Connect with us

ಭಾವ ಭೈರಾಗಿ

ಕತೆ | ಮತ್ತೆ ಮಳೆ

Published

on

ಹರೀಶ್ ಬೇದ್ರೆ
  • ಜಿ. ಹರೀಶ್ ಬೇದ್ರೆ

ಒಂದು ಊಟ ತಂದುಕೊಡೊಕೆ ಎರಡು ಗುಂಟೆ ಬೇಕಾ?
ಸರ್, ಜೋರಾಗಿ ಮಳೆ ಬರುತ್ತಿದೆ.,. ಹಾಗಾಗಿ…
ಅದಕ್ಕಂತ ಎಕ್ಸ್ಟ್ರಾ ದುಡ್ಡು ತೆಗೆದುಕೊಂಡಿಲ್ವಾ, ತಗೊಂಡ ಮೇಲೆ ಸರಿಯಾದ ಟೈಮಿಗೆ ಬರಬೇಕು.

ಸರಿಯಾಗಿ ಕೆಲಸ ಮಾಡೊ ಯೋಗ್ಯತೆ ಇಲ್ಲದ ಮೇಲೆ ಇಂತ ಕೆಲಸಕ್ಕೆ ಬರಬಾರದು. ಆ ಪಾರ್ಸೆಲ್ ಕೊಡು ಎಂದು ಡೆಲಿವರಿ ಬಾಯ್ ಕೊಡುವ ಮುನ್ನವೇ ಅವನ ಕೈಯಿಂದ ಪಾರ್ಸೆಲ್ ಕಿತ್ತುಕೊಂಡು, ಕೆಟ್ಟದಾಗಿ ಬೈಯುತ್ತಾ ಆ ವ್ಯಕ್ತಿ ಮನೆಯೊಳಗೆ ಹೋದ.

ಗಿರೀಶ್ ಸ್ವಿಗ್ಗಿಯಲ್ಲಿ ಡೆಲಿವರಿ ಬಾಯಾಗಿ ಕೆಲಸಕ್ಕೆ ಸೇರಿಕೊಂಡು ಒಂದು ವರ್ಷದ ಮೇಲಾಗಿದೆ. ಎಲ್ಲೋ ಅಪರೂಪಕ್ಕೆ ಒಮ್ಮೆ ತಡವಾದಾಗ ಯಾಕಪ್ಪಾ ಲೇಟ್ ಎಂದು ಮಾಮೂಲಿಯಂತೆ ಕೇಳಿದ್ದಿದೆ. ಯಾರೂ ಇಂದಿನಂತೆ ಬೈದಿರಲಿಲ್ಲ. ಇದು ಗಿರೀಶನ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರಿತಾದರೂ . ಪಾಪ ತುಂಬಾ ಹಸಿದಿದ್ದರೇನೊ ಅದಕ್ಕೆ ಹಾಗೆ ಮಾತನಾಡಿರಬೇಕು ಹೋಗಲಿ ಬಿಡು ಎಂದುಕೊಂಡರೂ ಮನಸ್ಸು ಸಮಾಧಾನವಾಗಲಿಲ್ಲ.

ಶಿವಮೊಗ್ಗದಲ್ಲಿ ಆಷಾಢ ಆರಂಭವಾದ ಮೊದಲನೇ ದಿನದಿಂದಲೇ ಆರಂಭವಾದ ಮಳೆ ಹದಿನೈದು ದಿನಗಳಾದರೂ ಬಿಡದೆ ಸುರಿಯುತ್ತಿತ್ತು. ಈ ದಿನವಂತೂ ವರುಣದೇವ, ಭೂತಾಯಿಯ ಮೇಲೆ ಇನ್ನಿಲ್ಲದಂತೆ ದೌರ್ಜನ್ಯ ನಡೆಸುತ್ತಿರುವ ಮನುಷ್ಯರಿಗೆ ಸರಿಯಾದ ಪಾಠ ಕಲಿಸಲೇಬೇಕೆಂಬ ಹಠಕ್ಕೆ ಬಿದ್ದವನಂತೆ ರುದ್ರರೂಪ ತಾಳಿದ್ದ. ಜೋರಾದ ಮಳೆಯ ಜೊತೆಗೆ ಗುಡುಗು ಸಿಡಿಲಿನ ಆರ್ಭಟವೂ ಜಾಸ್ತಿಯಾಗಿತ್ತು. ಬರಿಯ ಮಳೆಯಾಗಿದ್ದರೆ ಗಿರೀಶನಿಗೆ ನಿಗಧಿತ ವೇಳೆಯಲ್ಲಿ ಆರ್ಡರ್ ತಲುಪಿಸಲು ಯಾವ ತೊಂದರೆಯೂ ಇರಲಿಲ್ಲ.

ಆದರೆ ವಿಚಿತ್ರ ಗುಡುಗು ಸಿಡಿಲುಗಳ ಅಬ್ಬರ ಇದ್ದಿದ್ದರಿಂದ ಎರೆಡೆರಡು ಕಡೆ ನಿಂತು ಬರಬೇಕಾಯಿತು. ಊಟದ ಆರ್ಡರ್ ಕೊಟ್ಟ ವ್ಯಕ್ತಿಯ ಮನೆಗೂ ಹೊಟೇಲಿಗೂ ಆರು ಕಿಲೋಮೀಟರ್ ಅಂತರವಿತ್ತು. ಮನೆ ಇದ್ದದ್ದು ಹೊಸ ಬಡಾವಣೆಯಲ್ಲಿ, ಅಲ್ಲಿ ಮನೆಗಳು ವಿರಳ ಹಾಗೂ ನಿಲ್ಲಲು ಎಲ್ಲೂ ಜಾಗ ಇರದ ಕಾರಣ ಒಂದು ಕಡೆ ಸ್ವಲ್ಪ ಜಾಸ್ತಿ ಹೊತ್ತೆ ನಿಂತು ಮಳೆಯ ಆರ್ಭಟ ಕಡಿಮೆಯಾಗಲಿ ಎಂದು ಕಾದಿದ್ದ. ಅದೇ ತಪ್ಪಾಗಿ ಮುಖಕ್ಕೆ ಮಂಗಳಾರತಿ ಮಾಡಿಸಿಕೊಳ್ಳುವಂತಾಯಿತು.

ಇದೇ ಯೋಚನೆಯಲ್ಲಿ ನಿಧಾನವಾಗಿ ಬೈಕ್ ಚಲಿಸುತ್ತಾ ಬರುವಾಗ ಮಳೆ ಜೋರಾಗಿ ಪಕ್ಕದಲ್ಲೇ ಸಿಡಿಲು ಬಡಿದ ಅನುಭವವಾಗಿ ಇಹಲೋಕಕ್ಕೆ ಬಂದು ಹತ್ತಿರದಲ್ಲಿ ಎಲ್ಲಾದರೂ ನಿಲ್ಲಲು ಜಾಗ ಇದೇಯೆ ಎಂದು ನೋಡುತ್ತಾ ಬರುವಾಗ ಚಿಕ್ಕದೊಂದು ಮನೆಯಲ್ಲೇ ಅಂಗಡಿ ಮಾಡಿಕೊಂಡಿರುವುದು ಕಣ್ಣಿಗೆ ಬಿತ್ತು. ಸೀದಾ ಅಲ್ಲಿಗೆ ಬಂದು ನಿಂತ. ಅಂಗಡಿಯ ಮುಂಭಾಗದಲ್ಲಿ ಮಳೆ ಬಿಸಿಲಿಗೆ ಅಡ್ಡವಾಗಿ ಏನೂ ಹಾಕಿರದ ಕಾರಣ ನೆನೆಯುವುದು ತಪ್ಪಲಿಲ್ಲ. ಆದರೂ ಅಲ್ಲೇ ನಿಂತಿದ್ದ, ಅಂಗಡಿಯೊಳಗೆ ಇರಚಲು ಬಡಿಯುತ್ತಿದ್ದರಿಂದ ಹೇಳೋಣವೆಂದು ಬಗ್ಗಿ ನೋಡಿದರೆ ಒಳಗಡೆ ಹೆಂಗಸೊಬ್ಬಳು ಕಂಡಳು. ಇವನು ಇರಚಲು ಬಡಿಯುತ್ತಿದೆ ಎಂದು ಕೂಗಿದನ್ನು ಕೇಳಿ ಹೆಂಗಸು ಯಾರೋ ಏನೋ ಕೊಳ್ಳಲು ಬಂದಿರಬೇಕೆಂದು ಬಂದು ಏನು ಬೇಕು ಎಂದು ಕೇಳಿದಳು. ಇವನು ನನಗೇನು ಬೇಡ, ಮಳೆ ಅಂಗಡಿ ಒಳಗೂ ಬಿದ್ದು ಸಾಮಾನುಗಳು ಹಾಳಾಗುತ್ತಿವೆ ಎಂದು ಹೇಳಲು ಕರೆದೆ ಎಂದ.

ಆಗ ಗಮನಿಸಿದ ಹೆಂಗಸು ಹೌದಲ್ಲವೆ ಎಂದು ಬಾಗಿಲು ಮುಂದೆ ಎಳೆದಳು. ಇವನು ಅಲ್ಲಿಯೇ ನಿಂತಿದ್ದನ್ನು ನೋಡಿ, ಒಳಗೆ ಬನ್ನಿ ಎಂದು ಪಕ್ಷದ ಬಾಗಿಲು ತೆರೆದಳು. ಇವನು ಪರವಾಗಿಲ್ಲ ಎಂದು ಹೇಳಲು ಹೊರಟ ಕ್ಷಣದಲ್ಲೇ ಮತ್ತೊಂದು ಸಿಡಿಲು ಬಡಿಯಿತು. ಆಗ ಏನನ್ನು ಹೇಳದೆ ಒಳಹೋಗಿ ಬಾಗಿಲ ಬಳಿಯೇ ನಿಂತು ಮಳೆಯ ನೋಡತೊಡಗಿದ. ಕಣ್ಣು ಮಳೆ ನೋಡುತ್ತಿದ್ದರೆ, ಮನಸು ಬೈದ ವ್ಯಕ್ತಿಯ ಬಗ್ಗೆ ಯೋಚಿಸುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ಆ ಅಂಗಡಿಯಾಕೆ ತಿನ್ನಲು ಕಾರಮಂಡಕ್ಕಿ ಕೊಟ್ಟು ಕುಡಿಯಲು ಬಿಸಿಯಾದ ಕಾಫಿ ಕೊಟ್ಟಳು. ಇವನು ಬೇಡ ಎನ್ನದೆ ತಿಂದು, ಕುಡಿದ. ಅಷ್ಟು ಹೊತ್ತಿಗೆ ಮಳೆಯ ರಭಸ ಕಡಿಮೆಯಾದ್ದರಿಂದ ಬರುತ್ತೇನೆ ಎಂದು ಹೇಳಿ ಹೊರಟ.

ಒಂದು ವಾರದ ನಂತರ ಮತ್ತೆ ಅದೇ ಬಡಾವಣೆಗೆ ಹೋಗುವ ಅವಕಾಶ ಸಿಕ್ಕಿತು. ಅಲ್ಲಿಗೆ ಹೋಗುವಾಗ, ತಕ್ಷಣ ಆ ದಿನ ಒಳಕರೆದು ಉಪಚರಿಸಿದ ಹೆಂಗಸಿನ ನೆನಪಾಗಿ, ಬರುವಾಗ ಅವಳನ್ನು ಮಾತನಾಡಿಸಿಯೇ ಬರುವುದೆಂದು ತೀರ್ಮಾನಿಸಿದ. ದಾರಿಯುದ್ದಕ್ಕೂ ಹೋಗುವಾಗ ಅವಳ ಬಗ್ಗೆ ನೆನಪಿಸಿಕೊಂಡರೆ ಏನೂ ನೆನಪಾಗಲಿಲ್ಲ. ಅವಳು ಹೇಗಿದ್ದಾಳೆ, ಮುಖ ಹೇಗಿದೆ, ತಾನು ತಿಂದಿದ್ದು ಏನು ಏನೊಂದೂ ನೆನಪಾಗಲಿಲ್ಲ. ಆಗ ಆ ಕ್ಷಣದಲ್ಲಿ ಅವನ ಮನಸ್ಸು ಪೂರ್ತಿ ಬೈದ ವ್ಯಕ್ತಿಯ ಬಗ್ಗೆಯೆ ಗಿರಕಿ ಹೊಡೆಯುತ್ತಿದ್ದರಿಂರ ಬೇರೆ ಕಡೆ ಗಮನ ಹೋಗಿರಲಿಲ್ಲ.

ಇಂದು ಬಂದಾಗ ನೋಡಿದರೆ ಅದೊಂದು ಪುಟ್ಟ ಅಂಗಡಿ. ಅಲ್ಲಿ ಬೀಡಿ ಸಿಗರೇಟು ತಂಬಾಕು, ಎಲೆ ಅಡಿಕೆ, ಸ್ವಲ್ಪ ಕುರುಕಲು ತಿಂಡಿಗಳ ಜೊತೆಗೆ ಕಾರಮಂಡಕ್ಕಿ, ಮಿರ್ಚಿ ಮಾತ್ರ ಸಿಗುತ್ತಿತ್ತು. ಮೂವತ್ತರ ಆಸುಪಾಸಿನ ಮಹಿಳೆ ಅದನ್ನು ನಡೆಸುತ್ತಿದ್ದಳು. ಇವನನ್ನು ನೋಡಿದ ಆ ಮಹಿಳೆ ಹಿಂದಿನ ಗುರುತು ಹಿಡಿಯದೆ ಏನು ಬೇಕು ಎಂದು ಕೇಳಿದಳು. ಅದಕ್ಕೆ ಗಿರೀಶ್ ಅಂದಿನ ಘಟನೆ ವಿವರಿಸಿ, ನೀವೇ ಅಲ್ಲವೇ ಇದ್ದಿದ್ದು ಎಂದ. ಹೌದು, ಆದರೆ ಅವತ್ತು ನೀವು ರೈನ್ ಕೋಟ್, ಹೆಲ್ಮೆಟ್ ಹಾಕಿದ್ದರಿಂದ ಗೊತ್ತಾಗಲಿಲ್ಲ ಎಂದಳು.

ಅವಳ ಹಾಗೂ ಅಂಗಡಿಯ ಪರಿಸ್ಥಿತಿ ನೋಡಿದಾಗ, ಅಂದು ತಾನು ದುಡ್ಡು ಕೊಡದೆ ಹೋಗಿದ್ದು ತಪ್ಪಾಯಿತು ಎನಿಸಿ, ಅವತ್ತು ಯಾವುದೋ ಮೂಡಲ್ಲಿ ಹಣ ಕೊಡಲಿಲ್ಲ, ಎಷ್ಟಾಗಿತ್ತು ಎಂದ. ಅದಕ್ಕವಳು ಬೇಡ ಎಂದು ಹಣ ಪಡೆಯಲಿಲ್ಲ. ಅಂದಿನಿಂದ ಗಿರೀಶ್ ಆ ಕಡೆ ಹೋದಾಗಲೆಲ್ಲಾ ತಪ್ಪದೇ ಈ ಅಂಗಡಿಗೆ ಬಂದು ಹಣ ಕೊಟ್ಟು ಕಾಫಿ ಕುಡಿದು ನಾಲ್ಕು ಮಾತನಾಡಿ ಹೋಗುತ್ತಿದ್ದ. ಯಾವಾಗ ಬಂದರೂ ಅಲ್ಲಿ ಆ ಹೆಂಗಸು ಮತ್ತು ಎರಡು ಮೂರು ವರ್ಷದ ಮಗು ಮಾತ್ರ ಇರುವುದನ್ನು ಗಮನಿಸಿ, ಕುತೂಹಲ ತಡೆಯಲಾರದೆ, ಮನೆಯಲ್ಲಿ ಮತ್ತೆ ಯಾರಿದ್ದಾರೆ ಎಂದು ಕೇಳಿದ. ಅದಕ್ಕವಳು ನಾನು ನನ್ನ ಮಗಳು ಇಬ್ಬರೇ ಎಂದಳು. ಏಕೆ ಎಂದಾಗ, ವರ್ಷದ ಹಿಂದೆ ನನ್ನ ಯಜಮಾನರು ಕೊವಿಡ್ ನಿಂದ ಹೋದರು ಹಾಗಾಗಿ ಎಂದಳು. ಇವನು ಮತ್ತೆ ಏನನ್ನು ಕೇಳಲಿಲ್ಲ.. ನಂತರ ತಿಳಿದಿದ್ದೆಂದರೆ, ಗಂಡ ಇರುವವರೆಗೂ ಅವನ ಕುಟುಂಬದವರೊಂದಿಗೆ ಬದುಕು ಚೆನ್ನಾಗಿಯೇ ಇತ್ತು. ಆತ ಹೋದನಂತರ ಆಸ್ತಿಯ ಸಲುವಾಗಿ, ಇವಳಿಗೆ ಈ ಪುಟ್ಟ ಮನೆ, ನಾಲ್ಕು ಬಿಡಿಗಾಸು ಕೊಟ್ಟು ಹೊರಹಾಕಿದ್ದಾರೆಂದು.

ಇವಳು ತನ್ನ ಮನೆಯವರಿಗೆ ಹೊರೆಯಾಗಬಾರದೆಂದು ಇಲ್ಲಿಗೆ ಮಗಳೊಂದಿಗೆ ಬಂದು ಬದುಕು ಕಟ್ಟೀಕೊಂಡಿದ್ದಾಳೆ ಎಂದು.
ಅದೊಂದು ದಿನ ಗಿರೀಶನಿಗೆ, ಆತನ ತಂದೆಗೆ ಹುಷಾರಿಲ್ಲ ಎಂದು ಕರೆ ಬಂದು ಊರಿಗೆ ಹೋದ. ಅಲ್ಲಿಗೆ ಹೋದ ಎರಡನೆ ದಿನ ತಾಯಿ, ಗಿರೀಶನನ್ನು ಕೂರಿಸಿಕೊಂಡು, ಆದದ್ದು ಆಗಿ ಹೋಯಿತು. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ನೀನೂ ಕೊರಗುತ್ತಾ ನಮಗೂ ಕೊರಗುವಂತೆ ಏಕೆ ಮಾಡ್ತಿಯಾ? ನಿನ್ನ ತಂದೆ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಹೀಗಾಗಿರುವುದು ಎಂದು ಹೇಳುವಾಗಲೇ ಗಿರೀಶನ ಗೆಳೆಯನು ಬಂದ.

ಅವನು ಗಿರೀಶನನ್ನು ಹೊರಗೆ ಕರೆದುಕೊಂಡು ಹೋಗಿ, ನೋಡು ನಿನಗೇನು ಮಹಾ ವಯಸ್ಸಾಗಿಲ್ಲ, ಮೊದಲನೇ ಸಂಬಂಧ ಅಲ್ಲದಿದ್ದರೂ ಎರಡನೇ ಸಂಬಂಧವಾದರೂ ನೋಡು. ಅವರಿಗೂ ಒಂದು ಬದುಕು ಸಿಗುತ್ತದೆ, ನಿನ್ನ ಬದುಕಿಗೂ ಆಧಾರ ಸಿಕ್ಕಂತೆ ಆಗುತ್ತದೆ. ಜೊತೆಗೆ ನಿನ್ನ ತಂದೆ ತಾಯಿಗೆ ನೆಮ್ಮದಿ ಸಿಗುತ್ತದೆ ಯೋಚಿಸು ಎಂದ.
ಗಿರೀಶನಿಗೆ ಈಗ ಮೂವತ್ತೈದು ವರ್ಷ, ಅವನಿಗೆ ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಿರಲಿಲ್ಲ. ಅದಕ್ಕಾಗಿ ಹರಕೆ ಹೊತ್ತು ತೀರಿಸಲು ತನ್ನ ಊರಿಂದ ಹದಿನೈದು ಕಿಲೋಮೀಟರ್ ದೂರದಲ್ಲಿ ಇರುವ ಮನೆದೇವರಿಗೆ ಬೈಕಿನಲ್ಲಿ ಹೆಂಡತಿಯೊಂದಿಗೆ ಹೋಗುವಾಗ, ಎದುರಿನಿಂದ ವೇಗವಾಗಿ ಬಂದ ವಾಹನದಿಂದ ತಪ್ಪಿಸಿಕೊಳ್ಳಲು ಹೋಗಿ, ಬೈಕ್ ಸಮೇತ ಕೆರೆಯಲ್ಲಿ ಬಿದ್ದಿದ್ದರು.

ಅಲ್ಪಸ್ವಲ್ಪ ಈಜು ಬರುತ್ತಿದ್ದ ಗಿರೀಶ್ ಕಷ್ಟಪಟ್ಟು ದಡ ಸೇರಿದ. ಆದರೆ ಆತನ ಹೆಂಡತಿ ಬದುಕಿ ಉಳಿಯಲಿಲ್ಲ. ಊರಲ್ಲೇ ಇದ್ದರೆ ಹೆಂಡತಿಯ ನೆನಪು ಬಹಳ ಕಾಡುತ್ತದೆ, ಅವಳ ಸಾವಿಗೆ ತಾನೇ ಕಾರಣ ಎಂದು ಕೊರಗುವಂತೆ ಆಗುತ್ತದೆ ಎನ್ನುವ ಕಾರಣಕ್ಕೆ ತನ್ನ ಊರು ಬಿಟ್ಟು ಶಿವಮೊಗ್ಗ ಸೇರಿದ್ದ. ಇಷ್ಟು ದಿನ ಯಾರು ಏನೇ ಹೇಳಿದ್ದರೂ ಮರುಮದುವೆಯ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈಗ, ತಂದೆಯ ಅನಾರೋಗ್ಯ, ತಾಯಿಯ ಮಾತು, ಜೊತೆಗೆ ಗೆಳೆಯ, ವಿಧವೆ, ವಿಚ್ಜೇದಿತೆ, ಕೈಲಾಗದವರಿಗೆ ಮದುವೆಯಾಗಿ ಹೊಸ ಬದುಕು ಕೊಡಬಾರದೇಕೆ ಎನ್ನುವ ಮಾತು ಮತ್ತೊಂದು ದಿಕ್ಕಿನಲ್ಲಿ ಯೋಚಿಸುವಂತೆ ಮಾಡಿತು.

ಅದಕ್ಕಾಗಿಯೆ ಗಿರೀಶ್, ಅಪ್ಪ ನನಗೆ ಯೋಚಿಸಲು ಸ್ವಲ್ಪ ದಿನ ಅವಕಾಶ ಕೊಡು ಹೇಳುತ್ತೇನೆ ಎಂದು ಶಿವಮೊಗ್ಗಕ್ಕೆ ಬಂದ. ಅದೇ ದಿನ ಹೊಸ ಬಡಾವಣೆಯ ಆರ್ಡರ್ ಸಿಕ್ಕಿತು. ವಾಡಿಕೆಯಂತೆ ಡೆಲಿವರಿ ಕೊಟ್ಟು ಕಾಫಿ ಕುಡಿಯಲು ಬಂದ. ಅದೇನೋ ಗೊತ್ತಿಲ್ಲ, ಆಂದು ಆ ಅಂಗಡಿಯ ಮಹಿಳೆ ಬಹಳ ವಿಶೇಷವಾಗಿ ಕಂಡಳು. ಸಂಜೆ ಮನೆಗೆ ಬಂದವನು ಏನೋ ಯೋಚಸಿ ಗೆಳೆಯನಿಗೆ ಕರೆ ಮಾಡಿ, ಅಂಗಡಿಯ ಮಹಿಳೆಯ ವಿಷಯವನ್ನು ಅವನಿಗೆ ತಿಳಿಸಿ, ಅವಳು ಒಪ್ಪಿದರೆ ಅವಳಿಗೆ ಮದುವೆಯಾಗಿ, ಅವಳ ಮಗುವಿಗೆ ತಂದೆಯಾಗಲು ಬಯಸಿರುವೆ. ಇದಕ್ಕೆ ಅಪ್ಪ ಅಮ್ಮನ ಒಪ್ಪಿಗೆ ಇದೇಯಾ ನೀನೇ ಕೇಳಿ ತಿಳಿಸು. ಆಮೇಲೆ ನಾನು ಅವಳ ಬಳಿ ಮಾತನಾಡುವೆ ಎಂದ ಗಿರೀಶ್. ಸಮಯ ನೋಡಿ ನಿನ್ನ ತಂದೆ ತಾಯಿಯರ ಜೊತೆ ಮಾತನಾಡಿ ತಿಳಿಸುವೆ ಎಂದ ಗೆಳೆಯ. ಗಿರೀಶ್, ಗೆಳೆಯನಿಂದ ಬರುವ ಕರೆಗೆ ಕಾಯುತ್ತಿದ್ದಾನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending