Connect with us

ದಿನದ ಸುದ್ದಿ

ಸಿದ್ದರಾಮಯ್ಯ ಬುಲೆಟ್ ನಂತಹ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಯಡಿಯೂರಪ್ಪ..? ಏನವು ಪ್ರಶ್ನೆಗಳು..?

Published

on


  • ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಪ್ರಶ್ನೆಗಳ ಸುರಿಮಳೆಗೈಯ್ದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಪ್ರಶ್ನೆಗಳನ್ನು ಅವರು ಹಂಚಿಕೊಂಡಿದ್ದಾರೆ.

ಸುದ್ದಿದಿನ ಡೆಸ್ಕ್ : ಯಡಿಯೂರಪ್ಪನವರು (yeddyurappa) ಇತ್ತೀಚೆಗೆ ಜನಸಂಕಲ್ಪ ಯಾತ್ರೆಯೊಂದರಲ್ಲಿ ಮೋದಿಯವರನ್ನು ( Modi ) ಟೀಕಿಸುವವರ ವಿರುದ್ಧ ಆ ಕ್ಷಣದಲ್ಲಿಯೆ ಪ್ರತಿಭಟಿಸಿ ಎಂದು ಕಾರ್ಯಕರ್ತರಿಗೆ ಆಜ್ಞೆ ಹೊರಡಿಸುವ ಧ್ವನಿಯಲ್ಲಿ ಹೇಳಿದ್ದಾರೆ. ಮಾನ್ಯ ಯಡಿಯೂರಪ್ಪನವರಿಗೆ ಈ ಕೆಳಕಂಡ ಪ್ರಶ್ನೆಗಳನ್ನು ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾದ ನಾನು ಕೇಳಬಯಸುತ್ತೇನೆ.

2014ಕ್ಕೂ ಮೊದಲು ಮನಮೋಹನ್ ಸಿಂಗ್ ಸರ್ಕಾರ ರೈತರ ಎಷ್ಟು ಸಾಲವನ್ನು ಮನ್ನಾ ಮಾಡಿತ್ತು? ಅಂಬಾನಿ, ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಎಷ್ಟು ಸಾಲವನ್ನು ಮನ್ನಾ ಮಾಡಲಾಗಿತ್ತು? ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಯಾರ್ಯಾರ ಎಷ್ಟು ಸಾಲವನ್ನು ಮನ್ನಾ ಮಾಡಿದ್ದಾರೆ?

ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಜನರು ಕಟ್ಟುತ್ತಿದ್ದ ತೆರಿಗೆ ಎಷ್ಟು? ಕಾರ್ಪೊರೇಟ್ ಬಂಡವಾಳಿಗರು ಪಾವತಿಸುತ್ತಿದ್ದ ತೆರಿಗೆ ಎಷ್ಟಿತ್ತು? ಈಗ ಎಷ್ಟಿದೆ? ಜನರ ಮೇಲಿನ ತೆರಿಗೆ ಹೆಚ್ಚಿಸಿ ಅದಾನಿ, ಅಂಬಾನಿ ಮುಂತಾದವರ ಮೇಲಿದ್ದ ತೆರಿಗೆಯನ್ನು ಶೇ.8 ರಷ್ಟು ಇಳಿಸಿದ್ದು ಏಕೆ?

2014 ಕ್ಕೆ ಮೊದಲು ಪೆಟ್ರೋಲ್, ಡೀಸೆಲ್‍ಗಳ ಮೇಲೆ ವಿಧಿಸುತ್ತಿದ್ದ ಸೆಸ್‍ಗಳೆಷ್ಟು? ಮೋದಿಯವರು ವಿಧಿಸುತ್ತಿರುವ ಸೆಸ್‍ಗಳ ಪ್ರಮಾಣವೆಷ್ಟು?
ಇದರಿಂದಾಗಿ ಪೆಟ್ರೋಲ್, ಡೀಸೆಲ್‍ಗಳ ಬೆಲೆ ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ? 2014 ರ ಮೊದಲು 10 ವರ್ಷಗಳ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟಿತ್ತು? 2014 ರಿಂದ ಇದುವರೆಗೆ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟು?

2014 ಕ್ಕೆ ಮೊದಲು ದೇಶದಲ್ಲಿ ನಿರುದ್ಯೋಗದ ಪ್ರಮಾಣ ಎಷ್ಟಿತ್ತು? ಈಗ ಎಷ್ಟಿದೆ?
2014ಕ್ಕೆ ಮೊದಲು ರೈತರ ತಲೆಯ ಮೇಲೆ, ದೇಶದ ಜನರ ತಲೆಯ ಮೇಲೆ ಇದ್ದ ಸಾಲವೆಷ್ಟು? ಈಗ ಎಷ್ಟಿದೆ? ರೈತರ ಹಾಗೂ ಇತರೆ ಜನಸಮುದಾಯಗಳ ಆದಾಯ ಎಷ್ಟಿತ್ತು? ಈಗ ಎಷ್ಟಿದೆ?

2014ಕ್ಕಿಂತ ಮೊದಲು ಮಹಿಳಾ ಕಾರ್ಮಿಕರ ಪ್ರಮಾಣ ಶೇ.32 ಇದ್ದದ್ದು ಈಗ ಶೇ.21 ಕ್ಕೆ ಇಳಿಯಲು ಮೋದಿ ಸರ್ಕಾರದ ಮಹಿಳಾ ವಿರೋಧಿ ನೀತಿಗಳು ಕಾರಣವಲ್ಲವೆ?

2014ಕ್ಕಿಂತ ಮೊದಲು ದೇಶದ ಮೇಲೆ 53 ಲಕ್ಷ ಕೋಟಿ ಇದ್ದದ್ದು, ಈಗ 155 ಲಕ್ಷ ಕೋಟಿಗೆ ಏರಿಸಿ ದೇಶವನ್ನು ದಿವಾಳಿ ಮಾಡಿದ್ದು ಮೋದಿಯವರಲ್ಲವೆ?

2018 ಕ್ಕೆ ಮೊದಲು 2.42 ಲಕ್ಷ ಕೋಟಿ ಇದ್ದ ರಾಜ್ಯದ ಸಾಲವು ಈ ವರ್ಷದ ಕೊನೆಯ ಹೊತ್ತಿಗೆ 5.30 ರಿಂದ 5.40 ಲಕ್ಷ ಕೋಟಿಗಳವರೆಗೆ ಏರಿಕೆಯಾಗಲು ಕಾರಣವೇನು?

2014 ಕ್ಕಿಂತ ಮೊದಲು ಕೇಂದ್ರವು ಕರ್ನಾಟಕದಿಂದ ವಿವಿಧ ಬಾಬತ್ತುಗಳಿಂದ ಸಂಗ್ರಹಿಸುತ್ತಿದ್ದ ತೆರಿಗೆಗಳು, ಸೆಸ್ಸುಗಳು, ಅಡಿಷನಲ್ ಎಕ್ಸೈಜ್ ಡ್ಯೂಟಿಗಳೆಷ್ಟು? ಈಗ ಎಷ್ಟು ಸಂಗ್ರಹಿಸುತ್ತಿದ್ದಾರೆ? ಕರ್ನಾಟಕಕ್ಕೆ ಎಷ್ಟು ಹಂಚಿಕೆ ಮಾಡುತ್ತಿದ್ದಾರೆ? ಕರ್ನಾಟಕದಿಂದ ಪ್ರತಿ ವರ್ಷ 3.5 ಲಕ್ಷ ಕೋಟಿಗಳವರೆಗೆ ದೋಚಿಕೊಂಡು ನಮಗೆ ಕೇವಲ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದನ್ನು ನ್ಯಾಯ ಎನ್ನಬೇಕೆ? ಇದರಿಂದಾಗಿ 2018-19 ಮತ್ತು 2019-20 ಕ್ಕೆ ಹೋಲಿಸಿದರೆ ರಾಜ್ಯವು ಈ ವರ್ಷ ಕನಿಷ್ಟ 60 ಸಾವಿರ ಕೋಟಿ ಕಳೆದುಕೊಳ್ಳುತ್ತಿದೆ.

2014 ಕ್ಕಿಂತ ಮೊದಲು ಕೇಂದ್ರ ಸರ್ಕಾರ ಅಡುಗೆ ಸಿಲಿಂಡರಿನ ಮೇಲೆ ನೀಡುತ್ತಿದ್ದ ಸಬ್ಸಿಡಿಗಳೆಷ್ಟು? ಈಗ ಎಷ್ಟು ಸಬ್ಸಿಡಿಗಳನ್ನು ನೀಡಲಾಗುತ್ತಿದೆ?

1947 ರಿಂದ 2014 ರವರೆಗೆ ಕೇಂದ್ರ ಸರ್ಕಾರವು ಸ್ಥಾಪಿಸಿದ್ದ ಸಾರ್ವಜನಿಕ ವಲಯದ ಕಂಪೆನಿ/ ಸಂಸ್ಥೆ/ಉದ್ದಿಮೆಗಳೆಷ್ಟು? ಹಿಂದಿನವರು ಸ್ಥಾಪಿಸಿದವುಗಳನ್ನು ಖಾಸಗೀಕರಿಸಿದ್ದೆಷ್ಟು?

2014ರ ನಂತರ ಮೋದಿಯವರು ಒಂದು ಕಂಪೆನಿ/ ಸಂಸ್ಥೆಯನ್ನೂ ಸ್ಥಾಪಿಸದೆ ಎಲ್ಲವುಗಳನ್ನೂ ಮಾರಾಟ ಮಾಡುತ್ತಿರುವುದನ್ನು ಒಳ್ಳೆಯ ಆಡಳಿತವೆನ್ನುತ್ತಾರೊ ಅಥವಾ ದಾರಿದ್ರ್ಯಾವಸ್ಥೆ ತಲುಪಿದ ಆಡಳಿತವೆನ್ನುತ್ತಾರೊ ಎಂದು ಯಡಿಯೂರಪ್ಪನವರು ಹೇಳಬೇಕು.

ಸರ್ಕಾರಿ ಸಂಸ್ಥೆಗಳನ್ನು ಮುಚ್ಚುತ್ತಿರುವುದರಿಂದ ದಲಿತರು, ಹಿಂದುಳಿದವರಿಗೆ ಮೀಸಲಾತಿ ಅವಕಾಶಗಳು ಮುಚ್ಚಿ ಹೋಗುತ್ತಿವೆ. ಮೀಸಲಾತಿ ಹೊರಟು ಹೋಗಲಿ ಎಂದು ಭಾವಿಸಿಯೆ ಖಾಸಗೀಕರಣ ಮಾಡುತ್ತಿರುವಂತಿದೆ. ಇದನ್ನು ಮನುವಾದಿ ಸಿದ್ಧಾಂತದ ಮೌನ ಅನುಷ್ಠಾನದ ವಿಧಾನ ಎನ್ನದೆ ಬೇರೆ ದಾರಿ ಇದೆಯೆ?

2014ಕ್ಕೆ ಮೊದಲು ರಾಜ್ಯದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಅನುದಾನದ ಪಾಲೆಷ್ಟು? 2014 ರ ನಂತರ ನೀಡುತ್ತಿರುವ ಪಾಲು ಎಷ್ಟು?

2014 ಕ್ಕೆ ಮೊದಲು ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಸರಾಸರಿ ಜಿಡಿಪಿ ಬೆಳವಣಿಗೆ ಎಷ್ಟು? ಕಳೆದ 8 ವರ್ಷಗಳ ಸರಾಸರಿ ಬೆಳವಣಿಗೆ ಎಷ್ಟು?

2004-05 ರಿಂದ 2013-14 ರವರೆಗೆ ಕೇಂದ್ರ ಸರ್ಕಾರವು ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನೀಡಿದ ಬೆಂಬಲ ಬೆಲೆಗಳ ಪ್ರಮಾಣ ಎಷ್ಟು? 2014 ರಿಂದ 2021-22 ರವರೆಗೆ ನೀಡಿದ ಬೆಂಬಲ ಬೆಲೆಗಳೆಷ್ಟು?

2014 ಕ್ಕಿಂತ ಮೊದಲು ದೇಶದ ವ್ಯಾಪಾರದ ಕೊರತೆ ಎಷ್ಟಿತ್ತು? ಈಗ ಎಷ್ಟಿದೆ? ಮೇಕ್ ಇಂಡಿಯಾ ಎಂದವರು ಯಾರು? ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ದುಪ್ಪಟ್ಟು ಮಾಡಿದ್ದು ಏಕೆ?

2014 ಕ್ಕಿಂತ ಮೊದಲು ರೂಪಾಯಿಯ ಮೌಲ್ಯ ಡಾಲರಿನ ಎದುರು ಸರಾಸರಿ 58 ರೂ ಇದ್ದದ್ದು ಎಷ್ಟಿತ್ತು? ಈಗ 82.5 ರೂಗಳಿಗೆ ಬೀಳಿಸಿದ್ದನ್ನು ಮೋದಿಯವರ ಜಗಮೆಚ್ಚುವ ಕೆಲಸ ಎನ್ನಬೇಕೆ?

2014 ಕ್ಕಿಂತ ಮೊದಲು ಭಾರತ ಹಸಿವು ಮತ್ತು ಬಡತನದ ಸೂಚ್ಯಂಕಗಳಲ್ಲಿ ಯಾವ ಸ್ಥಾನದಲ್ಲಿತ್ತು? ಈಗ ಯಾವ ಸ್ಥಾನದಲ್ಲಿದೆ?

2015 ಕ್ಕಿಂತ ಮೊದಲು ಭಾರತೀಯರ ಸ್ವಾತಂತ್ರ್ಯ ಸೂಚ್ಯಂಕವು 75 ನೇ ಸ್ಥಾನದಲ್ಲಿದ್ದದ್ದು 2020ರ ವೇಳೆಗೆ 111 ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?

2013-2019 ರವರೆಗೆ ಮೋದಿಯವರು ಎಷ್ಟು ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದರು? ಅವುಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ?

ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತದ ಸ್ಥಾನ 2013 ರಲ್ಲಿ 40 ರ‌್ಯಾಂಕ್ ಇದ್ದದ್ದು 2021 ರ ಹೊತ್ತಿಗೆ 43 ಕ್ಕೆ ಸ್ಥಾನಕ್ಕೆ ಕುಸಿಯಲು ಕಾರಣವೇನು?

ವಿಶ್ವ ಸಂಸ್ಥೆಯ ಸಮೀಕ್ಷೆಯಲ್ಲಿ ಭಾರತೀಯರ ಸಂತೋಷದ ಸೂಚ್ಯಂಕವು 2015 ರಲ್ಲಿ 117 ನೇ ಸ್ಥಾನದಲ್ಲಿದ್ದದ್ದು 2021 ರ ಹೊತ್ತಿಗೆ 139 ಸ್ಥಾನಕ್ಕೆ ಕುಸಿದದ್ದು ಯಾಕೆ? ಇದಕ್ಕೆ ಯಾರು ಕಾರಣ?

ಜಾಗತಿಕ ಆರ್ಥಿಕ ಸ್ವಾತಂತ್ರ್ಯದಲ್ಲಿ ಭಾರತದ ಸ್ಥಾನವು 2015 ರಲ್ಲಿ 95 ಸ್ಥಾನದಲ್ಲಿದ್ದದ್ದು 2020 ರ ಹೊತ್ತಿಗೆ 105 ನೇ ಸ್ಥಾನಕ್ಕೆ ಕುಸಿದಿದ್ದು ಯಾಕೆ?

ಟ್ರಾನ್ಸಪೆರೆನ್ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಕರಪ್ಷನ್ ಇಂಡೆಕ್ಸ್‌ನಲ್ಲಿ 2014 ರಲ್ಲಿ 85ನೇ ಸ್ಥಾನದಲ್ಲಿದ್ದ ಭಾರತ 2020 ರ ವೇಳೆಗೆ 86 ನೆ ಸ್ಥಾನಕ್ಕೆ ಕುಸಿಯಲು ಕಾರಣವೇನು? ಇದರ ಹೊಣೆಯನ್ನು ಮೋದಿಯವರೆ ಹೊರಬೇಕಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಜೆಂಡರ್ ಗ್ಯಾಪ್‍ನ ಸೂಚ್ಯಂಕದಲ್ಲಿ 2014 ರಲ್ಲಿ 114 ನೇ ಸ್ಥಾನದಲ್ಲಿದ್ದ ಭಾರತ 2021 ರಲ್ಲಿ ತೀವ್ರ ಕುಸಿತ ಕಾಣಲು ಕಾರಣ ಯಾರು?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಆರ್ಥಿಕ ಸ್ಪರ್ಧಾತ್ಮಕತೆಯಲ್ಲಿ 2017 ರಲ್ಲಿ ಭಾರತವು 40 ನೇ ರ‌್ಯಾಂಕ್ ನಲ್ಲಿದ್ದದ್ದು 2020 ರ ವೇಳೆಗೆ 68 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣವಲ್ಲವೆ?

ಪಾಸ್ ಪೋರ್ಟ್ ಇಂಡೆಕ್ಸ್‍ನಲ್ಲಿ 2013ರಲ್ಲಿ 74ನೇ ಸ್ಥಾನದಲ್ಲಿದ್ದ ಭಾರತವು 2021ರ ವೇಳೆಗೆ 85 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು? ಇದರಿಂದ ಭಾರತೀಯರ ಘನತೆ ಕಡಿಮೆಯಾಗಲು ಮೋದಿಯವರ ಆಡಳಿತ ಕಾರಣವಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಬಂಡವಾಳ ಸೂಚ್ಯಂಕದಲ್ಲಿ 78ನೇ ಸ್ಥಾನದಲ್ಲಿದ್ದ ಭಾರತವು 2017 ರ ವೇಳೆಗೆ 103 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರು ಕಾರಣರಲ್ಲವೆ?

ಬ್ಲೂಮ್‍ಬರ್ಗ್ ಸಮೀಕ್ಷೆಗಳ ಪ್ರಕಾರ ಭಾರತದ ಆರೋಗ್ಯ ಕ್ಷೇತ್ರದ ಸೂಚ್ಯಂಕವು 2015 ರಲ್ಲಿ 103 ನೇ ಸ್ಥಾನದಲ್ಲಿದ್ದದ್ದು 2020 ರ ವೇಳೆಗೆ 120 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು?

ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ 2016 ರಲ್ಲಿ 110 ನೇ ಸ್ಥಾನದಲ್ಲಿದ್ದ ಭಾರತವು 2021 ರ ವೇಳೆಗೆ 120 ನೇ ಸ್ಥಾನಕ್ಕೆ, ಬಾಂಗ್ಲಾ, ನೇಪಾಳ, ಶ್ರೀ ಲಂಕಾ, ಭೂತಾನ್ ಗಳಿಗಿಂತ ಕೆಳಕ್ಕೆ ಕುಸಿದು ಬೀಳಲು ಕಾರಣ ಮೋದಿಯವರಲ್ಲವೆ?

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿ ದೇಶದ ಜನರನ್ನು ಸಾವಿನ ಸಮುದ್ರದಲ್ಲಿ ಮುಳುಗಿಸಿದವರು ಮೋದಿಯವರಲ್ಲವೆ? ಜಾಗತಿಕವಾಗಿ ಕೋವಿಡ್ಡನ್ನು ಅತಿ ಕೆಟ್ಟದಾಗಿ ನಿಭಾಯಿಸಿದ 5 ಕೆಟ್ಟ ನಾಯಕರಲ್ಲಿ ಮೋದಿಯವರೂ ಒಬ್ಬರೆಂದು ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಗಳು ವರದಿ ಮಾಡಿದ್ದನ್ನು ದೇಶ ಮರೆತಿದೆಯೆ? ನಿಮಗೂ ಮರೆತು ಹೋಗಿದೆಯೆ ಯಡಿಯೂರಪ್ಪನವರೆ?

2014 ಕ್ಕಿಂತ ಮೊದಲು ಇದ್ದ ಸಣ್ಣ, ಮಧ್ಯಮ, ಗುಡಿ ಕೈಗಾರಿಕೆಗಳೆಷ್ಟು? ಈಗ ಎಷ್ಟಿವೆ? ಶೇ. 60 ರಷ್ಟು ಕಂಪೆನಿಗಳು ಮುಚ್ಚಲು, ಮುಚ್ಚುವ ಹಂತಕ್ಕೆ ಬರಲು ಕಾರಣ ಯಾರು?

ಮನೆಗೆ ಮಾರಿ ಪರರಿಗೆ ಉಪಕಾರಿಯಂತೆ ವರ್ತಿಸುವ ಪ್ರಧಾನಿ ನರೇಂದ್ರ ಮೋದಿವರಿಂದಾಗಿಯೆ ದೇಶ ದುರವಸ್ಥೆಗೆ ಸಿಲುಕಿಕೊಂಡಿದೆ. ಆದರೂ ಅವರನ್ನು ಟೀಕಿಸಬೇಡಿ ಎಂದು ಆಜ್ಞೆ ಹೊರಡಿಸುವ ಯಡಿಯೂರಪ್ಪನವರನ್ನು, ಬೊಮ್ಮಾಯಿಯವರನ್ನು ಹಾಗೂ ಬಿಜೆಪಿಯವರನ್ನು ಏನೆಂದು ಕರೆಯಬೇಕು?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending