Connect with us

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending