ದಿನದ ಸುದ್ದಿ
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.
ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.
ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.
18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.
ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.
ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್ಆರ್ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ22 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ7 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ21 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ3 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

