Connect with us

ದಿನದ ಸುದ್ದಿ

‘ಧರ್ಮಕ್ಕಾಗಿ ಕೊಲ್ಲು’ ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ‌ : ಸಿದ್ದರಾಮಯ್ಯ ಆತಂಕ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಪ್ರೀತಿಯ ಯುವ ಬಂಧುಗಳೆ, ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, ಕೆಲವೊಮ್ಮೆ ಕಾರಣಗಳೆ ಇಲ್ಲದೆ (Murders) ಹತ್ಯೆಗೀಡಾಗುತ್ತಿರುವುದನ್ನು ಕನ್ನಡ ನಾಡಿನ ಆತ್ಮಸಾಕ್ಷಿ ಸಹಿಸಬಾರದು. ದುಡಿಯುವ ಜಾತಿ, ಪಂಗಡ, ಧರ್ಮಗಳಿಗೆ ಸೇರಿದ ಮಕ್ಕಳು ವಿನಾ ಕಾರಣ ಹತ್ಯೆಯಾಗುತ್ತಿರುವುದನ್ನು ಯಾವ ನಾಗರಿಕ ಸಮಾಜವೂ ಸಹಿಸಲಾಗದು. ಸಹಿಸಬಾರದು. ಶಾಂತಿ, ಸೌಹಾರ್ದತೆಗೆ ಹೆಸರಾದ ಕರ್ನಾಟಕವನ್ನು ವಿನಾ ಕಾರಣ ಅಶಾಂತಿಯ ಕಡಲಲ್ಲಿ ಮುಳುಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah) ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ (Social media) ಅಭಿಪ್ರಾಯ ಹಂಚಿಕೊಂಡಿರುವ ಅವರು, ನಾಡಿನ ಆತ್ಮಸಾಕ್ಷಿಯಂತಿದ್ದ ಪೂರ್ಣಚಂದ್ರ ತೇಜಸ್ವಿಯವರು ಒಮ್ಮೆ ‘ಕೊಂದು ಉಳಿಸಿಕೊಳ್ಳುವ ಧರ್ಮವಿದ್ದರೆ ಅದನ್ನು ಧರ್ಮವೆನ್ನಲಾಗುತ್ತದೆಯೇ’ ಎಂದು ಪ್ರಶ್ನಿಸಿದ್ದರು. ಬಸವಣ್ಣನವರು ‘ಕೊಂದವರುಳಿದರೆ ಕೂಡಲ ಸಂಗಮದೇವಾ’ ಎಂದು ಆರ್ತವಾಗಿ ಕೇಳಿದ್ದರು. ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ ಎಂಬ ಮಾತುಗಳನ್ನು ಗುರು ಹಿರಿಯರು ಹೇಳುತ್ತಲೇ ಬಂದಿದ್ದಾರೆ.

ಧರ್ಮವನ್ನು ನೀನು ರಕ್ಷಿಸಿದರೆ ಅದೆ ಧರ್ಮವು ನಿನ್ನನ್ನು ರಕ್ಷಿಸುತ್ತದೆ ಎಂಬ ಮಹಾಭಾರತದ ಮಾತುಗಳನ್ನು ಕೆಲವು ಮತಾಂಧರು ಹಾಗೂ ನಿರ್ಧಿಷ್ಟ ಹಿತಾಸಕ್ತಿಯುಳ್ಳ ಜನರು ಅದರ ಅರ್ಥವನ್ನೆ ಕುಗ್ಗಿಸಿದ್ದಾರೆ. ದಯೆ, ಕರುಣೆ, ಅಸಹಾಯಕರ ರಕ್ಷಣೆ ಮುಂತಾದ ಉದಾತ್ತವಾದ ವಿಶ್ವ ಆದರ್ಶದ ಮಾತುಗಳನ್ನು ತಿರುಚಿ ಧರ್ಮಕ್ಕಾಗಿ ಕೊಲ್ಲು ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ.

ಇಸ್ಲಾಮಿನ ಉದಾತ್ತ ತತ್ವಗಳನ್ನು ಮತ್ತು ಶಾಂತಿ, ಸತ್ಯಗಳನ್ನು ಮುಂದು ಮಾಡುವ ಬದಲು ಅಪವ್ಯಾಖ್ಯಾನ ಮಾಡುವ ದುಷ್ಟರಿಂದಾಗಿ ಮುಸ್ಲಿಂ ಬಡ ಯುವಕರ ಮೆದುಳೂ ಹಾಳಾಗುತ್ತಿದೆ. ಹಿಂದುವಿನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಮುಸ್ಲಿಮನನ್ನು ಕೊಲ್ಲು, ಮುಸ್ಲಿಮನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಹಿಂದುವನ್ನು ಕೊಲ್ಲು ಎಂಬ ಕ್ರೌರ್ಯವನ್ನು ಈ ಮಕ್ಕಳ ತಲೆಗೆ ತುಂಬಿದವರು ಯಾರು? ಅಂಥ ಕ್ರೌರ್ಯವನ್ನು ವ್ಯವಸ್ಥಿತವಾಗಿ ತುಂಬಿದವರನ್ನು ಅಪರಾಧಿಗಳನ್ನಾಗಿ ಮಾಡುವ ಕಾನೂನಿನ ಅವಶ್ಯಕತೆ ಎಲ್ಲಕ್ಕಿಂತ ಹೆಚ್ಚಾಗಿದೆ.

ಇದನ್ನೂ ಓದಿ | ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ : ಸಿದ್ದರಾಮಯ್ಯ

ದುಷ್ಟರ ತಾಳಕ್ಕೆ ತಕ್ಕಂತೆ ಈ ಬೇಜವಾಬ್ಧಾರಿ ಸರ್ಕಾರವೂ ಕುಣಿಯುತ್ತಿದೆ ಅಥವಾ ಸರ್ಕಾರದ ಕ್ರೂರವಾದ, ಪಕ್ಷಪಾತಿಯಾದ ಕ್ರೂರ ದೊರೆ ಹಮ್ಮುರಾಬಿ ಕಾಲದ ನಿಲುವುಗಳೆ ಅಮಾಯಕ ಮಕ್ಕಳ ಕೊಲೆಗಳಿಗೆ ಕಾರಣವಾಗುತ್ತಿವೆ ಎಂಬ ಅನುಮಾನ ಕೂಡ ಬರುತ್ತಿದೆ. ಬ್ಯಾಬಿಲೋನಿಯಾದಲ್ಲಿ ಸುಮಾರು 3800 ವರ್ಷಗಳ ಹಿಂದೆ ಹಮ್ಮುರಾಬಿ ಎಂಬ ರಾಜನಿದ್ದ, ಆತ ಕಾನೂನೊಂದನ್ನು ಜಾರಿಗೆ ತಂದಿದ್ದ. ಯಾರಾದರೂ ಇನ್ನೊಬ್ಬರ ಕಣ್ಣಿಗೆ ಹಾನಿ ಮಾಡಿದರೆ ಹಾನಿ ಮಾಡಿದವನ ಕಣ್ಣುಗಳನ್ನು ಕಿತ್ತು ಹಾಕುವ, ಕೊಲೆ ಮಾಡಿದರೆ ಕೊಲೆ ಮಾಡುವ, ಕೈ ಕಾಲು ಊನವಾದರೆ, ಊನ ಮಾಡಿದವನ ಅಂಗಾಂಗಗಳನ್ನು ಊನ ಮಾಡುವ ಬರ್ಬರ ಕಾನೂನುಗಳನ್ನು ಜಾರಿಗೆ ತಂದಿದ್ದ.

ಹಮ್ಮುರಾಬಿಯನ್ನು ಜಗತ್ತಿನ ಕ್ರೂರ ದೊರೆ ಎನ್ನಲಾಗುತ್ತದೆ. ನಮ್ಮ ರಾಜ್ಯದ ಬೇಜವಾಬ್ಧಾರಿಯುತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕರಾವಳಿಯಲ್ಲಿ ಹೇಳಿದ “ಕ್ರಿಯೆಗೆ ಪ್ರತಿಕ್ರಿಯೆ” ಎಂಬ ಮಾತುಗಳು ಥೇಟ್ ಹಮ್ಮುರಾಬಿಯ ಬರ್ಬರವಾದ, ಅನಾಗರಿಕವಾದ ಕಾನೂನನ್ನೆ ನೆನಪಿಸುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಬೊಮ್ಮಾಯಿಯವರು 21ನೆ ಶತಮಾನದ ಹಮ್ಮುರಾಬಿ ಎಂದು ಕುಖ್ಯಾತವಾಗುತ್ತಾರೆ.

ನಮ್ಮ ಮಹಾಕಾವ್ಯವಾದ ಮಹಾಭಾರತದಲ್ಲಿ ಕೊಲೆಯನ್ನು ಖಂಡಿಸುವ ಮಾತುಗಳು ಅನೇಕ ಕಡೆ ಬರುತ್ತವೆ. ಮಹಾ ಭಾರತದ ಮೂಲ ಆಶಯವು ಭಗವದ್ಗೀತೆ ಹೇಳುವುದಕ್ಕೆ ಸಂಪೂರ್ಣ ಭಿನ್ನವಾದ ಹಾಗೆ ಕಾಣುತ್ತದೆ. ಈ ಮಹಾಕಾವ್ಯದಲ್ಲಿ ಪಾಂಡವರಿಗೆ ಅಧಿಕಾರ ತಪ್ಪಿಸಿದ ಕೌರವರ ಬಗ್ಗೆ ಅಲ್ಲಿನ ಜನರು ಶಾಪ ಹಾಕುತ್ತಾರೆ. ಆದರೆ ಯುದ್ಧ ಮುಗಿಯುತ್ತದೆ. ಎರಡೂ ಕಡೆಯ ಅಸಂಖ್ಯಾತ ಜನ ಮರಣ ಹೊಂದುತ್ತಾರೆ. ನಾಡಿನ ತುಂಬೆಲ್ಲ ವಿಧವೆಯರು, ತಬ್ಬಲಿಗಳಾದ ಮಕ್ಕಳು, ತಬ್ಬಲಿಗಳಾದ ತಂದೆ ತಾಯಿಗಳ ಕಣ್ಣೀರು ಒರೆಸುವುದಕ್ಕೂ ಜನ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ಧರ್ಮರಾಯನ ನೇತೃತ್ವದಲ್ಲಿ ಪಾಂಡವರು ಊರೊಳಗೆ ಪ್ರವೇಶಿಸುತ್ತಾರೆ. ಆಗ ಊರ ಜನ ಪಾಂಡವರನ್ನು ಅತ್ಯಂತ ಕಠಿಣ ಭಾಷೆಯಲ್ಲಿ ನಿಂದಿಸುತ್ತಾರೆ. ಅಧಿಕಾರಕ್ಕಾಗಿ ತಂದೆ ಸಮಾನರನ್ನು, ಗುರುಗಳನ್ನು, ಸೋದರರನ್ನು, ಬಂಧುಗಳನ್ನು, ಅಮಾಯಕರನ್ನು ಕೊಂದ ಕ್ರೂರ ಪಾಂಡವರೆ, ನಿಮ್ಮ ಅಧಿಕಾರ ಜನರ ಸಮಾಧಿಗಳ ಮೇಲಷ್ಟೆ ಎಂದು ಶಾಪ ಹಾಕುತ್ತಾರೆ. ಮಹಾಕವಿ ವ್ಯಾಸಮುನಿಗಳು ಕೊಲೆಗೆ ಕೊಲೆ ಎಂಬ, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಅನಾಗರಿಕವಾದ, ಬರ್ಬರವಾದ ತತ್ವವನ್ನು ಹೇಸಿಗೆಯೆಂಬಂತೆ ವ್ಯಾಖ್ಯಾನಿಸುತ್ತಾರೆ. ಹಾಗಾಗಿ ಮಹಾಭಾರತ ಕಾವ್ಯ ಜನರ ಕಾವ್ಯವಾಗಿದೆ.

ಕರಾವಳಿಯಲ್ಲಿ ಅಮಾಯಕ ಯುವಕರು ವಿನಾಕಾರಣ ದುರಂತ ಸಾವನ್ನಪ್ಪುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ದುಡಿಯುವ ಸಮುದಾಯಗಳು ಅತಿ ಜರೂರಾಗಿ ಜಾಗೃತಗೊಳ್ಳಬೇಕು. ಕರಾವಳಿಯ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶೇ.99 ರಷ್ಟು ಅತ್ಯಂತ ಬಡ ಹುಡುಗರು ಹಾಗೂ ಎರಡೆ ಸಮುದಾಯಗಳವರು. ಕೊಲೆಯಾಗುತ್ತಿರುವ ಎರಡೂ ಕಡೆಯ ಹುಡುಗರು ದುಡಿದು, ಕೂಲಿ ಮಾಡಿ ಬದುಕುತ್ತಿರುವವರು. ಈ ಎರಡೂ ಕಡೆಯ ಹುಡುಗರ ಮೆದುಳಿಗೆ ವಿಷ ಹಾಕುತ್ತಿರುವವರು ಮಕ್ಕಳು ಮಾತ್ರ ಬೆಂಗಳೂರು, ಮುಂಬೈ ನಗರಗಳಲ್ಲಿ ಹಾಗೂ ಕೊಲ್ಲಿ ಯುರೋಪು, ಅಮೆರಿಕ ಮುಂತಾದ ದೇಶಗಳಲ್ಲಿ ಲಕ್ಷ, ಕೋಟಿಗಳ ಹೆಸರಲ್ಲಿ ಸಂಬಳ ದುಡಿಯುತ್ತಾ ವಾರದ ಕೊನೆಯಲ್ಲಿ ಲಕ್ಷಾಂತರ ಖರ್ಚು ಮಾಡಿ ಪಾರ್ಟಿ ಮಾಡುತ್ತಾ ಮೋಜು ಮಾಡುತ್ತಿದ್ದಾರೆ. ಜೊತೆಗೆ ಬಹುಪಾಲು ಜನ ಸೋಷಿಯಲ್ ಮೀಡಿಯಾಗಳಲ್ಲಿ ಉಚಿತವಾಗಿ ಧರ್ಮ ಉಳಿಸುವ ಕುರಿತು ಸಲಹೆಗಳನ್ನು ನೀಡುವ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಬಡವರ ಮಕ್ಕಳನ್ನು ಬೆಂಕಿಗೆ, ಜೈಲಿಗೆ ತಳ್ಳಿ ತಮ್ಮ ಮಕ್ಕಳ ಏಳಿಗೆಗೆ ಸ್ಪರ್ಧೆ ಬರದ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಈ ಕುತಂತ್ರವನ್ನು ದುಡಿದು ಬದುಕುವ ಎಲ್ಲ ಸಮುದಾಯಗಳ ಯುವಕರು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಶಿಕ್ಷಣ, ಒಳ್ಳೆಯ ಉದ್ಯೋಗ, ಉದಾತ್ತವಾದ ಆಲೋಚನೆ, ಶಾಂತಿ, ಸಹಬಾಳ್ವೆಗಳು ಮಾತ್ರ ಯುವಜನರನ್ನು ಏಳಿಗೆಯತ್ತ ಕೊಂಡೊಯ್ಯಲು ಸಾಧ್ಯ. ಕರಾವಳಿಯ ಯುವಜನತೆಗೆ ಇದೆಲ್ಲವನ್ನೂ ವ್ಯವಸ್ಥಿತವಾಗಿ ತಪ್ಪಿಸಲಾಗುತ್ತಿದೆ.

ಕರಾವಳಿಯ ಯುವಜನತೆಯಲ್ಲಿ ಕೈ ಮುಗಿದು ವಿನಂತಿಸುತ್ತೇನೆ. ದಯಮಾಡಿ ಸಾಕು ಮಾಡಿ. ಧರ್ಮ, ಕೋಮು ದ್ವೇಷವನ್ನು ದೂರ ಮಾಡಿ. 30 ವರ್ಷಗಳ ಹಿಂದಿದ್ದ ಕರಾವಳಿಯನ್ನು ಮತ್ತೆ ನಿರ್ಮಾಣ ಮಾಡಿ. ವೃದ್ಧಾಪ್ಯದಲ್ಲಿ ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿಗಳನ್ನು, ಎಳೆ ವಯಸ್ಸಿನಲ್ಲಿ ಅಣ್ಣ ತಮ್ಮಂದಿರನ್ನು, ಗಂಡಂದಿರನ್ನು ಕಳೆದುಕೊಂಡವರ ಹೃದಯದ ಬೆಂಕಿಯನ್ನೊಮ್ಮೆ ಅರ್ಥ ಮಾಡಿಕೊಳ್ಳಿ. ಅನಾಥರಾದ ಎಳೆಯ ಮಕ್ಕಳಿಗೆ ಎಷ್ಟು ಹಣ ಕೊಟ್ಟರೆ ತಾನೆ ಅಪ್ಪಂದಿರನ್ನು ತಂದುಕೊಡಲು ಸಾಧ್ಯವೆ? ಬದುಕಿದ್ದು ಶಾಶ್ವತ ಜೈಲಿಗೆ ಹೋದವರ ಕುಟುಂಬಗಳ ಕಷ್ಟ ದುಃಖಗಳನ್ನು ಒಮ್ಮೆ ನೆನೆಯಿರಿ, ವಕೀಲರುಗಳಿಗೆ ಫೀಸು ಕೊಡಲು ಮನೆ ಮಠ ಮಾರಿ ಬೀದಿಗೆ ಬಿದ್ದವರ ಸಂಕಷ್ಟಗಳು ನಿಮ್ಮ ಕಣ್ಮುಂದೆ ಬರಲಿ. ನಿಮ್ಮದೆ ಸ್ಕೂಲಿನಲ್ಲಿ, ನಿಮ್ಮ ಜೊತೆಯೆ ಕಲಿತ ಗೆಳೆಯ ಗೆಳತಿಯರು ಉತ್ತಮ ಉದ್ಯೋಗ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಳ್ಳುತ್ತಿರುವಾಗ, ನಿಮ್ಮ ಬದುಕನ್ನು ಯಾರು ಕಿತ್ತುಕೊಂಡರು ಎಂದು ಯೋಚಿಸಿ. ದೇವರಂತೂ ಖಂಡಿತ ನಿಮ್ಮ ಬದುಕನ್ನು ಹಾಳು ಮಾಡುವುದಿಲ್ಲ. ನೀವೆ, ನೀವೆ ಕೈಯಾರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ.

ಕರಾವಳಿಯಲ್ಲಿ ಮಾದಕದ್ರವ್ಯಗಳ ಮಾಫಿಯಾ ಅಟ್ಟ ಹಾಸ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೋದಿ ಸರ್ಕಾರ ಅದಾನಿಗಳಿಗೆ ಎಲ್ಲ ಬಂದರುಗಳನ್ನು ಬಿಟ್ಟುಕೊಡುತ್ತಿದೆ. ಗುಜರಾತಿನ ಮುಂದ್ರಾ ಬಂದರಿನಲ್ಲಿ ಒಂದೆ ದಿನ 21000 ಕೋಟಿ ಮೌಲ್ಯದ ಡ್ರಗ್ಸ್ ಸೀಝ್ ಆಯಿತು. ಆದರೆ ದೇಶದ ಒಳಗೆ ಲಕ್ಷಾಂತರ ಕೋಟಿ ಮೌಲ್ಯದ ಮಾದಕ ಪದಾರ್ಥಗಳು ಬಂದಿವೆ ಎಂದು ಹೇಳಲಾಗುತ್ತಿದೆ. ಈ ಮಾದಕ ಪದಾರ್ಥಗಳು ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ಕೆಟ್ಟ ಸರ್ಕಾರದಿಂದ ಯವ ನ್ಯಾಯವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ಕಾರದ ವರ್ತನೆ ಇನ್ನಷ್ಟು ಹಿಂಸೆ ಸೃಷ್ಟಿಸುವಂತೆ ಇದೆಯೆ ಹೊರತು, ಶಾಂತಿ ಸ್ಥಾಪಿಸುವ ಕಡೆಗೆ ಇಲ್ಲ. ಇನ್ನಷ್ಟು ಅಮಾಯಕರ ಹೆಣ ಬಿದ್ದರೆ ಮಾತ್ರ ತಮ್ಮ ರಾಜಕೀಯ ನಡೆಯುತ್ತದೆ ಎಂದು ಈ ದುಷ್ಟರು ಭಾವಿಸಿದ್ದಾರೆ. 2018 ರ ಬಿಜೆಪಿಯ ಪ್ರಣಾಳಿಕೆಯಲ್ಲಿ ಎನ್ ಐ ಎ ಸ್ಥಾಪಿಸುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ಈಗ ಅದನ್ನು ಮರೆತವರಂತೆ ವರ್ತಿಸುತ್ತಿದ್ದಾರೆ. ಇಷ್ಟೊಂದು ದುರ್ಬಲವಾದ ಹಾಗೂ ಕ್ರೂರ ಮನಸ್ಥಿತಿಯ ಮುಖ್ಯಮಂತ್ರಿ, ಬೇಜವಾಬ್ಧಾರಿ ನಡವಳಿಕೆಯ ಗೃಹಮಂತ್ರಿಯನ್ನು ರಾಜ್ಯ ಕಂಡಿರಲಿಲ್ಲ.

ಆದ್ದರಿಂದ ಮತ್ತೊಮ್ಮೆ ತಮ್ಮನ್ನು ವಿನಂತಿಸುತ್ತೇನೆ. ಕೆಟ್ಟ ಕಾರಣಕ್ಕಾಗಿ ಕರಾವಳಿಯು ರಾಜ್ಯಕ್ಕೆ ಮಾದರಿಯಾಗುವುದು ಬೇಡ. 30 ವರ್ಷಗಳ ಹಿಂದೆ ಕರಾವಳಿಯನ್ನು ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದರಲ್ಲ, ಅಂಥ ಕರಾವಳಿಯನ್ನು ದಯಮಾಡಿ ನಿರ್ಮಾಣ ಮಾಡಿ. ದ್ವೇಷ ಹುಟ್ಟಿಸುವ, ಕೊಲೆಗೆ, ಹಿಂಸೆಗೆ ಪ್ರೇರೇಪಿಸುವ ಎಲ್ಲ ರಾಕ್ಷಸರನ್ನು ದೂರ ಮಾಡಿ ಇದರ ವಿರುದ್ಧ ಧೈರ್ಯವಾಗಿ ನಿಲ್ಲಿ, ಸೌಹಾರ್ದ ಸಭೆಗಳನ್ನು ಪ್ರಾರಂಭಿಸಿ, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದ ಸದಸ್ಯರುಗಳೆಲ್ಲರೂ ಧರ್ಮಾತೀತವಾಗಿ ಒಂದಾಗಿ ವೇದಿಕೆ ರಚಿಸಿಕೊಂಡು ಶಾಂತಿ ಸೌಹಾರ್ದದ ಕರಾವಳಿ ನಿರ್ಮಿಸಲು ಮುಂದಾಗಿ, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಮುಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಭೆಗಳನ್ನು ಅಧಿಕೃತಗೊಳಿಸುತ್ತೇವೆ ಎಂದು ತಿಳಿಸಬಯಸುತ್ತೇನೆ. ಈಗ ನಾಡಿನಲ್ಲಿ ಅತ್ಯಂತ ತುರ್ತಾಗಿ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಾಗಿದೆ ಅದನ್ನು ಸರ್ವರೂ ಸೇರಿ ಈಡೇರಿಸಬೇಕೆಂದು ತಮ್ಮನ್ನು ಕೈ ಮುಗಿದು ವಿನಂತಿಸುತ್ತೇನೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ

Published

on

ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ ಗ್ರಾಮದ ಭರತ್ ಕುಮಾರ್ ಅವರು ಅಣಬೆಯ ಹೊಸ ಮೂರು ಶೀಲಿಂದ್ರ ಜಾತಿಗಳನ್ನು ಪತ್ತೆ ಹಚ್ಚಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ಕರ್ನಾಟಕದ ಪಶ್ಚಿಮ ಘಟ್ಟಗಳ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಅರಣ್ಯ ಪ್ರದೇಶಗಳಲ್ಲಿ ನಡೆಸಿದ ಸಮಗ್ರ ಸಂಶೋಧನೆಯ ಫಲವಾಗಿ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಪಿಎಚ್‌ಡಿ ಸಂಶೋಧಕರಾದ ಭರತ್ ಕುಮಾರ್ ಎಸ್ ಅವರು ಮೂರು ಹೊಸ ಶಿಲೀಂಧ್ರ (ಮಶ್ರೂಮ್) ಜಾತಿಗಳನ್ನು ಪತ್ತೆಹಚ್ಚಿದ್ದಾರೆ.

ಮರಕುಲುಷಣ ಶಿಲೀಂಧ್ರಗಳ ವೈವಿಧ್ಯತೆ, ದಾಖಲೆಗೊಳಿಸುವಿಕೆ ಹಾಗೂ ಜೈವ ನಿಯಂತ್ರಣ ಸಾಮರ್ಥ್ಯದ ಅಧ್ಯಯನದ ಅಂಗವಾಗಿ ಈ ಸಂಶೋಧನೆ ಕೈಗೊಳ್ಳಲಾಗಿತ್ತು.
ಈ ಅಧ್ಯಯನವನ್ನು ಕ್ರಮಬದ್ಧ ವೈಜ್ಞಾನಿಕ ವಿಧಾನದಲ್ಲಿ ನಡೆಸಲಾಗಿದ್ದು, ಕ್ಷೇತ್ರ ಸಂಗ್ರಹಣೆಯ ವೇಳೆ ತಾಜಾ ಹಾಗೂ ಪರಿಪಕ್ವ ಫಲಧಾರಕ ದೇಹಗಳನ್ನು ಅವುಗಳ ಸ್ವಾಭಾವಿಕ ವಾಸಸ್ಥಳಗಳಿಂದ ಸಂಗ್ರಹಿಸಿ, ಸ್ಥಳದ ವಿವರಗಳು (GPS, ಎತ್ತರ), ಸಬ್ಸ್ಟ್ರೇಟ್ (ಮಣ್ಣು, ಮರ, ಆತಿಥೇಯ ಸಸ್ಯ), ದಿನಾಂಕ ಮತ್ತು ಪರಿಸರ ಮಾಹಿತಿ ದಾಖಲಿಸಲಾಗಿದೆ.

ಡಾ. ಎನ್. ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮತ್ತು ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ ಸಂಸ್ಥೆಯ ಅರಣ್ಯ ಪಥಾಲಜಿ ವಿಭಾಗದ ಹಿರಿಯ ವಿಜ್ಞಾನಿಯಾಗಿರುವ ಡಾ. ಮುತ್ತು ಕುಮಾರ್ ಅವರ ಸಹಯೋಗದಲ್ಲಿ ನಡೆದ ಈ ಸಂಶೋಧನೆಯಲ್ಲಿ Ganoderma swietenium, Fulvifomes ficicola ಹಾಗೂ Lachnocladium sevyakrishnarum ಎಂಬ ಮೂರು ಹೊಸ ಶಿಲೀಂಧ್ರ ಜಾತಿಗಳನ್ನು ಗುರುತಿಸಲಾಗಿದೆ.

ಮೊದಲ ಎರಡು ಜಾತಿಗಳಿಗೆ ಅವುಗಳ ಆತಿಥೇಯ ಮರಗಳಾದ Swietenia mahagoni ಮತ್ತು Ficus religiosa ಆಧಾರದ ಮೇಲೆ ಹೆಸರು ನೀಡಲಾಗಿದ್ದು, ಮೂರನೇ ಜಾತಿಯನ್ನು ಸಂಶೋಧಕರ ತಂದೆಯಾದ ಸೇವ್ಯ ನಾಯ್ಕ ಅವರ ಗೌರವಾರ್ಥವಾಗಿ Lachnocladium sevyakrishnarum ಎಂದು ನಾಮಕರಣ ಮಾಡಲಾಗಿದೆ.

ವರ್ಗೀಕರಣ (Taxonomy) ಮತ್ತು ವಂಶವೃಕ್ಷ (Phylogenetic) ಅಧ್ಯಯನಗಳ ಆಧಾರದ ಮೇಲೆ ಈ ಜಾತಿಗಳನ್ನು ಜಾಗತಿಕ ವಿಜ್ಞಾನ ಸಮುದಾಯಕ್ಕೆ ಪರಿಚಯಿಸಲಾಗಿದ್ದು, ಈ ಸಂಶೋಧನಾ ಫಲಿತಾಂಶಗಳು ಅಂತರರಾಷ್ಟ್ರೀಯ ಮಟ್ಟದ ಪೀರ್-ರಿವ್ಯೂ ಪತ್ರಿಕೆಗಳಾದ Journal of Sustainable Forestry (Taylor & Francis) ಮತ್ತು Indian Phytopathology (Springer Nature)ಗಳಲ್ಲಿ ಪ್ರಕಟವಾಗಿವೆ.

ಪಶ್ಚಿಮ ಘಟ್ಟಗಳು ಜಗತ್ತಿನ ಪ್ರಮುಖ ಜೈವ ವೈವಿಧ್ಯತೆಯ ಹಾಟ್‌ಸ್ಪಾಟ್ ಆಗಿರುವುದರಿಂದ, ಈ ಪತ್ತೆಗಳು ಅಲ್ಲಿ ಇನ್ನೂ ಅನಾವರಣಗೊಳ್ಳದ ಶಿಲೀಂಧ್ರ ವೈವಿಧ್ಯತೆಯನ್ನು ಹೈಲೈಟ್ ಮಾಡುತ್ತವೆ.

ಭರತ್ ಕುಮಾರ್ ಎಸ್ ಅವರು ತಮ್ಮ ಪಿಎಚ್‌ಡಿ ಸಂಶೋಧನಾ ಪಯಣದಲ್ಲಿ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕ ಕ್ಷೇತ್ರ ಕಾರ್ಯ, ಅಪರೂಪದ ಶಿಲೀಂಧ್ರ ಮಾದರಿಗಳ ಸಂಗ್ರಹಣೆ ಹಾಗೂ ಪ್ರಯೋಗಾಲಯದ ಅಣುಮಟ್ಟದ ವಿಶ್ಲೇಷಣೆಗಳ ಮೂಲಕ ಹಲವು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿದ್ದಾರೆ. ಇವರ ಸಂಶೋಧನೆ ಶಿಲೀಂಧ್ರಗಳ ವೈವಿಧ್ಯತೆಯನ್ನು ದಾಖಲಿಸುವುದರೊಂದಿಗೆ, ಅವುಗಳ ಜೈವ ನಿಯಂತ್ರಣ ಸಾಮರ್ಥ್ಯವನ್ನು ಅನ್ವೇಷಿಸಿ ಪರಿಸರ ಸ್ನೇಹಿ ರೋಗ ನಿಯಂತ್ರಣ ವಿಧಾನಗಳಿಗೆ ಹೊಸ ದಾರಿಯನ್ನು ತೆರೆದಿದೆ.

ಇದರ ಜೊತೆಗೆ, ಅವರು ತಮ್ಮ ಸಂಶೋಧನಾ ಲೇಖನಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಮಂಡಿಸಿದ್ದು, 2025ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ “ಯುವ ಸಂಶೋಧನಾ ವಿದ್ವಾಂಸ ಪ್ರಶಸ್ತಿ-2025” ಅನ್ನು ಪಡೆದಿದ್ದಾರೆ.

ಈ ಸಾಧನೆಗೆ ಪ್ರೋತ್ಸಾಹ ನೀಡಿದ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ. ಫಾ. ರೋಷನ್ ಕ್ಯಾಸ್ಟೀಲಾನೊ ಹಾಗೂ ಉಪಕುಲಪತಿಗಳಾದ ರೆವ್. ಡಾ. ಫಾ. ವಿಕ್ಟರ್ ಲೋಬೋ ಎಸ್.ಜೆ ಅವರಿಗೆ, ಜೊತೆಗೆ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನೀಲಂ ಮಿಶ್ರಾ ಅವರಿಗೆ ಸಂಶೋಧಕರು ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಶಿಲೀಂಧ್ರಗಳ ಮಹತ್ವವನ್ನು ಅರ್ಥಮಾಡಿಕೊಳ್ಳಲು ಈ ಪತ್ತೆಗಳು ಸಹಕಾರಿಯಾಗಿದ್ದು, ಭವಿಷ್ಯದ ಸಂಶೋಧನೆಗಳಿಗೆ ಮಹತ್ವದ ದಿಕ್ಕು ನೀಡುವಂತಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending