ದಿನದ ಸುದ್ದಿ
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/05/Runadagani_autobiography_part2_suddidina-1000x600.jpg&description=ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/05/Runadagani_autobiography_part2_suddidina-1000x600.jpg&description=ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ', 'pinterestShare', 'width=750,height=350'); return false;" title="Pin This Post">
- ರುದ್ರಪ್ಪ ಹನಗವಾಡಿ
ಅಪ್ಪ ಮೊದಲಿನಿಂದಲೂ ಎಲೆ ತೋಟ ಮಾಡಿಕೊಂಡು ಬರುತ್ತಿದ್ದ ಬಗ್ಗೆ ಆಗಲೇ ಬರೆದಿದ್ದೇನೆ. ಅದರಿಂದಲೇ ನಮ್ಮೆಲ್ಲರ ಜೀವನ ಕೊರತೆ ಕಾಣದಂತೆ ನಡೆಯುತ್ತಿತ್ತು. ನಮಗೆ ಸ್ವಂತ ತೋಟದ ಜಮೀನು ಇಲ್ಲದ್ದರಿಂದ ಕಪ್ಪಲಿ ಮಾಡಿ ಬೇರೆಯವರ ಜಮೀನನ್ನು ಕೋರಿಗೆ ಮಾಡುತ್ತಿದ್ದರು.
ಕರ್ನಾಟಕದಲ್ಲಿ ಈ ಪದ್ಧತಿ ಬೇರೆ ಬೇರೆ ಪ್ರದೇಶಗಳಲ್ಲಿ ವಿವಿಧ ರೀತಿಯಲ್ಲಿ ಜಾರಿಯಲ್ಲಿರುವುದನ್ನು ನೋಡುತ್ತೇವೆ. ಭೂಮಾಲೀಕನು ಮತ್ತು ಅದರಲ್ಲಿ ದುಡಿಯುವವ, ಬರುವ ಒಟ್ಟು ಆದಾಯದಲ್ಲಿ ಸಮನಾಗಿ ಹಂಚಿಕೊಳ್ಳುವ ವ್ಯವಸ್ಥೆ ಇರುತ್ತಿತ್ತು. ಹೀಗೆ ಕೋರಿಗೆ ಮಾಡಿಕೊಳ್ಳುತ್ತಿದ್ದ ಮಾಲೀಕ ಮತ್ತು ಶ್ರಮಿಕರಿಬ್ಬರಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ಅನ್ಯೋನ್ಯ ಸಂಬಂಧಗಳಿರುತ್ತಿದ್ದವು. ಹಬ್ಬ ಹರಿದಿನ, ಮದುವೆ ಮುಂಜಿಗಳಲ್ಲಿ, ಸಾವು ನೋವುಗಳಲ್ಲಿ ಬಂಧುಗಳಂತೆ ಒಬ್ಬರಿಗೊಬ್ಬರು ನೆರವಾಗುತ್ತಿದ್ದರು.
ಹೀಗೆ ಹೆಚ್ಚಿನ ಜಮೀನುಗಳು ಇದ್ದ ಮನೆತನದವರು ಕೋರಿಗೆ ನೀಡಿದ ಜನರೊಡನೆ ಅನೇಕ ತಲೆಮಾರುಗಳಿಂದ ಕೋರಿನ ವ್ಯವಸ್ಥೆಯಲ್ಲಿ ತೋಟ, ಹೊಲಗಳನ್ನು ಮಾಡಿಕೊಂಡು ಬರುತ್ತಿದ್ದರು. ಕೆಲವು ಭೂಮಾಲೀಕರು, ತೋಟದಲ್ಲಿ ದುಡಿಯುತ್ತಿದ್ದ ಕೋರಿನವರಿಗೆ ಬರುವ ಆದಾಯದಲ್ಲಿ ಸರಿಯಾಗಿ ಹಂಚಿಕೊಡದೆ ಮೋಸ ಕೂಡ ಮಾಡುತ್ತಿರುವ ವಿಚಾರಗಳನ್ನು ಕೂಡ ಊರಲ್ಲಿ ಜನರು ಅಲ್ಲಲ್ಲಿ ಮಾತಾಡಿಕೊಳ್ಳುತ್ತಿದ್ದರು. ಏಕೆಂದರೆ ಬೆಳೆದ ಎಲೆ ಪೆಂಡಿಗಳನ್ನು ಹುಬ್ಬಳ್ಳಿ, ಧಾರವಾಡ, ಹೊಸಪೇಟೆ, ಕಂಪ್ಲಿಗಳಿಗೆ ಭೂಮಾಲೀಕರುಗಳೇ ಮಾರಾಟ ಮಾಡಲು ಹೋಗುತ್ತಿದ್ದರು.
ಅಲ್ಲಿನ ದಲಾಲರು ಹರಾಜು ಹಾಕಿ ನೀಡಿದ ಪಟ್ಟಿಯನ್ನು ಕೋರಿನವರಿಗೆ ಸರಿಯಾಗಿ ತೋರಿಸದೆ ಮತ್ತು ಓದಲು ಬಾರದೆ ಇರುವ ಕೋರಿನವರಿಗೆ ಮೋಸ ಮಾಡುತ್ತಿದ್ದರು. ಆದರೆ ಅಪ್ಪ ಮಾಡಿಕೊಂಡು ಬರುತ್ತಿದ್ದ ಕೋರಿನ ತೋಟದ ಯಜಮಾನರುಗಳು ನಾನು ಚಿಕ್ಕಂದಿನಿಂದಲೂ ನೋಡಿದ ದೊಡ್ಡಮನಿ ಬಸಣ್ಣ, ಸಣ್ಣಮನಿ ರುದ್ರಜ್ಜ, ಬಣಕಾರ್ ನಾಗಪ್ಪ ಎಂಬ ಭೂಮಾಲೀಕರುಗಳು ಎಂದೂ ಆ ರೀತಿ ಮಾಡಿದವರಲ್ಲ.
ದೊಡ್ಡಮನಿ ಬಸಣ್ಣನದು ವರ್ಣರಂಜಿತ ವ್ಯಕ್ತಿತ್ವ. ಇವರ ಹಿಂದಿನ ವಂಶಕ್ಕೆ ಹೋದರೆ ಶಿವಪ್ಪಜ್ಜ ಎಂಬ ಹಿರಿಯ, ಅಪ್ಪನನ್ನು `ಹನುಮಂತು’ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ನಾನು 13-14ನೇ ವಯಸ್ಸಿನಲ್ಲಿ ಇದ್ದಾಗ ಅಪ್ಪನನ್ನು ಹಾಗೆ ಕರೆಯುತ್ತಿದ್ದವರನ್ನು ನಾನು ಎಲ್ಲೂ ಕೇಳಿರಲಿಲ್ಲ. ಶಿವಪ್ಪಜ್ಜನ ತಂಗಿಯಾಗಿದ್ದ ಸಿದ್ದಜ್ಜಿ ತನ್ನ ಗಂಡನ ಕಾಲಾನಂತರ ತವರು ಮನೆಗೆ ಬಂದು ಅಣ್ಣ ಶಿವಪ್ಪಜ್ಜನ ಮನೆಯಲ್ಲೇ ಇದ್ದು ತೋಟ ಮನೆಗಳಲ್ಲಿ ಎರಡಾಳಿನ ಕೆಲಸ ಮಾಡುತ್ತಿದ್ದರು. ಶಿವಪ್ಪಜ್ಜನ ಅಣ್ಣ ತಮ್ಮಂದಿರು ದೊಡ್ಡ ಮನೆತನ ಮತ್ತು ದೊಡ್ಡ ನಡವಳಿಕೆ ಕೂಡ.
ಊರಲ್ಲಿನ ದೇವರ ಕೆಲಸವಾಗಲೀ, ಮದುವೆ ಮುಂಜಿಗಳಲ್ಲಿ ಅವರಿಲ್ಲದೆ ನಡೆಯುತ್ತಿರಲಿಲ್ಲ. ಅದೇನೋ ಮಕ್ಕಳಾಗಲಿಲ್ಲ ಎಂದು ಒಂದೆರಡು ಮದುವೆಯಾಗಿ ಕೊನೆಯಲ್ಲಿ ಚಿಕ್ಕ ಹೆಂಡತಿಗೆ ಗಂಡು ಮಕ್ಕಳಾಗದೇ ಒಂದು ಹೆಣ್ಣು ಮಗಳಿದ್ದು, ಅವರು ನಮ್ಮ ದೊಡ್ಡಕ್ಕ ಕೊಟ್ರಕ್ಕನ ಸಹಪಾಠಿಯಾಗಿ ಶಾಲೆಗೆ ಹೋಗುತ್ತಿದ್ದುದನ್ನು ಅಕ್ಕ ಈಗಲೂ ನೆನಸಿಕೊಳ್ಳುತ್ತಾಳೆ. ಅಪ್ಪ ಇವರ ತೋಟ ಮಾಡುತ್ತಿದ್ದ ಸಮಯದಲ್ಲಿ ನಾನು ತೋಟಕ್ಕೆ ಬುತ್ತಿ ತೆಗೆದುಕೊಂಡು ಹೋಗುತ್ತಿದ್ದೆ. ಎಲ್ಲಾ ಒಟ್ಟಿಗೆ ಕೂತು ಉಣ್ಣುವಾಗ, ಶಿವಪ್ಪಜ್ಜ, ಸಿದ್ದಜ್ಜಿ ಅಪ್ಪನೊಡನೆ ಆತ್ಮೀಯರಾಗಿ ಮಾತಾಡುತ್ತಿದ್ದು ಅವರ ಮನೆತನದಲ್ಲಿನ ಬಂಗಾರದ ಹಂಚಿಕೆಯಲ್ಲಿ ಆಗಿರುವ ತಾರತಮ್ಯಗಳನ್ನು ಮಾತಾಡುತ್ತಿದ್ದರೆ ನಾನೂ ಕೇಳಿಸಿಕೊಳ್ಳುತ್ತಿದ್ದೆ. ಅಪ್ಪನ ಜೊತೆ ಶಿವಪ್ಪಜ್ಜ, ಸಿದ್ದಜ್ಜಿ ಅವರ ಸಂಬಂಧಗಳು ತುಂಬಾ ಆತ್ಮೀಯವಾಗಿರುತ್ತಿದ್ದವು. ಇಂತಹ ಮನೆತನದ ಕುಡಿಯಾಗಿದ್ದ ಬಸಣ್ಣ ಚಿಕ್ಕ ವಯಸ್ಸಿನವರಾಗಿದ್ದು ಅವರ ಪಾಲಿನ ತೋಟದಲ್ಲಿ ಅಪ್ಪ ಕೋರಿಗೆ ಮಾಡುತ್ತಿದ್ದ.
ಅಪ್ಪನನ್ನು ಆತ ಅಣ್ಣಾ ಎಂದು ಯಾವಾಗಲೂ ಕೂಗಿ ಕರೆಯುತ್ತಿದ್ದ. ಎಂದೂ ಏಕವಚನದಲ್ಲಿ ಮಾತಾಡಿದ್ದು ನಾನು ಕೇಳಿರಲಿಲ್ಲ. ಮತ್ತು ಬೆಳೆದ ಬೆಲೆಯಲ್ಲಿ ಸಮಾನ ಹಂಚಿಕೆಯಲ್ಲೂ ಏನೂ ಮೋಸ ಇರುತ್ತಿರಲಿಲ್ಲ. ಆದರೆ ಆತ ಹೊಸ ತಲೆಮಾರಿನ ಶೋಕಿಗೆ ಮಾರುಹೋಗಿದ್ದ. ಊರಿನಲ್ಲಿ ಮೊದಲು ರ್ಯಾಲಿ ಬೈಸಿಕಲ್ ನಂತರ ಸೈಕಲ್ ಮೋಟಾರ್ ತಂದು ಓಡಾಡಿಸಿದ! ಲಿಂಗಾಯತರಲ್ಲಿ ನಿಷಿದ್ಧವಾದ ಕುಡಿತ ಮತ್ತು ಮಾಂಸಾಹಾರವನ್ನು ಯಥೇಚ್ಛವಾಗಿ ಸೇವಿಸುತ್ತಿದ್ದ. ಅದಕ್ಕಾಗಿ ಯಾರಿಗೂ ಕೇರ್ ಮಾಡುತ್ತಿರಲಿಲ್ಲ. ಆದರೂ ಅವರಿವರು ಅವನ ಹಿಂದು ಮುಂದೆ ಮಾತಾಡಿಕೊಳ್ಳುವುದನ್ನು ಬಾಲಕನಾಗಿದ್ದ ನಾನು ಕೇಳಿಸಿಕೊಳ್ಳುತ್ತಿದ್ದೆ. ಯಾವಾಗಲಾದರೂ ನಮ್ಮ ಮನೆ ಕಡೆಗೆ ಬಂದಾಗ ಹೊರಕಟ್ಟೆಯಲ್ಲಿ ಕೂತು ಅವನ ಮೂಗಿಗೆ ಮಾಂಸದ ಸಾರಿನದೋ, ಕೋಳಿ ಸಾರಿನದೋ ಘಂ ವಾಸನೆ ಬಡಿದರೆ, ಎದ್ದು ಹೋಗದೆ ತಡರಾತ್ರಿವರೆಗೆ ಕೂತು ಅಪ್ಪನೊಟ್ಟಿಗೆ ಪಾರ್ಟಿ ಮಾಡಿಕೊಂಡು ಹೋಗುತ್ತಿದ್ದ.
ಹೀಗಿದ್ದ ಬಸಣ್ಣನಿಗೆ ಊರಲ್ಲಿದ್ದ ಸುಂದರಿಯೊಬ್ಬಳ ಸಹವಾಸವಾಗಿ ಆಕೆ ನಾವು ಮಾಡುತ್ತಿದ್ದ ಕೋರಿನ ತೋಟಕ್ಕೆ ಬರುತ್ತಿದ್ದಳು. ಅದ್ಯಾವ ವಿಷಯದಲ್ಲಿ ವಿವಾದವಾಯಿತೋ ಅಪ್ಪ ಬೆಳೆದು ನಿಂತಿದ್ದ ತೋಟವನ್ನು ನಿಂತ ಕಾಲಲ್ಲಿ ಬಿಟ್ಟು ಹೊರ ಬಂದು, ಬಣಕಾರ ನಾಗಪ್ಪ ಎನ್ನುವವರ ಬೇರೊಂದು ಕೋರಿನ ತೋಟವನ್ನು ಹಿಡಿದಿದ್ದ. ಇಲ್ಲಿ ಕಪ್ಪಲಿಯನ್ನು ಹೂಡಿ ನೀರು ಹಾಯಿಸುವುದು, ಅದರಿಂದ ಶ್ರಮ ಜಾಸ್ತಿಯಾಗಿರುತ್ತಿತ್ತೇ ಹೊರತು ಆದಾಯದಲ್ಲಿ ಅಂತಹದೇನೂ ಹೆಚ್ಚುವರಿ ಕಾಣುತ್ತಿರಲಿಲ್ಲ. ಆಗ ನಾನು ನೀರು ಹಾಯಿಸುವ, ಎಲೆ ಕೊಯ್ಯುವ, ಬಳ್ಳಿಯನ್ನು ಬೆಳೆದ ಮುಂಡಗಳಿಗೆ ಕಟ್ಟುವ ಕೆಲಸವನ್ನು ಅಪ್ಪ, ಅಣ್ಣನ ಜೊತೆ ಸೇರಿ ಮಾಡುತ್ತಿದ್ದೆ. ಆಗ ಏಳನೆ ತರಗತಿ ಪಾಸುಮಾಡಿ ಸಾಗರದಲ್ಲಿ ಹೈಸ್ಕೂಲಿಗೆ ಸೇರಿದ್ದೆ. ಕೋರಿನ ತೋಟದ ಮಾಲೀಕರಾಗಿದ್ದ ಬಣಕಾರ್ ನಾಗಪ್ಪ ಅವರ ಮಗ ಜಯಣ್ಣ ನನ್ನ ಕಿರಿಯ ಸಹಪಾಠಿಯಾಗಿ ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದ.
ನಾಗಪ್ಪಜ್ಜನೂ ದೊಡ್ಡ ಮನುಷ್ಯ. ಆಸೆಯವನಾಗಿರಲಿಲ್ಲ. ಬಂದ ಹಣವನ್ನು ಸರಿಯಾಗಿ ಹಂಚಿ ಕೊಡುತ್ತಿದ್ದ. ಅವರ ಮನೆಯವರೆಲ್ಲ ಇಂದಿಗೂ ಅದೇ ಆತ್ಮೀಯತೆಯನ್ನು ತೋರುವ ಬಂಧುಗಳಾಗಿದ್ದಾರೆ. ನಾಗಜ್ಜನ ಹೆಂಡತಿ ಗಿರಿಜಕ್ಕ, ತಾಯಿ ಹೃದಯದವರು. ನಾನು ಯಾವುದೇ ಕೆಲಸಕ್ಕೆ ಅವರ ಮನೆಗೆ ಹೋದಾಗ ರೊಟ್ಟಿ ಉಣ್ಣೆಂದು ಜುಲುಮೆ ಮಾಡಿ ಉಣಿಸುತ್ತಿದ್ದರು. ಅದೇಕೋ ಕಪ್ಪಲಿಯಿಂದ ದುಡಿಮೆ ಉಚಾಯಿಸದ ಕಾರಣ ಅಪ್ಪ ಬೇರೊಬ್ಬ ಭೂಮಾಲೀಕರಾದ ಸಣ್ಣಮನಿ ರುದ್ರಜ್ಜ, ಹಾಲಸಿದ್ದಪ್ಪ ಎಂಬುವರು ಹರಾಜಿನಲ್ಲಿ ಎಂಟು ವರ್ಷಗಳಿಗೆ ಹಣ ಗುತ್ತಿಗೆ ಪಡೆದ ಊರ ದೇವರ ಜಮೀನನ್ನು, ಕೋರಿಗೆ ಮಾಡಲು ಅಪ್ಪ ತೀರ್ಮಾನಿಸಿದ್ದರು.
ಅದೇನು ಅದೃಷ್ಟವೋ ಎಂಬಂತೆ ತೋಟವೊಂದು ನಂದನವನದಂತೆ ಬೆಳೆದು ಸಾಕಷ್ಟು ಆದಾಯ ಬರುತ್ತಿತ್ತು. ಈ ಸಂದರ್ಭದಲ್ಲಿಯೇ ಅಪ್ಪ ಇಡೀ ಉತ್ಪನ್ನವನ್ನು ನಾಲ್ಕು ಸಾವಿರ ರೂಪಾಯಿಗಳಿಗೆ ಗುತ್ತಿಗೆಗೆ ಒಪ್ಪಿಕೊಂಡು 100 ರೂಗಳಿಗೆ ಏಳೂವರೆ ಪೆಂಡಿಯಂತೆ ಎಲೆ ಪೆಂಡಿ ನೀಡಬೇಕಾಗಿದ್ದ ಕರಾರಿಗೆ ಒಪ್ಪಿ ಕೊಟ್ಟಿದ್ದರು.
ಈ ರೀತಿ ಎಲೆ ಕೊಯ್ದುಕೊಂಡು ಹೋಗುತ್ತಿದ್ದ ಕೇಣಿದಾರರು ಉಳಿಯುತ್ತಿದ್ದ ಅರ್ಧ ಅಥವಾ ಕಾಲು ಪೆಂಡಿಯ ಎಲೆಯನ್ನು ತೆಗೆದುಕೊಳ್ಳದೆ ತೋಟದವರಿಗೆ ಬಿಟ್ಟುಬಿಡುತ್ತಿದ್ದರು. ಅದನ್ನು ಸಾಮಾನ್ಯವಾಗಿ ಕೋರಿಗೆ ಮಾಡಿದವರೇ ಕೊಯ್ದುಕೊಂಡು ಮಾರಿ ಕೊಳ್ಳುತ್ತಿದ್ದರು. ಅದು ತೋಟದ ಮಾಲೀಕನಿಗೆ ಗೊತ್ತಿದ್ದರೂ ಸಾಮಾನ್ಯವಾಗಿ ಕೇಳುತ್ತಿರಲಿಲ್ಲ.ಇಂತಹದೊಂದು ಎಲೆ ಕೊಯ್ಯುವ ಸಮಯದಲ್ಲಿ ಕರಾರುದಾರನಿಗೆ ಕೊಟ್ಟು ಉಳಿದ ಸುಮಾರು ಕಾಲು ಪೆಂಡಿಯಷ್ಟು ಎಲೆ ಉಳಿದಿತ್ತು. ನಾನೇ ಕೊಯ್ದೆನೋ ನಮ್ಮ ಅಣ್ಣ ಹೇಳಿದನೋ ಅಪ್ಪನಿಗೆ ಗೊತ್ತಿಲ್ಲದಂತೆ ನಾನು ಬಂದು ಬೆಳಿಗ್ಗೇನೆ ಎಲೆ ಕೊಯ್ಯುತ್ತಿದ್ದೆ. ಆಗ ಒಳ್ಳೆಯ ರೇಟು ಬೇರೆ ಇದ್ದುದರಿಂದ ಮಾರಿದ ನಂತರ ಖರ್ಚಿಗೆ ದುಡ್ಡು ಸಿಗುವುದೆಂಬ ಯೋಚನೆಯಲ್ಲಿದ್ದೆ. ಆಗ ಬಹುಶಃ ನಾನು ಆಗಷ್ಟೇ ಹೈಸ್ಕೂಲಿಗೆ ಸೇರಿ ರಜೆಯಲ್ಲಿ ಊರಿಗೆ ಬಂದಿದ್ದೆ.
ನನ್ನ ಪಾಡಿಗೆ ನಾನು ಎಲೆ ಕೊಯ್ಯುವ ಸಮಯಕ್ಕೆ ಮಾಲೀಕ ರುದ್ರಪ್ಪಜ್ಜನ ತಮ್ಮ ಹಾಲಸಿದ್ದಪ್ಪ ಬಂದವನೇ ನಾನು ಎಲೆ ಕೊಯ್ಯುತ್ತಿರುವುದನ್ನ ನೋಡಿ, ಇದೇನು ಕಳ್ಳತನದಿಂದ ಎಲೆ ಕೊಯ್ಯುತ್ತಿಯಲ್ಲ ಎಂದು ಪ್ರಾರಂಭಿಸಿದವ ನಾನೊಂದು ಮಹಾಪರಾಧ ಮಾಡಿರುವುದಾಗಿ ಬೈಯುತ್ತಾ ನನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ಎಲೆ ಕೊಯ್ಯು ವುದನ್ನ ನಿಲ್ಲಿಸಿದ. ಆಗ ಅದೇನೇನೊ ಮಾತಾಡಿದವನೋ ನನಗಂತೂ ಸಹಿಸಿಕೊಳ್ಳಲಾಗದೆ ಅವಮಾನದಲ್ಲಿ ಕುಸಿದು ಹೋಗಿದ್ದೆ. ಬಡತನದ ಕ್ರೌರ್ಯವೆಂದರೆ ಏನೆಂಬುದನ್ನ ಅವನ ಬೈಗುಳಗಳಲ್ಲಿ ದಾಖಲಿಸುತ್ತಾ, ಕೊಯ್ದಿದ್ದ ಎಲೆ ಬುಟ್ಟಿಯನ್ನು ನನ್ನ ಮೇಲೆ ಹೊರಿಸಿಕೊಂಡು ಊರಲ್ಲಿ ಪಂಚಾಯ್ತಿ ಮಾಡಬೇಕೆಂದು ಉದ್ದಕ್ಕೂ ಬೈಯುತ್ತಾ ಊರ ವೀರಭದ್ರ ದೇವರ ಗುಡಿಗೆ ತಂದಿರಿಸಿದ್ದ.
ನಾನು ಅವಮಾನದಲ್ಲಿ ಕುಸಿದು ಹೋಗಿದ್ದೆ. ಅದ್ಯರ್ಯಾರು ಪಂಚಾಯ್ತಿ ಸೇರಿದ್ದಾರೋ ವಿವರ ಮರೆತು ಹೋಗಿದೆ. ನನ್ನ ಹೆಸರಿನವರೇ ಆಗಿದ್ದ ಬಣಕಾರ್ ರುದ್ರಜ್ಜ `ಇದೇನು ದೊಡ್ಡ ವಿಷ್ಯಾ ಅಂತ ಇಲ್ಲಿಗೆ ತಂದಿದಿಯಾ’ ಕೋರಿನ ತೋಟ ಮಾಡೋ ಹುಡುಗ, ಉಳಿದ ಎಲೆ ಕೊಯ್ಯತಾನ, ಅದೇನು ಅಪರಾಧನಾ ಎಂದು ಅವನಿಗೆ ಗದರಿಸಿದರು. ಕಡೆಗೆ `ಉಳಿದ ಎಲೆಯಲ್ಲೂ ಪಾಲು ಬೇಕಂತೆ ಕೊಡಪ್ಪ’ ಅವನಿಗೆ ಎಂದು ತೀರ್ಮಾನ ಹೇಳಿ ಮುಗಿಸಿದ್ದರು. ಅಲ್ಲಿ ಅಪ್ಪ ಮತ್ತು ಅಣ್ಣ ಇದ್ದರೋ ಇಲ್ಲವೋ ಗೊತ್ತಿಲ್ಲ. ಕೋರಿನ ತೋಟದಲ್ಲಿ ಬೆಳೆದ ಎಲ್ಲದರಲ್ಲೂ ನಮ್ಮ ದುಡಿಮೆಯ ಅರ್ಧ ಭಾಗ ಇರುತ್ತದೆ. ಇನ್ನರ್ಧಕ್ಕೆ ಯಾಕೆ ನಾವು ಬೇಡುವ ಕೆಲಸ ಮಾಡಬೇಕು.
ಇನ್ನು ಮೇಲೆ ಏನೇ ಉಳಿದರೂ ನಮ್ಮದೆಂದು ಆಸೆ ಪಡಬಾರದೆಂದು ಅಪ್ಪ ಹೇಳಿದ ಮಾತು ಇಂದಿಗೂ ಮರೆತಿಲ್ಲ. ತೋಟದಿಂದ ಗುಡಿವರೆಗೆ ಎಲೆಪುಟ್ಟಿಯ ಹೊತ್ತು ತಂದು ಪಂಚಾಯ್ತಿ ನಡೆಸಿದ ದಿನವನ್ನು ನನಗೆ ಈಗಲೂ ಮರೆಯಲಾಗುತ್ತಿಲ್ಲ. ಸದ್ಯ ಪಂಚಾಯಿತಿಯವರ ದೃಷ್ಟಿಯಲ್ಲಾದರೂ ಅದೊಂದು ದೊಡ್ಡ ಅಪರಾಧವಲ್ಲವೆಂಬಂತೆ ಮಾತಾಡಿದ್ದು ನನಗೆ ಸಮಾಧಾನ ತಂದಿತ್ತು. ನಂತರ ರಜೆ ಮುಗಿದ ಮೇಲೆ ಸಾಗರಕ್ಕೆ ಹೋಗಿ, ನನ್ನ ಅಭ್ಯಾಸ ಮುಂದುವರಿಸಿದೆ.
ಅಕ್ಕ ಭಾವ ನನ್ನ ಓದು ಬರಹಕ್ಕೆ ಸಹಕಾರಿಯಾಗಿದ್ದರು. ಸರಿಯಾದ ಕುಟುಂಬ ಯೋಜನೆಯ ಅರಿವು ಇರದೆ, ನಾನು ಸಾಗರಕ್ಕೆ ಬಂದಾಗ ಇದ್ದ ಒಬ್ಬಳೇ ಮಗಳ ಜೊತೆ ಮತ್ತೆ ಮೂರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಜನಿಸಿ ಅವರ ಕುಟುಂಬ ಹಿಗ್ಗುತ್ತಾ ಹೋಯಿತು. ನಾನು ಮನೆಯವನಾಗಿ ಸಾಮಾನ್ಯ ಕೆಲಸಗಳಾದ ನೀರು ತರುವುದು, ಕಸ ಗುಡಿಸುವುದು, ನೆಲ ಒರೆಸುವುದು, ಬಟ್ಟೆ ಒಗೆಯುವುದು, ಅಂಗಡಿಯಿAದ ಮನೆಗೆ ಬೇಕಾದ ದಿನಸಿ ತರುವುದು ಎಲ್ಲ ಕೆಲಸ ಮಾಡುತ್ತಿದ್ದೆ. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ ನನಗೆ ಬಕ್ಷೀಸು ಸಹ ನೀಡುತ್ತಿದ್ದಳು.
ಹೈಸ್ಕೂಲು ಅಭ್ಯಾಸ ಮಾಡುತ್ತಾ ಎಸ್.ಎಸ್.ಎಲ್.ಸಿ.ಗೆ ಬಂದಾಗ ಮನೆಯಲ್ಲಿ ಮಕ್ಕಳ ಗಲಾಟೆಯಿಂದ ಓದಲು ಕಷ್ಟ ಎನ್ನೋ ಕಾರಣದಿಂದ ಸಾಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುತ್ತಿದ್ದ ಹಾಸ್ಟೆಲ್ಗೆ ಸೇರಿಕೊಂಡೆ. ಆಗಿನ ಮುನಿಸಿಪಲ್ ಹೈಸ್ಕೂಲಿನಲ್ಲಿ ಹಾಸ್ಟೆಲ್ನಿಂದ ರ್ಮ ಶೇಖರ್ ಮತ್ತು ಅವರ ಅಣ್ಣ ಹನುಮಂತಪ್ಪ ಹಾಗೂ ಯಶವಂತಪ್ಪ ಒಟ್ಟು ನಾಲ್ಕು ಜನ ಎಸ್ಎಸ್ಎಲ್ಸಿ ತರಗತಿಗೆ ಹೋಗುತ್ತಿದ್ದೆವು. ಪರೀಕ್ಷೆ ಮುಗಿದು ರಿಸಲ್ಟ್ ಬಂದಾಗ ಸಾರ್ವಜನಿಕ ಹಾಸ್ಟೆಲ್ನಿಂದ ಪರೀಕ್ಷೆ ಬರೆದವರಲ್ಲಿ ನಾನೊಬ್ಬ ಮಾತ್ರ ಪಾಸಾಗಿದ್ದೆ. ಉಳಿದವರು ಒಂದೊಂದು ವಿಷಯದಲ್ಲಿ ಫೇಲಾಗಿದ್ದರು. ಮುನಿಸಿಪಲ್ ಹೈಸ್ಕೂಲಿನಲ್ಲಿ ಹಾಸ್ಟೆಲ್ನಿಂದ ಬರುತ್ತಿದ್ದ ಹುಡುಗರಲ್ಲಿ ನಾನೊಬ್ಬ ಪಾಸಾಗಿರುವ ಬಗ್ಗೆ ತಿಳಿದು ಸಂಸ್ಕೃತ ಅಧ್ಯಾಪಕರು ನನಗೆ ಕರೆದು ಪ್ರೋತ್ಸಾಹದ ಮಾತಾಡಿದ್ದನ್ನು ನಾನಿನ್ನೂ ಕೂಡ ಮರೆತಿಲ್ಲ.
ನಾನು ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಬಂದಾಗ ಊರಿನಲ್ಲಿದ್ದೆ. ನನ್ನ ರಿಜಿಸ್ಟ್ರೇಷನ್ ನಂ. 64960. ಆಗ ಫಲಿತಾಂಶಗಳು ದಿನಪತ್ರಿಕೆಗಳಲ್ಲಿ ಬರುತ್ತಿದ್ದವು. ಅಣ್ಣ ತಿಪ್ಪಣ್ಣ ಬೆಳಗಿನ ಜಾವ ಹೊಸಪೇಟೆಗೆ ವೀಳ್ಯದೆಲೆ ಮಾರಾಟ ಮಾಡಲು ಹೋಗುತ್ತಿದ್ದವನು ಹರಿಹರದಲ್ಲಿ ಪ್ರಜಾವಾಣಿ ಪೇಪರ್ನಲ್ಲಿ ನನ್ನ ಫಲಿತಾಂಶವನ್ನು ನೋಡಿ, ನನ್ನ ನಂಬರನ್ನು ಗುರ್ತು ಮಾಡಿ ನನ್ನೂರಿಗೆ ದಿನವೂ ಬರುತ್ತಿದ್ದ ಕ್ಷೌರಿಕ ನರಸಿಂಹಣ್ಣನ ಮುಖಾಂತರ ಪೇಪರ್ ಕಳಿಸಿದ್ದ. ನಾನು ಪೇಪರ್ ನೋಡಲು ಹರಿಹರಕ್ಕೆ ಹೋಗೋ ದಾರಿಯಲ್ಲಿ ನರಸಿಂಹಣ್ಣ ಸಿಕ್ಕು ನಾನು ಪಾಸಾಗಿರುವ ಬಗ್ಗೆ ನನ್ನ ಅಣ್ಣ ತಿಪ್ಪಣ್ಣ ನಂಬರ್ ಗುರ್ತು ಮಾಡಿ ಕೊಟ್ಟದ್ದನ್ನು ನನಗೆ ತೋರಿಸಿ ಸಂತೋಷಪಟ್ಟಿದ್ದ.
ಹನಗವಾಡಿಯಲ್ಲೇ ಹಲವು ವರ್ಷಗಳಿಂದ ಎಸ್.ಎಸ್.ಎಲ್.ಸಿಯಲ್ಲಿ ಸಂಶೋಧನೆ ಮಾಡುತ್ತಾ ಉಳಿದಿದ್ದ ಸ್ನೇಹಿತರೊಡನೆ ನಾನು ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾದ ವಿಷಯ ಹೇಳಿದೆ. ಅರ್ಯಾರಿಗೂ ನಾನು ಪಾಸಾದ ಬಗ್ಗೆ ನಂಬಿಕೆ ಬರಲಿಲ್ಲ. ಅದರಲ್ಲಿ ಈಗಾಗಲೇ ನಾಲ್ಕು ವರ್ಷಗಳಿಂದ ಎಸ್.ಎಸ್.ಎಲ್.ಸಿ.ಯಲ್ಲೇ ಉಳಿದಿದ್ದ ಹಿರಿಯ ಮಿತ್ರರಲ್ಲೊಬ್ಬ `ಇಲ್ಲಪ್ಪಾ, ಪೇರ್ನಲ್ಲಿ ಬಂದಿರೋದು ನಂಬಕ್ಕಾಗಲ್ಲ, ಫಲಿತಾಂಶ ಸ್ಕೂಲಿಗೆ ಬರೋ ತನಕ ಏನು ಹೇಳುವುದಕ್ಕಾಗಲ್ಲ’ ಎಂದು ಬಾಣ ಬಿಟ್ಟು – ಪಾಸಾಗಿದ್ದೇನೆ ಎಂಬ ಅಸಾಧ್ಯ ಸಂತೋಷದ ಮೂಡಿನಲ್ಲಿದ್ದ ನನಗೆ ಅನುಮಾನದ ಕಿಚ್ಚು ಹಚ್ಚಿದ್ದ. ಆದರೂ ಇದ್ದ ಐದು ಮನೆಯ ಚಲುವಾದಿಗರ ಜೊತೆ ಊರ ಅನೇಕ ಜನರಿಗೆ ನಾನು ಎಸ್.ಎಸ್.ಎಲ್.ಸಿ. ಪಾಸಾದ ಸುದ್ದಿ ಸಂತೋಷ ನೀಡಿತ್ತು.
ನಮ್ಮೂರ ಹಿರಿಯ ರಾಜಕಾರಣಿ ಹೆಚ್. ಸಿದ್ದವೀರಪ್ಪ ನವರ ನಂತರ ಎಸ್.ಎಸ್.ಎಲ್.ಸಿ.ಯಲ್ಲಿ ಮೊದಲನೇ ಅಟೆಂಪ್ಟ್ನಲ್ಲಿ ಪಾಸಾದವನು ನಾನೇ ಎಂದು ಮಾತಾಡಿ ಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಮಹದೇವಪ್ಪನಂತೂ ತಮ್ಮ ಎರಡೂ ಕೈಮುಗಿದುಕೊಂಡು ‘ವಾಲಗದ ಸಮೇತ ವೀರಭದ್ರ ದೇವರಿಗೆ ಹಣ್ಣುಕಾಯಿ ಮಾಡಿಸೋಣ’ ಎಂದು ಸಂತೋಷದಲ್ಲಿ ಹೇಳಿದನಾದರೂ ಹಾಗೇನು ನಾನು ಮಾಡಲಿಲ್ಲ. ನನ್ನ ಎಸ್.ಎಸ್.ಎಲ್.ಸಿ. ವರೆಗಿನ ಓದಿನ ಜೊತೆ ಊರಲ್ಲಿ ರಜಾ ದಿನಗಳಲ್ಲಿ ಹಲವು ಕೆಲಸ ಮಾಡುತ್ತಿದ್ದೆ. ಚಲುವಾದಿಗಳಿಗೆ ವಿಶೇಷವಾದ ಬ್ಯಾಂಡ್ಸೆಟ್ವೊಂದನ್ನು ರೂಪಿಸಿಕೊಂಡಿದ್ದರು. ಊರ ದೇವರ ಚಾಕರಿಗೆಂದು ಅಪ್ಪ ಚಿಕ್ಕಪ್ಪಂದಿರು ಹಳೆಯ ಮೇಳ ಹೊಂದಿದ್ದರು. ಮೇಳದಲ್ಲಿ ಸುತಿ, (ಶ್ರುತಿ) ಸೊನಾಯಿ, (ಶಹನಾಯಿ) ಸಮಾಳ ಹಾಗೂ ಚೌಗಡ (ಚರ್ಮದ ವಾದ್ಯ) ಊರ ದೇವರ ಚಾಕರಿ ಜೊತೆಗೆ ಊರಲ್ಲಿನ ಮದುವೆ ಮತ್ತು ಸಾವುಗಳ ಸಮಯದಲ್ಲಿ ವಾದ್ಯಮಾಡಿ ಹಣ ಸಂಪಾದಿಸುತ್ತಿದ್ದರು. ಈ ಮ್ಯಾಳದಲ್ಲಿ ಹೋಗುವ ಸಂದರ್ಭದಲ್ಲಿ ಸಾಮೂಹಿಕವಾಗಿ ಎಲ್ಲರೂ ಶುಭ್ರವಾದ ಅಂಗಿ ಪಂಚೆ ಮತ್ತೊಂದು ಟವಲ್ ಜೊತೆಗೆ ತಮ್ಮ ಮ್ಯಾಳದ ಸಾಮಾನು ಮುಚ್ಚಲು ಬೇಕಾದ ಚೀಲಗಳನ್ನು ಅಚ್ಚುಕಟ್ಟಾಗಿ ಶುಚಿಗೊಳಿಸಿಕೊಂಡು ಹೋಗುತ್ತಿದ್ದರು. ಮದುವೆ ಸಮಯಗಳಲ್ಲಿ ಸಂಪಾದನೆ ಜೊತೆಗೆ ಖುಷಿಗಾಗಿ ಕೆಲವರು ನೀಡುವ ಹಣದ ರೂಪದ ಶಭಾಷ್ಗಿರಿಯಿಂದಾಗಿ ಸಾಮಾನ್ಯವಾಗಿ ಬಿರುಸಿನ ಹೊಲಮನಿ ಕೆಲಸಗಳು ರುಚಿಸುತ್ತಿರಲಿಲ್ಲ. ಆದರೆ ನಮ್ಮ ಊರಿನವರು ಇದಕ್ಕೆ ಅಪವಾದವೆಂಬಂತೆ ಹೊಲ ಮತ್ತು ತೋಟಗಳಲ್ಲಿ ಮುತುವರ್ಜಿಯಿಂದ ದುಡಿಯುತ್ತಿದ್ದರು. ಆದರೂ ನಮ್ಮ ಅಪ್ಪ ಅಗಾಗ `ಅರಿಶಿಣ ಕೂಳಿಗೋಗಿ ವರ್ಷದ ಕೂಳು ಕಳೆದು ಕೊಳ್ಳಬೇಡಿರೆಂದು’ ಎಚ್ಚರಿಸುತ್ತಿದ್ದರು.
ಊರಿನಲ್ಲಿ ಅಪ್ಪ ಚಿಕ್ಕಪ್ಪಂದಿರ ಮ್ಯಾಳ ಹಳೆಯದಾಯಿತೆಂದು ನಮ್ಮಣ್ಣನೂ ಸೇರಿದಂತೆ ಹೊಸಬರನ್ನು ಸೇರಿಸಿಕೊಂಡು ಹೊಸ ಬ್ಯಾಂಡ್ ಸೆಟ್ ತರಿಸಿ, ಅದಕ್ಕೊಬ್ಬ ಬ್ಯಾಂಡ್ ಮಾಸ್ತರರನ್ನು ನೇಮಿಸಿಕೊಂಡಿದ್ದರು. ಬರಿ ಐದಾರು ಜನರಿದ್ದ ಮ್ಯಾಳವು ಹೊಸ ಹುಡುಗರನ್ನೆಲ್ಲಾ ಸೇರಿಸಿ ಹತ್ತು ಜನರ ಗುಂಪೇ ಆಯಿತು. ನಾನು ಕೂಡ ತರಬೇತಿ ನೀಡುವ ಸಮಯದಲ್ಲಿ ಡೋಲು ಬಾರಿಸಲು ಪ್ರಯತ್ನಪಟ್ಟೆ. ಆದರೆ ಅದು ಯಾಕೋ ನನಗೆ ಕರಗತವಾಗಲಿಲ್ಲ. ಅದೇ ಸಮಯದಲ್ಲಿ ಅಪ್ಪ `ಏನು ಕಲಿತು ಏನು ಬಾರಿಸಿದರೂ ಕೆರ ಬಿಡುವಲ್ಲಿ ಕೂಳು ತಿನ್ನೋ ವಿದ್ಯೆ ಇದು. ನಿನಗೆ ಯಾಕೆ ಬೇಕು ಮಗನೇ’ ಎಂದು ನನ್ನ ಉತ್ಸಾಹಕ್ಕೆ ನೀರೆರಚಿದ್ದರು.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ7 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ15 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

