Connect with us

ದಿನದ ಸುದ್ದಿ

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ ; ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ

Published

on

ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು.

ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ, ಅವರ ಮೇಲೆ ಯಾರದೂ ಮುಲಾಜಿಲ್ಲದೇ ನಿರ್ಧಾಕ್ಷೀಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಬೇಕು. ಅವರು ಪ್ರತಿನಿಧಿ, ಅಧಿಕಾರಿಗಳು ಜನ ಸೇವಕರು, ಜನರ ಕಷ್ಟ, ಸುಖಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಆದರೆ ವಿಳಂಬ ಮಾಡಬಾರದು. ವಿಳಂಬ ಮಾಡುವುದು ಸಹ ಒಂದು ರೀತಿಯ ಭ್ರಷ್ಟಾಚಾರ ಮಾಡಿದಂತೆ. ಜಿಲ್ಲಾ ಮಟ್ಟದಲ್ಲಿ ಜನಸ್ನೇಹಿ ಆಡಳಿತ ಇರಬೇಕು. ಜನರು ಕಚೇರಿಗಳಿಗೆ ಬಂದಾಗ ಗೌರವಯುತವಾಗಿ ನಡೆದುಕೊಂಡು, ಕಷ್ಟಗಳಿಗೆ ಪರಿಹಾರ ಮಾಡುವುದಲ್ಲದೇ ಜನರ ಜೊತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು ಎಂದರು.

ದಾವಣಗೆರೆ ಜಿಲ್ಲೆ ಇನ್ನಷ್ಟು ಪ್ರಗತಿ

ದಾವಣಗೆರೆ ಜಿಲ್ಲೆ ಬಹಳ ಪ್ರಗತಿ ಪರವಾದ ಜಿಲ್ಲೆಯಾಗಿದ್ದು ಇನ್ನಷ್ಟು ಪ್ರಗತಿ ಕಾಣಬೇಕಾಗಿದೆ. ಜಿಲ್ಲೆಯ ಅಭಿವೃದ್ದಿಯಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹಳ ಪ್ರಮುಖವಾಗಿದೆ. ತಹಶೀಲ್ದಾರರ ಕಚೇರಿ ಜನರಿಗೆ ಹೆಚ್ಚು ಸೇವೆ ಕೊಡುವ ಕಚೇರಿಯಾಗಿದ್ದು ಇಲ್ಲಿ ಲಂಚಗುಳಿತನ, ಅಲೆದಾಡಿಸುವುದು ಹೆಚ್ಚಿದೆ ಎಂಬ ದೂರುಗಳಿವೆ, ಇದಕ್ಕೆ ಅವಕಾಶ ನೀಡುವುದಿಲ್ಲ. ತಹಶೀಲ್ದಾರ್ ಕಚೇರಿ, ಪೊಲೀಸ್ ಸ್ಟೇಷನ್, ತಾಲ್ಲೂಕು ಪಂಚಾಯತ್, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಇಲಾಖೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದರು.

ಅಧಿಕಾರಿಗಳ ಕ್ಷೇತ್ರ ಭೇಟಿಗೆ ಸೂಚನೆ

ಜಿಲ್ಲಾಧಿಕಾರಿ ತಹಶೀಲ್ದಾರರ ಕಚೇರಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಇದರಿಂದ ಕೆಳಗಿನ ಅಧಿಕಾರಿಗಳು ಜಾಗೃತರಾಗುವರು. ಅಧಿಕಾರಿಗಳು ತಮ್ಮ ಜವಾಬ್ದಾರಿ, ಕರ್ತವ್ಯವನ್ನು ಸಮಾಜದ ಅಭಿವೃದ್ದಿಗಾಗಿ ಮಾಡಬೇಕು. ಮೇಲಾಧಿಕಾರಿಗಳು ಪದೇ ಪದೇ ಭೇಟಿ ನೀಡಿ ಕೆಲಸ ಕಾರ್ಯಗಳ ಪರಿಶೀಲನೆ, ಉಸ್ತುವಾರಿ ಮಾಡಲಿಲ್ಲವೆಂದರೆ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಜಿಲ್ಲಾ ಮಟ್ಟದ ಆಡಳಿತ ಸದಾ ಪಾರದರ್ಶಕವಾಗಿರಬೇಕು ಎಂದರು.

ದೂರುಗಳಿಗೆ ಪ್ರತಿಕ್ರಿಯಿಸಿ

ಪತ್ರಿಕೆಗಳು, ಟಿ.ವಿ.ಗಳಲ್ಲಿ ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ಅನೇಕ ಅಧಿಕಾರಿಗಳು ಕ್ಷೇತ್ರಗಳಿಗೆ ಹೋಗದೆ ಹವಾನಿಯಂತ್ರಿತ ಕೊಠಡಿಗಳಲ್ಲಿ ಕೂತು ಹೋಗುತ್ತಾರೆ. ಸರ್ಕಾರ ವಾಹನ ಸೇರಿದಂತೆ ಎಲ್ಲಾ ಸೌಲಭ್ಯ ನೀಡಿದ್ದು ಐಷರಾಮಿ ಜೀವನ ಮಾಡಲಿ ಎಂದಲ್ಲ, ಜನರ ಕೆಲಸ ಮಾಡಲಿ ಎಂದು, ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ಜನರ ಕೆಲಸ ಮಾಡಬೇಕೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು.

ಪೂರ್ವ ಮುಂಗಾರು ನಷ್ಟ ಪರಿಹಾರ

ಪೂರ್ವ ಮುಂಗಾರಿನಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಬೆಳೆಗಳಿಗೆ ಹಾನಿಯಾಗಿದ್ದು ಇದಕ್ಕೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗುತ್ತದೆ ಎಂದರು.

ಜೂನ್ 9 ರಿಂದ ಮುಂಗಾರು ಪ್ರವೇಶ; ಇದೇ ಜೂನ್ 9 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಿಸುವ ಮುನ್ಸೂಚನೆ ಇದ್ದು ಕೃಷಿ ಚಟುವಟಿಕೆಗಳು ಹೆಚ್ಚಾಗಲಿವೆ. ಈ ವೇಳೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜಂಟಿ ಕೃಷಿ ನಿರ್ದೇಶಕರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ರಾಸಾಯಿನಿಕಗಳ ದಾಸ್ತಾನಿನ ಬಗ್ಗೆ ನಿಗಾವಹಿಸಬೇಕು. ಇದೇ ವೇಳೆ ಪ್ರವಾಹ ತಡೆಗೂ ಪೂರ್ವ ಸಿದ್ದತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದರು.

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ

ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ರಕ್ಷಣಾಧಿಕಾರಿಯವರು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಆದರೆ ಯಾವುದೇ ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಲ್ಲಿಕಾರ್ಜುನ್; ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲಾ ಮಂತ್ರಿಯಾಗುತ್ತಾರೆ. ಅವರು ಸುಧೀರ್ಘವಾಗಿ ಕೆಡಿಪಿ ಸಭೆಗಳನ್ನು ನಡೆಸುವರು. ಈ ವೇಳೆ ಜಿಲ್ಲೆಯ ಶಾಸಕರುಗಳು ಚರ್ಚಿಸಿ ಜಿಲ್ಲೆಯಲ್ಲಿ ಈ ಹಿಂದೆ ಏನಾಗಿತ್ತು, ಮುಂದೆ ಏನಾಗಬೇಕೆಂದು ಜಿಲ್ಲೆಯ ಅಭಿವೃದ್ದಿ ಕುರಿತು ಚರ್ಚೆ ಮಾಡಿ ಎಂದು ಸಲಹೆ ನೀಡಿದರು.

ಸ್ಮಾರ್ಟ್ ಸಿಟಿ ಕಾಮಗಾರಿ ಹಣ ಪಾವತಿ ತಡೆಯಿರಿ

ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು ಕೆಲವು ಕಡೆ ಅವೈಜ್ಞಾನಿಕವಾಗಿ ಮತ್ತು ಗುಣಮಟ್ಟದ ಕೊರತೆಯುಳ್ಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಈ ಕಾಮಗಾರಿಗಳನ್ನು ಪರಿಶೀಲಿಸುವವರೆಗೂ ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ತಡೆಹಿಡಿಯಲು ಸೂಚಿಸಿದ ಸಚಿವರು ಕೊಡಗನೂರು ಕೆರೆ ಕಳೆದ ಮುಂಗಾರಿನಲ್ಲಿ ಏರಿ ಕುಸಿದಿದ್ದು ಮೂರು ಭಾರಿ ಇದೇ ರೀತಿಯಾಗಿದೆ. ಆದರೆ ರಿಪೇರಿಗೆಂದು ಕೋಟ್ಯಾಂತರ ರೂ.ಗಳನ್ನು ವ್ಯಯ ಮಾಡಿದ್ದರೂ ಗುಣಮಟ್ಟದ ಕಾಮಗಾರಿ ಮಾಡಿಲ್ಲ, ಕೂಲಂಕುಷವಾಗಿ ಪರಿಶೀಲಿಸಲು ಜಿಲ್ಲಾಧಿಕಾರಿಗೆ ತಿಳಿಸಿದರು.

ಮಾಯಕೊಂಡ ಕ್ಷೇತ್ರದ ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ ಇಂದಿರಾ ಕ್ಯಾಂಟಿನ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಇಎಸ್‍ಐ, ಪಿ.ಎಫ್ ಪಾವತಿಸಿಲ್ಲ, ಸಂಬಂಧಿಸಿದ ಏಜೆನ್ಸಿಯವರು ಪಾವತಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.

ಹೊನ್ನಾಳಿ ಶಾಸಕರಾದ ಜಿ.ಡಿ.ಶಾಂತನಗೌಡ ರವರು ಹೊನ್ನಾಳಿಯಲ್ಲಿ ಇಂದಿರಾ ಕ್ಯಾಂಟಿನ್ ಆರಂಭವಾಗಿಲ್ಲ, ಆರಂಭಿಸಲು ಕ್ರಮ ಕೈಗೊಳ್ಳಲು ಮತ್ತು ನೆರೆ ಹಾವಳಿಯಿಂದ ಮನೆ ಬಿದ್ದವರನ್ನು ಸರಿಯಾಗಿ ಗುರುತಿಸದೇ ಕೈಬಿಡಲಾಗಿದ್ದು ಪರಿಶೀಲಿಸಿ ಪರಿಹಾರ ಒದಗಿಸಲು ಮನವಿ ಮಾಡಿದರು.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಜಿಲ್ಲೆಯ ಅಂಕಿ ಅಂಶಗಳ ಕುರಿತು ಸವಿವರವಾದ ಮಾಹಿತಿ ಪ್ರಸ್ತುತಪಡಿಸಿದರು.
ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್, ಚನ್ನಗಿರಿ ಶಾಸಕರಾದ ಬಸವರಾಜ ವಿ.ಶಿವಗಂಗ, ಜಗಳೂರು ಶಾಸಕರಾದ ಡಿ.ದೇವೇಂದ್ರಪ್ಪ, ಹರಿಹರ ಶಾಸಕರಾದ ಬಿ.ಪಿ.ಹರೀಶ್, ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ್, ಮೇಯರ್ ವಿನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಡಾ; ಅರುಣ್.ಕೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಅವರ ಕಲ್ಯಾಣಕ್ಕೆ ತಮ್ಮ ಸರ್ಕಾರ ಬಜೆಟ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಹಣ ನಿಗದಿಮಾಡಿತ್ತು ಎಂದರು.

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ನಿವಾರಣೆಯಾಗದ ಹೊರತು, ಸಮಾನತೆ ಬರುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ರಾಜಾನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಜಗದ್ಗುರು ಪ್ರಸನ್ನಾನಂದಪುರಿ, ಸಚಿವರಾದ ಸತೀಶ್ ಜಾರಕಿಹೊಳ್ಳಿ, ಕೆ.ಎನ್. ರಾಜಣ್ಣ, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್ ಮೊದಲಾದವರು ಹಾಜರಿದ್ದರು.

ವಾಲ್ಮೀಕಿ ಪ್ರಶಸ್ತಿ

ಜಾನುವಾರು ರಕ್ಷಣೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಗ್ರಾಮೀಣ ಸೊಗಡನ್ನು ಉಳಿಸಿ, ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಿದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಅವಿರತ ಹೋರಾಟ ಮಾಡಿದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಡಾ. ಎಸ್. ರತ್ನಮ್ಮ, ಬೆಳಗಾವಿಯ ರಾಜಶೇಖರ ತಳವಾರ, ಬೆಂಗಳೂರು ಮೂಲದ ಕೆ.ಎಸ್. ಮೃತ್ಯುಂಜಯ,ವಿಜಯನಗರ ಜಿಲ್ಲೆಯ ರತ್ಮಮ್ಮ ಬಿ. ಸೋಗಿ ಅವರಿಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಪ್ರಶಸ್ತಿ, 20 ಗ್ರಾಂ ಬಂಗಾರದ ಪದಕ ಹಾಗೂ 5 ಲಕ್ಷ ರೂಪಾಯಿ ನಗದು ಒಳಗೊಂಡಿದೆ.

ರಾಜ್ಯದಲ್ಲಿ ವಾಲ್ಮೀಕಿ ಜಯಂತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಮಾತನಾಡಿ, ಬದುಕಿನ ಮೌಲ್ಯಗಳನ್ನು ಬಿಂಬಿಸುವ ರಾಮಾಯಣ ಕಾವ್ಯ ರಚಿಸಿದ ವಾಲ್ಮೀಕಿ ಮಹರ್ಷಿ ಸದಾ ಸ್ಮರಣೀಯರಾಗಿದ್ದಾರೆ ಎಂದರು.

ದೊಡ್ಡಬಳ್ಳಾಪುರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಮಹರ್ಷಿಗಳ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸಂದೇಶವನ್ನು ಅರಿಯಬೇಕಿದೆ ಎಂದರು.

ಹಾಸನದಲ್ಲಿಂದು ಆಯೋಜಿಸಲಾಗಿದ್ದ ಆಕರ್ಷಕ ಮೆರವಣಿಗೆಗೆ ಶಾಸಕ ಸ್ವರೂಪ ಪ್ರಕಾಶ್ ಚಾಲನೆ ನೀಡಿದರು. ಬಳಿಕ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು.
ಕೋಲಾರದಲ್ಲಿ ಶಾಸಕ ಕೊತ್ತೂರು ಜಿ. ಮಂಜುನಾಥ್ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ನಂತರ ಡೊಳ್ಳು ಹೊಡೆಯುವ ಮೂಲಕ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಿದರು.

ಚಿತ್ರದುರ್ಗದಲ್ಲಿ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ನಡೆಯಿತು. ಹಾವೇರಿಯಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ್ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಪು ನಮನ ಸಲ್ಲಿಸಿದರು.

ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಸಚಿವ ಪ್ರೋಫೆಸರ್ ಸುರೇಶ್ ನಾಡಗೌಡ ಮಾತನಾಡಿ, ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರವಾರದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ರಾಮಾಯಣದಲ್ಲಿ ಪರಿಸರಕ್ಕೆ ಮಹತ್ವ ನೀಡಿದ್ದು, ಅದರಂತೆಯೇ ಉತ್ತರಕನ್ನಡ ಜಿಲ್ಲೆಯಲ್ಲಿನ ವನ್ಯ ಸಂಪತನ್ನು ಕಾಪಾಡಲು ಜನತೆ ಕಾಳಜಿ ತೋರಬೇಕು ಎಂದು ಹೇಳಿದರು.
ಬೆಳಗಾವಿಯಲ್ಲೂ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಜಯಂತಿ ಆಚರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.

ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ ಶೋಭಾ ಯಾತ್ರೆ ಮೆರವಣಿಗೆಗಳನ್ನು ಹಮ್ಮಿಕೊಳ್ಳಲಾಗಿದೆ.

ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರ್ನಾಟಕ ಸರ್ಕಾರ 2024 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಿಸಿದೆ.

ಜಾನುವಾರುಗಳ ಸಂತತಿಯ ಸಂರಕ್ಷಣೆಯಲ್ಲಿ ತೊಡಗಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಿಲಾರಿ ಜೋಗಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣದ ಹೋರಾಟಗಾರ್ತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಡಾ.ರತ್ನಮ್ಮ.ಎಸ್, ಗುಡ್ಡಗಾಡು ಪ್ರದೇಶದಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿರುವ ಬೆಳಗಾವಿಯ ಗಾಂಧಿನಗರದ ರಾಜಶೇಖರ ತಳವಾರ, ಪರಿಶಿಷ್ಟ ಪಂಗಡ ಸಮುದಾಯದ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿ ಕುರಿತು ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಬೆಂಗಳೂರು ನಿವಾಸಿಯಾದ ಕೆ.ಎಸ್.ಮೃತ್ಯುಂಜಯ, ರಂಗಭೂಮಿ ಕಲಾವಿದೆಯಾದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯವರಾದ ರತ್ನಮ್ಮ ಬಿ ಸೋಗಿ ಅವರಿಗೆ ಈ ಸಾಲಿನ ಪ್ರಶಸ್ತಿಗಳನ್ನು ಇಂದು ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Published

on

ಸುದ್ದಿದಿನಡೆಸ್ಕ್:ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಸೂಚಿಸಿದ್ದಾರೆ.

ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89 ಕೋಟಿ 63 ಲಕ್ಷ ರೂಪಾಯಿಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂಪಾಯಿಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84 ಕೋಟಿ 63 ಲಕ್ಷ ರೂಪಾಯಿಗಳಲ್ಲಿ 71 ಕೋಟಿ 54 ಲಕ್ಷ ರೂಪಾಯಿಗಳನ್ನು ವಸೂಲು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending