Connect with us

ದಿನದ ಸುದ್ದಿ

ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ‘ಎಳೆ’ ತಂದರೋ..!

Published

on

  • ನವೀನ್ ಸಾಗರ್, ಬೆಂಗಳೂರು

ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!!

ಹಾಡು ಅಂದರೆ ಅಲ್ಲಿ ಉಪಮೆಗಳು ಗೂಢಾರ್ಥಗಳು ದ್ವಂದ್ವಾರ್ಥಗಳು(ದ್ವಂದ್ವಾರ್ಥ ಅಂದ್ರೆ ಅಶ್ಲೀಲ ಮಾತ್ರವೇ ಅಲ್ಲ), ಎರಡುಮೂರು ವಿಚಾರಗಳನ್ನು ಹೇಳಬಲ್ಲ ಒಂದೇ ಒಂದು ಸಾಲು, ಇನ್ಯಾವತ್ತೋ ರೆಲೆವೆಂಟ್ ಅನಿಸಬಲ್ಲ ಕಲ್ಪನೆಗಳು ಏನೇನೋ ತುಂಬಿಹೋಗಿರುತ್ತವೆ. ಅದಕ್ಕೊಂದು ಮೂಡ್ ಇರುತ್ತೆ.

ಒಬ್ಬೊಬ್ಬ ಓದುಗನಲ್ಲಿ ಒಂದೊಂದು ಭಾವ ಹುಟ್ಟಿಸಬಲ್ಲ ಶಕ್ತಿ ಕವಿತೆಗಳಿಗಿರುತ್ತದೆ. ನನಗೆ ರೊಮ್ಯಾಂಟಿಕ್ ಅನಿಸುವ ಗೀತೆಯೊಂದು ಇನ್ನೊಬ್ಬನಿಗೆ ವಿರಹಗೀತೆ ಅನಿಸಬಹುದು. ನನಗೆ ಲಾಲಿ ಹಾಡೆನಿಸುವ ಗೀತೆಯೊಂದು ಇನ್ಯಾರಿಗೋ ಜಾಲಿ ಗೀತೆ ಅನಿಸಬಹುದು. ಇನ್ನೊಬ್ರಿಗೆ ಶೋಕಗೀತೆ ಅನಿಸೋ ಗೀತೆಯಲ್ಲಿ ನನಗೇನೋ ತುಂಟತನ ಕಾಣಿಸಬಹುದು. ಸಭ್ಯಗೀತೆ ಅನಿಸುವ ಹಾಡೊಂದು ಸಾಲುಸಾಲಲ್ಲೂ ಡಬಲ್ ಮೀನಿಂಗ್ ತುಂಬ್ಕೊಂಡಿದೆಯಲ್ಲ ಅನಿಸಬಹುದು. ಗ್ರಹಿಕೆ ಮೂಡು ವಯಸ್ಸು ಸಂದರ್ಭ ಇವೆಲ್ಲದರ ಮೇಲೆ ಹಾಡೊಂದು ನಮ್ಮನ್ನು ತಲುಪೋ ಬಗೆ ಬದಲಾಗುತ್ತಾ ಹೋಗುತ್ತದೆ‌. ಅಷ್ಟಾಗಿಯೂ ಅಸಲಿಗೆ ಅದನ್ನು ಬರೆದ ಕವಿಯ ಯೋಚನೆ ನಾವು ಗ್ರಹಿಸಿದ್ದೆಲ್ಲಕ್ಕಿಂತ ಭಿನ್ನವಾಗಿದ್ದಿನ್ನೇನೋ ಇದ್ದರೂ ಇರಬಹುದು.

ಹಲವು ಬಾರಿ ಕವಿಗೆ ತನ್ನ ಗೀತೆ ತಾನಂದುಕೊಂಡ ಭಾವದಲ್ಲೇ ರೀಚ್ ಆಗಿದೆ ಅನ್ನೋ ಖುಷಿ ತೃಪ್ತಿ ಸಿಗುತ್ತದೆ. ಕೆಲವು ಬಾರಿ .. ಅರೆ ಬರೆಯುವಾಗ ನಾನೇ ಹೀಗೊಂದು ಗೂಡಾರ್ಥದ ಬಗ್ಗೆ ಯೋಚಿಸಿರಲಿಲ್ಲ. ಕೇಳುಗ ಇದಕ್ಕೆ ಇನ್ನೊಂದು ಆಯಾಮವನ್ನೇ ಕೊಟ್ಟುಬಿಟ್ಟನಲ್ಲ ಅಂತ ಅಚ್ಚರಿಯಾಗಬಹುದು. ಕೆಲವೊಮ್ಮೆ ತನಗೇ ಗೊತ್ತಿಲ್ಲದ ಅರ್ಥ ಹುಟ್ಟಿಸಿ ತನ್ನನ್ನು ಕೇಳುಗರು ಮೇಲೇರಿಸಿ ಕೂರಿಸಿದಾಗ, ಈ ಕ್ರೆಡಿಟ್ ಬಿಟ್ಟುಕೊಡಲಿಷ್ಟ ಪಡದ ಕರಪ್ಟ್ ಮನಸು.. ಹೌದೌದು ನಾನು ಹೀಗೆ ಎರಡರ್ಥ ಹುದುಗಿಸಿ‌ಈ ಸಾಲು ಬರೆದಿದ್ದೆ ಎಂದು ಧ್ವನಿಗೂಡಿಸುತ್ತದೆ. ಅದೇ ವಿವಾದಕ್ಕೋ ಅವಹೇಳನಕ್ಕೋ ಕಾರಣವಾದರೆ .. ಇಲ್ಲ ನಾನು ಬರೆದದ್ದು ಈ ಅರ್ಥದಲ್ಲಿ ಅಂತ ಸೇಫ್ಟಿ ಮೋಡ್ ಗೂ ಹೋಗುತ್ತದೆ. ಹಾಡು/ಕವಿತೆಗಳಿಗೆ ಈ ವ್ಯಾಖ್ಯಾನದ ಮೂಲಕ ಬಚಾವಾಗುವ ಇಮೇಜ್ ರೂಪಿಸಿಕೊಳ್ಳುವ ಅವಕಾಶವಿರುತ್ತದೆ‌. ಗದ್ಯಗಳಿಗೆ ಆ ಪ್ರಿವೆಲೇಜ್ ಇರೋದಿಲ್ಲ.

ಸಂಭ್ರಮ ಚಿತ್ರದಲ್ಲಿ ಹಂಸಲೇಖ … “ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ಎಳೆ ತಂದರೋ…” ಗೀತೆಯಲ್ಲಿ ” ಎಳೆ” ಪದವನ್ನು ಎರಡರ್ಥ ಬರುತ್ತದೆಂದೇ ಬಳಸಿದರೋ ಬರೆದ ಮೇಲೆ ಎರಡರ್ಥ ಕೇಳುಗರ ಗ್ರಹಿಕೆಗೆ ಬಂತೋ ಎಂಬ ಪ್ರಶ್ನೆಯಂತೆ ಇದು. ಹಂಸ ಲೇಖಾವ್ರು ಪ್ರೀತಿಯ ’ಎಳೆ’ಯ ಬಗ್ಗೆ ಬರೆದಿರಬಹುದು. ಅಥವಾ ಎಳೆದು ತಂದರೋ ಎಂದು ಕೇಳಿಯೂ ಬರೆದಿರಬಹುದು. ಅಥವಾ ಅವರಿಗಿರೋ ಪನ್ ಸೆನ್ಸ್ ಗೆ ಈ ಎರಡೂ ಅರ್ಥ ಬರಲಿ ಅಂತಲೇ ಎಳೆ ಎಂಬ ಪದ ಬಳಸಿರಬಹುದು. ಈ ಥರದ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಾಹಿತ್ಯ ಗಮನಿಸಲು ಶುರು ಮಾಡಿದಾಗ ಇಂಥ ಖುಷಿ ಅನುಭೂತಿಗಳು ಸಿಗಲಾರಂಭಿಸುತ್ತವೆ. ರಿಸರ್ಚಿನಂಥ ಖುಷಿ

ಹಂಸಲೇಖರ … “ಈ ಹರಯದ ನರಕೊಳಲಲಿ ಇವೆ ಸರಿಗಮ ಹೊಳ್ಳೆಗಳು… ಈ ಮದನನ ಕಿರುಬೆರಳಲಿ ನವಿರೇಳದೆ ಗುಳ್ಳೆಗಳು..” ಈ ಸಾಲು ಕೇವಲ ಕಮರ್ಶಿಯಲ್ ಮ್ಯೂಸಿಕಲ್ ಸಾಂಗ್ ಆಗಿ ನಮ್ಮ ಕಿವಿ ತಲುಪಿದಾಗ ಗುನುಗುವ ಸಾಲಾಗುತ್ತದೆ ಅಷ್ಟೆ. ಅರೆ ಹರಯದ ನರಕೊಳಲು ಅಂದ್ರೆ ಏನು… ಮದನನ ಕಿರುಬೆರಳು ಅಂದ್ರೆ.. ? ಸಾಮಾನಿಗೆ ಇಷ್ಟು ಸಭ್ಯಶೃಂಗಾರರೂಪ ಕೊಟ್ಟು ಹೇಳಿರೋದಾ ಅನಿಸಿದಾಗ.. ಶೃಂಗಾರ ಅಡಗಿರೋ‌ ಸಾಲಾದರೂ ಜೋರಾಗಿ ಹೇಳೋಕೆ ಮನಸು ಹಿಂಜರಿಯುತ್ತದೆ.

ಸಾಹಿತ್ಯ ಅಷ್ಟಾಗಿ ಗಮನಿಸದ ವಯಸ್ಸಲ್ಲಿ… “ಮೈಯ್ಯಲ್ಲಿ ಏಳುತಿದೆ ಮನ್ಮಥ‌ನ ಅಂಬುಗಳು.. ಜುಮ್ ಜುಮ್ ಜುಮ್..” ಅನ್ನೋ ಸಾಲು ಸಂಕ್ರಾಂತಿ ಗೀತೆ ಎಂಬಂತೆ ಬಂದು ಹೋಗುತ್ತಿತ್ತು.

ಆದರೆ ಆನಂತರ ಸಾಹಿತ್ಯವಾಗಿ ಗಮನಿಸಿದಾಗ.‌ ಆಹಾ ರೋಮಾಂಚನವನ್ನು.. ಮೈರೋಮ ನಿಮಿರುವುದನ್ನು ಮನ್ಮಥನ ಬಾಣಕ್ಕೆ ಹೋಲಿಸಿದ್ದಾರಲ್ಲ ಅನಿಸಿ ನಿಜಕ್ಕೂ ಜುಮ್ ಅನಿಸಿತ್ತು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸಿದರೆ.. ಮೈಯಲ್ಲಿ ಏಳುತಿದೆ ಮನ್ಮಥನ ಅಂಬು ಅಂದ್ರೆ.. ಒನ್ಸಗೇನ್ ಸಾಮಾನಿರಬಹುದಾ ಅನಿಸದಿರದು.

ಸದಾಶಿವಂಗೆ ಅದೇ ಗ್ಯಾನ ಅಂದ್ಕೋಬೇಡಿ..

ನೆನಪಿರಲಿ ಚಿತ್ರದ ಅಜಂತಾ ಎಲ್ಲೋರಾ ಗೀತೆಯಲ್ಲಿ ಬರುವ… “ಮಂದವಾಗಿ ಬಳುಕೋವಂಥ ನಾರಿ ಇವಳ
ಅಂದ ನೋಡಿ ನಿಂತಾಗ..ಚಂದ ನೋಡಿ ನಿಂತಾಗ..
ಯಾರೊ ನೀನು ಎಂದು ಕೇಳುತಾವೆ..
ಇವಳ ಪೊಗರಿನ ಹೃದಯಪಾಲಕಿಯರು..
ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ…”

ಈ ಸಾಲುಗಳು ತನ್ನ ರಿದಮಿಕ್ ಮ್ಯೂಸಿಕ್ ಹಾಗೂ ಸುಲಲಿತವಾಗಿ ಲಘುಗುರು ಇಟ್ಟು ಬರೆದಂಥ ಪದಗಳ‌ ಆಟದಿಂದ ಮಜವಾಗಿ ಹಾಡಿಸಿಕೊಂಡು ಬಿಡ್ತವೆ. ಆದರೆ ಯಾವತ್ತೋ ಆರಾಮಾಗಿ ಸಾಹಿತ್ಯ ಕೇಳ್ತಾ ಇದ್ದರೆ.. ಆಹಾ ..ಹಂಸಲೇಖರ ರಸಿಕಕಲ್ಪನೆಗಳಿಗೆ ಮಿತಿಯೇ ಇಲ್ಲವಾ ಅನಿಸಿಬಿಡುತ್ತದೆ.

ಯಾರೋ ನೀನು ಎಂದು ಕೇಳುತಾವೆ ಇವಳ “ಪೊಗರಿನ ಹೃದಯ ಪಾಲಕಿಯರು” ಎಂದು ಅವರು ರೆಫರ್ ಮಾಡ್ತಿರೋದು ಆ ಹೆಣ್ಣಿನ ಸ್ತನಗಳ ಬಗ್ಗೆ ಅಂತ ಅರ್ಥವಾದಾಗ ಮತ್ತೊಮ್ಮೆ ಈ ಸಾಂಗ್ ಕೊಡುವ ಅನುಭೂತಿಯೇ ವಿಭಿನ್ನ. “ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ” ಎಂದು ಮುಂದುವರಿಸಿ ಆ ಸಾಲಿಗೆ ಇನ್ನಷ್ಟು ರಸಿಕತೆ ತುಂಬುತ್ತಾರೆ ಹಂಸ್.

ಗಡಿಬಿಡಿಗಂಡ ಚಿತ್ರದ…. ಮುದ್ದಾಡೆಂದಿದೆ ಮಲ್ಲಿಗೆ ಹೂ ಗೀತೆಯಲ್ಲಿ……. ನಾಯಕಿ”ಎದೆಯ ಸೆರಗ ಮೋಡದಲ್ಲಿ ನೀನೇ ಚಂದ್ರನೀಗ….” ಅಂದರೆ…. ನಾಯಕ” ಹೃದಯ ಮೇರುಗಿರಿಗಳಲ್ಲಿ… ಕರಗಬಹುದೆ ಈಗ” ಅಂತಾನೆ. “ಮುಡಿಯಲಿ ಮಲ್ಲಿಗೆಯ ಮುಡಿದವಳ ಮೊದಲುಮುಡಿಯಬೇಕು.. ಮಡದಿಗೆ ಪ್ರತಿದಿನವೂ ಮೊದಲಿರುಳಿರಬೇಕು…” ಅಂತ ನಾಯಕಿ ತನ್ನನ್ನು ಮೊದಲು ರಮಿಸು ಅಂತ ಒತ್ತಾಯಿಸುತ್ತಿದ್ದರೆ………… ನಾಯಕ ..” ಮನಸಿನ ಮಧುವಿನ ಮಹಲೊಳಗೆ … ಮದನ ಮಣಿಯಬೇಕು… ಸುರತಿಯ ಪರಮಾನ್ನ ಹಿತಮಿತವಿರಬೇಕು” ಅಂತ ಆಕೆಯ ಮೇಲಿರೋ ಮೋಹದ ಜೊತೆಜೊತೆಗೆ ಪ್ರತಿದಿನ ಬೇಡ ಫ್ರೀಡಮ್ಮು ವೀಕ್ಲಿ ಒನ್ಸು ಜುಮ್ ಜುಮ್ಮು” ಅಂತ ದೂರ ಹೋಗೋ ಪ್ರಯತ್ನ ಕೂಡ ಮಾಡುತ್ತಾನೆ.

ಇದು ಕೂಡ ಹೆಣ್ಣು ತನ್ನ ಗಂಡನ್ನು ಸೆಕ್ಸಿಗಾಗಿ ಕರೆಯುವ ಗೀತೆಯೇ ಆದರೂ… ತನ್ನ ಕ್ಲಾಸಿಕಲ್ ಟ್ಯೂನ್ ನಿಂದ ಚೆಂದದ ಪದಜೋಡಣೆಯಿಂದ… ಈ ಹಾಡು ಕೊಂಚವೂ ಅಶ್ಲೀಲ ಅನಿಸೋದೇ ಇಲ್ಲ. ಅಶ್ಲೀಲ ಅನಿಸಿದರೂ ಓಕೆ ಎಂದು ಬರೆದಾಗ.. ರಾತ್ರಿ ಆಯ್ತು ಮಲಗೋಣ ಇಂದು ನಮ್ಮ ಸೋಭಾನ… ಅಥವಾ ಕಾಯಿ ಕಾಯಿ ನುಗ್ಗೇಕಾಯಿ ಮಹಿಮೆಗೆ ರಾತ್ರಿಯೆಲ್ಲ ನಿದ್ದೆಯಿಲ್ಲ ಕಣ್ಣಿಗೆ.. ನೆಲ್ಲಿಕಾಯಿ ಆಸೆಗೆ ಬಿಟ್ಟು ಬಂದೆ ಹಾಸಿಗೆ ಅಂತ ಸ್ವಲ್ಪ ನೇರವಾಗಿಬಿಡುತ್ತಾರೆ ಹಂಸಲೇಖ.

ಇವೆಲ್ಲ ಸಾಹಿತ್ಯವನ್ನು ಗಮನಿಸುವಾಗ ಅರ್ಥವಾಗುತ್ತಾ ಹೋಗುವ ಅಪಾರಾರ್ಥಗಳು. ತೂಗುಮಂಚದ “ಹಮ್ಮನುಸಿರಬಿಟ್ಟಳು ಎಂಬುದು ಅಮ್ಮನುಸಿರ ಬಿಟ್ಟಳು ಎಂದಾಗಿದ್ದು ಅದನ್ನು ಲಾಲಿಹಾಡೆಂದು ತಪ್ಪು ತಿಳಿದುದರ ಪರಿಣಾಮ ಎಂದು ಹಿಂದೊಮ್ಮೆ ಬರೆದಿದ್ದು ನಿಮಗೆ ನೆನಪಿರಬಹುದು.

ಇನ್ನು ಡಬಲ್ ಮೀನಿಂಗೇ ಹುಡುಕಬೇಕು ಅಂದರೆ ಪ್ರತಿ ಗೀತೆಯೂ ಬೇರೆಯೇ ಅರ್ಥ ಕೊಡಬಲ್ಲ ಕೆಪಾಸಿಟಿ ಹೊಂದಿರುತ್ತದೆ. ಅದು ನಾವು ಆ ಗೀತೆಯನ್ನು ಬಿಂಬಿಸೋಕೆ ಹೊರಟಿರುವ ರೀತಿಯ ಮೇಲೆ ಡಿಪೆಂಡು. ಎಂಥ ಸಭ್ಯಸಾಲನ್ನೂ.. ಕವಿಗೇ ಶಾಕ್ ಆಗುವ ಹಾಗೆ ಡಬಲ್ ಮೀನಿಂಗ್ ಆಗಿಸಬಹುದು. ಆ ಉದಾಹರಣೆ ಈ ಬರಹದಲ್ಲಿ ಬೇಡ. ಮುಂದೆಂದಾದರೂ ಬರೆಯೋಣ.

ಇದೆಲ್ಲ ಬರೆಯೋಕೆ ಹೊರಟಿದ್ದಕ್ಕೆ ಪ್ರೇರಣೆ ಅಣ್ಣಯ್ಯ ಚಿತ್ರದ ಒಂದು ಸಾಂಗ್. ಅಣ್ಣಯ್ಯ ಬಂದು ಹೋಗಿ ಇಪ್ಪತ್ತೈದು ವರ್ಷಕ್ಕೂ ಹೆಚ್ಚು ಟೈಮಾಯ್ತು. ರವಿಚಂದ್ರನ್ ಸಿನಿಮಾಗಳು ಸಾಫ್ಟ್ ಪೋರ್ನ್ ಸಿನಿಮಾಗಳಂತೆ ಭಾಸವಾಗುತ್ತಿದ್ದ ನಮ್ಮ ಏಜಿನ ದಿನಗಳವು. ರವಿಚಂದ್ರನ್ ಸಿನಿಮಾಗಳನ್ನು ನೋಡೋದು ಕಾಶೀನಾಥ್ ಸಿನಿಮಾ ನೋಡೋಷ್ಟೇ ಪಾಪ ಎಂಬಷ್ಟು ಮಡಿವಂತಿಕೆ ದಿನಗಳವು. ಆದರೆ ನಮ್ಮ ಪಾಲಿಗೆ ಆಗ ರವಿಮಾಮಾ ಲವ್ ರೊಮ್ಯಾನ್ಸ್ ಶೃಂಗಾರಗಳಿಗೆ ಗಾಡ್. ಆತ ಹೀರೋಯಿನ್ ಎದೆಯ ಮೇಲೆ ಮುಖವಿಟ್ಟು ಒರಗಿದರೆ ನಮಗೆ ರಸಸ್ಫೋಟ ಆಗುತ್ತಿತ್ತು. ಕುತ್ತಿಗೆಗೊಂದು ಮುತ್ತಿಟ್ಟು ತುದಿಬೆರಳುಗಳನ್ನು ಕತ್ತು ಮತ್ತು ಎದೆಯ ನಡುವೆ ಒಮ್ಮೆ ಆಡಿಸಿದ ಅಂದರೆ ಕೊಳಲು ಲಂಬಕೋನವಾಗುತ್ತಿತ್ತು.

ಆತ ಸೆರಗು ಸರಿಸಿ ಹೊಕ್ಕಳಿಗೊಮ್ಮೆ ಮುತ್ತಿಟ್ಟರೆ ಮುಗಿದೇಹೋಯ್ತು ಊರಸ್ನಾಯುಗಳು ಬಿಗಿಯಾಗಿ ಹೋಗುತ್ತಿದ್ದವು. ಅಂದು ಹಂಸಲೇಖ ಗೀತೆಗಳು ರವಿಚಂದ್ರನ್ ನ ಪಿಚ್ಚರೈಸೇಷನ್ನಲ್ಲಿ ಕಳೆದುಹೋಗಿಬಿಡುತ್ತಿದ್ದವು. ಅಥವಾ ಸಾಹಿತ್ಯ ಸಂಗೀತ ಎಲ್ಲದರಾಚೆಗೆ ನಮಗೆ ಆ ರೊಮ್ಯಾನ್ಸೇ ಹೆಚ್ಚು ಆಕರ್ಷಿಸಿಬಿಡುತ್ತಿತ್ತು. ಕ್ಯಾಸೆಟಲ್ಲಿ ಹಾಡುಗಳನ್ನು ಕೇಳಿ ಸಿನಿಮಾಗೆ ಹೋದಾಗ ಗೀತೆಗಳು ಆಡಿಯೋಗಿಂತ ವಿಡಿಯೋವಾಗಿ ತೃಪ್ತಿಕೊಟ್ಟು ಕಳಿಸುತ್ತಿದ್ದವು. ಆದರೆ ಆನಂತರ ಸಾಹಿತ್ಯ ಗಮನಿಸುವ ಮೆಚುರಿಟಿ, ಸಾಹಿತ್ಯದಲ್ಲಿರುವ ಇಮ್ಯಾಜಿನೇಷನ್ ಪವರ್ ಆಸ್ವಾಧಿಸುವ ಮನಸ್ಥಿತಿ ಎಲ್ಲ ಬಂದಾಗ.. ರವಿ ಚಂದ್ರನ್ ಹಂಸಲೇಖರ ಗೀತೆಗೆ ಹತ್ತು ಪರ್ಸೆಂಟಷ್ಟೂ ನ್ಯಾಯ ಸಲ್ಲಿಸಲು ಸಾಧ್ಯವಾಗಿಲ್ಲ ಅನಿಸಿಬಿಟ್ಟಿದೆ. ಹಾಗಂತ ಹಂಸಲೇಖರ ಸಾಹಿತ್ಯಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಿತ್ತಾ? ಖಂಡಿತ ಇಲ್ಲ. ಯಥಾವತ್ ನ್ಯಾಯ ಸಲ್ಲಿಸಲು ಹೋದದ್ದೇ ಆದರೆ ಆ ಸಾಂಗ್ ನ ಪಿಚ್ಚರೈಸೇಷನ್ ಕಾಮಸೂತ್ರವಾಗಿ ಹೋಗುವಷ್ಟು ಹಾಟ್ ಆಗಿಬಿಡುತ್ತಿತ್ತು.

ಆ ಗೀತೆಗಳು ಪಿಚ್ಚರೈಸ್ ಆಗದೆಯೇ ಇಮ್ಯಾಜಿನೇಷನ್ನಲ್ಲೇ ಉಳಿದುಬಿಟ್ಟಿದ್ದರೆ ಎಷ್ಟು ಚೆಂದವಿತ್ತು ಅನಿಸಿದ್ದೂ ಇದೆ. ಸತ್ಯ ಏನಂದರೆ ರವಿಚಂದ್ರನ್ ಸಲ್ಲಿಸಿದಷ್ಟು ನ್ಯಾಯವನ್ನು ಹಂಸಲೇಖರ ಗೀತೆಗೆ ಇನ್ಯಾರೂ ಸಲ್ಲಿಸಲು ಸಾಧ್ಯವಾಗಲಿಲ್ಲ. ರೊಮ್ಯಾಂಟಿಕ್ ಗೀತೆಗಳಲ್ಲಿ ಮಾತ್ರವಲ್ಲ… ಬೇರೆ ಗಂಭೀರ/ಸ್ಯಾಡ್/ಫಿಲಾಸಫಿಕಲ್/ಕ್ರಾಂತಿ ಯಾವ ಗೀತೆಗಳಿಗೂ ವಿಶ್ಯುಯಲಿ ನ್ಯಾಯ ಸಿಕ್ಕಿಲ್ಲ. ಇದು ಹಂಸಲೇಖ ಮಾತ್ರ ಅಲ್ಲ.. ಬಹುತೇಕ ಸಾಹಿತಿಗಳ ಮನಸಿನ ಮೂಲೆಯ ಅಸಮಾಧಾನ ಹಾಗೂ ನೋಡುಗರ ಅಸಂತೃಪ್ತಿ. ಮೊನ್ನೆ ನಾನು ಶೇರ್ ಮಾಡಿಕೊಂಡ ” ಸುಮ್ಮನೆ ಹೀಗೆ ನಿನ್ನನೇ …:” ಎಂಬ ಅಮರ್ ಚಿತ್ರದ ಗೀತೆಯಾದರೂ ಅಷ್ಟೆ. ಅಷ್ಟು ಗಾಢ ಸಾಲುಗಳ ಗೀತೆಗೆ ಅಂಬರೀಶ್ ಪುತ್ರನಿಂದ ಕಲ್ಲುಬಂಡೆಯಂಥ ಅಭಿನಯ. ಇಡೀ ಹಾಡನ್ನು ಲಾಂಗ್ ಶಾಟ್ ಗಳಲ್ಲಿ ತೆಗೆದು ಪ್ರಕೃತಿ ಸೌಂದರ್ಯ ತೋರಿಸಿ ಮುಗಿಸಿದ್ದಾರೆ ನಾಗಶೇಖರ್. ಸಾಹಿತ್ಯಕ್ಕೆ ಸಂಗೀತ ಸಲ್ಲಿಸುವಷ್ಟು ನ್ಯಾಯವನ್ನು ದೃಶ್ಯರೂಪ ಸಲ್ಲಿಸಲು ಸಾಧ್ಯವಿಲ್ಲ. ಬೆಟರ್ ನಾವು ಹಾಡುಗಳನ್ನು ನಮ್ಮ ಇಮ್ಯಾಜಿನೇಷನ್ ಗೆ ತಕ್ಕಂತೆ ಕಣ್ಮುಚ್ಚಿಕೊಂಡು ಮನಸ್ಸಿನೊಳಗೇ ಚಿತ್ರಿಸಿಕೊಂಡುಬಿಡುವುದು.

ಬ್ಯಾಕ್ ಟು ಅಣ್ಣಯ್ಯ ಚಿತ್ರದ ಆ ಸಾಂಗ್ : ಇಷ್ಟು ವರ್ಷದಲ್ಲಿ ಈ ಹಾಡನ್ನು ಕಮ್ಮಿ ಅಂದ್ರೂ ಒಂದು ಸಾವಿರ ಸಲ ಕೇಳಿರುತ್ತೇನೆ. ಹಿಟ್ ಆಲ್ಪಮ್ ಆಗಿರುವ ಅದರ ಕಡಿಮೆ ಪಾಪ್ಯುಲರ್ ಗೀತೆ ಅದು.

“ಅ ಹಾಗೆ ಪ್ರೇಮಿ ಓಹೋ.. ಒ ಹೋಗೆ ಪ್ರೇಮಿ ಆಹಾ…”
ಈ ಹಾಡಿನ ಚಿತ್ರಣ ನಿಮ್ಮನ್ನು ಸಾಹಿತ್ಯ ಗಮನಿಸದಷ್ಟು ಸೆಳೆದುಕೊಳ್ಳುತ್ತದೆ ಕಾರಣ. ರವಿಚಂದ್ರನ್ ಮಧುಬಾಲಾ ಕೆಮಿಸ್ಟ್ರಿ! ಆದರೆ ಅದ್ಯಾಕೋ ಗೀತೆ ತುಂಬ ಅಟ್ರಾಕ್ಟಿವ್ ಅನಿಸಿರಲಿಲ್ಲ. ಕಮಾನು ಡಾರ್ಲಿಂಗ್, ಅಣ್ಣಯ್ಯ ಅಣ್ಣಯ್ಯ ಬಾರೋ, ರಾಗಿ ಹೊಲದಾಗೆ ಖಾಲಿ ಗುಡಿಸಲು ಈ ಗೀತೆಗಳು ಕೊಟ್ಟ ಕಿಕ್ …. ಈ ಅ ಹಾಗೆ ಪ್ರೇಮಿ ಓಹೋ… ಒ ಹೋಗೆ ಪ್ರೇಮಿ ಆಹಾ ಗೀತೆ ನೀಡಿರಲಿಲ್ಲ.

ಹೌದು ನಾನು ಈ ಹಾಡನ್ನು ಕೇಳಿಸಿಕೊಳ್ತಾ ಇದ್ದದ್ದೇ ಹೀಗೆ. ಮೊನ್ನೆಯ ತನಕವೂ…ಆದರೆ ಮೊನ್ನೆ ಯಾಕೋ ಮತ್ತೊಮ್ಮೆ ಕೇಳಿಸಿಕೊಂಡಾಗ.. ಅರೆ ಇಪ್ಪತ್ತೈದು ವರ್ಷ ತಪ್ಪಾಗಿ ತಿಳಿದುಕೊಂಡು ತಪ್ಪಾಗೇ ಹಾಡಿಕೊಂಡೆನಲ್ಲ ಅಂತ ಮೈತುಂಬ ಗಿಲ್ಟು

ಆ ಸಾಂಗ್ ಇರೋದು ಹೀಗೆ…

”ಆಹಾ’ಗೆ ಪ್ರೇಮಿ “ಓಹೋ”
” ಓಹೋ”ಗೆ ಪ್ರೇಮಿ ” ಆಹಾ”

ನನ್ನ ಹಾಗೆ ಅದೆಷ್ಟು ಜನ ಯಾಮಾರಿದ್ದೀರೋ ಗೊತ್ತಿಲ್ಲ. ಅಥವಾ ನಾನೊಬ್ನೇ ಹೀಗೆ ತಪ್ಪಾಗಿ ಕೇಳಿಸಿಕೊಂಡವ್ನೋ ಗೊತ್ತಿಲ್ಲ

ಈ ಗೀತೆಯ ವಿಶೇಷ ಏನಂದ್ರೆ ಹಂಸಲೇಖ. ಆಹಾ ಮತ್ತು ಓಹೋ ಎಂಬ ಎರಡು ಪದಗಳನ್ನೇ ಪ್ರೇಮಿಗಳನ್ನಾಗಿಸಿದ್ದಾರೆ

ಆಹಾಗೆ ಓಹೋ ಪ್ರೇಮಿ… ಓಹೋಗೆ ಆಹಾ ಪ್ರೇಮಿ!
ಅದು ಇಬ್ಬರು ಪ್ರ‍ೇಮಿಗಳ ಹೆಸರು!

ಈಗ ಈ ಹಾಡೊಮ್ಮೆ ಕೇಳಿನೋಡಿ…
ಅದು ಸೌಂಡಾಗೋದೇ ಬೇರೆ ಥರ!

ಅದ್ಯಾಕೆ ಆಹಾ ಓಹೋ ಎಂಬ ಪದಗಳು ಇಲ್ಲಿ ಪಾತ್ರಗಳಾದವು ಅಂತ ಸಿನಿಮಾ ತೆರೆದು ನೋಡಿದೆ. ಈ ಹಾಡು ಆರಂಭವಾಗುವ ಮುನ್ನ ಅಣ್ಣಯ್ಯ ಯಾವುದೋ ಫೈಟಿಂಗಲ್ಲಿ ಒದೆ ತಿಂದು ಬೆನ್ನಿಗೆ ಕಾಶಿ ಕೈಲಿ ಬಿಸಿ ಮಸಾಜ್ ಮಾಡಿಸಿಕೊಳ್ತಾ ಇರ್ತಾನೆ. ಅವನ ಇಮ್ಯಾಜಿನೇಷನಲ್ಲಿ ನಾಯಕಿ ಬಂದು ಕಾಶಿಯ ಬದಲು ಮಸಾಜ್ ಮಾಡ್ತಿರೋ ಹಾಗೆ ಒಂದು ಟ್ವಿಸ್ಟು.. ಇಮ್ಯಾಜಿನೇಷನಲ್ಲೇ ಅವಳೊಂದಿಗೆ ಮಾತಾಡ್ತಾ.. ಆಕೆ ಬಿಸಿ ಶಾಖ ಕೊಟ್ಟಾಗ ಒಮ್ಮೆ ನಾಯಕ ಆಹಾ ಅಂತಾನೆ.. ಇನ್ನೊಮ್ಮೆ ಓಹೋ ಎಂದು ಬಿಗಿಯುಸಿರು ಬಿಡುತ್ತಾನೆ. ಆಗ ಹುಟ್ಟುವ ಹಾಡಿದು. ಡ್ರೀಮ್ ಸಾಂಗ್ ನಲ್ಲಿ ಟೆಕ್ಸ್ಟ್ ಕೂಡ ಬರುತ್ತದೆ ಆಹಾ ಓಹೋ ಅಂತ!

ಸ್ಕ್ರಿಪ್ಟ್ ಜೊತೆ ದೃಶ್ಯರಚನೆ ಜೊತೆ ಗೀತ ಸಾಹಿತಿ ಕನೆಕ್ಟ್ ಆದಾಗ ಇಂಥ ಅದ್ಭುತಗಳು, ಮಜಗಳು, ಕ್ರಿಯೇಟಿವ್ ಐಡಿಯಾಗಳು ಹುಟ್ಟುತ್ತವೆ. ಹಂಸಲೇಖ ಎಲ್ಲೋ ಕೂತು ಹಾಡುಬರೆದುಕೊಟ್ಟು ಸಂಗೀತ ಮಾಡಿಕೊಡ್ತಿರಲಿಲ್ಲ. ಸಿನಿಮಾದೊಂದಿಗೆ ಪ್ರೀ ಪ್ರೊಡಕ್ಷನ್ನಿಂದ ರೀರೆಕಾರ್ಡಿನ ತನಕ ಜರ್ನಿ ಮಾಡ್ತಿದ್ರು ಅನ್ನೋದಕ್ಕೆ ಇದೊಂದು ಸಾಕ್ಷಿ. ಅವರಿಬ್ಬರ ಕಾಂಬಿನೇಷನ್ ಯಾಕೆ ಆ ಪರಿ ಕ್ಲಿಕ್ ಆಗುತ್ತಿತ್ತು ಅನ್ನೋದಕ್ಕೂ ಇದೊಂದು ಪುರಾವೆ. ( ಬರಹ : ನವೀನ್ ಸಾಗರ್ ; ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending