ಬಹಿರಂಗ
ಸ್ವಾತಂತ್ರ್ಯ ಸಂಗ್ರಾಮದ ಸ್ಮಾರಕಕ್ಕೂ ಲಗ್ಗೆ ಇಟ್ಟ ಮತೀಯ ರಾಜಕಾರಣ
- ನಾ ದಿವಾಕರ
ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..?
ವರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್ ವಸಾಹತು ಆಳ್ವಿಕೆಯಿಂದ ವಿಮೋಚನೆ ಪಡೆಯುವ ಮುನ್ನ ಭಾರತ ಆಂತರಿಕವಾಗಿ ಅನುಭವಿಸಿದ ತುಮುಲಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ, ಸಾಮಾಜಿಕ ಚೌಕಟ್ಟಿನಲ್ಲಿ ಮತ್ತು ರಾಜಕೀಯ ಭೂಮಿಕೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗುತ್ತದೆ.
ಗಾಂಧಿ ಅನುಸರಿಸಿದ ಅಹಿಂಸಾ ಮಾರ್ಗದ ಮೂಲಕವೇ ಭಾರತ ದಾಸ್ಯದಿಂದ ವಿಮೋಚನೆ ಪಡೆದಿದೆ ಎಂಬ ಸಾಮಾನ್ಯ ಗ್ರಹಿಕೆಯ ಹೊರತಾಗಿಯೂ ಸ್ವಾತಂತ್ರ್ಯ ಪೂರ್ವ ಇತಿಹಾಸದಲ್ಲಿ ಬ್ರಿಟೀಷ್ ವಸಾಹತುಶಾಹಿಯ ದಬ್ಬಾಳಿಕೆಗೆ ನೂರಾರು ಜೀವಗಳು ಬಲಿಯಾಗಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಸ್ವಾತಂತ್ರ್ಯದ ಹೊಸ್ತಿಲಲ್ಲೂ ಸಹ ಮತದ್ವೇಷ ಮತ್ತು ಮತಾಂಧತೆಗೆ ಗುರಿಯಾದ ಭಾರತ ಲಕ್ಷಾಂತರ ಸಾವು ನೋವುಗಳನ್ನು ಕಂಡಿದೆ.
ಸಾವಿರಾರು ಜನರ ತ್ಯಾಗ, ಬಲಿದಾನ, ನಿಸ್ವಾರ್ಥ ಹೋರಾಟದ ಪ್ರತಿಫಲವನ್ನು 1947ರ ಸ್ವಾತಂತ್ರ್ಯದಲ್ಲಿ ಕಾಣಬಹುದು. ರಾಜಕೀಯ ಸ್ವಾತಂತ್ರ್ಯ ಪಡೆಯುತ್ತಿದ್ದೇವೆ ಎಂಬ ಹೆಮ್ಮೆಯೊಂದಿಗೇ ಸಾಮಾಜಿಕ ಶೋಷಣೆ ಮತ್ತು ಸಾಂಸ್ಕೃತಿಕ ದಬ್ಬಾಳಿಕೆ ಸ್ವಾತಂತ್ರ್ಯಾನಂತರವೂ ಜೀವಂತವಾಗಿರುತ್ತದೆ ಎಂಬ ಆತಂಕದೊಡನೆಯೇ ಈ ದೇಶದ ಬಹುಸಂಖ್ಯಾತ ಶೋಷಿತ ಜನತೆ ಈ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಅಲ್ಲಗಳೆಯಳಾಗುವುದಿಲ್ಲ. ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ನಡೆದ ಸುದೀರ್ಘ ಸಂಘರ್ಷದಲ್ಲಿ ಹಲವು ವಿಚಾರಧಾರೆಗಳು ತಮ್ಮದೇ ಆದ ರೀತಿಯಲ್ಲಿ ಜನಜಾಗೃತಿ ಮೂಡಿಸಿವೆ. ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಮಹಾತ್ಮ ಗಾಂಧಿ ನೇತೃತ್ವದ ಕಾಂಗ್ರೆಸ್ ಸಹ 1885 ರಿಂದ 1935ರವರೆಗಿನ ಯಾತ್ರೆಯಲ್ಲಿ ಹಲವು ರೂಪಾಂತರಗಳನ್ನು ಕಂಡು, ಸವಾಲುಗಳನ್ನೂ ಎದುರಿಸಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಸೌಮ್ಯ ಮಾರ್ಗ, ಮೃದು ಮಾರ್ಗ, ರಾಜೀ ಮಾರ್ಗ, ತೀವ್ರಗಾಮಿ ಮಾರ್ಗ ಮತ್ತು ಕ್ರಾಂತಿಕಾರಿ ಧೋರಣೆಗಳ ಹಲವು ವಿಚಾರಧಾರೆಗಳು ಈ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದ್ದನ್ನು ನಿರಾಕರಿಸಲಾಗುವುದಿಲ್ಲ.
ಈ ವಿಭಿನ್ನ ವಿಚಾರಧಾರೆ ಮತ್ತು ಹೋರಾಟದ ಮಾರ್ಗಗಳು ಭಾರತದ ಸಾಂಸ್ಕೃತಿಕ ವೈವಿಧ್ಯತೆಯಂತೆಯೇ ಭಿನ್ನ ಧೋರಣೆಗಳನ್ನು ವ್ಯಕ್ತಪಡಿಸಿವೆ. 1757ರ ಪ್ಲಾಸಿ ಕದನದಿಂದ 1947ರವರೆಗೆ, ನಂತರ 1961ರ ಗೋವಾ ವಿಮೋಚನೆಯವರೆಗಿನ ಹೋರಾಟದ ಹಾದಿಯಲ್ಲಿ ಲಕ್ಷಾಂತರ ಭಾರತೀಯರು ತಮ್ಮ ಸಾಂಸ್ಕೃತಿಕ ಅಥವಾ ಧಾರ್ಮಿಕ ಗಡಿರೇಖೆಗಳನ್ನು ಮರೆತು, ಅಖಂಡ ಭಾರತಕ್ಕಾಗಿ ಜೀವ ಸವೆಸಿದ್ದಾರೆ, ತೆತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಹೀಗೆ ವಿಭಿನ್ನ ಮತಧರ್ಮಗಳ ಅನುಯಾಯಿಗಳು, ಆದಿವಾಸಿಗಳು, ಬುಡಕಟ್ಟು ಸಮುದಾಯಗಳು, ಶೋಷಿತ ವರ್ಗಗಳು ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ವೀರೋಚಿತ ಹೋರಾಟಗಳನ್ನು ನಡೆಸಿವೆ. ಈ ಎರಡು ಶತಮಾನಗಳ ಇತಿಹಾಸದಲ್ಲೇ ಆಂತರಿಕವಾಗಿ ಜಾತಿ ಶೋಷಣೆಯ ವಿರುದ್ಧ, ಅಸ್ಪೃಶ್ಯತೆಯ ವಿರುದ್ಧ, ಸಾಮಾಜಿಕ ಅಸಮಾನತೆಗಳ ವಿರುದ್ಧ, ಊಳಿಗಮಾನ್ಯ ದಬ್ಬಾಳಿಕೆಯ ವಿರುದ್ಧ ಶೋಷಿತ ವರ್ಗಗಳ, ರೈತಾಪಿ ವರ್ಗಗಳ ವೀರೋಚಿತ ಹೋರಾಟಗಳನ್ನೂ ಕಾಣಬಹುದು. ಬಿರ್ಸಾ ಮುಂಡಾ ಹೋರಾಟದಿಂದ ತೆಲಂಗಾಣ ರೈತರ ಹೋರಾಟದವರೆಗೆ ಈ ಪರಂಪರೆ ವಿಸ್ತರಿಸುತ್ತದೆ.
ಈ ಹೋರಾಟಗಳ ನಡುವೆಯೇ ಬ್ರಿಟೀಷರೊಡನೆ ವೀರೋಚಿತವಾಗಿ ಹೋರಾಡಿ ಪ್ರಾಣತೆತ್ತ ಅನೇಕ ಪ್ರಾಂತೀಯ ಸಂಸ್ಥಾನಗಳ ಇತಿಹಾಸವನ್ನೂ ದಾಖಲಿಸಲಾಗಿದೆ. ಟಿಪ್ಪುಸುಲ್ತಾನ್, ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ, ಸಂಗೊಳ್ಳಿರಾಯಣ್ಣ ಮುಂತಾದವರು ಹುತಾತ್ಮರಾಗಿದ್ದಾರೆ. ಭಾರತ ಅಹಿಂಸಾ ಮಾರ್ಗದ ಮೂಲಕ ರಕ್ತಪಾತ ಇಲ್ಲದೆ ಸ್ವಾತಂತ್ರ್ಯ ಪಡೆದಿದೆ ಎನ್ನುವುದು ಒಟ್ಟಾರೆ ಸ್ವಾತಂತ್ರ್ಯ ಸಂಗ್ರಾಮದ ದೃಷ್ಟಿಯಿಂದ ಸಮರ್ಥನೀಯವೆನಿಸಿದರೂ, ಬ್ರಿಟೀಷರ ಕೋವಿಗಳು ಸಾವಿರಾರು ಭಾರತೀಯರ ರಕ್ತ ಹರಿಸಿಯೇ ತನ್ನ ಆಳ್ವಿಕೆಯನ್ನು ಕೊನೆಗೊಳಿಸಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. 20ನೆಯ ಶತಮಾನದ ನಂತರದ ರಕ್ತಸಿಕ್ತ ಇತಿಹಾಸದಲ್ಲಿ ಎರಡು ಪ್ರಮುಖ ಘಟನೆಗಳನ್ನು ನೆನೆಯುವುದಾದರೆ ಮೊದಲನೆಯದಾಗಿ ಜಲಿಯನ್ವಾಲಾ ಬಾಗ್ ನೆನಪಾದರೆ, ಮತ್ತೊಂದು ಕರ್ನಾಟಕದ ವಿದುರಾಶ್ವತ್ಥ ನೆನಪಾಗುತ್ತದೆ. ಸಹಜವಾಗಿಯೇ ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಕರೆಯಲಾಗುತ್ತದೆ.
ವಿದುರಾಶ್ವತ್ಥದ ಐತಿಹ್ಯ ಮತ್ತು ಇತಿಹಾಸ
ಅವಿಭಜಿತ ಕೋಲಾರ ಜಿಲ್ಲೆಯ, ಈಗಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪ ಪಿನಾಕಿನಿ ನದಿಯ ತೀರದಲ್ಲಿರುವ ಒಂದು ಪುಟ್ಟ ಗ್ರಾಮ ವಿದುರಾಶ್ವತ್ಥ. ಪೌರಾಣಿಕ ಐತಿಹ್ಯಗಳಿಂದ ಇತಿಹಾಸ ಪ್ರಸಿದ್ಧವಾಗಿರುವ ಈ ಗ್ರಾಮ ಆಸ್ತಿಕರಿಗೆ ಒಂದು ಪುಣ್ಯಕ್ಷೇತ್ರ ಮತ್ತು ಯಾತ್ರಾಸ್ಥಳವೂ ಹೌದು. ಇಲ್ಲಿನ ಅಶ್ವತ್ಥಮರದ ಪಾದತಳದಲ್ಲಿ ನಾಗರಪ್ರತಿಷ್ಠೆ ಮಾಡುವ ಮೂಲಕ ತಮ್ಮ ಪಾಪಗಳನ್ನು ನಿವೇದಿಸಿಕೊಂಡು ಬದುಕಿನ ಸಂಕಷ್ಟಗಳಿಂದ ಪರಿಹಾರ ಕೋರುವ ಸಾವಿರಾರು ಭಕ್ತಾದಿಗಳು ಈ ಕ್ಷೇತ್ರಕ್ಕೆ ವರ್ಷವಿಡೀ ಬರುತ್ತಲೇ ಇರುತ್ತಾರೆ. ಮಹಾಭಾರತ ಕಾಲದ ಐತಿಹ್ಯ ಇರುವ ಈ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮಾಡಿದರೆ ತಮ್ಮ ಕಷ್ಟಗಳು ಪರಿಹಾರವಾಗುತ್ತವೆ ಎಂಬ ಬಲವಾದ ನಂಬಿಕೆಯೇ ಈ ಕ್ಷೇತ್ರವನ್ನು ಕರ್ನಾಟಕದ ಯಾತ್ರಾಸ್ಥಳವನ್ನಾಗಿ ಮಾಡಿದೆ. ಪ್ರತಿವರ್ಷ ಏಪ್ರಿಲ್ ಮಾಹೆಯಲ್ಲಿ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಪಿನಾಕಿನಿ ನದಿಯ ತೀರದಲ್ಲಿರುವ ಈ ಗ್ರಾಮ ಆಸ್ತಿಕ ಹಿಂದೂಗಳಿಗೆ ಒಂದು ಪವಿತ್ರ ಕ್ಷೇತ್ರವೂ ಆಗಿದೆ. ಹಾಗೆಯೇ ಭಾರತದ ಬಹುಸಂಸ್ಕೃತಿಯ ಒಂದು ಪ್ರತೀಕವಾಗಿಯೂ ನಡೆದುಬಂದಿರುವ ವಿದುರಾಶ್ವತ್ಥಕ್ಕೆ ಅನ್ಯ ಧರ್ಮದ ಜನರೂ ಭೇಟಿ ನೀಡುವುದನ್ನು ಕಾಣಬಹುದು.
ಮತಶ್ರದ್ಧೆ, ಜನಸಾಮಾನ್ಯರ ನಂಬಿಕೆ ಮತ್ತು ಪೌರಾಣಿಕ ಐತಿಹ್ಯಗಳ ಹೊರತಾಗಿಯೂ ವಿದುರಾಶ್ವತ್ಥ ಚಾರಿತ್ರಿಕವಾಗಿ ಭಾರತದ ಭೂಪಟದಲ್ಲಿ ಒಂದು ಶಾಶ್ವತ ಸ್ಥಾನ ಗಳಿಸಿರುವುದೂ ಹೌದು. ಭಕ್ತಿ, ನಂಬಿಕೆ, ಶ್ರದ್ಧೆ ಮತ್ತು ಧಾರ್ಮಿಕ ಆಚರಣೆಗಳು ನಿರಂತರವಾಗಿ ಹರಿಯುತ್ತಿದ್ದ ಪಿನಾಕಿನಿ ನದಿ ತೀರದ ಈ ಪುಟ್ಟ ಗ್ರಾಮದಲ್ಲಿ ಬ್ರಿಟೀಷ್ ವಸಾಹತುಶಾಹಿಯು ರಕ್ತದ ಹೊಳೆ ಹರಿಸಿದ ರಕ್ತಸಿಕ್ತ ಚರಿತ್ರೆ ಇಲ್ಲಿ ದಾಖಲಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಈಸೂರು, ಶಿವಪುರ ದಾಖಲಾಗಿರುವಂತೆಯೇ ವಿದುರಾಶ್ವತ್ಥವೂ ಸಹ ಧ್ವಜ ಸತ್ಯಾಗ್ರಹ ಕೇಂದ್ರವಾಗಿ, ಬ್ರಿಟೀಷರ ಕ್ರೌರ್ಯಕ್ಕೆ ಬಲಿಯಾದ ಹುತಾತ್ಮರ ಕತೆಯನ್ನು ಸಾರುತ್ತದೆ. 1938ರ ಏಪ್ರಿಲ್ 25ರಂದು ಇದೇ ಸ್ಥಳದಲ್ಲೇ ಬ್ರಿಟೀಷರ ಗುಂಡೇಟಿಗೆ 32 ಸ್ವಾತಂತ್ರ್ಯ ಸಂಗ್ರಾಮಿಗಳು ಹುತಾತ್ಮರಾಗಿದ್ದರು. ಈ ಹುತಾತ್ಮರನ್ನು ಸಾರ್ವಕಾಲಿಕವಾಗಿ ಸ್ಮರಿಸಲೆಂದೇ ಇಲ್ಲೊಂದು ಸ್ಮಾರಕವನ್ನೂ ನಿರ್ಮಿಸಲಾಗಿದ್ದು, ಸ್ವಾತಂತ್ರ್ಯ ಸಂಗ್ರಾಮದ 200 ವರ್ಷಗಳ ಇತಿಹಾಸವನ್ನು ದಾಖಲಿಸುವ ಒಂದು ಚಿತ್ರ ಗ್ಯಾಲರಿಯನ್ನೂ ನಿರ್ಮಿಸಲಾಗಿದೆ.
1938ರಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಶಿವಪುರದಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನವು ಕರ್ನಾಟಕದ ಸ್ವಾತಂತ್ರ್ಯ ಚಳುವಳಿಗೆ ಚಾಲನೆ ನೀಡಿದ ಒಂದು ಘಟನೆ. ಧ್ವಜಾರೋಹಣೆಯ ಮೂಲಕ ಭಾರತದ ಸಾರ್ವಭೌಮತ್ವವನ್ನು ಸಾರುವ ನಿಟ್ಟಿನಲ್ಲಿ ಸಂಸ್ಥಾನದ ವಿವಿಧೆಡೆಗಳಲ್ಲಿ ಧ್ವಜ ಸತ್ಯಾಗ್ರಹಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಶಿವಪುರದಲ್ಲಿ ನಡೆಯಬೇಕಿದ್ದ ಮೂರು ದಿನದ ಅಧಿವೇಶನಕ್ಕೆ ಮೈಸೂರು ಸರ್ಕಾರ ಅಡ್ಡಿಪಡಿಸಿದ ಕಾರಣ ಈ ಸಂದರ್ಭದಲ್ಲಿ ಶಿವಪುರದಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಸತ್ಯಾಗ್ರಹಿಗಳ ಮೇಲೆ ಗುಂಡಿನ ದಾಳಿ ನಡೆಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆಜ್ಞಾಪಿಸಿದ್ದರೂ, ಶಾಂತಿಯುತವಾಗಿ ನಡೆಯುತ್ತಿರುವ ಸಭೆಯ ಮೇಲೆ ಗುಂಡು ಹಾರಿಸಲು ನಿರಾಕರಿಸಿದ ಜಿಲ್ಲಾಧಿಕಾರಿ ಇನಾಯತ್ ಉಲ್ಲಾ ಮೇಕ್ರಿ ವರ್ಗಾವಣೆಯ ಶಿಕ್ಷೆ ಎದುರಿಸಬೇಕಾಯಿತು. ಮೂರು ದಿನವೂ ಸಭೆ ನಡೆದು ನಂತರ ಹಲವಾರು ನಾಯಕರು ಬಂಧನಕ್ಕೊಳಗಾಗಿದ್ದರು.
ಇದೇ ಸ್ಫೂರ್ತಿಯೊಂದಿಗೆ ವಿದುರಾಶ್ವತ್ಥದಲ್ಲೂ ಧ್ವಜ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ 1938ರ ಏಪ್ರಿಲ್ 18ರಂದು ದೇಶಭಕ್ತರ ದಿನಾಚರಣೆಯನ್ನು ಆಚರಿಸಲು ಸ್ಥಳೀಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಏಪ್ರಿಲ್ 14 ರಿಂದ 29ರವರೆಗೆ ಇಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲೇ ಈ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಲಾಯಿತು. ಏಕೆಂದರೆ ಈ ಜಾತ್ರೆಯಲ್ಲಿ ದನದ ಜಾತ್ರೆಯೂ ನಡೆಯುವುದರಿಂದ ಲಕ್ಷಾಂತರ ಜನರು ಸೇರುತ್ತಿದ್ದರು. ಏಪ್ರಿಲ್ 18ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆಗೇ ಜಿಲ್ಲಾಡಳಿತವು ಇಡೀ ಪ್ರದೇಶದಲ್ಲಿ 15 ದಿನಗಳ ಕಾಲ ಸೆಕ್ಷನ್ 144ರ ಅಡಿ ನಿಷೇಧಾಜ್ಞೆಯನ್ನು ಹೇರಿತ್ತು. ಆದರೆ ಇದಾವುದನ್ನೂ ಲೆಕ್ಕಿಸದ ಸ್ಥಳೀಯ ಕಾಂಗ್ರೆಸ್ ನಾಯಕರು ಧ್ವಜಸತ್ಯಾಗ್ರಹದ ಅಧ್ಯಕ್ಷರಾದ ಎನ್ ಸಿ ನಾಗಯ್ಯರೆಡ್ಡಿ ನೇತೃತ್ವದಲ್ಲಿ ಶಾಂತಿಯುತ ಸಭೆ ನಡೆಸಿದ್ದರು. ಏಪ್ರಿಲ್ 22ರಂದು ನಾಗಯ್ಯರೆಡ್ಡಿ ಮುಂದಾಳತ್ವದಲ್ಲಿ ಸತ್ಯಾಗ್ರಹಿಗಳು ಗೌರಿಬಿದನೂರಿನಿಂದ ವಿದುರಾಶ್ವತ್ಥಕ್ಕೆ ಆಗಮಿಸಿ ಅಲ್ಲಿ ಕರಪತ್ರಗಳನ್ನು ಹಂಚುವುದರ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ದಿಟ್ಟ ಹೋರಾಟಕ್ಕೆ ಚಾಲನೆ ನೀಡಿದ್ದರು. ಈ ಘಟನೆಯಲ್ಲಿ ನಾಗಯ್ಯರೆಡ್ಡಿ ಅವರೊಂದಿಗೆ ಶ್ರೀಪಾಲಯ್ಯ, ನಾರಾಯಣಪ್ಪ, ಹೆಚ್ ಎಲ್ ವೆಂಕಟ್ರಾಮರಾವ್ ಮುಂತಾದ ಹಲವು ನಾಯಕರನ್ನು ಬಂಧಿಸಲಾಯಿತು. ಕ್ಷಮೆ ಯಾಚಿಸಲು ನಿರಾಕರಿಸಿದ ಈ ಹೋರಾಟಗಾರರಿಗೆ ಬಿಡುಗಡೆಯೂ ದೊರೆಯಲಿಲ್ಲ.
ಏಪ್ರಿಲ್ 23ರಂದು ಗೌರಿಬಿದನೂರಿನಿಂದ ರಾಮಯ್ಯ ಶೆಟ್ಟಿ ಮತ್ತು ಜ್ವಾಲನಯ್ಯವರ ಮುಂದಾಳತ್ವದಲ್ಲಿ ಮುನ್ನೂರಕ್ಕೂ ಹೆಚ್ಚು ಜನರು ವಿದುರಾಶ್ವತ್ಥಕ್ಕೆ ಆಗಮಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಈ ಇಬ್ಬರೂ ನಾಯಕರನ್ನು ಬಂಧಿಸಲಾಯಿತು. ಈ ಬಂಧನಗಳ ಸುದ್ದಿ ವ್ಯಾಪಿಸುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇಶಭಕ್ತಿಯ ಅಲೆ ಪ್ರವಹಿಸಲಾರಂಭಿಸಿತ್ತು. ಕೋಲಾರ ಜಿಲ್ಲೆಯ ಹಲವು ಗ್ರಾಮಗಳಿಂದ ಜನರು ತಂಡೋಪತಂಡವಾಗಿ ಧ್ವಜ ಸತ್ಯಾಗ್ರಹ ನಡೆಯಲಿದ್ದ ವಿದುರಾಶ್ವತ್ಥದ ಕಡೆ ಹೆಜ್ಜೆ ಹಾಕತೊಡಗಿದರು. ನೆರೆಯ ಆಂಧ್ರ ಪ್ರದೇಶದ ಹಿಂದೂಪುರದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರು ಕಲ್ಲೂರು ಸುಬ್ಬರಾವ್ ಮುಂದಾಳತ್ವದಲ್ಲಿ ಇಲ್ಲಿಗೆ ಆಗಮಿಸಿದರು. ಇಲ್ಲಿ ನೆರೆದ ಸಾವಿರಾರು ಕಾರ್ಯಕರ್ತರು ತಾವು ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಧ್ವಜಸತ್ಯಾಗ್ರಹ ನಡೆಸುವುದಾಗಿ ಪಣತೊಟ್ಟರು. ಏಪ್ರಿಲ್ 25ರಂದು ಗೌರಿಬಿದನೂರು ಮತ್ತು ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಸಾವಿರ ಸಾವಿರ ಸಂಖ್ಯೆಯಲ್ಲಿ ವಿದುರಾಶ್ವತ್ಥದೆಡೆಗೆ ಹೆಜ್ಜೆ ಹಾಕಲಾರಂಭಿಸಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಂದು ಧ್ವಜಸತ್ಯಾಗ್ರಹದಲ್ಲಿ ಭಾಗವಹಿಸಲು 25 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು ಎನ್ನಲಾಗುತ್ತದೆ.
ಈ ಸಂದರ್ಭದಲ್ಲಿ ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತಿದ್ದ, ಅಲ್ಲಿ ನೆರೆದಿದ್ದ ಜನರ ಮೇಲೆ ಮ್ಯಾಜಿಸ್ಟ್ರೇಟರ ಆದೇಶದ ಮೇರೆಗೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ಚದುರಲಾರಂಭಿಸಿದ ಜನರು ಕಲ್ಲು ತೂರಾಟದಲ್ಲಿ ತೊಡಗಿದ್ದರು. ಈ ಗಲಭೆಯ ನಡುವೆಯೇ ಅಲ್ಲಿ ನೆರೆದಿದ್ದ 80ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ರೈಫಲ್ ಪಡೆಗೆ ಗುಂಡುಹಾರಿಸಲು ಆಜ್ಞಾಪಿಸಲಾಯಿತು. ಮೂರು ಬಾರಿ ನಡೆದ ಈ ಗುಂಡಿನ ದಾಳಿಯಲ್ಲಿ ಪೊಲೀಸರು 96 ಸುತ್ತು ಗುಂಡುಗಳನ್ನು ಹಾರಿಸಿದ್ದರು. ಈ ಗುಂಡಿನ ದಾಳಿಗೆ ಸ್ಥಳದಲ್ಲೇ 32 ಜನರು ಹುತಾತ್ಮರಾದರು. 48 ಮಂದಿ ಗಾಯಗೊಂಡಿದ್ದರು. ಸರ್ಕಾರದ ವರದಿಯ ಪ್ರಕಾರ 15 ಜನರು ಮೃತರಾಗಿರುವುದಾಗಿ ದಾಖಲಾಗಿದ್ದರೂ, ಕೆಲವು ಪತ್ರಿಕಾ ವರದಿಗಳು ಮತ್ತು ಬಿಬಿಸಿ ವರದಿಯ ಪ್ರಕಾರ ಕನಿಷ್ಟ 32 ಜನರು ಹುತಾತ್ಮರಾಗಿದ್ದರು. ಈ ಮಾರಣಹೋಮದಿಂದ ಪುಣ್ಯಕ್ಷೇತ್ರವಾಗಿದ್ದ ವಿದುರಾಶ್ವತ್ಥ ಭೀಕರ ಮಸಣವಾಯಿತು. ಪಿನಾಕಿನಿ ನದಿಯ ನೀರಿನೊಂದಿಗೇ ಸ್ವಾತಂತ್ರ್ಯ ಹೋರಾಟಗಾರರ ರಕ್ತದ ಹೊಳೆಯೂ ಹರಿದಿತ್ತು. ಪಿನಾಕಿನಿ ನದಿಯು ಸ್ವಾತಂತ್ರ್ಯ ಸಂಗ್ರಾಮಿಗಳ ರಕ್ತದ ಮಡುವಿಗೆ ಸಾಕ್ಷಿಯಾಯಿತು. ಈ ಘಟನೆಯಲ್ಲಿ ಭಾಗಿಯಾಗಿದ್ದ ಪ್ರತ್ಯಕ್ಷದರ್ಶಿಗಳಾಗಿ ಮೂವರು ಮಹನೀಯರು, ಇತ್ತೀಚಿನವರೆಗೂ ಜೀವಂತವಾಗಿದ್ದರು.
ಸ್ಮಾರಕ ಮತ್ತು ಚಾರಿತ್ರಿಕ ಸ್ಮರಣೆ
ಕರ್ನಾಟಕದ ಜಲಿಯನ್ವಾಲಾ ಬಾಗ್ ಎಂದೇ ಹೆಸರಾದ ಈ ಚಾರಿತ್ರಿಕ ಘಟನೆಯು 1973ರಲ್ಲಿ ಸ್ಥಾಪಿಸಿದ ಸ್ಮಾರಕ ಶಿಲೆ ಮತ್ತು 2004ರಲ್ಲಿ ಸ್ಥಾಪಿತವಾದ ವೀರಸೌಧದ ಮೂಲಕ ಇಂದಿಗೂ ಅಂದಿನ ಕರಾಳ ಚರಿತ್ರೆಯನ್ನು ನೆನಪಿಸುತ್ತಿವೆ. ಈ ಚರಿತ್ರಾರ್ಹ ಘಟನೆಯನ್ನು ಸಾರ್ವಕಾಲಿಕವಾಗಿ ಸ್ಮರಿಸಲು ನೆರವಾಗುವಂತಹ ಒಂದು ಚಿತ್ರ ಗ್ಯಾಲರಿಯನ್ನು ರೂಪಿಸಲಾಗಿದೆ. ಚರಕದ ಆಕಾರದಲ್ಲಿರುವ ಒಂದು ಸುಂದರ ವಿನ್ಯಾಸದ ಕಟ್ಟಡದಲ್ಲಿ 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನೊಳಗೊಂಡ ಗ್ರಂಥಾಲಯವನ್ನೂ ನಿರ್ಮಿಸಲಾಗಿದೆ. ಸ್ಥಳೀಯ ಶಾಸಕರಾದ ಶಿವಶಂಕರ ರೆಡ್ಡಿ ಮತ್ತು ಗೌರಿಬಿದನೂರಿನ ನಿವೃತ್ತ ಪ್ರಾಧ್ಯಾಪಕ, ಲೇಖಕ ಬಿ ಗಂಗಾಧರಮೂರ್ತಿ ಮತ್ತು ಕೆಲವು ಸಮಾನಾಸಕ್ತ ಗೆಳೆಯರ ಪರಿಶ್ರಮದೊಂದಿಗೆ ಈ ಗ್ಯಾಲರಿ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗಿದೆ. 1757ರ ಪ್ಲಾಸಿ ಕದನದಿಂದ 1961ರ ಗೋವಾ ವಿಮೋಚನೆಯವರೆಗೆ ಭಾರತದ ವಸಾಹತುವಿರೋಧಿ ಹೋರಾಟದ ವಿವಿಧ ಮಗ್ಗುಲುಗಳನ್ನು ಬಿಂಬಿಸುವ 104 ವರ್ಣಚಿತ್ರ ಫಲಕಗಳನ್ನು ಈ ಗ್ಯಾಲರಿಯಲ್ಲಿ ಕಾಲಾನುಕ್ರಮವಾಗಿ ಜೋಡಿಸಲಾಗಿದೆ.
ಈ ಅವಧಿಯಲ್ಲಿ ನಡೆದ ಹೋರಾಟಗಳು, ದಂಗೆಗಳು, ಆಂದೋಲನಗಳು, ಯುದ್ಧಗಳು ಎಲ್ಲವನ್ನೂ ಈ ವರ್ಣಚಿತ್ರಗಳಲ್ಲಿ ಸಂಕ್ಷಿಪ್ತ ವಿವರಗಳೊಂದಿಗೆ ಬಿಂಬಿಸಲಾಗಿದೆ. ಕಿತ್ತೂರು ರಾಣಿ, ಝಾನ್ಸಿ ರಾಣಿ, 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ಟಿಪ್ಪು, ಸಂಗೊಳ್ಳಿ ರಾಯಣ್ಣ, ಬಿರ್ಸಾ ಮುಂಡಾ ಹೀಗೆ ಹಲವು ಮಜಲುಗಳ ಬ್ರಿಟೀಷ್ ವಿರೋಧಿ ಹೋರಾಟಗಾರರನ್ನು ಬಿಂಬಿಸಲಾಗಿದ್ದು ದಾಖಲಿತ ಅಧಿಕೃತ ಇತಿಹಾಸದಲ್ಲಿರುವ ಚಾರಿತ್ರಿಕ ಸಂಗತಿಗಳನ್ನು ಇಲ್ಲಿ ಬಿತ್ತರಿಸಲಾಗಿದೆ. ಸಹಜವಾಗಿಯೇ 20ನೆಯ ಶತಮಾನದಲ್ಲಿ ರೂಪುಗೊಂಡ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಣಬಹುದಾದ ವೈವಿಧ್ಯಮಯ ವಿಚಾರಧಾರೆಗಳು, ಹೋರಾಟದ ಧೋರಣೆಗಳು, ಮಾರ್ಗಗಳು ಇಲ್ಲಿ ಬಿಂಬಿತವಾಗಿವೆ. ಸೈದ್ಧಾಂತಿಕ, ತಾತ್ವಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಐಕಮತ್ಯದೊಂದಿಗೆ, ಐಕ್ಯತೆಯಿಂದ ಬ್ರಿಟೀಷ್ ವಸಾಹತುಶಾಹಿಯ ಸಂಕೋಲೆಗಳನ್ನು ಕಿತ್ತು ಹಾಕಿದ ರಾಷ್ಟ್ರನಾಯಕರ ಸ್ಮರಣೆ ಇಲ್ಲಿ ವಸ್ತುನಿಷ್ಠತೆಯಿಂದ ದಾಖಲಾಗಿದೆ. ಆ ಸಂದರ್ಭದಲ್ಲೇ ಕಂಡುಬಂದಿದ್ದ ಎಡಪಂಥೀಯ, ಬಲಪಂಥೀಯ, ತೀವ್ರಗಾಮಿ, ರಾಷ್ಟ್ರೀಯವಾದಿ ಹೋರಾಟಗಳ ವಿಭಿನ್ನ ಮಜಲುಗಳನ್ನೂ ಪರಿಚಯಿಸಲಾಗಿದೆ.
1905ರಲ್ಲಿ ಕ್ರಾಂತಿಕಾರಿಗಳ ಜೊತೆಗಿದ್ದ ಸಾವರ್ಕರ್ ಅವರ ಚಿತ್ರ ಇರುವಂತೆಯೇ, ಗಾಂಧಿ ಹತ್ಯೆಯ ನಂತರ ನಡೆದ ಬೆಳವಣಿಗೆಗಳಲ್ಲೂ ಅವರ ಚಿತ್ರ ಇಲ್ಲಿ ಕಾಣುತ್ತದೆ. ಹಾಗೆಯೇ ಭಗತ್ ಸಿಂಗ್ ಮುಂತಾದವರ ಎಡಪಂಥೀಯ ಕ್ರಾಂತಿಕಾರಿ ಹೆಜ್ಜೆಗಳ ನಡುವೆಯೇ ಉಗಮಿಸಿದ್ದ ಹಿಂದೂ ಮಹಾಸಭಾ ಮುಂತಾದ ಬಲಪಂಥೀಯ ಸಂಘಟನೆಗಳ ಪ್ರಸ್ತಾಪವನ್ನೂ ಕಾಣಬಹುದು. ಭಾರತದ ಶೋಷಿತ ಜನಸಮುದಾಯಗಳಿಗೆ ಬೆಳಕಿನ ಕಿಂಡಿ ತೋರಿ ಒಂದು ಸಮಸಮಾಜ ನಿರ್ಮಾಣಕ್ಕೆ ಪೂರಕವಾದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರೂ ಇಲ್ಲಿ ಜ್ವಲಿಸುತ್ತಾರೆ. ಗಾಂಧಿ ಮಾರ್ಗವನ್ನು ಒಪ್ಪುವ ಮತ್ತು ಒಪ್ಪದಿರುವ ಎಲ್ಲ ವಿಚಾರಧಾರೆಗಳನ್ನು ಚಾರಿತ್ರಿಕ ಮಾಹಿತಿಯೊಂದಿಗೆ ಸಚಿತ್ರವಾಗಿ ಈ ಗ್ಯಾಲರಿಯಲ್ಲಿ ಬಿಂಬಿಸಲಾಗಿದೆ. 200 ವರ್ಷಗಳ ಸುದೀರ್ಘ ಇತಿಹಾಸವನ್ನು ಮತ್ತು ಈ ಚರಿತ್ರೆಯ ಹಾದಿಯಲ್ಲಿ ಆಗಿಹೋದ ನೂರಾರು ಹುತಾತ್ಮರನ್ನು ಮತ್ತೆ ಮತ್ತೆ ನೆನಪಿಸುವ ರೀತಿಯಲ್ಲಿ ಈ ಗ್ಯಾಲರಿಯನ್ನು ರೂಪಿಸಲಾಗಿದೆ. ದೇಶದ ಹಲವಾರು ರಾಜಕೀಯ ನಾಯಕರು, ಪಕ್ಷಾತೀತವಾಗಿ ಇಲ್ಲಿಗೆ ಭೇಟಿ ನೀಡಿ, ಈ ಗ್ಯಾಲರಿಯನ್ನು ಪ್ರಶಂಸಿಸಿ ದಾಖಲಿಸಿದ್ದಾರೆ.
ಆದರೆ ಇತ್ತೀಚೆಗೆ ಕೆಲವು ಬಲಪಂಥೀಯ ಗುಂಪುಗಳು ಗ್ಯಾಲರಿಯಲ್ಲಿರುವ ಕೆಲವು ವರ್ಣಚಿತ್ರಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವುದಾಗಿ ತಿಳಿದುಬಂದಿದೆ. ಮಹಾತ್ಮ ಗಾಂಧಿಗೆ ಹೆಚ್ಚು ಪ್ರಾಶಸ್ತ್ಯ ನೀಡಿರುವುದು, ಸಾವರ್ಕರ್ಗೆ ಅಪಮಾನವಾಗುವಂತೆ ಚಿತ್ರಿಸಿರುವುದು, ಪ್ರತಿಯೊಂದು ಫಲಕದಲ್ಲೂ ಮುಸ್ಲಿಂ ಸಂಗ್ರಾಮಿಗಳನ್ನು ಬಿಂಬಿಸಿರುವುದು, ಟಿಪ್ಪು ಸುಲ್ತಾನ್ನನ್ನು ಬಿತ್ತರಿಸಿರುವುದು, ಹಿಂದೂ ರಾಷ್ಟ್ರೀಯವಾದಿಗಳನ್ನು ಬಲಪಂಥೀಯರು ಎಂದು ಗುರುತಿಸಿರುವುದು ಇವೇ ಮುಂತಾದ ಕೆಲವು ಆಕ್ಷೇಪಗಳು ವ್ಯಕ್ತವಾಗಿದ್ದು, ಕೆಲವು ಗುಂಪುಗಳಿಂದ ಗ್ಯಾಲರಿಗೆ ಹಾನಿ ಉಂಟುಮಾಡುವ ಬೆದರಿಕೆಯೂ ಕೇಳಿಬಂದಿದೆ. ಇತಿಹಾಸ ಎಂದಿಗೂ ಸಾರ್ವತ್ರಿಕ ಸಮ್ಮತಿ ಪಡೆಯುವುದಿಲ್ಲ. ನೋಡುಗರ, ಓದುಗರ ದೃಷ್ಟಿಯೇ ಚರಿತ್ರೆಯ ಸರಿ ತಪ್ಪುಗಳನ್ನು ನಿಷ್ಕರ್ಷೆ ಮಾಡುವುದನ್ನು ಕಾಣುತ್ತಲೇ ಬಂದಿದ್ದೇವೆ. ಆಕ್ಷೇಪಗಳು, ಆರೋಪ ಪ್ರತ್ಯಾರೋಪಗಳ ನಡುವೆಯೇ ಚರಿತ್ರೆಯನ್ನು ನೋಡುತ್ತಾ, ಹೊಸ ಚರಿತ್ರೆಯನ್ನು ಕಟ್ಟುವುದು ನಾಗರಿಕ ಮಾನವ ಸಮಾಜದ ಆದ್ಯತೆಯಾಗಬೇಕು.
ಕೆಲವೇ ವ್ಯಕ್ತಿಗಳ, ಹಲವು ವರ್ಷಗಳ ಪರಿಶ್ರಮದಿಂದ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಿರ್ಮಿಸಲಾಗಿರುವ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಮತ್ತು ನಾಗರಿಕರ ಜವಾಬ್ದಾರಿಯೂ ಹೌದು. ವಿದುರಾಶ್ವತ್ಥ ಬ್ರಿಟೀಷ್ ವಸಾಹತು ಕಾಲದ ರಕ್ತಸಿಕ್ತ ಇತಿಹಾಸವನ್ನು ಸಾರಿ ಸಾರಿ ಹೇಳುತ್ತದೆ. ಸ್ಥಳೀಯರು ಈ ಚರಿತ್ರೆಯ ಪುಟಗಳೊಡನೆಯೇ ಇಲ್ಲಿನ ಸ್ಮಾರಕವನ್ನು ಕಾಪಾಡಿಕೊಂಡು ಬಂದಿದ್ದಾರೆ. 27 ವರ್ಷಗಳ ಕಾಲ ಬತ್ತಿಹೋಗಿದ್ದು ಮರಳುಗಣಿಗಾರಿಕೆಯ ಮಾಫಿಯಾಗಳಿಗೆ ಚಿನ್ನದ ಗಣಿಯಂತಾಗಿದ್ದ ಪಿನಾಕಿನಿ ನದಿ ಈ ವರ್ಷ ತುಂಬಿ ಹರಿಯುತ್ತಿದೆ. ಈ ನದಿಯ ಝುಳುಝಳು ನಾದದೊಂದಿಗೆ , ಅಶ್ವತ್ಥ ವೃಕ್ಷದಲ್ಲಿ ನಲಿಯುವ ಹಕ್ಕಿಗಳ ಕಲರವದೊಂದಿಗೇ, ಕರ್ನಾಟಕದ ಮತ್ತು ನೆರೆ ರಾಜ್ಯಗಳ ಶ್ರದ್ಧಾಭಕ್ತಿಗಳ ಪ್ರಾರ್ಥನೆಯೊಂದಿಗೇ, ಈ ಚಿತ್ರ ಗ್ಯಾಲರಿಯನ್ನು ಜೀವಂತವಾಗಿರಿಸಿ, ಸ್ವಾತಂತ್ರ್ಯ ಸಂಗ್ರಾಮದ ಹೆಜ್ಜೆ ಗುರುತುಗಳನ್ನು ಜೀವಂತಿಕೆಯಿಂದಿರಿಸುವ ಹೊಣೆ ನಮ್ಮದಾಗಿದೆ.
ಕೆಲವೇ ಬಲಪಂಥೀಯ ಸಂಘಟನೆಗಳ ಮತಾಂಧತೆಗೆ ಈ ಗ್ಯಾಲರಿ ಬಲಿಯಾಗದಂತೆ ಜಾಗ್ರತೆ ವಹಿಸುವ ಜವಾಬ್ದಾರಿ ಸರ್ಕಾರ ಮತ್ತು ಜಿಲ್ಲಾಡಳಿತದ ಮೇಲಿದೆ. ಬ್ರಿಟೀಷರು ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್ವಾಲಾಬಾಗ್ ಮಾಡಿ ಕರಾಳ ಛಾಯೆಯನ್ನು ಹರಡಿ ಹೋಗಿದ್ದಾರೆ. ಭಾರತದ 75ನೆಯ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವಿದುರಾಶ್ವತ್ಥದ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿ ಮತ್ತೊಂದು ಕಂಬಾಲಪಲ್ಲಿ ಆಗುವುದು ಬೇಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243



