ದಿನದ ಸುದ್ದಿ
ಕಾರ್ಯಕ್ಷಮತೆಗೆ ಕಿವಿ ಹಿಂಡಲೇಬೇಕೇ…
- ಡಾ ಜಿ. ಎನ್. ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ದಾವಣಗೆರೆ
ಸ್ಮಾರ್ಟ್ ಸಿಟಿ, ವಿದ್ಯಾನಗರಿ, ಎಂದು ಹೆಸರಾಗಿರುವ ಮಧ್ಯಕರ್ನಾಟಕದ ಮಹಾನಗರ ದಾವಣಗೆರೆ. ಇಲ್ಲಿ ವೃತ್ತಿಪರ ಮತ್ತು ಸಾಮಾನ್ಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಖಾಸಗೀ ಸಂಸ್ಥೆಗಳೇ ಹೆಚ್ಚು.
ಅಂತಹುದರಲ್ಲಿ ಕೆಲವು ವರ್ಷಗಳ ಹಿಂದೆ ಚಿಕ್ಕದಾಗಿ ಪ್ರಾರಂಭವಾದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಕೂಡ ಒಂದು. ಒಂದು ನೂರು ವಿದ್ಯಾರ್ಥಿಗಳಿಂದ ಆರಂಭವಾದ ಈ ಕಾಲೇಜಿನಲ್ಲಿ ಇವತ್ತು ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದು ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬಿ.ಎಮ್., ಬಿ.ಸಿ.ಎ., ಮೊದಲಾದ ಸ್ನಾತಕ ಪದವಿ ತರಗತಿಗಳು ಮತ್ತು ಎಂ.ಎ., ಎಂ.ಕಾಂ., ಎಂ.ಬಿ.ಎಗಳಂಥ ಸ್ನಾತಕೋತ್ತರ ತರಗತಿಗಳು ನಡೆಯುತ್ತಿವೆ. ಯಾತಕ್ಕೂ ಸಾಲದ ಕನಿಷ್ಠ ಮೂಲ ಸೌಲಭ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನ ಈ ಸಂಸ್ಥೆ ನೀಡುತ್ತಾ ಬಂದಿದೆ.
ಶೇ.70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಶಿಷ್ಠ ಜಾತಿ, ಪಂಗಡ ಮತ್ತು ಹೊಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿದ್ದು ಅರ್ಧದಷ್ಟು ವಿದ್ಯಾರ್ಥಿನಿಯರೇ ಇದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಈ ಕಾಲೇಜಿನಲ್ಲಿ ಸಂಜೆ ಮಹಾವಿದ್ಯಾಲಯವಿದ್ದು ಬಿ.ಎ. ಮತ್ತು ಬಿ.ಕಾಂ ತರಗತಿಗಳಲ್ಲಿ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುವ ಹಾಸ್ಟೆಲ್ಗಳಲ್ಲಿ ನಿಯಮಾವಳಿ ಪ್ರಕಾರ ಇವರಿಗೆ ಸೌಲಭ್ಯಗಳಿವೆ.
ಮೊನ್ನೆ ಆ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದ ಕ್ರೀಡಾ, ಸಾಂಸ್ಕೃತಿಕ, ರಾಷ್ಟ್ರೀಯ ಸೇವಾಯೋಜನೆ, ಎನ್.ಸಿ.ಸಿ, ಯುವ ರೆಡ್ ಕ್ರಾಸ್, ರೋವರ್ರ್ಸ್ ಮತ್ತು ರೇಂಜರ್ಸ್, ಮುಂತಾದ ಘಟಕಗಳ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕೆಲವು ವರ್ಷಗಳ ಹಿಂದೆ ನಾನಲ್ಲಿ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸಿದ್ದಕ್ಕೋ ಅಥವಾ ಆ ಎಲ್ಲ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಕಾರಣಕ್ಕೋ ನನ್ನನ್ನೂ ಅತಿಥಿಯಾಗಿ ಆಹ್ವಾನಿಸಿದ್ದರು.
ರಾಜ್ಯದ ಸಚಿವರೂ ಮತ್ತು ಆ ಕ್ಷೇತ್ರದ ಶಾಸಕರೂ ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಕಾರ್ಯನಿಮಿತ್ತ ಅವರಿಗೆ ಭಾಗವಹಿಸಲು ಸಾಧ್ಯವಾಗದ ಕಾರಣ, ಅದೇ ಕಾರ್ಯಕ್ರಮಕ್ಕೆ ಇನ್ನೋರ್ವ ಅತಿಥಿಯಾಗಿ ಆಗಮಿಸಿದ್ದ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಂತರ ಅದೇ ಸಂಜೆ ಮಹಾವಿದ್ಯಾಲಯದ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮಗೆ ವಿದ್ಯಾರ್ಥಿಗಳಿಗಿರುವಂತೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಶಿಫಾರಸು ಮಾಡುವಂತೆ ಕೋರಿ ಪ್ರಾಂಶುಪಾಲರ ಮೂಲಕ ಮನವಿ ಪತ್ರವೊಂದನ್ನು ಅವರಿಗೆ ಕೊಟ್ಟರು.
ಪ್ರಾಂಶುಪಾಲರನ್ನು ವಿಚಾರಿಸಲಾಗಿ, ಇಲಾಖೆಯ ಅಧಿಕಾರಿಗಳ ಪ್ರಕಾರ ವಿದ್ಯಾರ್ಥಿಗಳ ಹಾಸ್ಟೆಲ್ಗಳಲ್ಲಿ ರಾತ್ರಿ 09 ಗಂಟೆಯವರೆಗೆ ಒಳಗೆ ಬರುವ ಮತ್ತು ಊಟಮಾಡುವ ಅವಕಾಶವಿದ್ದು, ವಿದ್ಯಾರ್ಥಿನಿಯರ ಹಾಸ್ಟೆಲ್ಗಳಲ್ಲಿ ರಾತ್ರಿ 08ಕ್ಕೆ ಸಮಯ ಮುಗಿಯುತ್ತದೆ. ಕಾಲೇಜು ಮುಗಿಯುವ ಸಮಯ ರಾತ್ರಿ 08 ಗಂಟೆಗೆ. ಆ ಸಮಯದಲ್ಲಿ ವಿದ್ಯಾರ್ಥಿನಿಯರು ಕಾಲೇಜಿನಿಂದ ಹಾಸ್ಟೆಲ್ಗೆ ಬರಲು ಭದ್ರತಾ ಸಮಸ್ಯೆ ಇರುವ ಕಾರಣಕ್ಕೆ ಅವಕಾಶ ನೀಡಲಾಗಿಲ್ಲ ಎನ್ನುವುದು. ಕೇಳಿ ನಿಜಕ್ಕೂ ದಂಗು ಬಡಿದಂತಾಯಿತು.
ಮಹಿಳೆಯರು ರಾತ್ರಿ ನಿರ್ಭಯದಿಂದ ಓಡಾಡುವಂತಹ ಆಡಳಿತ ವ್ಯವಸ್ಥೆ ಇರಬೇಕು ಎಂದು ಕನಸಿದ ರಾಷ್ಟ್ರದಲ್ಲಿ, ಸಮಾನ ಅವಕಾಗಳು ಮೂಲಭೂತ ಹಕ್ಕಾಗಿರುವ ದೇಶದಲ್ಲಿ, ಪುಕ್ಕಟೆಯಾಗಿ ಮಹಿಳೆಯರು ರಸ್ತೆ ಸಾರಿಗೆ ಬಸ್ಸಿನಲ್ಲಿ ದಿನದ 24 ಗಂಟೆಗಳ ಕಾಲ ಓಡಾಡುವ ಸೌಲಭ್ಯವಿರುವ ರಾಜ್ಯದಲ್ಲಿ ಸಾಮಾನ್ಯ ಪದವಿಯೊಂದನ್ನು ಆರಸಿ ಹಗಲು ದುಡಿದು ಸಂಜೆ ಒಂದಷ್ಟು ತರಗತಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಸಲ್ಲದ ಕಾರಣದಿಂದ 3 ವರ್ಷಗಳಿಂದ ಹಾಸ್ಟೆಲ್ ಸೌಲಭ್ಯವನ್ನು ನಿರಾಕರಿಸಲಾಗಿದೆ ಎಂದರೆ ಏನೆನ್ನಬೇಕು?
ಪ್ರಾಥಮಿಕ ಶಿಕ್ಷಣದಿಂದ ಉನ್ನತಶಿಕ್ಷಣಕ್ಕೆ ಕಾಲಿರಿಸುವ ವಿದಾರ್ಥಿಗಳ ಅನಪಾತ(ಜಿಇಆರ್) ಇವತ್ತು ಶೇ. 26ರ ಆಸುಪಾಸು ಇದ್ದು ಅದನ್ನು ಮುಂದಿನ 2035ರ ಹೊತ್ತಿಗೆ ಶೇ.50ಕ್ಕೆ ತಲುಪಿಸಬೇಕೆಂಬುದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಉದ್ದೇಶ. ಇದರ ಒಂದು ಭಾಗವಾಗಿ ಹಿಂದಿನ ಸರ್ಕಾರ ರಾಜ್ಯದ ಎಲ್ಲ ಮಹಾ ನಗರಪಾಲಿಕೆಗಳಿರುವ ನಗರಗಳ ಸಾಮಾನ್ಯ ಪದವಿ ಕಾಲೇಜುಗಳಲ್ಲಿ ಸಂಜೆ ಮಹಾ ವಿದ್ಯಾಲಯಗಳನ್ನು ಆರಂಭಿಸಿತು.
ಆರ್ಥಿಕವಾಗಿ ಅನುಕೂಲವಿರದ ಪೋಷಕರ ಮಕ್ಕಳು ಹಗಲು ಅಂಗಡಿ ಮುಂಗಟ್ಟುಗಳಲ್ಲಿ ಕೆಲಸಮಾಡಿ ಸಂಜೆ ಪದವಿ ತರಗತಿಗಳಿಗೆ ಹಾಜರಾಗಿ ಪದವಿ ಪಡೆಯುವ ಮತ್ತು ಆ ಮೂಲಕ ಉತ್ತಮ ಬದುಕನ್ನು ಕಟ್ಟಿಕೊಳ್ಳುವ ಕನಸನ್ನು ನನಸು ಮಾಡಿಕೊಳ್ಳುವ ಅವಕಾಶ ಅವರದಾಯಿತು. ಲಭ್ಯ ಮಾಹಿತಿ ಪ್ರಕಾರ ಹಾಲಿ 09 ನಗರಗಳಲ್ಲಿ ಇಂಥ ವ್ಯವಸ್ಥೆ ಇದ್ದು ಸಾವಿರಾರು ಪದವಿ ಆಕಾಂಕ್ಷಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿ ಶೇ. 50ರಷ್ಟು ವಿದ್ಯಾರ್ಥಿನಿಯರಿದ್ದು ಅಂಥವರಲ್ಲಿ ದಾವಣಗೆರೆಯ ಸಂಜೆ ಮಹಾವಿದ್ಯಾಲಯದಲ್ಲಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯರೂ ಕೂಡ ಒಬ್ಬರು.
ಹೊಸ ಶಿಕ್ಷಣ ನೀತಿಯ ಪೂರ್ಣಾನುಷ್ಠಾನಕ್ಕೆ ಮುಂದಾದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ರಾಜ್ಯದಲ್ಲಿ, ಕ್ಲಬ್ಬು ಪಬ್ಬು, ಬಾರು, ರೆಸ್ಟೋರೆಂಟ್ಗಳಲ್ಲಿ ಹೆಣ್ಣು-ಗಂಡೆನ್ನದೆ ರಾತ್ರಿ 12ರವರೆಗೆ ಮೋಜು ಮಸ್ತಿಗೆ ಅವಕಾಶವಿರುವ ನಗರಗಳಲ್ಲಿ, ಈ ವಿದ್ಯಾರ್ಥಿನಿಯರಿಗೇಕೆ ಈ ದುಃಸ್ಥಿತಿ? ಹಾಸ್ಟೆಲ್ಗಳಿಂದಾಗಿ ಕಾಲೇಜುಗಳಿವೆಯೋ ಕಾಲೇಜುಗಳಿಗಾಗಿ ಹಾಸ್ಟೆಲುಗಳಿವೆಯೋ ತಿಳಿಯಲಾಗದಾಗಿದೆ. ಇದೇ ಪರಿಸ್ಥಿತಿ ಉಳಿದ 08 ನಗರಗಳಲ್ಲಿಯೂ ಇರಬಹುದೇನೋ. ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಚಾಟಿ ಬೀಸುವವರಾರು.
ಚಾಟಿ ಬೀಸಿ ಕೆಲಸ ಮಾಡಿಸುವುದೇ ಕಾರ್ಯಕ್ಷಮತೆಯೇ? ಹೀಗಾದರೆ ಓದಿದ ವಿದ್ಯೆಗೆ, ಪಡೆದ ಸರ್ಕಾರಿ ಹುದ್ದೆಗೆ ಸಂದ ಬೆಲೆಯೇನು? ಕೊನೇ ಪಕ್ಷ ತಮ್ಮ ಮಕ್ಕಳೇ ಈ ದುಃಸ್ಥಿತಿಗೊಳಗಾಗಿದ್ದಿದ್ದರೆ ಇವರಿಗೇನೆನ್ನಿಸುತ್ತಿತ್ತು? ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇಂಥ ವಿಪರ್ಯಾಸಗಳತ್ತ ಗಮನಕೊಡಬೇಕಿದೆ.
ಕಾಲೇಜಿನ ವೇಳಾಪಟ್ಟಿಯಲ್ಲಿ ಹೊಂದಾಣಿಕೆ ಮಾಡಿಯೋ, ರಜಾದಿನಗಳಂದು ತರಗತಿ ನಡೆಸಿಯೋ, ಕೊನೆಯ ಪಾಳಿಯಾಗಿ ರಾತ್ರಿ 09 ಗಂಟೆಗೆ ಕಾಲೇಜಿನಿಂದ ಹಾಸ್ಟೆಲ್ಗಳ ಮಾರ್ಗದಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ವ್ಯವಸ್ಥೆ ಮಾಡಿಯೋ ಈ ವಿದ್ಯಾರ್ಥಿನಿಯರಿಗೆ ಅನುಕೂಲ ಮಾಡಿಕೊಡಬೇಕಿದೆ. ಸಂವಿಧಾನದತ್ತ ಅವರ ಮೂಲಭೂತ ಹಕ್ಕುಗಳಿಗೆ ನ್ಯಾಯ ಒದಗಿಸಬೇಕಿದೆ.
–ಡಾ ಜಿ. ಎನ್. ಮಲ್ಲಿಕಾರ್ಜುನಪ್ಪ, ವಿಶ್ರಾಂತ ಗ್ರೇಡ್-1 ಪ್ರಾಂಶುಪಾಲರು, ಕಾಲೇಜು ಶಿಕ್ಷಣ ಇಲಾಖೆ.
ಮೊ: 9449077003
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ6 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

