ದಿನದ ಸುದ್ದಿ
ಹತ್ತರ ಮಕ್ಕಳು ಏರಬೇಕು ಇನ್ನೂ ಎತ್ತರ; ಇಲ್ಲವಾದರೆ ಪರೀಕ್ಷೆಯಲ್ಲಿ ತತ್ತರ..!
- ಕುಮಾರಸ್ವಾಮಿ ವಿ ಕೆ,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಶಾಲೆ, ಬೆಂಗಳೂರು
2022 – 23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಅಂತೆಯೇ ಈ ಬಾರಿಯ ಶೈಕ್ಷಣಿಕ ಚಟುವಟಿಕೆಗಳೂ ಸಹ ನಿರ್ವಿಘ್ನವಾಗಿ ಸಾಗಿವೆ. ಆದರೆ ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳು ಮಕ್ಕಳನ್ನು ಇನ್ನೂ ಕಾಡುತಿವೆ. ಮಂಕಾಗಿದ್ದ ಮಕ್ಕಳಿಗೆ ಶಾಲೆ ಪುನರಾರಂಭ ಸಂತಸ ತಂದಿದ್ದರೂ ಹಲವು ಮಕ್ಕಳು ಈಗಲೂ ಶಿಕ್ಷಣದ ಮುಖ್ಯ ವಾಹಿನಿಗೆ ಬಂದಿಲ್ಲ. ಹೀಗಾಗಿ ಪರೀಕ್ಷೆ ತಯಾರಿ ಕುರಿತು ಇಲ್ಲೊಂದು ಲೇಖನ.
ಪಾಠಗಳ ಪರಿಚಯ ಅಗತ್ಯ
ಪರೀಕ್ಷೆಗಾಗಿ ದಿನಗಳನ್ನು ಎಣಿಸುತ್ತಿರುವ ಈ ಹೊತ್ತಿನಲ್ಲಿ ಅನೇಕ ಮಕ್ಕಳಿಗೆ ಈಗಲೂ ತಾವು ಅಭ್ಯಸಿಸುತ್ತಿರುವ ವಿಷಯಗಳ ಅಧ್ಯಾಯಗಳ ಹೆಸರೇ ನೆನಪಿಲ್ಲ. ಇದು ಮೂಲಭೂತ ಅವಶ್ಯಕತೆಯಾಗಿದ್ದು, ಮಕ್ಕಳಿಗೆ ಮೊದಲು ತಾವು ಓದುತ್ತಿರುವ ಎಲ್ಲಾ ವಿಷಯದ ಅಧ್ಯಾಯಗಳ ಪರಿಚಯ ಅತ್ಯಗತ್ಯ. ಇದು ಮಕ್ಕಳ ಮೊದಲ ಕರ್ತವ್ಯವಾಗಿದ್ದು, ಪಾಠಗಳ ಹೆಸರು ನೆನಪಿದ್ದರೆ ಮಾತ್ರ ಅವುಗಳ ಬಗ್ಗೆ ಕನಿಷ್ಠ ಮಾಹಿತಿಗಳು ನೆನಪಿಗೆ ಬರಲು ಸಾಧ್ಯ. ಹೀಗೆ ಅಧ್ಯಾಯಗಳನ್ನು ನೆನಪಿಟ್ಟುಕೊಂಡಾಗ ಅದರಲ್ಲಿ ಅಡಕವಾಗಿರುವ ಪಠ್ಯಾಂಶಗಳನ್ನು ಸುಲಭವಾಗಿ ಪುನರ್ಮನನ ಮಾಡಿಕೊಳ್ಳಲು ಸಾಧ್ಯ.
ಗುರಿ ಮುಟ್ಟಲು ಜೊತೆಗಿರಲಿ ಎರಡನೇ ಗುರು
ಶಾಲೆಗಳಲ್ಲಿ ಎಲ್ಲಾ ವಿಷಯ ಶಿಕ್ಷಕರು ಈಗಾಗಲೇ ತಮ್ಮ ತಮ್ಮ ಬೋಧನಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಬಂದಿರುತ್ತಾರೆ ಹಾಗೂ ಪರೀಕ್ಷೆ ಕುರಿತು ಕಾಲಕಾಲಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮಕ್ಕಳಿಗೂ ಸಹ ನೀಡುತ್ತಿರುತ್ತಾರೆ. ಶಿಕ್ಷಕರ ನಂತರ ಮಕ್ಕಳಿಗೆ ಎರಡನೇ ಗುರುವೆಂದರೆ ಅದು ಪಠ್ಯ ಪುಸ್ತಕ. ಅತ್ಯುತ್ತಮ ಅಂಕ ಗಳಿಕೆಯ ಗುರಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಅಭ್ಯಾಸ ಅತ್ಯಂತ ಸಹಕಾರಿಯಾಗಿದೆ.
ಆದ್ದರಿಂದ ಮಕ್ಕಳು ತಪ್ಪದೆ ಪಠ್ಯ ಪುಸ್ತಕಗಳನ್ನು ಅಭ್ಯಸಿಸಬೇಕು ಹಾಗೂ ಅದರಲ್ಲಿನ ಮುಖ್ಯಾಂಶಗಳನ್ನು ಒಂದೆಡೆ ಬರೆದಿಟ್ಟುಕೊಂಡರೆ ಒಳಿತು. ಇಂತಹ ಹವ್ಯಾಸ ಬೆಳೆಸಿಕೊಂಡ ವಿದ್ಯಾರ್ಥಿಗಳ ಫಲಿತಾಂಶ ಬಹುತೇಕ ಅಧಿಕವಾಗಿರುತ್ತದೆ ಮತ್ತು ಗುಟ್ಟಮಟ್ಟದಿಂದ ಕೂಡಿರುತ್ತದೆ. ವಿದ್ಯಾರ್ಥಿಗಳ ಬಳಿ ಎಂತಹುದೇ ಅಧ್ಯಯನ ಸಾಮಗ್ರಿಗಳು ಇದ್ದರೂ, ಪಠ್ಯ ಪುಸ್ತಕವನ್ನು ಓದಿ ಅರ್ಥೈಸಿಕೊಂಡರೆ ಅದರ ಪ್ರತಿಫಲವೂ ಅತ್ಯುತ್ತಮವಾಗಿಯೇ ಇರುತ್ತದೆ. ಹೀಗೆ ಆಳವಾಗಿ ಅಧ್ಯಯನ ಮಾಡುವ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೂ ಸಹ ನೆರವಾಗುತ್ತದೆ.
ಓದಿಗಿರಲಿ ಪ್ರತ್ಯೇಕ ವೇಳಾಪಟ್ಟಿ
ಬಹುತೇಕ ವಿದ್ಯಾರ್ಥಿಗಳಲ್ಲಿ ಕಂಡುಬರುವ ಕೊರತೆ ಎಂದರೆ ಕೇವಲ ಬರವಣಿಗೆಗೆ ಹೆಚ್ಚು ಆದ್ಯತೆ ಕೊಡುವುದು. ಅದರಲ್ಲೂ ಹೆಚ್ಚಾಗಿ ಚಟುವಟಿಕೆಗಳ ರಚನೆಗೆ ಹೆಚ್ಚು ಸಮಯ ಮೀಸಲಿಡುವುದರಿಂದ ಓದಿಗೆ ಸಮಯ ಸಿಗದೆ ಮಾಸಿಕ ಪರೀಕ್ಷೆ, ಘಟಕ ಪರೀಕ್ಷೆಯ ಸಮಯದಲ್ಲಿ ಮಕ್ಕಳು ಕಡಿಮೆ ಅಂಕಗಳಿಸಲು ಕಾರಣವಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಪ್ರತಿದಿನ ಓದಿಗಾಗಿಯೇ ಪ್ರತ್ಯೇಕ ಸಮಯವನ್ನು ಮೀಸಲಿಡಬೇಕು. ಆ ಸಮಯದಲ್ಲಿ ಯಾವುದೇ ವಿಧದ ಬರವಣಿಗೆಗೆ ಆದ್ಯತೆ ನೀಡಬಾರದು. ಓದಿದ ಪ್ರಶ್ನೋತ್ತರಗಳನ್ನು ಒಮ್ಮೆ ಬರೆದರೆ ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತದೆ. ಓದುವ ವೇಳೆ ಸಂಪೂರ್ಣ ಏಕಾಗ್ರತೆ ಇರಲಿ. ಗಾಳಿ ಬೆಳಕಿನ ವ್ಯವಸ್ಥೆ ಚೆನ್ನಾಗಿರಲಿ. ಯಾವುದೇ ಬಗೆಯ ಅಡೆತಡೆಗಳು ಇರದಿರಲಿ. ಓದಿನ ನಡುವೆ ಆಗಾಗ ಸ್ವಲ್ಪ ವಿರಾಮವೂ ಸಹ ಅಗತ್ಯ.
ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಸಂಗ್ರಹ
ವಾರ್ಷಿಕ ಪರೀಕ್ಷೆಯನ್ನು ಎದುರಿಸುವ ಮುನ್ನ ವಿದ್ಯಾರ್ಥಿಗಳು ಹಿಂದಿನ ಐದಾರು ವರ್ಷದ ಪ್ರಶ್ನೆ ಪತ್ರಿಕೆಗಳನ್ನಯ ಗಮನಿಸುವುದರಿಂದ ಪರೀಕ್ಷೆಯ ಭಯ ಇಲ್ಲದಂತಾಗಿ ಆತ್ಮವಿಶ್ವಾಸ ಹೆಚ್ಚುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಉತ್ತರ ಬರೆಯುವ ಕೌಶಲ್ಯ ಸಹ ಲಭಿಸುತ್ತದೆ. ತಾವು ಉತ್ತರಿಸಿದ ಪ್ರಶ್ನೆಗಳನ್ನು ವಿದ್ಯಾರ್ಥಿಗಳೇ ಸ್ವ ಮೌಲ್ಯಮಾಪನ ಮಾಡಿಕೊಂಡಾಗ ತಮ್ಮ ತಪ್ಪಿನ ಅರಿವಾಗುತ್ತದೆ ಹಾಗೆಯೇ ಮುಂದೆ ಇಂತಹ ತಪ್ಪುಗಳು ಆಗದಂತೆ ಎಚ್ಚರ ವಹಿಸಲು ಸಹಕಾರ ಸಿಗುತ್ತದೆ. ಇಷ್ಟೇ ಅಲ್ಲದೆ ವಿದ್ಯಾರ್ಥಿಗಳು ಸ್ವತಃ ತಾವೇ ಅಧ್ಯಾಯವಾರು ಪ್ರಶ್ನೆಗಳನ್ನು ರಚಿಸಿಕೊಂಡು ಅದಕ್ಕೆ ಉತ್ತರಿಸಿದರೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಪ್ರಶ್ನೆ ಪತ್ರಿಕೆಯ ವಿನ್ಯಾಸ ತಿಳಿಯಲು ಸಹ ಈ ವಿಧಾನ ನೆರವಾಗುತ್ತದೆ.
ಎಲ್ಲವೂ ಮಿತಿಯಲ್ಲಿರಲಿ
ಓದಿನಂತೆಯೇ ಮಕ್ಕಳಿಗೆ ಆಟ, ವಿಹಾರ, ಆಹಾರವೂ ಮುಖ್ಯ. ಈ ರೀತಿಯ ವಿಧಾನಗಳನ್ನ ಅನುಸರಿಸುವುದರಿಂದ ಮಕ್ಕಳಲ್ಲಿ ಓದಿದ್ದು ಹೆಚ್ಚು ಕಾಲ ಉಳಿಯುತ್ತದೆ. ಉತ್ತಮ ನಿದ್ದೆ, ಆಟಗಳಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಅಂತೆಯೇ ಆಹಾರವೂ ಸಹ ಬಹು ಮುಖ್ಯ. ಸರಿಯಾದ ಸಮಯಕ್ಕೆ ಈ ಚಟುವಟಿಕೆಗಳು ನಡೆಯದಿದ್ದರೆ ಮಕ್ಕಳಲ್ಲಿ ಒತ್ತಡ ಹೆಚ್ಚುವ ಸಾಧ್ಯತೆ ಹೆಚ್ಚಿರುತ್ತದೆ. ಪ್ರತಿನಿತ್ಯ ಮಕ್ಕಳೊಂದಿಗೆ ಪೋಷಕರು ಹತ್ತಿಪ್ಪತ್ತು ನಿಮಿಷ ಚರ್ಚಿಸಿ ವಿದ್ಯಾಭ್ಯಾಸದಲ್ಲಿ ಮಗುವಿಗೆ ಏನಾದರೂ ಒತ್ತಡಗಳಿವೆಯೇ ಎಂದು ತಿಳಿದು ಅದಕ್ಕೆ ಸೂಕ್ತ ಪರಿಹಾರಗಳನ್ನು ಒದಗಿಸಬೇಕು, ಒತ್ತಡದಿಂದ ಹಲವು ಮಕ್ಕಳು ಆಹಾರ ಸೇವನೆಯಿಂದ ದೂರ ಉಳಿಯುತ್ತಿರುವುದು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ ಹೀಗಾಗಿ ಪೋಷಕರು ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಬೇಕು.
ಸಹಪಾಠಿಗಳೊಂದಿಗೆ ಚರ್ಚೆ
ತನ್ನ ಪ್ರತಿಭಾವಂತ ಸಹಪಾಠಿಗಳೊಂದಿಗೆ ಪ್ರತಿದಿನ ಚರ್ಚೆಯಲ್ಲಿ ತೊಡಗುವ ಮೂಲಕವೂ ಮಗು ಯಾವುದೇ ಪಠ್ಯ ವಿಷಯದಲ್ಲಿ ತನಗಿರುವ ತೊಂದರೆಯನ್ನು ಪರಿಹರಿಸಿಕೊಳ್ಳಬಹುದು. ಇದು ಸಹ ಪರಿಣಾಮಕಾರಿ ಹಾದಿಯಾಗಿದ್ದು ಅತಿ ವೇಗದ ಕಲಿಕೆಗೆ ಪ್ರೋತ್ಸಾಹ ದೊರೆಯುತ್ತದೆ. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗಂತೂ ಇದರಿಂದ ಹೆಚ್ಚು ಅನುಕೂಲಗಳು ಲಭಿಸುತ್ತವೆ. ಓದಿದ ವಿಚಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಾಗ ಅದು ದೀರ್ಘಾವಧಿಯವರೆಗೆ ಮನಸ್ಸಿನಲ್ಲಿ ಉಳಿಯುತ್ತದೆ.
ಶಿಕ್ಷಕರೊಂದಿಗೆ ನಿರಂತರ ಸಂಪರ್ಕ
ಮಕ್ಕಳು ತಮಗೆ ಬರುವ ಸಂದೇಹಗಳನ್ನು ತತಕ್ಷಣವೇ ಸಂಬಂಧಿಸಿದ ಶಿಕ್ಷಕರ ನೆರವಿನೊಂದಿಗೆ ಪರಿಹರಿಸಿಕೊಳ್ಳಬೇಕು. ಸದಾಕಾಲ ಶಿಕ್ಷಕರ ಸಂಪರ್ಕದಲ್ಲಿದ್ದುಕೊಂಡು ಓದಿಗೆ ಪೂರಕ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕು. ಶಾಲೆಗೆ ಹೆಚ್ಚು ಗೈರು ಹಾಜರಾಗದೆ ಅಂದಿನ ಕೆಲಸಗಳನ್ನು ಬಾಕಿ ಇಲ್ಲದಂತೆ ಮಾಡಿ ಮುಗಿಸಿಕೊಳ್ಳಬೇಕು. ಇದರಿಂದ ಮಗುವಿನಲ್ಲಿ ನಿರಾಳತೆ ನಿರ್ಮಾಣವಾಗಿ ಶಾಂತ ರೀತಿಯ ಕಲಿಕೆಗೆ ಅವಕಾಶ ಸಿಗುತ್ತದೆ.
ಮೊಬೈಲ್ ಹುಚ್ಚು; ಹಚ್ಚುವುದು ಕಿಚ್ಚು
ಇಂದು ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಅತಿ ಹೆಚ್ಚು ಕೇಳಿ ಬರುತ್ತಿರುವ ದೂರೆಂದರೆ ಅತಿಯಾದ ಮೊಬೈಲ್ ಬಳಕೆ. ಲಾಕ್ ಡೌನ್ ಅವಧಿಯಲ್ಲಿ ಮಕ್ಕಳ ಕೈಗೆ ಸಿಕ್ಕ ಮೊಬೈಲ್ ಸಹವಾಸ ಇಂದಿಗೂ ಸಹ ನಿರಂತರವಾಗಿ ಮುಂದುವರಿಯುತ್ತಿದ್ದು, ಇದು ಮಕ್ಕಳ ಓದಿನ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮವನ್ನು ಬೀರುತ್ತಿದೆ. ಅನೇಕ ಮಕ್ಕಳು ಈಗಲೂ ಮೊಬೈಲ್ ದಾಸರಾಗಿದ್ದು ಮಿತಿಮೀರಿದ ಬಳಕೆಯಿಂದ ಅವರ ಸ್ಮರಣ ಶಕ್ತಿ ಮತ್ತು ಧಾರಣ ಶಕ್ತಿ ಕ್ಷೀಣಿಸುತ್ತಿದೆ. ಈ ಬಗ್ಗೆ ಗಮನ ವಹಿಸುವುದು ಪ್ರತಿ ಪೋಷಕರ ಆದ್ಯ ಕರ್ತವ್ಯವಾಗಿದೆ. ಏಕೆಂದರೆ ಬಹುತೇಕ ಮಕ್ಕಳು ಮೊಬೈಲ್ ಫೋನನ್ನು ಶೈಕ್ಷಣಿಕ ಉದ್ದೇಶಕ್ಕೆ ಬಳಸದೆ, ಗೇಮ್ ಆಡಲು, ಅಶ್ಲೀಲ ಚಿತ್ರ ವೀಕ್ಷಣೆ, ಪ್ರೀತಿ ಪ್ರೇಮದ ಬಲೆಗೆ ಮಕ್ಕಳು ಬೀಳುತ್ತಿದ್ದಾರೆ. ಕೆಲವೊಮ್ಮೆ ಪೋಷಕರ ಅತಿಯಾದ ಪ್ರೀತಿ ಸಹ ಮಕ್ಕಳನ್ನು ಕ್ಲಿಷ್ಟಕರ ಪರಿಸ್ಥಿತಿಗೆ ತಳ್ಳುತ್ತಿದೆ. ಇದು ಮಗುವಿನ ಜೀವನಕ್ಕಲ್ಲದೆ ಜೀವಕ್ಕೂ ಅಪಾಯ ತರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಆದ್ದರಿಂದ ಈಗಲಾದರೂ ಇದಕ್ಕೆ ಕಡಿವಾಣ ಹಾಕಬೇಕಿದೆ.
ಬದಲಾಗಿದೆ ಮಕ್ಕಳ ವರ್ತನೆ
ಕೋವಿಡ್ ಸಮಯದಲ್ಲಿ ಮನೆಯಲ್ಲೇ ಉಳಿದಿದ್ದ ಮಕ್ಕಳ ವರ್ತನೆಯಲ್ಲಿ ಇಂದು ಹೆಚ್ಚು ಋಣಾತ್ಮಕ ಬದಲಾವಣೆಗಳು ಕಂಡುಬರುತ್ತಿವೆ. ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸುವುದಕ್ಕಿಂತ ಹೆಚ್ಚಾಗಿ ಅವರ ನಡಾವಳಿಯನ್ನು ಸರಿಮಾಡುವುದರಲ್ಲೇ ಹೆಚ್ಚು ಸಮಯ ವ್ಯರ್ಥವಾಗುತ್ತದೆ. ಶಿಕ್ಷಣ ವ್ಯವಸ್ಥೆಯ ಒಂದು ಭಾಗವಾಗಿರುವ ಪೋಷಕರು ಕೈಗೂಡಿಸಿದಾಗ ಮಾತ್ರ ಇದಕ್ಕೆ ಸೂಕ್ತ ಪರಿಹಾರ ಒದಗಿಸಲು ಸಾಧ್ಯ.
ಏಕೆಂದರೆ ಶಾಲೆಗಳಲ್ಲಿ ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗುವ ನಮ್ಮ ಶಿಕ್ಷಕ ಬಂಧುಗಳು, ಪ್ರತೀ ಮಗುವಿನ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುತ್ತಾರೆ. ಆದರೆ ಈ ನಡುವೆ ಅಸಹಜ ನಡವಳಿಕೆ ತೋರುವ ಮಕ್ಕಳಿಂದ ಇಡಿಯ ತರಗತಿ ಅಸ್ತವ್ಯಸ್ತತವಾಗಿ ಪ್ರತಿಭಾವಂತ ಮಕ್ಕಳಿಗೂ ತೊಂದರೆಗಳು ಆಗುತ್ತಿವೆ. ಆದ್ದರಿಂದ ಇಂತಹ ಮಕ್ಕಳ ಮೇಲೆ ಪೋಷಕರು ಸಹ ತೀವ್ರ ನಿಗಾ ವಹಿಸಿ ತಮ್ಮ ಮಗುವನ್ನ ನೈತಿಕ ಹಾದಿಗೆ ತರಬೇಕಿದೆ.
ಅತಿಯಾದ ಕೋಪ, ಸುಳ್ಳು ಹೇಳುವುದು, ಪುಂಡ ಗೆಳೆಯರ ಸಹವಾಸ, ಬೀಡಿ, ಸಿಗರೇಟ್ ಚಟ, ಮದ್ಯಪಾನದಂತಹ ಸಮಸ್ಯೆಗಳು ಕಂಗೆಡಿಸಿವೆ. ಎಳೆಯ ವಯಸ್ಸಿನಲ್ಲಿಯೇ ಇವುಗಳಿಗೆ ಮಕ್ಕಳು ದಾಸರಾದರೆ ಮುಂದೆ ಈ ಸಮಾಜದ ಅಡಿಪಾಯ ಅಲುಗಾಡುವುದರಲ್ಲಿ ಸಂಶಯವೇ ಇಲ್ಲ. ಹಿರಿಯರ ಮಾತಿನಂತೆ “ಎಷ್ಟು ಓದಿದ್ದೇವೆ ಎನ್ನುವುದು ಮುಖ್ಯವಲ್ಲ; ಆ ಓದಿನಿಂದ ಏನು ಕಲಿತಿದ್ದೇವೆ ಎಂಬುದೇ ಮುಖ್ಯ” ಹೀಗಾಗಿ ಇದು ಇಂದು ತುರ್ತಾಗಿ ಬಗೆಹರಿಸಬೇಕಾದ ಸಮಸ್ಯೆಯಾಗಿದೆ.
ಕಲಿಕೆಗಾಗಿ ದಶ ಸೂತ್ರಗಳು
- ಅನೇಕ ಮಕ್ಕಳು ಕೇವಲ ಉತ್ತರಗಳನ್ನು ಕಲಿಯುತ್ತಾರೆ, ಆದರೆ ಪ್ರಶ್ನೆಯೂ ಅತಿ ಮುಖ್ಯ
- ಓದಿನಲ್ಲಿ ಶ್ರದ್ಧೆ, ಆಸಕ್ತಿ ಇರಲಿ, ಒತ್ತಡ ಬೇಡ
- ಕಲಿಕೆಯಲ್ಲಿ ಖುಷಿ ಇರಲಿ
- ಕಿರು ಪರೀಕ್ಷೆ, ಘಟಕ ಪರೀಕ್ಷೆಗಳನ್ನೂ ಸಹ ಮುಖ್ಯ ಪರೀಕ್ಷೆ ಎಂದೇ ಭಾವಿಸಿ
- ಓದಿನ ನಡುವೆ ವಿಶ್ರಾಂತಿ ಅತ್ಯಗತ್ಯ
- ಪರೀಕ್ಷೆ ಯುದ್ಧವಲ್ಲ; ಅದೊಂದು ಹಬ್ಬವೆಂದು ಅಭ್ಯಸಿಸಿ
- ಪದ್ಯಗಳು, ಗಣಿತದ ಸೂತ್ರಗಳು, ಭೂಪಟ, ವಿಜ್ಞಾನದ ಚಿತ್ರಗಳು, ವ್ಯಾಕರಣ ಎಲ್ಲವನ್ನೂ ಪ್ರತಿನಿತ್ಯ ಅಭ್ಯಸಿಸಿ
- ಓದುವ ಕೋಣೆ ದೇವರ ಕೋಣೆಯಷ್ಟೇ ಸ್ವಚ್ಛ ಮತ್ತು ಶಾಂತವಾಗಿರಲಿ
- ಗೊತ್ತಿರುವ ಪ್ರಶ್ನೋತ್ತರಗಳನ್ನು ಮರೆಯದಂತೆ ನಿತ್ಯವೂ ಒಮ್ಮೆ ಅಭ್ಯಸಿಸಿ
- ಓದು, ಓದಿದ್ದನ್ನು ಬರೆ, ಬರೆದದ್ದನ್ನು ಪರಿಶೀಲಿಸು
(ಕುಮಾರಸ್ವಾಮಿ ವಿ ಕೆ
ಪ್ರೌಢಶಾಲಾ ಮುಖ್ಯ ಶಿಕ್ಷಕರು
ಸಿದ್ಧಾರ್ಥ ಆಂಗ್ಲ ಶಾಲೆ
ಬೆಂಗಳೂರು ಉತ್ತರ
9113906120)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ7 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ7 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


