ಲೈಫ್ ಸ್ಟೈಲ್
ಕಾಯಕಯೋಗಿ ನುಲಿಯ ಚಂದಯ್ಯನವರ ಸ್ಮರಣೋತ್ಸವ
- ಡಾ.ಗೀತಾಬಸವರಾಜು,ಉಪನ್ಯಾಸಕರು,ಎ.ವಿ.ಕೆ.ಕಾಲೇಜು, ದಾವಣಗೆರೆ
(ಕಾಯಕವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ಕರ್ತವ್ಯ ಪ್ರಜ್ಞೆ ಸಾರಿ ಕಾಯಕ ದಾಸೋಹದ ಮೂಲಕ ಮನುಕುಲಕ್ಕೆ ಬೆಳಕು ನೀಡಿದ ಮಹಾ ಶಿವಶರಣ ನುಲಿಯ ಚಂದಯ್ಯನವರ ಸ್ಮರಣೋತ್ಸವ ಜೂನ್ 29 ರಂದು ನಡೆಯಲಿದೆ ತನ್ನಿಮಿತ್ತ ಈ ಲೇಖನ)
ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ತವರೂರು. ಇಲ್ಲಿ ವಿವಿಧ ಧರ್ಮ , ಜಾತಿಯವರು ನೆಲೆಸಿದ್ದು, ಅನೇಕತೆಯಲ್ಲಿ ಏಕತೆಯನ್ನು ರೂಢಿಸಿಕೊಂಡು ಪ್ರೀತಿ, ದಯೆ, ಕರುಣೆ, ಸಹನೆ, ನಂಬಿಕೆ, ಭಾವೈಕ್ಯತೆ ಮುಂತಾದ ಮಾನವೀಯ ಸಂಬಂಧಗಳೊಂದಿಗೆ ಬದುಕುತ್ತಿದ್ದಾರೆ.
ಬಲ್ಲವನೆ ಬಲ್ಲ ಬೆಲ್ಲದ ಸವಿಯ ಎಂಬ ನುಡಿಯಂತೆ 12 ನೇ ಶತಮಾನ ಸರ್ವರಿಗೂ ಸಿಹಿಯನ್ನು ಉಣಬಡಿಸಿದ ಕಾಲ. ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿ ಸಮಾಜದಲ್ಲಿ ಸಾಮರಸ್ಯ ಮೂಡಿಸಿದವರು ವಚನಕಾರರು. ವಿಶ್ವಗುರು ಬಸವೇಶ್ವರರ ಅನುಭವ ಮಂಟಪದ ಅನೇಕ ಕಾಯಕ ಮಣಿಗಳಲ್ಲಿ ಚಂದಯ್ಯನವರ ಹೆಸರು ಸ್ಮರಣೀಯ.
ಆರ್.ನುಲೇನೂರು ವಚನಕಾರ ನುಲಿಯ ಚಂದಯ್ಯ ಲಿಂಗೈಕ್ಯರಾದ ಪುಣ್ಯಭೂಮಿ. ಶಿವಶರಣ ಚಂದಯ್ಯನವರು ಇಲ್ಲಿ ನೆಲೆಸಿದ್ದರಿಂದ ಮತ್ತು ಹಗ್ಗ ನುಲಿಯುವ (ಹೊಸೆಯುವ) ಕಾಯಕ ಮಾಡುತ್ತಿದ್ದುದರಿಂದ ನುಲಿಯಯ್ಯನೂರು, ನುಲಿಯನೂರು, ನುಲೇನೂರು ಎಂಬ ಹೆಸರು ಬಂದಿದೆ. ರಾಮಗಿರಿ ಸಮೀಪವಿರುವುದರಿಂದ ಆರ್ ನುಲೇನೂರು ಎಂದು ಕರೆಯಲಾಗುತ್ತದೆ. ಕಾಯಕವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ಕರ್ತವ್ಯ ಪ್ರಜ್ಞೆ ಸಾರಿದ ಚಂದಯ್ಯನವರು ಕಾಯಕ ದಾಸೋಹದ ಮೂಲಕ ಮನುಕುಲಕ್ಕೆ ಬೆಳಕು ನೀಡಿದ ಮಹಾ ಶಿವಶರಣ.
“ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುರುಹು ಹರಿವುದು
ಜಂಗಮವಾದರೂ ಕಾಯಕದಿಂದಲೇ ತನ್ನ ವೇಷದ ಪಾಶ ಹರಿವುದು
ಗುರುವಾದರೂ ಚರಸೇವೆಯ ಮಾಡಬೇಕು
ಲಿಂಗವಾದರೂ ಚರಸೇವೆಯ ಮಾಡಬೇಕು
ಜಂಗಮವಾದರೂ ಚರಸೇವೆಯ ಮಾಡಬೇಕು
ಇದು ಚಂದೇಶ್ವರ ಲಿಂಗದರಿವು ಕೇಳಾ ಪ್ರಭುವೇ”
ನುಲಿಯ ಚಂದಯ್ಯನವರ ಇದೊಂದು ವಚನ ಕಾಯಕದ ಮಹತ್ವವನ್ನು ತಿಳಿಸುತ್ತದೆ.
ವಿಜಯಪುರ ಜಿಲ್ಲೆಯ ಶಿವಣಗಿ ಎಂಬ ಗ್ರಾಮದಲ್ಲಿ ಜನಿಸಿದ ಚಂದಯ್ಯನವರು ಹೊಡಕೆ ಹುಲ್ಲನ್ನು ತಂದು ಹಗ್ಗ ಹೊಸೆಯುವ ಕಾಯಕವನ್ನು ನಡೆಸಿ ಅದರಿಂದ ಬಂದ ಹಣವನ್ನು ಗುರು – ಲಿಂಗ – ಜಂಗಮಕ್ಕೆ ಅರ್ಪಿಸುತ್ತಿದ್ದರು. ಕಾಯಕ ಭಾವ ಶುದ್ಧವಾಗಿರಬೇಕು. ಜಂಗಮ ದಾಸೋಹವು ನಿಜವಾದ ಶಿವಪೂಜೆ ಎನ್ನುವುದು ಅವರ ನಿಲುವಾಗಿತ್ತು.
ಕಲ್ಯಾಣದಲ್ಲಿ ಕ್ರಾಂತಿಯಾದಾಗ ನುಲಿಯ ಚಂದಯ್ಯನವರು ಉಳವಿ, ಶಿವಮೊಗ್ಗ, ಎಣ್ಣೆಹೊಳೆ, ನಂದಿಗ್ರಾಮ, ಶಾಂತಿಸಾಗರ, ಬೆಂಕಿಕೆರೆ ಮೂಲಕ ದುಮ್ಮಿಗೆ ಬಂದು ನೆಲೆಸುತ್ತಾರೆ. ಅಲ್ಲಿನ ಪಾಳೆಗಾರ ದುಮ್ಮಣ್ಣನಾಯಕನ ಪರಿಚಯವಾಗುತ್ತದೆ. ನಾಯಕನ ರಾಣಿ ಪದ್ಮಾವತಿ ಚಂದಯ್ಯನ ವಿಚಾರಧಾರೆಗಳಿಗೆ ಮನ:ಪರಿವರ್ತಿತಳಾಗಿ ಲಿಂಗವಂತ ಧರ್ಮದ ದೀಕ್ಷೆಯನ್ನು ಪಡೆದು ಅರಮನೆಯಲ್ಲಿ ಆಶ್ರಯವನ್ನು ನೀಡುತ್ತಾಳೆ.
ಅರಮನೆಯ ವಾತಾವರಣ ಶರಣ ಸಂಸ್ಕೃತಿಗೆ ಹೊಂದಿಕೆಯಾಗದ ಕಾರಣ ಪದ್ಮಾವತಿಯು ತನ್ನ ತವರೂರಾದ ಆರ್.ನುಲೇನೂರಿಗೆ(ಪದ್ಮಾವತಿ ಪಟ್ಟಣ)ಆಹ್ವಾನಿಸುತ್ತಾಳೆ. ನಂತರ ಅಲ್ಲೊಂದು ಶಿಲಾಮಂಟಪ ನಿರ್ಮಿಸಿ ನಿತ್ಯಕಾಯಕ ದಾಸೋಹಕ್ಕೆ ಹಾಗೂ ಅನುಭಾವ ಗೋಷ್ಠಿ ನಡೆಸಲು ಅವಕಾಶ ಕಲ್ಪಿಸುತ್ತಾಳೆ. ಚಂದಯ್ಯನವರು ಬದುಕಿನ ಕೊನೆಯವರೆಗೆ ಇದೇ ಗ್ರಾಮದಲ್ಲಿ ನೆಲೆಸಿದ್ದು ತಮ್ಮ ಇಷ್ಟಲಿಂಗ ಚಂದೇಶ್ವರ ಲಿಂಗದಲ್ಲಿ ಒಂದಾದರು ಎಂದು ಪ್ರತೀತಿ ಇದೆ.
ಚಂದಯ್ಯನವರ ಬಗ್ಗೆ ಅನೇಕ ಕಥೆಗಳು ಪ್ರಚಲಿತದಲ್ಲಿವೆ. ಒಮ್ಮೆ ಹೊಡಕೆ ಹುಲ್ಲು ಕೊಯ್ಯುವಾಗ ಚಂದಯ್ಯನವರ ಕೊರಳಲ್ಲಿದ್ದ ಇಷ್ಟಲಿಂಗವು ಜಾರಿ ನೀರಲ್ಲಿ ಬಿದ್ದಿತು. ಲಿಂಗವನ್ನು ಲೆಕ್ಕಿಸದೆ ಅವರು ಹಾಗೆ ಹೊರಟುಬಿಟ್ಟರು. ಲಿಂಗವು ತನ್ನನ್ನು ಸ್ವೀಕರಿಸಬೇಕೆಂದು ಅಂಗಲಾಚಿ ಕೇಳಿಕೊಂಡರೂ ಅದನ್ನು ಗಮನಿಸದೆ, ನನಗೆ ನಿನಗಿಂತ ಜಂಗಮಾರಾಧನೆ ಮುಖ್ಯ ಎಂದು ಹೇಳಿ ಕಾಯಕದಲ್ಲಿ ನಿರತರಾದರು. ಕೊನೆಗೆ ಮಡಿವಾಳ ಮಾಚಯ್ಯನವರ ಸಂಧಾನದಿಂದ ಲಿಂಗವನ್ನು ಸ್ವೀಕರಿಸಿದರು. ಇವರ ಕಾಯಕ ಪ್ರಜ್ಞೆ ಎಷ್ಟಿತ್ತು ಎಂಬುದಕ್ಕೆ ಈ ಘಟನೆ ನಿದರ್ಶನ.
ಒಮ್ಮೆ ಕೆರೆಯ ನೀರನ್ನು ಬಳಸುವ ವಿಷಯದಲ್ಲಿ ಗ್ರಾಮದ ಕೆಲವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಚಂದಯ್ಯ ಕೆರೆಯ ದಡದ ಬಳಿ ಬೆತ್ತದಿಂದ ನೆಲ ಮುಟ್ಟಿದಾಗ ಬಾವಿ ಸೃಷ್ಠಿಯಾಗಿ ನೀರು ಉಕ್ಕಿತು. ಇದೇ ಬಾವಿಯ ನೀರನ್ನು ಪೂಜಾಕಾರ್ಯಗಳಿಗೆ ಬಳಸುತ್ತಿದ್ದರು. ಇಂದಿಗೂ ಕೆರೆಯ ಪಕ್ಕದಲ್ಲಿ ಈ ಬಾವಿಯಿದ್ದು ಚಂದಯ್ಯನ ಬಾವಿ ಎಂದೇ ಪ್ರಸಿದ್ದಿಯಾಗಿದೆ.
ಕಾಯಕವು ಅಂತರಂಗ ಬಹಿರಂಗ ಶುದ್ಧಿಗೆ ಸೋಪಾನ. ಕಾಯಕವು ನಮ್ಮ ನಿತ್ಯಬದುಕಿನಲ್ಲಿ ನಿತ್ಯ ಕಾಯದ ಮೂಲಕವಾಗಿ ನಡೆಯುವ ಧ್ಯಾನ. ಶರಣರ ಕಾಯಕದಲ್ಲಿ ಕೇವಲ ಧನಕ್ಕೆ ಪ್ರಾಶಸ್ತ್ಯವಿರದೆ ಅದರ ಸತ್ಪಾತ್ರತೆಗೆ ಪ್ರಾಶಸ್ತ್ಯವಿತ್ತು. ಕಾಯಕದ ಉದ್ದೇಶ ಗುರು-ಲಿಂಗ-ಜಂಗಮ ದಾಸೋಹಕ್ಕೆ ಆದರೆ ತ್ರಿವಿಧ ದಾಸೋಹಕ್ಕೆ ನೈವೇದ್ಯವಾಗಬಲ್ಲ ದ್ರವ್ಯ ಪದಾರ್ಥ ‘ಸತ್ಯ ಶುದ್ಧ ಕಾಯಕದ ‘ ಪ್ರತಿನಿತ್ಯದ ದ್ರವ್ಯವೇ ಆಗಿರಬೇಕು ಎಂಬ ನಿಲುವು ಚಂದಯ್ಯನವರದು. ಸತ್ಯ ಶುದ್ಧ ಕಾಯಕದಲ್ಲಿ ನಿರತರಾಗಿ ಸಾರ್ಥಕ ಬದುಕನ್ನು ನಡೆಸಿದ ಕಾಯಕಯೋಗಿ ಚಂದಯ್ಯನವರು ಲಿಂಗೈಕ್ಯರಾದ ಸ್ಥಳವನ್ನು 1956ರಲ್ಲಿ ಜೀರ್ಣೋದ್ದಾರ ಮಾಡಲಾಗಿದೆ. ಪ್ರಾಚ್ಯವಸ್ತು ಪುರಾತತ್ವ ಇಲಾಖೆಯ ವತಿಯಿಂದ 38 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲಾಗಿದೆ.
ಜೂನ್ 29 ರಂದು ಪೂಜ್ಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಕಾಯಕಯೋಗಿ ಶರಣ ನುಲಿಯ ಚಂದಯ್ಯನವರ ಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಮಾಜದಲ್ಲಿದ್ದ ಅಂಧಕಾರ, ಮೂಢನಂಬಿಕೆ ಜಾತಿ ಬೇಧ ದೂರಮಾಡಿ ಸದ್ಬುದ್ಧಿ, ಸದಾಚಾರ, ಸಹಬಾಳ್ವೆ ಮುಂತಾದ ಮಾನವೀಯ ಗುಣಗಳನ್ನು ಬಿತ್ತಿ ಸಮಸಮಾಜ ನಿರ್ಮಿಸಿದ ಶರಣರ ದೃಷ್ಟಿಕೋನದಂತೆ ತಾಲೂಕು ಸಾಧು ವೀರಶೈವ ಸಂಘ(ರಿ) ಶ್ರೀ ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಹೊಳಲ್ಕೆರೆ.
ಸಮಸ್ತ ಗ್ರಾಮಸ್ಥರು ಆರ್.ನುಲೇನೂರು ಇವರ ಸಂಯುಕ್ತಾಶ್ರಯದಲ್ಲಿ ವರ್ಗ, ಲಿಂಗಬೇಧವಿಲ್ಲದೆ ಚಂದಯ್ಯನವರ ಸ್ಮರಣೋತ್ಸವ ಮತ್ತು ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕಾಯಕ ಯೋಗಿಗೆ ಗೌರವ ಸಲ್ಲಿಸಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




