ, ಸಾಂಘಿಕ ಅಸ್ತಿತ್ವವನ್ನು ಕಾಪಾಡಿಕೊಳ್ಳಲೆಂದೇ ಸಾರ್ವಜನಿಕ ಸಂಕಥನಗಳ ನಿರೂಪಣೆಗಳನ್ನೂ ನಿರ್ಧರಿಸುತ್ತವೆ. ಆಳುವ ವರ್ಗಗಳು ಈ ಆಧಿಪತ್ಯದ ನೆಲೆಗಳನ್ನೇ ಬಳಸಿಕೊಂಡು ಇಂತಹ ಸಾಪೇಕ್ಷ ನಿರೂಪಣೆಗಳಿಗೆ ಸಾರ್ವತ್ರಿಕತೆಯನ್ನು ಕಲ್ಪಿಸಲು ಸಾಂವಿಧಾನಿಕ ಮಾರ್ಗಗಳನ್ನೇ ಅನುಸರಿಸುತ್ತವೆ. ತಂತ್ರಜ್ಞಾನ ಯುಗದಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಡಿಜಿಟಲ್ ವೇದಿಕೆಗಳು ಇದಕ್ಕೆ ಸಹಾಯಕವಾಗಿರುತ್ತವೆ. ಇಂದು ಸಾರ್ವಜನಿಕವಾಗಿ ಬಹುಚರ್ಚಿತವಾಗಿರುವ ಪಠ್ಯ ಪರಿಷ್ಕರಣೆಯೂ ಇದರ ಒಂದು ಭಾಗವಷ್ಟೇ ಆಗಿದೆ.
ಹಿಂದುತ್ವ ರಾಜಕಾರಣ ಈ ಮೇಲ್ಜಾತಿ, ಮೇಲ್ವರ್ಗ ಮತ್ತು ವೈದಿಕಶಾಹಿ ಸಾಂಸ್ಕೃತಿಕ ನೆಲೆಗಳ ಸಮ್ಮಿಶ್ರಣವಾಗಿರುವುದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಈ ಆಧಿಪತ್ಯ ರಾಜಕಾರಣದ ಮಹತ್ವಾಕಾಂಕ್ಷೆಗೆ ಒಂದು ಪ್ರಜಾಸತ್ತಾತ್ಮಕ ಪ್ರತಿರೋಧದ ನೆಲೆಯನ್ನು ರೂಪಿಸುವುದು ಈ ಸಂದರ್ಭದ ಅನಿವಾರ್ಯತೆಯೂ ಆಗಿದೆ. ಭಾರತದ ಸಂವಿಧಾನ ಈ ನಿಟ್ಟಿನಲ್ಲಿ ನಮಗೆ ದಾರಿದೀಪವಾಗಬಹುದು ಹಾಗೆಯೇ ನಮ್ಮೊಳಗಿನ ಜಾಗೃತ ಸಾಮಾಜಿಕ ಪ್ರಜ್ಞೆ ಬೆಳಕಿನ ಕಿಂಡಿಯೂ ಆಗಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


