ಬಹಿರಂಗ
‘ಝೀ ವಾಹಿನಿ’ಯಲ್ಲಿ ಅಂತರ್ ಕಲಹ ಮತ್ತೊಂದು ಕೂಗುಮಾರಿ ವಾಹಿನಿಗೆ ಹಾದಿ..!
ವಿದ್ಯುನ್ಮಾನ ಸುದ್ಧಿಮಾಧ್ಯಮಗಳಿಗೆ ಕಾರ್ಪೋರೇಟ್ ಮಾರುಕಟ್ಟೆಯೇ ಸರ್ವಸ್ವ
- ನಾ ದಿವಾಕರ
ಕಳೆದ ಎರಡು ದಶಕಗಳಲ್ಲಿ ಕಾರ್ಪೋರೇಟ್ ಸ್ನೇಹಿ ಬಂಡವಾಳ ವ್ಯವಸ್ಥೆಯ ಒಂದು ಭಾಗವಾಗಿಯೇ ತನ್ನ ಅಸ್ತಿತ್ವವನ್ನು ಕಂಡುಕೊಂಡಿರುವ ಭಾರತದ ಮಾಧ್ಯಮ ಜಗತ್ತಿನಲ್ಲಿ ಯಾವುದೇ ವ್ಯತ್ಯಯ ಸಂಭವಿಸಿದರೂ ಅದರ ಹಿಂದೆ ಮಾರುಕಟ್ಟೆಯ ಕಾರಣಗಳಿರುವಂತೆಯೇ ರಾಜಕೀಯ ಕಾರಣಗಳೂ ಇರುತ್ತವೆ.
ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾವಲುಕಾಯುವಂತಿರಬೇಕಾದ ಮಾಧ್ಯಮಗಳು ಆಳುವ ವರ್ಗಗಳ ವಂದಿಮಾಗಧರಾಗಿರುವುದೇ ಅಲ್ಲದೆ ವ್ಯವಸ್ಥೆಯ ಒಂದು ಭಾಗವೇ ಆಗಿಹೋಗಿರುವುದರಿಂದ, ಮಾಧ್ಯಮ ಲೋಕದಲ್ಲಿ ನಡೆಯುವ ಯಾವುದೇ ಬದಲಾವಣೆಗಳನ್ನು ಸೂಕ್ಷ್ಮವಾಗಿಯೇ ಗಮನಿಸಬೇಕಾಗುತ್ತದೆ. ಕಳೆದ ಎಂಟು ವರ್ಷಗಳಲ್ಲಿ ತಮ್ಮ ಸ್ವಾಯತ್ತತೆ, ಸ್ವಂತಿಕೆ ಮತ್ತು ಸ್ವಾತಂತ್ರ್ಯವನ್ನು ಸ್ವತಃ ತಾವೇ ಕಳೆದುಕೊಂಡು, ಮಾರುಕಟ್ಟೆಯ ಬಂಡವಾಳ ಮತ್ತು ಆಳುವ ವ್ಯವಸ್ಥೆಯ ಬೇಕುಬೇಡಗಳನ್ನು ಅವಲಂಬಿಸಿರುವ ಭಾರತದ ಮಾಧ್ಯಮ ಲೋಕ, ವಿಶೇಷವಾಗಿ ವಿದ್ಯುನ್ಮಾನ ಸುದ್ದಿಮನೆಗಳ ಲೋಕ ಈ ಜಟಿಲತೆಯ ನಡುವೆಯೇ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳಬೇಕಿದೆ.
ಕೇವಲ ಒಂದೆರಡು ದಶಕಗಳ ಹಿಂದೆ ಸಾರ್ವಜನಿಕರ ದೃಷ್ಟಿಯಲ್ಲಿ ವ್ಯವಸ್ಥೆಯ ಓರೆಕೋರೆಗಳನ್ನು ಎತ್ತಿತೋರುವ ಮತ್ತು ನೊಂದ ಜನತೆಯನ್ನು ಕೊಂಚಮಟ್ಟಿಗಾದರೂ ಪ್ರತಿನಿಧಿಸುವ ವಾಹಿನಿಗಳಾಗಿದ್ದ ಮಾಧ್ಯಮ ಇಂದು ಬಹುತೇಕವಾಗಿ, ವ್ಯವಸ್ಥೆಯ ಸಮರ್ಥನೆಯ ವೇದಿಕೆಗಳಾಗಿ ಬದಲಾಗಿವೆ. ಮುದ್ರಣ ಮಾಧ್ಯಮಗಳು ಕಾರ್ಪೋರೇಟ್ ಬಂಡವಾಳ ವ್ಯವಸ್ಥೆಯ ಜಾಹೀರಾತು ಆಮಿಷಗಳಿಗೆ ಬಲಿಯಾಗಿದ್ದರೆ, ವಿದ್ಯುನ್ಮಾನ ಮಾಧ್ಯಮಗಳು ಮಾರುಕಟ್ಟೆ ಆಧಾರಿತ ಟಿಆರ್ಪಿ ರೇಟಿಂಗ್ಗಳಿಗಾಗಿ ತಮ್ಮ ಸ್ವಂತಿಕೆಯನ್ನೂ ಕಳೆದುಕೊಂಡು ಬೆತ್ತಲಾಗುತ್ತಿವೆ.
ವಿದ್ಯುನ್ಮಾನ ಸುದ್ದಿಮನೆಗಳು ಸೃಷ್ಟಿಸಿರುವ ಕೂಗುಮಾರಿ ಸಂಸ್ಕೃತಿ ಎಲ್ಲ ಭಾಷೆಗಳಿಗೂ ವ್ಯಾಪಿಸುತ್ತಿದ್ದು, ತಮ್ಮ ಮಾರುಕಟ್ಟೆ ರೇಟಿಂಗ್ ಹೆಚ್ಚಿಸಿಕೊಳ್ಳುವ ಪೈಪೋಟಿಯಲ್ಲಿ ಸುಳ್ಳು ಸುದ್ದಿಗಳನ್ನು ವೈಭವೀಕರಿಸುವ ಮತ್ತು ಸತ್ಯವನ್ನು ಮರೆಮಾಚುವ ಒಂದು ವ್ಯವಸ್ಥಿತ ದಂಧೆಗೆ ಮಾಧ್ಯಮ ಲೋಕ ಅವಕಾಶಗಳನ್ನು ಕಲ್ಪಿಸಿದೆ. ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನೀಡಿದ ಹೇಳಿಕೆಯ ಬಗ್ಗೆ ಝೀ ಸುದ್ದಿವಾಹಿನಿ ಕ್ಷಮೆ ಯಾಚಿಸಿರುವುದು, ಟೈಂಸ್ನೌ ವಾಹಿನಿಯ ನಾವಿಕಾ ಕುಮಾರ್ ನೂಪುರ್ ಶರ್ಮ ವಿವಾದದ ಕೇಂದ್ರಬಿಂದುವಾಗಿರುವುದು, ಕನ್ನಡದ ಪಬ್ಲಿಕ್ ಟಿವಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳಿಗೆ ಅವಕಾಶ ಮಾಡಿಕೊಟ್ಟು ನಂತರ ಕ್ಷಮೆ ಕೋರಿರುವುದು ಇವೆಲ್ಲವೂ ಮಾಧ್ಯಮ ಲೋಕದ ಅವನತಿಯ ಸಂಕೇತಗಳೇ ಆಗಿವೆ.
ಈ ಅವನತಿಯ ಹಾದಿಯಲ್ಲೇ ದೇಶದ ಪ್ರತಿಷ್ಠಿತ ಸುದ್ದಿಮನೆಯ ನಿರೂಪಕರೊಬ್ಬರ ನಿರ್ಗಮನ ಸುದ್ದಿಯಲ್ಲಿದೆ. ಇಂದು ಯಾವುದೇ ವಿದ್ಯುನ್ಮಾನ ಸುದ್ದಿಮನೆಯನ್ನು ಗಮನಿಸಿದರೂ, ಅದು ಒಬ್ಬ ನಿರೂಪಕನ ಮೂಲಕವೇ ಗುರುತಿಸಿಕೊಂಡಿರುತ್ತದೆ. ಈ ನಿರೂಪಕರು ಬಹುಪಾಲು ಸಂದರ್ಭಗಳಲ್ಲಿ ಕೂಗುಮಾರಿ ಸಂಸ್ಕೃತಿಯ ಪರಿಚಾರಕರಾಗಿಯೇ ಇರುತ್ತಾರೆ. ಒಂದೆರಡು ವಾಹಿನಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ಇಂತಹ ಕೂಗುಮಾರಿ ನಿರೂಪಕರಿಂದಲೇ ತಮ್ಮ ಟಿಆರ್ಪಿ ರೇಟಿಂಗ್ ಹೆಚ್ಚಿಕೊಳ್ಳುತ್ತವೆ.
ಕನ್ನಡದ ಮಾಧ್ಯಮ ಲೋಕದಲ್ಲಿ ಎಲ್ಲವೂ ಇದೇ ಮಾದರಿಯನ್ನು ಅನುಸರಿಸುತ್ತಿವೆ. ಹಿಂದಿ ವಾಹಿನಿಗಳ ಪೈಕಿ ಕೆಲವು ಈ ಸಂಸ್ಕೃತಿಗೆ ಹೊರತಾಗಿವೆ. ಇಂತಹ ಕೂಗುಮಾರಿ ಸಂಸ್ಕೃತಿಯ ಪರಿಚಾರಕರಲ್ಲೊಬ್ಬರಾದ ಸುಧೀರ್ ಚೌಧರಿ ಝೀ ನ್ಯೂಸ್ ವಾಹಿನಿಯಿಂದ ನಿರ್ಗಮಿಸಿದ್ದಾರೆ. ಮಾರುಕಟ್ಟೆಯಲ್ಲೂ ಅತ್ಯಂತ ಜನಪ್ರಿಯ ನಿರೂಪಕರಲ್ಲಿ ಒಬ್ಬರಾಗಿ ಖ್ಯಾತಿ ಗಳಿಸಿರುವ ಸುಧೀರ್ ಚೌಧರಿಯ ನಿರ್ಗಮನಕ್ಕೆ ತಾತ್ವಿಕ ಅಥವಾ ಸೈದ್ಧಾಂತಿಕ ಕಾರಣಗಳಿಗಿಂತಲೂ ವ್ಯಕ್ತಿಗತ, ವಾಣಿಜ್ಯಾಸಕ್ತಿಗಳೇ ಪ್ರಧಾನವಾಗಿರುವುದು ಸ್ಪಷ್ಟವಾಗಿದೆ.
ಝೀ ನ್ಯೂಸ್ ಇಂದಿಗೂ ಭಾರತದಲ್ಲಿ ಪ್ರಥಮ ಶ್ರೇಣಿಯಲ್ಲಿರುವ ಒಂದು ಸುದ್ದಿಮನೆ. ಭಾರತವು ಮಾರುಕಟ್ಟೆ ಅರ್ಥವ್ಯವಸ್ಥೆಗೆ ತೆರೆದುಕೊಂಡು, ಮಾಧ್ಯಮ ಲೋಕವೂ ಸಹ ಬದಲಾದ ಸನ್ನಿವೇಶಕ್ಕೆ ತಕ್ಕಂತೆ ತನ್ನದೇ ಆದ ಮಾರುಕಟ್ಟೆ ತಂತ್ರಗಳನ್ನು ಅನುಸರಿಸಲಾರಂಭಿಸಿದಾಗ, 1990ರಲ್ಲೇ ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆ ಇಟ್ಟವರು ಝೀ ನ್ಯೂಸ್ನ ಮಾಲೀಕರಾದ ಸುಭಾಷ್ ಚಂದ್ರ. ಮಾಜಿ ರಾಜ್ಯಸಭಾ ಸದಸ್ಯರೂ ಆಗಿರುವ ಸುಭಾಷ್ ಚಂದ್ರ ಭಾರತದ ವಿದ್ಯುನ್ಮಾನ ಮಾಧ್ಯ ಲೋಕಕ್ಕೆ ಮಾರುಕಟ್ಟೆ ಸ್ಪರ್ಶ ನೀಡಿದ್ದೇ ಅಲ್ಲದೆ, ಪಶ್ದಿಮ ರಾಷ್ಟ್ರಗಳ ಮಾಧ್ಯಮ ವಲಯಕ್ಕೆ ಸರಿಸಮಾನವಾದ ಒಂದು ಆಧುನಿಕ ಸ್ವರೂಪವನ್ನು ನೀಡುವುದರಲ್ಲೂ ಯಶಸ್ವಿಯಾಗಿದ್ದಾರೆ.
ಇಂದು ಭಾರತದಲ್ಲಿ ನೂರಾರು ಟಿವಿ ವಾಹಿನಿಗಳಿದ್ದರೂ, ಇವೆಲ್ಲದರ ಜನಕ ಎಂದರೆ ಝೀ ಟೀವಿ ವಾಹಿನಿ ಎಂದು ನಿಸ್ಸಂಶಯವಾಗಿ ಹೇಳಬಹುದು. ಈ ವಾಹಿನಿಯಿಂದಲೇ ಕವಲೊಡೆದ ಹಲವಾರು ವಾಹಿನಿಗಳು ಇಂದು ನಮ್ಮ ನಡುವೆ ಇದೆ, ಹಾಗೆಯೇ ಝೀ ವಾಹಿನಿಯಿಂದಲೇ ತಮ್ಮ ವೃತ್ತಿ ಬದುಕು ಆರಂಭಿಸಿದ ಅನೇಕ ಪತ್ರಕರ್ತರು, ನಿರೂಪಕರು ಇಂದು ವಿವಿಧ ವಾಹಿನಿಗಳಲ್ಲಿ ತಮ್ಮ ನೆಲೆ ಕಂಡುಕೊಂಡಿದ್ದಾರೆ.
ವಿದ್ಯುನ್ಮಾನ ಮಾಧ್ಯಮದ ಪತ್ರಿಕೋದ್ಯೋಗಿಗಳ ಪೈಕಿ ಮೊದಲ ಪೀಳಿಗೆಯವರೆಂದೇ ಗುರುತಿಸಲ್ಪಟ್ಟಿರುವ ಸುಧೀರ್ ಚೌಧರಿ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದೇ ಝೀ ನ್ಯೂಸ್ ವಾಹಿನಿಯ ಮೂಲಕ. 24 ಗಂಟೆಗಳ ಸುದ್ದಿ ಪ್ರಸರಣ ಜನಪ್ರಿಯವಾಗುವುದರ ಹಿಂದೆ ಸುಧೀಂದ್ರ ಚೌಧರಿ ಅವರ ಕೊಡುಗೆಯೂ ಇದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. 2001ರಲ್ಲಿ ಭಾರತೀಯ ಸಂಸತ್ ಭವನದ ಮೇಲೆ ಭಯೋತ್ಪಾದಕ ದಾಳಿ ನಡೆದ ನಂತರ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರಫ್ ನಡುವೆ ನಡೆದ ಮಾತುಕತೆಗಳ ಸಂದರ್ಭದಲ್ಲಿ ಈ ಸಭೆಯ ಕಲಾಪಗಳನ್ನು ವರದಿಮಾಡಲು ನಿಯೋಜಿಸಲಾಗಿದ್ದ ತಂಡದಲ್ಲಿ ಸುಧೀರ್ ಚೌಧರಿ ಪ್ರಮುಖರಾಗಿದ್ದರು.
2003ರಲ್ಲಿ ಝೀ ನ್ಯೂಸ್ ವಾಹಿನಿಯನ್ನು ತೊರೆದು ಸಹಾರ ಸಮಯ್ ವಾಹಿನಿಯನ್ನು ಆರಂಭಿಸುವುದಕ್ಕೆ ಒತ್ತಾಸೆಯಾಗಿ ನಿಂತಿದ್ದರು. ಸಹಾರ ಉದ್ಯಮ ಸಮೂಹದ ಈ ಹಿಂದಿ ವಾಹಿನಿ ಹೆಚ್ಚು ಕಾಲ ಊರ್ಜಿತವಾಗಲಿಲ್ಲ. ನಂತರ ಸುಧೀರ್ ಇಂಡಿಯಾ ಟಿವಿ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಪುನಃ ತಮ್ಮ ತವರಿಗೆ, ಝೀ ನ್ಯೂಸ್ ವಾಹಿನಿಗೆ ಬಂದು ಸೇರಿಕೊಂಡಿದ್ದು, ನಿತ್ಯ ಸುದ್ದಿ ಮತ್ತು ವಿಶ್ಲೇಷಣೆಯ ವಿಭಾಗದಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ತಮ್ಮದೇ ಆದ ಸ್ವಂತ ವಾಹಿನಿಯನ್ನು ಆರಂಭಿಸುವ ಇಚ್ಚೆಯೊಂದಿಗೆ ನಿರ್ಗಮಿಸಿದ್ದಾರೆ.
ಸುಧೀರ್ ಚೌಧರಿ ತಮ್ಮ ವೃತ್ತಿ ಜೀವನದಲ್ಲಿ ಅನೇಕ ಏಳುಬೀಳುಗಳನ್ನೂ ಎದುರಿಸಿದ್ದಾರೆ. ವಾಣಿಜ್ಯೋದ್ಯಮಿ ನವೀನ್ ಜಿಂದಾಲ್ ಅವರಿಂದ ಹಣವಸೂಲಿ ಮಾಡುವ ಆರೋಪಕ್ಕೆ ಸಿಲುಕಿದ್ದ ಚೌಧರಿ 2012ರಲ್ಲಿ ಬಂಧನಕ್ಕೊಳಗಾಗಿದ್ದರು. ಈ ಸಂಬಂಧ ಸುದ್ದಿ ಪ್ರಸರಣ ಸಂಪಾದಕರ ಸಂಘದ ಖಜಾಂಚಿಯೂ ಆಗಿದ್ದ ಸುಧೀರ್ ಅವರನ್ನು ಸಂಘದಿಂದ ಉಚ್ಚಾಟಿಸಲಾಗಿತ್ತು. 2018ರಲ್ಲಿ ಪರಸ್ಪರ ರಾಜಿ ಸೂತ್ರದ ಮೂಲಕ ಈ ವಿವಾದ ಬಗೆಹರಿದಿತ್ತು.
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರು ತಮ್ಮ ಭಾಷಣವೊಂದರಲ್ಲಿ ಟ್ರೂಮನ್ ಲಾಂಗ್ಮನ್ ಅವರಿಂದ ಕೃತಿಚೌರ್ಯ ಮಾಡಿದ್ದಾರೆ ಎಂದು ಆರೋಪಿಸಿ ಸುಧೀರ್ ಚೌಧರಿ ಮೊಯಿತ್ರಾ ಅವರಿಂದ ಮಾನನಷ್ಟ ಮೊಕದ್ದಮೆ ಎದುರಿಸಬೇಕಾಯಿತು. ನಂತರ ಸ್ವತಃ ಲಾಂಗ್ಮನ್ ಅವರೇ ಈ ಆರೋಪವನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಝೀ ನ್ಯೂಸ್ ಕ್ಷಮಾಪಣೆ ಕೇಳಬೇಕಾಯಿತು. ಕೋವಿದ್ 19 ಸಂದರ್ಭದಲ್ಲಿ ಕೋಮು ಪ್ರಚೋದಕ ಸುದ್ದಿಗಾಗಿಯೇ ಸುಧೀರ್ ಇಸ್ಲಾಂ ಭೀತಿ ಸೃಷ್ಟಿಸುವ ಆರೋಪಕ್ಕೆ ಗುರಿಯಾಗಿದ್ದರು. ಈ ಆರೋಪಗಳ ಹೊರತಾಗಿಯೂ ಸುಧೀರ್ ಒಬ್ಬ ನಿರೂಪಕರಾಗಿ ಝೀ ಸುದ್ದಿವಾಹಿನಿಯನ್ನು ಮಾರುಕಟ್ಟೆಯಲ್ಲಿ ಒಂದು ಪ್ರಬಲ ದನಿಯಾಗಿ ಕಾಪಾಡಿಕೊಂಡು ಬಂದಿದ್ದು ವಾಸ್ತವ.
ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಬಲಪಂಥೀಯ ರಾಜಕಾರಣ ಬಲವಾಗುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ವ್ಯವಸ್ಥೆಯ ಪರವಾಗಿಯೇ ತಮ್ಮ ಸುದ್ದಿ ನಿರೂಪಣೆಯನ್ನು ನಿರ್ವಹಿಸುವ ಮೂಲಕ ಸುಧೀರ್ ಚೌಧರಿ ಜನಪ್ರಿಯತೆಯನ್ನೂ ಗಳಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಬಲವಾಗಿ ಸಮರ್ಥನೆ ಮಾಡಿಕೊಳ್ಳುವುದೇ ಅಲ್ಲದೆ, ತಮ್ಮ ಸುದ್ದಿ ನಿರೂಪಣೆಯ ಮೂಲಕ ಮತ್ತು ಝೀ ವಾಹಿನಿಯಲ್ಲಿ ಏರ್ಪಡಿಸುವ ಚರ್ಚೆಗಳ ಮೂಲಕ ಸರ್ಕಾರದ ನೀತಿಗಳನ್ನು ಸಾರ್ವಜನಿಕ ವಲಯದಲ್ಲಿ ಜನಪ್ರಿಯಗೊಳಿಸುವ ಮೂಲಕ ಸುಧೀರ್ ಚೌಧರಿ ವ್ಯವಸ್ಥೆಯ ಪರವಾದ ಒಂದು ದನಿಯಾಗಿ ಕಂಡುಬಂದಿದ್ದಾರೆ.
ಬಹುಶಃ ಈ ಹಿನ್ನೆಲೆಯಲ್ಲೇ ತಮ್ಮದೇ ಆದ ಸ್ವಂತ ವಾಹಿನಿಯನ್ನು ಆರಂಭಿಸುವ ಇಚ್ಚೆಯೊಂದಿಗೆ ಸುಧೀರ್ ಚೌಧರಿ ಝೀ ವಾಹಿನಿಯಿಂದ ನಿರ್ಗಮಿಸಿದ್ದಾರೆ. ಆಂತರಿಕವಾಗಿ ಝೀ ಸಮೂಹದ ಮಾಲೀಕ ಸುಭಾಷ್ ಚಂದ್ರ ಅವರು ಇತ್ತೀಚಿನ ದಿನಗಳಲ್ಲಿ ಸುಧೀರ್ ಚೌಧರಿಯನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದ್ದರು ಎಂಬ ಆರೋಪವೂ ಕೇಳಿಬರುತ್ತಿದೆ. 2021ರಲ್ಲಿ ಎಬಿಪಿ ನ್ಯೂಸ್ ವಾಹಿನಿಯಿಂದ ಬಂದು, ಝೀ ನ್ಯೂಸ್ನ ಕಂಟೆಂಟ್ ಅಧಿಕಾರಿ ಮತ್ತು ಸಂಪಾದಕರಾಗಿ ನಿಯೋಜಿತರಾದ ರಜನೀಶ್ ಅಹುಜಾ ಮತ್ತು ಸುಧೀರ್ ಚೌಧರಿ ನಡುವೆ ಇದ್ದ ಅಧಿಕಾರ ಸಂಘರ್ಷವೂ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.
ಇತ್ತೀಚಿನ ರಾಜ್ಯಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುಭಾಷ್ ಚಂದ್ರ ಸೋಲು ಅನುಭವಿಸಿದ ನಂತರ, ಝೀ ನ್ಯೂಸ್ ಕೆಲವು ಸಂದರ್ಭಗಳಲ್ಲಿ ತಟಸ್ಥ ನೀತಿಯನ್ನೂ ಅನುಸರಿಸಲಾರಂಭಿಸಿತ್ತು. ಅಸ್ಸಾಂ ಕುರಿತು ಪ್ರಸಾರವಾದ ಒಂದು ಷೋನಲ್ಲಿ ಇದು ಸ್ಪಷ್ಟವಾಗಿದ್ದು, ಈ ಬೆಳವಣಿಗೆಗಳಿಗೆ ಸುಧೀರ್ ಚೌಧರಿ ಸಮ್ಮತಿ ಇರಲಿಲ್ಲ ಎಂದೂ ಹೇಳಲಾಗುತ್ತಿದೆ. ಮಾಧ್ಯಮ ಮಾರುಕಟ್ಟೆಯಲ್ಲಿ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿರುವ ಸುಧೀರ್ ಚೌಧರಿ ಝೀ ವಾಹಿನಿಯ ಇತ್ತೀಚಿನ ತಟಸ್ಥ ನೀತಿಯಿಂದ ಅಸಮಾಧಾನಗೊಂಡಿದ್ದರೆಂದೂ ಹೇಳಲಾಗುತ್ತಿದೆ.
ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಸ್ಪರ್ಧಿಸಿ, ಸೋಲು ಅನುಭವಿಸಿದ ನಂತರ ಝೀ ನ್ಯೂಸ್ ಮಾಲೀಕ ಸುಭಾಷ್ ಚಂದ್ರ ತಮ್ಮ ಸಂಸ್ಥೆಯ ಕೆಲವು ಸಿಬ್ಬಂದಿಯ ವಿರುದ್ಧ ಅಸಮಾಧಾನಗೊಂಡಿದ್ದು, ಇದರ ಪರಿಣಾಮವೇ ಸುಧೀರ್ ಚೌಧರಿ ಸಹ ನಿರ್ಗಮಿಸಿದ್ದಾರೆ ಎಂದು ನ್ಯೂಸ್ ಲಾಂಡ್ರಿ ಸುದ್ದಿವಾಹಿನಿ ಹೇಳಿದೆ. ಇದೇ ಸಂದರ್ಭದಲ್ಲಿ ಸುಧೀರ್ ಚೌಧರಿ ಬಹುಮಟ್ಟಿಗೆ ಝೀ ನ್ಯೂಸ್ ವಾಹಿನಿಯ ಮುಖವಾಣಿಯಂತಾಗಿದ್ದುದು ಸುಭಾಷ್ ಚಂದ್ರ ಅವರ ಅಸಹನೆಗೆ ಕಾರಣವಾಗಿರಬಹುದು.
ಈ ಆಂತರಿಕ ಬಿಕ್ಕಟ್ಟುಗಳ ಹೊರತಾಗಿಯೂ, ಭಾರತದ ಪ್ರಸ್ತುತ ಸಂದರ್ಭದಲ್ಲಿ ಆಡಳಿತಾರೂಢ ಪಕ್ಷಗಳಿಗೆ ಮತ್ತು ಕಾರ್ಪೋರೇಟ್ ಮಾರುಕಟ್ಟೆಗೆ ತನ್ನದೇ ಆದ ಮಾಧ್ಯಮ ಮುಖವಾಣಿಗಳ ಅವಶ್ಯಕತೆ ಹೆಚ್ಚಾಗಿದೆ. ಸರ್ಕಾರದ ಪರ ವಕಾಲತ್ತು ವಹಿಸುವ ಮತ್ತು ಸರ್ಕಾರದ ನೀತಿಗಳನ್ನು ಸಮರ್ಥಿಸುತ್ತಲೇ ಸಾರ್ವಜನಿಕರ ನಡುವೆ ಒಂದು ಸಕಾರಾತ್ಮಕ ಅಭಿಪ್ರಾಯವನ್ನು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು, ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿರುವುದು ಗುಟ್ಟಿನ ಮಾತೇನಲ್ಲ. ಪ್ರಜಾತಂತ್ರ ವ್ಯವಸ್ಥೆಯ ಒಂದು ಪ್ರಮುಖ ಅಂಗವಾಗಿ ಸಾರ್ವಜನಿಕರ ನಡುವೆ ಸದಾ ಜಾಗೃತಾವಸ್ಥೆಯಲ್ಲಿರುವ ಒಂದು ಸಂಸ್ಥೆಯಾಗಿ ಮಾಧ್ಯಮವೂ ಮುಖ್ಯವಾಗುತ್ತದೆ.
ಆಡಳಿತಾರೂಢ ಪಕ್ಷಗಳು ಈ ಮಾಧ್ಯಮಗಳ ಮೂಲಕ, ವಾಹಿನಿಗಳ ಮೂಲಕ ತಮ್ಮದೇ ಆದ ಪ್ರಭಾವಿ ವಲಯವನ್ನು ಸೃಷ್ಟಿಸಿಕೊಳ್ಳಲು ಸದಾ ಹಾತೊರೆಯುತ್ತಿರುತ್ತವೆ. ಮುದ್ರಣ ಮಾಧ್ಯಮಗಳೇ ಪ್ರಧಾನವಾಗಿದ್ದ ಸಂದರ್ಭದಲ್ಲೂ ಇದನ್ನು ಕಾಣಬಹುದಿತ್ತು. ವಿದ್ಯುನ್ಮಾನ ಮಾಧ್ಯಮಗಳು ದೇಶದ ಮೂಲೆ ಮೂಲೆಗೂ, ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪುವ ಸಾಮರ್ಥ್ಯ ಹೊಂದಿರುವುದರಿಂದ ಆಡಳಿತಾರೂಢ ಪಕ್ಷಗಳು, ಮಾಧ್ಯಮಗಳನ್ನು ತಮ್ಮ ಆಡಳಿತ ನೀತಿಗಳ ವಾಹಕಗಳಾಗಿ ಬಳಸಿಕೊಳ್ಳುತ್ತವೆ. ಹಿಂದಿನ ಕಾಂಗ್ರೆಸ್ ಸರ್ಕಾರಗಳೂ ಇದನ್ನು ಮಾಡುತ್ತಲೇ ಬಂದಿವೆ. ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿದೆ.
ಇದರೊಟ್ಟಿಗೇ ನವ ಉದಾರವಾದ ಮತ್ತು ಜಾಗತೀಕರಣದ ಆರ್ಥಿಕ ನೀತಿಗಳು ದೇಶದಲ್ಲಿ ಸೃಷ್ಟಿಸುತ್ತಿರುವ ಜನಾಕ್ರೋಶ ಮತ್ತು ಜನಸಾಮಾನ್ಯರ ನಡುವೆ ಸೃಷ್ಟಿಯಾಗುತ್ತಿರುವ ಹತಾಶೆಯನ್ನು ನಿವಾರಿಸುವ ನಿಟ್ಟಿನಲ್ಲಿ, ಆಡಳಿತ ನೀತಿಗಳ ಪರವಾದ ಸಾರ್ವಜನಿಕ ಅಭಿಪ್ರಾಯವನ್ನು ಉತ್ಪಾದಿಸುವಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಪ್ರಧಾನ ಪಾತ್ರ ವಹಿಸುತ್ತವೆ. ಟಿವಿ ವಾಹಿನಿಗಳಲ್ಲಿ ನಡೆಯುವ ಏಕಮುಖಿ ಚರ್ಚೆಗಳು ಈ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಂಡುಬರುತ್ತವೆ. ಹಾಗಾಗಿ ಮಾರುಕಟ್ಟೆ ವ್ಯವಸ್ಥೆ ಮತ್ತು ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳಿಗೆ ವಿದ್ಯುನ್ಮಾನ ಮಾಧ್ಯಮಗಳು ಒಂದು ಪ್ರಬಲ ವೇದಿಕೆಗಳೂ ಆಗುತ್ತವೆ. ಡಿಜಿಟಲ್ ಯುಗದಲ್ಲಿ ದೇಶದ ಅರ್ಥವ್ಯವಸ್ಥೆ ಹೆಚ್ಚು ಹೆಚ್ಚು ಕಾರ್ಪೋರೇಟ್ ಮಾರುಕಟ್ಟೆ ಕೇಂದ್ರಿತವಾಗುತ್ತಿರುವುದರಿಂದ ಆಳುವ ವರ್ಗಗಳಿಗೂ ಈ ವೇದಿಕೆಗಳು ಅಪ್ಯಾಯಮಾನವಾಗಿ ಕಾಣುತ್ತವೆ.
ಸುಧೀರ್ ಚೌಧರಿ ಬಹುಶಃ ಇಂತಹುದೇ ಒಂದು ಹೊಸ ವೇದಿಕೆಯನ್ನು ದೇಶದ ಜನತೆಗೆ ಸಮರ್ಪಿಸಲಿದ್ದಾರೆ. ವಸ್ತುನಿಷ್ಠ ವರದಿಗಾರಿಕೆ , ಜನಪರ ದನಿಯನ್ನು ಬಿಂಬಿಸುವ ಧೋರಣೆ ಮತ್ತು ಜನಸಮುದಾಯಗಳ ನಿತ್ಯ ಬದುಕಿನ ಬವಣೆಗಳನ್ನು ಬಿಂಬಿಸುವ ಜನೋಪಯೋಗಿ ವಿಧಾನಗಳಿಗಿಂತಲೂ ಮಿಗಿಲಾಗಿ, ಆಳುವ ವರ್ಗಗಳ ಆಡಳಿತ ನೀತಿಗಳನ್ನು ಜನರ ನಡುವೆ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಈ ವಾಹಿನಿಗಳು ಕಾರ್ಯನಿರ್ವಹಿಸುತ್ತವೆ. ತಮ್ಮ ಕೂಗುಮಾರಿ ಧೋರಣೆಗೆ ಖ್ಯಾತಿ ಪಡೆದಿರುವ ಸುಧೀರ್ ಚೌಧರಿ ಬಹುಶಃ ತಮ್ಮ ಭವಿಷ್ಯದ ಯೋಜನೆಯಲ್ಲಿ ಯಶಸ್ಸುಗಳಿಸಲೂ ಇದೇ ಧೋರಣೆ ನೆರವಾಗುತ್ತದೆ.
ಕಾರ್ಪೋರೇಟ್ ಬಂಡವಾಳ ಸ್ನೇಹಿ ಸರ್ಕಾರ ಮತ್ತು ಮಾರುಕಟ್ಟೆ ಸ್ನೇಹಿ ಮಾಧ್ಯಮ ಜಂಟಿಯಾಗಿ ನವ ಉದಾರವಾದವನ್ನು ತಳಮಟ್ಟದವರೆಗೂ ಪರಿಣಾಮಕಾರಿಯಾಗಿ ವಿಸ್ತರಿಸಲು ನೆರವಾಗುವುದನ್ನು ಈ ಸಂದರ್ಭದಲ್ಲಿ ಗಮನಿಸಬೇಕಾಗುತ್ತದೆ. ಬಹುಶಃ ಸುಧೀರ್ ಚೌಧರಿ ಆರಂಭಿಸಲಿರುವ ಹೊಸ ವಾಹಿನಿ ಈ ಸಾಲಿಗೆ ಸೇರ್ಪಡೆಯಾಗಲಿರುವ ಮತ್ತೊಂದು ವೇದಿಕೆಯಾಗಲಿದೆ. ಸುಧೀರ್ ಚೌಧರಿ ಸ್ವತಃ ಕಾರ್ಪೋರೇಟ್ ರೂಪದಲ್ಲಿ ಹೊರಹೊಮ್ಮಲಿದ್ದಾರೋ ಅಥವಾ ಮತ್ತೊಂದು ಉದ್ದಿಮೆಯ ಭಾಗವಾಗಿ ತಮ್ಮ ವಾಹಿನಿಯ ಸಾರಥ್ಯ ವಹಿಸುವರೋ ಕಾದುನೋಡಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ8 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ9 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ10 hours agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ9 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !








