ಬಹಿರಂಗ
ಪರಿಸರ ಪ್ರಜ್ಞೆಯ ಕೊರತೆಯ ನಡುವೆಯೇ ಮತ್ತೊಂದು ದಿನ..!
- ನಾ ದಿವಾಕರ
ನಮ್ಮ ಸುತ್ತಲಿನ ವಾತಾವರಣವನ್ನೂ ಮೀರಿದ ವಿಶಾಲ ಪ್ರಪಂಚದ ಅರಿವು ಅತ್ಯವಶ್ಯ.
ಮಾನವ ಸಮಾಜಕ್ಕೆ ಸಂಬಂಧಪಟ್ಟ ಎಲ್ಲ ಚಟುವಟಿಕೆಗಳಿಗೂ ಒಂದು ದಿನಾಚರಣೆ ಇರುವುದು ಆಧುನಿಕ ಜಗತ್ತಿನ ವೈಶಿಷ್ಟ್ಯ. ಮನುಜ ಸಂಬಂಧಗಳು, ಸಾಮಾಜಿಕ ವಿದ್ಯಮಾನಗಳು, ಚಾರಿತ್ರಿಕ ದಿನಗಳು ವಾರ್ಷಿಕ ದಿನಾಚರಣೆಗಳ ರೂಪದಲ್ಲಿ ಸಾರ್ವಜನಿಕ ಜನಸಾಮಾನ್ಯರ ನಡುವೆ ಇತಿಹಾಸದ ಪ್ರಜ್ಞೆಯನ್ನು ಜಾಗೃತಗೊಳಿಸಿ, ವರ್ತಮಾನದ ಅರಿವನ್ನು ವಿಸ್ತರಿಸಲು ನೆರವಾಗುತ್ತವೆ.
ಮೂಲತಃ ಪಾಶ್ಚಿಮಾತ್ಯ ರಾಷ್ಟ್ರಗಳಿಂದಲೇ ಮೂಡಿಬಂದ ಈ ಆಚರಣೆಗಳು ಆಧುನಿಕ ಯುಗದಲ್ಲಿ, ಜಾಗತೀಕರಣಗೊಂಡ ಅರ್ಥವ್ಯವಸ್ಥೆಯಲ್ಲಿ ಮಾರುಕಟ್ಟೆ ಸಂಬಂಧಿತವಾಗಿಯೇ ಉಳಿದುಬಿಡುತ್ತವೆ. ಒಂದು ವಿಶಿಷ್ಟ, ನಿರ್ದಿಷ್ಟ ದಿನವನ್ನು ಏತಕ್ಕಾಗಿ ಆಚರಿಸಲಾಗುತ್ತದೆ , ಈ ಆಚರಣೆಯ ಮೂಲಕ ಏನನ್ನು ಸಾಧಿಸಲು ಹೊರಟಿದ್ದೇವೆ ಎಂಬ ಸಾಮಾನ್ಯ ಅರಿವೂ ಇಲ್ಲದೆ ಯಾಂತ್ರಿಕವಾಗಿ ಆಚರಿಸಲಾಗುವ ಹಲವು ದಿನಗಳನ್ನು ಕಾಣುತ್ತಲೇ ಬಂದಿದ್ದೇವೆ. ನಾಗರಿಕ ಪ್ರಜ್ಞೆ, ಸಾಮಾಜಿಕ ಕಳಕಳಿ ಮತ್ತು ಮಾನವ ಸಮಾಜದ ಉನ್ನತಿಗಾಗಿ ಸಾಮಾನ್ಯ ಜನರ ನಡುವೆ ಜಾಗೃತ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ದಿನಾಚರಣೆಗಳು ಸಾಗಬೇಕಾಗುತ್ತವೆ. ಇಂತಹ ಆಚರಣೆಗಳಲ್ಲೊಂದು ಇಂದು ಆಚರಿಸಲಾಗುತ್ತಿರುವ ವಿಶ್ವ ಪರಿಸರ ದಿನ.
ಭಾರತದ ಸಂದರ್ಭದಲ್ಲಿ ನೋಡಿದಾಗ ಸಾಮಾನ್ಯ ಪರಿಸರ ಪ್ರಜ್ಞೆಯೇ ಇಲ್ಲದಂತಹ ಒಂದು ಬೃಹತ್ ಜನಸಮೂಹ ನಮ್ಮ ನಡುವೆ ಇದೆ. ಪರಿಸರ ಎಂದ ಕೂಡಲೇ ಸಾಮಾನ್ಯ ಗ್ರಹಿಕೆಯು ಕಾಡು ಮೇಡು, ಬೆಟ್ಟ ಗುಡ್ಡ, ಜಲಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳತ್ತ ಹೊರಳುತ್ತದೆ. ಜೀವ ವೈವಿಧ್ಯತೆಯನ್ನು ಕಾಪಾಡಲು ಬೇಕಾದ ಹಸಿರು ವಲಯ ಇದರಲ್ಲಿ ಪ್ರಧಾನವಾಗಿ ಬಿಂಬಿತವಾಗುತ್ತದೆ. ಭಾರತದ ಅರಣ್ಯ ಇಲಾಖೆ ತನ್ನ 2021ರ ವರದಿಯನ್ನು ಬಿಡುಗಡೆ ಮಾಡಿದ್ದು 2019 ರಿಂದ 21ರ ಅವಧಿಯಲ್ಲಿ ಭಾರತದ ಒಟ್ಟು ಅರಣ್ಯ ಪ್ರದೇಶದಲ್ಲಿ 1540 ಚದರ ಕಿಲೋಮೀಟರ್ ಹೆಚ್ಚಳ ಕಂಡುಬಂದಿದೆ. 2021ರ ಭಾರತೀಯ ಅರಣ್ಯ ವರದಿಯ ಅನುಸಾರ ದೇಶದ ಒಟ್ಟು ಅರಣ್ಯ ಪ್ರದೇಶದ ವ್ಯಾಪ್ತಿ 7,13,789 ಚದರ ಕಿಲೋಮೀಟರ್ ಇದ್ದು, ಓಟ್ಟು ಭೌಗೋಳಿಕ ಪ್ರದೇಶದ ಶೇ 21.71ರಷ್ಟಿದೆ. 2019ರಲ್ಲಿ ಇದು ಶೇ 21.67ರಷ್ಟಿತ್ತು.
ಈ ವರದಿಯ ಅನುಸಾರ ಭಾರತದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು ಅರಣ್ಯಪ್ರದೇಶದ ವ್ಯಾಪ್ತಿ ಹೆಚ್ಚಾಗಿರುವುದು ಕಂಡುಬರುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗ ಈ ದತ್ತಾಂಶಗಳಲ್ಲಿ ಕೆಲವು ತಾಂತ್ರಿಕ ತಕರಾರುಗಳನ್ನೂ ಗುರುತಿಸಲು ಸಾಧ್ಯ. ಹೆಚ್ಚಳವಾಗಿರುವ ಅರಣ್ಯ ಪ್ರದೇಶದ ವ್ಯಾಪ್ತಿಗೆ ಮೂಲಕ ಕಾರಣ, ರಿಮೋಟ್ ಸೆನ್ಸಿಂಗ್ ಮೂಲಕ ಮಾಡಲಾಗುವ ಈ ಸಮೀಕ್ಷೆಯಲ್ಲಿ ಮುಕ್ತ ಅರಣ್ಯಗಳನ್ನೂ ಒಳಗೊಳ್ಳಲಾಗಿದೆ. ಮುಕ್ತ ಅರಣ್ಯಗಳೆಂದರೆ ವಾಣಿಜ್ಯ ಪ್ಲಾಂಟೇಷನ್ಗಳನ್ನೂ ಸೇರಿಸಿಕೊಳ್ಳಲಾಗುತ್ತದೆ. ದಟ್ಟಾರಣ್ಯ ಪ್ರದೇಶಗಳನ್ನಷ್ಟೇ ಪರಿಗಣಿಸಿದಾಗ 2019-21ರ ಅವಧಿಯಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿ ಕಡಿಮೆಯಾಗಿರುವುದು ಕಂಡುಬರುತ್ತದೆ.
ಈ ವರದಿಯೊಂದಿಗೇ ಬಿಡುಗಡೆಯಾಗಿರುವ ಮಾಂಗಬೇ-ಇಂಡಿಯಾ ಸಮೀಕ್ಷೆಯ ಅನುಸಾರ 2009-19ರ ಒಂದು ದಶಕದ ಅವಧಿಯಲ್ಲಿ ಭಾರತದ ಈಶಾನ್ಯ ಪ್ರದೇಶದಲ್ಲಿ 3199 ಚದರ ಕಿಲೋಮೀಟರ್ ಅರಣ್ಯಪ್ರದೇಶ ಮರೆಯಾಗಿದೆ. ಇದು ಅತಂಕಕಾರಿ ವಿಚಾರವಾಗಿದೆ. ಏಕೆಂದರೆ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಾ ಈ ರಾಜ್ಯಗಳನ್ನೊಳಗೊಳ್ಳುವ ಈಶಾನ್ಯ ಭಾರತ, ಜಗತ್ತಿನ 17 ಅತಿದೊಡ್ಡ ಜೀವವೈವಿಧ್ಯ ಉಷ್ಣ ಪ್ರದೇಶವಾಗಿದೆ. ಭಾರತದ ಒಟ್ಟು ಶೇ 7.98 ಭೌಗೋಳಿಕ ಪ್ರದೇಶವನ್ನು ಹೊಂದಿರುವ ಈಶಾನ್ಯ ಭಾರತ ಒಟ್ಟು ಶೇ 25ರಷ್ಟು ಅರಣ್ಯಪ್ರದೇಶವನ್ನು ಹೊಂದಿದೆ.
ಈ ಪ್ರದೇಶದಲ್ಲೇ ಅರಣ್ಯ ವಲಯ ಕ್ಷೀಣಿಸುತ್ತಿರುವುದು ಚಿಂತೆಗೀಡುಮಾಡುವ ವಿಚಾರವಾಗಿದ್ದು ಇದಕ್ಕೆ ಮೂಲ ಕಾರಣ ಅಭಿವೃದ್ಧಿ ಯೋಜನೆಗಳೇ ಆಗಿವೆ. ಬಂಡವಾಳಶಾಹಿ ಆರ್ಥಿಕತೆಯಲ್ಲಿ ಅರಣ್ಯ ಮತ್ತು ಜಲಸಂಪನ್ಮೂಲಗಳನ್ನೂ ಸೇರಿದಂತೆ ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನೂ ಮಾರುಕಟ್ಟೆಯ ಉತ್ಪಾದನೆಯ ಮೂಲಗಳೆಂದೇ ಪರಿಗಣಿಸುವುದರಿಂದ, ನಿಸರ್ಗ ಶೋಷಣೆ ಅವ್ಯಾಹತವಾಗಿ ನಡೆಯುತ್ತಲೇ ಇರುತ್ತದೆ. ಕಳೆದ ಮೂರು ದಶಕಗಳಲ್ಲಿ ಭಾರತದಲ್ಲಿ 29 ಸಾವಿರ ಚದರ ಕಿಲೋಮೀಟರ್ ಅರಣ್ಯ ಪ್ರದೇಶಗಳು ಅಭಿವೃದ್ಧಿ ಯೋಜನೆಗಳಿಗೆ ಬಲಿಯಾಗಿವೆ.
ಇದರ ಪೈಕಿ 23 ಸಾವಿರ ಚದರ ಕಿಲೋಮೀಟರ್ ಕೈಗಾರಿಕಾ ಯೋಜನೆಗಳಿಗೇ ಬಲಿಯಾಗಿದೆ. ಮಧ್ಯಪ್ರದೇಶವೊಂದರಲ್ಲೇ ಈ ಅವಧಿಯಲ್ಲಿ 14 ಸಾವಿರ ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ಗಣಿಗಾರಿಕೆ, ರಕ್ಷಣಾ ಯೋಜನೆಗಳು ಮತ್ತು ಜಲವಿದ್ಯುತ್ ಉತ್ಪಾದನೆಗಾಗಿ ನೀಡಲಾಗಿದೆ. ಸ್ವತಂತ್ರ ಅಧ್ಯಯನಗಳ ಪ್ರಕಾರ ಪಶ್ಚಿಮ ಘಟ್ಟಗಳ ನಾಲ್ಕೂ ವಲಯಗಳಲ್ಲಿ ಅರಣ್ಯ ಸಂಪತ್ತು ಕ್ಷೀಣಿಸುತ್ತಿದ್ದು ಉತ್ತರದಲ್ಲಿ ಶೇ 2.84, ಕೇಂದ್ರದಲ್ಲಿ ಶೇ 4.38 ಮತ್ತು ದಕ್ಷಿಣದಲ್ಲಿ ಶೇ 5.77ರಷ್ಟು ಅರಣ್ಯ ವಲಯ ಅಭಿವೃದ್ಧಿ ಯೋಜನೆಗಳ ಪಾಲಾಗಿದೆ. ಕೇಂದ್ರ ಸರ್ಕಾರದ ಬದಲಾದ ನೀತಿಗಳ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ 25 ಸಾವಿರ ಹೆಕ್ಟೇರ್ ಅಂದರೆ 250 ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ಅರಣ್ಯೇತರ ಚಟುವಟಿಕೆಗಳಿಗಾಗಿ ಒದಗಿಸಲಾಗುತ್ತದೆ. ಇವುಗಳಲ್ಲಿ ಮುಖ್ಯವಾಗಿ ಗಣಿಗಾರಿಕೆ, ರಕ್ಷಣಾ ಯೋಜನೆಗಳು, ಅಣೆಕಟ್ಟುಗಳು, ವಿದ್ಯುತ್ ಉತ್ಪಾದನೆ, ಕೈಗಾರಿಕೆ ಮತ್ತು ರಸ್ತೆ ಅಭಿವೃದ್ಧಿಯನ್ನು ಗುರುತಿಸಬಹುದು.
2019ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕೇಂದ್ರ ಪರಿಸರ ಸಚಿವಾಲಯವು ಛತ್ತಿಸ್ಘಡದ ದಟ್ಟ ಹಸದೇವ್ ಅರಂಡ್ ಅರಣ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಅನುಮತಿ ನೀಡಿ ಪರಿಸರ ನಿರಪೇಕ್ಷಣೆಯನ್ನು ನೀಡಿತ್ತು. ಈ ಪ್ರದೇಶದ 1 ಲಕ್ಷ 70 ಸಾವಿರ ಹೆಕ್ಟೇರ್ ದಟ್ಟಾರಣ್ಯವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ನೀಡಲಾಗಿತ್ತು. 30 ಕಲ್ಲಿದ್ದಲು ನಿಕ್ಷೇಪಗಳಿರುವ ಈ ಪ್ರದೇಶದಲ್ಲಿ ರಾಜಸ್ಥಾನ ವಿದ್ಯುತ್ ಉತ್ಪಾದನ್ ನಿಗಮ್ ನಿಗಮವು ವಿದ್ಯುತ್ ಉತ್ಪಾದನೆ ಮಾಡಲಿದ್ದು, ಇದರ ನಿರ್ವಹಣೆಯನ್ನು ಅದಾನಿ ಒಡೆತನದ ರಾಜಸ್ಥಾನ ಕೊಲೀರೀಸ್ ಲಿಮಿಟೆಡ್ಗೆ ನೀಡಲಾಗಿದೆ. ಈಗಾಗಲೇ 841 ಹೆಕ್ಟೇರ್ ದಟ್ಟಾರಣ್ಯ ಪ್ರದೇಶವನ್ನು ಈ ಕಂಪನಿಗೆ ಗುತ್ತಿಗೆಯ ಆಧಾರದಲ್ಲಿ ನೀಡಲಾಗಿದೆ.
ಕಳೆದ ಅಕ್ಟೋಬರ್ ಮಾಹೆಯಲ್ಲಿ ಛತ್ತೀಸ್ಘಡದ ಹಲವು ಸಂಘಟನೆಗಳು ಈ ಯೋಜನೆಗಳನ್ನು ವಿರೋಧಿ, ಅರಣ್ಯ ಒತ್ತುವರಿಯನ್ನು ತಡೆಗಟ್ಟುವ ಆಗ್ರಹದೊಂದಿಗೆ 300 ಕಿಲೋಮೀಟರ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದವು. ರಾಯ್ಪುರ ವಲಯದ 350ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಅಕ್ರಮ ಭೂ ಒತ್ತುವರಿಯ ವಿರುದ್ಧ ಈ ಹೋರಾಟದಲ್ಲಿ ಭಾಗವಹಿಸಿದ್ದವು. ಆದಾಗ್ಯೂ ಈ ವರ್ಷದ ಮಾರ್ಚ್ ಮಾಹೆಯಲ್ಲಿ ರಾಜ್ಯ ಸರ್ಕಾರವು ಪಾರ್ಸಾ ಕಲ್ಲಿದ್ದಲು ನಿಕ್ಷೇಪದ ಕಾರ್ಯಾಚರಣೆಗಾಗಿ 1136 ಹೆಕ್ಟೇರ್ ಭೂಮಿಯನ್ನು ಗಣಿಗಾರಿಕೆಗೆ ಬಳಸಿಕೊಳ್ಳಲು ನಿರಪೇಕ್ಷಣ ಪತ್ರವನ್ನು ನೀಡಿದೆ.
ಆಳುವ ವರ್ಗಗಳ ಈ ದ್ವಂದ್ವ ನೀತಿಗಳ ನಡುವೆಯೇ ಭಾರತ ಇಂದು ಹೆಚ್ಚಿನ ಉಷ್ಣಾಂಶದ ಅಪಾಯವನ್ನು ಎದುರಿಸುತ್ತಿದೆ. 2030ರ ವೇಳೆಗೆ ದೇಶದ ಒಟ್ಟು ಭೂ ಪ್ರದೇಶದ ಶೇ 30ರಷ್ಟನ್ನು ಅರಣ್ಯವಲಯವನ್ನಾಗಿ ಮಾಡುವ ಸರ್ಕಾರದ ಧ್ಯೇಯ ಸಾಕಾರಗೊಳ್ಳುವುದು ಬಹುಶಃ ಅಂಕಿಅಂಶಗಳಲ್ಲಿ ಮಾತ್ರವೇ ಸಾಧ್ಯ ಎನಿಸುತ್ತದೆ. ಅಥವಾ ಕಾಫಿ, ಚಹಾ, ತೆಂಗು ಮುಂತಾದ ಅರಣ್ಯೇತರ ಉತ್ಪನ್ನಗಳ ಪ್ಲಾಂಟೇಷನ್ಗಳನ್ನು ಒಳಗೊಳ್ಳುವ ಮೂಲಕ ಒಟ್ಟಾರೆ ಅರಣ್ಯ ಪ್ರದೇಶದ ಹೆಚ್ಚಳವನ್ನು ಬಿಂಬಿಸಬಹುದು. ಆದರೆ ಅರಣ್ಯವನ್ನೇ ನಂಬಿ ಬದುಕುವ ಸಾವಿರಾರು ಜೀವ ಪ್ರಬೇಧಗಳು ಮತ್ತು ಅರಣ್ಯ ಬದುಕನ್ನೇ ಆಶ್ರಯಿಸುವ ಲಕ್ಷಾಂತರ ಆದಿವಾಸಿ ಕುಟುಂಬಗಳ ಜೀವನೋಪಾಯಕ್ಕೆ ಅಂಕಿಅಂಶಗಳು ನೆರವಾಗುವುದಿಲ್ಲ. ದಿನದಿಂದ ದಿನಕ್ಕೆ ತಮ್ಮ ಮೂಲ ನೆಲೆಯನ್ನು ಕಳೆದುಕೊಳ್ಳುತ್ತಿರುವ ಆದಿವಾಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಆತಂಕಗಳ ನಡುವೆಯೇ ನಾವು ಮತ್ತೊಂದು ಪರಿಸರ ದಿನವನ್ನು ಆಚರಿಸುತ್ತಿದ್ದೇವೆ. ಪರಿಸರ ಮಾಲಿನ್ಯ ಎಂದರೆ ಕೇವಲ ಕಾರ್ಖಾನೆಯಿಂದ ಹೊರಸೂಸಲಾಗುವ ಇಂಗಾಲ ಅಥವಾ ಕೈಗಾರಿಕಾ ತ್ಯಾಜ್ಯಗಳು ಮಾತ್ರವೇ ಅಲ್ಲ. ಅಥವಾ ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಸಮೀಕರಣಕ್ಕೊಳಗಾಗಿರುವ ಶಬ್ದಮಾಲಿನ್ಯದ ಮಾದರಿಗಳೂ ಅಲ್ಲ. ನಾವು ಬದುಕುತ್ತಿರುವ ಸಮಾಜದಲ್ಲಿ ನಿತ್ಯ ಕಾಣುತ್ತಿರುವ ಪರಿಸರ ಮಾಲಿನ್ಯ ಮತ್ತು ಜಲಮಾಲಿನ್ಯದ ಕಾರಣಗಳನ್ನು ಶೋಧಿಸುವುದರಲಿ, ಗುರುತಿಸಲೂ ಆಧುನಿಕ ನಾಗರಿಕತೆ ವಿಫಲವಾಗುತ್ತಿದೆ. ಬೃಹತ್ ಬೆಟ್ಟಗಳು, ಬೃಹದಾಕಾರದ ಬಂಡೆಗಳು ನಗರ ಸಂಸ್ಕೃತಿಯ ಗ್ರಾನೈಟ್ ಸಂಸ್ಕೃತಿಯ ಬಲಿಪಶುಗಳಾಗುತ್ತಿವೆ. ಕರಗುತ್ತಿರುವ ಈ ಬೆಟ್ಟಗಳು ಭವಿಷ್ಯದಲ್ಲಿ ಭೌಗೋಳಿಕ ಅಸಮತೋಲನ ಉಂಟುಮಾಡುವ ಅಪಾಯ ಒಂದೆಡೆಯಾದರೆ, ವರ್ತಮಾನದಲ್ಲೇ ಕಲ್ಲಿದ್ದಲು ಗಣಿಗಳ ಕುಸಿತ, ಕಲ್ಲುಗಣಿಗಳ ಸ್ಫೋಟ ಮತ್ತು ಬಂಡೆಗಳ ಕುಸಿತದಿಂದ ಸಾವಿರಾರು ಶ್ರಮಜೀವಿಗಳ ಜೀವ ಹರಣವಾಗುತ್ತಿದೆ.
ಜಲಸಂಪನ್ಮೂಲಗಳನ್ನು ರಕ್ಷಿಸುವ ಯಾವುದೇ ವೈಜ್ಞಾನಿಕ ಆಡಳಿತ ನೀತಿಯನ್ನು ಜಾರಿಗೊಳಿಸದ ಸರ್ಕಾರಗಳು ನದಿಗಳು ತುಂಬಿ ಹರಿದಾಗ ಬಾಗಿನ ಅರ್ಪಿಸಲು ತೋರುವಷ್ಟು ಆಸ್ಥೆ ಆ ನದಿ ನೀರಿನ ರಕ್ಷಣೆಯ ಬಗ್ಗೆ ತೋರುವುದಿಲ್ಲ. ಪೂಜನೀಯವಾಗಿ ಕಾಣಲಾಗುವ ಜಲಮೂಲಗಳನ್ನು, ನದಿಗಳನ್ನು ಮಾರುಕಟ್ಟೆ ಬಳಕೆಯ ವಸ್ತುಗಳಂತೆ ಪೋಲು ಮಾಡುತ್ತಿರುವುದನ್ನು ಮತ್ತು ನಗರಗಳ ಐಷಾರಮಿ ಬದುಕಿನ ಕಚ್ಚಾವಸ್ತುಗಳಂತೆ ಬಳಸುತ್ತಿರುವುದನ್ನು ಸದ್ದು ಮಾಡದೆ ಗಮನಿಸುತ್ತಲೇ ಇದ್ದೇವೆ.
ಮೈಸೂರಿನ ಪ್ರತಿಷ್ಠಿತ ಚಾಮುಂಡಿ ಬೆಟ್ಟವೂ ಈ ಆಧುನಿಕತೆ, ಧಾರ್ಮಿಕತೆ ಮತ್ತು ಪ್ರವಾಸೋದ್ಯಮದ ವಾಣಿಜ್ಯ ಹಿತಾಸಕ್ತಿಗಳಿಗೆ ಬಲಿಯಾಗುತ್ತಿದ್ದು, ರೋಪ್ವೇ ನಿರ್ಮಿಸುವ ಮೂಲಕ ಅಲ್ಲಿನ ಜೈವವೈವಿಧ್ಯತೆಗೆ ಸಂಚಕಾರ ತರಲು ಎಲ್ಲ ಸಿದ್ಧತೆಗಳೂ ನಡೆದಿವೆ. ಕಲ್ಲಿದ್ದಲು ಗಣಿಗಾರಿಕೆಯಾಗಲೀ, ಅಣು ವಿದ್ಯುತ್ ಉತ್ಪಾದನೆಯಾಗಲೀ ಅಥವಾ ಬೃಹತ್ ಅಣೆಕಟ್ಟುಗಳೇ ಆಗಲಿ, ಅರಣ್ಯ ಸಂಪತ್ತಿನ ಸಮಾಧಿಯ ಮೇಲೆ ನಿರ್ಮಿತವಾಗುವ ಈ ಮಾರುಕಟ್ಟೆ ಸಾಮ್ರಾಜ್ಯಗಳನ್ನು ವಿರೋಧಿಸುವುದೂ ಸಹ “ ದೇಶದ್ರೋಹ ” ಅಥವಾ “ ಅಭಿವೃದ್ಧಿ ವಿರೋಧ ” ಎಂಬ ಹಣೆಪಟ್ಟಿಯನ್ನು ಹೊತ್ತು ಹೋರಾಟ ನಡೆಸಬೇಕಿದೆ.
ನಗರೀಕರಣ ಹೆಚ್ಚಾದಂತೆಲ್ಲಾ ಜನದಟ್ಟಣೆ ಮತ್ತು ವಾಹನದಟ್ಟಣೆಯೂ ಹೆಚ್ಚಾಗುತ್ತಿದ್ದು, ಆಧುನಿಕ ನಾಗರಿಕತೆಯಲ್ಲಿ ಈ ದಟ್ಟಣೆಯಿಂದುಂಟಾಗುವ ಪರಿಸರ ಮಾಲಿನ್ಯದ ಪರಿಜ್ಞಾನವೇ ಇಲ್ಲದಂತಾಗುತ್ತಿದೆ. ವಾಹನಗಳು ಉಗುಳುವ ಹೊಗೆ, ದಿನಕ್ಕೆ 20 ಗಂಟೆಗಳ ಕಾಲವಾದರೂ ವಾಹನಗಳಿಂದ ಉಂಟಾಗುವ ಶಬ್ದ ಮಾಲಿನ್ಯ, ನಗರೀಕೃತ ಜೀವನದಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಮತ್ತೊಬ್ಬರ ಹೊಣೆಯನ್ನಾಗಿ ಮಾಡಿರುವ ಆಧುನಿಕ ಮಾನವ ಸಮಾಜದ ಬೇಜವಾಬ್ದಾರಿ ನಡವಳಿಕೆ ಇವೆಲ್ಲವೂ ನಮ್ಮ ಸುತ್ತಲಿನ ಪರಿಸರವನ್ನೇ ಗೊಬ್ಬರದ ಗುಂಡಿಗಳನ್ನಾಗಿ ಮಾಡುತ್ತಿದೆ.
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ, ಶೇಖರಣೆ, ಸಂಸ್ಕರಣೆ ಮತ್ತು ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಕೋಟ್ಯಂತರ ರೂಗಳನ್ನು ಖರ್ಚು ಮಾಡಲಾಗುತ್ತಿದೆ. ಆದರೂ ರಸ್ತೆಬದಿಯ ಕಸದ ರಾಶಿ ಇಲ್ಲದ ಬಡಾವಣೆಗಳನ್ನು ಎಲ್ಲೆಂದರಲ್ಲಿ ಕಾಣಬಹುದಾಗಿದೆ. ಗಂಗಾನದಿಯ ಮಾಲಿನ್ಯದ ಬಗ್ಗೆ ಸದಾ ಪರಿತಪಿಸುತ್ತಾ ಭಾವುಕವಾಗುವ ಮಧ್ಯಮ ವರ್ಗದ ಮನಸುಗಳು ತಮ್ಮ ರಸ್ತೆಯಲ್ಲೇ ಇಕ್ಕೆಲಗಳಲ್ಲಿರುವ ಕಸದ ರಾಶಿಯನ್ನು ಕಂಡೂ ಕಾಣದಂತೆ ಇರುತ್ತವೆ. ಈ ಕಸದ ರಾಶಿಯೇ ಬೀಡಾಡಿ ದನಗಳಿಗೆ ಭೂರಿಭೋಜನದ ಕೇಂದ್ರಗಳೂ ಆಗಿರುತ್ತವೆ.
ಅಂದರೆ, ಸಾರ್ವಜನಿಕ ಪರಿಕಲ್ಪನೆಯಲ್ಲಿ “ ಪರಿಸರ ” ಒಂದು ಅಮೂರ್ತ ಪ್ರಜ್ಞೆಯಾಗಿ ಮಾತ್ರ ಕಂಡುಬರುತ್ತಿದೆ. ಅಥವಾ ಅತೀತತೆಯ ನೆಲೆಯಲ್ಲಿ, ಭಾವನಾತ್ಮಕತೆಯ ನೆಲೆಯಲ್ಲಿ ಮಾತ್ರವೇ ಕಂಡುಬರುತ್ತಿದೆ. ಹಾಗಾಗಿಯೇ ನದಿ ಸ್ವಚ್ಚತೆಯ ಬಗ್ಗೆ ಉಪನ್ಯಾಸಗಳನ್ನು ನೀಡುವವರೂ ಸಹ, ನದಿ ತೀರಗಳಲ್ಲಿ ನಡೆಯುವ ಧಾರ್ಮಿಕ ಚಟುವಟಿಕೆಗಳನ್ನಾಗಲೀ, ಅದರಿಂದ ಉಂಟಾಗುವ ಮಾಲಿನ್ಯವನ್ನಾಗಲೀ ಗಂಭೀರವಾಗಿ ಪರಿಗಣಿಸುವುದೇ ಇಲ್ಲ.
ಮೈಸೂರಿನ ಸುತ್ತಲಿನ ಕಾವೇರಿ, ಕಪಿಲೆ, ಕಬಿನಿ ನದಿಯ ತೀರಗಳಲ್ಲಿ ನಡೆಯುವ ಚಟುವಟಿಕೆಗಳನ್ನು ನಿರ್ಬಂಧಿಸುವುದು ಪರಿಸರ ಪ್ರಜ್ಞೆಯ ಒಂದು ಭಾಗವಾದಾಗ ಮಾತ್ರವೇ ನಮ್ಮ ಜಲಮಾಲಿನ್ಯ ಕುರಿತ ಪ್ರಲಾಪಗಳಿಗೆ ಅರ್ಥ ಮೂಡಲು ಸಾಧ್ಯ. ಇಲ್ಲಿ ಧಾರ್ಮಿಕ ನಂಬಿಕೆಗಳ ಪ್ರಶ್ನೆ ಎದುರಾಗುವುದಾದರೂ, ನದಿ ನೀರನ್ನು ಮಲಿನಗೊಳಿಸದೆಯೇ ಈ ವಿಧಿವಿಧಾನಗಳನ್ನು ಆಚರಿಸಬಹುದಾದ ಮಾರ್ಗಗಳನ್ನೂ ಕಂಡುಕೊಳ್ಳಬೇಕಿದೆ. ಜನಸಾಮಾನ್ಯರ ಶ್ರದ್ಧಾಭಕ್ತಿಗಳಿಗೆ ಭಂಗ ಉಂಟುಮಾಡದೆಯೇ ಈ ನದಿಗಳ ಮತ್ತು ಬೆಟ್ಟಗುಡ್ಡಗಳ ನೈಸರ್ಗಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಶಾಲ ಮನೋಭಾವವನ್ನು ಆಧುನಿಕ ಸಮಾಜ ರೂಢಿಸಿಕೊಳ್ಳಬೇಕಿದೆ.
ಇದಕ್ಕೆ ಅಡ್ಡಿಯಾಗಬಹುದಾದ ಮಾರುಕಟ್ಟೆ, ವಾಣಿಜ್ಯ ಮತ್ತು ಪ್ರವಾಸೋದ್ಯಮದ ಹಿತಾಸಕ್ತಿಗಳಿಗೆ ಎಲ್ಲ ನೈಸರ್ಗಿಕ ಸಂಪನ್ಮೂಲಗಳೂ ಬಂಡವಾಳದ ಮೂಲಗಳಾಗಿಯೇ ಕಾಣುವುದರಿಂದ, ಆಡಳಿತ ನೀತಿಯನ್ನು ರೂಪಿಸುವ ಸರ್ಕಾರಗಳು ತಮ್ಮ ನಿಸರ್ಗ ಪ್ರಜ್ಞೆ ಮತ್ತು ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಸೂಕ್ಷ್ಮಗೊಳಿಸಬೇಕಿದೆ. ಬಂಡವಾಳಶಾಹಿ ಅಭಿವೃದ್ಧಿಯ ಮಾದರಿಗಳು ನಿಸರ್ಗವನ್ನು ಶೋಷಣೆಗೊಳಪಡಿಸುವುದೇ ಅಲ್ಲದೆ ಪರಿಸರ ಅಸಮತೋಲನವನ್ನು ಹೇಗೆ ಸೃಷ್ಟಿಸುತ್ತದೆ ಎನ್ನಲು ಕೇದಾರನಾಥದಲ್ಲಿ ನಡೆಯುತ್ತಿರುವ ಭೂಕುಸಿತಗಳು, ಎರಡು ವರ್ಷದ ಹಿಂದೆ ಕರ್ನಾಟಕದ ಕೊಡಗಿನಲ್ಲಿ ಸಂಭವಿಸಿದ ಅನಾಹುತಗಳು ಕೇವಲ ನಿದರ್ಶನಗಳಷ್ಟೇ. ಆಧುನಿಕ ನಗರೀಕರಣ ಪ್ರಕ್ರಿಯೆಗೆ ಬಲಿಯಾಗುತ್ತಿರುವ ನದಿ ತೀರಗಳು ಮರಳು ಗಣಿಗಾರಿಕೆಯಿಂದ ಒಡಲು ಬರಿದುಮಾಡಿಕೊಳ್ಳುತ್ತಿರುವಂತೆಯೇ, ನಿಸರ್ಗ ಸಮತೋಲನ ಕಾಪಾಡುವ ಬೆಟ್ಟಗುಡ್ಡಗಳು ನಿರ್ಮಾಣ ಕಾಮಗಾರಿಗಳಿಗೆ ಜಲ್ಲಿ, ಕಲ್ಲು, ಎಮ್ಸ್ಯಾಂಡ್ ಪೂರೈಸುವ ಸಲುವಾಗಿ ಬರಿದಾಗುತ್ತಿವೆ.
ಮೈಸೂರಿನಲ್ಲೇ ಇರುವ ತ್ಯಾಜ್ಯ ವಿಲೇವಾರಿ ಘಟಕವನ್ನು “ ಸೂಯೆಜ್ ಫಾರ್ಮ್ ” ಎಂದು ಮುದ್ದಾಗಿ ಕರೆಯಲಾಗುತ್ತದೆ. ವಾಸ್ತವದಲ್ಲಿ ಅದು “ ಸೆವೇಜ್ ಫಾರ್ಮ್ ” ಅಂದರೆ ಇಡೀ ನಗರದ ತ್ಯಾಜ್ಯವನ್ನು ಸಂಗ್ರಹಿಸುವ ಬೃಹತ್ ಕಸದ ಬೆಟ್ಟಗಳನ್ನು ಹೊಂದಿರುವ ಒಂದು ತಾಣ. ಈ ತಾಣದ ಸುತ್ತಲಿನ ಜನತೆ ಎದುರಿಸುತ್ತಿರುವ ಆರೋಗ್ಯದ ಸಮಸ್ಯೆಗಳು ಮೈಸೂರು ಮಹಾನಗರ ಪಾಲಿಕೆಯನ್ನಾಗಲೀ, ಅದೇ ವಲಯದಲ್ಲಿ ವಾಸಿಸುವ ಜನಪ್ರತಿನಿಧಿಗಳಿಗಾಗಲೀ ಸಮಸ್ಯೆ ಎನಿಸುತ್ತಲೇ ಇಲ್ಲ.
ಆದರೂ ಅಲ್ಲಿನ ನಿವಾಸಿಗಳು ತಮ್ಮ ಜೀವನ ನಿರ್ವಹಣೆಗಾಗಿ ಆರೋಗ್ಯ ಕಾಪಾಡಿಕೊಂಡು, ಹಲವು ಅನಾರೋಗ್ಯಗಳೊಂದಿಗೇ ಬದುಕುತ್ತಿದ್ದಾರೆ. ಬಂಡವಾಳಶಾಹಿ ಅರ್ಥವ್ಯವಸ್ಥೆಯಲ್ಲಿ ಅನಾರೋಗ್ಯವನ್ನು ತಪ್ಪಿಸುವ ಯಾವುದೇ ಯೋಜನೆ ಇರುವುದಿಲ್ಲ ಬದಲಾಗಿ ತಲೆದೋರುವ ಅನಾರೋಗ್ಯಗಳ ನಿವಾರಣೆಗೆ “ ಕಲ್ಯಾಣ ಯೋಜನೆಗಳನ್ನು ” ರೂಪಿಸಲಾಗುತ್ತದೆ. ಯಶಸ್ವಿನಿ, ಜನೌಷಧಿ, ಆಯುಷ್ಮಾನ್ ಇತ್ಯಾದಿ. ಇದು ಬಂಡವಾಳ ವ್ಯವಸ್ಥೆಯ ದ್ವಂದ್ವಗಳಲ್ಲಿ ಅತ್ಯಂತ ಪ್ರಧಾನವಾದುದು.
ಈ ಕಾಳಜಿ, ಕಳಕಳಿ ಮತ್ತು ದ್ವಂದ್ವಗಳ ನಡುವೆಯೇ ನಾವು ಮತ್ತೊಂದು ಪರಿಸರ ದಿನವನ್ನು ಆಚರಿಸುತ್ತಿದ್ದೇವೆ. ಕಸ ಆಯಲು ಬರುವವರು ಕೈಗವುಸುಗಳಿಲ್ಲದ, ಮುಖಗವುಸುಗಳಿಲ್ಲದೆ, ಸೂಕ್ತ ವೇತನ ಸೌಲಭ್ಯಗಳೂ ಇಲ್ಲದೆ ತಮ್ಮ ಜೀವವನ್ನೇ ಪಣಕಟ್ಟಿಟ್ಟು ಮನೆಮನೆಗೆ ಬರುತ್ತಿರುತ್ತಾರೆ. ಆದರೂ ರಸ್ತೆಯ ಇಕ್ಕೆಲಗಳಲ್ಲಿ ತಾಜ್ಯದ ರಾಶಿ ರಾರಾಜಿಸುತ್ತಿರುತ್ತದೆ. ಮತಯಾಚನೆಗೆ ಬರುವ ಜನಪ್ರತಿನಿಧಿಗಳು ಮೂಗಿನೊಂದಿಗೆ ಒಳಗಣ್ಣನ್ನೂ ಮುಚ್ಚಿಕೊಂಡು ಹಾದು ಹೋಗಿಬಿಡುತ್ತಾರೆ.
ಬೀಡಾಡಿ ದನಗಳು ಈ ಕಸದ ರಾಶಿಗಳಲ್ಲಿ ಬಾಯಾಡಿಸಿ ಮತ್ತಷ್ಟು ಹರಡಿಬಿಡುತ್ತವೆ. ಸುತ್ತ ವಾಸಿಸುವ ನಾಗರಿಕರು, ಗಂಗೆಯ ಪಾವಿತ್ರ್ಯತೆ, ಹಿಮಾಲಯದ ಭವ್ಯತೆಯ ಭ್ರಮೆಯಲ್ಲಿ ತೇಲಾಡುತ್ತಾ ಸ್ವಚ್ಚ ಭಾರತದ ಫಲಾನುಭವಿಗಳಾಗಿ ತಮ್ಮ ಬದುಕು ಸವೆಸುತ್ತಾ ಸಾಗುತ್ತಾರೆ. ಪರಿಸರ ಮಾಲಿನ್ಯ ಬಾಧಿಸಬೇಕಿರುವುದು ಈ ಜನತೆಯನ್ನು, ಜಾಗೃತಿ ಮೂಡಿಸಬೇಕಿರುವುದು ಈ ಜನತೆಯ ನಡುವೆ, ಸಾರ್ವಜನಿಕ ವೇದಿಕೆ ಅಥವಾ ವಿಚಾರ ಸಂಕಿರಣಗಳಲ್ಲಿ ಅಲ್ಲ. ಈ ಸುಡುವಾಸ್ತವವನ್ನು ಅರ್ಥಮಾಡಿಕೊಂಡರೆ ಪರಿಸರ ದಿನಾಚರಣೆಯೂ ಸಾರ್ಥಕವಾದೀತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ1 hour agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


