Connect with us

ದಿನದ ಸುದ್ದಿ

ಆತ್ಮಕತೆ | ಹಾಸ್ಟೆಲ್‌ನಲ್ಲಿ ಜಾತಿ ಜಗಳ

Published

on

ಸಾಂದರ್ಭಿಕ ಚಿತ್ರ
  • ರುದ್ರಪ್ಪ ಹನಗವಾಡಿ

ನಾನು ಮೈಸೂರಿಗೆ ಬಂದು ಮಹಾರಾಜ ಕಾಲೇಜ್ ಹಾಸ್ಟೆಲ್ ಸೇರಿಕೊಂಡಾಗ ತಡವಾಗಿ ಸೇರಿಕೊಂಡವರಿಗೆ ಎರಡು ಮೂರು ಜನರಿರುವ ರೂಂಗಳನ್ನು ಅಲಾಟ್ ಮಾಡುತ್ತಿದ್ದರು. ನಮಗೆ ರೂಂ ನಂ. ಎ4 ಎಂಬಲ್ಲಿ ನಾಲ್ಕು ಜನರಿಗೆ ನಾನು ಮತ್ತು ಎಲ್. ರವೀಂದ್ರ, ಎರಡನೇ ಬಿ.ಎ.ಯವರಾಗಿದ್ದವರು.

ವೈ. ಮಹೇಶ ಮೊದಲ ಬಿ.ಎ. ಮತ್ತು ಪಿಯುಸಿಗೆ ಸೇರಿದ್ದ ಮುರಳೀಧರ ಇದ್ದೆವು. ರವೀಂದ್ರ ಸದಾ ಹಿಂದಿ ಹಾಡಿನ ಭಕ್ತನಾಗಿದ್ದು ರಾಜೇಶ್ ಖನ್ನಾನ ಹೇರ್ ಸ್ಟೈಲ್‌ನಲ್ಲಿ ಟಾಕುಟೀಕಾಗಿ ತರಗತಿಗೆ ಬರುತ್ತಿದ್ದ. ಮುರಳಿ ಹತ್ತಿರದ ಇಲವಾಲ ಊರಿನವನಾಗಿದ್ದರಿಂದ ದಿನವೂ ಅವರ ಊರಿನಿಂದ ಪರಿಚಯಸ್ಥರು ಬಂದು ಸಂಜೆ ವೇಳೆಯಲ್ಲಿ ಹೊರಗೆ ಹೋಗುತ್ತಿದ್ದ. ನಾನು ಮತ್ತು ಮಹೇಶ ಇಬ್ಬರೇ ಒಬ್ಬರಿಗೊಬ್ಬರು ಹತ್ತಿರವಾಗಿದ್ದೆವು. ಸಭೆ ಸಮಾರಂಭಗಳಿಗೆ ಮತ್ತು ಸಮಾಜವಾದಿ ಯುವ ಜನ ಸಭಾ ಕೆಲಸಗಳಿಗೆ ಜೊತೆಯಲ್ಲಿಯೇ ಹೋಗುತ್ತಿದ್ದೆವು.

ಮಹಾರಾಜ ಕಾಲೇಜ್ ಹಾಸ್ಟೆಲ್‌ವೊಂದು ಸಾರ್ವಜನಿಕ ಹಾಸ್ಟೆಲ್ ಆಗಿದ್ದು ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಅವಕಾಶವಿತ್ತಾದರೂ, ಸ್ಥಳೀಯ ಒಕ್ಕಲಿಗ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇರುತ್ತಿತ್ತು. ಪರಿಶಿಷ್ಟ ಜಾತಿ / ಪಂಗಡಗಳಿಗೆ ಸಾಕಷ್ಟು ವಿದ್ಯಾರ್ಥಿಗಳಿದ್ದರೂ ಯಾರೂ ತಮ್ಮ ಜಾತಿ ಗುಂಪುಗಳಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ನಾನು ವಿಶೇಷವಾಗಿ 300 ಕಿ.ಮೀ. ದೂರದಿಂದ ಬಂದವನಾಗಿ ನನಗೆ ಪರಿಚಿತರು, ಜಾತಿಗರು ಯಾರೂ ಗೊತ್ತಿರಲಿಲ್ಲ.

ನನ್ನ ರೂಮ್‌ಮೇಟ್‌ಗಳಲ್ಲಿ ಮಹೇಶ ಮತ್ತು ಮುರಳಿ ಒಕ್ಕಲಿಗರಾಗಿದ್ದರು. ರವೀಂದ್ರ ಕೂಡ ಪರಿಶಿಷ್ಟ ಜಾತಿಯವನಾಗಿದ್ದರೂ ಅವರ ತಂದೆ ಆಗಿನ ಕಾಲದ ಅರಣ್ಯ ಇಲಾಖೆಯಲ್ಲಿ ಆರ್.ಎಫ್.ಓ. ಆಗಿದ್ದರಿಂದ ಅವನ ಸಾಮಾಜಿಕ ಹಿನ್ನೆಲೆ ಗೊತ್ತಾಗುತ್ತಿರಲಿಲ್ಲ. ನಾನು ದಾವಣಗೆರೆ ಕಡೆಯವ ಮತ್ತು ಹೆಸರು ರುದ್ರಪ್ಪ ಎಂಬೀ ಕಾರಣದಿಂದ ಯಾರೋ ಲಿಂಗಾಯತರವನಿರಬೇಕೆಂದು ನನ್ನ ಬಗ್ಗೆ ಏನೂ ತಿಳಿಯದವರು ಭಾವಿಸಿದ್ದರು.

ಮಹಾರಾಜಾ ಕಾಲೇಜ್ ಹಾಸ್ಟೆಲ್‌ನಲ್ಲಿನ ಊಟ ಬಹಳ ಅದ್ದೂರಿಯಾಗಿಯೇ ಇರುತ್ತಿತ್ತು. ಬೆಳಿಗ್ಗೆ ಕಾಫಿ, ಟೀ ನಂತರ 9 ರಿಂದ 11 ಗಂಟೆಯವರೆಗೆ ಊಟ, ಮಧ್ಯಾಹ್ನ 1 ರಿಂದ 2ಕ್ಕೆ ತಿಂಡಿ, ರಾತ್ರಿಗೆ 8 ರಿಂದ ಊಟವಿರುತ್ತಿತ್ತು. ಮಾಂಸಹಾರಕ್ಕೆ ಪ್ರತ್ಯೇಕವಾದ ಮೆಸ್ ಇದ್ದು, ಅಲ್ಲಿ ವಾರದಲ್ಲಿ 5 ದಿನಗಳು ಮಾಂಸಾಹಾರ ಇರುತ್ತಿತ್ತು. ಸಸ್ಯಾಹಾರಿ ಮೆಸ್‌ನಲ್ಲಿ ಮಜ್ಜಿಗೆ ಹುಳಿ, ತೊವೆ, ತುಪ್ಪ, ಮೊಸರು, ಬಾಳೆಹಣ್ಣುಗಳಿರುತ್ತಿದ್ದವು. ವಾರದ ಮತ್ತು ತಿಂಗಳ ಕೊನೆಯಲ್ಲಿ ವಿಶೇಷವಾದ ಊಟಗಳು ಇರುತ್ತಿದ್ದವು. ಅದಕ್ಕಾಗಿ ಹೊರಗಿನ ಸ್ನೇಹಿತರನ್ನು ಆಹ್ವಾನಿಸಬಹುದಿತ್ತು.

ಇಂತಹ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿಗಳು ಮೈಸೂರಿನ ಅಶೋಕಪುರಂ ಗೆಳೆಯರನ್ನು ಆಹ್ವಾನಿಸಿದ್ದರು. ಒಕ್ಕಲಿಗ ವಿದ್ಯಾರ್ಥಿಗಳೂ ಕೂಡ ಕೆ.ಜಿ. ಕೊಪ್ಪಲ ವಿದ್ಯಾರ್ಥಿಸ್ನೇಹಿತರನ್ನು ಆಹ್ವಾನಿಸಿದ್ದರು. ಊಟದ ಹಾಲ್‌ನಲ್ಲಿ ಮೊದಲ ಬ್ಯಾಚ್‌ನಲ್ಲಿಯೇ ಊಟ ಮಾಡುವ ಧಾವಂತದಲ್ಲಿ ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ವಿದ್ಯಾರ್ಥಿಗಳಲ್ಲಿ ಊಟಕ್ಕೆ ಕೂರುವ ಸೀಟಿನ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಊಟದ ಸೀಟಿಗಾಗಿ ಆದ ಗಲಾಟೆ ಅಲ್ಲಿಗೆ ಮುಗಿಯದೆ ಹೊರಗಿನ ರೌಡಿಗಳನ್ನು ಕರೆತಂದು ಎಸ್.ಸಿ. ವಿದ್ಯಾರ್ಥಿಗಳಲ್ಲಿ ಒಬ್ಬೊಬ್ಬರನ್ನೂ ಗುರುತಿಸುತ್ತಾ ಥಳಿಸಿದರು.

ಎಸ್.ಸಿ. ಹುಡುಗರನ್ನು ಕಂಡರೆ ಜಾತಿವಾದಿ ಕೆಲವು ಒಕ್ಕಲಿಗ ವಿದ್ಯಾರ್ಥಿಗಳು ತಾವು ಪ್ರತಿ ತಿಂಗಳೂ ಹಣ ಪಾವತಿಸುತ್ತಿದ್ದು, ಎಸ್.ಸಿ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂದ ಹಣದಲ್ಲಿ ಬಿಟ್ಟಿ ಕೂಳು ತಿಂದು ಕೊಬ್ಬಿದ್ದಾರೆ ಎನ್ನುವ ಧೋರಣೆ ಅವರಲ್ಲಿತ್ತು. ಬಳೆ ಶ್ರೀನಿವಾಸ, ನಂಜಪ್ಪ ಮತ್ತು ಗೋವಿಂದ ಎಂಬ ಮೂವರು ಕಾಲೇಜಿನ ವಿದ್ಯಾರ್ಥಿಗಳಾಗಿದ್ದರೂ, ರೌಡಿಗಳಂತೆ ವರ್ತಿಸುತ್ತಿದ್ದರು. ಮೈಸೂರು ಜಿಲ್ಲೆಯ ಹತ್ತಿರದ ಹಳ್ಳಿಗರಾಗಿದ್ದರಿಂದ ಸದಾ ವಿದ್ಯಾರ್ಥಿಗಳಲ್ಲದವರ ಜೊತೆ ಹಾಸ್ಟೆಲ್ ಒಳಗೆ ಇದ್ದ ಸೋಮಾರಿ ಕಟ್ಟೆಯಲ್ಲಿ ಕೂತು ಹರಟುತ್ತಿದ್ದರು.

ಈ ರೀತಿ ಕರೆತಂದ ರೌಡಿಗಳಲ್ಲಿ ಒಬ್ಬ ನನ್ನನ್ನು ಹೊಡೆಯಲು ಬಂದು ಇನ್ನೇನು ಏಟು ಕೊಡುವುದರಲ್ಲಿದ್ದ. ಅಷ್ಟರಲ್ಲೇ ಅಲ್ಲಿದ್ದ ಗೋವಿಂದ `ಲೇ ಅವನು ಎಸ್.ಸಿ. ಅಲ್ಲ, ಲಿಂಗಾಯತ ಬಿಡ್ರೊ’ ಎಂದು ಕೂಗಿದ. ಹಾಗಾಗಿ ನಾನು ಏಟು ಬೀಳುವುದನ್ನು ತಪ್ಪಿಸಿಕೊಂಡು ರೂಮ್‌ಗೆ ಹೋಗಿ ಬಚಾವಾಗಿದ್ದೆ. ನಂತರದ ದಿನಗಳಲ್ಲಿ ನನ್ನ ಜಾತಿ ಅವನಿಗೆ ತಿಳಿದು ತನ್ನ ಅಂದಿನ ದಿನದ ತಪ್ಪಿನ ಅರಿವಾಗಿತ್ತು.

ಇದೆಲ್ಲ ಆಗಿ ಕೆಲವು ದಿನಗಳಲ್ಲಿ ಮಳವಳ್ಳಿ ತಾಲ್ಲೂಕಿನ ದಲಿತರಾಗಿದ್ದ ರಾಜಕಾರಣಿ ಮಾಜಿ ಮಂತ್ರಿ ಮಲ್ಲಿಕಾರ್ಜುನ ಸ್ವಾಮಿ ಆಗ ಸಿಂಡಿಕೇಟ್ ಸದಸ್ಯರಾಗಿದ್ದು, ಕಾಲೇಜ್ ಹಾಸ್ಟೆಲ್‌ನಲ್ಲಿದ್ದ ವಿಶೇಷವಾಗಿ ಏಟು ತಿಂದಿದ್ದ ಹುಡುಗರನ್ನು ನೋಡಲು ವಾರ್ಡನ್ ಶಿವಲಿಂಗಯ್ಯನವರ ಜೊತೆ ಬಂದಿದ್ದರು. ಆಗ ನನ್ನನ್ನು ಸಹ ಕರೆಸಿ ವಿಚಾರಿಸಿ ಚೆನ್ನಾಗಿ ಓದುವ ಬಗ್ಗೆ ಬುದ್ಧಿ ಮಾತು ಹೇಳಿದ್ದರು. ಆದರೆ ನಮ್ಮ ರೂಮ್‌ನಲ್ಲಿ ಮಹೇಶನಾಗಲೀ ಮುರಳಿಯಾಗಲೀ ಜಾತಿಕೂಪದ ಜಗಳಗಳಿಂದ ದೂರ ಇದ್ದರು. ಮತ್ತೆ ನಾನು ಎಂ.ಎ.ನಲ್ಲಿ ಗಂಗೋತ್ರಿಯ ಪಿ.ಜಿ. ಹಾಸ್ಟೆಲ್ ಸೇರಿದಾಗ ಅಲ್ಲಿಯೂ ಒಕ್ಕಲಿಗ ವಿದ್ಯಾರ್ಥಿಗಳಲ್ಲಿನ ಕೆಲವರು ದಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಬ್ರಾಹ್ಮಣರೆಂದು ಹಂಗಿಸುತ್ತಿದ್ದರು.

ನಾನೊಮ್ಮೆ ಬೀರು ಬಾಟಲಿಯಲ್ಲಿ ಕುಡಿಯಲು ನೀರು ತುಂಬಿಕೊಳ್ಳಲು ಹೋಗುವಾಗ `ಇವರಿಗೆ ಬಿಟ್ಟಿ ಊಟದ ಜೊತೆ ಸರ್ಕಾರ ಬೀರು ಕೂಡ ಕೊಡುತ್ತದೆ ನೋಡ್ರೋ ಎಂದು ವ್ಯಂಗ್ಯವಾಗಿ ಮಾತಾಡುತ್ತಿದ್ದನ್ನು ನಾನು ಮಹದೇವನಿಗೆ ಹೇಳಿದ್ದೆ. ಅವನು ಮುಂದೊAದು ದಿನ ಪೂರ್ಣಚಂದ್ರ ತೇಜಸ್ವಿ ಅವರಿಗೆ ತಿಳಿಸಿದ ಕಾರಣ ಅವರು ಹಾಸ್ಟೆಲ್‌ನಲ್ಲಿದ್ದ ಕೆಲವು ಒಕ್ಕಲಿಗ ಹುಡುಗರನ್ನು ಕರೆಸಿ ಚೆನ್ನಾಗಿ ಬೈದು ಕಳಿಸಿದ್ದರಂತೆ. ಆ ನಂತರದ ದಿನಗಳಲ್ಲಿ ಅವರೆಲ್ಲ ನಮ್ಮನ್ನು ಕಂಡರೆ ಕೃತಕ ಗೌರವ ತೋರುತ್ತಿದ್ದರು. ನಂತರ ಎಂ.ಎ. ಮುಗಿಯುವವರೆಗೆ ಮತ್ತಾವ ಜಾತಿ ಜಗಳದ ಸೋಂಕು ಹಾಸ್ಟೆಲ್‌ನಲ್ಲಿ ಮರುಕಳಿಸಲಿಲ್ಲ.

ಮೈಸೂರಿನಲ್ಲಿ ಓದಲು ಮಹಾರಾಜಾ ಕಾಲೇಜು ನಂತರ ಗಂಗೋತ್ರಿಯಲ್ಲಿ ಎಂ.ಎ. ಮಾಡಲು ಸಿಕ್ಕ ಅವಕಾಶದ ಜೊತೆಗೆ ಸಿಕ್ಕ ಹಾಸ್ಟೆಲ್ ಸೌಲಭ್ಯಗಳು, ಜೊತೆಗೆ ಅನೇಕ ಹಿನ್ನೆಲೆಯ ಸ್ನೇಹಿತರ ಬಳಗ ದೊರಕಲು ಅವಕಾಶವಾಯಿತು. ಶೈಕ್ಷಣಿಕ ಶಿಕ್ಷಣದ ಜೊತೆಗೆ ಹಲವು ಹಿನ್ನೆಲೆಯ ವಿದ್ಯಾರ್ಥಿಗಳ ಪರಿಚಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬಹುದೊಡ್ಡ ಬುನಾದಿಯಾಯಿತು. ಅದಕ್ಕೆಲ್ಲ ಕಾರಣರಾದವರನ್ನು ಸದಾ ನೆನೆಯದಿರಲಾರೆ.

ಮುಂದುವರಿಯುವುದು…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

Published

on

ಹುಟ್ಟುಹಬ್ಬದ ಸಂಭ್ರಮಕ್ಕೆ ಬ್ರೇಕ್: ಅಭಿಮಾನಿಗಳಿಗೆ ಕಿಚ್ಚ ಸುದೀಪ್‌ ಭಾವುಕ ಮನವಿ, ಸಮಾಜಮುಖಿ ಕಾರ್ಯಕ್ಕೆ ಕರೆ!

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.

ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್‌ ಅವರ ಮನವಿ ವಿಶೇಷ ಗಮನ ಸೆಳೆದಿದೆ.

ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ

ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್‌ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.

30 ವರ್ಷಗಳ ಸಿನಿ ಪಯಣದ ನೆನಪು

ಕನ್ನಡ ಚಿತ್ರರಂಗಕ್ಕೆ ಸುದೀಪ್‌ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್‌ ಡೈಲಾಗ್‌ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್‌ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.

https://x.com/KicchaSudeep/status/2092857077706506638

“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”

ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್‌ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.

“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

 

Continue Reading

ದಿನದ ಸುದ್ದಿ

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

Published

on

toxic-movie-geethu-mohandas-old-statement-viral-yash-fans-troll
‘ಟಾಕ್ಸಿಕ್’ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್: ಸ್ಕ್ರಿಪ್ಟ್‌ ಬಗ್ಗೆ ಹೇಳಿಕೆಗೆ ಯಶ್ ಅಭಿಮಾನಿಗಳ ಆಕ್ರೋಶ!

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.

ವೈರಲ್ ವಿಡಿಯೋದಲ್ಲಿ ಗೀತು ಮೋಹನ್‌ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್‌ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

http://Visit : www.suddidina.com

‘ಸ್ಕ್ರಿಪ್ಟ್‌ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ

ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್‌ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.

ಸಾಮಾನ್ಯವಾಗಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

https://x.com/alpasankhyata/status/2092620787698094334

‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?

‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್‌ವರ್ಲ್ಡ್‌ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ

ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.

ಸದ್ಯ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

 

 

Continue Reading

Trending