ಅಂತರಂಗ
ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್ ಆಫ್ ದಿ ನೇಷನ್ ಅಂತಾರೆ..!
- ಚೇತನ್ ನಾಡಿಗೇರ್
‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’
ಮಾರ್ಮಿಕವಾಗಿ ಕೇಳಿದರು ಪ್ರಕಾಶ್ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್’ ಕೃಷ್ಣ ಅಭಿನಯದ ‘ಫಾದರ್’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …
ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್, ಕಮಲ್ ಹಾಸನ್ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.
ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.
ಕೆಲವು ನಟರು ಸಹ ತಾವು ಜಿಮ್ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.
ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.
30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.
‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್ ಆಫ್ ದಿ ನೇಷನ್ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.
ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.
ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.
ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.
ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್, ಮೈನಸ್ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್ ನಾಗ್ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.
ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ4 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


